Connect with us

ಬೆಂಗಳೂರು

ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ – ನಷ್ಟದ ಲೆಕ್ಕಾಚಾರವೇನು? – BJP JDS padayatra

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ ರಾಜಕೀಯ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರವಾಗಿ ಬಿಜೆಪಿ – ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು- ಮೈಸೂರು ವರೆಗೆ ಪಾದಯಾತ್ರೆಗೆ ಉದ್ದೇಶಿಸಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಪಾದಯಾತ್ರೆ ನಡೆಯಲಿದೆ.

ಅಷ್ಟಕ್ಕೂ ಕರ್ನಾಟಕ ರಾಜಕೀಯದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈವರೆಗೆ ಕರುನಾಡು ಕಂಡಿರುವ ಪ್ರಮುಖ ಪಾದಯಾತ್ರೆ ಪೊಲಿಟಿಕ್ಸ್ ಮತ್ತು ಅದರಿಂದ ಪಕ್ಷಗಳು ರಾಜಕೀಯ ಲಾಭ ನಷ್ಟಕ್ಕೆ ಸಾಕ್ಷಿಯಾಗಿದೆ. ದೋಸ್ತಿಗಳು ಆ.3 ರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಏಳು ದಿನಗಳ ಪಾದಯಾತ್ರೆಗೆ ನಿರ್ಧರಿಸಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹಗರಣಗಳ ಆರೋಪವನ್ನು ಜನರ ಮುಂದೆ ಕೊಂಡೊಯ್ಯಲು ದೋಸ್ತಿಗಳು ಮುಂದಾಗಿದ್ದಾರೆ.

ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆನೂ ಕೆಲ ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತ ಅದರ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ ಇಲ್ಲಿದೆ.

ದೇವೇಗೌಡರ ಪಾದಯಾತ್ರೆ ಪೊಲಿಟಿಕ್ಸ್: ಹೆಚ್.ಡಿ. ದೇವೇಗೌಡರ 2001ರಲ್ಲಿ ಅಂದಿನ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಿ ಪಾದಯಾತ್ರೆಯ ಹೋರಾಟಕ್ಕೆ ಇಳಿದಿದ್ದರು. ನೀರಾ ತೆಗೆವ ವಿವಾದಲ್ಲಿ ಇಬ್ಬರು ರೈತರು ಪೊಲೀಸರು ಹಾರಿಸಿದ್ದ ಗುಂಡಿಗೆ ಬಲಿಯಾಗಿದ್ದರು. ಆ ವೇಳೆ ತೆಂಗಿಗೆ ನುಸಿರೋಗ ಹೆಚ್ಚಿದ್ದರಿಂದ ನೀರಾ ತೆಗೆಯುವ ವಿಚಾರ ಮುನ್ನೆಲೆಗೆ ಬಂದಿತ್ತು. ಇದೇ ವಿಚಾರವಾಗಿ ನಡೆದ ರೈತರ ಹೋರಾಟದ ಮೇಲೆ ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಗೋಲಿಬಾರ್‌ ನಡೆದು, ಇಬ್ಬರು ರೈತರು ಮೃತಪಟ್ಟಿದ್ದರು.

ಈ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ಬಳಸಿಕೊಂಡ ದೊಡ್ಡಗೌಡರು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಎಸ್‌.ಎಂ. ಕೃಷ್ಣ ಸರಕಾರದ ವಿರುದ್ಧ ಪಾದಯಾತ್ರೆ ಸಂಘಟಿಸಿ ಅದರ ಅಲೆಯಲ್ಲಿ ಚುನಾವಣೆ ಗೆದ್ದು ಬಂದಿದ್ದರು. ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯಿಂದ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ವರೆಗೆ ದೇವೇಗೌಡರು 2001ರ ಅ.28ರಿಂದ ನ.1ರ ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಒಟ್ಟು ಐದು ದಿನಗಳ ಕಾಲ ಸುಮಾರು 80 ಕಿ.ಮೀ. ಕ್ರಮಿಸಿ ಪಾದಯಾತ್ರೆ ನಡೆಸಿ, ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಇನ್ನು 2013ರಲ್ಲಿ ಫೆ.12ರಂದು ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ವರಿಷ್ಠ ದೇವೇಗೌಡರು ಬೆಂಗಳೂರು ನಗರದಲ್ಲಿ ಪಾದಯಾತ್ರೆ ಕೈಗೊಂಡಿದ್ದರು. ಬನ್ನಪ್ಪ ಪಾರ್ಕ್ ನಿಂದ ಫ್ರೀಡಂ ಪಾರ್ಕ್ ವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ದೊಡ್ಡಗೌಡರು ನಗರದಲ್ಲಿ ಪಾದಯಾತ್ರೆ ನಡೆಸಿದ್ದರು.

