Connect with us

ರಾಜಕೀಯ

ವೀರಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ: ವಿಶೇಷ ಸರಸ್ ಮೇಳ, ಖಾದಿ ಉತ್ಸವಕ್ಕೆ ಚಾಲನೆ – GANDHIJI STATUE AT VEERA SOUDHA

Published

on

ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ‌ ಅನಾವರಣಗೊಳಿಸಿದರು. ಜೊತೆಗೆ, ನಗರದ ಸರ್ದಾರ್ ಹೈಸ್ಕೂಲ್ ಮೈದಾನದಲ್ಲಿ ವಿಶೇಷ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತುಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದರು.

ತದನಂತರ ವೀರಸೌಧದ ಆವರಣದಲ್ಲಿನ ಗಾಂಧೀಜಿ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು. ವೀರಸೌಧದಲ್ಲಿ ಹಬ್ಬದ ವಾತಾವರಣ‌ ನಿರ್ಮಾಣವಾಗಿದೆ. ಇದೇ ವೇಳೆ ವೀರಸೌಧ (ಕಾಂಗ್ರೆಸ್ ಬಾವಿ) ಆವರಣದಲ್ಲಿ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಇದೇ ವೇಳೆ ಮುಖ್ಯಮಂತ್ರಿ ಚಾಲನೆ ನೀಡಿದರು.

ವಿಶೇಷ ಸರಸ್ ಮೇಳ, ಖಾದಿ ಉತ್ಸವ: ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು. ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ‘ಅಸ್ಮಿತೆ’ ವ್ಯಾಪಾರ ಮೇಳ-2024ವನ್ನು ಉದ್ಘಾಟಿಸಿದರು.

ಜನವರಿ 4ರವರೆಗೆ ಸರಸ್ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಈ ಸರಸ್ ಮೇಳ ಮತ್ತು ಖಾದಿ ಉತ್ಸವವು ಆರಂಭವಾಗಿದ್ದು, ಡಿ.26ರಿಂದ ಜನವರಿ 4ರವರೆಗೆ ನಡೆಯಲಿದೆ.

ಸ್ವ-ಸಹಾಯ ಗುಂಪಿನ ಮಹಿಳೆಯರು ಭಾಗಿ: ಈ ಕಾರ್ಯಕ್ರಮದಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಿಂದ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ತಮ್ಮ ಜಿಲ್ಲೆಯ ಪ್ರಮುಖ ಉತ್ಪನ್ನಗಳೊಂದಿಗೆ ಭಾಗವಹಿಸಿದ್ದು, ಒಟ್ಟು 150 ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಅದರಲ್ಲಿ 10 ಆಹಾರ ಮೇಳದ ಮಳಿಗೆಗಳು ಮತ್ತು 50 ಖಾದಿ ಉತ್ಪನ್ನಗಳ ಮೇಳಗಳು ಒಳಗೊಂಡಿದೆ. ಈ ಮೇಳಕ್ಕೆ ಸಾರ್ವಜನಿಕರಿಗೆ ಉಚಿತ ಪ್ರವೇಶವಿದ್ದು, ಡಿ.26ರಿಂದ ಜ.04ರವರೆಗೆ ಪ್ರತಿ ದಿನ ಬೆಳಿಗ್ಗೆ 10.30 ಯಿಂದ ರಾತ್ರಿ 9.30 ರವರೆಗೆ ಪ್ರದರ್ಶನ ಸಾರ್ವಜನಿಕರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

ಪ್ರತಿ ದಿನ ಸಾಂಸ್ಕೃತಿಕ ಕಾರ್ಯಕ್ರಮ: ಪ್ರತಿ ದಿನ ಸಂಜೆ 6.30 ರಿಂದ 9.00 ಗಂಟೆಯವರೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಬೆಳಗಾವಿಯಲ್ಲಿ ಆಯೋಜಿಸಲಾಗುತ್ತಿರುವ ಸತತ 4ನೇ ವರ್ಷದ ಈ ಮೇಳದಲ್ಲಿ ಪ್ರಮುಖವಾಗಿ ನಗರ ಹಾಗೂ ಗ್ರಾಮೀಣ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳು ಮಾರಾಟ ಮಾಡುವುದು ವಿಶೇಷತೆಯಾಗಿದೆ.

ಆಕರ್ಷಣೀಯ ಅಕ್ಕ ಕೆಫೆ: ಸರ್ಕಾರವು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ರಾಜ್ಯದಲ್ಲಿ 50 ‘ಅಕ್ಕ ಕೆಫೆ’ಗಳನ್ನು ಒಂದೇ ಮಾದರಿ ವಿನ್ಯಾಸದಡಿ ಅನುಷ್ಠಾನಗೊಳಿಸಲಾಗುತ್ತಿದೆ. ಈ ಕಾರ್ಯಕ್ರಮದಡಿ ಅಂದಾಜು 1200 ಸ್ವ-ಸಹಾಯ ಗುಂಪಿನ ಮಹಿಳೆಯರಿಗೆ ಜೀವನೋಪಾಯಕ್ಕೆ ಅನುಕೂಲ ಕಲ್ಪಿಸಲಾಗುತ್ತಿದೆ. ಮುಂದುವರೆದು, ‘ಅಕ್ಕ-ಕಫೆ’ ಕಾರ್ಯಕ್ರಮದ ಭಾಗವಾಗಿ ಈ ಮೇಳದ ಮೈದಾನದಲ್ಲಿನ ಆಹಾರ ಕೋರ್ಟ್‌ನ್ನು “ಅಕ್ಕ-ಕೆಫೆ” ಶೀರ್ಷಿಕೆಯಡಿ ಆಕರ್ಷಣೀಯವಾಗಿ ಸಿದ್ದಪಡಿಸಲಾಗಿದೆ.

