ಬೆಂಗಳೂರು
ಬೆಂಗಳೂರಿನಲ್ಲಿ ಕಾರ್ಪೂಲಿಂಗ್ ನಿಷೇಧವಿಲ್ಲ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ
ಬೆಂಗಳೂರು: ನಗರದಲ್ಲಿ ಸಾರಿಗೆ ಇಲಾಖೆ ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿ ಆದೇಶ ಹೊರಡಿಸಿದೆ ಎಂಬ ವರದಿಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ತಳ್ಳಿಹಾಕಿದ್ದಾರೆ. ರಾಜ್ಯ ಸರ್ಕಾರವು ಕಾರ್ಪೂಲಿಂಗ್ಗೆ ನಿಷೇಧ ವಿಧಿಸಿಲ್ಲ, ಇದು ಸುಳ್ಳು ಸುದ್ದಿ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.
ಸಾರಿಗೆ ಇಲಾಖೆಯಿಂದ ಕಾರ್ಪೂಲಿಂಗ್ ನಿಷೇಧ ಮಾಡಲಾಗಿದೆ. ನಿಯಮ ಉಲ್ಲಂಘಿಸಿದರೆ ವಾಹನ ಚಾಲಕರಿಗೆ 5ರಿಂದ 10 ಸಾವಿರ ರೂ.ವರೆಗೆ ದಂಡ ವಿಧಿಸುವ ಸಾಧ್ಯತೆ ಇದೆ ಎಂದು ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಗಳು ಪ್ರಸಾರವಾಗಿದ್ದವು. ಇದರಿಂದ ಜನರಲ್ಲಿ ಗೊಂದಲ ಉಂಟಾಗಿತ್ತು. ಹೀಗಾಗಿ ಸಾರಿಗೆ ಸಚಿವರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಸ್ಪಷ್ಟನೆ ನೀಡಿದ್ದಾರೆ.
ಕಾರ್ಪೂಲಿಂಗ್ ನಿಷೇಧಿಸಿಲ್ಲ, ಇದು ಸುಳ್ಳು ಸುದ್ದಿ. ಮೊದಲು ಅವರು ಸರ್ಕಾರದಿಂದ ಅನುಮತಿಯನ್ನು ಪಡೆದುಕೊಳ್ಳಲಿ. ಅವರು ಅನುಮತಿಯನ್ನು ತೆಗೆದುಕೊಳ್ಳದಿರುವಾಗ ನಿಷೇಧದ ಪ್ರಶ್ನೆ ಎಲ್ಲಿದೆ? ಪ್ರತಿಯೊಬ್ಬರೂ ಸರ್ಕಾರದ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸಬೇಕು. ಬಿಳಿ ನಂಬರ್ ಪ್ಲೇಟ್ (ವೈಟ್ ಬೋರ್ಡ್) ಗಳನ್ನು ಹೊಂದಿರುವ ವಾಣಿಜ್ಯೇತರ ಖಾಸಗಿ ವಾಹನಗಳನ್ನು ಕಾರ್ಪೂಲಿಂಗ್ ಉದ್ದೇಶಗಳಿಗಾಗಿ ಬಳಸುವುದು ಕಾನೂನುಬಾಹಿರವಾಗಿದೆ. ಹಳದಿ ಬಣ್ಣದ ನಂಬರ್ ಪ್ಲೇಟ್ಗಳನ್ನು ಹೊಂದಿರುವ ವಾಣಿಜ್ಯ ವಾಹನಗಳನ್ನು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುವ ಮೂಲಕ ಕಾರ್ಪೂಲಿಂಗ್ಗೆ ಬಳಸಬಹುದು ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.