Connect with us

ಬೆಂಗಳೂರು

ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧ, ಬಿಜೆಪಿ-ಜೆಡಿಎಸ್‌ನಿಂದ ನನ್ನ ತೇಜೋವಧೆ ಯತ್ನ: ಸಿದ್ದರಾಮಯ್ಯ – CM Siddaramaiah

Published

on

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇಂದು ವಿಧಾನಸೌಧದಲ್ಲಿ ದಾಖಲೆ ಸಮೇತವಾಗಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿಎಂ, ಬಿಜೆಪಿ-ಜೆಡಿಎಸ್ ರಾಜಕೀಯವಾಗಿ ಹತಾಶರಾಗಿದ್ದಾರೆ. ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಾರೆ. ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದನ್ನು ಸಹಿಸಲು ಆಗುತ್ತಿಲ್ಲ.‌ ಕಲಾಪದ ಎರಡು ವಾರಗಳು ಒಂದೇ ವಿಚಾರ ಪ್ರಸ್ತಾಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರ ಬಿಟ್ಟರೆ ರಾಜ್ಯದ ಸಮಸ್ಯೆ ಬಗ್ಗೆ ಚಕಾರ ಎತ್ತಿಲ್ಲ. ಪ್ರವಾಹದ ಬಗ್ಗೆ ವಿಪಕ್ಷಗಳು ಯಾರೂ ಮಾತನಾಡಿಲ್ಲ. ಇದನ್ನೆಲ್ಲಾ ನೋಡಿದರೆ ಸಿಎಂ, ರಾಜ್ಯ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶ ಇದೆ ಅನ್ನಿಸುತ್ತೆ. ಇದು ಕಾನೂನುಬದ್ಧವಾಗಿದೆ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನ. ಬಿಜೆಪಿ-ಜೆಡಿಎಸ್ ಗೆ ಎರಡನೇ ಸರಿ ಸಿಎಂ ಆಗುವುದನ್ನು ಸಹಿಸಲು ಆಗುತ್ತಿಲ್ಲ ಎಂದರು.

ಶಾಸಕನಾಗಿ, ಮಂತ್ರಿಯಾಗಿ, ಸಿಎಂ ಆಗಿ ಸುಮಾರು 40 ವರ್ಷಗಳ ಕಾಲ ರಾಜಕೀಯದಲ್ಲಿದ್ದೇನೆ. ಇಂದಿನವರೆಗೆ ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಬಿಜೆಪಿ-ಜೆಡಿಎಸ್ ದ್ವೇಷದಿಂದ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅವರು ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿದರೂ ಹೆಚ್ಚು ಸ್ಥಾನ ಗೆಲ್ಲಲು ಆಗಿಲ್ಲ. ಜನರ ವಿಶ್ವಾಸ ಗಳಿಸಲು ಅವರು ವಾಮಮಾರ್ಗ ಬಳಸುತ್ತಿದ್ದಾರೆ ಎಂದು ಟೀಕಿಸಿದರು.

2-8-1935ರಲ್ಲಿ ಜವರನ ಮಗ ನಿಂಗ ಎನ್ನುವವರು ಮೈಸೂರು ತಾಲೂಕು ಕಚೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ. 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದಾರೆ. 3-10-1935 ರಂದು ಹರಾಜು ನಡೆಸಲಾಗುವುದೆಂದು ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲಾಗಿದೆ. ಹರಾಜು ನಡೆಸಿದ ಮೇಲೆ ಈ ರೀತಿ ದಾಖಲು ಮಾಡಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಜಮೀನನ್ನು ಹರಾಜು ಮಾಡಿಸಲಾಯ್ತು. 1 ರೂಪಾಯಿಗೆ ನಿಂಗ ಬಿನ್ ಜವರಗೆ ಹರಾಜು ಮಾಡಲಾಯ್ತು ಎಂದು ತಿಳಿಸಿದರು.

ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಸ್ವಯಾರ್ಜಿತ ಜಮೀನಾಗಿರುವುದರಿಂದ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.

10-4-1993 ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಅದರ ಪ್ರಕಾರ ನಿಂಗ ಬಿನ್ ಜವರ ಇವರಿಗೆ ಮೂರು ಜನ ಮಕ್ಕಳು. ಮೊದಲನೆ ಮಲ್ಲಯ್ಯ, ಎರಡನೆ ಮೈಲಾರಯ್ಯ ಮತ್ತು ಮೂರನೆ ಜೆ. ದೇವರಾಜು. ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಎರಡನೆ ಮೈಲಾರಯ್ಯ ಇವರಿಗೆ ಮಂಜುನಾಥಸ್ವಾಮಿ ಎಂ ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ. 3ನೆಯವರು ದೇವರಾಜು ಎನ್ನುವವರು ಎಂದು ವಿವರಿಸಿದರು.

ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ ಮಂಜುನಾಥಸ್ವಾಮಿ ಇವರುಗಳು ಸಹಿ ಮಾಡಿದ್ದಾರೆ. ಮೈಸೂರು ತಾಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ. 464ರ 3-16 ಈ ಜಮೀನುಗಳಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಬಿನ್ ಜವರ ಅವರ ಮೂರನೆ ಮಗ ಜೆ.ದೇವರಾಜು ನಮೂನೆ 19ರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಜಮೀನು ನಿಂಗ ಬಿನ್ ಜವರ ಅವರಿಗೆ ಸೇರಿದ್ದು, ಅವರು ಫೌತಿಯಾಗಿ ನಮಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ. ಈಗಾಗಲೆ ನಾವು ಸರ್ವೆ ನಂ. 462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರರಾದ ಜೆ. ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮ ತಕರಾರು ಏನೂ ಇರುವುದಿಲ್ಲವೆಂದು ಸಹಿ ಹಾಕಿದ್ದರು ಎಂದು ತಿಳಿಸಿದರು.

ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ. ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿಜೆಪಿಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಂಧಪಟ್ಟಿದ್ದಲ್ಲ. ಸದರಿ ಜಮೀನುಗಳನ್ನು ಭೂಸ್ವಾಧೀನ ಮಾಡಲು 18-09-1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿಲ್ಲ. ಆಗ, ಜಿ.ದೇವರಾಜು 13-08-1996 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ. ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 20-08-1997 ರಂದು. ಅದಕ್ಕೂ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಇವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ ಎಂದು ವಿವರಿಸಿದರು.

ಮುಡಾದಲ್ಲಿ 24-07-1997 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. 30-08-1997ರಂದು ಸದರಿ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರ್ಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಸದರಿ ಶಿಫಾರಸ್ಸನ್ನು ಆಧರಿಸಿ, ಭೂಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯನ್ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಡಿನೋಟಿಫೈ ಮಾಡಿದೆ.

ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು-ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುತ್ತದೆ ಎಂದು ತಿಳಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984ರಿಂದ ಒಟ್ಟು 13 ಬಡಾವಣೆಗಳಲ್ಲಿ 235-30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಡಲಾಗಿದೆ. ನಮ್ಮ ಕುಟುಂಬಕ್ಕೆ ಈ ಜಮೀನುಗಳು ಬರುವ ವೇಳೆಗಾಗಲೆ 15-7-2005ರಲ್ಲಿ ಭೂಪರಿವರ್ತನೆಯಾಗಿವೆ. ಕೃಷಿ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿವೆ.

