ಬೆಂಗಳೂರು
ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧ, ಬಿಜೆಪಿ-ಜೆಡಿಎಸ್ನಿಂದ ನನ್ನ ತೇಜೋವಧೆ ಯತ್ನ: ಸಿದ್ದರಾಮಯ್ಯ – CM Siddaramaiah
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಇಂದು ವಿಧಾನಸೌಧದಲ್ಲಿ ದಾಖಲೆ ಸಮೇತವಾಗಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿಎಂ, ಬಿಜೆಪಿ-ಜೆಡಿಎಸ್ ರಾಜಕೀಯವಾಗಿ ಹತಾಶರಾಗಿದ್ದಾರೆ. ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಾರೆ. ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದನ್ನು ಸಹಿಸಲು ಆಗುತ್ತಿಲ್ಲ. ಕಲಾಪದ ಎರಡು ವಾರಗಳು ಒಂದೇ ವಿಚಾರ ಪ್ರಸ್ತಾಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರ ಬಿಟ್ಟರೆ ರಾಜ್ಯದ ಸಮಸ್ಯೆ ಬಗ್ಗೆ ಚಕಾರ ಎತ್ತಿಲ್ಲ. ಪ್ರವಾಹದ ಬಗ್ಗೆ ವಿಪಕ್ಷಗಳು ಯಾರೂ ಮಾತನಾಡಿಲ್ಲ. ಇದನ್ನೆಲ್ಲಾ ನೋಡಿದರೆ ಸಿಎಂ, ರಾಜ್ಯ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶ ಇದೆ ಅನ್ನಿಸುತ್ತೆ. ಇದು ಕಾನೂನುಬದ್ಧವಾಗಿದೆ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನ. ಬಿಜೆಪಿ-ಜೆಡಿಎಸ್ ಗೆ ಎರಡನೇ ಸರಿ ಸಿಎಂ ಆಗುವುದನ್ನು ಸಹಿಸಲು ಆಗುತ್ತಿಲ್ಲ ಎಂದರು.
ಶಾಸಕನಾಗಿ, ಮಂತ್ರಿಯಾಗಿ, ಸಿಎಂ ಆಗಿ ಸುಮಾರು 40 ವರ್ಷಗಳ ಕಾಲ ರಾಜಕೀಯದಲ್ಲಿದ್ದೇನೆ. ಇಂದಿನವರೆಗೆ ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಬಿಜೆಪಿ-ಜೆಡಿಎಸ್ ದ್ವೇಷದಿಂದ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅವರು ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿದರೂ ಹೆಚ್ಚು ಸ್ಥಾನ ಗೆಲ್ಲಲು ಆಗಿಲ್ಲ. ಜನರ ವಿಶ್ವಾಸ ಗಳಿಸಲು ಅವರು ವಾಮಮಾರ್ಗ ಬಳಸುತ್ತಿದ್ದಾರೆ ಎಂದು ಟೀಕಿಸಿದರು.
2-8-1935ರಲ್ಲಿ ಜವರನ ಮಗ ನಿಂಗ ಎನ್ನುವವರು ಮೈಸೂರು ತಾಲೂಕು ಕಚೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ. 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದಾರೆ. 3-10-1935 ರಂದು ಹರಾಜು ನಡೆಸಲಾಗುವುದೆಂದು ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲಾಗಿದೆ. ಹರಾಜು ನಡೆಸಿದ ಮೇಲೆ ಈ ರೀತಿ ದಾಖಲು ಮಾಡಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಜಮೀನನ್ನು ಹರಾಜು ಮಾಡಿಸಲಾಯ್ತು. 1 ರೂಪಾಯಿಗೆ ನಿಂಗ ಬಿನ್ ಜವರಗೆ ಹರಾಜು ಮಾಡಲಾಯ್ತು ಎಂದು ತಿಳಿಸಿದರು.
ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಸ್ವಯಾರ್ಜಿತ ಜಮೀನಾಗಿರುವುದರಿಂದ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.