ಜೆಡಿಎಸ್​ಗೆ ಲಾಭ ತಂದು ಕೊಟ್ಟ ಪಾದಯಾತ್ರೆ: ದೇವೇಗೌಡರು ಕಾಂಗ್ರೆಸ್ ಸರ್ಕಾರದ ಗೋಲಿಬಾರ್ ವಿರುದ್ಧ ನಡೆಸಿದ ಪಾದಯಾತ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್​ಗೆ ಭರ್ಜರಿ ರಾಜಕೀಯ ಲಾಭವನ್ನು ಕೊಟ್ಟಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ಪಾರುಪತ್ಯ ಸಾಧಿಸಿತ್ತು. ಎಸ್.ಎಂ. ಕೃಷ್ಣ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ‌ ಅಲೆಯ ಜೊತೆಗೆ ದೊಡ್ಡಗೌಡರು ನಡೆಸಿದ ಪಾದಯಾತ್ರೆ ಹೋರಾಟವೂ ಜೆಡಿಎಸ್​ಗೆ ಭಾರೀ ಲಾಭ ತಂದು ಕೊಟ್ಟಿತು. 2004 ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 58 ಸ್ಥಾನಗಳಲ್ಲಿ ಗೆದ್ದು ಬೀಗಿತು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ 37 ಸ್ಥಾನಗಳನ್ನು ಗೆದ್ದು ಪಾದಯಾತ್ರೆ ಪೊಲಿಟಿಕ್ಸ್ ಶಕ್ತಿಯನ್ನು ತೋರಿಸಿಕೊಟ್ಟಿತು.

1999ರಲ್ಲಿ ಹಳೆ ಮೈಸೂರು ಭಾಗದಲ್ಲಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ 2004ರಲ್ಲಿ 37 ಸ್ಥಾನ ಗೆದ್ದು ಬೀಗಿತು. 1999 ಚುನಾವಣೆಯಲ್ಲಿ 11.45% ರಷ್ಟು ಇದ್ದ ಜೆಡಿಎಸ್​ನ ಮತ ಪ್ರಮಾಣ 2004 ಚುನಾವಣೆಯಲ್ಲಿ 21.10%ಗೆ ಏರಿಕೆ ಕಂಡಿತ್ತು. ಇದರಿಂದ ಪಕ್ಷಕ್ಕೆ ಮೈತ್ರಿ ಸರ್ಕಾರ ನಡೆಸಲು ಸಾಧ್ಯವಾಯಿತು. ಅದೇ ರೀತಿ 2013ರಲ್ಲಿ ಕುಡಿಯುವ ನೀರು ಸಂಬಂಧ ಬೆಂಗಳೂರಲ್ಲಿ ಮಾಡಿದ ಪಾದಯಾತ್ರೆಯಿಂದಲೂ ಜೆಡಿಎಸ್​ಗೆ ಪರೋಕ್ಷವಾಗಿ ಪಕ್ಷ ಸಂಘಟನೆಗೆ ಬಲ ನೀಡಿತು. 2013 ಚುನಾವಣೆಯಲ್ಲಿ ಜೆಡಿಎಸ್ ಬೆಂಗಳೂರು ನಗದರಲ್ಲಿ ಮೊದಲ ಬಾರಿಗೆ 3 ಸ್ಥಾನವನ್ನು ಗೆಲ್ಲುವಂತಾಯಿತು.

