Connect with us

ದೇಶ

RAHUL GANDHI ವೇದಿಕೆಯಲ್ಲಿ ಭಾವನಾತ್ಮಕ ಕ್ಷಣ: ರಾಹುಲ್ ಗಾಂಧಿ ಪ್ರತಿಕ್ರಿಯೆ

ಉತ್ತರ ಪ್ರದೇಶ: ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ತಮ್ಮ ಸಂಸದೀಯ ಕ್ಷೇತ್ರ ರಾಯ್ ಬರೇಲಿಗೆ ಭೇಟಿ ನೀಡಿದ್ದ ವೇಳೆ ಭಾವನಾತ್ಮಕ ಕ್ಷಣವೊಂದಕ್ಕೆ ಸಾಕ್ಷಿಯಾದರು. ಅವರ ಅಜ್ಜ, ಮಾಜಿ ಸಂಸದ ಹಾಗೂ ಸ್ವಾತಂತ್ರ್ಯ ಹೋರಾಟಗಾರ ಫಿರೋಜ್ ಗಾಂಧಿಯವರ ಕಳೆದುಹೋದ ಚಾಲನಾ ಪರವಾನಗಿಯನ್ನು ಸ್ಥಳೀಯರು ರಾಹುಲ್ ಗಾಂಧಿಗೆ ಹಸ್ತಾಂತರಿಸಿದರು.

ದಶಕಗಳಿಂದ ಒಂದು ಸ್ಥಳೀಯ ಕುಟುಂಬ ಸಂರಕ್ಷಿಸಿಕೊಂಡಿದ್ದ ಈ ಅಪರೂಪದ ದಾಖಲೆ, ರಾಹುಲ್ ಗಾಂಧಿಯವರ ಲೋಕಸಭಾ ಕ್ಷೇತ್ರದ ಪ್ರವಾಸದ ಎರಡನೇ ದಿನ ಬೆಳಕಿಗೆ ಬಂದಿದೆ. ರಾಯ್ ಬರೇಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಯ ಸಂಘಟನಾ ಸಮಿತಿಯ ಸದಸ್ಯ ವಿಕಸ್ ಸಿಂಗ್ ಅವರು ವೇದಿಕೆಯಲ್ಲಿ ಈ ಪರವಾನಗಿಯನ್ನು ರಾಹುಲ್ ಗಾಂಧಿಗೆ ಹಸ್ತಾಂತರಿಸಿದರು.

ಪರವಾನಗಿ ಸ್ವೀಕರಿಸಿದ ರಾಹುಲ್ ಗಾಂಧಿ ಅದನ್ನು ಬಹಳ ಎಚ್ಚರಿಕೆಯಿಂದ ಪರಿಶೀಲಿಸಿದ್ದು, ತಕ್ಷಣವೇ ಅದರ ಫೋಟೋ ತೆಗೆದು ತಮ್ಮ ತಾಯಿ ಹಾಗೂ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ ವಾಟ್ಸ್‌ಆಪ್ ಮೂಲಕ ಹಂಚಿಕೊಂಡರು. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (MGNREGA) ರದ್ದತಿ ವಿರೋಧಿಸಿ ಪ್ರತಿಭಟನೆಗಳನ್ನು ಮುನ್ನಡೆಸಲು ರಾಯ್ ಬರೇಲಿಗೆ ಆಗಮಿಸಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಫಿರೋಜ್ ಗಾಂಧಿ (1912–1960) ರಾಯ್ ಬರೇಲಿಯ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಮಹತ್ವದ ವ್ಯಕ್ತಿಯಾಗಿದ್ದು, ಭಾರತದ ಮೊದಲ ಎರಡು ಸಾರ್ವತ್ರಿಕ ಚುನಾವಣೆಗಳಲ್ಲಿ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಅವರ ಚಾಲನಾ ಪರವಾನಗಿಯ ಮರಳುವಿಕೆ, ಗಾಂಧಿ ಕುಟುಂಬ ಮತ್ತು ರಾಯ್ ಬರೇಲಿ ಕ್ಷೇತ್ರದ ನಡುವೆ ಆಳವಾಗಿ ಬೇರೂರಿರುವ ಸಂಬಂಧಗಳ ಸಂಕೇತವಾಗಿ ಪರಿಣಮಿಸಿದೆ. ಇದನ್ನು ಸೋನಿಯಾ ಗಾಂಧಿ ಈ ಹಿಂದೆ “ಅದೃಷ್ಟದ ಆನುವಂಶಿಕತೆ” ಎಂದು ಬಣ್ಣಿಸಿದ್ದರು.

