Connect with us

ಬೆಂಗಳೂರು

ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ – ನಷ್ಟದ ಲೆಕ್ಕಾಚಾರವೇನು? – BJP JDS padayatra

Published

on

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ ರಾಜಕೀಯ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರವಾಗಿ ಬಿಜೆಪಿ – ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು- ಮೈಸೂರು ವರೆಗೆ ಪಾದಯಾತ್ರೆಗೆ ಉದ್ದೇಶಿಸಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಪಾದಯಾತ್ರೆ ನಡೆಯಲಿದೆ.

ಅಷ್ಟಕ್ಕೂ ಕರ್ನಾಟಕ ರಾಜಕೀಯದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈವರೆಗೆ ಕರುನಾಡು ಕಂಡಿರುವ ಪ್ರಮುಖ ಪಾದಯಾತ್ರೆ ಪೊಲಿಟಿಕ್ಸ್ ಮತ್ತು ಅದರಿಂದ ಪಕ್ಷಗಳು ರಾಜಕೀಯ ಲಾಭ ನಷ್ಟಕ್ಕೆ ಸಾಕ್ಷಿಯಾಗಿದೆ. ದೋಸ್ತಿಗಳು ಆ.3 ರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಏಳು ದಿನಗಳ ಪಾದಯಾತ್ರೆಗೆ ನಿರ್ಧರಿಸಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹಗರಣಗಳ ಆರೋಪವನ್ನು ಜನರ ಮುಂದೆ ಕೊಂಡೊಯ್ಯಲು ದೋಸ್ತಿಗಳು ಮುಂದಾಗಿದ್ದಾರೆ.

ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆನೂ ಕೆಲ ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತ ಅದರ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ ಇಲ್ಲಿದೆ.

ದೇವೇಗೌಡರ ಪಾದಯಾತ್ರೆ ಪೊಲಿಟಿಕ್ಸ್: ಹೆಚ್.ಡಿ. ದೇವೇಗೌಡರ 2001ರಲ್ಲಿ ಅಂದಿನ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಿ ಪಾದಯಾತ್ರೆಯ ಹೋರಾಟಕ್ಕೆ ಇಳಿದಿದ್ದರು. ನೀರಾ ತೆಗೆವ ವಿವಾದಲ್ಲಿ ಇಬ್ಬರು ರೈತರು ಪೊಲೀಸರು ಹಾರಿಸಿದ್ದ ಗುಂಡಿಗೆ ಬಲಿಯಾಗಿದ್ದರು. ಆ ವೇಳೆ ತೆಂಗಿಗೆ ನುಸಿರೋಗ ಹೆಚ್ಚಿದ್ದರಿಂದ ನೀರಾ ತೆಗೆಯುವ ವಿಚಾರ ಮುನ್ನೆಲೆಗೆ ಬಂದಿತ್ತು. ಇದೇ ವಿಚಾರವಾಗಿ ನಡೆದ ರೈತರ ಹೋರಾಟದ ಮೇಲೆ ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಗೋಲಿಬಾರ್‌ ನಡೆದು, ಇಬ್ಬರು ರೈತರು ಮೃತಪಟ್ಟಿದ್ದರು.

ಈ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ಬಳಸಿಕೊಂಡ ದೊಡ್ಡಗೌಡರು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಎಸ್‌.ಎಂ. ಕೃಷ್ಣ ಸರಕಾರದ ವಿರುದ್ಧ ಪಾದಯಾತ್ರೆ ಸಂಘಟಿಸಿ ಅದರ ಅಲೆಯಲ್ಲಿ ಚುನಾವಣೆ ಗೆದ್ದು ಬಂದಿದ್ದರು. ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯಿಂದ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ವರೆಗೆ ದೇವೇಗೌಡರು 2001ರ ಅ.28ರಿಂದ ನ.1ರ ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಒಟ್ಟು ಐದು ದಿನಗಳ ಕಾಲ ಸುಮಾರು 80 ಕಿ.ಮೀ. ಕ್ರಮಿಸಿ ಪಾದಯಾತ್ರೆ ನಡೆಸಿ, ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಇನ್ನು 2013ರಲ್ಲಿ ಫೆ.12ರಂದು ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ವರಿಷ್ಠ ದೇವೇಗೌಡರು ಬೆಂಗಳೂರು ನಗರದಲ್ಲಿ ಪಾದಯಾತ್ರೆ ಕೈಗೊಂಡಿದ್ದರು. ಬನ್ನಪ್ಪ ಪಾರ್ಕ್ ನಿಂದ ಫ್ರೀಡಂ ಪಾರ್ಕ್ ವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ದೊಡ್ಡಗೌಡರು ನಗರದಲ್ಲಿ ಪಾದಯಾತ್ರೆ ನಡೆಸಿದ್ದರು.

