ಬೆಂಗಳೂರು
ಕೊರೆಯುವ ಚಳಿಯಲ್ಲಿ ಆಶಾ ಕಾರ್ಯಕರ್ತೆಯರ ಹೋರಾಟ- ಬಿಜೆಪಿ ಕಿಡಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಷ್ಕರ ಆರಂಭಿಸಿರುವ ಆಶಾ ಕಾರ್ಯಕರ್ತೆಯರು ಕೊರೆಯುವ ಚಳಿಯನ್ನು ಲೆಕ್ಕಿಸಿದೆ ಫ್ರೀಡಂ ಪಾರ್ಕ್ ನಲ್ಲಿ ಮಲಗಿದ್ದು, ಇದೀಗ ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದ್ದು, ಶ್ರಮಿಕ ವರ್ಗಗಳ ಮೇಲೆ ಸರ್ಕಾರ ಅಸಡ್ಡೆ ತೋರುತ್ತಿದೆ ಎಂದು ಆಕ್ರೋಶ ಹೊರಹಾಕಿದೆ,
ಮಾಸಿಕ 15 ಸಾವಿರ ರೂ ನಿಶ್ಚಿತ ಗೌರವಧನ ನೀಡಬೇಕೆಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರು ನಗರದಲ್ಲಿ ಅನಿರ್ದಿಧಿಷ್ಟಾವಾಧಿ ಮುಷ್ಕರ ಮಂಗಳವಾರ ಆರಂಭಿಸಿದ್ದು, ಇಂದಿಗೆ ಮೂರನೇ ದಿನಕ್ಕೆ ಕಾಲಿಟ್ಟಿದೆ,
ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಮಂಗಳವಾರ ಫ್ರೀಡಂಪಾರ್ಕ್ನಲ್ಲಿ ಜಮಾಯಿಸಿದ ಸುಮಾರು 20 ಸಾವಿರಕ್ಕೂ ಹೆಚ್ಚು ಆಶಾ ಕಾರ್ಯಕರ್ತೆಯರು ವಿವಿಧ ಬೇಡಿಕೆಗಳ ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿದ್ದು, ರಾತ್ರಿ ಎಲ್ಲ ಅಲ್ಲೇ ಕಳೆಯುತ್ತಿದ್ದಾರೆ,
ಈ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಗುಡುಗಿದ್ದು 25 ಸಾವಿರಕ್ಕೂ ಅಧಿಕ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಎರಡನೇ ದಿನವೂ ಕೊರೆಯುವ ಚಳಿಯಲ್ಲಿಯೇ ರಾತ್ರಿ ಕಳೆದು ಮುಷ್ಕರ ನಡೆಸುತ್ತಿದ್ದರೂ ದಪ್ಪ ಚರ್ಮದ ಕಾಂಗ್ರೆಸ್ ಸರ್ಕಾರ ಕಿವಿ ಕೊಡದಿರುವುದು ಶ್ರಮಿಕ ವರ್ಗಗಳ ಮೇಲೆ ಈ ಸರ್ಕಾರಕ್ಕಿರುವ ಅಸಡ್ಡೆ ತನವನ್ನು ಸಾಕ್ಷೀಕರಿಸುತ್ತಿದೆ ಎಂದು ಕಿಡಿಕಾರಿದ್ದಾರೆ,
ಕಾಂಗ್ರೆಸ್ ಅಧಿಕಾರಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತೆಯರ ಮತ ಪಡೆಯಲಿ ಬೆಟ್ಟದಷ್ಟು ಪೊಳ್ಳು ಆಶ್ವಾಸನೆಗಳನ್ನು ನೀಡಿ ಅಧಿಕಾರಕ್ಕೆ ಬಂದು ವರ್ಷ ಕಳೆದರೂ ಬೇಡಿಕೆ ಈಡೇರಿಸದೇ ಆಶಾ ಕಾರ್ಯಕರ್ತೆಯರು ಹೋರಾಟಕ್ಕೆ ಬೆಲೆ ಕೊಡದ ಈ ಸರ್ಕಾರಕ್ಕೆ ನಾಡಿನ ಜನ ಹಿಡಿಶಾಪ ಹಾಕುತ್ತಿದ್ದಾರೆ, ಈ ಕೂಡಲೇ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ,