Connect with us

ಬೆಂಗಳೂರು

6-6-6 ವಾಕಿಂಗ್​ ರೂಲ್ಸ್​ ಬಗ್ಗೆ ಗೊತ್ತೇ? ಈ ನಿಯಮ ಪಾಲಿಸಿದರೆ ಹಲವು ಆರೋಗ್ಯ ಸಮಸ್ಯೆಗಳು ಮಾಯ: ಅಧ್ಯಯನ – WALKING BENEFITS

Walking Rule: ಇತ್ತೀಚಿನ ದಿನಗಳಲ್ಲಿ ಬಹುತೇಕರು ತಮ್ಮ ಆಹಾರ ಪದ್ಧತಿಯ ಬಗ್ಗೆ ಹೆಚ್ಚು ಕಾಳಜಿ ವಹಿಸಿ ಫಿಟ್ ಆಗಿರಲು ಸಾಕಷ್ಟು ವ್ಯಾಯಾಮ ಮಾಡುತ್ತಿದ್ದಾರೆ. ಈ ರೀತಿ ಫಿಟ್ ಆಗಿರುವುದರಿಂದ ಆರೋಗ್ಯ, ಆತ್ಮವಿಶ್ವಾಸ ಹಾಗೂ ಸೌಂದರ್ಯವೂ ವರ್ಧಿಸುತ್ತದೆ ಎಂದು ಆರೋಗ್ಯ ತಜ್ಞರು ತಿಳಿಸುತ್ತಾರೆ. ಈ ನಿಟ್ಟಿನಲ್ಲಿ ‘6-6-6’ ನಿಯಮ ತುಂಬಾ ಸಹಾಯಕ.

‘6-6-6’ ನಿಯಮವೇನು?: ನೀವು ಬೆಳಿಗ್ಗೆ 6 ಗಂಟೆಗೆ ಹಾಗೂ ಸಂಜೆ 6 ಗಂಟೆಗೆ ವಾಕಿಂಗ್​ ಮಾಡಬೇಕು. ಅದಕ್ಕೂ ಮೊದಲು ಆರು ನಿಮಿಷಗಳ ಕಾಲ ವಾರ್ಮಪ್ ಮಾಡಿ ಬೆಚ್ಚಗಾಗಬೇಕು. ಒಟ್ಟು 60 ನಿಮಿಷಗಳ ವಾಕಿಂಗ್​ ಅನ್ನು ನೀವು ನಿಯಮಿತವಾಗಿ ಮಾಡಲು ಸಾಧ್ಯವಾದರೆ, ಅದ್ಭುತ ಫಲಿತಾಂಶಗಳು ಸಿಗುತ್ತವೆ. ಪರಿಣಾಮವಾಗಿ, ನೀವು ಬಯಸಿದ ಫಿಟ್ನೆಸ್ ಸಾಧಿಸುವುದಲ್ಲದೇ, ನಿಮ್ಮ ತ್ವಚೆಯ ಸೌಂದರ್ಯವನ್ನೂ ಹೆಚ್ಚಿಸಲು ಸಾಧ್ಯವಾಗುತ್ತದೆ. ಪ್ರತಿನಿತ್ಯ ಹೀಗೆ ಮಾಡುವುದರಿಂದ ವೈದ್ಯರನ್ನು ಆಗಾಗ ಭೇಟಿಯಾಗುವ ಅಗತ್ಯವೂ ಇರಲ್ಲ. ಬೆಳಗಿನ ನಡಿಗೆ ಚಯಾಪಚಯ ಕ್ರಿಯೆಯನ್ನು ಸಮತೋಲನಗೊಳಿಸಲು ಹಾಗೂ ಹೆಚ್ಚುವರಿ ಕ್ಯಾಲೊರಿಗಳನ್ನು ಬರ್ನ್ ಮಾಡಲೂ ಕೂಡ ಸಹಕಾರಿ ಎಂದು ತಜ್ಞರು ಹೇಳುತ್ತಾರೆ.

ಸಂಶೋಧನೆ ಹೇಳುವುದೇನು?: ನಿಯಮಿತವಾಗಿ ವಾಕಿಂಗ್​ ಮಾಡುವುದರಿಂದ ಒತ್ತಡ, ಆತಂಕ ಕಡಿಮೆಯಾಗುತ್ತದೆ. ಮಾನಸಿಕ ಆರೋಗ್ಯ ಸದೃಢವಾಗುತ್ತದೆ. ಸಂಜೆಯ ನಡಿಗೆಯಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸುಧಾರಿಸುತ್ತದೆ. ಸಂಜೆಯ ನಡಿಗೆಯು ಜೀರ್ಣಕ್ರಿಯೆಯನ್ನು ಸುಧಾರಿಸುವುದಲ್ಲದೆ, ನಿದ್ರಾಹೀನತೆ ನಿವಾರಿಸುತ್ತದೆ ಎಂದು ತಜ್ಞರು ತಿಳಿಸುತ್ತಾರೆ.

