ಬೆಂಗಳೂರು

ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ : ಆರ್‌.ಅಶೋಕ್

ಬೆಂಗಳೂರು: ಯುವ ಜನರ ಸಾವಿನ ಶಾಪ ತಟ್ಟಿ ಈ ಸರ್ಕಾರ ಬಹಳ ದಿನ ಉಳಿಯುವುದಿಲ್ಲ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್​​ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಆರ್​ಸಿಬಿ ಗೆದ್ದದ್ದು ಸಿದ್ದರಾಮಯ್ಯ ಮತ್ತು ತಂಡವೇ ಅಥವಾ ಡಿ.ಕೆ.ಶಿವಕುಮಾರ್ ಮತ್ತವರ ತಂಡವೇ ಎಂಬಂತೆ ವಿಜಯೋತ್ಸವ ಮಾಡಿದ್ದಾರೆ ಎಂದು ಕಿಡಿಕಾರಿದರು.

ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ತಪ್ಪು ಮಾಡಿಲ್ಲದಿದ್ದರೆ ಸರಿಯಾಗಿ ತನಿಖೆ ನಡೆಸಬೇಕಿತ್ತು. ಈಗ ಹೈಕೋರ್ಟ್‌ ಸ್ವಯಂ ಪ್ರೇರಣೆಯ ಪ್ರಕರಣ ದಾಖಲಿಸಿಕೊಂಡಿದೆ. ಇದಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಎಂದರೆ, ಕೋರ್ಟ್‌ ಸರ್ಕಾರವನ್ನು ನಂಬುತ್ತಿಲ್ಲ ಎಂದರ್ಥ. ಮೃತ 11 ಜನರ ಕುಟುಂಬದವರನ್ನೇ ಕೇಳಿ ತನಿಖೆಗೆ ನೀಡಬಹುದಿತ್ತು. ಮೊದಲು ಜಿಲ್ಲಾಧಿಕಾರಿ, ಆ ನಂತರ ನಿವೃತ್ತ ನ್ಯಾಯಾಧೀಶರು, ಆ ಬಳಿಕ ಎಸ್‌ಐಟಿ ತನಿಖೆ ಎಂದು ಹೇಳಿದ್ದಾರೆ. ಯಾವುದರಲ್ಲೂ ಖಚಿತತೆ ಇಲ್ಲ ಎಂದರು.

ಸಿಎಂ ಸಿದ್ದರಾಮಯ್ಯ ಹಾಗೂ ಕುಟುಂಬದವರು ಕ್ರಿಕೆಟಿಗರ ಜೊತೆಗೆ ಫೋಟೋ ಶೂಟ್‌ ಮಾಡಿಕೊಂಡಿದ್ದರಿಂದಲೇ 11 ಜನರು ಮೃತರಾಗಿದ್ದಾರೆ. ಬಿಜೆಪಿ ಎಲ್ಲ ಬಗೆಯ ಹೋರಾಟಗಳನ್ನು ಮಾಡಿದೆ. ಇನ್ನು ಮುಂದೆಯೂ ಹೋರಾಟ ಮಾಡಲಿದೆ. ಸರ್ಕಾರವೇ ಜನರನ್ನು ವಿಧಾನಸೌಧಕ್ಕೆ ಆಹ್ವಾನಿಸಿದೆ. ಹಾಗೆ ಆಹ್ವಾನ ನೀಡದೇ ಹೋಗಿದ್ದರೆ ಈ ದುರಂತ ನಡೆಯುತ್ತಿರಲಿಲ್ಲ. ನಾವು ಪ್ರತಿಭಟನೆ ಮಾಡಿದಾಗ ನೂರಾರು ಪೊಲೀಸರು ಬಂದಿದ್ದರು. ಅದೇ ರೀತಿ ಎರಡು ಲಕ್ಷ ಜನರನ್ನು ನಿಯಂತ್ರಣ ಮಾಡಲು ಹೆಚ್ಚು ಪೊಲೀಸರನ್ನು ನಿಯೋಜಿಸಬೇಕಿತ್ತು ಎಂದು ಹೇಳಿದರು.