ಜೆಡಿಎಸ್​ಗೆ ಲಾಭ ತಂದು ಕೊಟ್ಟ ಪಾದಯಾತ್ರೆ: ದೇವೇಗೌಡರು ಕಾಂಗ್ರೆಸ್ ಸರ್ಕಾರದ ಗೋಲಿಬಾರ್ ವಿರುದ್ಧ ನಡೆಸಿದ ಪಾದಯಾತ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್​ಗೆ ಭರ್ಜರಿ ರಾಜಕೀಯ ಲಾಭವನ್ನು ಕೊಟ್ಟಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ಪಾರುಪತ್ಯ ಸಾಧಿಸಿತ್ತು. ಎಸ್.ಎಂ. ಕೃಷ್ಣ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ‌ ಅಲೆಯ ಜೊತೆಗೆ ದೊಡ್ಡಗೌಡರು ನಡೆಸಿದ ಪಾದಯಾತ್ರೆ ಹೋರಾಟವೂ ಜೆಡಿಎಸ್​ಗೆ ಭಾರೀ ಲಾಭ ತಂದು ಕೊಟ್ಟಿತು. 2004 ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 58 ಸ್ಥಾನಗಳಲ್ಲಿ ಗೆದ್ದು ಬೀಗಿತು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ 37 ಸ್ಥಾನಗಳನ್ನು ಗೆದ್ದು ಪಾದಯಾತ್ರೆ ಪೊಲಿಟಿಕ್ಸ್ ಶಕ್ತಿಯನ್ನು ತೋರಿಸಿಕೊಟ್ಟಿತು.

1999ರಲ್ಲಿ ಹಳೆ ಮೈಸೂರು ಭಾಗದಲ್ಲಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ 2004ರಲ್ಲಿ 37 ಸ್ಥಾನ ಗೆದ್ದು ಬೀಗಿತು. 1999 ಚುನಾವಣೆಯಲ್ಲಿ 11.45% ರಷ್ಟು ಇದ್ದ ಜೆಡಿಎಸ್​ನ ಮತ ಪ್ರಮಾಣ 2004 ಚುನಾವಣೆಯಲ್ಲಿ 21.10%ಗೆ ಏರಿಕೆ ಕಂಡಿತ್ತು. ಇದರಿಂದ ಪಕ್ಷಕ್ಕೆ ಮೈತ್ರಿ ಸರ್ಕಾರ ನಡೆಸಲು ಸಾಧ್ಯವಾಯಿತು. ಅದೇ ರೀತಿ 2013ರಲ್ಲಿ ಕುಡಿಯುವ ನೀರು ಸಂಬಂಧ ಬೆಂಗಳೂರಲ್ಲಿ ಮಾಡಿದ ಪಾದಯಾತ್ರೆಯಿಂದಲೂ ಜೆಡಿಎಸ್​ಗೆ ಪರೋಕ್ಷವಾಗಿ ಪಕ್ಷ ಸಂಘಟನೆಗೆ ಬಲ ನೀಡಿತು. 2013 ಚುನಾವಣೆಯಲ್ಲಿ ಜೆಡಿಎಸ್ ಬೆಂಗಳೂರು ನಗದರಲ್ಲಿ ಮೊದಲ ಬಾರಿಗೆ 3 ಸ್ಥಾನವನ್ನು ಗೆಲ್ಲುವಂತಾಯಿತು.

ಎಸ್.ಎಂ. ಕೃಷ್ಣರಿಂದ ಕಾವೇರಿ ಪಾದಯಾತ್ರೆ: 2002ರಲ್ಲಿ ಸಿಎಂ ಆಗಿದ್ದ ಎಸ್.ಎಂ. ಕೃಷ್ಣ ಪಾದಯಾತ್ರೆಯ ಮೊರೆ ಹೋಗಿದ್ದರು. ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ಎಸ್.ಎಂ. ಕೃಷ್ಣ ಪಾದಯಾತ್ರೆ ಕೈಗೊಂಡು ಕಾವೇರಿ ಪ್ರಾಂತ್ಯದ ಜನರ ಮನಗೆಲ್ಲುವ ಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್‌ ಮುಂದೆ ಇದ್ದಿದ್ದರಿಂದ ಈ ಪಾದಯಾತ್ರೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಎಸ್.ಎಂ. ಕೃಷ್ಣ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ 2002 ಅ.7ರಿಂದ ಅ.11 ರವರೆಗೆ ಆರು ದಿನಗಳ ಪಾದಯಾತ್ರೆ ಕೈಗೊಂಡಿದ್ದರು. ಬೆಂಗಳೂರಿನ ರಾಜರಾ ಜೇಶ್ವರಿ ನಗರದಿಂದ ಮಂಡ್ಯದ ವರೆಗೆ 100 ಕಿ.ಮೀ. ದೂರ ಪಾದಯಾತ್ರೆ ನಡೆಸಿದ್ದರು. ಆ ಮೂಲಕ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿದ್ದರು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಇದರಿಂದ ಹೆಚ್ಚಿನ ರಾಜಕೀಯ ಲಾಭ ಲಭಿಸಲಿಲ್ಲ. ಬಲವಾದ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಆ ಚುನಾವಣೆಯಲ್ಲಿ ಸೋಲು ಕಂಡಿತ್ತು.

