Connect with us

ಬೆಂಗಳೂರು

ಮುಂದಿನ ವರ್ಷವೂ ಬಜೆಟ್ ಮಂಡಿಸುವುದು ನಾನೇ: ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ

Published

on

ಬೆಂಗಳೂರು: ಸಿಎಂ ಬದಲಾವಣೆ ಕುರಿತು ರಾಜ್ಯ್ ಕಾಂಗ್ರೆಸ್ ಚರ್ಚೆ ನಡೆಯುತ್ತಿರುವ ನಡುವಲ್ಲೇ ಮುಂದಿನ ವರ್ಷವೂ ಬಜೆಟ್ ಮಂಡಿಸುವುದು ನಾನೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದು, ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಸಂಚಲ ಮೂಡಿಸಿದೆ.

ಕೆಳಮನೆಯಲ್ಲಿ ಇತ್ತೀಚೆಗೆ 5 ವರ್ಷಕ್ಕೂ ನಾನೇ ಮುಖ್ಯಮಂತ್ರಿ ಎಂದು ಹೇಳಿದ್ದ ಸಿದ್ದರಾಮಯ್ಯ ಅವರು, ಇದೀಗ ಪರಿಷತ್ತಿನಲ್ಲೂ ಮುಂದಿನ ವರ್ಷ ಬಜೆಟ್ ಮಂಜಿಸುವ ವಿಚಾರ ಪ್ರಸ್ತಾಪಿಸಿದ್ದಾರೆ. ಇದು ತೀವ್ರ ಚರ್ಚೆಗೆ ಕಾರಣವಾಗಿದೆ.

ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲಿನ ಚರ್ಚೆ ವೇಳೆ ರಾಜ್ಯದ ಸಾಲದ ಕುರಿತು ಆರೋಪ-ಪ್ರತ್ಯಾರೋಪ ನಡೆಯಿತು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, 4.09 ಲಕ್ಷ ಕೋಟಿ ಗಾತ್ರದ ಬಜೆಟ್​ನಲ್ಲಿ 3.11 ಲಕ್ಷ ಕೋಟಿ ರೂ. ರಾಜಸ್ವ ವೆಚ್ಚವನ್ನು ನಿಗದಿ ಮಾಡಲಾಗಿದೆ. ಇದು ಶೇ.76 ರಷ್ಟಿದ್ದರೆ ಬಂಡವಾಳ ವೆಚ್ಚಕ್ಕೆ ಕೇವಲ ಶೇ.17.4 ರಷ್ಟು ಮೀಸಲಿಡಲಾಗಿದೆ. 71.36 ಸಾವಿರ ಕೋಟಿ ಬಂಡವಾಳ ವೆಚ್ಚದಲ್ಲಿ ಯಾವ ಆಸ್ತಿ ಸೃಜನೆ ಮಾಡಲು ಸಾಧ್ಯ?, ಸಾಲ ಮರುಪಾವತಿಗಾಗಿ 26,470 ಕೋಟಿ ರೂ. ಮೀಸಲಿಡಲಾಗಿದೆ. 19 ಸಾವಿರ ಕೋಟಿ ರಾಜಸ್ವ ಕೊರತೆಯಿದೆ. ರಾಜ್ಯದ ಒಟ್ಟು ಸಾಲ 7.64 ಲಕ್ಷ ಕೋಟಿ ರೂ.ಗಳಿಗೆ ಏರಿಕೆಯಾಗಿದೆ ಎಂದು ಹೇಳಿದರು.

2021-22ನೇ ಸಾಲಿನಲ್ಲಿ ಕೋವಿಡ್ ನಂತರ ಸಂಕಷ್ಟ ಸಂದರ್ಭದಲ್ಲೂ ರಾಜ್ಯ ಸರ್ಕಾರ 80.641 ಕೋಟಿ ರೂ. ಸಾಲ ಮಾಡಿತ್ತು. 2022-23ನೇ ಸಾಲಿನಲ್ಲಿ 44,549 ಕೋಟಿ ರೂ., 2023-24ನೇ ಸಾಲಿನಲ್ಲಿ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಬಳಿಕ 90,280 ಕೋಟಿ, ಕಳೆದ ಬಜೆಟ್‌ನಲ್ಲಿ 1.07 ಕೋಟಿ, ಮುಂದಿ ವರ್ಷಕ್ಕೆ 1.16 ಲಕ್ಷ ಕೋಟಿ ಸಾಲ ಮಾಡಲಾಗುತ್ತಿದೆ. ಸಾಲ ಪಡೆದು ಆಸ್ತಿ ಸೃಷ್ಟಿಸಬೇಕೆಂದು 2017ರಲ್ಲಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಭಾಷಣ ಮಾಡಿದ್ದರು. ಬಳಿಕ ಸಿದ್ದರಾಮಯ್ಯನವರೂ ಡಲ್ ಆಗಿದ್ದಾರೆ. ಅವರ ಬಜೆಟ್ ಕೂಡ ಡಲ್ ಆಗಿದೆ. ಈಗ ಸಾಲ ಮಾಡಿ ಅವರ ರಾಜಕೀಯ ಪ್ರಣಾಳಿಕೆಯ ಈಡೇರಿಕೆಗೆ ಖರ್ಚು ಮಾಡುತ್ತಿದ್ದಾರೆ. ಎಲ್ಲಾ ಉಚಿತ ಕೊಡಲು ಸಾಲದ ಹಣ ದುರ್ಬಳಕೆಯಾಗುತ್ತಿದ್ದು, ಇದು ಮೋಸ ಮತ್ತು ಅನ್ಯಾಯ ಎಂದು ದೂರಿದರು.