ಸ್ಥಳದಲ್ಲೇ ಆಹಾರ ತಯಾರಿಕೆ: ಈ ಆಹಾರ ಮಳಿಗೆಗಳಲ್ಲಿ ಉತ್ತರ ಕರ್ನಾಟಕದಲ್ಲಿ ಹೆಸರುವಾಸಿಯಾದ ಗಿರಮಿಟ್/ಚುರುಮರಿ ಮಂಡಕ್ಕಿ, ಜೋಳದ ಖಡಕ್ ರೊಟ್ಟಿ ಸೇರಿದಂತೆ ಹೋಳಿಗೆ, ಮಂಗಳೂರು ನೀರ್‌ದೋಸೆ ಮತ್ತು ಮಾಂಸಹಾರಿ ಆಹಾರಗಳಾದ ಬ್ಯಾಂಬು ಬಿರಿಯಾನಿ ಮುಂತಾದವುಗಳನ್ನು ಸ್ಥಳದಲ್ಲೇ ತಯಾರಿಸಿ ಕೊಡಲಾಗುತ್ತಿದೆ.

ವಿಶೇಷ ಅಭಿಯಾನ: ರಾಜ್ಯದಲ್ಲಿ ಅಭಿಯಾನದಡಿ 2.79 ಲಕ್ಷ ಸ್ವ-ಸಹಾಯ ಗುಂಪುಗಳಡಿ 29.66 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಹಾಗೂ 45 ಸಾವಿರ ಸ್ವ-ಸಹಾಯ ಗುಂಪುಗಳಡಿ 4.50 ಲಕ್ಷ ಕುಟುಂಬಗಳನ್ನು ಗ್ರಾಮೀಣ ಹಾಗೂ ನಗರ ಜೀವನೋಪಾಯ ಅಭಿಯಾನದಡಿ ಸಂಘಟಿಸಲಾಗಿದ್ದು, ಪ್ರತಿಯೊಬ್ಬ ಮಹಿಳೆಯು ಸ್ಮಾವಲಂಬನೆಯ ಬದುಕಿನೊಂದಿಗೆ ತನ್ನ ಕುಟುಂಬದ ಅಭಿವೃದ್ಧಿಗೆ ಪೂರಕ ಸೇವೆಗಳನ್ನು ಪಡೆಯುವಲ್ಲಿ ಪೂರಕ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.

ಉತ್ಪನ್ನಗಳಿಗೆ ಮಾರುಕಟ್ಟೆ: ರಾಜ್ಯದಲ್ಲಿ ಈ ಮಹಿಳೆಯರು ಉತ್ಪನ್ನಗಳ ಮಾರಾಟಕ್ಕೆ ಪ್ರತಿಯೊಂದು ಹಳ್ಳಿ, ಸಂತೆ, ತಾಲೂಕು ಮಟ್ಟದಲ್ಲಿ ಮಾಸಿಕ ಸಂತೆ, ಜಿಲ್ಲಾ ವಸ್ತು ಪ್ರದರ್ಶನ ಮಾರಾಟ ಮೇಳ ಏರ್ಪಡಿಸುವುದಷ್ಟೆ ಅಲ್ಲದೆ ಇತರೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ನಡೆಯುವ ಮೇಳಗಳಿಗೆ ರಾಜ್ಯದ ಮಹಿಳೆಯರನ್ನು ನಿಯೋಜನೆ ಮಾಡುವ ಮೂಲಕ ಅವರ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ಬೆಳಗಾವಿಯಲ್ಲಿ ಕಳೆದ 3 ವರ್ಷದಿಂದ ಬೃಹತ್ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದಂತೆ ಈ ವರ್ಷವು ಸಹ ಮೇಳ ಆಯೋಜಿಸಲಾಗಿದೆ ಎಂದು ರಾಷ್ಟ್ರೀಯ ಜೀವನೋಪಾಯ ಅಭಿಯಾನದ ‌ನಿರ್ದೇಶಕಿ ಪಿ.ಐ.ವಿದ್ಯಾ ಅವರು ತಿಳಿಸಿದರು.