ಸಿದ್ದರಾಮಯ್ಯರ ಬಳ್ಳಾರಿ ಪಾದಯಾತ್ರೆ: ಬಳ್ಳಾರಿಯಲ್ಲಿ ಬಿಜೆಪಿಯ ರೆಡ್ಡಿ ಹಾಗೂ ಶ್ರೀರಾಮುಲು ಪ್ರಾಬಲ್ಯದ ವಿರುದ್ದ ತೊಡೆತಟ್ಟಿ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಈ ಐತಿಹಾಸಿಕ ಪಾದಯಾತ್ರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತ್ತು. ಇದು 2013ರಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿತು.

2010ರಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು. ಮುಖ್ಯಮಂತ್ರಿಯಾಗಿದ್ದವರು ಬಿ.ಎಸ್. ಯಡಿಯೂರಪ್ಪ. ಆಗ ಅಧಿಕಾರದಲ್ಲಿ ಪ್ರಾಬಲ್ಯ ಹೊಂದಿದ್ದು ಗಣಿಧಣಿಗಳಾದ ಜನಾರ್ದನ್ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು. ರಾಜ್ಯ ವಿಧಾನಸಭೆಯಲ್ಲಿ ‘ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರೆಡ್ಡಿ ಬ್ರದರ್ಸ್ ಸವಾಲು ಹಾಕಿದ್ದರು. ವಿಧಾನಸಭೆಯಲ್ಲೇ ಬಳ್ಳಾರಿ ಗಣಿಧಣಿಗಳ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಭುಜತಟ್ಟಿ, ನಾವು ಬಳ್ಳಾರಿಗೆ ಬಂದೇ ಬರುತ್ತೇವೆ. ನಡೆದುಕೊಂಡೇ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು. ಆಗ ಹುಟ್ಟಿದ್ದೇ ಬಳ್ಳಾರಿ ಪಾದಯಾತ್ರೆ. 2010ರ ಜುಲೈ 25 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭವಾಯಿತು. ಬೆಂಗಳೂರಿನಿಂದ ಬಳ್ಳಾರಿಗೆ ಹೊರಟ ಪಾದಯಾತ್ರೆ ಸಮಾರೋಪ ಆಗಿದ್ದು ಆಗಸ್ಟ್ 8 ರಂದು. ಅಂದು ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಗಣಿಧಣಿಗಳು ಹಾಗೂ ಬಿಜೆಪಿ ಸರಕಾರದ ವಿರುದ್ಧ ಅಬ್ಬರಿಸಿದ್ದರು.

ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ: 2013ರಲ್ಲಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂಬ ಪಾದಯಾತ್ರೆ ನಡೆಸಿದ್ದರು. ಕೃಷ್ಣಾದ ಎ ಮತ್ತು ಬಿ ಸ್ಕೀಮ್‌ನಡಿ ಪೂರ್ಣ ಪ್ರಮಾಣದ ನೀರು ಬಳಸಿಕೊಳ್ಳಲು ಸರಕಾರ ವೈಫಲ್ಯ ಹಾಗೂ ನೀರಾವರಿ ಯೋಜನೆಗೆ ಅನುಷ್ಠಾನದಲ್ಲಿನ ವೈಫಲ್ಯ ವಿರೋಧಿಸಿ ಚುನಾವಣಾ ಪೂರ್ವ ಜ.7 ರಿಂದ 14 ರವರೆಗೆ ಕಾಂಗ್ರೆಸ್ ನಡಿಗೆ – ಕೃಷ್ಣೆಯ ಕಡೆಗೆ ಎಂಬ ಯಾತ್ರೆ ಕೈಗೊಂಡಿತ್ತು. ಕೃಷ್ಣ ಯೋಜನೆಯಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ 259 ಟಿಎಂಸಿ ನೀರು ಆಂಧ್ರಕ್ಕೆ ಹೋಗುತ್ತಿದೆ. ಅಲ್ಲಿನ ನೀರಾವರಿ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ನೀಡಿದ್ದ ಬಿಜೆಪಿ, ಕೇವಲ 500 ಕೋಟಿ ರೂ. ನೀಡಿದೆ ಎಂಬ ಪ್ರಮುಖ ಅಜೆಂಡಾದೊಂದಿಗೆ ಪಾದಯಾತ್ರೆ ನಡೆಸಲಾಗಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಜೆಟ್‌ನಲ್ಲಿ ಇದಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದೆಂಬ ಭರವಸೆಯೊಂದಿಗೆ ಪಾದಯಾತ್ರೆ ನಡೆಸಿತ್ತು. ಹೊಸಪೇಟೆಯಿಂದ ಆರಂಭಗೊಂಡು ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದ ಮಾರ್ಗವಾಗಿ ಕೂಡಲಸಂಗಮದಲ್ಲಿ ಸಮಾರೋಪಗೊಂಡು ಸುಮಾರು 140 ಕಿ.ಮೀ ಪಾದಯಾತ್ರೆ ನಡೆಸಲಾಯಿತು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಮೇಕೆದಾಟು ಪಾದಯಾತ್ರೆ. 2022ರಂದು ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಜಾರಿಗಾಗಿ ಆಗ್ರಹಿಸಿ ಮಾಡಿದ ಪಾದಯಾತ್ರೆ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಜನವರಿ 9, 2022 ರಿಂದ ಆರಂಭವಾದ ಪಾದಯಾತ್ರೆ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಐದು ದಿನಗಳ ಕಾಲ ಪಾದಯಾತ್ರೆ ನಡೆಸಿ ಕೋವಿಡ್ ನಿಯಮಾವಳಿ ಹಿನ್ನೆಲೆ ನಿಲ್ಲಿಸಿದ್ದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಫೆ.27 ರಿಂದ ಮರು ಆರಂಭಿಸಿ ಮಾ.2, 2022ಕ್ಕೆ ಮುಕ್ತಾಯವಾಗಿತ್ತು. 165 ಕಿ.ಮೀ. ಕ್ರಮಿಸಿ 9 ದಿನಗಳ ಪಾದಯಾತ್ರೆ ನಡೆಸಲಾಗಿತ್ತು.

ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ವಿಳಂಬ ಮಾಡುತ್ತಿವೆ ಎನ್ನುವುದು ಕಾಂಗ್ರೆಸ್‌ನ ಪ್ರಧಾನ ಆರೋಪವಾಗಿತ್ತು. ಮೇಕೆದಾಟು ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಬೆಂಗಳೂರಿನ‌ ಬಸವನಗುಡಿಯಲ್ಲಿ ಸಮಾರೋಪಗೊಂಡಿದ್ದ ಮೇಕೆದಾಟು ಪಾದಯಾತ್ರೆ ರಾಜಕೀಯ ಲೆಕ್ಕಾಚಾರ ಹೊಂದಿತ್ತು.‌

ಪಾದಯಾತ್ರೆಯಿಂದ ಗದ್ದುಗೆ ಹಿಡಿದ ಕಾಂಗ್ರೆಸ್: ಬಳ್ಳಾರಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ 2013ರ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿತ್ತು. ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಪರಿಣಾಮ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಳ್ಳಾರಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಚಿಗುರೊಡೆದಿತ್ತು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 4 ರಿಂದ 6 ಸ್ಥಾನಗಳಿಗೆ ಏರಿಕೆ ಕಂಡಿತ್ತು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ 122 ಬಹುಮತದ ಗೆಲುವು ಸಾಧಿಸಿತ್ತು.

ತನ್ನ ಮತ ಪ್ರಮಾಣವನ್ನು ಶೇ 36.76ಗೆ ಏರಿಕೆ ಮಾಡಿತ್ತು. ತಮ್ಮ ಪಾದಯಾತ್ರೆಗಳ ಮೂಲಕ ಕಾಂಗ್ರೆಸ್ 2013ರಲ್ಲಿ ಮುಂಬೈ ಕರ್ನಾಟಕ‌ ಭಾಗದಲ್ಲಿನ 56 ಸ್ಥಾನಗಳ ಪೈಕಿ 34 ಸ್ಥಾನ ಗೆದ್ದಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ 19 ಸ್ಥಾನದಲ್ಲಿ ಗೆದ್ದು ಬೀಗಿತ್ತು. ಅದೇ ರೀತಿ ಮಧ್ಯ ಕರ್ನಾಟಕ ಭಾಗದಲ್ಲಿ 32 ಸ್ಥಾನಗಳ ಪೈಕಿ 18 ಸೀಟು ಗೆದ್ದಿತ್ತು. ಆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 40 ಸ್ಥಾನಕ್ಕೆ ಕುಸಿತ ಕಂಡಿತು.

ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿಗೆ ಬೆಂಗಳೂರು ಸೇರಿದಂತೆ ರಾಮನಗರದ ಮಟ್ಟಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ‌ ಫಲಿತಾಂಶ ನೀಡಿತ್ತು. ಮೇಕೆದಾಟು ಪಾದಯಾತ್ರೆ ಬಂದ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಸಫಲವಾಗಿತ್ತು.‌

ರಾಜಕೀಯ

Yathindra Siddaramaiah ಸದ್ದಿಲ್ಲದೆ ಶುರು ಮಾಡಿದ್ರಾ ಹೊಸ ರಾಜಕೀಯ ಲೆಕ್ಕಾಚಾರ? ಜಮೀರ್ ಭೇಟಿಗೆ ಹೆಚ್ಚಿದ ಕುತೂಹಲ

Published

on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ Yathindra Siddaramaiah ಅವರು ಇತ್ತೀಚಿನ ದಿನಗಳಲ್ಲಿ ರಾಜಕೀಯವಾಗಿ ಹೆಚ್ಚು ಸಕ್ರಿಯರಾಗುತ್ತಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಯತೀಂದ್ರ ಭೇಟಿ ಮಾಡಿರುವುದು ಇದೀಗ ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಯತೀಂದ್ರ ಸಿದ್ದರಾಮಯ್ಯ ಅವರು ಜಮೀರ್ ಅಹ್ಮದ್ ಖಾನ್ ಅವರನ್ನು ಭೇಟಿ ಮಾಡಿ ಕೆಲಕಾಲ ಮಾತುಕತೆ ನಡೆಸಿದ್ದಾರೆ. ಈ ಭೇಟಿ ಸೌಹಾರ್ದಯುತ ಭೇಟಿಯೇ ಅಥವಾ ಇದರ ಹಿಂದೆ ರಾಜಕೀಯ ಲೆಕ್ಕಾಚಾರವಿದೆಯೇ ಎಂಬ ಬಗ್ಗೆ ಇದೀಗ ಹಲವು ರೀತಿಯ ಚರ್ಚೆಗಳು ನಡೆಯುತ್ತಿವೆ.

ಸಿದ್ದರಾಮಯ್ಯ ಆಪ್ತರನ್ನು ಮತ್ತೆ ಒಗ್ಗೂಡಿಸುವ ಪ್ರಯತ್ನ?

ಸಿದ್ದರಾಮಯ್ಯ ಅವರ ರಾಜಕೀಯ ಪ್ರಭಾವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನಕ್ಕೆ ಯತೀಂದ್ರ ಮುಂದಾಗಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ವಿಶೇಷವಾಗಿ, ಹಿಂದೆ ಸಿದ್ದರಾಮಯ್ಯ ಅವರೊಂದಿಗೆ ಕೆಲವು ವಿಚಾರಗಳಲ್ಲಿ ಅಂತರ ಕಾಯ್ದುಕೊಂಡಿದ್ದ ನಾಯಕರೊಂದಿಗೂ ಯತೀಂದ್ರ ಮತ್ತೆ ಉತ್ತಮ ಸಂಬಂಧ ಬೆಳೆಸಿಕೊಳ್ಳುವ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗುತ್ತಿದೆ. ಇದರ ಭಾಗವಾಗಿಯೇ ಸಚಿವ ಜಮೀರ್ ಅಹ್ಮದ್ ಖಾನ್ ಅವರ ಭೇಟಿಯನ್ನು ನೋಡಲಾಗುತ್ತಿದೆ.

ಇದಕ್ಕೂ ಮುನ್ನ ಸಚಿವ ಸತೀಶ್ ಜಾರಕಿಹೊಳಿ ಅವರೊಂದಿಗೂ ಯತೀಂದ್ರ ಸಿದ್ದರಾಮಯ್ಯ ಮಾತುಕತೆ ನಡೆಸಿದ್ದರು. ಸತೀಶ್ ಜಾರಕಿಹೊಳಿ ಮತ್ತು ಜಮೀರ್ ಅಹ್ಮದ್ ಖಾನ್ ಅವರಂತಹ ಪ್ರಮುಖ ನಾಯಕರನ್ನು ಯತೀಂದ್ರ ಸತತವಾಗಿ ಭೇಟಿ ಮಾಡುತ್ತಿರುವುದು ರಾಜಕೀಯವಾಗಿ ಗಮನ ಸೆಳೆದಿದೆ.

ಭೇಟಿಗಳ ಹಿಂದೆ ರಾಜಕೀಯ ಕಾರ್ಯತಂತ್ರ?