ಎಸ್.ಎಂ. ಕೃಷ್ಣರಿಂದ ಕಾವೇರಿ ಪಾದಯಾತ್ರೆ: 2002ರಲ್ಲಿ ಸಿಎಂ ಆಗಿದ್ದ ಎಸ್.ಎಂ. ಕೃಷ್ಣ ಪಾದಯಾತ್ರೆಯ ಮೊರೆ ಹೋಗಿದ್ದರು. ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ಎಸ್.ಎಂ. ಕೃಷ್ಣ ಪಾದಯಾತ್ರೆ ಕೈಗೊಂಡು ಕಾವೇರಿ ಪ್ರಾಂತ್ಯದ ಜನರ ಮನಗೆಲ್ಲುವ ಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್‌ ಮುಂದೆ ಇದ್ದಿದ್ದರಿಂದ ಈ ಪಾದಯಾತ್ರೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಎಸ್.ಎಂ. ಕೃಷ್ಣ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ 2002 ಅ.7ರಿಂದ ಅ.11 ರವರೆಗೆ ಆರು ದಿನಗಳ ಪಾದಯಾತ್ರೆ ಕೈಗೊಂಡಿದ್ದರು. ಬೆಂಗಳೂರಿನ ರಾಜರಾ ಜೇಶ್ವರಿ ನಗರದಿಂದ ಮಂಡ್ಯದ ವರೆಗೆ 100 ಕಿ.ಮೀ. ದೂರ ಪಾದಯಾತ್ರೆ ನಡೆಸಿದ್ದರು. ಆ ಮೂಲಕ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿದ್ದರು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಇದರಿಂದ ಹೆಚ್ಚಿನ ರಾಜಕೀಯ ಲಾಭ ಲಭಿಸಲಿಲ್ಲ. ಬಲವಾದ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಆ ಚುನಾವಣೆಯಲ್ಲಿ ಸೋಲು ಕಂಡಿತ್ತು.

ಸಿದ್ದರಾಮಯ್ಯರ ಬಳ್ಳಾರಿ ಪಾದಯಾತ್ರೆ: ಬಳ್ಳಾರಿಯಲ್ಲಿ ಬಿಜೆಪಿಯ ರೆಡ್ಡಿ ಹಾಗೂ ಶ್ರೀರಾಮುಲು ಪ್ರಾಬಲ್ಯದ ವಿರುದ್ದ ತೊಡೆತಟ್ಟಿ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಈ ಐತಿಹಾಸಿಕ ಪಾದಯಾತ್ರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತ್ತು. ಇದು 2013ರಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿತು.

2010ರಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು. ಮುಖ್ಯಮಂತ್ರಿಯಾಗಿದ್ದವರು ಬಿ.ಎಸ್. ಯಡಿಯೂರಪ್ಪ. ಆಗ ಅಧಿಕಾರದಲ್ಲಿ ಪ್ರಾಬಲ್ಯ ಹೊಂದಿದ್ದು ಗಣಿಧಣಿಗಳಾದ ಜನಾರ್ದನ್ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು. ರಾಜ್ಯ ವಿಧಾನಸಭೆಯಲ್ಲಿ ‘ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರೆಡ್ಡಿ ಬ್ರದರ್ಸ್ ಸವಾಲು ಹಾಕಿದ್ದರು. ವಿಧಾನಸಭೆಯಲ್ಲೇ ಬಳ್ಳಾರಿ ಗಣಿಧಣಿಗಳ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಭುಜತಟ್ಟಿ, ನಾವು ಬಳ್ಳಾರಿಗೆ ಬಂದೇ ಬರುತ್ತೇವೆ. ನಡೆದುಕೊಂಡೇ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು. ಆಗ ಹುಟ್ಟಿದ್ದೇ ಬಳ್ಳಾರಿ ಪಾದಯಾತ್ರೆ. 2010ರ ಜುಲೈ 25 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭವಾಯಿತು. ಬೆಂಗಳೂರಿನಿಂದ ಬಳ್ಳಾರಿಗೆ ಹೊರಟ ಪಾದಯಾತ್ರೆ ಸಮಾರೋಪ ಆಗಿದ್ದು ಆಗಸ್ಟ್ 8 ರಂದು. ಅಂದು ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಗಣಿಧಣಿಗಳು ಹಾಗೂ ಬಿಜೆಪಿ ಸರಕಾರದ ವಿರುದ್ಧ ಅಬ್ಬರಿಸಿದ್ದರು.

ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ: 2013ರಲ್ಲಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂಬ ಪಾದಯಾತ್ರೆ ನಡೆಸಿದ್ದರು. ಕೃಷ್ಣಾದ ಎ ಮತ್ತು ಬಿ ಸ್ಕೀಮ್‌ನಡಿ ಪೂರ್ಣ ಪ್ರಮಾಣದ ನೀರು ಬಳಸಿಕೊಳ್ಳಲು ಸರಕಾರ ವೈಫಲ್ಯ ಹಾಗೂ ನೀರಾವರಿ ಯೋಜನೆಗೆ ಅನುಷ್ಠಾನದಲ್ಲಿನ ವೈಫಲ್ಯ ವಿರೋಧಿಸಿ ಚುನಾವಣಾ ಪೂರ್ವ ಜ.7 ರಿಂದ 14 ರವರೆಗೆ ಕಾಂಗ್ರೆಸ್ ನಡಿಗೆ – ಕೃಷ್ಣೆಯ ಕಡೆಗೆ ಎಂಬ ಯಾತ್ರೆ ಕೈಗೊಂಡಿತ್ತು. ಕೃಷ್ಣ ಯೋಜನೆಯಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ 259 ಟಿಎಂಸಿ ನೀರು ಆಂಧ್ರಕ್ಕೆ ಹೋಗುತ್ತಿದೆ. ಅಲ್ಲಿನ ನೀರಾವರಿ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ನೀಡಿದ್ದ ಬಿಜೆಪಿ, ಕೇವಲ 500 ಕೋಟಿ ರೂ. ನೀಡಿದೆ ಎಂಬ ಪ್ರಮುಖ ಅಜೆಂಡಾದೊಂದಿಗೆ ಪಾದಯಾತ್ರೆ ನಡೆಸಲಾಗಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಜೆಟ್‌ನಲ್ಲಿ ಇದಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದೆಂಬ ಭರವಸೆಯೊಂದಿಗೆ ಪಾದಯಾತ್ರೆ ನಡೆಸಿತ್ತು. ಹೊಸಪೇಟೆಯಿಂದ ಆರಂಭಗೊಂಡು ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದ ಮಾರ್ಗವಾಗಿ ಕೂಡಲಸಂಗಮದಲ್ಲಿ ಸಮಾರೋಪಗೊಂಡು ಸುಮಾರು 140 ಕಿ.ಮೀ ಪಾದಯಾತ್ರೆ ನಡೆಸಲಾಯಿತು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಮೇಕೆದಾಟು ಪಾದಯಾತ್ರೆ. 2022ರಂದು ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಜಾರಿಗಾಗಿ ಆಗ್ರಹಿಸಿ ಮಾಡಿದ ಪಾದಯಾತ್ರೆ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಜನವರಿ 9, 2022 ರಿಂದ ಆರಂಭವಾದ ಪಾದಯಾತ್ರೆ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಐದು ದಿನಗಳ ಕಾಲ ಪಾದಯಾತ್ರೆ ನಡೆಸಿ ಕೋವಿಡ್ ನಿಯಮಾವಳಿ ಹಿನ್ನೆಲೆ ನಿಲ್ಲಿಸಿದ್ದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಫೆ.27 ರಿಂದ ಮರು ಆರಂಭಿಸಿ ಮಾ.2, 2022ಕ್ಕೆ ಮುಕ್ತಾಯವಾಗಿತ್ತು. 165 ಕಿ.ಮೀ. ಕ್ರಮಿಸಿ 9 ದಿನಗಳ ಪಾದಯಾತ್ರೆ ನಡೆಸಲಾಗಿತ್ತು.

ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ವಿಳಂಬ ಮಾಡುತ್ತಿವೆ ಎನ್ನುವುದು ಕಾಂಗ್ರೆಸ್‌ನ ಪ್ರಧಾನ ಆರೋಪವಾಗಿತ್ತು. ಮೇಕೆದಾಟು ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಬೆಂಗಳೂರಿನ‌ ಬಸವನಗುಡಿಯಲ್ಲಿ ಸಮಾರೋಪಗೊಂಡಿದ್ದ ಮೇಕೆದಾಟು ಪಾದಯಾತ್ರೆ ರಾಜಕೀಯ ಲೆಕ್ಕಾಚಾರ ಹೊಂದಿತ್ತು.‌

ಪಾದಯಾತ್ರೆಯಿಂದ ಗದ್ದುಗೆ ಹಿಡಿದ ಕಾಂಗ್ರೆಸ್: ಬಳ್ಳಾರಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ 2013ರ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿತ್ತು. ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಪರಿಣಾಮ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಳ್ಳಾರಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಚಿಗುರೊಡೆದಿತ್ತು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 4 ರಿಂದ 6 ಸ್ಥಾನಗಳಿಗೆ ಏರಿಕೆ ಕಂಡಿತ್ತು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ 122 ಬಹುಮತದ ಗೆಲುವು ಸಾಧಿಸಿತ್ತು.