ಅಭಿವೃದ್ಧಿ ಎಂಬುದು ಶೂನ್ಯವಾಗಿದೆ ಎಂದು ಅಶೋಕ್ ಹೇಳುತ್ತಿದ್ದಂತೆಯೇ ಸಚಿವ ಎನ್.ಚಲುವರಾಯಸ್ವಾಮಿ ಮಾತನಾಡಿ, ಪ್ರತಿ ಕ್ಷೇತ್ರಕ್ಕೆ 100 ಕೋಟಿ ರೂ. ಅನುದಾನ ದೊರೆಯುತ್ತಿದೆ. ಇದು ಅಭಿವೃದ್ಧಿಯಲ್ಲವೇ ಎಂದು ಪ್ರಶ್ನಿಸಿದರು.

ಸಾಲದ ಮೊತ್ತವನ್ನೂ ಕಳೆದ ವರ್ಷ 1.81 ಲಕ್ಷ ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿತ್ತು. ಆದರೆ, ಅಷ್ಟು ಸಂಗ್ರಹವಾಗಿಲ್ಲ. ಮುಂದಿನ ವರ್ಷದಲ್ಲಿ 2.8 ಲಕ್ಷ ರೂ.ಕೋಟಿ ರೂ. ಆದಾಯದ ಗುರಿ ನಿಗದಿಪಡಿಸಲಾಗಿದೆ. ಅಭಿವೃದ್ಧಿ ಗುರಿಗಿಂತ ಅಬಕಾರಿ ಗುರಿ ಹೆಚ್ಚಾಗಿದೆ. ಜನರನ್ನು ಮದ್ಯಪಾನ ಪ್ರಿಯರನ್ನಾಗಿ ಮಾಡಲಾಗುತ್ತಿದೆ. 16ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರು, ತುಂಬಾ ದುರ್ಬಲರಾಗಿದ್ದಾರೆ. ಮರ ಮುಪ್ಪಾದರೂ ಹುಳಿ ಮುಪ್ಪೇ? ಎಂಬ ಗಾದೆ ಮಾತು ಸಿದ್ದರಾಮಯ್ಯನವರಿಗೆ ಅನ್ವಯವಾಗುವುದಿಲ್ಲ ಎಂದು ವ್ಯಂಗ್ಯವಾಡಿದರು.

ಈ ವೇಳೆ ಮಧ್ಯಪ್ರವೇಶಿಸಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರ ಎಷ್ಟು ಸಾಲ ಮಾಡಿದೆ ಎಂಬುದನ್ನೂ ಹೇಳಬೇಕು. ಸಾಲದ ಹಣವನ್ನು ಆಸ್ತಿ ಸೃಜನೆಗೆ ಖರ್ಚು ಮಾಡಬೇಕು ಎಂಬ ಹೇಳಿಕೆಗೆ ಈಗಲೂ ಬದ್ಧನಿದ್ದೇನೆ. ನಮ್ಮ ಸರ್ಕಾರ ವಿತ್ತೀಯ ಹೊಣೆಗಾರಿಕೆ ನಿಯಮಾವಳಿ ಅನುಸಾರವೇ ನಡೆದುಕೊಳ್ಳುತ್ತಿದೆ. ರೆವಿನ್ಯೂ ಸರ್‌ಪ್ಲಸ್ ಒಂದನ್ನು ಹೊರತುಪಡಿಸಿ ಉಳಿದಂತೆ ವಿತ್ತೀಯ ಕೊರತೆ ಮತ್ತು ಸಾಲ ಪ್ರಮಾಣ ಎರಡೂ ನಿಯಮಾವಳಿಗಳ ಅನುಸಾರದಲ್ಲಿಯೇ ಇದೆ ಎಂದು ಹೇಳಿದರು.