ನವ ನವೀನ ಉತ್ಪನ್ನಗಳು: ಬೆಳಗಾವಿಯ ಈ ಮೇಳದ ಮಳಿಗೆಗಳಲ್ಲಿ ಗ್ರಾಮೀಣ ಮತ್ತು ನಗರ ಪ್ರದೇಶದ ಸ್ವ-ಸಹಾಯ ಗುಂಪಿನ ಮಹಿಳೆಯರು ಉತ್ಪಾದಿಸಿರುವ ಉತ್ಪನ್ನಗಳಾದ ಚನ್ನಪಟ್ಟಣದ ಮರದ ಗೊಂಬೆಗಳು, ಕೊಪ್ಪಳದ ಕಿನ್ನಾಳ ಆಟದ ಸಾಮಾನುಗಳು, ಮೊಳಕಾಲ್ಮೂರು ಸೀರೆಗಳು, ಇಳಕಲ್ ಸೀರೆಗಳು, ರೇಷ್ಮೆ ಸೀರೆಗಳು, ವಿವಿಧ ನವಾಕರ್ಷಣೆಯ ಬಟ್ಟೆಗಳು, ನಾರಿನ ಉತ್ಪನ್ನದ ಬ್ಯಾಗ್ ಗಳು, ಮಸಾಲಾ ಉತ್ಪನ್ನಗಳು, ಸಿರಿ ಧಾನ್ಯ ಉತ್ಪನ್ನಗಳು, ಮೌಲ್ಯವರ್ಧಿತ ಕರಾವಳಿ ಉತ್ಪನ್ನಗಳು, ವಿವಿಧ ಬಗೆಯ ಖಾದಿ ಉತ್ಪನ್ನಗಳು, ಬಾಳೆ ನಾರಿನಿಂದ ಉತ್ಪಾದಿಸಿದ ಉತ್ಪನ್ನಗಳು, ಗೃಹಾಲಂಕಾರಿಕ ವಸ್ತುಗಳು, ಆಯುರ್ವೇದ ಔಷಧಿಯುತ ಉತ್ಪನ್ನಗಳು, ಪಾರಂಪರಿಕ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ನವೀನ ವಿನ್ಯಾಸದ ಆಭರಣಗಳು, ಆಹಾರ ಉತ್ಪನ್ನಗಳು ಸೇರಿದಂತೆ ಅನೇಕ ಉತ್ಪನ್ನಗಳು ಸಾರ್ವಜನಿಕರಿಗೆ ಕೈಗೆಟುಕುವ ಬೆಲೆಯಲ್ಲಿ ಲಭ್ಯವಿವೆ.

ಬೆಳಗಾವಿಗೆ ಆಗಮಿಸಿದ ಕಾಂಗ್ರೆಸ್ ನಾಯಕರು: ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವಕ್ಕೆ ಹಿನ್ನೆಲೆಯಲ್ಲಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ದೇಶದ ವಿವಿಧ ಭಾಗಗಳಿಂದ ಬರುತ್ತಿರುವ ಗಣ್ಯರಿಗೆ ಸ್ಥಳಿಯ ಕಾಂಗ್ರೆಸ್ ಮಹಿಳಾಮಣಿಗಳು ಆರತಿ ಬೆಳಗಿ ಹಣೆಗೆ ಕುಂಕುಮ ಇಟ್ಟು ಸ್ವಾಗತಿಸಿದರು. ಕನ್ಹಯ್ಯ ಕುಮಾರ್ ಸೇರಿದಂತೆ ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ 120ಕ್ಕೂ ಅಧಿಕ ಗಣ್ಯರಿಗೆ ಸ್ವಾಗತಿಸಲಾಯಿತು. ದಾವಣಗೆರೆಯ ತಂಡದಿಂದ ಬಂಜಾರಾ ನೃತ್ಯದ ಮೂಲಕ ಸ್ವಾಗತ ಕೋರಲಾಯಿತು.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ರಾಜ್ಯ

ST Leaders ನ್ನೇ ಗುರಿಯಾಗಿಸಲಾಗುತ್ತಿದೆ: B Nagendra ರಾಜೀನಾಮೆ ಕುರಿತು K N Rajanna ಸ್ಫೋಟಕ ಹೇಳಿಕೆ

Published

on

ಬೆಂಗಳೂರು: ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದ ಹಿನ್ನೆಲೆಯಲ್ಲಿ B Nagendra ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ರಾಜ್ಯ ರಾಜಕಾರಣದಲ್ಲಿ ಚರ್ಚೆ ತೀವ್ರಗೊಂಡಿದೆ. ಈ ಬೆಳವಣಿಗೆಯ ಕುರಿತು ಮಾಜಿ ಸಚಿವ K N Rajanna ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ಪ್ರಮುಖ ನಾಯಕರನ್ನೇ ಸಾಲು ಸಾಲಾಗಿ ಗುರಿಯಾಗಿಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಾಗೇಂದ್ರ ಅವರ ರಾಜೀನಾಮೆ ರಾಜಕೀಯ ವಲಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿರುವ ಸಂದರ್ಭದಲ್ಲೇ ರಾಜಣ್ಣ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ. ತಪ್ಪು ಯಾರೇ ಮಾಡಿದ್ದರೂ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು ಎಂಬ ನಿಲುವನ್ನು ಅವರು ವ್ಯಕ್ತಪಡಿಸಿದ್ದಾರೆ. ಆದರೆ, ಪ್ರಕರಣವನ್ನು ಮುಂದಿಟ್ಟುಕೊಂಡು ಎಸ್‌ಟಿ ಸಮುದಾಯದ ನಾಯಕರನ್ನೇ ಉದ್ದೇಶಪೂರ್ವಕವಾಗಿ ಗುರಿಯಾಗಿಸಲಾಗುತ್ತಿದೆ ಎಂಬ ಭಾವನೆ ಸಾರ್ವಜನಿಕರಲ್ಲಿ ಮೂಡಿದೆ ಎಂದು ಅವರು ಹೇಳಿದ್ದಾರೆ.

