Connect with us

ಬೆಂಗಳೂರು

ರಾಜಕೀಯ ಗುದ್ದಾಟಕ್ಕೆ ಕಾರಣವಾದ ಜೆಎಸ್​​ಡಬ್ಲ್ಯೂಗೆ ಭೂಮಿ ಮಾರಾಟ ತೀರ್ಮಾನ: ಏನಿದು ದಶಕದ ಭೂ ವಿವಾದ? – Land Allotment to Jindal

Published

on

ಬೆಂಗಳೂರು: ಸದ್ಯ ಜಿಂದಾಲ್​ಗೆ ಭೂಮಿ ನೀಡುವ ಕಾಂಗ್ರೆಸ್ ಸರ್ಕಾರದ ತೀರ್ಮಾನ ವಿಪಕ್ಷಗಳ ಕಣ್ಣು ಕೆಂಪಾಗಿಸಿದೆ. ಜಿಂದಾಲ್​ಗೆ ಭೂಮಿ ಮಾರಾಟ ಮಾಡುವ ವಿಚಾರವು ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ನಡುವಿನ ಗುದ್ದಾಟಕ್ಕೆ ಕಾರಣವಾಗಿದೆ. ಅಷ್ಟಕ್ಕೂ ಏನಿದು ಜಿಂದಾಲ್ ಭೂಮಿ ಸುತ್ತದ ವಿವಾದ ಎಂಬ ವರದಿ ಇಲ್ಲಿದೆ.

ಇತ್ತೀಚೆಗೆ ಸಚಿವ ಸಂಪುಟ ಸಭೆಯಲ್ಲಿ ಜೆಎಸ್​​ಡಬ್ಲ್ಯೂ ಸಂಸ್ಥೆಗೆ ಬಳ್ಳಾರಿಯಲ್ಲಿ ಭೂಮಿ ಮಾರಾಟ ಮಾಡಲು ತೀರ್ಮಾನಿಸಲಾಗಿತ್ತು. ಬಳ್ಳಾರಿ ಸಂಡೂರು ತಾಲೂಕಿನ ತೋರಣಗಲ್ ಮತ್ತು ಕುರೇಕುಪ್ಪ ಗ್ರಾಮಗಳಲ್ಲಿನ 2 ಸಾವಿರ ಎಕರೆ ಜಮೀನನ್ನು ಪ್ರತಿ ಎಕರೆಗೆ 1.22 ಲಕ್ಷ ರೂ. ಅಂತಿಮ ಬೆಲೆ ನಿಗದಿಪಡಿಸಿ ಹಾಗೂ ಸಂಡೂರು ತಾಲೂಕಿನ ತೋರಣಗಲ್​, ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿನ 1666.73 ಎಕರೆ ಜಮೀನನ್ನು ಪ್ರತಿ ಎಕರೆಗೆ 1.50 ಲಕ್ಷ ರೂ. ಅಂತಿಮ ಬೆಲೆ ನಿಗದಿಪಡಿಸಿ ಜೆಎಸ್​​ಡಬ್ಲ್ಯೂ ಸ್ಟೀಲ್‌ ಪರವಾಗಿ ನೀಡಲು ನಿರ್ಧರಿಸಲಾಗಿದೆ.

ಹಿಂದೆ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿದ್ದಾಗ ಈ ನಿಟ್ಟಿನಲ್ಲಿ ಅಂದಿನ ಬಿಜೆಪಿ ಸರ್ಕಾರ ಕೈಗೊಂಡ ಸಂಪುಟ ತೀರ್ಮಾನದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಅಂದು ಬಿಜೆಪಿ ಸರ್ಕಾರದ ನಡೆಯನ್ನು ವಿರೋಧಿಸಿದ್ದ ಕಾಂಗ್ರೆಸ್ ಈಗ ತನ್ನ ಆಡಳಿತದಲ್ಲಿ ಜೆಎಸ್​​ಡಬ್ಲ್ಯೂಗೆ ಭೂಮಿ ನೀಡಲು ತೀರ್ಮಾನಿಸಿದೆ. ಕಾಂಗ್ರೆಸ್ ಸರ್ಕಾರದ ಈ ನಡೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸಿದೆ. ಕಾಂಗ್ರೆಸ್ ಸರ್ಕಾರದ ಈ ತೀರ್ಮಾನದ ಹಿಂದೆ ಕಿಕ್ ಬ್ಯಾಕ್​​​ನ ಗಂಭೀರ ಆರೋಪ ಮಾಡುತ್ತಿದೆ.‌

