ರಾಜಕೀಯ
ಹೋಮದ ಪೂರ್ಣಾಹುತಿ ಬಳಿಕ ಪ್ರಸಾದ ಕೊಡುವ ಪದ್ಧತಿ, ಪ್ರಸಾದ ಕೊಡುವ ಸಮಯ ಬಂದಿದೆ”: ಡಿ.ವಿ. ಸದಾನಂದ ಗೌಡ
ಬೆಂಗಳೂರು: “ದೊಡ್ಡ ದೊಡ್ಡ ಹೋಮ ಮಾಡಿ ಪೂರ್ಣಾಹುತಿ ಮಾಡಿದ ನಂತರ ಪ್ರಸಾದ ಕೊಡುತ್ತಾರೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ” ಎಂದು ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ ತಿಳಿಸಿದರು.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಒಂದು ಕಾಲ ಕೂಡಿ ಬಂದಿದೆ. ಆ ಪ್ರಸಾದ ಕೊಡುವ ಸಮಯಕ್ಕೆ ಬಂದಿದ್ದೇವೆ. ಎಲ್ಲಾ ಸಂಸದರು, ಯತ್ನಾಳ್ ಟೀಮ್ ದೆಹಲಿಯಲ್ಲಿ ಇದ್ದಾರೆ. ದೆಹಲಿಯಲ್ಲಿ ಜೋಶಿ ನೇತೃತ್ವದಲ್ಲಿ ಸಂಸದರ ಸಭೆ ಮಾಡಿದ್ದಾರೆ. ಯತ್ನಾಳ್ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ್ದಾರೆ. ಇಂದು ಶಿಸ್ತು ಸಮಿತಿ ಅಧ್ಯಕ್ಷರ ಮುಂದೆ ಯತ್ನಾಳ್ ಉತ್ತರ ಕೊಡುತ್ತಾರೆ. ನಮ್ಮಲ್ಲಿನ ಜಗಳ ವಿರೋಧಿಗಳಿಗೆ ಅಸ್ತ್ರ ಆಗುತ್ತಿದೆ” ಎಂದರು.
“ತರುಣ್ ಚುಗ್ ನಿನ್ನೆ ಚರ್ಚೆ ಮಾಡಲು ಅವಕಾಶ ಕೊಡಲಿಲ್ಲ. ನನಗೆ ಯಾವುದೇ ಸಂಬಂಧ ಇಲ್ಲ, ನಾನು ಅದಕ್ಕಾಗಿ ಬಂದಿಲ್ಲ ಅಂದರು. ದೆಹಲಿಗೆ ಈಗಾಗಲೇ ಅಧ್ಯಕ್ಷರು ಹೋಗಿ ಬಂದಿದ್ದಾರೆ. ಆರ್. ಅಶೋಕ್ ಕೂಡಾ ದೆಹಲಿಗೆ ಹೋಗಿದ್ದಾರೆ. ಯತ್ನಾಳ್ ಟೀಮ್ ಕೂಡಾ ದೆಹಲಿಯಲ್ಲೇ ಇದೆ. ಇದಕ್ಕಿಂತ ಇನ್ನು ಏನು ರಿಪೋರ್ಟ್ ಬೇಕು? ಎಲ್ಲರ ಕಡೆಯಿಂದಲೂ ವರದಿಯನ್ನು ಹೈಕಮಾಂಡ್ ಸ್ವೀಕರಿಸಿದೆ. ಇನ್ನು ಎರಡು ಮೂರು ದಿನಗಳಲ್ಲಿ ಒಂದು ನಿರ್ಧಾರಕ್ಕೆ ಬನ್ನಿ. ಯಾರೇ ತಪ್ಪು ಮಾಡಿದರೂ ಕ್ರಮ ಆಗಲಿ. ಇಲ್ಲಿ ಪಕ್ಷಕ್ಕಿಂತ ದೊಡ್ಡವರು ಯಾರೂ ಇಲ್ಲ” ಎಂದು ಕಿಡಿಕಾರಿದರು.