ಕಳೆದ ವರ್ಷ 27 ಸಾವಿರ ಕೋಟಿ ವಿತ್ತೀಯ ಕೊರತೆ ಇತ್ತು. ಈ ವರ್ಷ 19,262 ಕೋಟಿ ರೂ.ಗೆ ಇಳಿಸಲಾಗಿದೆ. ಐದು ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದರೂ ರಾಜ್ಯದ ಹಣಕಾಸು ಸ್ಥಿತಿ ಉತ್ತಮವಾಗಿದೆ, ಹಿಂದಿನ ಸರ್ಕಾರದಲ್ಲಿ ಹಳಿ ತಪ್ಪಿರುವ ರಾಜ್ಯದ ಆರ್ಥಿಕ ಶಿಸ್ತನ್ನು ನಮ್ಮ ಸರ್ಕಾರದಲ್ಲಿ ಸರಿಪಡಿಸುತ್ತಿದೆ. ಮುಂದಿನ ವರ್ಷ ರಾಜಸ್ವ ಕೊರತೆ ಆಗುವುದಿಲ್ಲ. ಶೇ.100ರಷ್ಟು ಉಳಿಕೆ ಬಜೆಟ್‌ ಮಂಡಿಸುತ್ತೇನೆ ಎಂದು ಭರವಸೆ ನೀಡಿದರು.

ಸರ್ಕಾರದ ಕಳೆದೊಂದು ವರ್ಷದ ಪೂರ್ಣ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಪ್ರಸ್ತಾಪಿಸಲು ಸಾಧ್ಯವಿಲ್ಲದಿದ್ದರೂ, ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. 2023ರ ಮೇ ಚುನಾವಣೆಯಲ್ಲಿ ರಾಜ್ಯದ ಜನ ನಮ್ಮ ಪಕ್ಷಕ್ಕೆ 136 ಸ್ಥಾನಗಳನ್ನು ನೀಡಿ ಗೆಲ್ಲಿಸಿದರು. ಅದರ ನಂತರ 2024 ರಲ್ಲಿ ಲೋಕಸಭೆ ಚುನಾವಣೆ ನಡೆದು ಜನರು ಕಳೆದ ಬಾರಿಗಿಂತ ನಮಗೆ ಹೆಚ್ಚಿನ ಸ್ಥಾನಗಳಲ್ಲಿ ಆಶೀರ್ವಾದ ಮಾಡಿದ್ದಾರೆ. ನಂತರ ನಡೆದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ನಡೆದ ಉಪಚುನಾವಣೆಗಳಲ್ಲಿ ದೊಡ್ಡ ಅಂತರದಿಂದ ಗೆಲುವು ಸಾಧಿಸಿದೆವು.

ಕನ್ನಡ ನಾಡಿನ ಜನ ನಮ್ಮ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಪಕ್ಷದಿಂದ ಘೋಷಿಸಿದ್ದೆವು. 2023ರಲ್ಲಿ ಜೂನ್ 11 ರಲ್ಲಿ ಶಕ್ತಿ ಯೋಜನೆಯನ್ನು, ಜುಲೈ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿಗಳನ್ನು ಜಾರಿ ಮಾಡಲಾಯಿತು. ಆಗಸ್ಟ್1 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿಯನ್ನು ಜಾರಿ ಮಾಡಲಾಯಿತು. ಡಿಸೆಂಬರ್ ನಲ್ಲಿ ಶಿವಮೊಗ್ಗದಲ್ಲಿ ಯುವನಿಧಿಯನ್ನು ಪ್ರಾರಂಭಿಸಲಾಯಿತು. ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದ ಒಳಗೆಯೇ ಜಾರಿ ಮಾಡಲಾಯಿತು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ.

ಗ್ಯಾರಂಟಿ ಯೋಜನೆಗಳನ್ನು ಪ್ರಧಾನಿ ಮೋದಿಯವರು ಹಾಗೂ ರಾಜ್ಯದ ಬಿಜೆಪಿಯವರು ಸುಳ್ಳು ಸುಳ್ಳೆ ಟೀಕಿಸಿದರು. ಗ್ಯಾರಂಟಿಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ರಾಜ್ಯ ದಿವಾಳಿಯಾಗುತ್ತದೆ ಎಂದು ಟೀಕಿಸಿದರು. ಬಿಜೆಪಿಯವರು ತಮ್ಮಚುನಾವಣಾ ಪ್ರಣಾಳಿಕೆಯಲ್ಲಿ 600 ಭರವಸೆಗಳನ್ನು ನೀಡಿ, ಅದರಲ್ಲಿ ಶೇ10 ರಷ್ಟು ಈಡೇರಿಸಲು ಸಾಧ್ಯವಾಗಲಿಲ್ಲ. ಇದೇ ಸದನದಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಭರವಸೆಗಳನ್ನು ಈಡೇರಿಸಲು, ಸಾಲ ಮನ್ನಾ ಮಾಡಲು ನಾವು ನೋಟ್ ಪ್ರಿಂಟ್ ಮೆಷಿನ್ ಇಟ್ಟಿಲ್ಲ ಎಂದಿದ್ದರು.