ಏನಿದು ಜಿಂದಾಲ್ ಭೂಮಿ ವಿವಾದ?: ಬಳ್ಳಾರಿಯಲ್ಲಿ ಜೆಎಸ್​​ಡಬ್ಲ್ಯೂ ಸ್ಟೀಲ್ ಸಂಸ್ಥೆ‌ ಜೊತೆ 2006-2007ರಲ್ಲಿ ಜೆಡಿಎಸ್ – ಬಿಜೆಪಿ ಮೈತ್ರಿ ಸರ್ಕಾರ ಒಡಂಬಡಿಕೆ ಮಾಡಿತ್ತು.‌ ಉಕ್ಕಿನ ಸ್ಥಾವರ ಸ್ಥಾಪಿಸಲು ಸಂಸ್ಥೆಗೆ ಬಳ್ಳಾರಿಯಲ್ಲಿ 3,666 ಎಕರೆ ಭೂಮಿ ನೀಡಲು ತೀರ್ಮಾನಿಸಲಾಗಿತ್ತು. 10 ವರ್ಷಗಳ ಬಳಿಕ ಲೀಸ್ ಮತ್ತು ಪರಾಭಾರೆ ಒಪ್ಪಂದದಡಿ ಸಂಸ್ಥೆಗೆ ಈ ಭೂಮಿಯನ್ನು ಹಂಚಿಕೆ ಮಾಡಲಾಗಿತ್ತು. ತೋರಣಗಲ್​ನಲ್ಲಿ 12 ದಶಲಕ್ಷ ಟನ್ ಸಾಮರ್ಥ್ಯದ ಸ್ಟೀಲ್ ಘಟಕ ನಿರ್ಮಾಣ ಇದಾಗಿದೆ.

2013-2018ರ ಅವಧಿಯಲ್ಲಿ ಜೆಎಸ್​​ಡಬ್ಲ್ಯೂ ಸಂಸ್ಥೆ ಒಪ್ಪಂದದಂತೆ ಭೂಮಿಯನ್ನು ಮಾರಾಟ ಮಾಡಲು ಪ್ರಸ್ತಾಪ ಸಲ್ಲಿಸಿತ್ತು. 27.05.2019ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರ್ಕಾರ ಸಂಪುಟ ಸಭೆಯಲ್ಲಿ ಭೂಮಿ ಮಾರಾಟ ಮಾಡಲು ತೀರ್ಮಾನಿಸಿತ್ತು. ಆದರೆ, ಪ್ರತಿಪಕ್ಷ ಬಿಜೆಪಿ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಸ್ವಪಕ್ಷದವರೇ ಆದ ಹೆಚ್.ಕೆ.ಪಾಟೀಲ್ ಕೂಡ ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಎಂಎಂಎಲ್ ಸಂಸ್ಥೆಗೆ ಹಣ ಪಾವತಿಸದ ಆರೋಪ: ಹೆಚ್.ಕೆ.ಪಾಟೀಲ್ ಅಂದು ಕೈಗಾರಿಕಾ ಸಚಿವರಾಗಿದ್ದ ಕೆ.ಜೆ.ಜಾರ್ಜ್​ಗೆ ಪತ್ರ ಬರೆದು, ಜೆಎಸ್​​ಡಬ್ಲ್ಯೂ ಸಂಸ್ಥೆ ಮೈಸೂರು ಮಿನರಲ್ಸ್ ಸಂಸ್ಥೆಗೆ (ಎಂಎಂಎಲ್) 1,200 ಕೋಟಿ ರೂ. ಹಣ ಬಾಕಿ ಉಳಿಸಿಕೊಂಡಿದ್ದು, ಕಡಿಮೆ ಬೆಲೆಗೆ ಸಂಸ್ಥೆಗೆ ಭೂಮಿ ನೀಡಲಾಗುತ್ತಿದೆ ಎಂದು ಆರೋಪಿಸಿದ್ದರು. ಜೆಎಸ್​​ಡಬ್ಲ್ಯೂ ಸಂಸ್ಥೆ ಎಂಎಂಎಲ್​ಗೆ ಕಡಿಮೆ‌ ಪ್ರೀಮಿಯಂಗೆ ಕಬ್ಬಿಣದ ಅದಿರು ಪೂರೈಕೆ ಮಾಡಿತ್ತು ಎಂದು ಆರೋಪಿಸಲಾಗಿತ್ತು.