“ಚಮಚಾಗಿರಿ ಮಾಡುವುದರಿಂದ ಪಕ್ಷ ಸಂಘಟನೆ ಆಗಲ್ಲ. ದುಡ್ಡಿನ ಮೂಟೆ ಇಟ್ಟುಕೊಂಡು ಬಂದವರಿಂದ ಪಕ್ಷ ಸಂಘಟನೆ ಆಗಲ್ಲ. ಅತ್ಯಂತ ದೊಡ್ಡ ಶಿಸ್ತು ಉಲ್ಲಂಘನೆ ಸೋಮಶೇಖರ್ ಮತ್ತು ಹೆಬ್ಬಾರ್ ಅವರಿಂದ ಆಗಿದೆ. ತೇಪೆ ಹಾಕುವ ಕೆಲಸ ಈ ಬಾರಿ ಆಗಬಾರದು ಅಂತ ಹೈಕಮಾಂಡ್ ನಾಯಕರಿಗೆ ಹೇಳುತ್ತೇನೆ. ಅದು ಯಾರೇ ಆದರೂ ಕ್ರಮ ಆಗಬೇಕು. ಸ್ಥಳೀಯ ಚುನಾವಣೆ ಮೇಲೂ ಇದು ಪರಿಣಾಮ ಬೀರುತ್ತದೆ. ಯತ್ನಾಳ್ ಮಾಡಿರುವುದು ಇಡೀ ಲೋಕಕ್ಕೆ ಗೊತ್ತಿದೆ. ಫೈಟ್ ಮಾಡಲು ಒಂದು ತಂಡ ರಚನೆ ಆಗುವುದು ಸರಿಯಲ್ಲ. ಅವರೆಲ್ಲಾ ದೆಹಲಿಗೆ ಹೋಗಿದ್ದರೆ ಮತ್ತಷ್ಟು ಗೌರವ ಬರುತ್ತಿತ್ತು. ತೊಡೆ ತಟ್ಟಿ ಯತ್ನಾಳ್ ಟೀಮ್ ಹೋಗುವುದು ಸರಿಯಲ್ಲ. ಬಲ ಪ್ರದರ್ಶನ ಮಾಡುವುದಾದರೆ ಹೈಕಮಾಂಡ್ ಬೇಕಾಗಿಲ್ಲ ಅಲ್ವಾ?” ಎಂದು ಪ್ರಶ್ನಿಸಿದರು.
“ನಾವು ಹೈಕಮಾಂಡ್ಗೆ ಹೋಗಿ ವರದಿ ಕೊಡುವ ಮೂಲಕ ನಮ್ಮ ಗೌರವ ಹೆಚ್ಚಿಸಿಕೊಳ್ಳಬೇಕು. ಇದು ಬಯಲಾಟ ಇದ್ದಂತೆ. ಇವತ್ತು ಒಂದು ತಂಡದ ಆಟ, ನಾಳೆ ಮತ್ತೊಂದು ತಂಡದ ಆಟ. ರಾಷ್ಟ್ರೀಯ ಪ್ರಮುಖರು ತೀರ್ಮಾನ ಮಾಡಬೇಕು. ತಪ್ಪು ಇದ್ದವರನ್ನು ಹೊರ ಹಾಕಬೇಕು, ಅಶಿಸ್ತನ್ನು ಸರಿ ಮಾಡಬೇಕು. ಪ್ರತ್ಯೇಕ ಹೋರಾಟ ಮಾಡುವುದನ್ನು ನಿಲ್ಲಿಸಬೇಕು. ಬದಲಾವಣೆಯಿಂದ ಎಲ್ಲಾ ಸರಿ ಮಾಡಬಹುದು ಎಂದು ಅನ್ನಿಸಿದರೆ, ಅದಾದರೂ ಮಾಡಿ. ಸದಸ್ಯತ್ವದಲ್ಲಿ ನಾವು ಎಷ್ಟರಮಟ್ಟಿಗೆ ಸ್ಥಾನದಲ್ಲಿ ಇದ್ದರೆ ಏನು? ಪಕ್ಷದ ಜಗಳ ಬೀದಿಗೆ ಬಂದಿದೆ. ಒಂದು ಟೀಮ್ ವಕ್ಫ್ ವಿರುದ್ಧ ಹೋರಾಟ ಮಾಡಿ ಜನರ ಬಳಿ ಹೋದ ಮೇಲೆ ಮತ್ತೊಂದು ತಂಡ ಹೋದರೆ ಪ್ರಯೋಜನ ಆಗುವುದಿಲ್ಲ” ಎಂದು ತಿಳಿಸಿದರು.