ತನ್ನ ಮತ ಪ್ರಮಾಣವನ್ನು ಶೇ 36.76ಗೆ ಏರಿಕೆ ಮಾಡಿತ್ತು. ತಮ್ಮ ಪಾದಯಾತ್ರೆಗಳ ಮೂಲಕ ಕಾಂಗ್ರೆಸ್ 2013ರಲ್ಲಿ ಮುಂಬೈ ಕರ್ನಾಟಕ‌ ಭಾಗದಲ್ಲಿನ 56 ಸ್ಥಾನಗಳ ಪೈಕಿ 34 ಸ್ಥಾನ ಗೆದ್ದಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ 19 ಸ್ಥಾನದಲ್ಲಿ ಗೆದ್ದು ಬೀಗಿತ್ತು. ಅದೇ ರೀತಿ ಮಧ್ಯ ಕರ್ನಾಟಕ ಭಾಗದಲ್ಲಿ 32 ಸ್ಥಾನಗಳ ಪೈಕಿ 18 ಸೀಟು ಗೆದ್ದಿತ್ತು. ಆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 40 ಸ್ಥಾನಕ್ಕೆ ಕುಸಿತ ಕಂಡಿತು.

ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿಗೆ ಬೆಂಗಳೂರು ಸೇರಿದಂತೆ ರಾಮನಗರದ ಮಟ್ಟಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ‌ ಫಲಿತಾಂಶ ನೀಡಿತ್ತು. ಮೇಕೆದಾಟು ಪಾದಯಾತ್ರೆ ಬಂದ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಸಫಲವಾಗಿತ್ತು.‌

ಅಪರಾಧ

BAIRATHI BASAVARJU BREAKING NEWS : ಸಿಐಡಿ ಲುಕ್‌ಔಟ್ ನೋಟಿಸ್ ಜಾರಿ, ತನಿಖೆ ತೀವ್ರ

ಬೆಂಗಳೂರು: ರೌಡಿಶೀಟರ್ ಬಿಲ್ಲು ಶಿವ ಕೊಲೆ ಪ್ರಕರಣದಲ್ಲಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಕಾನೂನು ಹಿನ್ನಡೆ ಎದುರಾಗಿದೆ. ನಿರೀಕ್ಷಣಾ ಜಾಮೀನಿಗಾಗಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಅವರ ಬಂಧನದ ಭೀತಿ ಮತ್ತಷ್ಟು ಗಟ್ಟಿಯಾಗಿದೆ.

ಈ ಹಿಂದೆ ಇದೇ ಪ್ರಕರಣದಲ್ಲಿ ಹೈಕೋರ್ಟ್ ಕೂಡ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು. ಅದರ ನಂತರ ಬೈರತಿ ಬಸವರಾಜ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಅಲ್ಲಿ ಸಹ ನ್ಯಾಯಾಲಯ ಜಾಮೀನು ನೀಡಲು ನಿರಾಕರಿಸಿದೆ. ವಿಚಾರಣೆ ವೇಳೆ ನಿಯಮಿತ ಜಾಮೀನಿಗೆ ಅರ್ಜಿ ಸಲ್ಲಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿರುವುದು ಗಮನಾರ್ಹ.

ಈ ಬೆಳವಣಿಗೆಯೊಂದಿಗೆ ತನಿಖಾ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಈಗಾಗಲೇ ಸಿಐಡಿ ಪೊಲೀಸರು ಬೈರತಿ ಬಸವರಾಜ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದ್ದಾರೆ. ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಮುಂದಿನ ದಿನಗಳಲ್ಲಿ ಕಾನೂನು ಕ್ರಮಗಳು ಮತ್ತಷ್ಟು ಗಟ್ಟಿಯಾಗುವ ಸಾಧ್ಯತೆಗಳಿವೆ.