2000-2010ರ ವರೆಗೆ 1,059.89 ಕೋಟಿ ರೂ. ಮೊತ್ತದ 9.25 ದಶಲಕ್ಷ ಟನ್ ಅದಿರು ಗಣಿಗಾರಿಕೆ ಮಾಡಿತ್ತು. ಇದಕ್ಕಾಗಿ ಎಂಎಂಎಲ್ ಸಂಸ್ಥೆಗೆ ಕೇವಲ 63.17 ಕೋಟಿ ರೂ. ಪ್ರೀಮಿಯಂ ಮೊತ್ತ ಲಭಿಸಿದ್ದರೆ, ಜೆಎಸ್ ಡಬ್ಲ್ಯೂ ಸಂಸ್ಥೆಗೆ 876.9 ಕೋಟಿ ರೂ. ಲಾಭವಾಗಿತ್ತು ಎಂದು 2013ರ ಸಿಎಜಿ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಹೆಚ್.ಕೆ.ಪಾಟೀಲ್ ಆಕ್ಷೇಪದ ಜೊತೆಗೆ ಆಗಿನ ವಿಪಕ್ಷ ನಾಯಕರೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ವಿರುದ್ಧ ಸದನದಲ್ಲಿ ಆಹೋರಾತ್ರಿ ಧರಣಿ ನಡೆಸಿದ್ದರು.‌ ಹೀಗಾಗಿ, ಈ ಪ್ರಸ್ತಾಪ ಹಾಗೆಯೇ ಬಾಕಿ ಉಳಿದುಕೊಂಡಿತ್ತು. ಸಂಪುಟ ತೀರ್ಮಾನ ವಿರೋಧಿಸಿ ಮೈತ್ರಿ ಸರ್ಕಾರದ ಸಚಿವರಾಗಿದ್ದ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

2020ರಲ್ಲಿ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಮತ್ತೆ ಸರ್ಕಾರದ ಮುಂದೆ ಭೂಮಿ ಮಾರಾಟದ ಪ್ರಸ್ತಾವನೆ ಬಂತು.‌ ಈ ಬಗ್ಗೆ ಪರಿಶೀಲಿಸಲು ಸಂಪುಟ ಉಪಸಮಿತಿ ರಚಿಸಲಾಯಿತು. ಸಂಪುಟ ಉಪ ಸಮಿತಿ ಕಾನೂನು ಅಭಿಪ್ರಾಯ ಪಡೆದು ಜೆಎಸ್​​ಡಬ್ಲ್ಯೂಗೆ ಭೂಮಿ ಮಾರಾಟ ಮಾಡಲು ಅನುಮತಿ ನೀಡಿತು. 2021ರಲ್ಲಿ ಬಿಜೆಪಿ ಸರ್ಕಾರ ಸಂಪುಟ ಸಭೆಯಲ್ಲಿ 3,666 ಎಕರೆ ಭೂಮಿ ನೀಡಲು ತೀರ್ಮಾನಿಸಿತು.

ಈ ಸಂಬಂಧ ಯಡಿಯೂರಪ್ಪ ಸರ್ಕಾರ ಭೂಮಿ ಮಾರಾಟಕ್ಕೆ ಆದೇಶ ಹೊರಡಿಸಿತ್ತು. ಆದರೆ ಈ ತೀರ್ಮಾನದ ಬಗ್ಗೆ ಆಗ ಪ್ರತಿಪಕ್ಷದಲ್ಲಿದ್ದ ಕಾಂಗ್ರೆಸ್‌ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಹೆಚ್.ಕೆ.ಪಾಟೀಲ್ ಜೆಎಸ್​​ಡಬ್ಲ್ಯೂ ಗೆ ಭೂಮಿ ನೀಡುವ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದರು. ಬಿಜೆಪಿಯಲ್ಲೂ ಈ ಬಗ್ಗೆ ಆಕ್ಷೇಪ ವ್ಯಕ್ತವಾಗಿತ್ತು. ಬಳಿಕ ಮತ್ತೆ ಜೆಎಸ್​ಡಬ್ಲ್ಯೂಗೆ ಭೂಮಿ ನೀಡುವ ಸಂಪುಟ ಸಭೆಯ ತೀರ್ಮಾನಕ್ಕೆ ತಡೆ ಬಿತ್ತು.

ಕೋರ್ಟ್ ಮೊರೆ ಹೋದ ಜೆಎಸ್​​ಡಬ್ಲ್ಯೂ: ಭೂಮಿ ಮಾರಾಟ ವಿಳಂಬವಾದ ಹಿನ್ನೆಲೆಯಲ್ಲಿ ಜೆಎಸ್ ಡಬ್ಲ್ಯೂ ಹೈಕೋರ್ಟ್ ಮೊರೆ ಹೋಗಿತ್ತು. ವಿಚಾರಣೆ ನಡೆಸಿದ ಹೈಕೋರ್ಟ್, ಭೂಮಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಮಾರ್ಚ್ 12, 2024ರಂದು ಹೈಕೋರ್ಟ್ ಆಜ್ಞೆ ಹೊರಡಿಸಿ 6.05.2021ರಲ್ಲಿನ ಸರ್ಕಾರದ ಆದೇಶವನ್ನು ಜಾರಿಗೊಳಿಸಿ, ಜೆಎಸ್​​ಡಬ್ಲ್ಯೂಗೆ ಭೂಮಿ ಪರಾಭಾರೆ ಮಾಡುವಂತೆ ಸೂಚಿಸಿತ್ತು.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಇದೀಗ ಕಾಂಗ್ರೆಸ್ ಸರ್ಕಾರ ಜೆಎಸ್​​ಡಬ್ಲ್ಯೂ ಸಂಸ್ಥೆಗೆ 3,666 ಕೋಟಿ ರೂ. ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಿದೆ. ಪ್ರತಿಪಕ್ಷ ಬಿಜೆಪಿಯು ಸರ್ಕಾರದ ವಿರುದ್ಧ ಕಿಕ್ ಬ್ಯಾಕ್ ಆರೋಪ ಮಾಡುತ್ತಿದೆ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಜಿಂದಾಲ್ ಕಂಪನಿಗೆ 3,666 ಎಕರೆ ಕೊಡಲು ತೀರ್ಮಾನಿಸಿ, ಅದರಂತೆ ಸರ್ಕಾರಿ ಆದೇಶವನ್ನೂ 2021ರ ಮೇ 6ಕ್ಕೆ ಹೊರಡಿಸಿತ್ತು. ಅದೇ ಆದೇಶವನ್ನು ಈಗ ಹೈಕೋರ್ಟ್ ಸೂಚನೆಯಂತೆ ಜಾರಿ ಮಾಡಲು ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದರಲ್ಲಿ ಯಾವ ಅಕ್ರಮವೂ ನಡೆದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು

Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ

Published

on

ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.

ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.

Continue Reading

ಬೆಂಗಳೂರು

ಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ

Published

on

ಬೆಂಗಳೂರು: ‘ಬೇಡ ಬ್ರೋ’… ಇದೇ ಘೋಷಣೆಯೊಂದಿಗೆ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸ್ ವತಿಯಿಂದ ಗ್ಲೋಬಲ್ ವಿಲೇಜ್‌ನಲ್ಲಿ ಡ್ರಗ್ಸ್ ವಿರೋಧಿ ಬೃಹತ್ ಜಾಗೃತಿ ಅಭಿಯಾನ ನಡೆಯಿತು. ಯುವಜನಾಂಗವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವೈದ್ಯರು, ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯೆ ಡಾ. ಮಾತಂಗಿ, ದೇಶದಲ್ಲಿ ಮಾದಕ ವ್ಯಸನ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿದ್ದು, ವಿಶೇಷವಾಗಿ 18ರಿಂದ 25 ವರ್ಷದೊಳಗಿನ ಯುವಕರು ಡ್ರಗ್ಸ್ ಜಾಲಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಗಾಂಜಾ, ಅಪೀಮು ಸೇರಿದಂತೆ ವಿವಿಧ ಮಾದಕ ವಸ್ತುಗಳು ಯುವಕರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯವನ್ನು ಹಾಳು ಮಾಡುತ್ತಿವೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳು ಉತ್ತಮ ಮೌಲ್ಯಗಳನ್ನು ಬೆಳೆಸುವ ಸಂದೇಶ ನೀಡಬೇಕು ಎಂದು ಅವರು ಕರೆ ನೀಡಿದರು.

ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಪೊಲೀಸರು ಹಾಗೂ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದರು. ಕೆಲವು ಕಾಲೇಜುಗಳಲ್ಲಿ ಡ್ರಗ್ಸ್ ಜಾಲದ ಬಗ್ಗೆ ಆತಂಕಕಾರಿ ಮಾಹಿತಿ ದೊರೆಯುತ್ತಿದ್ದು, ಯುವಕರನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಡ್ರಗ್ಸ್ ವಿರುದ್ಧದ ‘ಬೇಡ ಬ್ರೋ’ ಅಭಿಯಾನ ಸಮಾಜದಲ್ಲಿ ದೊಡ್ಡ ಜಾಗೃತಿ ಮೂಡಿಸಬೇಕು ಎಂದು ಆಶಿಸಿದರು.

ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣ ಮಾತನಾಡಿ, ಇಂದಿನ ಕಾಲದಲ್ಲಿ ಬಂದೂಕಿಗಿಂತ ಡ್ರಗ್ಸ್ ಸಮಾಜವನ್ನು ಹೆಚ್ಚು ಅಪಾಯಕ್ಕೆ ತಳ್ಳುತ್ತಿದೆ ಎಂದು ಎಚ್ಚರಿಸಿದರು. ಎಸಿಪಿ ಸತ್ಯವತಿ ಕೂಡ ಕ್ಷಣಿಕ ಸುಖಕ್ಕಾಗಿ ವ್ಯಸನದ ದಾರಿ ಹಿಡಿಯಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು “ಡ್ರಗ್ಸ್‌ಗೆ ಬೇಡ… ಬದುಕಿಗೆ ಹೌದು” ಎಂಬ ಸಂದೇಶದೊಂದಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.

Continue Reading

ರಾಜ್ಯ

Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?

Published

on

ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.

Continue Reading

Trending