Connect with us

ದೇಶ

ವಿಕ್ಕಿ, ರಶ್ಮಿಕಾ ನಟನೆಯ ‘ಛಾವಾ’ ಒಟಿಟಿಗೆ ಎಂಟ್ರಿ: ಮನೆಯಲ್ಲೇ ಕುಳಿತು ನೋಡಿ ಛತ್ರಪತಿ ಸಂಭಾಜಿ ಮಹಾರಾಜರ ಕಥೆ – CHHAAVA OTT

Published

on

ಬಾಲಿವುಡ್ ಸೂಪರ್​ ಸ್ಟಾರ್ ವಿಕ್ಕಿ ಕೌಶಲ್ ಹಾಗೂ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಬ್ಲಾಕ್​ಬಸ್ಟರ್​​ ಚಿತ್ರ ‘ಛಾವಾ’ ಒಟಿಟಿಗೆ ಎಂಟ್ರಿ ಕೊಟ್ಟಿದೆ. ಲಕ್ಷ್ಮಣ್ ಉಟೇಕರ್ ಆ್ಯಕ್ಷನ್​​ ಕಟ್​ ಹೇಳಿರೋ ಸಿನಿಮಾ ಮೊದಲು ಹಿಂದಿಯಲ್ಲಿ ತೆರೆಕಂಡು, ನಂತರ ತೆಲುಗಿನಲ್ಲಿಯೂ ಬಿಡುಗಡೆ ಆಗಿ ಯಶಸ್ಸು ಕಂಡಿದೆ. ಸಿನಿಮಾ ಹಾಲ್​ಗಳಲ್ಲಿ ಸಂಚಲನ ಸೃಷ್ಟಿಸಿದ ಚಿತ್ರವೀಗ ಒಟಿಟಿಗೂ ಎಂಟ್ರಿ ಕೊಟ್ಟಿದೆ. ಚಿತ್ರಮಂದಿರಗಳಲ್ಲಿ ಸಿನಿಮಾ ನೋಡದವರು ಇದೀಗ ತಾವಿದ್ದ ಸ್ಥಳದಲ್ಲೇ ಮೊಬೈಲ್​ ಆ್ಯಪ್​ ಮೂಲಕ ನೋಡಬಹುದಾಗಿದೆ.

ಜನಪ್ರಿಯ ಒಟಿಟಿ ಪ್ಲಾಟ್‌ಫಾರ್ಮ್ ನೆಟ್‌ಫ್ಲಿಕ್ಸ್, ಬ್ಲಾಕ್​ಬಸ್ಟರ್​ ಛಾವಾ ಡಿಜಿಟಲ್ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಚಿತ್ರವು ಏಪ್ರಿಲ್ 11 ಅಂದರೆ ಇಂದಿನಿಂದ ಸ್ಟ್ರೀಮಿಂಗ್ ಪ್ರಾರಂಭಿಸಿದೆ. ಗುರುವಾರದಂದು, ನೆಟ್‌ಫ್ಲಿಕ್ಸ್ ತನ್ನ ಅಫೀಶಿಯಲ್​​ ಸೋಷಿಯಲ್​ ಮೀಡಿಯಾ ಪ್ಲ್ಯಾಟ್​ಫಾರ್ಮ್​​​ನಲ್ಲಿ ಈ ಕುರಿತು ಅಧಿಕೃತ ಘೋಷಣೆ ಮಾಡಿತ್ತು. “ಛಾವಾ ಏಪ್ರಿಲ್ 11ರಿಂದ ನೆಟ್‌ಫ್ಲಿಕ್ಸ್‌ನಲ್ಲಿ ಸ್ಟ್ರೀಮಿಂಗ್ ಆಗಲಿದೆ” ಎಂದು ಪೋಸ್ಟ್‌ ಮಾಹಿತಿ ಒದಗಿಸಿತ್ತು.