ರಾಜಕೀಯ ವಲಯದಲ್ಲೂ ಈ ವಿಚಾರ ಚರ್ಚೆಗೆ ಗ್ರಾಸವಾಗಿದ್ದು, ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಪ್ರಕರಣ ಹೊಸ ತಿರುವು ಪಡೆದಿದೆ.

Continue Reading

ಕ್ರೀಡೆ

ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್‌ಗೆ ಜನ್ಮದಿನ ಸಂಭ್ರಮ: ವಿಶಿಯ ಕಲಾತ್ಮಕ ಬ್ಯಾಟಿಂಗ್‌ಗೆ 77ನೇ ವಸಂತ

ಬೆಂಗಳೂರು: ಭಾರತೀಯ ಕ್ರಿಕೆಟ್ ಇತಿಹಾಸದ ಕಲಾತ್ಮಕ ಬ್ಯಾಟ್ಸ್‌ಮನ್‌ಗಳಲ್ಲಿ ಅಗ್ರಸ್ಥಾನ ಪಡೆದಿರುವ ಗುಂಡಪ್ಪ ರಂಗನಾಥ್ ವಿಶ್ವನಾಥ್ (GR Vishwanath) ಅವರಿಗೆ ಫೆಬ್ರವರಿ 12ರಂದು ಜನ್ಮದಿನ ಸಂಭ್ರಮ. ವಿಶಿ ಕ್ರೀಸಿಗೆ ಬಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಬ್ಬದ ವಾತಾವರಣವೇ ಸೃಷ್ಟಿಯಾಗುತ್ತಿತ್ತು. ಶತಕ ಸಿಡಿಸಿದ ಯಾವುದೇ ಪಂದ್ಯದಲ್ಲಿ ಭಾರತ ಸೋತ ಉದಾಹರಣೆ ಇಲ್ಲ — ಒಂದೋ ಗೆಲುವು, ಇಲ್ಲವೇ ಡ್ರಾ!

1969ರಲ್ಲಿ ಕಾನ್ಪುರದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಪಾದಾರ್ಪಣೆ ಮಾಡಿದ ವಿಶಿ, ಮೊದಲ ಇನ್ನಿಂಗ್ಸ್‌ನಲ್ಲಿ ಶೂನ್ಯಕ್ಕೆ ಔಟ್ ಆದರೂ, ಎರಡನೇ ಇನ್ನಿಂಗ್ಸ್‌ನಲ್ಲಿ 25 ಬೌಂಡರಿಗಳೊಂದಿಗೆ 137 ರನ್ ಸಿಡಿಸಿ ಕ್ರಿಕೆಟ್ ಲೋಕದ ಗಮನ ಸೆಳೆದರು. ಅವರ ಸ್ಕ್ವೇರ್ ಕಟ್ ಶಾಟ್ ಕ್ರಿಕೆಟ್ ಅಭಿಮಾನಿಗಳ ಮನಸ್ಸು ಗೆದ್ದಿತ್ತು.

ಗವಾಸ್ಕರ್ ಪ್ರಶಂಸೆ, ಹೆಲ್ಮೆಟ್ ಇಲ್ಲದೆ ವೇಗದ ಬೌಲರ್ ಎದುರಿಸಿದ ಧೈರ್ಯ

“ನನ್ನಂತಹ ನೂರು ಗವಾಸ್ಕರ್ ಬರಬಹುದು, ಆದರೆ ವಿಶಿಯಂತವರು ಬರಲಾರರು” ಎಂಬ ಸುನಿಲ್ ಗವಾಸ್ಕರ್ ಮಾತುಗಳು ವಿಶಿಯ ಮಹತ್ವ ಸಾರುತ್ತವೆ. ಆಂಡಿ ರಾಬರ್ಟ್ಸ್, ಜೆಫ್ ಥಾಂಪ್ಸನ್‌ಂತಹ ವೇಗದ ಬೌಲರ್‌ಗಳನ್ನು ಹೆಲ್ಮೆಟ್ ಇಲ್ಲದೆ ಎದುರಿಸಿದ ಧೈರ್ಯವೂ ವಿಶಿಯ ವಿಶೇಷ.

