Connect with us

ರಾಜಕೀಯ

“ಡಿಕೆ ಶಿವಕುಮಾರ್ ಸಿಎಂ ಆಗಲೇಬೇಕು” : ಶಾಸಕ ಎಸ್.ಟಿ. ಸೋಮಶೇಖರ್

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಪದೇ ಪದೇ ಚರ್ಚೆಗೆ ಗ್ರಾಸವಾಗುತ್ತಿರುವ ಮುಖ್ಯಮಂತ್ರಿ ಬದಲಾವಣೆ ವಿಷಯ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಈ ಬಾರಿ ಶಾಸಕರಾದ ಎಸ್.ಟಿ. ಸೋಮಶೇಖರ್ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ಪರವಾಗಿ ಬಲವಾಗಿ ಮಾತಾಡಿದ್ದು, ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸೋಮಶೇಖರ್, “ಡಿಕೆ ಶಿವಕುಮಾರ್ ಏಕೆ ಮುಖ್ಯಮಂತ್ರಿಯಾಗಬಾರದು? ಪಕ್ಷವನ್ನು ಕಟ್ಟಿಕೊಂಡವರು, ಪಕ್ಷದ ಶಕ್ತಿ ಹೆಚ್ಚಿಸಿದವರು. ಅವರ ಹಣೆಯಲ್ಲಿ ಸಿಎಂ ಸ್ಥಾನ ಬರೆದಿದ್ದರೆ, ಅವರು ಖಚಿತವಾಗಿ ಸಿಎಂ ಆಗುತ್ತಾರೆ” ಎಂದು ಸ್ಪಷ್ಟಪಡಿಸಿದರು. ಅವರು ನಿನ್ನೆ ನಡೆದ ಡಿನ್ನರ್ ಬಗ್ಗೆ ಹೇಳುವಾಗ, “ಶಿವಕುಮಾರ್ ಅವರು ಊಟಕ್ಕೆ ಕರೆದಿದ್ದರು, ಅಲ್ಲಿ ಸುಮಾರು 70 ಶಾಸಕರು ಇದ್ದರು” ಎಂದು ಮಾಹಿತಿ ಹಂಚಿಕೊಂಡರು.

ಡಿನ್ನರ್ ಬಳಿಕ ಮತ್ತೊಬ್ಬ ಪ್ರಮುಖ ನಾಯಕ ಮತ್ತು ಡಿಕೆ ಶಿವಕುಮಾರ್ ಅವರ ಆಪ್ತನಾದ ಇಕ್ಬಾಲ್ ಹುಸೇನ್ ಕೂಡಾ ತೀವ್ರ ಹೇಳಿಕೆ ನೀಡಿ, “ಸಂಕ್ರಾಂತಿ ಅಲ್ಲ, ಅಧಿವೇಶನ ಮುಗಿಯುತ್ತಲೇ ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ” ಎಂದು ರಾಜಕೀಯ ವಲಯದಲ್ಲಿ ಬಿರುಗಾಳಿ ಎಬ್ಬಿಸಿದರು.

ತಡರಾತ್ರಿ ಪ್ರವೀಣ್ ದೊಡ್ಡಣ್ಣನವರ್ ತೋಟದ ಮನೆಯಲ್ಲಿ ನಡೆದ ಈ ಭರ್ಜರಿ ಸಭೆಯಲ್ಲಿ ಎಸ್.ಟಿ. ಸೋಮಶೇಖರ್, ಶಿವರಾಂ ಹೆಬ್ಬಾರ್, ಹ್ಯಾರಿಸ್, ಮಾಗಡಿ ಬಾಲಕೃಷ್ಣ ಸೇರಿದಂತೆ 55–70 ಶಾಸಕರು ಭಾಗಿಯಾಗಿದ್ದರು. ಸಭೆಯ ನಂತರವೇ DKShi ಪರವಾಗಿ ನೀಡಲಾದ ಹೇಳಿಕೆಗಳು ಸಿದ್ಧರಾಮಯ್ಯ ಬಣಕ್ಕೆ ಆತಂಕ ತರಿಸಿದೆ.