ಇದಾದ ಮೇಲೆ 23-6-2014ರಲ್ಲಿ ಮತ್ತು 25-10-2021ರಲ್ಲಿ ಭೂಪರಿಹಾರಕ್ಕೆ ಬದಲಾಗಿ ಪರ್ಯಾಯ ಜಾಗವನ್ನು ಕೊಡಬೇಕೆಂದು ಅರ್ಜಿ ಹಾಕಲಾಗಿದೆ. ನನ್ನ ಪತ್ನಿ ತನ್ನ ನಿವೇಶನ/ಜಾಗ ಕೊಡಿ ಎಂದು ನನ್ನ ಜಾಗವನ್ನು ಮುಡಾ ಬಳಸಿಕೊಂಡಿದೆ. ಅದಕ್ಕೆ ಪರ್ಯಾಯ ಜಾಗ ಕೊಡಿ ಎಂದು ಕೇಳಿದ್ದಾರೆ. ಮುಡಾದವರು ಕೊಟ್ಟಿದ್ದಾರೆ. ಭೂಸ್ವಾಧೀನ ಪಡಿಸದೆ ಭೂಮಿಯನ್ನು ಉಪಯೋಗಿಸಿಕೊಂಡ ಪ್ರಕರಣಗಳಲ್ಲಿ ಹಾಗೆ ಉಪಯೋಗಿಸಲಾದ ಭೂಮಿಗೆ ಪರ್ಯಾಯವಾಗಿ ಶೇ.50:50ರ ಅನುಪಾತದಲ್ಲಿ ಜಾಗವನ್ನು ಕೊಡಬೇಕೆಂದು 14-9-2020ರಲ್ಲಿ ನಿರ್ಣಯ ಮಾಡಿದ್ದಾರೆ. ಈ ನಿರ್ಣಯವನ್ನು ಸರ್ಕಾರ ರದ್ದು ಮಾಡಿದೆ ಎಂದು ತಿಳಿಸಿದರು.

ಇದೆಲ್ಲ ಆದ ಮೇಲೆ ನನ್ನ ಪತ್ನಿ 23-10-2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ, “ನನ್ನ ಜಮೀನನ್ನು ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಬಾಬ್ತು ಇದುವರೆವಿಗೂ ಯಾವುದೇ ಪರಿಹಾರವನ್ನು ನೀಡಿರುವುದಿಲ್ಲ. ಆದ್ದರಿಂದ ನನಗೆ ಮೇಲಿನ ಜಮೀನಿಗೆ ಪರಿಹಾರವಾಗಿ ಪ್ರಸ್ತುತ ಶೇ. 50:50ರ ಅನುಪಾತದಲ್ಲಿ ಕೊಡಿ ಎಂದು ಕೇಳಿದ್ದಾರೆ. ಪ್ರಾಧಿಕಾರದವರು ಇದನ್ನೆಲ್ಲ ಪರಿಶೀಲಿಸಿ ನನ್ನ ಪತ್ನಿಯಿಂದ ಪರಿತ್ಯಾಜನ ಪತ್ರ ಬರೆಸಿಕೊಂಡು 3-16 ಗುಂಟೆ ಜಮೀನುಗಳ ಹಕ್ಕುಗಳನ್ನು ಪ್ರಾಧಿಕಾರದ ಹೆಸರಿಗೆ ವರ್ಗಾಯಿಸಿಕೊಂಡು 30-12-2021 ರಂದು ಕೆಸರೆ ಗ್ರಾಮದ ಸ.ನಂ. 464ರ 3-16 ಎಕರೆ ಜಮೀನಿಗೆ ಬದಲಿ ಜಾಗ ನೀಡುವ ಬಗ್ಗೆ ಪ್ರಾಧಿಕಾರದಿಂದ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿ 38,284 ಚದರ ಅಡಿ ಅಳತೆಗೆ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಮಂಜೂರು ಮಾಡಿರುತ್ತಾರೆ ಎಂದು ತಿಳಿಸಿದರು.

ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ.

ಬಿಜೆಪಿ ಮನೆ ಮುರುಕರು: ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ?. ಮಂಜುನಾಥರನ್ನು ಸುಳ್ಳು ಹೇಳಿ, ಎತ್ತಿ ಕಟ್ಟಿ ಕೈಯಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಹತಾಶೆಯಿಂದ ರಾಜಕೀಯ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಮನೆ ಮುರುಕರು ಎಂದು ಬಿಜೆಪಿಯವರನ್ನು ಕರೆಯಬೇಕು. ಈವರೆಗೆ 50:50ರಡಿ 909 ನಿವೇಶನ ಹಂಚಿಕೆ ಆಗಿರುತ್ತದೆ. 109 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಒಟ್ಟು 1,328 ನಿವೇಶನಗಳನ್ನು ಮುಡಾ ಹಂಚಿಕೆ ಮಾಡಿದೆ. ವಿಜಯನಗರ ಬಡಾವಣೆಯಲ್ಲಿ 125 ಸೈಟ್ ಗಳನ್ನು ಬೇರೆ ಬೇರೆಯವರಿಗೆ ಕೊಡಲಾಗಿತ್ತು. ಇದರಲ್ಲಿ ನನ್ನದಾಗಲಿ, ನನ್ನ ಪತ್ನಿದಾಗಲಿ ಯಾವ ಪಾತ್ರವೂ ಇಲ್ಲ. ಇದರಲ್ಲಿ ನಮ್ಮದೇನು ತಪ್ಪಿಲ್ಲ. ಸಿದ್ದರಾಮಯ್ಯ ಅವರು ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮಲ್ಲಿ ಅನೇಕರು ಟವೆಲ್ ಹಾಕಿದ್ದಾರೆ: ಸಿಎಂ ಕುರ್ಚಿಗೆ ಟವಲ್ ಹಾಕಿದವರಿಂದಲೇ ಷಡ್ಯಂತ್ರ ಎಂಬ ಹೆಚ್‌ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಮ್ಮಲ್ಲಿ ಸಿಎಂ ಆಗುವ ಅನೇಕ ಅರ್ಹ ವ್ಯಕ್ತಿಗಳಿದ್ದಾರೆ ಎಂದು ಡಿಕೆಶಿ ಕಡೆ ನೋಡಿದ ಸಿಎಂ ಸಿದ್ದರಾಮಯ್ಯ, ಯಾರು ಅಂತ ಕುಮಾರಸ್ವಾಮಿಯನ್ನೇ ಕೇಳಿ ಎಂದು ಸೂಚ್ಯವಾಗಿ ತಿಳಿಸಿದರು.

ನ್ಯಾಯಾಂಗ ತನಿಖೆಯಲ್ಲಿ ಎಲ್ಲವೂ ತನಿಖೆ: 14.7.2024ರಂದು ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ಮಾಡಿದ್ದೇವೆ. ಮುಡಾದಲ್ಲಿ ನಿವೇಶನ ಹಂಚಿಕೆ ಅಕ್ರಮದ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ಲೋಕಸಭೆಯ ಹೊರಗಡೆ ಬಿಜೆಪಿ ಸಂಸದರು ಈ ವಿಚಾರವಾಗಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕಕ್ಕೆ ಇಷ್ಟು ಅನ್ಯಾಯ ವಾಗಿದೆ ಒಂದು ದಿನವಾದರೂ ಪ್ರತಿಭಟನೆ ಮಾಡಿದ್ದಾರಾ?. ಐದು ವರ್ಷ 25 ಜನ ಬಿಜೆಪಿ ಎಂಪಿಗಳಿದ್ದರು ಆಗ ಪ್ರತಿಭಟನೆ ಮಾಡಿಲ್ಲ. ಈ ವಿಚಾರ ಪ್ರಸ್ತಾಪ ಮಾಡಿಲ್ಲ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ಮಾಡಿಲ್ಲ ಎಂದು ಟೀಕಿಸಿದರು.

ಕಣ್ಣು ತಪ್ಪಿನಿಂದ ಆಸ್ತಿ ವಿವರ ಸಲ್ಲಿಸಿಲ್ಲ: ಈ ಜಮೀನಿನ ವಿವರವನ್ನು 2013ರ ಅಫಿಡವಿಟ್ ನಲ್ಲಿ ಮಾಹಿತಿ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿ, ಕಣ್ಣು ತಪ್ಪಿನಿನಿಂದ ಮಾಹಿತಿ ನೀಡಿಲ್ಲ. ಆದರೆ ನಂತರ ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಮಾಹಿತಿ ಅಫಿಡವಿಟ್ ನಲ್ಲಿ ಈ ಜಮೀನಿನ ಮಾಹಿತಿಯನ್ನು ಉಲ್ಲೇಖ ಮಾಡಿದ್ದೇನೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ದೇಶ

K. Govindraj ಸೇರಿ ಗಣ್ಯರಿಗೆ ಗೌರವ ಡಾಕ್ಟರೇಟ್ – ಬಿಸಿಯು ಘಟಿಕೋತ್ಸವ ಸಂಭ್ರಮ

Published

on

By

ಬೆಂಗಳೂರು: Bengaluru City University (ಬಿಸಿಯು) 5ನೇ ಘಟಿಕೋತ್ಸವ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮಕ್ಕೆ ಕುಲಾಧಿಪತಿಗಳಾದ Thawar Chand Gehlot ಚಾಲನೆ ನೀಡಿದರು.

ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಈ ಘಟಿಕೋತ್ಸವದಲ್ಲಿ ಮುಖ್ಯ ಅತಿಥಿಯಾಗಿ Dr. Binay Kumar Das, Defence Research and Development Organisation (ಡಿಆರ್‌ಡಿಒ) ಮಹಾ ನಿರ್ದೇಶಕರು (ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಸಿಸ್ಟಮ್ಸ್) ಭಾಗವಹಿಸಿದ್ದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 6 ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಂಗೀತ ನಿರ್ದೇಶಕ Arjun Janya, ಕ್ರಿಕೆಟರ್ Venkatesh Prasad, ಶಿಕ್ಷಣ ತಜ್ಞ T. K. Narayanappa, ಎಂಎಲ್ಸಿ K. Govindaraj, ಶಿಕ್ಷಣ ಕ್ಷೇತ್ರದ Mohan Alva ಹಾಗೂ ಕೈಗಾರಿಕೋದ್ಯಮಿ Bava Mohammed Farooq ಅವರಿಗೆ ರಾಜ್ಯಪಾಲರು ಗೌರವಿಸಿದರು.

ಉಪ ಚುನಾವಣೆ ಪ್ರಚಾರದ ಹಿನ್ನೆಲೆ, ಉನ್ನತ ಶಿಕ್ಷಣ ಸಚಿವ Dr. C. N. Ashwath Narayan ಗೈರಾಗಿದ್ದರು.

ಘಟಿಕೋತ್ಸವದಲ್ಲಿ 73 ಪ್ರಥಮ ರ‍್ಯಾಂಕ್ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ಪ್ರಮಾಣಪತ್ರ ಮತ್ತು ನಗದು ಬಹುಮಾನ ವಿತರಿಸಲಾಯಿತು. ಒಟ್ಟು 37,370 ವಿದ್ಯಾರ್ಥಿಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರದಾನವಾಗಿದ್ದು, 23 ವಿದ್ಯಾರ್ಥಿಗಳಿಗೆ ಪಿಎಚ್‌ಡಿ ಪದವಿ ನೀಡಲಾಯಿತು.

ವಿಶೇಷವಾಗಿ, ಸ್ನೇಹಾ ಟಿ (ಎಂಎಸ್‌ಸಿ ರಸಾಯನಶಾಸ್ತ್ರ) 4 ಚಿನ್ನದ ಪದಕಗಳನ್ನು ಪಡೆದು ಸಾಧನೆ ಮಾಡಿದ್ದು, ಅಭಿಷೇಕ್ ಶ್ರೀರಾಮ್ (ಬಿಕಾಂ) 3 ಚಿನ್ನದ ಪದಕ, ದಿವ್ಯಶ್ರೀ ಎಸ್ (ಬಿಬಿಎ) 3 ಚಿನ್ನದ ಪದಕ ಪಡೆದು ಗಮನಸೆಳೆದಿದ್ದಾರೆ.

ಗೌರವ ಡಾಕ್ಟರೇಟ್ ಪಡೆದ ಬಳಿಕ Arjun Janya ಅವರು ಮಾತನಾಡಿ, ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಕೃತಜ್ಞತೆ ಸಲ್ಲಿಸಿದರು.