ಫೆಬ್ರವರಿ 14ರಂದು ಬಿಡುಗಡೆಯಾದ ಈ ಚಿತ್ರ ವಿಶ್ವಾದ್ಯಂತ 700 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​​ ಮಾಡಿದೆ. ಬಾಲಿವುಡ್​ ಬಹುಬೇಡಿಕೆ ನಟ ವಿಕ್ಕಿ ಕೌಶಲ್ ಅವರ ವೃತ್ತಿಜೀವನದಲ್ಲೇ ಅತಿ ಹೆಚ್ಚು ಗಳಿಕೆ ಮಾಡಿದ ಚಿತ್ರ ಎಂಬ ದಾಖಲೆ ಸೃಷ್ಟಿಸಿದೆ. ಸೂಪರ್​ ಹಿಟ್​ ಸಿನಿಮಾಗಳನ್ನೇ ಕೊಡುತ್ತಿದ್ದ ನ್ಯಾಷನಲ್​ ಕ್ರಶ್​ ಖ್ಯಾತಿಯ ರಶ್ಮಿಕಾ ಮಂದಣ್ಣ ಅವರಿಗೆ ಚಿತ್ರ ಮತ್ತೊಂದು ದೊಡ್ಡ ಯಶಸ್ಸು ತಂದುಕೊಟ್ಟಿತು.

ಛಾವಾ’, ಛತ್ರಪತಿ ಶಿವಾಜಿ ಮಹಾರಾಜರ ಪುತ್ರ ಛತ್ರಪತಿ ಸಂಭಾಜಿ ಮಹಾರಾಜರ ಜೀವನವನ್ನು ಆಧರಿಸಿದೆ. ಸಂಭಾಜಿ ಮಹಾರಾಜ್ ಪಾತ್ರದಲ್ಲಿ ವಿಕ್ಕಿ ಕೌಶಲ್ ನಟಿಸಿದ್ದಾರೆ. ವಿಕ್ಕಿ ಅವರ ಅದ್ಭುತ ನಟನೆಗೆ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಅವರ ಪತ್ನಿ ಯೇಸುಬಾಯಿ ಪಾತ್ರದಲ್ಲಿ ಜನಪ್ರಿಯ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಸಂಭಾಜಿ ಕಥೆಯಲ್ಲಿ ಅಕ್ಷಯ್ ಖನ್ನಾ ಔರಂಗಜೇಬನ ಪಾತ್ರವನ್ನು ನಿರ್ವಹಿಸಿದ್ದಾರೆ. ಒಟ್ಟಾರೆ, ಎಲ್ಲರೂ ತಮ್ಮ ಅಭಿನಯಕ್ಕೆ ವ್ಯಾಪಕ ಪ್ರಶಂಸೆ ಸ್ವೀಕರಿಸಿದರು. ಸಂಗೀತ ದಿಗ್ಗಜ ಎ.ಆರ್.ರೆಹಮಾನ್ ಈ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ.

ದೇಶ

ಮಳೆ ಆರ್ಭಟಕ್ಕೆ ಶಿರಾಡಿ ಘಾಟ್ ಅಲರ್ಟ್: ಮತ್ತಷ್ಟು ಭೂಕುಸಿತ ಭೀತಿ, ವಾಹನ ಸವಾರರಿಗೆ ಎಚ್ಚರಿಕೆ

Published

on

ಹಾಸನ: ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಶಿರಾಡಿ ಘಾಟ್ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-75 (ಬೆಂಗಳೂರು–ಮಂಗಳೂರು ರಸ್ತೆ)ಯಲ್ಲಿ ಮತ್ತೆ ಗುಡ್ಡ ಕುಸಿತ ಸಂಭವಿಸಿದೆ. ಸಕಲೇಶಪುರ ತಾಲೂಕಿನ ಕಪ್ಪಳ್ಳಿ ಸಮೀಪ ಮಣ್ಣು ಹಾಗೂ ಗಿಡಗಳು ರಸ್ತೆಯತ್ತ ಜಾರಿದ ಪರಿಣಾಮ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಮಲೆನಾಡು ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗುಡ್ಡದ ಮಣ್ಣು ಸಡಿಲಗೊಂಡು ರಸ್ತೆಯತ್ತ ಜಾರಿದೆ. ಘಟನೆ ಸಂಭವಿಸಿದ ತಕ್ಷಣವೇ ರಾಷ್ಟ್ರೀಯ ಹೆದ್ದಾರಿ ಸಿಬ್ಬಂದಿ ಜೆಸಿಬಿ ಯಂತ್ರಗಳ ಸಹಾಯದಿಂದ ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಯಾವುದೇ ಅಡಚಣೆ ಆಗದಂತೆ ಕ್ರಮ ಕೈಗೊಂಡಿದ್ದಾರೆ. ಸದ್ಯ ವಾಹನ ಸಂಚಾರ ಎಂದಿನಂತೆ ಮುಂದುವರಿದಿದ್ದು, ಪರಿಸ್ಥಿತಿಯನ್ನು ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ.