ಈ ನಡುವೆ ಹೈಕಮಾಂಡ್ ಕೂಡಾ ಪರಿಸ್ಥಿತಿ ಗಂಭೀರವಾಗುತ್ತಿರುವುದರಿಂದ ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ಅವರೊಂದಿಗೆ ಆಂತರಿಕ ಚರ್ಚೆ ನಡೆಸಿದೆ ಎಂಬ ಮಾಹಿತಿ ಹರಿದಾಡುತ್ತಿದೆ. ಅಧಿವೇಶನ ಮುಗಿದ ನಂತರ ತೀರ್ಮಾನ ಸಂಭವನೀಯ ಎಂಬ ಇಕ್ಬಾಲ್ ಹುಸೇನ್ ಹೇಳಿಕೆ ರಾಜಕೀಯದಲ್ಲಿ ಬೆಂಕಿಗೆ ಎಣ್ಣೆ ಸುರಿದಂತಾಗಿದೆ.

ಇನ್ನೊಂದೆಡೆ, ಸಿಎಂ ಸಿದ್ದರಾಮಯ್ಯ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಬದಲಾವಣೆ ಕುರಿತು ಪ್ರಸಕ್ತ ಗಾಳಿಚರ್ಚೆಗಳಿಗೆ ತೆರೆ ಬಿದ್ದಂತೆ ಮಾತನಾಡಿ, “ಮುಖ್ಯಮಂತ್ರಿ ಬದಲಾವಣೆ ಇಲ್ಲ. ಹೈಕಮಾಂಡ್ ಇದನ್ನು ಸ್ಪಷ್ಟಪಡಿಸಿದೆ” ಎಂದು ಹೇಳಿದ್ದಾರೆ. ಕೇವಲ ಎರಡು ದಿನಗಳೊಳಗೆ ಅವರು ಎರಡನೇ ಬಾರಿ ಇದೇ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಬಲವಾದ ಸಂದೇಶ ನೀಡಿದಂತಾಗಿದೆ.

ದೇಶ

638 ಕನ್ನಡ ಶಾಲೆ ಮುಚ್ಚಿದ ಸರ್ಕಾರದ ವಿರುದ್ಧ ಬೊಮ್ಮಾಯಿ ಆಕ್ರೋಶ

ನವದೆಹಲಿ: ರಾಜ್ಯದಾದ್ಯಂತ 638 ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಿರುವುದು ಕನ್ನಡ ಮತ್ತು ಕನ್ನಡ ಶಿಕ್ಷಣದ ವಿರುದ್ಧದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿ ಗಂಭೀರವಾಗಿ ಹದಗೆಟ್ಟಿದೆ ಎಂದು ಆರೋಪಿಸಿದರು. “ಸರ್ಕಾರಿ ನೌಕರರಿಗೆ ಸರಿಯಾಗಿ ಸಂಬಳ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಇದೇ ಕಾರಣದಿಂದ ಕನ್ನಡ ಶಾಲೆಗಳನ್ನು ಮುಚ್ಚಲಾಗುತ್ತಿದೆ” ಎಂದು ಹೇಳಿದರು. ಈ ನಿರ್ಧಾರದಿಂದ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಗ್ರಾಮೀಣ ವಿದ್ಯಾರ್ಥಿಗಳ ಶಿಕ್ಷಣಕ್ಕೆ ದೊಡ್ಡ ಹೊಡೆತ ಬಿದ್ದಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಸರ್ಕಾರ ಬದ್ಧವಾಗಿರಬೇಕು. ಆದರೆ ಪ್ರಸ್ತುತ ಸರ್ಕಾರದ ನಡೆ ಕನ್ನಡ ವಿರೋಧಿ ಧೋರಣೆಯಾಗಿದೆ ಎಂದು ಟೀಕಿಸಿದ ಬೊಮ್ಮಾಯಿ, ಕೂಡಲೇ ಮುಚ್ಚಿರುವ ಎಲ್ಲಾ ಕನ್ನಡ ಶಾಲೆಗಳನ್ನು ಪುನಾರಂಭಿಸಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಜೊತೆಗೆ, ಲೋಕಸಭೆ ಸ್ಪೀಕರ್ ವಿರುದ್ಧ ಕಾಂಗ್ರೆಸ್ ಪಕ್ಷ ಅವಿಶ್ವಾಸ ನಿರ್ಣಯ ಮಂಡಿಸಿರುವ ವಿಚಾರಕ್ಕೂ ಪ್ರತಿಕ್ರಿಯಿಸಿದ ಅವರು, “ನಿರಂತರ ಚುನಾವಣಾ ಸೋಲುಗಳಿಂದ ಕಾಂಗ್ರೆಸ್ ಹತಾಶಗೊಂಡಿದೆ” ಎಂದು ಹೇಳಿದರು. ಸಂಸತ್ತಿನಲ್ಲಿ ಬೆಂಚ್‌ಗಳ ಮೇಲೆ ನಿಂತು ಗದ್ದಲ ಮಾಡುವುದು, ಸ್ಪೀಕರ್ ವಿರುದ್ಧ ದಾಳಿ ನಡೆಸುವುದು ಹಾಗೂ ಪ್ರಧಾನಮಂತ್ರಿಯ ಆಸನದವರೆಗೆ ತೆರಳಿ ತಡೆ ಮಾಡುವ ಪ್ರಯತ್ನ ಮಿತಿಮೀರಿದ ವರ್ತನೆ ಎಂದು ಅವರು ಆರೋಪಿಸಿದರು.

ರಾಜಕೀಯದಲ್ಲಿ ಆರೋಗ್ಯಕರ ಚರ್ಚೆ ನಡೆಯಬೇಕು. ಗದ್ದಲ ಹಾಗೂ ಅಶಾಂತಿಯಿಂದ ಪ್ರಜಾಸತ್ತಾತ್ಮಕ ವ್ಯವಸ್ಥೆಗೆ ಧಕ್ಕೆ ಉಂಟಾಗುತ್ತದೆ ಎಂದು ಬೊಮ್ಮಾಯಿ ಎಚ್ಚರಿಸಿದರು.

Continue Reading

ದೇಶ

ಅಧಿಕಾರ ಹಂಚಿಕೆ ವಿವಾದ: “ಹೈಕಮಾಂಡ್ ತೀರ್ಮಾನವೇ ಅಂತಿಮ” – ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ರಾಜಕೀಯ ಚರ್ಚೆಗೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹೈಕಮಾಂಡ್ ತೀರ್ಮಾನವೇ ಅಂತಿಮವಾಗಿದ್ದು, ಅದಕ್ಕೆ ಅನುಗುಣವಾಗಿ ತಾವು ಹಾಗೂ ಡಿಕೆ ಶಿವಕುಮಾರ್ ನಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಡಿಕೆ ಸುರೇಶ್ ಅವರು “ಸಿಎಂ ಸಿದ್ದರಾಮಯ್ಯ ಕುರ್ಚಿ ಬಿಟ್ಟು ಕೊಡ್ತಾರೆ ಎಂಬ ವಿಶ್ವಾಸ ಇದೆ” ಎಂದು ಹೇಳಿದ ಹಿನ್ನೆಲೆಯಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದಾಗ ಸಿಎಂ ಅಸಮಾಧಾನ ವ್ಯಕ್ತಪಡಿಸಿದರು. “ಇನ್ನೇನು ಕೇಳೋದೇ ಇಲ್ಲವಾ ನಿಮಗೆ? ಮೂರು ತಿಂಗಳುಗಳಿಂದ ಇದೇ ವಿಚಾರ ಕೇಳ್ತಿದ್ದೀರಿ. ದಯವಿಟ್ಟು ಇನ್ನು ಮುಂದೆ ಈ ಪ್ರಶ್ನೆ ಕೇಳಬೇಡಿ” ಎಂದು ಅವರು ತಿರುಗೇಟು ನೀಡಿದರು.

ಹೈಕಮಾಂಡ್‌ಗೆ ಎಲ್ಲವೂ ತಿಳಿದಿದ್ದು, ಅಂತಿಮ ತೀರ್ಮಾನವನ್ನು ಅವರು ತೆಗೆದುಕೊಳ್ಳುತ್ತಾರೆ. “ಹೈಕಮಾಂಡ್ ಹೇಳಿದಂತೆ ನಾನು ನಡೆದುಕೊಳ್ಳಬೇಕು, ಡಿಕೆ ಶಿವಕುಮಾರ್ ಕೂಡ ನಡೆದುಕೊಳ್ಳಬೇಕು” ಎಂದು ಸಿಎಂ ಹೇಳಿದರು.

ಡಿಕೆ ಸುರೇಶ್ ಅವರ ಹೇಳಿಕೆ ಕುರಿತು ಪ್ರಶ್ನೆ ಕೇಳಿದಾಗ, “ಅವರು ಏನು ಹೇಳಿದ್ರು ಅಂದ್ರೆ ಅವರನ್ನೇ ಕೇಳಿ. ನನಗೆ ಯಾಕೆ ಕೇಳ್ತೀರಾ?” ಎಂದು ಅಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆಗಳು ಜೋರಾಗಿರುವ ನಡುವೆಯೇ ಸಿಎಂ ನೀಡಿರುವ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

Trending