ಕೇಂದ್ರ ಸರ್ಕಾರ ಕಾರ್ಪೊರೇಟ್ ತೆರಿಗೆಯನ್ನು 30 ರಿಂದ 20% ಗೆ ಇಳಿಸಿದ್ದು ನಿಜವಲ್ಲವೇ? ನಾನು ಮೊದಲ ಬಾರಿ ಮುಖ್ಯಮ೦ತ್ರಿಯಾಗಿದ್ದಾಗ ರೈತರ 50 ಸಾವಿರದವರೆಗಿನ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡಿದ್ದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು 72 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡಿದ್ದರು. ಆದರೆ ನರೇಂದ್ರ ಮೋದಿಯವರು ರೈತರ ಸಾಲ ಮನ್ನಾ ಮಾಡಲಿಲ್ಲ.

ಗ್ಯಾರಂಟಿಗಳನ್ನು ವಿರೋಧಿಸಿದ ಬಿಜೆಪಿಯವರು ಮದ್ಯಪ್ರದೇಶ, ಮಹಾರಾಷ್ಟ್ರ, ರಾಜಸ್ತಾನ ಸೇರಿದಂತೆ ಹಲವು ರಾಜ್ಯಗಳಲ್ಲಿ ನಮ್ಮ ಗ್ಯಾರಂಟಿಗಳನ್ನು ಕಾಪಿ ಮಾಡಿದರು. ನಮ್ಮ ಸರ್ಕಾರ ಜಾರಿಮಾಡಿರುವ ಐದು ಗ್ಯಾರಂಟಿಗಳು ಬಡವರಿಗೆ ಸಾಮಾಜಿಕ, ಆರ್ಥಿಕವಾಗಿ ಶಕ್ತಿತುಂಬಿದ ಯೋಜನೆಗಳು. ಇದನ್ನು ಪ್ರತಿಪಕ್ಷಗಳು ಒಪ್ಪಿಕೊಳ್ಳಲಿ.

ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರ ಜೀವನ ಸುಧಾರಿಸಿರುವ ಉದಾಹರಣೆಗಳಿವೆ. ಗೃಹಲಕ್ಷ್ಮಿಯ ಫಲಾನುಭವಿಯೊಬ್ಬರು ಈ ಯೋಜನೆಯಿ೦ದ 10 ರಿಂದ 20 ಸಾವಿರ ಉಳಿಸಿ ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿದರು, ಇನ್ನೊಬ್ಬರು ಸೊಸೆಗೆ ಬಳೆ ಅಂಗಡಿ ಇಟ್ಟುಕೊಟ್ಟಿದ್ದೇನೆ ಎಂದು ತಮ್ಮ ಸಂತಸವನ್ನು ವ್ಯಕ್ತಪಡಿಸಿದ್ದರು. ಹೀಗೆ ನೂರಾರು ಉದಾಹರಣೆ ಕೊಡಬಲ್ಲೆ.

ನಾವು ಗ್ಯಾರಂಟಿಗಳ ಮೂಲಕ ಜನ ಸಾಮಾನ್ಯರ ಕೊಂಡುಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದ್ದೇವೆ. ಇದರಿಂದ ಆರ್ಥಿಕತೆಗೆ ಚೈತನ್ಯ ಬಂದು ರಾಜ್ಯಕ್ಕೆ ತೆರಿಗೆಯೂ ಹೆಚ್ಚುತ್ತಿದೆ. ಒಂದು ಅಧ್ಯಯನ ವರದಿಯಂತೆ ನಮ್ಮ ದೇಶದ 100 ಕೋಟಿ ದೇಶದ ಜನರಿಗೆ ಕೊಂಡುಕೊಳ್ಳುವ ಆಯ್ಕೆಯಿಲ್ಲ, ಶಕ್ತಿ ಇಲ್ಲ. ಮೊದಲ ವರ್ಗದಲ್ಲಿ 14 ಕೋಟಿ ಜನರಿದ್ದು, ಅವರ ಸರಾಸರಿ ವಾರ್ಷಿಕ ಆದಾಯ 15 ಸಾವಿರ ಡಾಲರ್ (13 ಲಕ್ಷ ರೂ.), 7 ಕೋಟಿ ಕುಟುಂಬಗಳ ತಲಾ ಆದಾಯ 3 ಸಾವಿರ ಡಾಲರ್ (2.62 ಲಕ್ಷ), 20.5 ಕೋಟಿ ಕುಟುಂಬಗಳ 100 ಕೋಟಿ ಜನರ ತಲಾ ಆದಾಯ 1 ಸಾವಿರ ಡಾಲರ್ (87 ಸಾವಿರ, ಅಂದರೆ ತಿಂಗಳಗೆ ಸುಮಾರು 7 ಸಾವಿರ), ಈ ವರ್ಗದವರಲ್ಲಿ ತಮ್ಮ ಅಗತ್ಯಗಳನ್ನು ಪೂರೈಸಲು ಹಣವಿರುವುದಿಲ್ಲ.

