Connect with us

ಬೆಂಗಳೂರು

ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ – ನಷ್ಟದ ಲೆಕ್ಕಾಚಾರವೇನು? – BJP JDS padayatra

Published

on

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ ರಾಜಕೀಯ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರವಾಗಿ ಬಿಜೆಪಿ – ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು- ಮೈಸೂರು ವರೆಗೆ ಪಾದಯಾತ್ರೆಗೆ ಉದ್ದೇಶಿಸಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಪಾದಯಾತ್ರೆ ನಡೆಯಲಿದೆ.

ಅಷ್ಟಕ್ಕೂ ಕರ್ನಾಟಕ ರಾಜಕೀಯದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈವರೆಗೆ ಕರುನಾಡು ಕಂಡಿರುವ ಪ್ರಮುಖ ಪಾದಯಾತ್ರೆ ಪೊಲಿಟಿಕ್ಸ್ ಮತ್ತು ಅದರಿಂದ ಪಕ್ಷಗಳು ರಾಜಕೀಯ ಲಾಭ ನಷ್ಟಕ್ಕೆ ಸಾಕ್ಷಿಯಾಗಿದೆ. ದೋಸ್ತಿಗಳು ಆ.3 ರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಏಳು ದಿನಗಳ ಪಾದಯಾತ್ರೆಗೆ ನಿರ್ಧರಿಸಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹಗರಣಗಳ ಆರೋಪವನ್ನು ಜನರ ಮುಂದೆ ಕೊಂಡೊಯ್ಯಲು ದೋಸ್ತಿಗಳು ಮುಂದಾಗಿದ್ದಾರೆ.

ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆನೂ ಕೆಲ ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತ ಅದರ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ ಇಲ್ಲಿದೆ.

ದೇವೇಗೌಡರ ಪಾದಯಾತ್ರೆ ಪೊಲಿಟಿಕ್ಸ್: ಹೆಚ್.ಡಿ. ದೇವೇಗೌಡರ 2001ರಲ್ಲಿ ಅಂದಿನ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಿ ಪಾದಯಾತ್ರೆಯ ಹೋರಾಟಕ್ಕೆ ಇಳಿದಿದ್ದರು. ನೀರಾ ತೆಗೆವ ವಿವಾದಲ್ಲಿ ಇಬ್ಬರು ರೈತರು ಪೊಲೀಸರು ಹಾರಿಸಿದ್ದ ಗುಂಡಿಗೆ ಬಲಿಯಾಗಿದ್ದರು. ಆ ವೇಳೆ ತೆಂಗಿಗೆ ನುಸಿರೋಗ ಹೆಚ್ಚಿದ್ದರಿಂದ ನೀರಾ ತೆಗೆಯುವ ವಿಚಾರ ಮುನ್ನೆಲೆಗೆ ಬಂದಿತ್ತು. ಇದೇ ವಿಚಾರವಾಗಿ ನಡೆದ ರೈತರ ಹೋರಾಟದ ಮೇಲೆ ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಗೋಲಿಬಾರ್‌ ನಡೆದು, ಇಬ್ಬರು ರೈತರು ಮೃತಪಟ್ಟಿದ್ದರು.

ಈ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ಬಳಸಿಕೊಂಡ ದೊಡ್ಡಗೌಡರು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಎಸ್‌.ಎಂ. ಕೃಷ್ಣ ಸರಕಾರದ ವಿರುದ್ಧ ಪಾದಯಾತ್ರೆ ಸಂಘಟಿಸಿ ಅದರ ಅಲೆಯಲ್ಲಿ ಚುನಾವಣೆ ಗೆದ್ದು ಬಂದಿದ್ದರು. ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯಿಂದ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ವರೆಗೆ ದೇವೇಗೌಡರು 2001ರ ಅ.28ರಿಂದ ನ.1ರ ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಒಟ್ಟು ಐದು ದಿನಗಳ ಕಾಲ ಸುಮಾರು 80 ಕಿ.ಮೀ. ಕ್ರಮಿಸಿ ಪಾದಯಾತ್ರೆ ನಡೆಸಿ, ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಇನ್ನು 2013ರಲ್ಲಿ ಫೆ.12ರಂದು ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ವರಿಷ್ಠ ದೇವೇಗೌಡರು ಬೆಂಗಳೂರು ನಗರದಲ್ಲಿ ಪಾದಯಾತ್ರೆ ಕೈಗೊಂಡಿದ್ದರು. ಬನ್ನಪ್ಪ ಪಾರ್ಕ್ ನಿಂದ ಫ್ರೀಡಂ ಪಾರ್ಕ್ ವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ದೊಡ್ಡಗೌಡರು ನಗರದಲ್ಲಿ ಪಾದಯಾತ್ರೆ ನಡೆಸಿದ್ದರು.

ಜೆಡಿಎಸ್​ಗೆ ಲಾಭ ತಂದು ಕೊಟ್ಟ ಪಾದಯಾತ್ರೆ: ದೇವೇಗೌಡರು ಕಾಂಗ್ರೆಸ್ ಸರ್ಕಾರದ ಗೋಲಿಬಾರ್ ವಿರುದ್ಧ ನಡೆಸಿದ ಪಾದಯಾತ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್​ಗೆ ಭರ್ಜರಿ ರಾಜಕೀಯ ಲಾಭವನ್ನು ಕೊಟ್ಟಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ಪಾರುಪತ್ಯ ಸಾಧಿಸಿತ್ತು. ಎಸ್.ಎಂ. ಕೃಷ್ಣ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ‌ ಅಲೆಯ ಜೊತೆಗೆ ದೊಡ್ಡಗೌಡರು ನಡೆಸಿದ ಪಾದಯಾತ್ರೆ ಹೋರಾಟವೂ ಜೆಡಿಎಸ್​ಗೆ ಭಾರೀ ಲಾಭ ತಂದು ಕೊಟ್ಟಿತು. 2004 ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 58 ಸ್ಥಾನಗಳಲ್ಲಿ ಗೆದ್ದು ಬೀಗಿತು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ 37 ಸ್ಥಾನಗಳನ್ನು ಗೆದ್ದು ಪಾದಯಾತ್ರೆ ಪೊಲಿಟಿಕ್ಸ್ ಶಕ್ತಿಯನ್ನು ತೋರಿಸಿಕೊಟ್ಟಿತು.

1999ರಲ್ಲಿ ಹಳೆ ಮೈಸೂರು ಭಾಗದಲ್ಲಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ 2004ರಲ್ಲಿ 37 ಸ್ಥಾನ ಗೆದ್ದು ಬೀಗಿತು. 1999 ಚುನಾವಣೆಯಲ್ಲಿ 11.45% ರಷ್ಟು ಇದ್ದ ಜೆಡಿಎಸ್​ನ ಮತ ಪ್ರಮಾಣ 2004 ಚುನಾವಣೆಯಲ್ಲಿ 21.10%ಗೆ ಏರಿಕೆ ಕಂಡಿತ್ತು. ಇದರಿಂದ ಪಕ್ಷಕ್ಕೆ ಮೈತ್ರಿ ಸರ್ಕಾರ ನಡೆಸಲು ಸಾಧ್ಯವಾಯಿತು. ಅದೇ ರೀತಿ 2013ರಲ್ಲಿ ಕುಡಿಯುವ ನೀರು ಸಂಬಂಧ ಬೆಂಗಳೂರಲ್ಲಿ ಮಾಡಿದ ಪಾದಯಾತ್ರೆಯಿಂದಲೂ ಜೆಡಿಎಸ್​ಗೆ ಪರೋಕ್ಷವಾಗಿ ಪಕ್ಷ ಸಂಘಟನೆಗೆ ಬಲ ನೀಡಿತು. 2013 ಚುನಾವಣೆಯಲ್ಲಿ ಜೆಡಿಎಸ್ ಬೆಂಗಳೂರು ನಗದರಲ್ಲಿ ಮೊದಲ ಬಾರಿಗೆ 3 ಸ್ಥಾನವನ್ನು ಗೆಲ್ಲುವಂತಾಯಿತು.

ಎಸ್.ಎಂ. ಕೃಷ್ಣರಿಂದ ಕಾವೇರಿ ಪಾದಯಾತ್ರೆ: 2002ರಲ್ಲಿ ಸಿಎಂ ಆಗಿದ್ದ ಎಸ್.ಎಂ. ಕೃಷ್ಣ ಪಾದಯಾತ್ರೆಯ ಮೊರೆ ಹೋಗಿದ್ದರು. ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ಎಸ್.ಎಂ. ಕೃಷ್ಣ ಪಾದಯಾತ್ರೆ ಕೈಗೊಂಡು ಕಾವೇರಿ ಪ್ರಾಂತ್ಯದ ಜನರ ಮನಗೆಲ್ಲುವ ಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್‌ ಮುಂದೆ ಇದ್ದಿದ್ದರಿಂದ ಈ ಪಾದಯಾತ್ರೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಎಸ್.ಎಂ. ಕೃಷ್ಣ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ 2002 ಅ.7ರಿಂದ ಅ.11 ರವರೆಗೆ ಆರು ದಿನಗಳ ಪಾದಯಾತ್ರೆ ಕೈಗೊಂಡಿದ್ದರು. ಬೆಂಗಳೂರಿನ ರಾಜರಾ ಜೇಶ್ವರಿ ನಗರದಿಂದ ಮಂಡ್ಯದ ವರೆಗೆ 100 ಕಿ.ಮೀ. ದೂರ ಪಾದಯಾತ್ರೆ ನಡೆಸಿದ್ದರು. ಆ ಮೂಲಕ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿದ್ದರು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಇದರಿಂದ ಹೆಚ್ಚಿನ ರಾಜಕೀಯ ಲಾಭ ಲಭಿಸಲಿಲ್ಲ. ಬಲವಾದ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಆ ಚುನಾವಣೆಯಲ್ಲಿ ಸೋಲು ಕಂಡಿತ್ತು.

ಸಿದ್ದರಾಮಯ್ಯರ ಬಳ್ಳಾರಿ ಪಾದಯಾತ್ರೆ: ಬಳ್ಳಾರಿಯಲ್ಲಿ ಬಿಜೆಪಿಯ ರೆಡ್ಡಿ ಹಾಗೂ ಶ್ರೀರಾಮುಲು ಪ್ರಾಬಲ್ಯದ ವಿರುದ್ದ ತೊಡೆತಟ್ಟಿ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಈ ಐತಿಹಾಸಿಕ ಪಾದಯಾತ್ರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತ್ತು. ಇದು 2013ರಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿತು.

2010ರಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು. ಮುಖ್ಯಮಂತ್ರಿಯಾಗಿದ್ದವರು ಬಿ.ಎಸ್. ಯಡಿಯೂರಪ್ಪ. ಆಗ ಅಧಿಕಾರದಲ್ಲಿ ಪ್ರಾಬಲ್ಯ ಹೊಂದಿದ್ದು ಗಣಿಧಣಿಗಳಾದ ಜನಾರ್ದನ್ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು. ರಾಜ್ಯ ವಿಧಾನಸಭೆಯಲ್ಲಿ ‘ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರೆಡ್ಡಿ ಬ್ರದರ್ಸ್ ಸವಾಲು ಹಾಕಿದ್ದರು. ವಿಧಾನಸಭೆಯಲ್ಲೇ ಬಳ್ಳಾರಿ ಗಣಿಧಣಿಗಳ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಭುಜತಟ್ಟಿ, ನಾವು ಬಳ್ಳಾರಿಗೆ ಬಂದೇ ಬರುತ್ತೇವೆ. ನಡೆದುಕೊಂಡೇ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು. ಆಗ ಹುಟ್ಟಿದ್ದೇ ಬಳ್ಳಾರಿ ಪಾದಯಾತ್ರೆ. 2010ರ ಜುಲೈ 25 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭವಾಯಿತು. ಬೆಂಗಳೂರಿನಿಂದ ಬಳ್ಳಾರಿಗೆ ಹೊರಟ ಪಾದಯಾತ್ರೆ ಸಮಾರೋಪ ಆಗಿದ್ದು ಆಗಸ್ಟ್ 8 ರಂದು. ಅಂದು ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಗಣಿಧಣಿಗಳು ಹಾಗೂ ಬಿಜೆಪಿ ಸರಕಾರದ ವಿರುದ್ಧ ಅಬ್ಬರಿಸಿದ್ದರು.

ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ: 2013ರಲ್ಲಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂಬ ಪಾದಯಾತ್ರೆ ನಡೆಸಿದ್ದರು. ಕೃಷ್ಣಾದ ಎ ಮತ್ತು ಬಿ ಸ್ಕೀಮ್‌ನಡಿ ಪೂರ್ಣ ಪ್ರಮಾಣದ ನೀರು ಬಳಸಿಕೊಳ್ಳಲು ಸರಕಾರ ವೈಫಲ್ಯ ಹಾಗೂ ನೀರಾವರಿ ಯೋಜನೆಗೆ ಅನುಷ್ಠಾನದಲ್ಲಿನ ವೈಫಲ್ಯ ವಿರೋಧಿಸಿ ಚುನಾವಣಾ ಪೂರ್ವ ಜ.7 ರಿಂದ 14 ರವರೆಗೆ ಕಾಂಗ್ರೆಸ್ ನಡಿಗೆ – ಕೃಷ್ಣೆಯ ಕಡೆಗೆ ಎಂಬ ಯಾತ್ರೆ ಕೈಗೊಂಡಿತ್ತು. ಕೃಷ್ಣ ಯೋಜನೆಯಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ 259 ಟಿಎಂಸಿ ನೀರು ಆಂಧ್ರಕ್ಕೆ ಹೋಗುತ್ತಿದೆ. ಅಲ್ಲಿನ ನೀರಾವರಿ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ನೀಡಿದ್ದ ಬಿಜೆಪಿ, ಕೇವಲ 500 ಕೋಟಿ ರೂ. ನೀಡಿದೆ ಎಂಬ ಪ್ರಮುಖ ಅಜೆಂಡಾದೊಂದಿಗೆ ಪಾದಯಾತ್ರೆ ನಡೆಸಲಾಗಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಜೆಟ್‌ನಲ್ಲಿ ಇದಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದೆಂಬ ಭರವಸೆಯೊಂದಿಗೆ ಪಾದಯಾತ್ರೆ ನಡೆಸಿತ್ತು. ಹೊಸಪೇಟೆಯಿಂದ ಆರಂಭಗೊಂಡು ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದ ಮಾರ್ಗವಾಗಿ ಕೂಡಲಸಂಗಮದಲ್ಲಿ ಸಮಾರೋಪಗೊಂಡು ಸುಮಾರು 140 ಕಿ.ಮೀ ಪಾದಯಾತ್ರೆ ನಡೆಸಲಾಯಿತು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಮೇಕೆದಾಟು ಪಾದಯಾತ್ರೆ. 2022ರಂದು ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಜಾರಿಗಾಗಿ ಆಗ್ರಹಿಸಿ ಮಾಡಿದ ಪಾದಯಾತ್ರೆ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಜನವರಿ 9, 2022 ರಿಂದ ಆರಂಭವಾದ ಪಾದಯಾತ್ರೆ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಐದು ದಿನಗಳ ಕಾಲ ಪಾದಯಾತ್ರೆ ನಡೆಸಿ ಕೋವಿಡ್ ನಿಯಮಾವಳಿ ಹಿನ್ನೆಲೆ ನಿಲ್ಲಿಸಿದ್ದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಫೆ.27 ರಿಂದ ಮರು ಆರಂಭಿಸಿ ಮಾ.2, 2022ಕ್ಕೆ ಮುಕ್ತಾಯವಾಗಿತ್ತು. 165 ಕಿ.ಮೀ. ಕ್ರಮಿಸಿ 9 ದಿನಗಳ ಪಾದಯಾತ್ರೆ ನಡೆಸಲಾಗಿತ್ತು.

ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ವಿಳಂಬ ಮಾಡುತ್ತಿವೆ ಎನ್ನುವುದು ಕಾಂಗ್ರೆಸ್‌ನ ಪ್ರಧಾನ ಆರೋಪವಾಗಿತ್ತು. ಮೇಕೆದಾಟು ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಬೆಂಗಳೂರಿನ‌ ಬಸವನಗುಡಿಯಲ್ಲಿ ಸಮಾರೋಪಗೊಂಡಿದ್ದ ಮೇಕೆದಾಟು ಪಾದಯಾತ್ರೆ ರಾಜಕೀಯ ಲೆಕ್ಕಾಚಾರ ಹೊಂದಿತ್ತು.‌

ಪಾದಯಾತ್ರೆಯಿಂದ ಗದ್ದುಗೆ ಹಿಡಿದ ಕಾಂಗ್ರೆಸ್: ಬಳ್ಳಾರಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ 2013ರ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿತ್ತು. ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಪರಿಣಾಮ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಳ್ಳಾರಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಚಿಗುರೊಡೆದಿತ್ತು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 4 ರಿಂದ 6 ಸ್ಥಾನಗಳಿಗೆ ಏರಿಕೆ ಕಂಡಿತ್ತು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ 122 ಬಹುಮತದ ಗೆಲುವು ಸಾಧಿಸಿತ್ತು.

ತನ್ನ ಮತ ಪ್ರಮಾಣವನ್ನು ಶೇ 36.76ಗೆ ಏರಿಕೆ ಮಾಡಿತ್ತು. ತಮ್ಮ ಪಾದಯಾತ್ರೆಗಳ ಮೂಲಕ ಕಾಂಗ್ರೆಸ್ 2013ರಲ್ಲಿ ಮುಂಬೈ ಕರ್ನಾಟಕ‌ ಭಾಗದಲ್ಲಿನ 56 ಸ್ಥಾನಗಳ ಪೈಕಿ 34 ಸ್ಥಾನ ಗೆದ್ದಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ 19 ಸ್ಥಾನದಲ್ಲಿ ಗೆದ್ದು ಬೀಗಿತ್ತು. ಅದೇ ರೀತಿ ಮಧ್ಯ ಕರ್ನಾಟಕ ಭಾಗದಲ್ಲಿ 32 ಸ್ಥಾನಗಳ ಪೈಕಿ 18 ಸೀಟು ಗೆದ್ದಿತ್ತು. ಆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 40 ಸ್ಥಾನಕ್ಕೆ ಕುಸಿತ ಕಂಡಿತು.

ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿಗೆ ಬೆಂಗಳೂರು ಸೇರಿದಂತೆ ರಾಮನಗರದ ಮಟ್ಟಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ‌ ಫಲಿತಾಂಶ ನೀಡಿತ್ತು. ಮೇಕೆದಾಟು ಪಾದಯಾತ್ರೆ ಬಂದ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಸಫಲವಾಗಿತ್ತು.‌

ಬೆಂಗಳೂರು

Liver ಚಿಕಿತ್ಸೆಗೆ ಗುಡ್ ನ್ಯೂಸ್: ಹಲವು ತಜ್ಞರು ಒಂದೇ ಕಡೆ, ರೋಗಿಗಳಿಗೆ ಸುಲಭ ಚಿಕಿತ್ಸೆ

Published

on

By

ಬೆಂಗಳೂರು: ಯಕೃತ್ತಿನಲ್ಲಿ ಕಂಡುಬರುವ ಗಂಟು, ಗೆಡ್ಡೆ ಹಾಗೂ ಅಸಹಜ ಬೆಳವಣಿಗೆಗಳಿಗೆ ಸಮನ್ವಯದ ತಪಾಸಣೆ, ನಿಖರ ರೋಗನಿರ್ಣಯ ಮತ್ತು ಸಮಗ್ರ ಚಿಕಿತ್ಸೆ ಒದಗಿಸುವ ಉದ್ದೇಶದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಫೋರ್ಟಿಸ್ ಹೆಲ್ತ್‌ಕೇರ್ ಜಾಲದ ಭಾಗವಾಗಿರುವ ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯಲ್ಲಿ ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಲಾಗಿದೆ.

ರೋಗಿಗಳು ವಿವಿಧ ವೈದ್ಯರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ ಒಂದೇ ರೀತಿಯ ಪರೀಕ್ಷೆಗಳನ್ನು ಪುನರಾವರ್ತಿಸುವ ಅಗತ್ಯವನ್ನು ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಉದ್ದೇಶವಾಗಿದೆ. ಯಕೃತ್ತಿನ ತಜ್ಞರು, ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ತಜ್ಞರು, ಜಠರ-ಕರುಳಿನ ತಜ್ಞರು, ರೇಡಿಯಾಲಜಿಸ್ಟ್‌ಗಳು, ಕ್ಯಾನ್ಸರ್ ತಜ್ಞರು, ರೋಗಶಾಸ್ತ್ರ ತಜ್ಞರು ಹಾಗೂ ಪೌಷ್ಟಿಕ ಆಹಾರ ತಜ್ಞರು ಒಂದೇ ತಂಡವಾಗಿ ರೋಗಿಯ ಸ್ಥಿತಿಯನ್ನು ಪರಿಶೀಲಿಸಲಿದ್ದಾರೆ.

ವೈದ್ಯಕೀಯ ಜಠರರೋಗ ಶಾಸ್ತ್ರ, ಹೆಪಟಾಲಜಿ ಮತ್ತು ಸುಧಾರಿತ ಎಂಡೋಸ್ಕೋಪಿ ವಿಭಾಗದ ಮುಖ್ಯಸ್ಥ ಹಾಗೂ ಹಿರಿಯ ಸಲಹೆಗಾರ ಡಾ. ಆದರ್ಶ್ ಸಿ.ಕೆ. ಮಾತನಾಡಿ, ನಿಯಮಿತ ತಪಾಸಣೆ ವೇಳೆ ಯಕೃತ್ತಿನ ಗೆಡ್ಡೆಗಳು ಮತ್ತು ದ್ರವ ತುಂಬಿದ ಚೀಲಗಳು ಆಕಸ್ಮಿಕವಾಗಿ ಪತ್ತೆಯಾಗುತ್ತಿರುವುದು ಹೆಚ್ಚಾಗಿದೆ. ಇವುಗಳಲ್ಲಿ ಅನೇಕವು ಅಪಾಯಕಾರಿಯಲ್ಲದಿದ್ದರೂ, ಕೆಲವು ಯಕೃತ್ತಿನ ಕಾಯಿಲೆ ಅಥವಾ ಆರಂಭಿಕ ಹಂತದ ಕ್ಯಾನ್ಸರ್‌ನ ಸೂಚನೆಯಾಗಿರಬಹುದು. ಹೀಗಾಗಿ ಯಾವ ಗೆಡ್ಡೆಗೆ ಚಿಕಿತ್ಸೆ ಬೇಕು ಮತ್ತು ಯಾವುದನ್ನು ಮೇಲ್ವಿಚಾರಣೆ ಮಾಡಿದರೆ ಸಾಕು ಎಂಬುದನ್ನು ಗುರುತಿಸುವುದು ಪ್ರಮುಖ ಸವಾಲಾಗಿದೆ ಎಂದು ಹೇಳಿದ್ದಾರೆ.

ಲಿವರ್ ಟ್ರಾನ್ಸ್‌ಪ್ಲಾಂಟ್ ಮತ್ತು ಎಚ್‌ಪಿಬಿ ಸರ್ಜರಿ ವಿಭಾಗದ ಮುಖ್ಯಸ್ಥ ಡಾ. ಮಹೇಶ್ ಗೋಪಸೆಟ್ಟಿ, ಚಿಕಿತ್ಸೆಯ ನಿರ್ಧಾರವು ಗೆಡ್ಡೆಯ ಗಾತ್ರ ಮತ್ತು ಸ್ಥಳಕ್ಕೆ ಮಾತ್ರ ಸೀಮಿತವಾಗಿರದೆ ಯಕೃತ್ತಿನ ಕಾರ್ಯಕ್ಷಮತೆ ಹಾಗೂ ರೋಗಿಯ ಒಟ್ಟಾರೆ ಆರೋಗ್ಯವನ್ನೂ ಆಧರಿಸಿರಬೇಕು ಎಂದು ತಿಳಿಸಿದ್ದಾರೆ. ಸಮಗ್ರ ಮೌಲ್ಯಮಾಪನದಿಂದ ಸೂಕ್ತ ಚಿಕಿತ್ಸೆಯನ್ನು ಆಯ್ಕೆ ಮಾಡುವುದರ ಜೊತೆಗೆ, ಅಗತ್ಯವಿಲ್ಲದ ಶಸ್ತ್ರಚಿಕಿತ್ಸೆಯನ್ನು ತಪ್ಪಿಸಬಹುದು ಎಂದಿದ್ದಾರೆ.

ಗ್ಲೆನೆಗಲ್ಸ್ ಬಿಜಿಎಸ್ ಆಸ್ಪತ್ರೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವಿ ಬಗಲಿ ಮಾತನಾಡಿ, ಕರ್ನಾಟಕದ ಮೊದಲ ಪ್ರತ್ಯೇಕ ಲಿವರ್ ನೊಡ್ಯೂಲ್ ಕ್ಲಿನಿಕ್ ಆರಂಭಿಸಿರುವುದು ರೋಗಿ ಕೇಂದ್ರಿತ ಹಾಗೂ ವಿವಿಧ ವೈದ್ಯಕೀಯ ವಿಭಾಗಗಳ ಸಮನ್ವಯದ ಆರೋಗ್ಯ ಸೇವೆ ಒದಗಿಸುವ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ. ಅತ್ಯಾಧುನಿಕ ವೈದ್ಯಕೀಯ ಪರಿಣತಿಯನ್ನು ಒಂದೇ ವ್ಯವಸ್ಥೆಯಲ್ಲಿ ಒದಗಿಸುವ ಮೂಲಕ ಚಿಕಿತ್ಸಾ ಫಲಿತಾಂಶ ಮತ್ತು ರೋಗಿಗಳ ಅನುಭವ ಸುಧಾರಿಸುವುದು ಕ್ಲಿನಿಕ್‌ನ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಯಕೃತ್ತಿನ ಚೀಲಗಳು, ರಕ್ತನಾಳದ ಗೆಡ್ಡೆಗಳು, ಫೋಕಲ್ ನೊಡ್ಯುಲರ್ ಹೈಪರ್‌ಪ್ಲಾಸಿಯಾ, ಯಕೃತ್ತಿನ ಕ್ಯಾನ್ಸರ್, ದೇಹದ ಇತರ ಭಾಗಗಳಿಂದ ಯಕೃತ್ತಿಗೆ ಹರಡಿದ ಕ್ಯಾನ್ಸರ್ ಹಾಗೂ ಸಂಕೀರ್ಣ ಯಕೃತ್ತಿನ ಗೆಡ್ಡೆಗಳಿಗೆ ಇಲ್ಲಿ ಸಮಗ್ರ ಮೌಲ್ಯಮಾಪನ ಮತ್ತು ಚಿಕಿತ್ಸಾ ಸಲಹೆ ದೊರೆಯಲಿದೆ. ರೋಗನಿರ್ಣಯದ ನಿಖರತೆ ಹೆಚ್ಚಿಸುವುದು ಮತ್ತು ಚಿಕಿತ್ಸೆಯಲ್ಲಿನ ವಿಳಂಬ ಕಡಿಮೆ ಮಾಡುವುದು ಕ್ಲಿನಿಕ್‌ನ ಪ್ರಮುಖ ಗುರಿಯಾಗಿದೆ.

Continue Reading

ಬೆಂಗಳೂರು

Bengaluru ನಲ್ಲಿ ಖಾಲಿ ಸೈಟ್ ಮಾಲೀಕರಿಗೆ ಬಿಗ್ ಶಾಕ್: ಕಸ ತೆರವು ಮಾಡದಿದ್ದರೆ ₹38,400 ದಂಡ, ದೊಡ್ಡ ಸೈಟ್‌ಗೆ ಲಕ್ಷಕ್ಕೂ ಹೆಚ್ಚು!

Published

on

By

ಬೆಂಗಳೂರು: Bengaluru ನಲ್ಲಿ ಖಾಲಿ ನಿವೇಶನಗಳನ್ನು ಸ್ವಚ್ಛವಾಗಿಟ್ಟುಕೊಳ್ಳದೆ ಕಸ ಹಾಗೂ ಕಟ್ಟಡ ನಿರ್ಮಾಣದ ತ್ಯಾಜ್ಯವನ್ನು ಹಾಗೆಯೇ ಬಿಟ್ಟಿರುವ ಆಸ್ತಿ ಮಾಲೀಕರಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಬಿಗ್ ಶಾಕ್ ನೀಡಿದೆ. ಆಗಸ್ಟ್ 27ರಿಂದ ನಗರದಾದ್ಯಂತ ಖಾಲಿ ನಿವೇಶನಗಳ ಸ್ವಚ್ಛತಾ ವಿಶೇಷ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವ ಮಾಲೀಕರಿಗೆ ಭಾರಿ ದಂಡ ವಿಧಿಸಲು ನಿರ್ಧರಿಸಲಾಗಿದೆ.

ಶಾಂತಿನಗರದಲ್ಲಿ ವಿಶೇಷ ಅಭಿಯಾನಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಬಿಡಿಎ ಅಧ್ಯಕ್ಷ ಹಾಗೂ ಶಾಂತಿನಗರ ಶಾಸಕ ಎನ್.ಎ. ಹ್ಯಾರಿಸ್ ಉಪಸ್ಥಿತರಿದ್ದರು.

ಖಾಲಿ ಸೈಟ್‌ ಸ್ವಚ್ಛವಾಗಿಡುವುದು ಕಡ್ಡಾಯ

2020ರ ಘನತ್ಯಾಜ್ಯ ನಿರ್ವಹಣೆ ಉಪನಿಯಮಗಳ ಬೈಲಾ 18(1)(b) ಪ್ರಕಾರ, ಪ್ರತಿಯೊಬ್ಬ ಆಸ್ತಿ ಮಾಲೀಕರು ತಮ್ಮ ಖಾಲಿ ನಿವೇಶನಗಳನ್ನು ನೈರ್ಮಲ್ಯಯುತವಾಗಿ ಇಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ಈಗಾಗಲೇ ಆಗಸ್ಟ್ 15ರೊಳಗೆ ಖಾಲಿ ಸೈಟ್‌ಗಳಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಸ್ವತಃ ತೆರವುಗೊಳಿಸುವಂತೆ ಮಾಲೀಕರಿಗೆ ಕಾಲಾವಕಾಶ ನೀಡಲಾಗಿತ್ತು. ಆದರೆ ಗಡುವು ಮುಗಿದರೂ ಸ್ವಚ್ಛಗೊಳಿಸದ ನಿವೇಶನಗಳ ವಿರುದ್ಧ ಇದೀಗ ಜಿಬಿಎ ನೇರವಾಗಿ ಕ್ರಮ ಕೈಗೊಳ್ಳಲಿದೆ.

ಕಸ ತೆರವು ಮಾಡದಿದ್ದರೆ ಭಾರಿ ದಂಡ!

ಮಾಲೀಕರು ತಮ್ಮ ಜಾಗವನ್ನು ಸ್ವಚ್ಛಗೊಳಿಸದಿದ್ದರೆ, ಪ್ರಾಧಿಕಾರವೇ ನಿವೇಶನದಲ್ಲಿರುವ ತ್ಯಾಜ್ಯವನ್ನು ತೆರವುಗೊಳಿಸಲಿದೆ. ಇದಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ದಂಡದ ರೂಪದಲ್ಲಿ ಆಸ್ತಿ ತೆರಿಗೆಯೊಂದಿಗೆ ಸೇರಿಸಿ ವಸೂಲಿ ಮಾಡಲಾಗುತ್ತದೆ.

ನಿವೇಶನದ ಗಾತ್ರಕ್ಕೆ ಅನುಗುಣವಾಗಿ ದಂಡದ ಮೊತ್ತವೂ ಬದಲಾಗಲಿದೆ.

  • 20×30 ಸೈಟ್‌: ₹19,200ರಿಂದ ದಂಡ
  • 30×40 ಸೈಟ್‌: ₹38,400ರವರೆಗೆ ದಂಡ
  • ದೊಡ್ಡ ನಿವೇಶನಗಳು: ₹1 ಲಕ್ಷಕ್ಕೂ ಅಧಿಕ ದಂಡ ಬೀಳುವ ಸಾಧ್ಯತೆ

ಹೀಗಾಗಿ ಖಾಲಿ ಸೈಟ್‌ ಹೊಂದಿರುವವರು ತಕ್ಷಣವೇ ತಮ್ಮ ನಿವೇಶನದಲ್ಲಿರುವ ಕಸ, ಕಟ್ಟಡ ತ್ಯಾಜ್ಯ ಸೇರಿದಂತೆ ಎಲ್ಲ ರೀತಿಯ ತ್ಯಾಜ್ಯವನ್ನು ತೆರವುಗೊಳಿಸುವುದು ಸೂಕ್ತವಾಗಿದೆ.

ಮಾಲೀಕರೇ ಕಸ ಒಟ್ಟುಗೂಡಿಸಿದರೆ ಹೆಚ್ಚುವರಿ ಶುಲ್ಕವಿಲ್ಲ

ಆಸ್ತಿ ಮಾಲೀಕರು ಸ್ವತಃ ಮುಂದೆ ನಿಂತು ನಿವೇಶನದಲ್ಲಿರುವ ಕಸ ಮತ್ತು ತ್ಯಾಜ್ಯವನ್ನು ಒಂದೆಡೆ ಒಟ್ಟುಗೂಡಿಸಿದರೆ, ಅದನ್ನು ಪಾಲಿಕೆಯೇ ಯಾವುದೇ ಹೆಚ್ಚುವರಿ ಶುಲ್ಕವಿಲ್ಲದೆ ವಿಲೇವಾರಿ ಮಾಡಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಖಾಲಿ ನಿವೇಶನಗಳು ಕಸ ಹಾಕುವ ಸ್ಥಳಗಳಾಗುವುದನ್ನು ತಡೆಯುವುದು ಹಾಗೂ ನಗರವನ್ನು ಸ್ವಚ್ಛವಾಗಿಡುವುದು ಈ ಅಭಿಯಾನದ ಪ್ರಮುಖ ಉದ್ದೇಶವಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.

Continue Reading

ಬೆಂಗಳೂರು

Bengaluru ಪಾರ್ಕ್‌ ಜಾಗ ಬಳಕೆಗೆ ವಿರೋಧ: ಸರ್ಕಾರದ ವಿರುದ್ಧ ಸಿಡಿದೆದ್ದ ನಾಗರಿಕರು, 6 ಪ್ರಮುಖ ಬೇಡಿಕೆ

Published

on

By

ಬೆಂಗಳೂರು: ರಾಜ್ಯ ಸರ್ಕಾರದ ಮೂಲಸೌಕರ್ಯ ಯೋಜನೆಗಳಿಗೆ Bengaluru ರಿನ ಉದ್ಯಾನವನ ಹಾಗೂ ಉದ್ಯಾನಗಳ ಜಾಗವನ್ನು ಬಳಸಿಕೊಳ್ಳುವ ಸಚಿವ ಸಂಪುಟದ ನಿರ್ಧಾರಕ್ಕೆ ನಾಗರಿಕರು ಮತ್ತು ವಿವಿಧ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಪಾರ್ಕ್‌ಗಳ ಭೂಮಿಯನ್ನು ಇತರ ಕಾಮಗಾರಿಗಳಿಗೆ ಬಳಸುವುದರಿಂದ ನಗರದ ಪರಿಸರ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಬಹುದು ಎಂದು ನಾಗರಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಲಾಲ್‌ಬಾಗ್‌ನಲ್ಲಿ ಬೃಹತ್ ಬ್ಯಾನರ್‌ಗಳನ್ನು ಪ್ರದರ್ಶಿಸುವ ಮೂಲಕ ನಾಗರಿಕರು ಸರ್ಕಾರದ ನಿರ್ಧಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಬಳಿಕ ಮುಖ್ಯಮಂತ್ರಿ ಅವರಿಗೆ ಜಂಟಿ ಮನವಿ ಸಲ್ಲಿಸಿ, ಉದ್ಯಾನವನಗಳ ಸಂರಕ್ಷಣೆಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ನಾಗರಿಕ ಸಂಘಟನೆಗಳ ಪ್ರಕಾರ, ಉದ್ಯಾನವನಗಳು ಖಾಲಿ ಜಾಗವಲ್ಲ. ಅವು ನಗರದ ಉಷ್ಣಾಂಶ ನಿಯಂತ್ರಣ, ಮಳೆನೀರು ನಿರ್ವಹಣೆ, ಜೀವವೈವಿಧ್ಯ ಸಂರಕ್ಷಣೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಅತ್ಯಂತ ಪ್ರಮುಖವಾದ ಮೂಲಸೌಕರ್ಯಗಳಾಗಿವೆ.

ಸಂಶೋಧನೆಗಳನ್ನು ಉಲ್ಲೇಖಿಸಿರುವ ಸಂಘಟನೆಗಳು, ಬೆಂಗಳೂರಿನ ಹಸಿರು ಪ್ರದೇಶಗಳು ಸುತ್ತಮುತ್ತಲಿನ ಪ್ರದೇಶಗಳಿಗಿಂತ ಸರಾಸರಿ 2.23 ಡಿಗ್ರಿ ಸೆಲ್ಸಿಯಸ್‌ವರೆಗೆ ತಂಪಾಗಿರುತ್ತವೆ ಎಂದು ಹೇಳಿದ್ದಾರೆ. ಉದ್ಯಾನವನಗಳಿಂದ ಉಂಟಾಗುವ ಈ ತಂಪಿನ ಪರಿಣಾಮ ಸುಮಾರು 347 ಮೀಟರ್‌ ವ್ಯಾಪ್ತಿಯವರೆಗೆ ಕಂಡುಬರುತ್ತದೆ ಎಂಬ ಮಾಹಿತಿಯನ್ನೂ ನೀಡಿದ್ದಾರೆ.

ಶೇ.28ರಷ್ಟು ವಾರ್ಡ್‌ಗಳಲ್ಲಿ ಪಾರ್ಕ್‌ಗಳೇ ಇಲ್ಲ!

ಐಐಹೆಚ್‌ಎಸ್‌ ಸಂಶೋಧನೆಯನ್ನು ಉಲ್ಲೇಖಿಸಿರುವ ನಾಗರಿಕ ಗುಂಪುಗಳು, ಬೆಂಗಳೂರಿನ ಸುಮಾರು 28 ಪ್ರತಿಶತ ವಾರ್ಡ್‌ಗಳಲ್ಲಿ ಒಂದೇ ಒಂದು ಉದ್ಯಾನವನ ಅಥವಾ ಸೂಕ್ತ ಹಸಿರು ಪ್ರದೇಶವಿಲ್ಲ ಎಂದು ಹೇಳಿದ್ದಾರೆ. ಈಗಿರುವ ಉದ್ಯಾನವನಗಳ ಜಾಗವನ್ನೂ ಮೂಲಸೌಕರ್ಯ ಯೋಜನೆಗಳಿಗೆ ಬಳಸಿಕೊಂಡರೆ ಪರಿಸರದ ಮೇಲಿನ ಒತ್ತಡ ಮತ್ತಷ್ಟು ಹೆಚ್ಚಲಿದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ಮುಂದೆ 6 ಪ್ರಮುಖ ಬೇಡಿಕೆ

ನಾಗರಿಕ ಸಂಘಟನೆಗಳು ಸರ್ಕಾರದ ಮುಂದೆ ಪ್ರಮುಖವಾಗಿ ಆರು ಬೇಡಿಕೆಗಳನ್ನು ಇಟ್ಟಿವೆ.

  1. ಕರ್ನಾಟಕ ಸರ್ಕಾರಿ ಉದ್ಯಾನವನಗಳ ಸಂರಕ್ಷಣೆ ಕಾಯ್ದೆಗೆ ಉದ್ದೇಶಿಸಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು.
  2. ಅಸ್ತಿತ್ವದಲ್ಲಿರುವ ಉದ್ಯಾನವನಗಳನ್ನು ನಿರ್ಮಾಣ ಕಾಮಗಾರಿಗಳಿಗೆ ಬಳಸುವುದನ್ನು ತಡೆಯಬೇಕು.
  3. ಯೋಜನೆಗಳಿಗೆ ಉದ್ಯಾನವನಗಳನ್ನು ಹೊರತುಪಡಿಸಿ ಪರ್ಯಾಯ ಜಾಗಗಳನ್ನು ಮೊದಲು ಪರಿಶೀಲಿಸಬೇಕು.
  4. ಹಸಿರು ಪ್ರದೇಶಗಳಿಗೆ ಸಂಬಂಧಿಸಿದ ಯೋಜನೆಗಳ ಕುರಿತು ಸಾರ್ವಜನಿಕರ ಅಭಿಪ್ರಾಯ ಪಡೆಯಬೇಕು.
  5. ಪರಿಸರ, ಸಾಮಾಜಿಕ ಮತ್ತು ಸಾರ್ವಜನಿಕ ಆರೋಗ್ಯದ ಮೇಲೆ ಯೋಜನೆಗಳ ಪರಿಣಾಮದ ಸಮಗ್ರ ಅಧ್ಯಯನ ನಡೆಸಬೇಕು.
  6. ನಗರ ಯೋಜನೆಯಲ್ಲಿ ಉದ್ಯಾನವನಗಳನ್ನು ಅತ್ಯಗತ್ಯ ಸಾರ್ವಜನಿಕ ಆಸ್ತಿಯಾಗಿ ಗುರುತಿಸಿ ರಕ್ಷಿಸಬೇಕು.

ಬೆಂಗಳೂರು ನಗರಕ್ಕೆ ಇನ್ನಷ್ಟು ಹಸಿರು ಪ್ರದೇಶಗಳ ಅಗತ್ಯವಿದೆ. ಇರುವ ಉದ್ಯಾನವನಗಳ ಜಾಗವನ್ನು ಕಡಿಮೆ ಮಾಡುವ ಬದಲು ಅವುಗಳನ್ನು ಮತ್ತಷ್ಟು ಸಂರಕ್ಷಿಸಿ ವಿಸ್ತರಿಸಬೇಕು ಎಂದು ನಾಗರಿಕರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

Trending