ಡಿಕೆಶಿ ಚಿಂತೆಯಲ್ಲಿದ್ದಾರೆ ಅಶೋಕ್​ ವ್ಯಂಗ್ಯ: ಇದಕ್ಕಾಗಿಯೇ ಮೂರು ದಿನದ ಅಧಿವೇಶನ ಕರೆಯಲು ಆಗ್ರಹಿಸಿದ್ದೇನೆ. ಸರ್ಕಾರದ ತಪ್ಪಿಲ್ಲ ಎಂದಾದರೆ ಯಾರ ತಪ್ಪು ಎಂದು ಸರಿಯಾಗಿ ತಿಳಿಸಲಿ. ಅಕ್ಟೋಬರ್‌ ತಿಂಗಳಲ್ಲೇ ಈ ಸರ್ಕಾರದ ಕಥೆ ಮುಗಿಯಲಿದೆ. ಎಲ್ಲ ಶಾಸಕರು ನಾವೇ ಮುಖ್ಯಮಂತ್ರಿ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು 2028 ಕ್ಕೆ ಇವರು ಅಧಿಕಾರಕ್ಕೆ ಬರಲು ಹೇಗೆ ಸಾಧ್ಯ? ಡಿ.ಕೆ.ಶಿವಕುಮಾರ್‌ ಬಹಳ ಚಿಂತೆಯಲ್ಲಿದ್ದಾರೆ ಎಂದು ವ್ಯಂಗ್ಯವಾಡಿದರು.

ವಿಧಾನಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಅಲ್ಲಿ ಬನ್ನಿ, ಇಲ್ಲಿ ಬನ್ನಿ ಎಂದು ಕರೆದಿದ್ದಾರೆ. ಹೀಗೆ ಕರೆದು 11 ಜನರ ಪ್ರಾಣ ತೆಗೆದಿದ್ದಾರೆ. ಕಪ್ ಆರ್​​ಸಿಬಿಯದು. ಆದರೆ, ತಪ್ಪು ಸರ್ಕಾರದ್ದು. ಪೊಲೀಸ್ ಅಧಿಕಾರಿಗಳನ್ನು ಬಲಿಪಶು ಮಾಡಿದ್ದಾರೆ. ಇಂಟೆಲಿಜೆನ್ಸ್ ಮುಖ್ಯಸ್ಥರಾದವರನ್ನು ಅಮಾನತು ಮಾಡಿಲ್ಲವೇಕೆ? ಎಂದು ಪ್ರಶ್ನಿಸಿದರು.

ಸಿಎಂ, ಡಿಸಿಎಂ ಇಮೇಜ್​ಗೆ 11 ಬಲಿ: ವಿಜಯೇಂದ್ರ

ಮುಖ್ಯಮಂತ್ರಿಗಳ ಜನಪ್ರಿಯತೆ ಹೆಚ್ಚಿಸಲು ಮತ್ತು ಇಮೇಜ್ ವೃದ್ಧಿಗೆ ಆರ್​ಸಿಬಿ ವಿಜಯೋತ್ಸವದ ಕಾರ್ಯಕ್ರಮ ಏರ್ಪಡಿಸಿದ್ದಾರೆ ಹಾಗೂ 11 ಜನರ ಸಾವಿಗೆ ಕಾರಣವಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕಾಲ್ತುಳಿತ ಪ್ರಕರಣದಲ್ಲಿ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಹಾಗೂ ಗೃಹ ಸಚಿವರ ರಾಜೀನಾಮೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡ್ಂ ಪಾರ್ಕ್​ನಲ್ಲಿ ಇಂದು ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದ ಉಪ ಮುಖ್ಯಮಂತ್ರಿಯವರು ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾರ್ಯಕ್ರಮ ನಡೆಸಿದ್ದಾರೆ. ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿಗಳ ನಡುವಿನ ಪೈಪೋಟಿ, ಹುಚ್ಚಾಟದಿಂದ 11 ಜನ ಅಮಾಯಕರು ಸಾವನ್ನಪ್ಪಿದ್ದಾರೆ ಎಂದು ಆಕ್ಷೇಪಿಸಿದರು.

ಇಂಥ ಭಂಡ ಸರ್ಕಾರ, ಮುಖ್ಯಮಂತ್ರಿ – ಉಪ ಮುಖ್ಯಮಂತ್ರಿಗಳು ಜನಪ್ರಿಯತೆ ಕಳೆದುಕೊಂಡಿದ್ದಾರೆ. ರಾಜ್ಯ ಸರ್ಕಾರದ ಪ್ರಾಯೋಜಕತ್ವದಲ್ಲಿ ಈ 11 ಜನರು ಸಾಯುವಂತಾಗಿದೆ. ಲಜ್ಜೆಗೆಟ್ಟ ಕಾಂಗ್ರೆಸ್ ಸರ್ಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು ಎಂದು ಒತ್ತಾಯಿಸಿದರು.

ಮಾಜಿ ಸಚಿವ ಬೈರತಿ ಬಸವರಾಜ್ ಮಾತನಾಡಿ, ಈ ಸರ್ಕಾರ ಕೂಡಲೇ ತೊಲಗಬೇಕು. ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು

Leave a Reply

Your email address will not be published. Required fields are marked *

Trending

Exit mobile version