Connect with us

ಚುನಾವಣೆ

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಆರಂಭ

ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಆರಂಭ
ಬಿಜೆಪಿ-ಜೆಡಿಎಸ್‌ ಮೈತ್ರಿಯಿಂದ ರಾಜ್ಯ ರಾಜಕಾರಣದಲ್ಲಿ ಹೊಸ ಆರಂಭ

ನವ ದೆಹಲಿಕರ್ನಾಟಕ ರಾಜಕಾರಣದಲ್ಲಿ ಮೂರನೇ ನಿರ್ಣಾಯಕ ಶಕ್ತಿಯಾಗಿರುವ ಜಾತ್ಯತೀತ ಜನತಾದಳ ಇದೀಗ ರಾಷ್ಟ್ರೀಯ ಪಕ್ಷವಾಗಿರುವ ಭಾರತೀಯ ಜನತಾ ಪಕ್ಷದೊಂದಿಗೆ ರಾಜಕೀಯ ಮೈತ್ರಿಯನ್ನು  ಅಧಿಕೃತವಾಡಿ ಮಾಡಿಕೊಳ್ಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹೊಸ ಶಕೆ ಆರಂಭವಾಗುವ ಲಕ್ಷಣ ಕಾಣಿಸಿದೆ.

ಬಿಜೆಪಿಯ ಹಿರಿಯ ನಾಯಕ ಅಮಿತ್‌ ಶಾ ಅವರ ದಿಲ್ಲಿಯ ನಿವಾಸದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಎಚ್‌.ಡಿ ಕುಮಾರಸ್ವಾಮಿ ಅವರು ಈ ಮೈತ್ರಿಗೆ ಅಧಿಕೃತವಾಗಿ ಒಪ್ಪಿಗೆ ನೀಡಿದ್ದಾರೆ. ಸ್ವತಃ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಇದನ್ನು ಘೋಷಣೆ ಮಾಡಿದ್ದು ಇನ್ನು ಜೆಡಿಎಸ್‌ ಪಕ್ಷವು ಎನ್‌ಡಿಎ ಕೂಟದ ಮಿತ್ರ ಪಕ್ಷವಾಗಿರಲಿದೆ ಎಂದು ಪ್ರಕಟಿಸಿದ್ದಾರೆ.

ಇದರೊಂದಿಗೆ ಕಳೆದ ವಿಧಾನಸಭಾ ಚುನಾವಣೆಯ ಬಳಿಕ ಕೇಳಿಬರುತ್ತಿದ್ದ ಬಿಜೆಪಿ-ಜೆಡಿಎಸ್‌ ಮೈತ್ರಿಯ ಊಹಾಪೋಹ ಮತ್ತು ಚರ್ಚೆಗಳಿಗೆ ತೆರೆ ಬಿದ್ದಂತಾಗಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್‌ ಪಕ್ಷಗಳು ಜತೆಯಾಗಿ ಸೆಣಸಲು ವೇದಿಕೆ ಸಜ್ಜಾದಂತಾಗಿದೆ.