ಯತೀಂದ್ರ ಅವರ ಈ ಭೇಟಿಗಳನ್ನು ಸದ್ಯಕ್ಕೆ ಸಾಮಾನ್ಯ ಸೌಹಾರ್ದಯುತ ಭೇಟಿಗಳೆಂದು ಹೇಳಲಾಗುತ್ತಿದ್ದರೂ, ರಾಜಕೀಯ ಬೆಳವಣಿಗೆಗಳು ಹಾಗೂ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆದಿರಬಹುದೆಂಬ ಮಾತುಗಳು ಕೇಳಿಬರುತ್ತಿವೆ.

ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷದೊಳಗಿನ ರಾಜಕೀಯ ಸಮೀಕರಣಗಳು ಹೇಗೆ ಬದಲಾಗಲಿವೆ ಎಂಬುದು ಕುತೂಹಲ ಮೂಡಿಸಿರುವ ಸಂದರ್ಭದಲ್ಲೇ ಯತೀಂದ್ರ ಅವರ ಚಟುವಟಿಕೆಗಳು ಹೆಚ್ಚಾಗಿವೆ.

ತಂದೆ ಸಿದ್ದರಾಮಯ್ಯ ಅವರ ರಾಜಕೀಯ ಅನುಭವ ಮತ್ತು ಪ್ರಭಾವವನ್ನು ಬಳಸಿಕೊಂಡು ಪಕ್ಷದ ಪ್ರಮುಖ ನಾಯಕರೊಂದಿಗೆ ಬಾಂಧವ್ಯ ಬಲಪಡಿಸುವ ಪ್ರಯತ್ನ ಇದಾಗಿರಬಹುದು ಎಂಬ ವಿಶ್ಲೇಷಣೆ ರಾಜಕೀಯ ವಲಯದಲ್ಲಿ ವ್ಯಕ್ತವಾಗಿದೆ.

ಆದರೆ, ಜಮೀರ್ ಅಹ್ಮದ್ ಖಾನ್ ಮತ್ತು ಸತೀಶ್ ಜಾರಕಿಹೊಳಿ ಅವರೊಂದಿಗಿನ ಯತೀಂದ್ರ ಸಿದ್ದರಾಮಯ್ಯ ಅವರ ಭೇಟಿಗಳ ನಿಖರ ರಾಜಕೀಯ ಉದ್ದೇಶವೇನು ಎಂಬುದು ಇನ್ನೂ ಅಧಿಕೃತವಾಗಿ ಸ್ಪಷ್ಟವಾಗಿಲ್ಲ. ಹೀಗಾಗಿ ಈ ಸರಣಿ ಭೇಟಿಗಳು ಮುಂದಿನ ದಿನಗಳಲ್ಲಿ ಯಾವ ರೀತಿಯ ರಾಜಕೀಯ ಬೆಳವಣಿಗೆಗೆ ಕಾರಣವಾಗುತ್ತವೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ರಾಜ್ಯ

KRS ಡ್ಯಾಂಗೆ ಭಾರೀ ಶಾಕ್‌! ಒಳಹರಿವು ದಿಢೀರ್ ಕುಸಿತ; ಸದ್ಯದ ನೀರಿನ ಮಟ್ಟ ಎಷ್ಟು ಗೊತ್ತಾ?

Published

on

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಪರಿಣಾಮ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೃಷ್ಣರಾಜ ಸಾಗರ (KRS) ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣದಲ್ಲಿ ದಿಢೀರ್ ಇಳಿಕೆಯಾಗಿದೆ. ಕೊಡಗು ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಮಳೆ ಕಡಿಮೆಯಾಗಿರುವುದರಿಂದ ಜಲಾಶಯದ ಒಳಹರಿವು ಗಣನೀಯವಾಗಿ ಕುಸಿದಿದೆ.

ಕಳೆದ ಕೆಲವು ದಿನಗಳಿಂದ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿದ್ದ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಭಾರೀ ಪ್ರಮಾಣದಲ್ಲಿ ನೀರು ಹರಿದುಬರುತ್ತಿತ್ತು. ಇದರಿಂದ ಜಲಾಶಯದ ನೀರಿನ ಮಟ್ಟವೂ ವೇಗವಾಗಿ ಏರಿಕೆಯಾಗಿತ್ತು.

ಬುಧವಾರ ಬೆಳಿಗ್ಗೆ 9,438 ಕ್ಯೂಸೆಕ್ ಇದ್ದ ಕೆಆರ್‌ಎಸ್ ಜಲಾಶಯದ ಒಳಹರಿವು ಗುರುವಾರ ವೇಳೆಗೆ ಬರೋಬ್ಬರಿ 17,427 ಕ್ಯೂಸೆಕ್‌ಗೆ ಏರಿಕೆಯಾಗಿತ್ತು. ಆದರೆ ಇದೀಗ ಕಾವೇರಿ ಕೊಳ್ಳದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಶುಕ್ರವಾರದ ವೇಳೆಗೆ ಒಳಹರಿವು 10,028 ಕ್ಯೂಸೆಕ್‌ಗೆ ಕುಸಿದಿದೆ.