143 ಕೋಟಿ ಜನ ಮುಖ್ಯವಾಹಿನಿಗೆ ತರುವ ವ್ಯವಸ್ಥೆಯೇನು? ಈ ದಿಸೆಯಲ್ಲಿ ಅಂತಹ ಜನರಿಗೆ ಆರ್ಥಿಕ, ಸಾಮಾಜಿಕ ಸಮಾನತೆ ತರಲು ನಮ್ಮ ಸರ್ಕಾರ ಮಾಡಿರುವ ಪ್ರಮಾಣಿಕ ಪ್ರಯತ್ನ ಈ ಗ್ಯಾರಂಟಿಗಳು. ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧ್ಯಕ್ಷರಾದ ಕ್ಯಾಮರೂನ್ ದೇಶದ ಪಿಲೆಮಾನ್ ಯಾಂಗ್ ಅವರು ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಶ್ಲಾಘಿಸಿದ್ದಾರೆ. ಇದಕ್ಕಿಂತ ಶ್ಲಾಘನೆ ಬೇರೇನು ಬೇಕು? ಎಂದು ಹೇಳಿದರು.

ರಾಜ್ಯದ ತಲಾ ಆದಾಯ ಹೆಚ್ಚಾಗಿದೆ. ಬೆಂಗಳೂರಿನಲ್ಲಿ 2022-23 ರಲ್ಲಿ ತಲಾ ಆದಾಯವು 4,58,789 ರೂ.ಗಳಷ್ಟಿತ್ತು. 2023-24 ರಲ್ಲಿ ಅದು 5,01383 ರೂ.ಗಳಿಗೆ ಏರಿತು. ಅದೇ ರೀತಿ, ಬೆಳಗಾವಿ, ಕಲಬುರಗಿ ಮತ್ತು ಇತರ ಪ್ರದೇಶಗಳಲ್ಲಿಯೂ ಇದು ಹೆಚ್ಚಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಹಾಲು ಉತ್ಪಾದಕರಿಗೆ 700 ಕೋಟಿ ರೂ.ಗಳಷ್ಟು ಪ್ರೋತ್ಸಾಹ ಧನ ನೀಡದಿರುವ ಬಗ್ಗೆ ಪ್ರತಿಪಕ್ಷಗಳು ಮುಖ್ಯಮಂತ್ರಿಗಳನ್ನು ಸಿಲುಕಿಸಲು ಪ್ರಯತ್ನಿಸಿದಾಗ, ಹಿಂದಿನ ಬಿಜೆಪಿ ಸರ್ಕಾರ 600 ಕೋಟಿ ರೂ.ಗಳನ್ನು ಪಾವತಿಸಿಲ್ಲ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದರು.

ಮುಂದಿನ ವರ್ಷದೊಳಗೆ ಎಲ್ಲಾ ಬಾಕಿಗಳನ್ನು ಪಾವತಿಸಲಾಗುವುದು ಮತ್ತು ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಪ್ರೋತ್ಸಾಹ ಧನವನ್ನು 5 ರೂ.ಗಳಿಂದ 7 ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು.

ನಂತರ, ಸಿಎಂ ಅವರ ಉತ್ತರದಿಂದ ತೃಪ್ತರಾಗಿಲ್ಲ ಎಂದು ಹೇಳಿ ವಿರೋಧ ಪಕ್ಷದ ಸದಸ್ಯರು ಸಭಾತ್ಯಾಗ ಮಾಡಿದರು. ಕೇಂದ್ರ ಬಿಜೆಪಿ ಸರ್ಕಾರ ಕಾರ್ಪೊರೇಟ್ ಸಾಲಗಳನ್ನು ಮನ್ನಾ ಮಾಡಿದೆ ಎಂದು ಸಿಎಂ ಆರೋಪಿಸಿದಾಗ ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ನಡೆಯಿತು.

ದೇಶ

ಶೈಕ್ಷಣಿಕ ಜಾಗ ದುರ್ಬಳಕೆ ಆರೋಪ: ಕೆಂಗೇರಿ ಟ್ರಸ್ಟ್ ವಿರುದ್ಧ PIL ವಿಚಾರಣೆ

Published

on

ಬೆಂಗಳೂರು: ಮೈಸೂರು ರಸ್ತೆಯ ಕೆಂಗೇರಿ ಎಜುಕೇಷನ್ ಟ್ರಸ್ಟ್‌ಗೆ ಸೇರಿದ ಜಾಗದಲ್ಲಿ ನಡೆಯುತ್ತಿರುವ ನಿರ್ಮಾಣ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್ ಸಂಬಂಧಪಟ್ಟ ಅಧಿಕಾರಿಗಳಿಗೆ ಮಹತ್ವದ ನಿರ್ದೇಶನ ನೀಡಿದೆ.