ಎಸ್‌ಟಿ ನಾಯಕರ ಟಾರ್ಗೆಟ್ ಆರೋಪ

ರಾಜ್ಯದಲ್ಲಿ ಪರಿಶಿಷ್ಟ ಪಂಗಡ ಸಮುದಾಯದ ನಾಯಕರು ರಾಜಕೀಯವಾಗಿ ಎದುರಿಸುತ್ತಿರುವ ಬೆಳವಣಿಗೆಗಳ ಬಗ್ಗೆ ಮಾತನಾಡಿದ ರಾಜಣ್ಣ, ಪ್ರಕರಣದಲ್ಲಿ ತಪ್ಪು ಕಂಡುಬಂದರೆ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸುವುದಕ್ಕೆ ತಮ್ಮ ವಿರೋಧವಿಲ್ಲ ಎಂದು ತಿಳಿಸಿದ್ದಾರೆ.

ಆದರೆ, ಒಂದು ಪ್ರಕರಣದ ಹಿನ್ನೆಲೆಯಲ್ಲಿ ಇಡೀ ಸಮುದಾಯದ ಪ್ರಮುಖ ನಾಯಕರನ್ನು ರಾಜಕೀಯವಾಗಿ ಗುರಿಯಾಗಿಸುವ ಪ್ರಯತ್ನ ನಡೆಯಬಾರದು ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ನಾಗೇಂದ್ರ ಅವರ ರಾಜೀನಾಮೆಯ ನಂತರ ಈ ವಿಚಾರ ಮತ್ತಷ್ಟು ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಬಿಜೆಪಿ ಪಾದಯಾತ್ರೆ ವಿರುದ್ಧ ರಾಜಣ್ಣ ವಾಗ್ದಾಳಿ

ಇದೇ ವೇಳೆ ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು ಕೂಡ ಕೆ.ಎನ್. ರಾಜಣ್ಣ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಬೆಂಬಲಿಸಿರುವ ಎಸ್‌ಟಿ ಪ್ರಾಬಲ್ಯದ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಬಿಜೆಪಿ ರಾಜಕೀಯ ಲಾಭ ಪಡೆಯುವ ಉದ್ದೇಶದಿಂದ ಪಾದಯಾತ್ರೆ ನಡೆಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ವಾಲ್ಮೀಕಿ ನಿಗಮದ ಪ್ರಕರಣವನ್ನು ರಾಜಕೀಯವಾಗಿ ಬಳಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂಬ ರೀತಿಯಲ್ಲಿ ರಾಜಣ್ಣ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಪ್ರಕರಣದ ತನಿಖೆ ತನ್ನದೇ ಆದ ರೀತಿಯಲ್ಲಿ ನಡೆಯಬೇಕು ಮತ್ತು ಅದನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳಬಾರದು ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ನಾಗೇಂದ್ರ ಸ್ಥಾನಕ್ಕೆ ಎಸ್‌ಟಿ ನಾಯಕನಿಗೆ ಅವಕಾಶ

ಬಿ. ನಾಗೇಂದ್ರ ಅವರ ರಾಜೀನಾಮೆಯಿಂದ ತೆರವಾಗಿರುವ ಸಚಿವ ಸ್ಥಾನಕ್ಕೆ ಸಂಬಂಧಿಸಿದಂತೆ ಕೆ.ಎನ್. ರಾಜಣ್ಣ ಸರ್ಕಾರದ ಮುಂದೆ ಮಹತ್ವದ ಬೇಡಿಕೆಯನ್ನೂ ಇಟ್ಟಿದ್ದಾರೆ.

ತೆರವಾಗಿರುವ ಸಚಿವ ಸ್ಥಾನವನ್ನು ಮತ್ತೊಬ್ಬ ಪರಿಶಿಷ್ಟ ಪಂಗಡ ಸಮುದಾಯದ ನಾಯಕನಿಗೆ ನೀಡಬೇಕು ಎಂದು ಅವರು ಸರ್ಕಾರವನ್ನು ಬಲವಾಗಿ ಆಗ್ರಹಿಸಿದ್ದಾರೆ. ಈ ಮೂಲಕ ಎಸ್‌ಟಿ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಮುಂದುವರಿಯಬೇಕು ಎಂಬ ಅಭಿಪ್ರಾಯವನ್ನು ರಾಜಣ್ಣ ವ್ಯಕ್ತಪಡಿಸಿದ್ದಾರೆ.

ರಾಜಕೀಯ ವಲಯದಲ್ಲಿ ಕುತೂಹಲ

ಬಿ. ನಾಗೇಂದ್ರ ಅವರ ರಾಜೀನಾಮೆ ಹಾಗೂ ವಾಲ್ಮೀಕಿ ನಿಗಮದ ಪ್ರಕರಣ ಈಗಾಗಲೇ ರಾಜ್ಯ ರಾಜಕೀಯದಲ್ಲಿ ಪ್ರಮುಖ ಚರ್ಚೆಯ ವಿಷಯವಾಗಿದೆ. ಇದರ ಬೆನ್ನಲ್ಲೇ ಕೆ.ಎನ್. ರಾಜಣ್ಣ ಅವರ ಹೇಳಿಕೆ ಕಾಂಗ್ರೆಸ್‌ನೊಳಗಿನ ಮತ್ತು ರಾಜ್ಯ ರಾಜಕೀಯದಲ್ಲಿನ ಮುಂದಿನ ಬೆಳವಣಿಗೆಗಳ ಬಗ್ಗೆ ಕುತೂಹಲ ಮೂಡಿಸಿದೆ.