ಕ್ರೀಡಾಸ್ಪೂರ್ತಿಗೆ ಮಾದರಿ

1980ರ ಸುವರ್ಣ ಮಹೋತ್ಸವ ಟೆಸ್ಟ್‌ನಲ್ಲಿ ಅಂಪೈರ್ ತಪ್ಪು ತೀರ್ಪು ನೀಡಿದಾಗ ಬಾಬ್ ಟೇಲರ್ ಅವರನ್ನು ಮರು ಕ್ರೀಸಿಗೆ ಕರೆಸಿದ ವಿಶಿಯ ಕ್ರೀಡಾಸ್ಫೂರ್ತಿ ಕ್ರಿಕೆಟ್ ಇತಿಹಾಸದಲ್ಲಿ ಅಚ್ಚಳಿಯದೆ ಉಳಿದಿದೆ.

ರಣಜಿ ಫೈನಲ್‌ಗೂ ಮದುವೆಯೂ ಒಂದೇ ಸಮಯ

1978ರಲ್ಲಿ ಗವಾಸ್ಕರ್ ಸಹೋದರಿ ಕವಿತಾ ಅವರನ್ನು ಮದುವೆಯಾದ ವಿಶಿ, ಮದುವೆಯ ಬಳಿಕ ನೇರವಾಗಿ ಮೈದಾನಕ್ಕಿಳಿದು ರಣಜಿ ಫೈನಲ್‌ನಲ್ಲಿ 247 ರನ್ ಸಿಡಿಸಿ ಕರ್ನಾಟಕಕ್ಕೆ ಕಿರೀಟ ತಂದುಕೊಟ್ಟರು.

ವಿಶಿಯ ಮೂರು ಸ್ಮರಣೀಯ ಇನ್ನಿಂಗ್ಸ್

  • 1975, ಮದ್ರಾಸ್: ವೆಸ್ಟ್ ಇಂಡೀಸ್ ವಿರುದ್ಧ ಅಜೇಯ 97 ರನ್
  • 1969, ಕಾನ್ಪುರ: ಪಾದಾರ್ಪಣೆ ಪಂದ್ಯದಲ್ಲೇ 137 ರನ್
  • 1981, ಎಂಸಿಜಿ: ಆಸ್ಟ್ರೇಲಿಯಾ ವಿರುದ್ಧ 114 ರನ್

77ನೇ ವಸಂತಕ್ಕೆ ಕಾಲಿಡುತ್ತಿರುವ ಕನ್ನಡದ ಹೆಮ್ಮೆ ಜಿಆರ್ ವಿಶ್ವನಾಥ್ ಅವರಿಗೆ ಹಾರ್ದಿಕ ಶುಭಾಶಯಗಳು.

Continue Reading

ದೇಶ

ಹೊಸಕೋಟೆಗೆ ಬಜೆಟ್‌ ಬಲ ಸಿಗುತ್ತಾ? ಮೆಟ್ರೋ, ನೀರಾವರಿ, ಒಳಚರಂಡಿ ಯೋಜನೆಗಳ ನಿರೀಕ್ಷೆ

ಹೊಸಕೋಟೆ: ಬೆಂಗಳೂರು ನಗರಕ್ಕೆ ಹೊಂದಿಕೊಂಡು ವೇಗವಾಗಿ ವಿಸ್ತರಿಸುತ್ತಿರುವ ಹೊಸಕೋಟೆ ತಾಲೂಕು ಮುಂದಿನ ರಾಜ್ಯ ಬಜೆಟ್‌ ಮೇಲೆ ಭಾರೀ ನಿರೀಕ್ಷೆ ಇಟ್ಟುಕೊಂಡಿದೆ. ನೀರಾವರಿ, ಕೃಷಿ, ರಸ್ತೆ, ಮೆಟ್ರೋ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಬೇಕು ಎಂದು ಜನತೆ ಆಗ್ರಹಿಸುತ್ತಿದ್ದಾರೆ.

2 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಹೊಸಕೋಟೆ, ವಾಣಿಜ್ಯ ಹಾಗೂ ವಸತಿ ವಿಸ್ತಾರದಲ್ಲಿ ಮಹತ್ವ ಪಡೆದುಕೊಂಡಿದೆ. ಶಾಸಕರು ಈಗಾಗಲೇ ಮೆಟ್ರೋ ವಿಸ್ತರಣೆಗೆ ಹೆಜ್ಜೆಯಿಟ್ಟಿದ್ದು, ಕೆ.ಆರ್‌.ಪುರಂ ಮೂಲಕ ಹೊಸಕೋಟೆಗೆ ಮೆಟ್ರೋ ಸಂಪರ್ಕ ನೀಡುವ ಬಗ್ಗೆ ಬಿಎಂಆರ್‌ಸಿಎಲ್ ಅಧ್ಯಯನ ಆರಂಭಿಸಿದೆ. ಬಜೆಟ್‌ನಲ್ಲಿ ಆರ್ಥಿಕ ಮಂಜೂರು ಸಿಗುತ್ತದೆಯೇ ಎಂಬುದು ಕುತೂಹಲ.