ಟ್ರಸ್ಟ್‌ನ ಪದಾಧಿಕಾರಿಗಳು ಹಾಗೂ ಖಾಸಗಿ ಕಂಪನಿಯು ಸಂಬಂಧಪಟ್ಟ ಅಧಿಕಾರಿಗಳ ಪೂರ್ವಾನುಮತಿ ಪಡೆದು ಉಗ್ರಾಣ ಮತ್ತು ಪಾರ್ಕಿಂಗ್ ಕಟ್ಟಡಗಳ ನಿರ್ಮಾಣ ನಡೆಸುತ್ತಿದ್ದಾರೆಯೇ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿದೆ.

ಸ್ಥಳೀಯ ನಿವಾಸಿಗಳಾದ ಎಂ. ಶ್ರೀಕಾಂತ್ ಸೇರಿದಂತೆ ಮೂವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸುನೀಲ್ ದತ್ ಯಾದವ್ ಹಾಗೂ ಎಸ್. ರಾಚಯ್ಯ ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ. ಜೊತೆಗೆ ಸರ್ಕಾರ, ಪ್ರಾಥಮಿಕ ಶಾಲಾ ಶಿಕ್ಷಣ ಇಲಾಖೆ, ಜಿಬಿಎ ಟ್ರಸ್ಟ್ ಅಧ್ಯಕ್ಷರು ಮತ್ತು ಟ್ರಸ್ಟಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ಅರ್ಜಿದಾರರ ಪ್ರಕಾರ, 1957ರಲ್ಲಿ ಸ್ಥಾಪನೆಯಾದ ಕೆಂಗೇರಿ ಎಜುಕೇಷನ್ ಟ್ರಸ್ಟ್‌ಗೆ ಸ್ಥಳೀಯ ನಿವಾಸಿಗಳು ಸುಮಾರು 12 ಎಕರೆ ಭೂಮಿಯನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ದಾನವಾಗಿ ನೀಡಿದ್ದರು. ಈ ಜಾಗದಲ್ಲಿ ಸ್ಥಾಪನೆಯಾದ ಕನ್ನಡ ಮಾಧ್ಯಮ ಶಾಲೆಗೆ ಸರ್ಕಾರ ಅನುದಾನಿತ ಶಿಕ್ಷಣ ಸಂಸ್ಥೆಯ ಮಾನ್ಯತೆಯನ್ನೂ ನೀಡಿತ್ತು.

ಆದರೆ, ಪ್ರಸ್ತುತ ಟ್ರಸ್ಟ್‌ನ ಆಡಳಿತವು ಶಾಲೆಯ ಜಾಗವನ್ನು ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುತ್ತಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ. ಟ್ರಸ್ಟ್ ಭೂಮಿಯಲ್ಲಿ ವ್ಯಾಪಾರಿಗಳಿಗಾಗಿ ಉಗ್ರಾಣ ನಿರ್ಮಾಣ ಹಾಗೂ ಆಟದ ಮೈದಾನದಲ್ಲಿ ಸಾರಿಗೆ ಸಂಸ್ಥೆಗಳ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ದೂರಲಾಗಿದೆ.

ಇದಲ್ಲದೆ, ಟ್ರಸ್ಟ್‌ನ ಹಣಕಾಸು ದುರ್ಬಳಕೆ ನಡೆಯುತ್ತಿದೆ ಎಂಬ ಆರೋಪವನ್ನೂ ಅರ್ಜಿದಾರರು ಮುಂದಿಟ್ಟಿದ್ದಾರೆ. ಶಿಕ್ಷಣಕ್ಕಾಗಿ ದಾನವಾಗಿ ದೊರೆತ ಭೂಮಿಯಲ್ಲಿ ವಾಣಿಜ್ಯ ಚಟುವಟಿಕೆ ನಡೆಯದಂತೆ ಸರ್ಕಾರ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕೆಂದು ಅವರು ನ್ಯಾಯಾಲಯವನ್ನು ಕೋರಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆ ವೇಳೆ ಸಂಬಂಧಪಟ್ಟ ಇಲಾಖೆಗಳಿಂದ ಸಲ್ಲಿಕೆಯಾಗುವ ವರದಿಯ ಆಧಾರದ ಮೇಲೆ ಹೈಕೋರ್ಟ್ ಮುಂದಿನ ಕ್ರಮ ಕೈಗೊಳ್ಳುವ ಸಾಧ್ಯತೆಯಿದೆ.