ನಾಗೇಂದ್ರ ಅವರ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಲಾಗುತ್ತದೆ ಎಂಬುದು ಇದೀಗ ಪ್ರಮುಖ ಪ್ರಶ್ನೆಯಾಗಿದೆ. ರಾಜಣ್ಣ ಅವರು ಎಸ್‌ಟಿ ಸಮುದಾಯದ ನಾಯಕರನ್ನೇ ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಒತ್ತಾಯಿಸಿರುವುದರಿಂದ ಮುಂದಿನ ಸಚಿವ ಸಂಪುಟದ ನಿರ್ಧಾರ ಕುತೂಹಲಕ್ಕೆ ಕಾರಣವಾಗಿದೆ.

Continue Reading

ಬೆಂಗಳೂರು

Ravichandran ರಾಜಕೀಯಕ್ಕೆ ಬರ್ತಾರಾ? ವಿಧಾನ ಪರಿಷತ್ ಸ್ಥಾನಕ್ಕೆ ಹೆಸರು ಮುನ್ನೆಲೆಗೆ

Published

on

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕ Ravichandran ಅವರು ಸಿನಿಮಾ ಕ್ಷೇತ್ರದ ಬಳಿಕ ರಾಜಕೀಯ ಅಂಗಳಕ್ಕೆ ಪ್ರವೇಶಿಸಲಿದ್ದಾರೆಯೇ ಎಂಬ ಚರ್ಚೆ ಇದೀಗ ತೀವ್ರಗೊಂಡಿದೆ. ತಮ್ಮ ಅದ್ಧೂರಿ ಸಿನಿಮಾಗಳ ಮೂಲಕ ಕನ್ನಡಿಗರ ಮನಗೆದ್ದಿರುವ ‘ಕನಸುಗಾರ’ ರವಿಚಂದ್ರನ್ ಅವರನ್ನು ಕರ್ನಾಟಕ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಕಲೆ, ಸಾಹಿತ್ಯ, ವಿಜ್ಞಾನ, ಸಮಾಜಸೇವೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿರುವ ವ್ಯಕ್ತಿಗಳನ್ನು ವಿಧಾನ ಪರಿಷತ್‌ಗೆ ನಾಮನಿರ್ದೇಶನ ಮಾಡುವ ಅವಕಾಶವಿದೆ. ಇದೇ ಕೋಟಾದಡಿ ಕಲಾ ಕ್ಷೇತ್ರದಿಂದ ರವಿಚಂದ್ರನ್ ಅವರ ಹೆಸರನ್ನು ಪರಿಗಣಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಡಿಕೆ ಶಿವಕುಮಾರ್ ಶಿಫಾರಸು ಎನ್ನುವ ಚರ್ಚೆ

ರವಿಚಂದ್ರನ್ ಅವರನ್ನು ವಿಧಾನ ಪರಿಷತ್‌ಗೆ ಕಳುಹಿಸುವ ವಿಚಾರದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರ ಹೆಸರು ಕೂಡ ಮುನ್ನೆಲೆಗೆ ಬಂದಿದೆ. ಡಿಕೆ ಶಿವಕುಮಾರ್ ಅವರೇ ರವಿಚಂದ್ರನ್ ಅವರ ಹೆಸರನ್ನು ಶಿಫಾರಸು ಮಾಡಿದ್ದಾರೆ ಎನ್ನಲಾಗುತ್ತಿದೆ.

ಆದರೆ ಈ ಕುರಿತು ಕಾಂಗ್ರೆಸ್ ಪಕ್ಷವಾಗಲಿ ಅಥವಾ ಮುಖ್ಯಮಂತ್ರಿ ಕಚೇರಿಯಾಗಲಿ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ಹೀಗಾಗಿ ಸದ್ಯಕ್ಕೆ ಇದು ರಾಜಕೀಯ ವಲಯದಲ್ಲಿ ಹರಿದಾಡುತ್ತಿರುವ ಸುದ್ದಿಯಾಗಿದ್ದು, ಅಧಿಕೃತ ದೃಢೀಕರಣಕ್ಕಾಗಿ ಕಾಯಬೇಕಾಗಿದೆ.

ರವಿಚಂದ್ರನ್ ಮತ್ತು ಡಿಕೆ ಶಿವಕುಮಾರ್ ನಡುವೆ ಹಲವು ವರ್ಷಗಳ ಆತ್ಮೀಯ ಸ್ನೇಹವಿದೆ ಎನ್ನಲಾಗುತ್ತದೆ. ಇಬ್ಬರೂ ಬಾಲ್ಯದ ಗೆಳೆಯರು ಹಾಗೂ ಶಾಲಾ ಸಹಪಾಠಿಗಳು ಎಂಬುದನ್ನು ಡಿಕೆ ಶಿವಕುಮಾರ್ ಈ ಹಿಂದೆ ಹಲವು ಸಂದರ್ಭಗಳಲ್ಲಿ ಹೇಳಿಕೊಂಡಿದ್ದಾರೆ.