“ಡಿಸೆಂಬರ್ 7 ರಂದು ತೀರ್ಮಾನ ಆಗಲು ಉಸ್ತುವಾರಿಗಳ ಕೈಯಲ್ಲಿ ಏನೂ ಇಲ್ಲ. ಏನೇ ಆದರೂ ಜೆ.ಪಿ. ನಡ್ಡಾ ತೀರ್ಮಾನ ಮಾಡಬೇಕು. ಉಸ್ತುವಾರಿಗಳು ವರದಿ ಪಡೆದು ಹೈಕಮಾಂಡ್ಗೆ ಕೊಡಬೇಕು ಅಷ್ಟೇ. ಆರ್. ಅಶೋಕ್ ಅವರ ಜೊತೆ ಮಾತನಾಡಿದ್ದೆ. ದೆಹಲಿಗೆ ಹೋಗುತ್ತಾರೆ ಅಂತ ನನಗೆ ಗೊತ್ತಿರಲಿಲ್ಲ. ನಾವೆಲ್ಲರೂ ಮಾತನಾಡುವುದು ಸರಿ ಇದೆ ಅಂತ ಅಶೋಕ್ ಹೇಳಿದ್ದಾರೆ. ಪರಿಹಾರ ಇದ್ದೇ ಇದೆ, ಎಲ್ಲರೂ ತಾಳ್ಮೆಯಿಂದ ಇರಬೇಕು” ಎಂದರು.
ದೇಶ
638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ
ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.
ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.
ದೇಶ
ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.
ಹೈಕಮಾಂಡ್ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.
ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.
ರಾಜ್ಯ ಕಾಂಗ್ರೆಸ್ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಚುನಾವಣೆ
BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.
ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್ಗೆ ಮನವಿ ಮಾಡಲಾಗಿದೆ.
ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.
-
ದೇಶ10 hours agoರಾಷ್ಟ್ರಗೀತೆಗೆ ಮುನ್ನ ವಂದೇ ಮಾತರಂ ಹಾಡುವುದು ಕಡ್ಡಾಯ
-
ದೇಶ16 hours agoಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ
-
ಚುನಾವಣೆ16 hours agoBENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ
-
ದೇಶ16 hours agoಚರ್ಚೆ ಮುಗಿಯುವವರೆಗೆ ಸದನಕ್ಕೆ ಹಾಜರಾಗಲ್ಲ ಎಂದ ಲೋಕಸಭಾ ಸ್ಪೀಕರ್
-
ದೇಶ8 hours agoBIG NEWS : ಫೆ.12 ರಾಷ್ಟ್ರವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರು ಬೀದಿಗೆ? ಬ್ಯಾಂಕ್, ಸಾರಿಗೆ ಸೇವೆಗೆ ಹೊಡೆತ ಸಾಧ್ಯತೆ
-
ದೇಶ17 hours agoDigital Services Tax: ಡಿಜಿಟಲ್ ತೆರಿಗೆಗೆ ಅಮೆರಿಕದ ವಿರೋಧ ಏಕೆ?
-
ಕ್ರೀಡೆ9 hours agoT20 WORLD CUP : ಡಬಲ್ ಸೂಪರ್ ಓವರ್ನಲ್ಲಿ ದಕ್ಷಿಣ ಆಫ್ರಿಕಾದ ರೋಚಕ ಗೆಲುವು
-
ಅಪರಾಧ9 hours agoBENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ
