Connect with us

ಚುನಾವಣೆ

ಲೋಕ ಸಮರದಲ್ಲಿ ಮಾಜಿ ಸಿಎಂಗಳು- ಹಾಲಿ ಕೇಂದ್ರ ಸಚಿವರು; ಹೆಚ್​ಡಿಕೆ – ಬೊಮ್ಮಾಯಿಗೆ ಮುನ್ನಡೆ: ಶೆಟ್ಟರ್​ಗೆ ಅಗ್ನಿ ಪರೀಕ್ಷೆ

Published

on

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆ ಹಿಂದಿನ ಎಲ್ಲಾ ಎಲೆಕ್ಷನ್​ಗಳಿಗಿಂತಲೂ ರಾಜ್ಯದಲ್ಲಿ ಹೆಚ್ಚು ಸದ್ದು ಮಾಡಿದ್ದು ಗೊತ್ತೇ ಇದೆ. ಹೆಚ್ಚು ಸ್ಥಾನ ಗೆಲ್ಲಲೇಬೇಕೆಂಬ ಪೈಪೋಟಿ ಆಡಳಿತ-ಪ್ರತಿಪಕ್ಷಗಳ ನಡುವೆ ಯಾವ ರೀತಿ ನಡೆಯಿತು ಎಂಬುದನ್ನು ರಾಜ್ಯದ ಜನರು ನೋಡಿದ್ದಾರೆ. ಈ ಚುನಾವಣೆಯಲ್ಲಿ ಮೂವರು ಮಾಜಿ ಮುಖ್ಯಮಂತ್ರಿಗಳೇ ಅಖಾಡಕ್ಕಿಳಿದಿದ್ದು ಮತ್ತೊಂದು ಜಿದ್ದಾಜಿದ್ದಿಗೆ ಕಾರಣವಾಯಿತು. ಮಂಡ್ಯದಿಂದ ಎನ್​ಡಿಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ಹಾವೇರಿ ಕ್ಷೇತ್ರದಿಂದ ಬಸವರಾಜ ಬೊಮ್ಮಾಯಿ, ಬೆಳಗಾವಿಯಿಂದ ಜಗದೀಶ್​ ಶೆಟ್ಟರ್​ ಸ್ಪರ್ಧಿಸಿದ್ದು ಈ ಸಲದ ರಾಜಕೀಯ ಲೆಕ್ಕಾಚಾರಕ್ಕೆ ಸಾಕ್ಷಿಯಾಗಿದೆ.

ಹೆಚ್​ ಡಿ ಕುಮಾರಸ್ವಾಮಿ: ಸಕ್ಕರೆ ನಾಡು ಮಂಡ್ಯದಲ್ಲಿ ಈ ಬಾರಿ ಹೆಚ್​ ಡಿ ಕುಮಾರಸ್ವಾಮಿ ಆರಂಭಿಕ ಮುನ್ನಡೆ ಸಾಧಿಸಿದ್ದಾರೆ. ಕಳೆದ ಬಾರಿ ಸುಮಲತಾ ಅಂಬರೀಶ್​ ವಿರುದ್ಧ ಕಣಕ್ಕಿಳಿದಿದ್ದ ನಿಖಿಲ್​ ಕುಮಾರಸ್ವಾಮಿ ಸೋಲುಂಡಿದ್ದರು. ಈ ಬಾರಿಯಾದರೂ ಪುತ್ರನಿಗೆ ಟಿಕೆಟ್​ ಕೊಡಿಸಿ ಗೆಲ್ಲಿಸೋಣ ಅಂದುಕೊಂಡಿದ್ದ ಹೆಚ್​ಡಿಕೆ ಪಾಲಿಗೇ ಮಂಡ್ಯ ಕ್ಷೇತ್ರದ ಟಿಕೆಟ್​ ಒಲಿಯಿತು. ಬಿಜೆಪಿ ಹೈಕಮಾಂಡ್​ ನಡೆಸಿ ಹಲವು ಕಸರತ್ತುಗಳ ಬಳಿಕ ಸುಮಲತಾ ಅಂಬರೀಶ್​ ಅವರು ಕೊನೆಗೂ ಸ್ಪರ್ಧೆಯಿಂದ ಹಿಂದೆ ಸರಿಯಲು ಒಪ್ಪಿದ್ದರು. ಇದರಿಂದ ಹೆಚ್​ಡಿಕೆ ಹಾದಿ ಸುಗಮವಾಯಿತು.

ಈ ಹೆಚ್​ಡಿಕೆಗೆ ಪ್ರತಿಸ್ಪರ್ಧಿಯಾಗಿ ಸ್ಟಾರ್ ಚಂದ್ರು ಎಂದೇ ಖ್ಯಾತರಾಗಿರುವ ವೆಂಕಟರಮಣೇಗೌಡ ​ಪೈಪೋಟಿ ನೀಡಿದ್ದು ಸೋಲು ಗೆಲುವಿನ ಲೆಕ್ಕಾಚಾರ ಇನ್ನಷ್ಟೇ ತಿಳಿಯಲಿದೆ. ಪ್ರಸ್ತುತ ಸ್ಟಾರ್​ ಚಂದ್ರು ಹಿನ್ನಡೆಯಲ್ಲಿದ್ದಾರೆ. ಈ ಹಿಂದೆಯೂ 2013 ರಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಆಯ್ಕೆ ಆಗಿ ಒಂದು ಬಾರಿ ಸಂಸತ್​ ಭವನದ ಮೆಟ್ಟಿಲೇರಿದ್ದ ಕುಮಾರಸ್ವಾಮಿ ಈಗ ಮತ್ತೆ ಮಂಡ್ಯದಿಂದ ಸ್ಪರ್ಧಿಸಿದ್ದು, ಸಕ್ಕರೆ ನಾಡಿನ ಜನರ ತೀರ್ಪು ಯಾರ ಪರ ಅನ್ನೋದು ಇನ್ನಷ್ಟೇ ಗೊತ್ತಾಗಲಿದೆ.

ಜಗದೀಶ್​ ಶೆಟ್ಟರ್​; ಆರ್​ಎಸ್​ಎಸ್ ಹಿನ್ನೆಲೆ ಹೊಂದಿರುವ ಮಾಜಿ ಮುಖ್ಯಮಂತ್ರಿ, ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್​ ಶೆಟ್ಟರ್​ ಕೆಲಕಾಲ ​ಕಾಂಗ್ರೆಸ್​ ಸೇರಿ ಮತ್ತೆ ಮಾತೃ ಪಕ್ಷಕ್ಕೆ ಮರಳಿದವರು. ಹೀಗೆ ಘರ್ ವಾಪ್ಸಿ ಆದ ಅವರಿಗೆ ಬಿಜೆಪಿ ಭದ್ರಕೋಟೆ ಬೆಳಗಾವಿ ಕ್ಷೇತ್ರದ ಟಿಕೆಟ್​ ಒಲಿದಿದ್ದು ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಬೆಂಬಲದಿಂದ. ಎಲ್ಲಕ್ಕೂ ಮಿಗಿಲಾಗಿ ಸಂಬಂಧಿಯಾಗಿರುವ ಸಂಸದೆ ಮಂಗಳಾ ಅಂಗಡಿ ಅವರು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದು ಶೆಟ್ಟರ್​ಗೆ ಪ್ಲಸ್​ ಪಾಯಿಂಟ್​.

ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ಶೆಟ್ಟರ್​ ಅವರು ಸಚಿವರಾಗಿ, ಸ್ಪೀಕರ್​ ಮತ್ತು ಮುಖ್ಯಮಂತ್ರಿಯೂ ಆಗಿದ್ದರು. ಕಳೆದ ವರ್ಷದ ವಿಧಾನಸಭೆ ಚುನಾವಣೆಯಲ್ಲಿ ಟಿಕೆಟ್​ ಸಿಗದ ಕಾರಣ ಮುನಿಸಿಕೊಂಡಿದ್ದ ಅವರು ಬಿಜೆಪಿಯಿಂದ ದೂರ ಸರಿದು ಕಾಂಗ್ರೆಸ್​ ಸೇರಿದ್ದರು. ಆದ್ರೆ ಒಂದೇ ವರ್ಷದಲ್ಲಿ ಬದಲಾದ ರಾಜಕೀಯ ಸನ್ನಿವೇಶದಿಂದ ಬಿಜೆಪಿಗೆ ವಾಪಸ್​ ಆದರು. ​ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ಪುತ್ರ ಮೃಣಾಲ್​ ಹೆಬ್ಬಾಳ್ಕರ್​ ವಿರುದ್ಧ ಸ್ಪರ್ಧಿಸಿದ ಅವರ ಪರ ಪ್ರಧಾನಿ ಮೋದಿ ಭರ್ಜರಿ ಪ್ರಚಾರ ನಡೆಸಿದ್ದರು.

ಹಾವೇರಿ -ಗದಗ ಕ್ಷೇತ್ರದಲ್ಲಿ ಬೊಮ್ಮಾಯಿ- ಗಡ್ಡದೇವರಮಠ ಪೈಪೋಟಿ;