ಪದೇಪದೇ ನಡೆಯುತ್ತಿರುವ ಭೇಟಿಗಳು ಕುತೂಹಲಕ್ಕೆ ಕಾರಣ

ಇತ್ತೀಚಿನ ದಿನಗಳಲ್ಲಿ ರವಿಚಂದ್ರನ್ ಅವರು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಕೂಡ ಈ ಚರ್ಚೆಗೆ ಮತ್ತಷ್ಟು ಬಲ ನೀಡಿದೆ. ಕೆಲ ತಿಂಗಳ ಹಿಂದೆ ನಡೆದಿದ್ದ ಮದ್ದೂರಮ್ಮ ಉತ್ಸವದಲ್ಲೂ ರವಿಚಂದ್ರನ್ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಅವರು ಡಿಕೆ ಶಿವಕುಮಾರ್ ಅವರ ಬಗ್ಗೆ ಭಾವುಕವಾಗಿ ಮಾತನಾಡಿದ್ದರು.

ತಮ್ಮ ಕಷ್ಟದ ಸಮಯದಲ್ಲಿ ಡಿಕೆ ಶಿವಕುಮಾರ್ ಅವರು ನೆರವಾಗಿದ್ದಾರೆ ಎಂದು ಹೇಳಿದ್ದ ರವಿಚಂದ್ರನ್, ಅವರ ಸಹಾಯವನ್ನು ಜೀವನಪರ್ಯಂತ ಮರೆಯುವುದಿಲ್ಲ ಎಂಬ ರೀತಿಯಲ್ಲಿ ಮಾತನಾಡಿದ್ದರು. ಅಲ್ಲದೆ, ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಪ್ರಶಂಸಿಸಿ ಹಲವು ಮಾತುಗಳನ್ನು ಆಡಿದ್ದರು.

ಇದೀಗ ರವಿಚಂದ್ರನ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿರುವ ಹಿನ್ನೆಲೆಯಲ್ಲಿ, ಈ ಹಿಂದಿನ ಹೇಳಿಕೆಗಳು ಮತ್ತು ಇಬ್ಬರ ನಡುವಿನ ಆತ್ಮೀಯ ಸಂಬಂಧವನ್ನು ಅಭಿಮಾನಿಗಳು ಹಾಗೂ ರಾಜಕೀಯ ವಿಶ್ಲೇಷಕರು ಗಮನಿಸುತ್ತಿದ್ದಾರೆ.

ಕಲಾ ಕ್ಷೇತ್ರದಿಂದ ಪರಿಷತ್‌ಗೆ ಅವಕಾಶ?

ವಿಧಾನ ಪರಿಷತ್‌ಗೆ ನಾಮನಿರ್ದೇಶನಗೊಳ್ಳುವ ಸದಸ್ಯರ ಪೈಕಿ ಕಲಾ ಕ್ಷೇತ್ರದ ಸಾಧಕರಿಗೂ ಅವಕಾಶ ಕಲ್ಪಿಸಲಾಗುತ್ತದೆ. ರವಿಚಂದ್ರನ್ ಅವರು ಹಲವು ದಶಕಗಳಿಂದ ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ, ನಿರ್ಮಾಪಕ ಹಾಗೂ ಸಂಗೀತ ಕ್ಷೇತ್ರದಲ್ಲೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.

ಅವರ ಸಿನಿಮಾ ಪಯಣ ಕನ್ನಡ ಚಿತ್ರರಂಗದ ಪ್ರಮುಖ ಅಧ್ಯಾಯಗಳಲ್ಲಿ ಒಂದಾಗಿದೆ. ಹೀಗಾಗಿ ಕಲಾ ಕ್ಷೇತ್ರದ ಕೋಟಾದಡಿ ಅವರ ಹೆಸರನ್ನು ಪರಿಗಣಿಸಿದರೆ ಅಚ್ಚರಿಯಿಲ್ಲ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇದೇ ವೇಳೆ ರವಿಚಂದ್ರನ್ ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಈ ಸುದ್ದಿಯನ್ನು ಸಂಭ್ರಮದಿಂದ ಹಂಚಿಕೊಳ್ಳುತ್ತಿದ್ದಾರೆ. ತಮ್ಮ ನೆಚ್ಚಿನ ನಟ ರಾಜಕೀಯ ಪ್ರವೇಶಿಸಿ ವಿಧಾನ ಪರಿಷತ್ ಸದಸ್ಯರಾಗಲಿದ್ದಾರೆ ಎಂಬ ನಿರೀಕ್ಷೆಯನ್ನು ಹಲವರು ವ್ಯಕ್ತಪಡಿಸುತ್ತಿದ್ದಾರೆ.

ಅಧಿಕೃತ ಘೋಷಣೆ ಇನ್ನಷ್ಟೇ

ರವಿಚಂದ್ರನ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವ ಕುರಿತು ಸದ್ಯ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ. ಕಾಂಗ್ರೆಸ್ ನಾಯಕತ್ವ ಅಥವಾ ಸರ್ಕಾರ ಈ ಬಗ್ಗೆ ಸ್ಪಷ್ಟನೆ ನೀಡಿದ ಬಳಿಕವಷ್ಟೇ ಈ ಬೆಳವಣಿಗೆಗೆ ಖಚಿತತೆ ಸಿಗಲಿದೆ.

