ಸಿನಿಮಾ

Operation Leopard: ಕೊನೆಗೂ ಪತ್ತೆಯಾದ ಚಿರತೆ ಆದರೆ, ವೈದ್ಯರ ಮೇಲೆ ದಾಳಿ ಮಾಡಿ ಎಸ್ಕೇಪ್

Operation Leopard: ಕೊನೆಗೂ ಪತ್ತೆಯಾದ ಚಿರತೆ ಆದರೆ, ವೈದ್ಯರ ಮೇಲೆ ದಾಳಿ ಮಾಡಿ ಎಸ್ಕೇಪ್

ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಇರುವ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದಲ್ಲಿರುವ ಪಾಳು ಬಿದ್ದ ಕಟ್ಟಡದಲ್ಲಿ ಕಾಣಿಸಿಕೊಂಡ ಚಿರತೆ ಕೊನೆಗೂ ಪತ್ತೆಯಾಗಿದೆ. ಆದರೆ, ಅದು ಅರಿವಳಿಕೆ ನೀಡಲು ಹೋದ ವೈದ್ಯಾಧಿಕಾರಿಗಳಿಗೆ ದಾಳಿ ಮಾಡಿ ಗಾಯಗೊಳಿಸಿ, ಬಳಿಕ ಅಲ್ಲಿಂದ ತಪ್ಪಿಸಿಕೊಂಡಿದೆ.
ಈ ಮೂಲಕ ಕಳೆದ ಮೂರು ದಿನಗಳಿಂದ ಈ ಭಾಗದಲ್ಲಿ ಭಾರಿ ಆತಂಕ ಮೂಡಿಸಿದ್ದ ಚಿರತೆಯನ್ನು ಸೆರೆ ಹಿಡಿಯುವ ಅರಣ್ಯ ಅಧಿಕಾರಿಗಳ ಕಾರ್ಯಾಚರಣೆ ಅಲ್ಪ ಯಶಸ್ಸನ್ನು ಪಡೆದಿದೆ. ಆದರೆ, ಇದು ಮುಂದುವರಿಯಲಿದ್ದು ಇಂದೇ ಪತ್ತೆಯಾಗುವ ಸಾಧ್ಯತೆ ಇದೆ. ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ಪರಾರಿಯಾಗುತ್ತಿದೆ.ಕೂಡ್ಲು ಸಮೀಪದ ಕೃಷ್ಣಾರೆಡ್ಡಿ ಬಡಾವಣೆಯಲ್ಲಿ ಕಳೆದ ಭಾನುವಾರ ರಾತ್ರಿ ಚಿರತೆಯೊಂದು ಓಡಾಡಿತ್ತು. ರಾತ್ರಿ 11 ಗಂಟೆಗೆ ಕಾಂಪೌಂಡ್ ಗೋಡೆ ಜಿಗಿದು ಓಡಿದ್ದನ್ನು ಪರಪ್ಪನ ಅಗ್ರಹಾರ ಲಾ ಆ್ಯಂಡ್ ಆರ್ಡರ್ ಪೊಲೀಸರು ಗಮನಿಸಿದ್ದರು. ಮರುದಿನ ಗಮನಿಸುವಾಗ ಅಲ್ಲಿ ಚಿರತೆಯ ಹೆಜ್ಜೆಗಳು ಪತ್ತೆಯಾಗಿತ್ತು. ಕಡೆಂಜಾ ಅಪಾರ್ಟ್‌ಮೆಂಟ್‌ನಲ್ಲಿ ಮಧ್ಯಾಹ್ನದ ಹೊತ್ತಿಗೇ ಚಿರತೆ ಮೆಟ್ಟಿಲು ಹತ್ತಿ ಹೋಗುವುದು ಸಿಸಿ ಟಿವಿಯಲ್ಲಿ ದಾಖಲಾಗಿತ್ತು.ಈ ಎಲ್ಲ ಘಟನಾವಳಿಗಳ ಹಿನ್ನೆಲೆಯಲ್ಲಿ ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆಗೆ ಇಳಿದ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಂದು ದಿನವಾದರೂ ಚಿರತೆಯನ್ನು ಪತ್ತೆ ಹಚ್ಚಲು ಸಾಧ್ಯವಾಗಿರಲಿಲ್ಲ. ಈ ನಡುವೆ ಮಂಗಳವಾರ ಸಂಜೆ ಥರ್ಮಲ್ ತಂತ್ರಜ್ಞಾನದ ಡ್ರೋಣ್ ಮೂಲಕ ಕಾರ್ಯಾಚರಣೆ ನಡೆಸಿದ್ದರೂ ಸಿಕ್ಕಿರಲಿಲ್ಲ. ಮೂರನೇ ದಿನದ ಕಾರ್ಯಾಚರಣೆಗೆ ಹುಣಸೂರಿನಿಂದ ವನ್ಯ ಜೀವಿ ರಕ್ಷಣಾ ತಂಡ ಆಗಮಿಸಿತ್ತು. ಜತೆಗೆ ವನ್ಯ ಜೀವಿ ಸಂರಕ್ಷಣಾ ವಿಭಾಗದ ಶಾರ್ಪ್ ಶೂಟರ್ಸ್ ಕೂಡಾ ಬಂದಿದ್ದರು.ಸಾಮಾನ್ಯವಾಗಿ ಯಾವುದೇ ಪ್ರಾಣಿಗೆ ಅರವಳಿಕೆ ಮದ್ದು ನೀಡಬೇಕಾದ್ರೆ ಹೆಚ್ಚು ಮಾಂಸ ಇರುವ ಸ್ಥಳ ನೋಡಿ ಹೊಡೆಯಬೇಕು. ಆದರೆ, ಅರಿವಳಿಕೆ ಹಾಕುವ ಪ್ರಯತ್ನದಲ್ಲಿ ವೈದ್ಯರು ವಿಫಲವಾಗಿದ್ದಾರೆ. ಎರಡು ಬಾರಿ ಅರವಳಿಕೆ ಮದ್ದು ಹೊಡೆದರೂ ಸರಿಯಾದ ಜಾಗಕ್ಕೆ ಬಿದ್ದಿರಲಿಲ್ಲ ಎನ್ನಲಾಗಿದೆ. ಎರಡನೇ ಬಾರಿ ಹೊಡೆದ ಅರಿವಳಿಕೆ ಯಶಸ್ವಿಯಾಗಿದೆ ಎಂದು ತಿಳಿದು ಡಾ. ಕಿರಣ್‌ ಅವರು ಪರಿಶೀಲನೆಗೆ ಮುಂದಾಗಿದ್ದರು ಎನ್ನಲಾಗಿದೆ. ಅಷ್ಟರಲ್ಲಿ ಚಿರತೆ ಕಿರಣ್ ಮೇಲೆ ದಾಳಿ ಮಾಡಿ ಎಸ್ಕೇಪ್ ಆಗಿದೆ. ಕುತ್ತಿಗೆ ಭಾಗ ಮತ್ತು ಕೈಗೆ ಪರಚಿ ಎಸ್ಕೇಪ್ ಆಗಿದೆ. ಓಡುವ ಭರದಲ್ಲಿ ಇನ್ನಿಬ್ಬರ ಮೇಲೆಯೂ ದಾಳಿ ಮಾಡಿದೆ.

Trending

Exit mobile version