ಮೈತ್ರಿ ಮಾತುಕತೆಗಾಗಿ ಎಚ್‌.ಡಿ ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಗುರುವಾರವೇ ದಿಲ್ಲಿಗೆ ತೆರಳಿದ್ದರು. ಗುರುವಾರ ಸಂಜೆ ಮಾಜಿ ಪ್ರಧಾನಿ ಎಚ್.‌ಡಿ ದೇವೇಗೌಡರ ನಿವಾಸದಲ್ಲಿ ಜೆಡಿಎಸ್‌ನ ಆಂತರಿಕ ಸಭೆಯೊಂದನ್ನು ನಡೆಸಲಾಗಿದ್ದು, ಅದರಲ್ಲಿ ಮೈತ್ರಿಯ ಷರತ್ತಿನ ಬಗ್ಗೆ ಚರ್ಚೆಗಳು ನಡೆದಿದ್ದವು. ಬಳಿಕ ರಾತ್ರಿ ಗೋವಾದ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಅವರು ಬಿಜೆಪಿಯ ರಾಯಭಾರಿಯಾಗಿ ದೇವೇಗೌಡರ ಮನೆಗೆ ಬಂದು ಚರ್ಚೆ ನಡೆಸಿದ್ದರು. ಇದಾದ ಬಳಿಕ ಶುಕ್ರವಾರ ಮಧ್ಯಾಹ್ನ ಎಚ್‌.ಡಿ. ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ಬಿಜೆಪಿ ನಾಯಕ ಅಮಿತ್‌ ಶಾ ಅವರ ನಿವಾಸಕ್ಕೆ ತೆರಳಿ ಜೆ.ಪಿ. ನಡ್ಡಾ ಅವರ ಸಮ್ಮುಖದಲ್ಲಿ ಮೈತ್ರಿಯ ಅಂತಿಮ ಮಾತುಕತೆ ನಡೆಸಿದ್ದಾರೆ. ಇದಾದ ಬಳಿಕ ಮೈತ್ರಿಯನ್ನು ಘೋಷಣೆ ಮಾಡಲಾಗಿದೆ. ಜಾತ್ಯತೀತ ಜನತಾದಳವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಭಾಗವಾಗಲು ಬಯಸಿರುವುದು ನಮಗೆ ಖುಷಿ ತಂದಿದೆ. ನಾವು ಅವರನ್ನು ಅತ್ಯಂತ ಪ್ರೀತಿಯಿಂದ ಎನ್‌ಡಿಎ ಮಿತ್ರಕೂಟಕ್ಕೆ ಸ್ವಾಗತಿಸುತ್ತೇವೆ ಎಂದು ಜೆ.ಪಿ. ನಡ್ಡಾ ಅವರು ಟ್ವೀಟ್‌ ಮಾಡುವುದರೊಂದಿಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಅಧಿಕೃತಗೊಂಡಂತಾಗಿದೆ. ಒಂದು ಹಂತದಲ್ಲಿ ರಾಜ್ಯ ವಿಧಾನಸಭೆಯಲ್ಲಿ ಎಚ್‌.ಡಿ ಕುಮಾರಸ್ವಾಮಿ ಅವರೇ ವಿರೋಧ ಪಕ್ಷದ ನಾಯಕರಾಗಿದ್ದಾರೆ ಎನ್ನುವಷ್ಟು ಪ್ರಖರವಾಗಿ ಮಿಂಚಿದ್ದರು. ಇನ್ನೂ ಸದನ ನಾಯಕನ ಆಯ್ಕೆಯೇ ಆಗಿಲ್ಲದೆ ಇರುವುದರಿಂದ ಬಿಜೆಪಿಯೂ ಅವರನ್ನೇ ಮುಂದಾಳುವಾಗಿ ಮುಂಚೂಣಿಯಲ್ಲಿ ನಿಲ್ಲಿಸಿತ್ತು. ಜಂಟಿ ಪತ್ರಿಕಾಗೋಷ್ಠಿಯ ಮೂಲಕವೂ ಗಮನ ಸೆಳೆದಿತ್ತು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 135 ಸ್ಥಾನಗಳಲ್ಲಿ ಗೆಲುವು ಸಾಧಿಸುವ ಮೂಲಕ ಭರ್ಜರಿ ಬಹುಮತ ಪಡೆದಿರುವುದು ಬಿಜೆಪಿ ಮತ್ತು ಜಾತ್ಯತೀತ ಜನತಾ ದಳದಲ್ಲಿ ತಲ್ಲಣ ಉಂಟು ಮಾಡಿತ್ತು. ಆಗಿನಿಂದಲೇ ಬಿಜೆಪಿ ಹಾಗೂ ಜೆಡಿಎಸ್‌ಗಳು ಒಂದಾಗಿ ಕಾಂಗ್ರೆಸ್‌ನ್ನು ಎದುರಿಸುವ ಚರ್ಚೆಗಳು ಆರಂಭಗೊಂಡಿದ್ದವು.