ರವಿಚಂದ್ರನ್ ಅವರು ಈ ಹಿಂದೆ ಯಾವುದೇ ರಾಜಕೀಯ ಪಕ್ಷದಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿಲ್ಲ. ಆದರೆ ಡಿಕೆ ಶಿವಕುಮಾರ್ ಅವರೊಂದಿಗೆ ಇರುವ ವೈಯಕ್ತಿಕ ಸ್ನೇಹ ಮತ್ತು ಇತ್ತೀಚಿನ ಭೇಟಿಗಳು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿವೆ.

ಒಟ್ಟಿನಲ್ಲಿ, ರವಿಚಂದ್ರನ್ ಎಂಎಲ್‌ಸಿ ಆಗಲಿದ್ದಾರೆಯೇ ಎಂಬ ಚರ್ಚೆ ಸದ್ಯ ಸಾಮಾಜಿಕ ಜಾಲತಾಣ ಹಾಗೂ ರಾಜಕೀಯ ವಲಯದಲ್ಲಿ ಜೋರಾಗಿದೆ. ಅಧಿಕೃತವಾಗಿ ಹೆಸರು ಘೋಷಣೆಯಾಗುವವರೆಗೆ ಇದನ್ನು ವರದಿಯಾಗಿರುವ ಸಾಧ್ಯತೆ ಎಂದೇ ಪರಿಗಣಿಸಬೇಕಾಗಿದೆ.

Continue Reading

ರಾಜಕೀಯ

B Nagendra ಗೆ Janardhana Reddy ಸವಾಲ್; 10 ಶಾಸಕರಿಗೆ ರಾಜೀನಾಮೆ ಕೊಡಿಸಿ ಚುನಾವಣೆ ಎದುರಿಸಿ ಎಂದ ಬಿಜೆಪಿ ಶಾಸಕ

Published

on

ಬಳ್ಳಾರಿ: ಸಚಿವ ಸ್ಥಾನಕ್ಕೆ B Nagendra ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ತೀವ್ರಗೊಂಡಿವೆ. ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ Janardhana Reddy, ನಾಗೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ವಾಲ್ಮೀಕಿ ನಿಗಮದ ಹಣದ ಅವ್ಯವಹಾರ ಪ್ರಕರಣ, ಅವರ ರಾಜಕೀಯ ಹಿನ್ನೆಲೆ ಹಾಗೂ ಇತ್ತೀಚಿನ ಹೇಳಿಕೆಗಳನ್ನು ಪ್ರಸ್ತಾಪಿಸಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜನಾರ್ದನ ರೆಡ್ಡಿ, ನಾಗೇಂದ್ರ ಅವರು ಕಣ್ಣೀರು ಹಾಕುತ್ತಿರುವುದು ನಾಟಕ ಎಂದು ಟೀಕಿಸಿದರು. ಅಲ್ಲದೆ, ರಾಮಾಯಣದ ಶಂಭುಕನ ಕಥೆಯನ್ನು ರಾಜಕೀಯವಾಗಿ ಬಳಸಿಕೊಂಡು ಜನರನ್ನು ದಾರಿ ತಪ್ಪಿಸಬಾರದು ಎಂದು ಕಿಡಿಕಾರಿದರು.

‘ರಾಮಾಯಣದ ಕಥೆ ಹೇಳಿ ಜನರನ್ನು ದಾರಿ ತಪ್ಪಿಸಬೇಡ’

ನಾಗೇಂದ್ರ ಅವರು ತಮ್ಮ ರಾಜಕೀಯ ಹಿನ್ನೆಲೆ ಹಾಗೂ ಬಿಜೆಪಿ ಜೊತೆಗಿನ ಹಿಂದಿನ ಸಂಬಂಧವನ್ನು ಉಲ್ಲೇಖಿಸಿದ ಜನಾರ್ದನ ರೆಡ್ಡಿ, ರಾಜಕೀಯಕ್ಕೆ ರಾಮಾಯಣದ ವಿಚಾರವನ್ನು ತರುವ ಮೊದಲು ಅದರ ಬಗ್ಗೆ ಸಂಪೂರ್ಣ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಶಂಭುಕನ ವಿಚಾರವಾಗಿ ಮಾತನಾಡುವ ನೈತಿಕತೆ ನಾಗೇಂದ್ರ ಅವರಿಗೆ ಇಲ್ಲ ಎಂದು ಟೀಕಿಸಿದ ಅವರು, ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಪ್ರಸ್ತಾಪಿಸಿ ಹಲವು ಗಂಭೀರ ಆರೋಪಗಳನ್ನು ಮಾಡಿದರು. ನಾಗೇಂದ್ರ ಅವರು ಹಿಂದೆ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದರು ಎಂಬುದನ್ನೂ ಜನಾರ್ದನ ರೆಡ್ಡಿ ನೆನಪಿಸಿದರು.

ವಾಲ್ಮೀಕಿ ನಿಗಮದ ಪ್ರಕರಣ ಪ್ರಸ್ತಾಪಿಸಿ ವಾಗ್ದಾಳಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅವ್ಯವಹಾರ ಪ್ರಕರಣವನ್ನು ಪ್ರಸ್ತಾಪಿಸಿದ ಜನಾರ್ದನ ರೆಡ್ಡಿ, ಪ್ರಕರಣದಲ್ಲಿ ನಾಗೇಂದ್ರ ಅವರ ಪಾತ್ರದ ಕುರಿತು ಪ್ರಶ್ನೆಗಳನ್ನು ಎತ್ತಿದರು.