ಅಧಿಕ ರಕ್ತದೊತ್ತಡ ಮತ್ತು ಮಧುಮೇಹದಂತಹ ದೀರ್ಘಕಾಲದ ಸಮಸ್ಯೆಗಳು ನಿಯಂತ್ರಣದಲ್ಲಿರುತ್ತವೆ. ಇದರ ಪರಿಣಾಮವಾಗಿ ಹೃದಯ ಸಮಸ್ಯೆಗಳ ಅಪಾಯ ತುಂಬಾ ಕಡಿಮೆಯಾಗುತ್ತದೆ. 2017ರಲ್ಲಿ ಜರ್ನಲ್ ಆಫ್ ಸ್ಪೋರ್ಟ್ಸ್ ಸೈನ್ಸ್ ಆ್ಯಂಡ್ ಮೆಡಿಸಿನ್‌ನಲ್ಲಿ ಪ್ರಕಟವಾದ ‘ವಾಕಿಂಗ್ ಮತ್ತು ಹೃದಯರಕ್ತನಾಳದ ಆರೋಗ್ಯ: ಒಂದು ವ್ಯವಸ್ಥಿತ ವಿಮರ್ಶೆ’ ಎಂಬ ಅಧ್ಯಯನದಲ್ಲಿ ಈ ವಿಷಯವು ತಿಳಿದುಬಂದಿದೆ.

60 ನಿಮಿಷಗಳ ವಾಕಿಂಗ್: ಪ್ರತಿದಿನ 60 ನಿಮಿಷಗಳ ಕಾಲ ವಾಕಿಂಗ್​ ಮಾಡುವುದರಿಂದ ಅಧಿಕ ತೂಕದಿಂದ ದೂರವಿರಲು ಸಹಾಯವಾಗುತ್ತದೆ. ನಡೆಯುವ ಮೊದಲು ಆರು ನಿಮಿಷಗಳ ವಾರ್ಮ್​ಅಪ್​ ಮಾಡುವ ಅಭ್ಯಾಸವು ಹೃದಯ ಬಡಿತ ಹಾಗೂ ದೇಹದ ಉಷ್ಣತೆಯನ್ನು ಹೆಚ್ಚಿಸುತ್ತದೆ. ಸ್ನಾಯುಗಳಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಇವೆಲ್ಲವೂ ದೇಹವನ್ನು ನಡೆಯಲು ಸಿದ್ಧಪಡಿಸುತ್ತದೆ. ಇದರಿಂದ ವೇಗವಾಗಿ ವಾಕಿಂಗ್​ ಮಾಡಲು ಪ್ರೋತ್ಸಾಹ ಲಭಿಸುತ್ತದೆ. ವಾಕಿಂಗ್​ ಮಾಡಿದ ನಂತರ ವಿಶ್ರಾಂತಿ ಪಡೆಯುವುದರಿಂದ ದೇಹದ ಉಷ್ಣತೆ ನಿಯಂತ್ರಿಸಲು ಸಹಾಯವಾಗುತ್ತದೆ. ಇದು ಸ್ನಾಯುಗಳಿಂದ ಕಲ್ಮಶಗಳನ್ನು ಹೊರಹಾಕಲು ಸಹಾಯವಾಗುತ್ತದೆ. ಇದು ಸ್ನಾಯುಗಳ ಆಯಾಸ ಕಡಿಮೆ ಮಾಡುತ್ತದೆ. ಜೊತೆಗೆ ಸ್ನಾಯುಗಳನ್ನು ಬಲಪಡಿಸುತ್ತದೆ ಎಂದು ತಜ್ಞರು ಹೇಳುತ್ತಾರೆ. ಮತ್ತೇಕೆ ತಡ? ಇಂದಿನಿಂದ ವಾಕಿಂಗ್​ನ ಹೊಸ ನಿಯಮ ಟ್ರೈ ಮಾಡಿ ನೋಡಿ.

ಓದುಗರಿಗೆ ಸೂಚನೆ : ಇಲ್ಲಿ ನಿಮಗೆ ನೀಡಿರುವ ಎಲ್ಲ ಆರೋಗ್ಯ ಮಾಹಿತಿ ಮತ್ತು ಸಲಹೆಗಳು ನಿಮ್ಮ ತಿಳಿವಳಿಕೆಗಾಗಿ ಮಾತ್ರ. ವೈಜ್ಞಾನಿಕ ಸಂಶೋಧನೆ, ಅಧ್ಯಯನಗಳು, ವೈದ್ಯಕೀಯ ಮತ್ತು ಆರೋಗ್ಯ ವೃತ್ತಿಪರ ಸಲಹೆ ಆಧರಿಸಿ ನಾವು ಈ ಮಾಹಿತಿ ನಿಮಗೆ ನೀಡಿದ್ದೇವೆ. ಆದರೆ, ಇವುಗಳನ್ನು ಅನುಸರಿಸುವ ಮೊದಲು ಪರಿಣಿತ ವೈದ್ಯರ ಸಲಹೆಯನ್ನು ತೆಗೆದುಕೊಳ್ಳುವುದು ಉತ್ತಮ.

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

Trending