ಧಾನಸಭಾ ಅಧಿವೇಶನದಲ್ಲಿ ಹುಟ್ಟಿಕೊಂಡ ಮೈತ್ರಿಯ ಚರ್ಚೆ ಅದರ ಮುಕ್ತಾಯದ ಬಳಿಕ ತಣ್ಣಗಾಗಿತ್ತು. ಕೆಲವು ವಾರದ ಹಿಂದೆ ಮಾಜಿ ಮುಖ್ಯಮಂತ್ರಿ ಬಿಎಸ್‌. ಯಡಿಯೂರಪ್ಪ ಅವರು ಸದ್ಯವೇ ಬಿಜೆಪಿ-ಜೆಡಿಎಸ್‌ ಮೈತ್ರಿ ಘೋಷಣೆಯಾಗಲಿದೆ ಎಂದು ಪ್ರಕಟಿಸಿದರು. ಬಿಎಸ್‌ವೈ ಅವರ ಈ ಪ್ರಕಟಣೆಯನ್ನು ಬಿಜೆಪಿ ಮತ್ತು ಜೆಡಿಎಸ್‌ನ ಬಹುತೇಕ ಎಲ್ಲ ನಾಯಕರು ಸ್ವಾಗತಿಸಿದರು. ಈಗಿನ ಪರಿಸ್ಥಿತಿಯಲ್ಲಿ ಇದು ಅನಿವಾರ್ಯವಿದೆ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದರು. ಜೆಡಿಎಸ್‌ನಲ್ಲಿ ಕೆಲವು ನಾಯಕರು ಅದಕ್ಕೆ ಅಪಸ್ವರ ಹಾಡಿದ್ದರು. ಇದೀಗ ಜೆಡಿಎಸ್‌ ಮತ್ತು ಬಿಜೆಪಿ ನಡುವಿನ ಮೈತ್ರಿ ಅಧಿಕೃತ ಎನ್ನುವುದು ಘೋಷಣೆಯಾಗಿದೆ. ಜೆಡಿಎಸ್‌ನ ಕೆಲವು ನಾಯಕರು ಕಾಂಗ್ರೆಸ್‌ನ ಅಬ್ಬರದ ವಿರುದ್ಧ ಎದ್ದು ನಿಲ್ಲಲು ಬಿಜೆಪಿ ಜತೆ ಮೈತ್ರಿ ಅಗತ್ಯ ಎಂಬುದನ್ನು ಪ್ರತಿಪಾದಿಸಿದ್ದರು. ಆದರೆ ಬಿಜೆಪಿ ಪಾಲಿಗೂ ಈ ಮೈತ್ರಿ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ಅತ್ಯಂತ ಅಗತ್ಯದ್ದಾಗಿತ್ತು.

