ಚುನಾವಣೆ

ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ’: ಡಿ ಕೆ ಶಿವಕುಮಾರ್

ಬೆಂಗಳೂರು: ಕೋಲಾರ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ಕಗ್ಗಂಟಾಗಿದೆ. ನಿನ್ನೆ ರಾಜಧಾನಿ ಬೆಂಗಳೂರಿನಲ್ಲಿ ಕೋಲಾರ ಕಾಂಗ್ರೆಸ್ ನಾಯಕರು ಬಂದು ವಿಧಾನಸೌಧದಲ್ಲಿ ರಾಜಕೀಯ ಹೈಡ್ರಾಮವೇ ನಡೆದಿತ್ತು.

ಸಚಿವ ಕೆಹೆಚ್​ ಮುನಿಯಪ್ಪ ಸಂಬಂಧಿಕರಿಗೆ ಟಿಕೆಟ್ ನೀಡುವುದನ್ನು ವಿರೋಧಿಸಿ ಐವರು ಶಾಸಕರು ಮತ್ತು ಇಬ್ಬರು ವಿಧಾನ ಪರಿಷತ್ ಸದಸ್ಯರು ರಾಜೀನಾಮೆ ನೀಡುವ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಇಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಡಿಸಿಎಂ ಡಿ ಕೆ ಶಿವಕುಮಾರ್‌ ಅವರು ಪ್ರತಿಕ್ರಿಯಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮ ಪ್ರತಿನಿಧಿಗಳ ಜೊತೆ ಅವರು ಮಾತನಾಡಿ, ಕೋಲಾರದಲ್ಲಿ ಎಲ್ಲಾ ನಾಯಕರು ಒಟ್ಟಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕೆಲಸ ಮಾಡಲಿದ್ದಾರೆ. ಯಾರ ವೈಯಕ್ತಿಕ ಪ್ರತಿಷ್ಠೆಗೂ ಪಕ್ಷದಲ್ಲಿ ಅವಕಾಶ ನೀಡುವುದಿಲ್ಲ ಎಂದು ಹೇಳಿದರು. ಯಾರೂ ರಾಜೀನಾಮೆ ನೀಡಲ್ಲ. ಟಿಕೆಟ್ ವಿಚಾರವಾಗಿ ಒತ್ತಡ ಇದೆ. ಪಕ್ಷ ಇದುವರೆಗೂ ಯಾರಿಗೂ ಟಿಕೆಟ್ ಘೋಷಣೆ ಮಾಡಿಲ್ಲ. ಇಂದು ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಚರ್ಚೆ ಮಾಡಲಾಗುವುದು ಎಂದು ತಿಳಿಸಿದರು.

ಇಂದು ಸಿಎಂ ನೇತೃತ್ವದಲ್ಲಿ ಸಭೆ: ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೋಲಾರ ಕ್ಷೇತ್ರದ ಟಿಕೆಟ್ ಹಂಚಿಕೆ ಸಂಬಂಧ ಸಭೆ ನಡೆಸಲಿದ್ದು ಸಮಸ್ಯೆಗೆ ತೆರೆ ಎಳೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಸಭೆಯಲ್ಲಿ ಕೋಲಾರ ಜಿಲ್ಲೆಯ ಕಾಂಗ್ರೆಸ್ ನಾಯಕರು, ಡಿಸಿಎಂ ಡಿ ಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ತಯಾರಿ ಕುರಿತ ಪ್ರಶ್ನೆಗೆ ಉತ್ತರಿಸಿ, “ಇಂದು ಡಿ.ಕೆ. ಸುರೇಶ್ ಅವರಿಗೆ ಬಿ ಫಾರಂ ನೀಡಿ, ನಮ್ಮ ಮನೆ ದೇವರು ಕೆಂಕೇರಮ್ಮ, ಕಬ್ಬಾಳಮ್ಮ, ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿ ರಾಮನಗರದಲ್ಲಿ ಮುಖ್ಯಮಂತ್ರಿಗಳ ಜತೆಗೂಡಿ ಕಾರ್ಯಕರ್ತರ ಸಭೆ ಮಾಡಿ ನಂತರ ಸುರೇಶ್ ಅವರ ನಾಮಪತ್ರ ಸಲ್ಲಿಸಲಾಗುವುದು ಎಂದರು.

ನಾವು ಕೇವಲ ಇಂದು ಚುನಾವಣೆ ತಯಾರಿ ಮಾಡುತ್ತಿಲ್ಲ. ಸುರೇಶ್ ಅವರು ಗೆದ್ದ ಮೊದಲ ದಿನದಿಂದ ಪ್ರತಿ ನಿತ್ಯ ಕೆಲಸ ಮಾಡಿಕೊಂಡೆ ಬಂದಿದ್ದಾರೆ. ಕೋವಿಡ್ ಸಮಯದಲ್ಲಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ದೇಹವನ್ನು ಅವರ ತವರೂರಿಗೆ ತರಲು ಬಿಜೆಪಿ ಕೇಂದ್ರ ಸರ್ಕಾರ ಅವಕಾಶ ನೀಡಲಿಲ್ಲ. ಸುರೇಶ್ ಅವರು ಕೋವಿಡ್ ಕಷ್ಟಕಾಲದಲ್ಲಿ ರೈತರಿಂದ ಹಣ್ಣು ತರಕಾರಿ ಖರೀದಿ ಮಾಡಿ ಜನರಿಗೆ ಉಚಿತವಾಗಿ ಹಂಚಿದರು. ಜನರಿಗೆ ಮೆಡಿಕಲ್ ಕಿಟ್ ನೀಡಿ ಸಹಾಯ ಮಾಡಿದರು. ಸರ್ಕಾರ ಶವಗಳನ್ನು ಜೆಸಿಬಿಯಲ್ಲಿ ಎಸೆಯುತ್ತಿರುವಾಗ, ಕೋವಿಡ್ ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೆ ಅವರ ಮನೆಯವರು ಮುಂದೆ ಬಾರದಿದ್ದಾಗ ಡಿ.ಕೆ ಸುರೇಶ್ ಪಿಪಿಇ ಕಿಟ್ ಧರಿಸಿ ಶವಗಳ ಅಂತ್ಯ ಸಂಸ್ಕಾರ ಮಾಡಿದರು.

Trending

Exit mobile version