Continue Reading

ದೇಶ

ಹಳೆಯ ವಾಹನಗಳಿಗೆ HSRP ಕಡ್ಡಾಯವೇ? ಸಾರಿಗೆ ಇಲಾಖೆಯ ಸ್ಪಷ್ಟನೆ ಏನು ಗೊತ್ತಾ?

Published

on

ಬೆಂಗಳೂರು: ಹಳೆಯ ವಾಹನಗಳಿಗೆ ಹೈ ಸಿಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಕೆ ಕಡ್ಡಾಯವಲ್ಲ ಎಂಬ ಸುದ್ದಿಗಳು ಇತ್ತೀಚೆಗೆ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದರೂ, ಇದಕ್ಕೆ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ. ಇಂತಹ ಸುದ್ದಿಗಳು ಸುಳ್ಳು ಎಂದು ಹೇಳಿ ಸಾರ್ವಜನಿಕರು ಯಾವುದೇ ವದಂತಿಗಳನ್ನು ನಂಬಬಾರದು ಎಂದು ಮನವಿ ಮಾಡಿದೆ.

ಕೇಂದ್ರ ಮೋಟಾರು ವಾಹನಗಳ ನಿಯಮಗಳು 1989ರ ನಿಯಮ 50ರಡಿ, ಕೇಂದ್ರ ಸರ್ಕಾರವು 2018 ಡಿಸೆಂಬರ್ 4ರಂದು ಅಧಿಸೂಚನೆ ಹೊರಡಿಸಿದ್ದು, 2019 ಏಪ್ರಿಲ್ 1ಕ್ಕಿಂತ ಮುಂಚಿತವಾಗಿ ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ HSRP ಅಳವಡಿಕೆ ಕಡ್ಡಾಯಗೊಳಿಸಲಾಗಿದೆ. ಈ ನಿಯಮವನ್ನು ಅನುಸರಿಸಿ, ಕರ್ನಾಟಕ ಸರ್ಕಾರವು 2023 ಆಗಸ್ಟ್ 17ರಂದು ಅಧಿಸೂಚನೆ ಹೊರಡಿಸಿ ರಾಜ್ಯದಲ್ಲಿಯೂ ಇದೇ ನಿಯಮವನ್ನು ಜಾರಿಗೆ ತಂದಿದೆ.

ಇದಕ್ಕೂ ನಡುವೆ, HSRP ಅಳವಡಿಕೆ ಸಂಬಂಧ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್, ಸರ್ಕಾರವು ಯಾವುದೇ ತರಾತುರಿ ಕ್ರಮ ಕೈಗೊಳ್ಳಬಾರದು ಎಂದು ಸೂಚಿಸಿದೆ. ಆದರೆ, ಈ ಆದೇಶವು HSRP ಕಡ್ಡಾಯ ಆದೇಶವನ್ನು ರದ್ದುಪಡಿಸುವುದಿಲ್ಲ ಎಂಬುದು ಮುಖ್ಯ.

ಸಾರಿಗೆ ಇಲಾಖೆಯ ಪ್ರಕಾರ, ಹೈಕೋರ್ಟ್ ಆದೇಶದಿಂದ ಹೊಸ ಕ್ರಮಗಳನ್ನು ಕೈಗೊಳ್ಳಲು ಅಡ್ಡಿಯಿದ್ದರೂ, HSRP ಅಳವಡಿಕೆ ಕುರಿತ ಅಧಿಸೂಚನೆ ಇನ್ನೂ ಜಾರಿಯಲ್ಲಿಯೇ ಇದೆ. ಆದ್ದರಿಂದ, ಸಾರ್ವಜನಿಕರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದೆ.

ವದಂತಿಗಳಿಂದ ಗೊಂದಲಕ್ಕೀಡಾಗಬಾರದು ಎಂದು ಸಾರಿಗೆ ಇಲಾಖೆ ಮತ್ತೊಮ್ಮೆ ಸ್ಪಷ್ಟಪಡಿಸಿದೆ.

Continue Reading

ಕ್ರೀಡೆ

ಗ್ಯಾಸ್‌ಗಾಗಿ ಜನ ಸಾಲು, ಟಿಕೆಟ್‌ಗಾಗಿ ಪಿಎ ಸಾಲು: ಶಾಸಕರಿಗೆ ಟೀಕೆ!

