ರಾಜಕೀಯ
ಕೋಮು ದ್ವೇಷ ಭಾಷಣ ಮಾಡಿದ ಮಾಜಿ ಸಚಿವ ಕೆಎಸ್ ಈಶ್ವರಪ್ಪ ವಿರುದ್ಧ ಸುಮೊಟೋ ಕೇಸ್ ದಾಖಲು
ಶಿವಮೊಗ್ಗ: ಪ್ರಚೋದನಕಾರಿ ಭಾಷಣ ಮಾಡಿ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಶಿವಮೊಗ್ಗದ ಜಯನಗರ ಠಾಣೆ ಪೊಲೀಸರಿಂದ ಸುಮೋಟೋ ಪ್ರಕರಣ ದಾಖಲಾಗಿದ್ದು, ಪ್ರಚೋದನಕಾರಿ ಭಾಷಣ ಮಾಡಿ ಕೋಮು ಭಾವನೆ ಕೆರಳಿಸಿದ್ದಾರೆಂದು ಆರೋಪಿಸಲಾಗಿದೆ. ಬಿಜೆಪಿಯ ಪ್ರತಿಭಟನಾ ಸಭೆಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಕೋಮು ಸೌಹಾರ್ಧಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಕ್ಕಾಗಿ ಐಪಿಸಿ ಸೆಕ್ಷನ್ 153 ಎ ಮತ್ತು 504 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ರಾಜ್ಯ ಸರ್ಕಾರದ ಹಿಂದೂ ವಿರೋಧಿ ನೀತಿಯ ವಿರುದ್ಧ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ತಮ್ಮ ಭಾಷಣದಲ್ಲಿ, ಹಿಂದೂ ಸಮಾಜ ಇವತ್ತಿನ ತನಕ ಕಾನೂನನ್ನು ಕೈಗೆ ತೆಗೆದುಕೊಂಡಿಲ್ಲ. ಹರ್ಷನ ಕೊಲೆಯಾದಾಗ ನಾವು ಲಾಂಗು, ಮಚ್ಚುಗಳನ್ನು ಹಿಡಿದುಕೊಂಡು ಮುಸಲ್ಮಾನರ ಬೀದಿಗಳಿಗೆ ಹೋಗಿದ್ದರೆ ಮಾರಿ ಜಾತ್ರೆಯಲ್ಲಿ ಕುರಿ ಕಡಿದು ಹಾಕಿದಂಗೆ ಕಡಿದು ಹಾಕಿ ಬಿಡುತ್ತಿದ್ದೆವು, ಆದರೆ ನಾವು ಆ ರೀತಿ ಮಾಡಲಿಲ್ಲ ಎಂದು ಹೇಳಿದ್ದರು.