ಪತ್ರಕರ್ತ, ಅಸಾಧಾರಣ ಸಂಸದೀಯ ಪಟು ಹಾಗೂ ಭ್ರಷ್ಟಾಚಾರ ವಿರೋಧಿ ಹೋರಾಟಗಾರರಾಗಿದ್ದ ಫಿರೋಜ್ ಗಾಂಧಿ, ತಮ್ಮದೇ ಸರ್ಕಾರದೊಳಗಿನ ಆರ್ಥಿಕ ಹಗರಣಗಳನ್ನು ಲೋಕಸಭೆಯಲ್ಲಿ ಬಹಿರಂಗಪಡಿಸುವ ಮೂಲಕ ವಿಶಿಷ್ಟ ಸ್ಥಾನ ಗಳಿಸಿದ್ದರು.

Continue Reading
Click to comment

Leave a Reply

Your email address will not be published. Required fields are marked *

ಅಪರಾಧ

ಮನುಷ್ಯತ್ವ ಹೂತುಹೋದ ಎಪ್‌ಸ್ಟೀನ್ ದ್ವೀಪ: ಜಗತ್ತಿನ ಎಲೈಟ್‌ಗಳನ್ನು ನಡುಗಿಸುತ್ತಿರುವ ‘ಲೋಲಿಟಾ ಎಕ್ಸ್‌ಪ್ರೆಸ್’ ರಹಸ್ಯ

ನವದೆಹಲಿ/ವಾಷಿಂಗ್ಟನ್:
ಮನುಷ್ಯತ್ವವೇ ಮರಳಲ್ಲಿ ಹೂತುಹೋದ ದ್ವೀಪವೊಂದು ವರ್ಷಗಳ ಕಾಲ ಜಗತ್ತಿನ ಕಣ್ಣು ತಪ್ಪಿಸಿ ಅನಾಚಾರದ ಸ್ವರ್ಗವಾಗಿ ಬೆಳೆದಿತ್ತು. ‘ಲೋಲಿಟಾ ಎಕ್ಸ್‌ಪ್ರೆಸ್’ ಎಂಬ ಖಾಸಗಿ ಜೆಟ್‌ ವಿಮಾನ ದಿನವೂ ಲಿಟಲ್ ಸೇಂಟ್ ಜೇಮ್ಸ್ ದ್ವೀಪಕ್ಕೆ ಹಾರಾಟ ನಡೆಸುತ್ತಿತ್ತು. ಹದಿಹರೆಯದ ಹುಡುಗಿಯರನ್ನು ಲೈಂಗಿಕ ದೌರ್ಜನ್ಯಕ್ಕೆ ಬಲಿಕೊಡುತ್ತಿದ್ದ ಈ ದ್ವೀಪವನ್ನು ಇಂದು ಜಗತ್ತು ‘ಎಪ್‌ಸ್ಟೀನ್ ದ್ವೀಪ’ ಅಥವಾ ‘ಪೆಡೋಪೈಲ್ ಐಲ್ಯಾಂಡ್’ ಎಂದೇ ಕರೆಯುತ್ತಿದೆ.

1998ರಲ್ಲಿ ಅಮೆರಿಕದ ಶತಕೋಟ್ಯಧಿಪತಿ ಜೆಫ್ರಿ ಎಪ್‌ಸ್ಟೀನ್ 8 ಮಿಲಿಯನ್ ಡಾಲರ್ ನೀಡಿ ಖರೀದಿಸಿದ 71 ಎಕರೆ ವಿಸ್ತೀರ್ಣದ ಈ ದ್ವೀಪದಲ್ಲಿ ಐಷಾರಾಮಿ ರೆಸಾರ್ಟ್‌ಗಳು, ವಿಲ್ಲಾಗಳು, ಹೆಲಿಪ್ಯಾಡ್‌ಗಳು ನಿರ್ಮಾಣವಾಗಿದ್ದವು. ಹೊರಜಗತ್ತಿನಿಂದ ಸಂಪೂರ್ಣ ಕಡಿದುಹಾಕಲ್ಪಟ್ಟ ಈ ಪ್ರದೇಶದಲ್ಲಿ ನೂರಾರು ಅಪ್ರಾಪ್ತ ಬಾಲಕಿಯರನ್ನು ಬಂಧಿಸಿ, ಜಗತ್ತಿನ ಎಲೈಟ್‌ಗಳಿಗೆ ಪೂರೈಸಲಾಗುತ್ತಿತ್ತು ಎಂಬ ಆರೋಪಗಳು ತನಿಖೆಯಲ್ಲಿ ಬಹಿರಂಗವಾದವು.

2005ರಲ್ಲಿ ಫ್ಲೋರಿಡಾದ 14 ವರ್ಷದ ಬಾಲಕಿಯ ತಾಯಿಯೊಬ್ಬರು ನೀಡಿದ ದೂರು ಈ ಮಹಾ ಲೈಂಗಿಕ ಹಗರಣದ ಮೊದಲ ಕಿಡಿಯಾಗಿತ್ತು. ಬಳಿಕ 50ಕ್ಕೂ ಹೆಚ್ಚು ಅಪ್ರಾಪ್ತೆಯರು ದೂರು ದಾಖಲಿಸಿದರು. 2008ರಲ್ಲಿ ಎಪ್‌ಸ್ಟೀನ್ ತಪ್ಪಿತಸ್ಥನಾಗಿದ್ದರೂ, ಕೇವಲ 13 ತಿಂಗಳ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. 2019ರಲ್ಲಿ ಪುನಃ ಮಕ್ಕಳ ಕಳ್ಳಸಾಗಣೆ ಆರೋಪದ ಮೇಲೆ ಬಂಧನಕ್ಕೊಳಗಾದ ಎಪ್‌ಸ್ಟೀನ್, ವಿಚಾರಣೆಗೆ ಮುನ್ನವೇ ಜೈಲಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಅಮೆರಿಕ ಸರ್ಕಾರ ಘೋಷಿಸಿತು. ಆದರೆ, ಈ ಸಾವಿನ ಸುತ್ತ ಇನ್ನೂ ಹಲವು ಅನುಮಾನಗಳಿವೆ.

ಜನವರಿ 30ರಂದು ಅಮೆರಿಕದ ನ್ಯಾಯಾಂಗ ಇಲಾಖೆ ಬಿಡುಗಡೆ ಮಾಡಿದ ಸುಮಾರು 30 ಲಕ್ಷ ಪುಟಗಳ ದಾಖಲೆಗಳು ಜಗತ್ತನ್ನೇ ಬೆಚ್ಚಿಬೀಳುವಂತೆ ಮಾಡಿವೆ. ರಾಜಕೀಯ ನಾಯಕರು, ಬಿಲಿಯನೇರ್‌ಗಳು, ರಾಜಮನೆತನದವರು, ವಿಜ್ಞಾನಿಗಳು, ಉದ್ಯಮಿಗಳೆಂದರೆ ಯಾರೂ ಹೊರತಲ್ಲ. 80ಕ್ಕೂ ಹೆಚ್ಚು ಪ್ರಭಾವಿ ವ್ಯಕ್ತಿಗಳು ತನಿಖೆಗೆ ಒಳಗಾಗಿದ್ದು, ಯುರೋಪ್‌ನ ಹಲವೆಡೆ ರಾಜೀನಾಮೆ ಅಲೆ ಎದ್ದಿದೆ.

ಆದರೆ, ಎಪ್‌ಸ್ಟೀನ್ ಫೈಲ್‌ನಲ್ಲಿ ಹೆಸರು ಕಾಣಿಸಿಕೊಂಡ ಮಾತ್ರಕ್ಕೆ ಅಪರಾಧ ಸಾಬೀತಾಗುವುದಿಲ್ಲ ಎಂದು ಅಮೆರಿಕದ ನ್ಯಾಯಾಲಯ ಸ್ಪಷ್ಟಪಡಿಸಿದೆ. ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಫೋಟೊ, ವಿಡಿಯೋ ಅಥವಾ ಹಣಕಾಸು ದಾಖಲೆಗಳಿದ್ದಾಗ ಮಾತ್ರ ಕಾನೂನು ಕ್ರಮ ಸಾಧ್ಯವೆಂದು ಹೇಳಿದೆ.

ಈ ಎಲ್ಲದ ನಡುವೆ, ಈ ಮಹಾ ಹಗರಣದ ನಿಜವಾದ ಬಲಿಪಶುಗಳು ನೂರಾರು ಅಪ್ರಾಪ್ತ ಬಾಲಕಿಯರು ಎಂಬ ಸತ್ಯ ಮಾತ್ರ ಬದಲಾಗಿಲ್ಲ. ಅಧಿಕಾರ, ಹಣ ಮತ್ತು ಪ್ರಭಾವದ ಅಡ್ಡೆಗೋಡೆಯ ಹಿಂದೆ ನಡೆದ ಈ ಅಮಾನುಷ ಕೃತ್ಯಗಳು ಇಂದು ಜಗತ್ತಿನ ಅಂತರಾತ್ಮವನ್ನೇ ಪ್ರಶ್ನಿಸುತ್ತಿವೆ.

Continue Reading

ದೇಶ

ನಟ ಯಶ್ ಅಭಿನಯದ ‘ಟಾಕ್ಸಿಕ್’ ಸಿನಿಮಾಗೆ ಮತ್ತೊಂದು ಸಂಕಷ್ಟ: ಕ್ರೈಸ್ತ ಧರ್ಮಕ್ಕೆ ಅಪಮಾನ ಆರೋಪ, ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ದೂರು

ಬೆಂಗಳೂರು: ನಟ ಯಶ್ (Yash) ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ (Toxic Cinema) ಚಿತ್ರಕ್ಕೆ ಒಂದರ ಮೇಲೊಂದು ವಿವಾದಗಳು ಎದುರಾಗುತ್ತಿವೆ. ಕೆಲ ದಿನಗಳ ಹಿಂದೆ ಟೀಸರ್‌ನಲ್ಲಿನ ಅಶ್ಲೀಲ ದೃಶ್ಯಗಳನ್ನು ಖಂಡಿಸಿ ಮಹಿಳಾ ಒಕ್ಕೂಟಗಳು ಆಕ್ರೋಶ ವ್ಯಕ್ತಪಡಿಸಿದ್ದರೆ, ಇದೀಗ ರಾಷ್ಟ್ರೀಯ ಕ್ರೈಸ್ತರ ಒಕ್ಕೂಟ ಚಿತ್ರತಂಡದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ಟಾಕ್ಸಿಕ್ ಸಿನಿಮಾದ ಕೆಲವು ದೃಶ್ಯಗಳಲ್ಲಿ ಕ್ರೈಸ್ತ ಧರ್ಮಕ್ಕೆ ಅಪಮಾನ ಮಾಡಲಾಗಿದೆ ಹಾಗೂ ಕ್ರೈಸ್ತ ಸಮುದಾಯಕ್ಕೆ ಮುಜುಗರ ಉಂಟುಮಾಡಲಾಗಿದೆ ಎಂದು ಆರೋಪಿಸಿ ನ್ಯಾಷನಲ್ ಕ್ರಿಶ್ಚಿಯನ್ ಫೆಡರೇಷನ್ (National Christian Federation) ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಗೃಹಸಚಿವರು ಹಾಗೂ ಸೆನ್ಸಾರ್ ಬೋರ್ಡ್‌ಗೆ ದೂರು ಸಲ್ಲಿಸಿದೆ. ಕ್ರೈಸ್ತರ ದೇವದೂತ ಸಂತ ಮಿಕಯೇಲ್‌ ಅವರಿಗೆ ಸಂಬಂಧಿಸಿದ ದೃಶ್ಯಗಳಲ್ಲಿ ಅವಮಾನಕಾರಿ ಹಾಗೂ ಅಶ್ಲೀಲ ಚಿತ್ರೀಕರಣ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ರಾಷ್ಟ್ರೀಯ ಕ್ರೈಸ್ತರ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುಮಾರ್, ಯೂಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿರುವ ಆ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ. ಜೊತೆಗೆ ಸಿನಿಮಾದಲ್ಲಿಯೂ ಸಂತ ಮಿಕಯೇಲ್‌ ಮುಂದೆ ಚಿತ್ರೀಕರಿಸಿರುವ ದೃಶ್ಯಗಳನ್ನು ತೆಗೆದುಹಾಕಿ, ಕ್ರೈಸ್ತ ಸಮುದಾಯದ ಬಳಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಈ ಬೇಡಿಕೆಗಳನ್ನು ಈಡೇರಿಸದಿದ್ದರೆ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಇದಕ್ಕೂ ಮುನ್ನ ಟಾಕ್ಸಿಕ್ ಟೀಸರ್‌ನಲ್ಲಿನ ಕೆಲವು ದೃಶ್ಯಗಳು ಮಹಿಳೆಯರು ಮತ್ತು ಮಕ್ಕಳ ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟುಮಾಡುತ್ತಿವೆ ಎಂದು ಆರೋಪಿಸಿ ಮಹಿಳಾ ಒಕ್ಕೂಟಗಳು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದವು. ಟೀಸರ್‌ನ ವಿವಾದಾತ್ಮಕ ದೃಶ್ಯಗಳನ್ನು ತೆಗೆದುಹಾಕುವಂತೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರಿಗೆ ಮನವಿ ಮಾಡಲಾಗಿತ್ತು.

ಒಟ್ಟಾರೆ, ಬಿಡುಗಡೆಗೂ ಮುನ್ನವೇ ‘ಟಾಕ್ಸಿಕ್’ ಸಿನಿಮಾ ಭಾರೀ ವಿವಾದದ ಕೇಂದ್ರಬಿಂದುವಾಗಿದ್ದು, ಮುಂದಿನ ದಿನಗಳಲ್ಲಿ ಈ ವಿವಾದ ಯಾವ ತಿರುವು ಪಡೆಯಲಿದೆ ಎಂಬುದರ ಮೇಲೆ ಚಿತ್ರತಂಡದ ನಡೆ ಮಹತ್ವ ಪಡೆದುಕೊಂಡಿದೆ.

Continue Reading

ದೇಶ

ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಮಾಡಬೇಕು: ರಾಷ್ಟ್ರೀಯ ಅಹಿಂದ ಸಂಘಟನೆ ಆಗ್ರಹ

ಬೆಂಗಳೂರು, ಫೆ.10: ಶೋಷಿತರು, ಹಿಂದುಳಿದ ವರ್ಗಗಳು, ದಲಿತರು ಹಾಗೂ ಅಹಿಂದ ಸಮುದಾಯದ ಹಕ್ಕುಗಳಿಗಾಗಿ ನಿರಂತರವಾಗಿ ಧ್ವನಿ ಎತ್ತುತ್ತಿರುವ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ತಕ್ಷಣವೇ ರಾಜ್ಯ ಸಂಪುಟಕ್ಕೆ ಸೇರಿಸಿ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ರಾಷ್ಟ್ರೀಯ ಅಹಿಂದ ಸಂಘಟನೆ ಸರ್ಕಾರವನ್ನು ಒತ್ತಾಯಿಸಿದೆ. ರಾಷ್ಟ್ರೀಯ ಅಹಿಂದ ಸಂಘಟನೆಯ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ ಹಾಗೂ ಕರ್ನಾಟಕ ರಾಜ್ಯ ಒಬಿಸಿ ಘಟಕದ ಅಧ್ಯಕ್ಷ ಮೋಹನ್ ಕುಮಾರ್ ಅವರ ನೇತೃತ್ವದಲ್ಲಿ ಈ ಬೇಡಿಕೆ ಮುಂದಿಡಲಾಗಿದೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾಯಕರು, ಬಿ.ಕೆ. ಹರಿಪ್ರಸಾದ್ ಅವರು ಕೇವಲ ರಾಜಕೀಯ ನಾಯಕನಲ್ಲ, ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದಾರೆ ಎಂದು ಬಣ್ಣಿಸಿದರು. ಜಾತಿ ಗಣತಿಯಂತಹ ಸಂವೇದನಾಶೀಲ ಹಾಗೂ ಐತಿಹಾಸಿಕ ಮಹತ್ವದ ವಿಷಯದಲ್ಲಿ ಹಿಂದುಳಿದ ವರ್ಗಗಳು, ಅಲ್ಪಸಂಖ್ಯಾತರು ಮತ್ತು ಶೋಷಿತ ಸಮುದಾಯಗಳ ಪರವಾಗಿ ಅವರು ದಿಟ್ಟ ನಿಲುವು ತಳೆದಿದ್ದಾರೆ ಎಂದು ಹೇಳಿದರು. ಸಮಾನತೆ, ಸಾಮಾಜಿಕ ನ್ಯಾಯ ಹಾಗೂ ಸಂವಿಧಾನದ ಮೌಲ್ಯಗಳನ್ನು ರಾಜಕೀಯದ ಕೇಂದ್ರಬಿಂದುವಾಗಿಸಿಕೊಂಡು ನಡೆಸಿರುವ ಅವರ ಹೋರಾಟ ಅಹಿಂದ ಚಳವಳಿಗೆ ಹೊಸ ಬಲ ನೀಡಿದೆ ಎಂದು ಅಭಿಪ್ರಾಯಪಟ್ಟರು.

ಹಿಂದುಳಿದ ವರ್ಗದ ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ಅವರ ಆಡಳಿತಕ್ಕೆ ರಾಜಕೀಯ ಹಾಗೂ ನೈತಿಕವಾಗಿ ಬಲ ತುಂಬಿದ ನಾಯಕರಲ್ಲಿ ಬಿ.ಕೆ. ಹರಿಪ್ರಸಾದ್ ಪ್ರಮುಖರು ಎಂದು ಹೇಳಿದರು. ಪಕ್ಷದ ಒಳಗೂ ಹೊರಗೂ ಅಹಿಂದ ಧ್ವನಿಯನ್ನು ಸ್ಪಷ್ಟವಾಗಿ ಪ್ರತಿನಿಧಿಸಿರುವ ಇಂತಹ ನಾಯಕನನ್ನು ಸಂಪುಟಕ್ಕೆ ಸೇರಿಸುವುದರಿಂದ ಸರ್ಕಾರದ ವಿಶ್ವಾಸಾರ್ಹತೆ ಇನ್ನಷ್ಟು ಹೆಚ್ಚಲಿದೆ ಎಂದರು.

ಬಿ.ಕೆ. ಹರಿಪ್ರಸಾದ್ ಅವರು ಸಂಪುಟ ಸೇರಿದ್ದಲ್ಲಿ ಅಹಿಂದ ಸಂಘಟನೆಗಳಿಗೆ ಹೊಸ ಶಕ್ತಿ ಸಿಗಲಿದೆ. ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಭೆಗಳು, ಚರ್ಚೆಗಳು ಹಾಗೂ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ನಾಯಕರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಬಿ. ಶಿವಣ್ಣ ಸೇರಿದಂತೆ ಅಹಿಂದ ಕಾರ್ಯಕರ್ತರು ಮತ್ತು ಬಿ.ಕೆ. ಹರಿಪ್ರಸಾದ್ ಬೆಂಬಲಿಗರು ಉಪಸ್ಥಿತರಿದ್ದರು.

Continue Reading

Trending