Published

on

ಬೆಂಗಳೂರು: ರಾಜ್ಯದಲ್ಲಿ ಅಡುಗೆ ಅನಿಲ ಕೊರತೆಯಿಂದ ಜನರು ಸಂಕಷ್ಟ ಅನುಭವಿಸುತ್ತಿರುವ ನಡುವೆ, ಜನಪ್ರತಿನಿಧಿಗಳ ವರ್ತನೆ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ಒಂದು ಕಡೆ ಆಟೋ ಚಾಲಕರು ಗ್ಯಾಸ್‌ಗಾಗಿ ರಾತ್ರಿಯಿಡೀ ಸಾಲಿನಲ್ಲಿ ನಿಲ್ಲುತ್ತಿರುವಾಗ, ಇನ್ನೊಂದು ಕಡೆ ಶಾಸಕರು IPL 2026 ಟಿಕೆಟ್ ಪಡೆಯಲು ತಮ್ಮ ಪಿಎಗಳನ್ನು ಕ್ಯೂನಲ್ಲಿ ನಿಲ್ಲಿಸಿರುವುದು ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಮಾಹಿತಿಯ ಪ್ರಕಾರ, ಸರ್ಕಾರ ಮತ್ತು Karnataka State Cricket Association (KSCA) ನಡುವೆ ಪ್ರತಿ ಐಪಿಎಲ್ ಪಂದ್ಯಕ್ಕೆ ಶಾಸಕರಿಗೆ ಉಚಿತವಾಗಿ 3 ಟಿಕೆಟ್ ನೀಡುವ ಕುರಿತು ಒಪ್ಪಂದವಾಗಿದೆ. ಇದರ ಹಿನ್ನೆಲೆಯಲ್ಲಿ, Royal Challengers Bengaluru ಮತ್ತು Chennai Super Kings ನಡುವಿನ ಪಂದ್ಯಕ್ಕೆ ಟಿಕೆಟ್ ಪಡೆಯಲು ಶಾಸಕರ ಪಿಎಗಳು ಸ್ಪೀಕರ್ ಕಚೇರಿ ಮುಂದೆ ಸಾಲಿನಲ್ಲಿ ನಿಂತಿರುವ ದೃಶ್ಯಗಳು ಗಮನ ಸೆಳೆದಿವೆ.

ಸ್ಪೀಕರ್ ಕಚೇರಿಯಲ್ಲೇ ಟಿಕೆಟ್ ವಿತರಣೆ ನಡೆಯುತ್ತಿರುವುದರಿಂದ, ಶಾಸಕರ ಸೂಚನೆ ಮೇರೆಗೆ ಪಿಎಗಳು ಟಿಕೆಟ್ ಪಡೆಯಲು ಕ್ಯೂನಲ್ಲಿ ನಿಂತಿದ್ದಾರೆ ಎಂದು ತಿಳಿದುಬಂದಿದೆ.

ಇದರಿಂದ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಜನಪ್ರತಿನಿಧಿಗಳು ತಮ್ಮ ವೈಯಕ್ತಿಕ ಆಸಕ್ತಿಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ ಎಂಬ ಟೀಕೆಗಳು ಕೇಳಿಬರುತ್ತಿವೆ. ಗ್ಯಾಸ್ ಕೊರತೆ, ದೈನಂದಿನ ಸಮಸ್ಯೆಗಳ ನಡುವೆ ಈ ರೀತಿಯ ಘಟನೆಗಳು ಸಾರ್ವಜನಿಕರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿವೆ.

ರಾಜಕೀಯ ವಲಯದಲ್ಲಿಯೂ ಈ ಘಟನೆ ಚರ್ಚೆಗೆ ಕಾರಣವಾಗಿದ್ದು, ಜನಪ್ರತಿನಿಧಿಗಳು ತಮ್ಮ ಜವಾಬ್ದಾರಿಗಳನ್ನು ಮರೆಯಬಾರದು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

Trending