ಗ್ರಾಮಾಂತರ ಪೊಲೀಸ್ ಠಾಣೆ ಬೇಡಿಕೆ

ಪ್ರಸ್ತುತ ಹೊಸಕೋಟೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 31 ವಾರ್ಡ್‌ಗಳು ಹಾಗೂ 15 ಸಾವಿರಕ್ಕೂ ಹೆಚ್ಚು ಹಳ್ಳಿಗಳ ಜನಸಂಖ್ಯೆ ಒಳಗೊಂಡಿದೆ. ಪ್ರತ್ಯೇಕ ಗ್ರಾಮಾಂತರ ಪೊಲೀಸ್ ಠಾಣೆ ತೆರೆಯುವಂತೆ ಶಾಸಕರು ಸದನದಲ್ಲಿ ಮನವಿ ಮಾಡಿದ್ದು, ಗೃಹ ಸಚಿವರು ಬಜೆಟ್‌ನಲ್ಲಿ ಸ್ಪಂದನೆ ಸಿಗುವ ಭರವಸೆ ನೀಡಿದ್ದಾರೆ.

ನೀರಾವರಿ ಮತ್ತು ಒಳಚರಂಡಿಗೆ ಒತ್ತು

ವಂಗಯ್ಯನ ಕೆರೆ ಏತ ನೀರಾವರಿ ಯೋಜನೆ ಅನುಷ್ಠಾನಗೊಂಡಿದ್ದರೂ ಸೂಲಿಬೆಲೆ ಹಾಗೂ ನಂದಗುಡಿ ಹೋಬಳಿಗಳ ಕೆರೆಗಳಿಗೆ ನೀರು ಹರಿಸುವ ಯೋಜನೆಗೆ ಹೆಚ್ಚಿನ ಅನುದಾನ ಅಗತ್ಯವಿದೆ. ಜೊತೆಗೆ ₹100 ಕೋಟಿ ವೆಚ್ಚದ ಶಾಶ್ವತ ಒಳಚರಂಡಿ ಕಾಮಗಾರಿ ಮಂಜೂರಾಗಬೇಕು ಎಂಬುದು ನಾಗರಿಕರ ಬೇಡಿಕೆ.

ದೊಡ್ಡ ಅಮಾನಿಕೆರೆ ಪ್ರವಾಸಿ ತಾಣವಾಗುತ್ತದೆಯೇ?

ನಗರದ ದೊಡ್ಡ ಹಾಗೂ ಚಿಕ್ಕ ಅಮಾನಿಕೆರೆಗಳಲ್ಲಿ 200ಕ್ಕೂ ಹೆಚ್ಚು ಜೀವ ವೈವಿಧ್ಯ ಪ್ರಭೇದಗಳಿವೆ. ಇದನ್ನು ಪ್ರವಾಸಿ ಹಾಗೂ ಜೀವ ವೈವಿಧ್ಯ ತಾಣವಾಗಿ ಅಭಿವೃದ್ಧಿಪಡಿಸಬೇಕು ಎಂಬ ಅಭಿಲಾಷೆ ವ್ಯಕ್ತವಾಗಿದೆ.


🔹 ಬಜೆಟ್ ನಿರೀಕ್ಷೆಯ ಪ್ರಮುಖ ಅಂಶಗಳು:

  • ಚೆನ್ನ ಬೈರೇಗೌಡ ಕ್ರೀಡಾಂಗಣ ಮೆಲ್ದರ್ಜೆ
  • ಶಾಶ್ವತ ಒಳಚರಂಡಿ ಕಾಮಗಾರಿ
  • ನೂತನ ನ್ಯಾಯಾಲಯ ಸಂಕೀರ್ಣ
  • ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ ಮತ್ತು ಡಿಪೊ
  • ಸರ್ಕಾರಿ ಮಹಿಳಾ ಪದವಿ ಕಾಲೇಜು
Continue Reading

Trending