ಒಂದೇ ದಿನದಲ್ಲಿ ಒಳಹರಿವಿನಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿರುವುದು ಜಲಾಶಯದ ನೀರಿನ ಲಭ್ಯತೆ ಕುರಿತು ಕುತೂಹಲ ಮೂಡಿಸಿದೆ. ಮುಂದಿನ ದಿನಗಳಲ್ಲಿ ಕೊಡಗು ಹಾಗೂ ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಉತ್ತಮ ಮಳೆಯಾಗುತ್ತದೆಯೇ ಎಂಬುದರ ಮೇಲೆ ಕೆಆರ್‌ಎಸ್‌ಗೆ ಒಳಹರಿವಿನ ಪ್ರಮಾಣ ಅವಲಂಬಿತವಾಗಿರಲಿದೆ.

110 ಅಡಿ ದಾಟಿದ KRS ನೀರಿನ ಮಟ್ಟ

ಒಳಹರಿವು ಕಡಿಮೆಯಾಗಿದ್ದರೂ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ 110.20 ಅಡಿಗೆ ತಲುಪಿದೆ. ಜಲಾಶಯದ ಗರಿಷ್ಠ ನೀರಿನ ಸಂಗ್ರಹ ಸಾಮರ್ಥ್ಯದ ಮಟ್ಟ 124.80 ಅಡಿಯಾಗಿದೆ.

ಸದ್ಯ ಜಲಾಶಯದಲ್ಲಿ 31.923 ಟಿಎಂಸಿ ನೀರು ಸಂಗ್ರಹವಾಗಿದೆ. 110 ಅಡಿಗೂ ಹೆಚ್ಚು ನೀರು ಸಂಗ್ರಹವಾಗಿರುವುದು ಕಾವೇರಿ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಮಂಡ್ಯ, ಮೈಸೂರು ಸೇರಿದಂತೆ ಹಲವು ಪ್ರದೇಶಗಳ ಕುಡಿಯುವ ನೀರಿನ ಅಗತ್ಯಗಳಿಗೆ ಸದ್ಯಕ್ಕೆ ಆಶಾದಾಯಕ ಬೆಳವಣಿಗೆಯಾಗಿದೆ.

ಕಳೆದ ಕೆಲವು ದಿನಗಳಲ್ಲಿ ಹೆಚ್ಚಾಗಿದ್ದ ಒಳಹರಿವು ಇದೀಗ ಇಳಿಕೆಯಾಗಿರುವುದರಿಂದ ಜಲಾಶಯದ ನೀರಿನ ಮಟ್ಟ ಮತ್ತು ಒಳಹರಿವಿನ ಮೇಲೆ ರೈತರು ಹಾಗೂ ಅಧಿಕಾರಿಗಳು ನಿಗಾ ಇರಿಸಿದ್ದಾರೆ. ಮುಂದಿನ ಮಳೆಯ ಪ್ರಮಾಣದ ಆಧಾರದ ಮೇಲೆ ಕೆಆರ್‌ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತೆ ಏರಿಳಿತವಾಗುವ ಸಾಧ್ಯತೆಯಿದೆ.

Continue Reading

ದೇಶ

KPSC Recruitment Scam: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್‌ಡಿಕೆ ಗಂಭೀರ ಆರೋಪ; ನೇಮಕಾತಿ ದಂಧೆ ಬಯಲು ಎಂದ ಕೇಂದ್ರ ಸಚಿವ

Published

on

By

ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ KPSC ದಲ್ಲಿ ಅಕ್ರಮ ಹಾಗೂ ನೇಮಕಾತಿ ದಂಧೆ ನಡೆಯುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. KPSC ಸೇರಿದಂತೆ ಹಲವು ವಿಚಾರಗಳನ್ನು ಪ್ರಸ್ತಾಪಿಸಿದ ಅವರು, ಸರ್ಕಾರದ ಕಾರ್ಯವೈಖರಿಯನ್ನು ಪ್ರಶ್ನಿಸಿದ್ದಾರೆ.

KPSC ಸಂಸ್ಥೆಯ ಮೇಲಿನ ಜನರ ವಿಶ್ವಾಸ ಕಡಿಮೆಯಾಗಿದೆ ಎಂದು ಆರೋಪಿಸಿದ ಎಚ್‌ಡಿಕೆ, ಉದ್ಯೋಗಾಕಾಂಕ್ಷಿಗಳಿಗೆ ಆಯೋಗದ ಬಗ್ಗೆ ಯಾವುದೇ ಭರವಸೆ ಉಳಿದಿಲ್ಲ ಎಂದು ಹೇಳಿದ್ದಾರೆ. KPSC ಸದಸ್ಯರ ನೇಮಕಾತಿಯಲ್ಲಿಯೇ ದೊಡ್ಡ ಮಟ್ಟದ ದಂಧೆ ನಡೆಯುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

KPSC ಸದಸ್ಯರ ನೇಮಕಕ್ಕೂ ರೇಟ್ ಫಿಕ್ಸ್?