ಮಾಜಿ ಮುಖ್ಯಮಂತ್ರಿ, ಶಿಗ್ಗಾವಿ-ಸವಣೂರು ಕ್ಷೇತ್ರದ ಹಾಲಿ ಶಾಸಕರೂ ಆಗಿರುವ ಬಸವರಾಜ ಬೊಮ್ಮಾಯಿ ಅವರಿಗೆ ಆರಂಭಿಕ ಮುನ್ನಡೆ ಸಿಕ್ಕಿದೆ. ಬಿಜೆಪಿ ಲೋಕಸಭಾ ಚುನಾವಣೆಗೆ ಗೆಲುವಿನ ಲೆಕ್ಕಾಚಾರವನ್ನು ಇಟ್ಟುಕೊಂಡು ಟಿಕೆಟ್​ ಕೊಟ್ಟಿತು. ಶಿವಕುಮಾರ್ ಉದಾಸಿ ಅವರು ಈ ಬಾರಿ ಸ್ಪರ್ಧೆಗೆ ಮುಂದಾಗದ ಹಿನ್ನೆಲೆ ಬೊಮ್ಮಾಯಿ ಅವರಿಗೆ ಪಕ್ಷ ಮಣೆ ಹಾಕಿತು. ಮಾಜಿ ಸಚಿವ ಕೆ ಎಸ್​ ಈಶ್ವರಪ್ಪ ಅವರು ತಮ್ಮ ಪುತ್ರನಿಗೆ ಹಾವೇರಿ ಕ್ಷೇತ್ರದ ಟಿಕೆಟ್​ ಸಿಕ್ಕೇ ಸಿಗುತ್ತೆ ಎಂಬ ನಿರೀಕ್ಷೆಯಲ್ಲಿದ್ದರು. ಆದ್ರೆ ಪಕ್ಷದ ರಾಜಕೀಯ ಲೆಕ್ಕಾಚಾರವೇ ಬೇರೆಯಾಗಿತ್ತು. ಬಿಜೆಪಿ ಭದ್ರಕೋಟೆ ಆಗಿರುವ ಈ ಕ್ಷೇತ್ರದಲ್ಲಿ ಬೊಮ್ಮಾಯಿ ಅವರಿಗೆ ಕಾಂಗ್ರೆಸ್​ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಪ್ರತಿಸ್ಪರ್ಧಿಯಾಗಿದ್ದಾರೆ.

ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಮಧ್ಯೆ ಬೊಮ್ಮಾಯಿ ಯಾವ ರೀತಿ ಮ್ಯಾಜಿಕ್​ ಮಾಡಿದ್ದಾರೆ ಎಂಬುದು ಕೆಲವೇ ಕ್ಷಣಗಳಲ್ಲಿ ತಿಳಿಯಲಿದೆ.
ಧಾರವಾಡದಲ್ಲಿ ಜೋಶಿಗೆ ಅಸೂಟಿ – ಪೈಪೋಟಿ: ಇನ್ನು ಕೇಂದ್ರ ಸಚಿವರಾದ ಪ್ರಹ್ಲಾದ್​ ಜೋಶಿ, ಕಾಂಗ್ರೆಸ್​​ನ ವಿನೋದ್​ ಅಸೂಟಿ ವಿರುದ್ಧ ಸೆಣಸುತ್ತಿದ್ದಾರೆ. ಈ ಬಾರಿ ಅಸೂಟಿ ತೀವ್ರ ಪೈಪೋಟಿ ಒಡ್ಡಿದ್ದಾರೆ.

ಬೆಂಗಳೂರು ಉತ್ತರದಲ್ಲಿ ರಾಜೀವ್​ ಗೌಡ Vs ಶೋಭಾ ಕರಂದ್ಲಾಜೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಚಿಕ್ಕಮಗಳೂರು ಉಡುಪಿ ಕ್ಷೇತ್ರದಿಂದ ಬೆಂಗಳೂರು ಉತ್ತರ ಕ್ಷೇತ್ರಕ್ಕೆ ಬಂದಿದ್ದಾರೆ. ಇಲ್ಲಿ ಅವರು ಕಾಂಗ್ರೆಸ್​ನ ರಾಜೀವ್​ಗೌಡ ಅವರನ್ನು ಎದುರಿಸುತ್ತಿದ್ದಾರೆ.

ಬೀದರನಲ್ಲಿ ಖೂಬಾಗೆ ಸಾಗರ್​ ಖಂಡ್ರೆ ಸವಾಲು: ಇನ್ನು ಭಗವಂತ್​ ಖೂಬಾ ಅವರು ಕಾಂಗ್ರೆಸ್​ನ ಪ್ರಭಾವಿ ನಾಯಕ ಹಾಗೂ ಸಚಿವ ಈಶ್ವರ್​ ಖಂಡ್ರೆ ಪುತ್ರ ಸಾಗರ್​ ಖಂಡ್ರೆ ವಿರುದ್ಧ ಕೇಂದ್ರ ರಾಜ್ಯಖಾತೆ ಸಚಿವ ಭಗವಂತ ಖೂಬಾ ಅಖಾಡದಲ್ಲಿದ್ದಾರೆ. ಬಿಜೆಪಿಯ ಭದ್ರಕೋಟೆಯಲ್ಲಿ ಸಾಗರ್ ಈ ಬಾರಿ ಕಮಾಲ್​ ಮಾಡ್ತಾರಾ? ಅಥವಾ ಬಿಜೆಪಿ ತನ್ನ ಪ್ರಾಬಲ್ಯ ಮುಂದುವರಿಸುತ್ತಾ ಕಾದು ನೋಡಬೇಕಿದೆ.

ದೇಶ

ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ

Published

on

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಈ ಘೋಷಣೆ ಪಂಜಾಬ್‌ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.

ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್‌ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.

ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ

ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ಬೆಂಗಳೂರು

SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ

Published

on

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಧಿಕಾರಿಗೆ ಗಾಯ

ಹಲ್ಲೆಯಲ್ಲಿ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ದಾಖಲು, ಇಬ್ಬರ ಬಂಧನ

ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Published

on

ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್‌ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

Continue Reading

Trending