Continue Reading

ದೇಶ

ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಎಸಿ ಹೆಲ್ಮೆಟ್! ಬಿಸಿಲಿನ ತಾಪದಿಂದ ರಕ್ಷಿಸಲು ಬಿಎನ್‌ಸಿಸಿಯ ಹೊಸ ಪ್ರಯೋಗ

Published

on

ಬೆಂಗಳೂರು, ಜೂನ್ 05: ನಗರದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ತಾಪಮಾನ ಮತ್ತು ಬಿಸಿಲಿನ ತೀವ್ರತೆಯಿಂದ ರಸ್ತೆಗಳಲ್ಲಿ ಕರ್ತವ್ಯ ನಿರ್ವಹಿಸುವ ಸಂಚಾರಿ ಪೊಲೀಸ್ ಸಿಬ್ಬಂದಿಯ ಆರೋಗ್ಯ ರಕ್ಷಣೆಗಾಗಿ ಬೆಂಗಳೂರು ಉತ್ತರ ಮಹಾನಗರ ಪಾಲಿಕೆ (BNCC) ಮಹತ್ವದ ಹೆಜ್ಜೆ ಇಟ್ಟಿದೆ. ಪೈಲಟ್ ಯೋಜನೆಯ ಭಾಗವಾಗಿ ಸಂಚಾರಿ ಪೊಲೀಸರಿಗೆ ಅತ್ಯಾಧುನಿಕ ಎಸಿ (AC) ಹೆಲ್ಮೆಟ್‌ಗಳನ್ನು ವಿತರಿಸಲಾಗಿದೆ.

ಹೊರಾಂಗಣದಲ್ಲಿ ಹಾಗೂ ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಗಂಟೆಗಟ್ಟಲೆ ನಿಂತು ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಬಿಸಿಲಿನ ತಾಪದಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ ಮೊದಲ ಹಂತದಲ್ಲಿ 20 ಎಸಿ ಹೆಲ್ಮೆಟ್‌ಗಳನ್ನು ನೀಡಲಾಗಿದೆ. ಈ ಯೋಜನೆ ‘ಹೀಟ್-ಹೆಲ್ತ್ ಪ್ರೊಟೊಕಾಲ್’ (Heat-Health Protocol) ಅಡಿಯಲ್ಲಿ ಜಾರಿಗೊಂಡಿದ್ದು, ಬೆಂಗಳೂರು ಉತ್ತರ ಮಹಾನಗರ ಪಾಲಿಕೆ, C40 Cities, Sensing Local ಹಾಗೂ ಹಸಿರು ದಳ ಸಂಸ್ಥೆಗಳ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಯಿತು.

ಈ ಎಸಿ ಹೆಲ್ಮೆಟ್‌ಗಳು ಹೆಚ್ಚಿನ ಉಷ್ಣಾಂಶದ ಪರಿಸ್ಥಿತಿಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ತಂಪಾದ ವಾತಾವರಣ ಒದಗಿಸುವ ಮೂಲಕ ಹೀಟ್ ಸ್ಟ್ರೆಸ್, ನಿರ್ಜಲೀಕರಣ ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ರಕ್ಷಣೆ ನೀಡಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿದ ಬಿಎನ್‌ಸಿಸಿ ಆಯುಕ್ತ ಪೊಮ್ಮಲ ಸುನಿಲ್ ಕುಮಾರ್, “ಹವಾಮಾನ ಬದಲಾವಣೆ ಮತ್ತು ಉಷ್ಣಾಂಶ ಏರಿಕೆಯಿಂದ ಹೊರಾಂಗಣದಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಆರೋಗ್ಯ ರಕ್ಷಣೆ ಅತ್ಯಗತ್ಯವಾಗಿದೆ. ಈ ಹಿಂದೆ ಪೌರಕಾರ್ಮಿಕರು, ಆಶಾ ಕಾರ್ಯಕರ್ತೆಯರು ಹಾಗೂ ಒಣ ಕಸ ಸಂಗ್ರಹಣಾ ಕೇಂದ್ರದ ಸಿಬ್ಬಂದಿಗೆ ಕೂಲಿಂಗ್ ಕಿಟ್‌ಗಳನ್ನು ನೀಡಲಾಗಿತ್ತು. ಇದೀಗ ಅದನ್ನು ಸಂಚಾರಿ ಪೊಲೀಸರಿಗೂ ವಿಸ್ತರಿಸಲಾಗಿದೆ” ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಈ ಯೋಜನೆಯನ್ನು ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಹಾಗೂ ಇತರೆ ಸರ್ಕಾರಿ ಇಲಾಖೆಗಳಿಗೂ ವಿಸ್ತರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾರ್ಯಕ್ರಮದಲ್ಲಿ ಹೀಟ್ ಸ್ಟ್ರೆಸ್ ಲಕ್ಷಣಗಳು, ಮುನ್ನೆಚ್ಚರಿಕಾ ಕ್ರಮಗಳು ಹಾಗೂ ತುರ್ತು ಪರಿಸ್ಥಿತಿಗಳ ನಿರ್ವಹಣೆ ಕುರಿತು ಸಂಚಾರಿ ಪೊಲೀಸರಿಗೆ ವಿಶೇಷ ಜಾಗೃತಿ ಮೂಡಿಸಲಾಯಿತು.

ಬೆಂಗಳೂರು ನಗರದಲ್ಲಿ ತಾಪಮಾನ ಏರಿಕೆಗೆ ಹೊಂದಿಕೊಳ್ಳುವ ನಿಟ್ಟಿನಲ್ಲಿ ಈ ಎಸಿ ಹೆಲ್ಮೆಟ್ ಯೋಜನೆ ಮಹತ್ವದ ಮಾದರಿಯಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

Continue Reading

ದೇಶ

ಡಿಕೆಶಿ ಸರ್ಕಾರಕ್ಕೆ ಮತ್ತೊಂದು ಶಾಕ್! ರಾಮಲಿಂಗಾ ರೆಡ್ಡಿ ಬಳಿಕ ಕೆ.ಹೆಚ್. ಮುನಿಯಪ್ಪ ಅಸಮಾಧಾನ ಸ್ಫೋಟ

Published

on

ಬೆಂಗಳೂರು, ಜೂನ್ 5: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಸಚಿವ ಸಂಪುಟದಲ್ಲಿ ಅಸಮಾಧಾನದ ಹೊಗೆ ಕಾಣಿಸಿಕೊಳ್ಳತೊಡಗಿದೆ. ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇದೀಗ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಪಡೆದಿರುವ K. H. Muniyappa ಅವರು ಕೂಡ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಖಾತೆ ಹಂಚಿಕೆ ವೇಳೆ ತಮ್ಮ ಹಿರಿತನಕ್ಕೆ ತಕ್ಕ ಮಹತ್ವ ನೀಡಿಲ್ಲ ಎಂದು ಮುನಿಯಪ್ಪ ಬೇಸರ ಹೊರಹಾಕಿದ್ದಾರೆ. ಕಳೆದ ಸಿದ್ದರಾಮಯ್ಯ ಸರ್ಕಾರದಲ್ಲೂ ಆಹಾರ ಖಾತೆಯನ್ನೇ ನಿರ್ವಹಿಸಿದ್ದ ಅವರು, ಈ ಬಾರಿ ಬೇರೆ ಖಾತೆಯ ನಿರೀಕ್ಷೆಯಲ್ಲಿದ್ದರು ಎನ್ನಲಾಗಿದೆ. ಆದರೆ ಮತ್ತೆ ಅದೇ ಇಲಾಖೆಯ ಜವಾಬ್ದಾರಿ ನೀಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಏಳು ಬಾರಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿರುವ ಮುನಿಯಪ್ಪ, “ಪಕ್ಷದಲ್ಲಿ ನನ್ನ ಹಿರಿತನವನ್ನು ಪರಿಗಣಿಸಿಲ್ಲ. ಆಹಾರ ಖಾತೆ ಬದಲು ಬೇರೆ ಇಲಾಖೆ ನೀಡುವಂತೆ ನಾಯಕತ್ವಕ್ಕೆ ಮನವಿ ಮಾಡಿದ್ದೆ. ಖಾತೆ ಹಂಚಿಕೆಯಲ್ಲಿ ಹಿರಿಯ ನಾಯಕರಿಗೆ ಸೂಕ್ತ ಗೌರವ ಸಿಗಬೇಕಿತ್ತು” ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಬೆಂಗಳೂರು ಅಭಿವೃದ್ಧಿ ಇಲಾಖೆ ನಿರೀಕ್ಷಿಸಿದ್ದ Ramalinga Reddy ಅವರಿಗೆ ಜಲಸಂಪನ್ಮೂಲ ಖಾತೆ ನೀಡಲಾಗಿತ್ತು. ಇದರಿಂದ ಅಸಮಾಧಾನಗೊಂಡ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದರು. ಈ ಬೆಳವಣಿಗೆ ಕಾಂಗ್ರೆಸ್ ಸರ್ಕಾರಕ್ಕೆ ಆರಂಭದಲ್ಲೇ ರಾಜಕೀಯ ಸಂಕಷ್ಟವನ್ನುಂಟು ಮಾಡಿದೆ.

ಸರ್ಕಾರ ರಚನೆಯಾದ ಮೂರೇ ದಿನಗಳಲ್ಲಿ ಇಬ್ಬರು ಹಿರಿಯ ನಾಯಕರ ಅಸಮಾಧಾನ ಬಹಿರಂಗವಾಗಿರುವುದು ಕಾಂಗ್ರೆಸ್ ಹೈಕಮಾಂಡ್‌ಗೆ ತಲೆನೋವಾಗಿ ಪರಿಣಮಿಸಿದೆ. ಅಸಮಾಧಾನಿತ ನಾಯಕರನ್ನು ಮನವೊಲಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಹಿರಿಯ ನಾಯಕರು ಮುಂದಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜ್ಯ ರಾಜಕೀಯ ವಲಯ ಕುತೂಹಲದಿಂದ ಗಮನ ಹರಿಸಿದೆ.

Continue Reading

Trending