ಚತುಷ್ಪಥ ರಸ್ತೆ ನಿರ್ಮಾಣದ ವೇಳೆ ರಸ್ತೆಯ ಎರಡೂ ಬದಿಗಳಲ್ಲಿ ಗುಡ್ಡಗಳನ್ನು ಆಳವಾಗಿ ಕತ್ತರಿಸಿರುವುದರಿಂದ ಮಳೆಗಾಲದಲ್ಲಿ ಭೂಕುಸಿತದ ಅಪಾಯ ಹೆಚ್ಚಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ನಿರಂತರ ಮಳೆಯಿಂದ ಮಣ್ಣು ಸಡಿಲಗೊಳ್ಳುತ್ತಿರುವ ಕಾರಣ ಮುಂದಿನ ದಿನಗಳಲ್ಲಿ ಮತ್ತಷ್ಟು ದೊಡ್ಡ ಪ್ರಮಾಣದ ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತವಾಗಿದೆ.

ಜಿಲ್ಲಾಡಳಿತ ಈಗಾಗಲೇ ಶಿರಾಡಿ ಘಾಟ್‌ನಲ್ಲಿ ಭೂಕುಸಿತ ಸಂಭವಿಸಬಹುದಾದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುವ ವಾಹನ ಸವಾರರು ಎಚ್ಚರಿಕೆಯಿಂದ ಪ್ರಯಾಣಿಸುವಂತೆ ಸೂಚಿಸಿದೆ. ವಿಶೇಷವಾಗಿ ರಾತ್ರಿ ವೇಳೆಯಲ್ಲಿ ಹಾಗೂ ಭಾರೀ ಮಳೆಯ ಸಂದರ್ಭಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮನವಿ ಮಾಡಲಾಗಿದೆ.

ಇದೇ ವೇಳೆ ರಸ್ತೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ವಿರುದ್ಧ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿರುವುದು ಹಾಗೂ ಕಳಪೆ ಕಾಮಗಾರಿ ಕಾರಣದಿಂದ ಕಳೆದ ಹಲವು ವರ್ಷಗಳಿಂದ ಮಳೆಗಾಲ ಬಂದಾಗಲೆಲ್ಲಾ ಇದೇ ರೀತಿಯ ಭೂಕುಸಿತ ಮರುಕಳಿಸುತ್ತಿದೆ ಎಂದು ಆರೋಪಿಸಿ, ಶಾಶ್ವತ ಪರಿಹಾರ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Continue Reading

ದೇಶ

Mumbai Airportನಲ್ಲಿ ಅಪಾಯದ ಕ್ಷಣ: ಟೇಕ್‌ಆಫ್ ವೇಳೆ ಏರ್ ಇಂಡಿಯಾ ವಿಮಾನ ತಕ್ಷಣ ನಿಲ್ಲಿಸಿದ ATC

Published

on

ಮುಂಬೈ: ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ರಾತ್ರಿ ಸಂಭವಿಸಬಹುದಾಗಿದ್ದ ಭಾರೀ ವಿಮಾನ ದುರಂತವನ್ನು ಏರ್ ಟ್ರಾಫಿಕ್ ಕಂಟ್ರೋಲ್ (ATC) ಸಮಯೋಚಿತ ಕ್ರಮದಿಂದ ತಪ್ಪಿಸಲಾಗಿದೆ. ದೆಹಲಿಗೆ ತೆರಳಬೇಕಿದ್ದ ಏರ್ ಇಂಡಿಯಾ AI816 ವಿಮಾನ ಟೇಕ್‌ಆಫ್‌ಗೆ ಸಿದ್ಧವಾಗಿದ್ದ ವೇಳೆ, ಅದೇ ರನ್‌ವೇಯಲ್ಲಿ ಲ್ಯಾಂಡ್ ಆಗಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ AIX1547 ವಿಮಾನ ಇನ್ನೂ ರನ್‌ವೇ ಖಾಲಿ ಮಾಡಿರಲಿಲ್ಲ. ಈ ಹಿನ್ನೆಲೆಯಲ್ಲಿ ATC ನೀಡಿದ ತುರ್ತು ಸೂಚನೆಯ ಮೇರೆಗೆ ಟೇಕ್‌ಆಫ್ ಪ್ರಕ್ರಿಯೆಯನ್ನು ತಕ್ಷಣ ಸ್ಥಗಿತಗೊಳಿಸಲಾಯಿತು.

ಮಾಹಿತಿಯ ಪ್ರಕಾರ, ರಾತ್ರಿ ಸುಮಾರು 10 ಗಂಟೆ ವೇಳೆಗೆ ಈ ಘಟನೆ ನಡೆದಿದೆ. ಮುಂಬೈನಿಂದ ದೆಹಲಿಗೆ ಹೊರಡಬೇಕಿದ್ದ AI816 ವಿಮಾನ ಟೇಕ್‌ಆಫ್ ರನ್ ಆರಂಭಿಸುತ್ತಿದ್ದಾಗ, ಸಿಲಿಗುರಿಯಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ರನ್‌ವೇಯಲ್ಲೇ ಇರುವುದು ಗಮನಕ್ಕೆ ಬಂದಿದೆ. ಕೂಡಲೇ ATC ಸಿಬ್ಬಂದಿ ಮಧ್ಯಪ್ರವೇಶಿಸಿ ಟೇಕ್‌ಆಫ್ ನಿಲ್ಲಿಸುವಂತೆ ಸೂಚಿಸಿದ್ದು, ಸಂಭವಿಸಬಹುದಾಗಿದ್ದ ದೊಡ್ಡ ಅನಾಹುತ ತಪ್ಪಿದೆ.

ಘಟನೆಯನ್ನು ದೃಢಪಡಿಸಿರುವ ಏರ್ ಇಂಡಿಯಾ, ATC ಸೂಚನೆಗಳನ್ನು ಸಿಬ್ಬಂದಿ ತಕ್ಷಣ ಪಾಲಿಸಿದ್ದು, ಬಳಿಕ ವಿಮಾನವನ್ನು ಪಾರ್ಕಿಂಗ್ ಬೇಗೆ ಹಿಂದಿರುಗಿಸಲಾಗಿದೆ ಎಂದು ತಿಳಿಸಿದೆ. ವಿಮಾನವನ್ನು ಪ್ರಮಾಣಿತ ಸುರಕ್ಷತಾ ನಿಯಮಗಳ ಪ್ರಕಾರ ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗುವುದು ಎಂದು ಸಂಸ್ಥೆ ಹೇಳಿದೆ.

ಈ ಘಟನೆಯ ನಂತರ ಪ್ರಯಾಣಿಕರಿಗೆ ಪರ್ಯಾಯ ವಿಮಾನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಏರ್ ಇಂಡಿಯಾ ಸ್ಪಷ್ಟಪಡಿಸಿದೆ. ಎರಡೂ ವಿಮಾನಗಳಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬ ಮಾಹಿತಿ ತಕ್ಷಣ ಲಭ್ಯವಾಗಿಲ್ಲ.

ಏರ್ ಇಂಡಿಯಾ ತನ್ನ ಪ್ರಕಟಣೆಯಲ್ಲಿ, ಪ್ರಯಾಣಿಕರ ಸುರಕ್ಷತೆಯೇ ಅತ್ಯುನ್ನತ ಆದ್ಯತೆಯಾಗಿದ್ದು, ಈ ಅನಿರೀಕ್ಷಿತ ವಿಳಂಬದಿಂದ ಉಂಟಾದ ಅನಾನುಕೂಲತೆಗೆ ವಿಷಾದ ವ್ಯಕ್ತಪಡಿಸಿದೆ. ವಿಮಾನಯಾನ ಕ್ಷೇತ್ರದಲ್ಲಿ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಮಹತ್ವವನ್ನು ಈ ಘಟನೆ ಮತ್ತೊಮ್ಮೆ ಸಾಬೀತುಪಡಿಸಿದೆ.

Continue Reading

ಅಪರಾಧ

Shopian Encounter: SOG, ಸೇನೆ, CRPF ಕಾರ್ಯಾಚರಣೆಯಲ್ಲಿ ಲಷ್ಕರ್ ಉಗ್ರ ಸಾವು

Published

on

ಶ್ರೀನಗರ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ನಡೆದ ಜಂಟಿ ಉಗ್ರ ನಿಗ್ರಹ ಕಾರ್ಯಾಚರಣೆಯಲ್ಲಿ ಲಷ್ಕರ್-ಎ-ತೊಯ್ಬಾ (LeT) ಸಂಘಟನೆಯ ಒಬ್ಬ ಉಗ್ರನನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ ಎಂದು ಜಮ್ಮು-ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.

ಗುಪ್ತಚರ ಇಲಾಖೆಯಿಂದ ದೊರೆತ ಮಾಹಿತಿಯ ಆಧಾರದ ಮೇಲೆ ಶೋಪಿಯಾನ್ ಸ್ಪೆಷಲ್ ಆಪರೇಷನ್ಸ್ ಗ್ರೂಪ್ (SOG), ಭಾರತೀಯ ಸೇನೆಯ ರಾಷ್ಟ್ರೀಯ ರೈಫಲ್ಸ್ (RR) ಹಾಗೂ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಜಂಟಿಯಾಗಿ ಶೋಧ ಕಾರ್ಯಾಚರಣೆ ಆರಂಭಿಸಿತ್ತು. ಕಾರ್ಯಾಚರಣೆ ವೇಳೆ ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಇದಕ್ಕೆ ಪ್ರತಿದಾಳಿ ನಡೆಸಿದ ಭದ್ರತಾ ಪಡೆಗಳು ಲಷ್ಕರ್-ಎ-ತೊಯ್ಬಾ ಸಂಘಟನೆಯ ಒಬ್ಬ ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾದವು.

ಜಮ್ಮು-ಕಾಶ್ಮೀರ ಪೊಲೀಸರು ಸಾಮಾಜಿಕ ಜಾಲತಾಣ X ಮೂಲಕ ಮಾಹಿತಿ ಹಂಚಿಕೊಂಡಿದ್ದು, “ಶೋಪಿಯಾನ್‌ನಲ್ಲಿ ಎಸ್‌ಒಜಿ, ರಾಷ್ಟ್ರೀಯ ರೈಫಲ್ಸ್ ಹಾಗೂ ಸಿಆರ್‌ಪಿಎಫ್ ಜಂಟಿ ಕಾರ್ಯಾಚರಣೆಯಲ್ಲಿ ಲಷ್ಕರ್ ಉಗ್ರನನ್ನು ನಿಷ್ಕ್ರಿಯಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇದರೊಂದಿಗೆ ಉಗ್ರ ಸಂಘಟನೆಗಳಿಗೆ ಕಠಿಣ ಎಚ್ಚರಿಕೆ ನೀಡಿರುವ ಪೊಲೀಸರು, “ನೀವು ಓಡಬಹುದು, ಆದರೆ ಅಡಗಿಕೊಳ್ಳಲು ಸಾಧ್ಯವಿಲ್ಲ” ಎಂಬ ಸಂದೇಶವನ್ನು ಪ್ರಕಟಿಸಿದ್ದಾರೆ. ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿಯೂ ವ್ಯಾಪಕ ಗಮನ ಸೆಳೆದಿದೆ.

ಸದ್ಯ ಹತ್ಯೆಯಾದ ಉಗ್ರನ ಗುರುತು, ಅವನಿಂದ ವಶಪಡಿಸಿಕೊಂಡಿರುವ ಶಸ್ತ್ರಾಸ್ತ್ರಗಳು ಹಾಗೂ ಕಾರ್ಯಾಚರಣೆಯ ಇತರ ವಿವರಗಳನ್ನು ಅಧಿಕಾರಿಗಳು ಇನ್ನೂ ಬಹಿರಂಗಪಡಿಸಿಲ್ಲ. ಕಾರ್ಯಾಚರಣೆ ನಡೆದ ಪ್ರದೇಶದಲ್ಲಿ ಇನ್ನೂ ಶೋಧ ಮುಂದುವರಿದಿದ್ದು, ಇತರ ಉಗ್ರರು ಅಡಗಿರುವ ಸಾಧ್ಯತೆಯನ್ನು ಪರಿಗಣಿಸಿ ಭದ್ರತಾ ಪಡೆಗಳು ಕಟ್ಟೆಚ್ಚರ ವಹಿಸಿವೆ.

ಈ ವರ್ಷ ಜಮ್ಮು-ಕಾಶ್ಮೀರದಲ್ಲಿ ಉಗ್ರರ ವಿರುದ್ಧ ಹಲವು ಯಶಸ್ವಿ ಕಾರ್ಯಾಚರಣೆಗಳನ್ನು ಭದ್ರತಾ ಪಡೆಗಳು ನಡೆಸಿವೆ. ಕಣಿವೆಯಲ್ಲಿ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸುವ ಉದ್ದೇಶದಿಂದ ಶೋಧ ಕಾರ್ಯಾಚರಣೆಗಳು, ಗುಪ್ತಚರ ನಿಗಾ ಹಾಗೂ ಭದ್ರತಾ ಕ್ರಮಗಳನ್ನು ಮತ್ತಷ್ಟು ಬಲಪಡಿಸಲಾಗಿದೆ.

Continue Reading

Trending