10-4-1993 ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಅದರ ಪ್ರಕಾರ ನಿಂಗ ಬಿನ್ ಜವರ ಇವರಿಗೆ ಮೂರು ಜನ ಮಕ್ಕಳು. ಮೊದಲನೆ ಮಲ್ಲಯ್ಯ, ಎರಡನೆ ಮೈಲಾರಯ್ಯ ಮತ್ತು ಮೂರನೆ ಜೆ. ದೇವರಾಜು. ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಎರಡನೆ ಮೈಲಾರಯ್ಯ ಇವರಿಗೆ ಮಂಜುನಾಥಸ್ವಾಮಿ ಎಂ ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ. 3ನೆಯವರು ದೇವರಾಜು ಎನ್ನುವವರು ಎಂದು ವಿವರಿಸಿದರು.
ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ ಮಂಜುನಾಥಸ್ವಾಮಿ ಇವರುಗಳು ಸಹಿ ಮಾಡಿದ್ದಾರೆ. ಮೈಸೂರು ತಾಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ. 464ರ 3-16 ಈ ಜಮೀನುಗಳಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಬಿನ್ ಜವರ ಅವರ ಮೂರನೆ ಮಗ ಜೆ.ದೇವರಾಜು ನಮೂನೆ 19ರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಜಮೀನು ನಿಂಗ ಬಿನ್ ಜವರ ಅವರಿಗೆ ಸೇರಿದ್ದು, ಅವರು ಫೌತಿಯಾಗಿ ನಮಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ. ಈಗಾಗಲೆ ನಾವು ಸರ್ವೆ ನಂ. 462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರರಾದ ಜೆ. ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮ ತಕರಾರು ಏನೂ ಇರುವುದಿಲ್ಲವೆಂದು ಸಹಿ ಹಾಕಿದ್ದರು ಎಂದು ತಿಳಿಸಿದರು.
ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ. ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿಜೆಪಿಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಂಧಪಟ್ಟಿದ್ದಲ್ಲ. ಸದರಿ ಜಮೀನುಗಳನ್ನು ಭೂಸ್ವಾಧೀನ ಮಾಡಲು 18-09-1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿಲ್ಲ. ಆಗ, ಜಿ.ದೇವರಾಜು 13-08-1996 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ. ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 20-08-1997 ರಂದು. ಅದಕ್ಕೂ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಇವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ ಎಂದು ವಿವರಿಸಿದರು.
ಮುಡಾದಲ್ಲಿ 24-07-1997 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. 30-08-1997ರಂದು ಸದರಿ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರ್ಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಸದರಿ ಶಿಫಾರಸ್ಸನ್ನು ಆಧರಿಸಿ, ಭೂಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯನ್ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಡಿನೋಟಿಫೈ ಮಾಡಿದೆ.
ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು-ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುತ್ತದೆ ಎಂದು ತಿಳಿಸಿದರು.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984ರಿಂದ ಒಟ್ಟು 13 ಬಡಾವಣೆಗಳಲ್ಲಿ 235-30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಡಲಾಗಿದೆ. ನಮ್ಮ ಕುಟುಂಬಕ್ಕೆ ಈ ಜಮೀನುಗಳು ಬರುವ ವೇಳೆಗಾಗಲೆ 15-7-2005ರಲ್ಲಿ ಭೂಪರಿವರ್ತನೆಯಾಗಿವೆ. ಕೃಷಿ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿವೆ.
ಇದಾದ ಮೇಲೆ 23-6-2014ರಲ್ಲಿ ಮತ್ತು 25-10-2021ರಲ್ಲಿ ಭೂಪರಿಹಾರಕ್ಕೆ ಬದಲಾಗಿ ಪರ್ಯಾಯ ಜಾಗವನ್ನು ಕೊಡಬೇಕೆಂದು ಅರ್ಜಿ ಹಾಕಲಾಗಿದೆ. ನನ್ನ ಪತ್ನಿ ತನ್ನ ನಿವೇಶನ/ಜಾಗ ಕೊಡಿ ಎಂದು ನನ್ನ ಜಾಗವನ್ನು ಮುಡಾ ಬಳಸಿಕೊಂಡಿದೆ. ಅದಕ್ಕೆ ಪರ್ಯಾಯ ಜಾಗ ಕೊಡಿ ಎಂದು ಕೇಳಿದ್ದಾರೆ. ಮುಡಾದವರು ಕೊಟ್ಟಿದ್ದಾರೆ. ಭೂಸ್ವಾಧೀನ ಪಡಿಸದೆ ಭೂಮಿಯನ್ನು ಉಪಯೋಗಿಸಿಕೊಂಡ ಪ್ರಕರಣಗಳಲ್ಲಿ ಹಾಗೆ ಉಪಯೋಗಿಸಲಾದ ಭೂಮಿಗೆ ಪರ್ಯಾಯವಾಗಿ ಶೇ.50:50ರ ಅನುಪಾತದಲ್ಲಿ ಜಾಗವನ್ನು ಕೊಡಬೇಕೆಂದು 14-9-2020ರಲ್ಲಿ ನಿರ್ಣಯ ಮಾಡಿದ್ದಾರೆ. ಈ ನಿರ್ಣಯವನ್ನು ಸರ್ಕಾರ ರದ್ದು ಮಾಡಿದೆ ಎಂದು ತಿಳಿಸಿದರು.
ಇದೆಲ್ಲ ಆದ ಮೇಲೆ ನನ್ನ ಪತ್ನಿ 23-10-2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ, “ನನ್ನ ಜಮೀನನ್ನು ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಬಾಬ್ತು ಇದುವರೆವಿಗೂ ಯಾವುದೇ ಪರಿಹಾರವನ್ನು ನೀಡಿರುವುದಿಲ್ಲ. ಆದ್ದರಿಂದ ನನಗೆ ಮೇಲಿನ ಜಮೀನಿಗೆ ಪರಿಹಾರವಾಗಿ ಪ್ರಸ್ತುತ ಶೇ. 50:50ರ ಅನುಪಾತದಲ್ಲಿ ಕೊಡಿ ಎಂದು ಕೇಳಿದ್ದಾರೆ. ಪ್ರಾಧಿಕಾರದವರು ಇದನ್ನೆಲ್ಲ ಪರಿಶೀಲಿಸಿ ನನ್ನ ಪತ್ನಿಯಿಂದ ಪರಿತ್ಯಾಜನ ಪತ್ರ ಬರೆಸಿಕೊಂಡು 3-16 ಗುಂಟೆ ಜಮೀನುಗಳ ಹಕ್ಕುಗಳನ್ನು ಪ್ರಾಧಿಕಾರದ ಹೆಸರಿಗೆ ವರ್ಗಾಯಿಸಿಕೊಂಡು 30-12-2021 ರಂದು ಕೆಸರೆ ಗ್ರಾಮದ ಸ.ನಂ. 464ರ 3-16 ಎಕರೆ ಜಮೀನಿಗೆ ಬದಲಿ ಜಾಗ ನೀಡುವ ಬಗ್ಗೆ ಪ್ರಾಧಿಕಾರದಿಂದ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿ 38,284 ಚದರ ಅಡಿ ಅಳತೆಗೆ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಮಂಜೂರು ಮಾಡಿರುತ್ತಾರೆ ಎಂದು ತಿಳಿಸಿದರು.
ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ.
ಬಿಜೆಪಿ ಮನೆ ಮುರುಕರು: ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ?. ಮಂಜುನಾಥರನ್ನು ಸುಳ್ಳು ಹೇಳಿ, ಎತ್ತಿ ಕಟ್ಟಿ ಕೈಯಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಹತಾಶೆಯಿಂದ ರಾಜಕೀಯ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಮನೆ ಮುರುಕರು ಎಂದು ಬಿಜೆಪಿಯವರನ್ನು ಕರೆಯಬೇಕು. ಈವರೆಗೆ 50:50ರಡಿ 909 ನಿವೇಶನ ಹಂಚಿಕೆ ಆಗಿರುತ್ತದೆ. 109 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಒಟ್ಟು 1,328 ನಿವೇಶನಗಳನ್ನು ಮುಡಾ ಹಂಚಿಕೆ ಮಾಡಿದೆ. ವಿಜಯನಗರ ಬಡಾವಣೆಯಲ್ಲಿ 125 ಸೈಟ್ ಗಳನ್ನು ಬೇರೆ ಬೇರೆಯವರಿಗೆ ಕೊಡಲಾಗಿತ್ತು. ಇದರಲ್ಲಿ ನನ್ನದಾಗಲಿ, ನನ್ನ ಪತ್ನಿದಾಗಲಿ ಯಾವ ಪಾತ್ರವೂ ಇಲ್ಲ. ಇದರಲ್ಲಿ ನಮ್ಮದೇನು ತಪ್ಪಿಲ್ಲ. ಸಿದ್ದರಾಮಯ್ಯ ಅವರು ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.
ನಮ್ಮಲ್ಲಿ ಅನೇಕರು ಟವೆಲ್ ಹಾಕಿದ್ದಾರೆ: ಸಿಎಂ ಕುರ್ಚಿಗೆ ಟವಲ್ ಹಾಕಿದವರಿಂದಲೇ ಷಡ್ಯಂತ್ರ ಎಂಬ ಹೆಚ್ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಮ್ಮಲ್ಲಿ ಸಿಎಂ ಆಗುವ ಅನೇಕ ಅರ್ಹ ವ್ಯಕ್ತಿಗಳಿದ್ದಾರೆ ಎಂದು ಡಿಕೆಶಿ ಕಡೆ ನೋಡಿದ ಸಿಎಂ ಸಿದ್ದರಾಮಯ್ಯ, ಯಾರು ಅಂತ ಕುಮಾರಸ್ವಾಮಿಯನ್ನೇ ಕೇಳಿ ಎಂದು ಸೂಚ್ಯವಾಗಿ ತಿಳಿಸಿದರು.
ನ್ಯಾಯಾಂಗ ತನಿಖೆಯಲ್ಲಿ ಎಲ್ಲವೂ ತನಿಖೆ: 14.7.2024ರಂದು ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ಮಾಡಿದ್ದೇವೆ. ಮುಡಾದಲ್ಲಿ ನಿವೇಶನ ಹಂಚಿಕೆ ಅಕ್ರಮದ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.
ಲೋಕಸಭೆಯ ಹೊರಗಡೆ ಬಿಜೆಪಿ ಸಂಸದರು ಈ ವಿಚಾರವಾಗಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕಕ್ಕೆ ಇಷ್ಟು ಅನ್ಯಾಯ ವಾಗಿದೆ ಒಂದು ದಿನವಾದರೂ ಪ್ರತಿಭಟನೆ ಮಾಡಿದ್ದಾರಾ?. ಐದು ವರ್ಷ 25 ಜನ ಬಿಜೆಪಿ ಎಂಪಿಗಳಿದ್ದರು ಆಗ ಪ್ರತಿಭಟನೆ ಮಾಡಿಲ್ಲ. ಈ ವಿಚಾರ ಪ್ರಸ್ತಾಪ ಮಾಡಿಲ್ಲ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ಮಾಡಿಲ್ಲ ಎಂದು ಟೀಕಿಸಿದರು.
ಕಣ್ಣು ತಪ್ಪಿನಿಂದ ಆಸ್ತಿ ವಿವರ ಸಲ್ಲಿಸಿಲ್ಲ: ಈ ಜಮೀನಿನ ವಿವರವನ್ನು 2013ರ ಅಫಿಡವಿಟ್ ನಲ್ಲಿ ಮಾಹಿತಿ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿ, ಕಣ್ಣು ತಪ್ಪಿನಿನಿಂದ ಮಾಹಿತಿ ನೀಡಿಲ್ಲ. ಆದರೆ ನಂತರ ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಮಾಹಿತಿ ಅಫಿಡವಿಟ್ ನಲ್ಲಿ ಈ ಜಮೀನಿನ ಮಾಹಿತಿಯನ್ನು ಉಲ್ಲೇಖ ಮಾಡಿದ್ದೇನೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.
ದೇಶ
ಕಾಂಗ್ರೆಸ್ನಲ್ಲಿ ಭಾರಿ ಶಿಸ್ತು ಕ್ರಮ: ನಟಿ ಭಾವನಾ ರಾಮಣ್ಣ ಸೇರಿ ಹಲವರಿಗೆ ಶಾಕ್
ಬೆಂಗಳೂರು: Karnataka Pradesh Congress Committee ಪ್ರಮುಖ ಸಭೆಗೆ ಗೈರಾಗಿದ್ದ ಪದಾಧಿಕಾರಿಗಳ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ D. K. Shivakumar ಭಾರೀ ಶಿಸ್ತು ಕ್ರಮ ಕೈಗೊಂಡಿದ್ದಾರೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SSR) ಕುರಿತ ಮಹತ್ವದ ಸಭೆಯನ್ನು ನಿರ್ಲಕ್ಷ್ಯ ಮಾಡಿದ ಆರೋಪದ ಮೇಲೆ ಹಲವು ಹಿರಿಯ ನಾಯಕರನ್ನು ಪಕ್ಷದ ಹುದ್ದೆಗಳಿಂದ ತಕ್ಷಣದಿಂದಲೇ ವಜಾಗೊಳಿಸಲಾಗಿದೆ.
ಈ ಕ್ರಮದಡಿ ಕೆಪಿಸಿಸಿ ವಕ್ತಾರರಾದ Niketh Raj Maurya, Bhavana Ramanna ಸೇರಿದಂತೆ ಶಿವಮೂರ್ತಿ ನಾಯಕ್, ಎಂ.ಸಿ. ವೇಣುಗೋಪಾಲ್, ಷಣ್ಮುಖ ಶಿವಳ್ಳಿ ಹಾಗೂ ಸಿ.ಆರ್. ಮನೋಹರ್ ಅವರಿಗೆ ಪಕ್ಷದಿಂದ “ಗೇಟ್ ಪಾಸ್” ನೀಡಲಾಗಿದೆ. ಇವರ ಜೊತೆಗೆ ಮೂವರು ಉಪಾಧ್ಯಕ್ಷರು ಮತ್ತು 29 ಪ್ರಧಾನ ಕಾರ್ಯದರ್ಶಿಗಳನ್ನೂ ಹುದ್ದೆಗಳಿಂದ ಕೈಬಿಡಲಾಗಿದೆ.
ಬೆಂಗಳೂರಿನಲ್ಲಿ ನಡೆದ ಈ ಮಹತ್ವದ ಸಭೆಗೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ Randeep Singh Surjewala ಕೂಡ ಭಾಗವಹಿಸಿದ್ದರು. ಪಕ್ಷದ ಭವಿಷ್ಯದ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದ್ದ ಸಭೆಗೆ ಇಷ್ಟೊಂದು ಪ್ರಮಾಣದಲ್ಲಿ ನಾಯಕರು ಗೈರಾಗಿರುವುದನ್ನು ಅವರು ಗಂಭೀರವಾಗಿ ಪರಿಗಣಿಸಿದ್ದರು ಎನ್ನಲಾಗಿದೆ.
ಸಭೆಯನ್ನು ಲಘುವಾಗಿ ತೆಗೆದುಕೊಂಡವರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳುವಂತೆ ಸುರ್ಜೇವಾಲಾ ಸೂಚನೆ ನೀಡಿದ ಬೆನ್ನಲ್ಲೇ ಡಿಕೆ ಶಿವಕುಮಾರ್ ಆಕ್ಷನ್ ಮೋಡ್ಗೆ ಇಳಿದಿದ್ದಾರೆ. ಈ ಮೂಲಕ ಪಕ್ಷದಲ್ಲಿ ಶಿಸ್ತು ಉಲ್ಲಂಘನೆ ಯಾವುದೇ ಕಾರಣಕ್ಕೂ ಸಹಿಸಲಾಗುವುದಿಲ್ಲ ಎಂಬ ಸಂದೇಶವನ್ನು ರವಾನಿಸಿದ್ದಾರೆ.
ಇದೇ ವೇಳೆ ರಾಜ್ಯ ರಾಜಕೀಯದಲ್ಲಿ Siddaramaiah ಅವರ ರಾಜೀನಾಮೆ ಹಾಗೂ ನಾಯಕತ್ವ ಬದಲಾವಣೆಯ ಚರ್ಚೆಗಳು ಜೋರಾಗಿರುವ ಸಂದರ್ಭದಲ್ಲಿ ಈ ಕ್ರಮ ಕಾಂಗ್ರೆಸ್ ಪಾಳಯದಲ್ಲಿ ಮತ್ತಷ್ಟು ಸಂಚಲನ ಸೃಷ್ಟಿಸಿದೆ.
ಪಕ್ಷದಲ್ಲಿ ಹಿರಿಯರಾಗಿರಲಿ ಅಥವಾ ಪ್ರಮುಖ ಹುದ್ದೆಯಲ್ಲಿರಲಿ, ಜವಾಬ್ದಾರಿ ಮತ್ತು ಶಿಸ್ತು ಪಾಲನೆ ಕಡ್ಡಾಯ ಎಂಬುದನ್ನು ಡಿಕೆ ಶಿವಕುಮಾರ್ ಈ ನಿರ್ಧಾರದ ಮೂಲಕ ಸ್ಪಷ್ಟಪಡಿಸಿದ್ದಾರೆ.
ದೇಶ
“ಭಗವಂತ ನನ್ನ ಆಸೆ ಈಡೇರಿಸಿದ್ದಾನೆ”: ಇಕ್ಬಾಲ್ ಹುಸೇನ್ ಭಾವನಾತ್ಮಕ ಮಾತು
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಚರ್ಚೆ ತೀವ್ರಗೊಂಡಿರುವ ನಡುವೆಯೇ Iqbal Hussain ನೀಡಿರುವ ಹೇಳಿಕೆ ಹೊಸ ರಾಜಕೀಯ ಸಂಚಲನಕ್ಕೆ ಕಾರಣವಾಗಿದೆ. ಉಪಮುಖ್ಯಮಂತ್ರಿ D. K. Shivakumar ಅವರಿಗೆ ಮುಖ್ಯಮಂತ್ರಿ ಪಟ್ಟ ಸಿಗುವ ವಿಚಾರವಾಗಿ ಮಾತನಾಡಿದ ಅವರು, “ಭಗವಂತ ನನ್ನ ಆಸೆ ಈಡೇರಿಸಿದ್ದಾನೆ” ಎಂದು ಭಾವನಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಇಕ್ಬಾಲ್ ಹುಸೇನ್, “ಭಗವಂತನ ದಯೆಯಿಂದ ಒಳ್ಳೆ ಕಾಲ ಬಂದಿದೆ. ನಮ್ಮ ನಾಯಕರಿಗೆ ರಾಜ್ಯದ ಜನರು ಬಯಸಿದ್ದನ್ನು ಭಗವಂತ ನೆರವೇರಿಸಿದ್ದಾನೆ. ಅವನಿಗೆ ಕೋಟಿ ಕೋಟಿ ನಮಸ್ಕಾರಗಳು” ಎಂದು ಹೇಳಿದ್ದಾರೆ.
“ಎಲ್ಲದಕ್ಕೂ ಒಂದು ಇತಿಮಿತಿ ಇರುತ್ತದೆ. ಪಕ್ಷದ ವರಿಷ್ಠರು ಶಿಸ್ತಿನಿಂದ ಇರಲು ಸೂಚಿಸಿದ್ದರು. ಕಾಲ ಬಂದಾಗ ಮಾತನಾಡಿ ಎಂದಿದ್ದರು. ಈಗ ಆ ಸಮಯ ಬಂದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ಹೈಕಮಾಂಡ್ ಮಹತ್ವದ ನಿರ್ಧಾರ ತೆಗೆದುಕೊಂಡಿರುವ ಸುಳಿವನ್ನೂ ನೀಡಿದ್ದಾರೆ.
ಇನ್ನೂ ನಾಯಕರು ಬೆಂಗಳೂರಿಗೆ ಬಂದ ಬಳಿಕ ಅವರೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದ ಅವರು, ಕಾರ್ಯಕರ್ತರು ಹಾಗೂ ನಾಯಕರ ಜೊತೆ ಮಾತುಕತೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.
ದೆಹಲಿಯಲ್ಲಿ ನಡೆದ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾತನಾಡಿದ ಇಕ್ಬಾಲ್ ಹುಸೇನ್, “ರಾತ್ರಿ ನನಗೆ ನಿದ್ದೆ ಬರಲಿಲ್ಲ. ದೆಹಲಿಯಲ್ಲಿ ಮಾತನಾಡಬೇಕಾದವರ ಜೊತೆ ಮಾತನಾಡುತ್ತಿದ್ದೆ. ಕ್ಷಣಕ್ಷಣದ ಮಾಹಿತಿಯನ್ನು ಪಡೆಯುತ್ತಿದ್ದೆ” ಎಂದು ಹೇಳಿದ್ದಾರೆ.
ಈ ಹೇಳಿಕೆ ಇದೀಗ ಕಾಂಗ್ರೆಸ್ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ ನೀಡಿದೆ.
ಬೆಂಗಳೂರು
“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ನಡುವೆಯೇ Siddaramaiah ಅವರು “ನಾಳೆ ಮಾತನಾಡುತ್ತೇನೆ” ಎನ್ನುವ ಮೂಲಕ ರಾಜಕೀಯ ವಲಯದಲ್ಲಿ ಮತ್ತಷ್ಟು ಕುತೂಹಲ ಮೂಡಿಸಿದ್ದಾರೆ.
ಮಾಜಿ ಪ್ರಧಾನಿ Jawaharlal Nehru ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಗಳನ್ನು ಸ್ಮರಿಸಿದರು.
ಕಾರ್ಯಕ್ರಮದ ವೇಳೆ ಮಾಧ್ಯಮ ಪ್ರತಿನಿಧಿಗಳು ದೆಹಲಿ ಪ್ರವಾಸ, ಕಾಂಗ್ರೆಸ್ ಹೈಕಮಾಂಡ್ ಸಭೆ ಹಾಗೂ ಸಿಎಂ ಬದಲಾವಣೆ ಕುರಿತ ಪ್ರಶ್ನೆಗಳನ್ನು ಕೇಳಿದಾಗ ಸಿದ್ದರಾಮಯ್ಯ ಯಾವುದೇ ವಿವರವಾದ ಪ್ರತಿಕ್ರಿಯೆ ನೀಡಲಿಲ್ಲ. “ಏನೇ ಇದ್ದರೂ ನಾಳೆ ಮಾತನಾಡುತ್ತೇನೆ” ಎಂದು ಒಂದೇ ಸಾಲಿನಲ್ಲಿ ಉತ್ತರಿಸಿ ಅಲ್ಲಿಂದ ತೆರಳಿದರು.
ಸಾಮಾನ್ಯವಾಗಿ ಮಾಧ್ಯಮಗಳ ಪ್ರಶ್ನೆಗಳಿಗೆ ಗಟ್ಟಿಯಾಗಿ ಪ್ರತಿಕ್ರಿಯಿಸುವ ಸಿದ್ದರಾಮಯ್ಯ, ಇಂದು ಮಾತ್ರ ಮೌನವಾಗಿದ್ದದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಅವರ ಮುಖಭಾವದಲ್ಲೂ ಬೇಸರ ಸ್ಪಷ್ಟವಾಗಿ ಕಾಣಿಸುತ್ತಿತ್ತು ಎಂದು ಕಾರ್ಯಕ್ರಮದಲ್ಲಿ ಭಾಗಿಯಾದವರು ಹೇಳುತ್ತಿದ್ದಾರೆ.
ಇಂದು ಮುಖ್ಯಮಂತ್ರಿ ಅವರಿಗೆ ಯಾವುದೇ ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಿರಲಿಲ್ಲ. ಹೀಗಾಗಿ ವಿಧಾನಸೌಧದಿಂದ ನೇರವಾಗಿ ತಮ್ಮ ಸರ್ಕಾರಿ ನಿವಾಸ ‘ಕಾವೇರಿ’ಗೆ ತೆರಳಿದ್ದಾರೆ.
ಇದೀಗ ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು ಹಾಗೂ ಶಾಸಕರೊಂದಿಗೆ ಬ್ರೇಕ್ಫಾಸ್ಟ್ ಸಭೆ ನಡೆಸಲಿರುವ ಸಿದ್ದರಾಮಯ್ಯ, ನಂತರ ರಾಜಭವನಕ್ಕೆ ತೆರಳಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲಾ ರಾಜಕೀಯ ಬೆಳವಣಿಗೆಗಳ ಬಗ್ಗೆ ಸ್ಪಷ್ಟನೆ ನೀಡುವ ನಿರೀಕ್ಷೆಯಿದೆ.
-
ದೇಶ6 hours agoಕರ್ನಾಟಕಕ್ಕೆ ಹೊಸ ಸಿಎಂ? ಡಿಕೆ ಶಿವಕುಮಾರ್ ಪಾಲಿಗೆ ‘ಶುಭ ಶುಕ್ರವಾರ’ ಫಿಕ್ಸ್!
-
ದೇಶ9 hours agoಬಸ್ ಕಂಡಕ್ಟರ್ನಿಂದ ಸೂಪರ್ ಸ್ಟಾರ್ ತನಕ: ರಜನಿಕಾಂತ್ ಅಪರೂಪದ ಫೋಟೋ ವೈರಲ್
-
ಬೆಂಗಳೂರು6 hours ago“ನಾಳೆ ಎಲ್ಲ ಹೇಳುತ್ತೇನೆ”: ರಾಜಕೀಯ ಪ್ರಶ್ನೆಗಳಿಗೆ ಸಿದ್ದರಾಮಯ್ಯ ಸಸ್ಪೆನ್ಸ್ ಉತ್ತರ!
-
ಕ್ರೀಡೆ6 hours ago“That’s a silly question!”: ಆರ್ಸಿಬಿ ಸೋಲಿನ ಬಳಿಕ ಪತ್ರಕರ್ತರ ಮೇಲೆ ಫಿಲಿಪ್ಸ್ ಸಿಡಿತ
-
ದೇಶ9 hours agoಸಿಎಂ ಬದಲಾವಣೆಯ ಬೆನ್ನಲ್ಲೇ ಡಿಕೆಶಿಗೆ ಮತ್ತೊಂದು ಶಾಕ್?
-
ದೇಶ8 hours agoಅಯ್ಯನ ಕೆರೆ ಕಲುಷಿತಗೊಳಿಸಲು ಯತ್ನ: ಸಿಬ್ಬಂದಿಯ ದಿಟ್ಟ ಕ್ರಮಕ್ಕೆ ಭಾರಿ ಮೆಚ್ಚುಗೆ
-
ಅಪರಾಧ10 hours agoಪಿಣರಾಯಿ ವಿಜಯನ್ ನಿವಾಸದ ಮೇಲೆ ಇಡಿ ದಾಳಿ: ಕೇರಳ ರಾಜಕೀಯದಲ್ಲಿ ಭಾರೀ ಸಂಚಲನ!
-
ಕ್ರೀಡೆ9 hours ago‘ಈ ಸಲ ಕಪ್ ನಮ್ದೇ’ ಘೋಷಣೆ ಜೋರಾಗಿದೆ: ಆರ್ಸಿಬಿ ಫೈನಲ್ಗೆ ಎಂಟ್ರಿ