ನಿಗಮದ ಹಣವನ್ನು ಚುನಾವಣಾ ಚಟುವಟಿಕೆಗಳಿಗೆ ಬಳಸಲಾಗಿದೆ ಎಂಬ ಆರೋಪಗಳನ್ನು ಪುನರುಚ್ಚರಿಸಿದ ಅವರು, ತೆಲಂಗಾಣ, ಗೋವಾ ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆಗೆ ಹಣ ಬಳಕೆಯಾಗಿದೆ ಎಂದು ಆರೋಪಿಸಿದರು. ಅಲ್ಲದೆ, ಕೆಲ ವ್ಯಕ್ತಿಗಳಿಗೆ ಕೋಟ್ಯಂತರ ರೂಪಾಯಿ ವರ್ಗಾವಣೆಯಾಗಿರುವ ಬಗ್ಗೆ ನಾಗೇಂದ್ರ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸಿಬಿಐ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಹೇಳಿದ ಜನಾರ್ದನ ರೆಡ್ಡಿ, ಪ್ರಕರಣದಲ್ಲಿ ತನಿಖೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

‘10 ಶಾಸಕರಿಗೆ ರಾಜೀನಾಮೆ ಕೊಡಿಸಿ ಚುನಾವಣೆ ಎದುರಿಸಿ’

ರಾಜಕೀಯ ಸೋಲು-ಗೆಲುವಿನ ಕುರಿತು ನಾಗೇಂದ್ರ ನೀಡಿರುವ ಹೇಳಿಕೆಗಳಿಗೂ ಜನಾರ್ದನ ರೆಡ್ಡಿ ತಿರುಗೇಟು ನೀಡಿದರು. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿ ಎಂದು ಹೇಳಿದ ಅವರು, ತಮ್ಮನ್ನು ಅಥವಾ ಇತರರನ್ನು ‘ರಿಜೆಕ್ಟೆಡ್ ಪೀಸ್’ ಎಂದು ಕರೆಯುವ ಮೊದಲು ರಾಜಕೀಯ ವಾಸ್ತವಾಂಶ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ನಾಗೇಂದ್ರ ಅವರಿಗೆ ನೇರ ಸವಾಲು ಹಾಕಿದ ಜನಾರ್ದನ ರೆಡ್ಡಿ, ಧೈರ್ಯವಿದ್ದರೆ ತುಕಾರಾಂ ಸೇರಿದಂತೆ ಹತ್ತು ಶಾಸಕರಿಗೆ ರಾಜೀನಾಮೆ ಕೊಡಿಸಿ ಮತ್ತೆ ಚುನಾವಣೆಗೆ ಬನ್ನಿ ಎಂದು ಹೇಳಿದರು.

ಹತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಗೆಲ್ಲದಿದ್ದರೆ ತಾನು ಜನಾರ್ದನ ರೆಡ್ಡಿಯೇ ಅಲ್ಲ ಎಂದು ಸವಾಲು ಹಾಕಿದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹಣ ವರ್ಗಾವಣೆ ಕುರಿತು ಸ್ಪಷ್ಟನೆಗೆ ಆಗ್ರಹ

ವಾಲ್ಮೀಕಿ ನಿಗಮದ ಖಾತೆಯಿಂದ ಕೆಲವು ವ್ಯಕ್ತಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿದ ಜನಾರ್ದನ ರೆಡ್ಡಿ, ಈ ಹಣ ವರ್ಗಾವಣೆಯ ಉದ್ದೇಶವೇನು ಹಾಗೂ ಸಂಬಂಧಪಟ್ಟ ವ್ಯಕ್ತಿಗಳಿಗೂ ನಾಗೇಂದ್ರ ಅವರಿಗೂ ಇರುವ ಸಂಪರ್ಕವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದಲ್ಲಿ ನಾಗೇಂದ್ರ ಸೇರಿದಂತೆ ಹಲವು ಮಂದಿ ಆರೋಪಿಗಳಾಗಿದ್ದಾರೆ ಎಂದು ಹೇಳಿದ ಅವರು, ನಿಗಮದ ಹಣದ ದುರ್ಬಳಕೆಯ ಕುರಿತು ಸಂಪೂರ್ಣ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ರಾಜೀನಾಮೆ ರಾಜಕೀಯಕ್ಕೆ ಹೊಸ ತಿರುವು

ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರ ಈ ವಾಗ್ದಾಳಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.

ನಾಗೇಂದ್ರ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸುತ್ತಿದ್ದು, ಪ್ರಕರಣದ ತನಿಖೆಯ ನಂತರ ಸತ್ಯ ಹೊರಬರಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ಬಿಜೆಪಿ ನಾಯಕರು ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ರಾಜಕೀಯ ಒತ್ತಡವನ್ನು ಮುಂದುವರಿಸಿದ್ದಾರೆ.

ಹೀಗಾಗಿ ನಾಗೇಂದ್ರ ರಾಜೀನಾಮೆ ಬೆಳವಣಿಗೆಯ ನಡುವೆಯೇ ಜನಾರ್ದನ ರೆಡ್ಡಿ ಮಾಡಿರುವ ಆರೋಪಗಳು ಹಾಗೂ ಹಾಕಿರುವ ಚುನಾವಣಾ ಸವಾಲು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

Continue Reading

Trending