KPSC ಸದಸ್ಯರನ್ನು ನೇಮಕ ಮಾಡುವಾಗ ನಿರ್ದಿಷ್ಟ ದರ ನಿಗದಿಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ. ಜಾತಿಯ ಹೆಸರಿನಲ್ಲಿ ಹಾಗೂ ಹಣದ ಆಧಾರದ ಮೇಲೆ ಸದಸ್ಯರ ನೇಮಕಾತಿ ನಡೆಯುತ್ತಿದೆ ಎಂದು ಅವರು ದೂರಿದ್ದಾರೆ.

KPSC ಮೇಲಿನ ಜನರ ನಂಬಿಕೆ ಕಳೆದುಹೋಗಲು ರಾಜ್ಯ ಸರ್ಕಾರವೇ ಕಾರಣ ಎಂದು ಟೀಕಿಸಿರುವ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಬಗ್ಗೆ ಸರ್ಕಾರ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

73 ಸಾವಿರ ಉದ್ಯೋಗ ಭರವಸೆ ಏನಾಯಿತು?

ರಾಜ್ಯದ ನಾಲ್ಕು ಇಲಾಖೆಗಳ ನೇಮಕಾತಿ ಪ್ರಕ್ರಿಯೆಯನ್ನು ಉಲ್ಲೇಖಿಸಿದ ಎಚ್‌ಡಿಕೆ, ಕಾಂಗ್ರೆಸ್ ಸರ್ಕಾರ ನೀಡಿದ್ದ 73 ಸಾವಿರ ಉದ್ಯೋಗಗಳ ಭರವಸೆ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳುತ್ತಾರೆ. ಆದರೆ ನೇಮಕಾತಿ ಸೇರಿದಂತೆ ವಿವಿಧ ವಿಚಾರಗಳಲ್ಲಿ ಹೊಸ ತಿದ್ದುಪಡಿಗಳ ಹೆಸರಿನಲ್ಲಿ ಏನು ನಡೆಯುತ್ತಿದೆ ಎಂಬುದನ್ನು ಸರ್ಕಾರ ಗಮನಿಸಬೇಕು ಎಂದು ಅವರು ಹೇಳಿದ್ದಾರೆ.

ಎಂಜಿನಿಯರ್ ನೇಮಕಾತಿಯಲ್ಲೂ ಅಕ್ರಮ ಆರೋಪ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಾಲ್ವರು ಕಾರ್ಯನಿರ್ವಾಹಕ ಎಂಜಿನಿಯರ್‌ಗಳ ನೇಮಕಾತಿಗೆ ಸಂಬಂಧಿಸಿದಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿರುವ ಕುಮಾರಸ್ವಾಮಿ, ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಬಿಡುಗಡೆ ಮಾಡಿರುವುದಾಗಿ ತಿಳಿಸಿದ್ದಾರೆ.

ಈ ಇಲಾಖೆಯ ಸಚಿವರಾಗಿ ಹಿಂದೆ ಕಾರ್ಯನಿರ್ವಹಿಸಿದ್ದ ಪ್ರಿಯಾಂಕ್ ಖರ್ಗೆ ಅವರಿಗೆ ನೇಮಕಾತಿಯಲ್ಲಿನ ಅಕ್ರಮದ ಬಗ್ಗೆ ಮಾಹಿತಿ ಇದ್ದರೂ ನೇಮಕಾತಿ ಮಾಡಲಾಗಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದೇ ವೇಳೆ ರಾಜ್ಯದಲ್ಲಿ ಉದ್ಯೋಗ ನೇಮಕಾತಿ ಪ್ರಕ್ರಿಯೆ ಪಾರದರ್ಶಕವಾಗಿರಬೇಕು. ಉದ್ಯೋಗಕ್ಕಾಗಿ ಕಾಯುತ್ತಿರುವ ಸಾವಿರಾರು ಅಭ್ಯರ್ಥಿಗಳ ಭವಿಷ್ಯದೊಂದಿಗೆ ಯಾವುದೇ ರೀತಿಯ ರಾಜಿ ಮಾಡಿಕೊಳ್ಳಬಾರದು ಎಂದು ಅವರು ಹೇಳಿದ್ದಾರೆ.

Continue Reading

Trending