2019ರ ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳ ಪೈಕಿ 25+1ನ್ನು ಗೆದ್ದುಕೊಂಡಿದ್ದ ಬಿಜೆಪಿಗೆ ಈ ಬಾರಿಯೂ ಅದನ್ನೇ ಮರುಸೃಷ್ಟಿಸಿರುವ ಅನಿವಾರ್ಯತೆ ಇದೆ. ಆದರೆ, ವಿಧಾನಸಭಾ ಚುನಾವಣೆಯಲ್ಲಿ ಜನರು ಕಾಂಗ್ರೆಸ್‌ ಪರ ನಿಂತಿರುವ ಹಿನ್ನೆಲೆಯಲ್ಲಿ ಕಳೆದ ಬಾರಿ ಫಲಿತಾಂಶದ ಮರು ಸೃಷ್ಟಿ ಕಷ್ಟವಾದೀತು ಎಂಬ ನೆಲೆಯಲ್ಲಿ ಅದು ಕೂಡಾ ಜೆಡಿಎಸ್‌ನ ಮೈತ್ರಿಯನ್ನು ಬಯಸಿದೆ. ಜೆಡಿಎಸ್‌ನ ಬೆಂಬಲವಿದ್ದರೆ ಬೆಂಗಳೂರು ಸೇರಿದಂತೆ ಹಳೆಮೈಸೂರು ಪ್ರಾಂತ್ಯದಲ್ಲಿ ಗೆಲ್ಲಬಹುದು ಎನ್ನುವುದು ಬಿಜೆಪಿ ಲೆಕ್ಕಾಚಾರ. ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರೆ ದೇಶದಲ್ಲಿ ಹಿಂದೆ ಗೆದ್ದ ಬಹುತೇಕ ಎಲ್ಲ ಕ್ಷೇತ್ರಗಳನ್ನು ಉಳಿಸಿಕೊಳ್ಳುವ ಅನಿವಾರ್ಯತೆ ಇದೆ. ಇಲ್ಲವಾದರೆ ಇಂಡಿಯಾ ಮೈತ್ರಿಕೂಟದ ಮುಂದೆ ಮಂಡಿಯೂರಬೇಕಾದೀತು ಎಂಬ ಆತಂಕವಿದೆ. ಹೀಗಾಗಿ ಕರ್ನಾಟಕದ ಬಲವನ್ನು ಗಟ್ಟಿಗೊಳಿಸುವ ಪ್ರಯತ್ನವಾಗಿ ಮೈತ್ರಿಗೆ ಮುಂದಾಗಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ನಡೆಯುತ್ತಿರುವ ಈ ಮೈತ್ರಿಯಲ್ಲಿ ಎರಡು ಪಕ್ಷಗಳ ನಡುವೆ ಸ್ಥಾನ ಹೊಂದಾಣಿಕೆ ಅತ್ಯಂತ ಮಹತ್ವದ ಹಂತದ್ದಾಗಿರುತ್ತದೆ. ಈಗ ಲಭ್ಯವಾಗಿರುವ ಮಾಹಿತಿ ಪ್ರಕಾರ, ಜೆಡಿಎಸ್‌ ಐದು ಲೋಕಸಭಾ ಕ್ಷೇತ್ರ (ಮಂಡ್ಯ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ), ಎರಡು ಎಂಎಲ್‌ಸಿ ಸ್ಥಾನ, ಒಂದು ಕೇಂದ್ರ ಮಂತ್ರಿ ಸ್ಥಾನವನ್ನು ಕೇಳಿದೆ ಎನ್ನಲಾಗುತ್ತಿದೆ. ಆದರೆ, ಬಿಜೆಪಿ ಇಷ್ಟು ಸ್ಥಾನಗಳನ್ನು ಕೊಡುತ್ತದೆಯೇ ಎನ್ನುವುದು ಕಾದು ನೋಡಬೇಕಾಗಿದೆ. ಇದರ ವಿಚಾರ ಮುಂದಿನ ಚುನಾವಣೆಯ ಹಂತದಲ್ಲಿ ಅಂತಿಮವಾಗಲಿದೆ.

ಅಂತಿಮವಾಗಿ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಮಧ್ಯಸ್ಥಿಕೆಯಲ್ಲೇ ಜೆಡಿಎಸ್‌ ಈ ಬಾರಿ ಅಧಿಕೃತವಾಗಿ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಂಡಂತಾಗಿದೆ. ಜಾತ್ಯತೀತ ಎಂಬ ಹೆಸರಿನೊಂದಿಗೇ ಇರುವ ಪಕ್ಷ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ಮೂಲಕ ರಾಜಕೀಯದಲ್ಲಿ ಯಾರೂ ಯಾರಿಗೂ ಅಸ್ಪೃಶ್ಯವಲ್ಲ ಎನ್ನುವುದು ಮತ್ತೆ ಋಜುವಾತಾಗಿದೆ.

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚುನಾವಣೆ

ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.

“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.

ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.

ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.

Continue Reading

ಚುನಾವಣೆ

BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ

ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

Continue Reading

Trending