Connect with us

ಬೆಂಗಳೂರು

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಯಾವುದೇ ಕ್ಷಣದಲ್ಲಿ ರಾಜೀನಾಮೆ: ಬಿ ವೈ ವಿಜಯೇಂದ್ರ – Vijayendra Meets JP Nadda

ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣವಾಗಿ ಕುಸಿದಿದೆ. ಸಿದ್ದರಾಮಯ್ಯನವರು ಯಾವುದೇ ಕ್ಷಣದಲ್ಲಿ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಭವಿಷ್ಯ ನುಡಿದರು.

ದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೈಷ್ಣೋದೇವಿಗೆ ಹೋಗಿ ಬಂದಿದ್ದಾರೆ. ತಾಯಿಯಲ್ಲಿ ಆಶೀರ್ವಾದ ಬೇಡಿಕೊಂಡು ಬಂದಂತಿದೆ; ಅದು ಬೇರೆ ವಿಚಾರ ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತದ ಅಂತ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಯಾವುದೇ ಕ್ಷಣದಲ್ಲಿ ರಾಜೀನಾಮೆ ಕೊಡಬಹುದು ಎಂದರು.

ಬಿಜೆಪಿ-ಜೆಡಿಎಸ್ ಪಾದಯಾತ್ರೆಯಲ್ಲಿ ಸಾವಿರಾರು ಜನರು ಉತ್ಸಾಹದಿಂದ ಭಾಗವಹಿಸಿದ್ದರು. ಪಾಪ; ಕಾಂಗ್ರೆಸ್ಸಿಗರು ಗಾಬರಿಯಿಂದ ನಮ್ಮ ಪಾದಯಾತ್ರೆ ತಲುಪುವ ಮುನ್ನ ಜನಾಂದೋಲನ ಮಾಡಿದ್ದರು. ಮತ್ತೊಂದೆಡೆ ಸ್ವತಃ ಸಿದ್ದರಾಮಯ್ಯನವರು ಮೈಸೂರಿನಲ್ಲಿದ್ದು, ಜನಾಂದೋಲನಕ್ಕೆ ಸಿದ್ಧತೆ ಮಾಡಿದ್ದರು. ಮುಖ್ಯಮಂತ್ರಿಗಳು ರಾಜ್ಯದ ಜನರ ವಿಶ್ವಾಸ ಕಳೆದುಕೊಂಡಿದ್ದಾರೆ. ಅವರ ಕುರಿತು ಕಾಂಗ್ರೆಸ್ಸಿನ ಶಾಸಕರು ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ. ಇವತ್ತಲ್ಲ ನಾಳೆ ಸಿಎಂ ರಾಜೀನಾಮೆ ಕೊಡಲೇಬೇಕು. ಹೈಕೋರ್ಟ್ ತೀರ್ಪು ಬಂದ ಬಳಿಕವಾದರೂ ಅವರು ರಾಜೀನಾಮೆ ನೀಡಲಿದ್ದಾರೆ, ಇವತ್ತಲ್ಲ ನಾಳೆ ಆ 14 ನಿವೇಶನಗಳು ಮುಡಾ ಪಾಲಾಗಿ ಬಡವರಿಗೆ ಸಿಗಲಿವೆ. ಈ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಬಳಿಕ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅಭಿವೃದ್ಧಿ ಕೆಲಸಗಳು ಶುರುವೇ ಆಗಿಲ್ಲ. ಯಾವುದೇ ಹೊಸ ಯೋಜನೆಯನ್ನು ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಅನುಷ್ಠಾನ ಮಾಡುತ್ತಿಲ್ಲ ಎಂದು ಟೀಕಿಸಿದರು.

ಸರ್ಕಾರದ ಗ್ಯಾರಂಟಿ ಪರಿಣಾಮವಾಗಿ ಕೆಎಸ್‍ಆರ್​ಟಿಸಿಗೆ 4,500 ಕೋಟಿ ರೂ. ಕೊಡಬೇಕಿದೆ. ಇನ್ನೂ ಮೂರ್ನಾಲ್ಕು ತಿಂಗಳು ಹೀಗೇ ಮುಂದುವರೆದರೆ ಕೆಎಸ್‍ಆರ್​ಟಿ ಬಾಗಿಲು ಮುಚ್ಚಲಿದೆ. ಸಂಬಳ ಕೊಡಲೂ ದುಡ್ಡಿಲ್ಲ. ಮತ್ತೊಂದು ಕಡೆ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಿಸುವುದಾಗಿ ತಿಳಿಸಿದ್ದರು. ರಾಜ್ಯದ ಆರ್ಥಿಕ ಪರಿಸ್ಥಿತಿ ಸಂಪೂರ್ಣ ಕುಗ್ಗಿ ಹೋಗಿದ್ದು, 14 ಬಜೆಟ್ ಮಂಡಿಸಿದ ಅನುಭವಿ ಮುಖ್ಯಮಂತ್ರಿಗಳಿದ್ದರೂ ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಿಸುವುದು ಇರಲಿ; ಅವರ ಗೌರವಧನವನ್ನು 3 ತಿಂಗಳಿಂದ ಪಾವತಿಸಿಲ್ಲ ಎಂದು ಆಕ್ಷೇಪಿಸಿದರು. ಕರ್ನಾಟಕದಲ್ಲಿ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿವೆ. ಕಾನೂನು- ಸುವ್ಯವಸ್ಥೆ ಹಾಳಾಗಿದೆ ಎಂದರು.

ಸರ್ಕಾರ ಕಾಲಹರಣ ಮಾಡುತ್ತಿದೆ. ವಾಲ್ಮೀಕಿ ನಿಗಮದಲ್ಲಿ 87 ಕೋಟಿ ಹಗರಣ ನಡೆದ ಕುರಿತು ಮುಖ್ಯಮಂತ್ರಿಗಳು ಒಪ್ಪಿಕೊಂಡಿದ್ದಾರೆ. ಅದೇ ಮಾದರಿಯಲ್ಲಿ ಮುಡಾದ ತಪ್ಪನ್ನೂ ಒಪ್ಪಿಕೊಂಡು, ನ್ಯಾಯಾಲಯದ ಆದೇಶಕ್ಕೆ ಕಾಯದೆ ಕೂಡಲೇ ರಾಜೀನಾಮೆ ಕೊಟ್ಟರೆ ಒಳಿತು ಎಂದು ಹೇಳಿದರು.

ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆಯ ಯಶಸ್ಸಿನ ಕುರಿತು ಮಾಹಿತಿ ಹಂಚಿಕೊಂಡಿದ್ದೇನೆ. ರಾಷ್ಟ್ರೀಯ ಅಧ್ಯಕ್ಷರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಕಳೆದ ಬಾರಿ 1.05 ಕೋಟಿ ಸದಸ್ಯತ್ವವನ್ನು ನಾವು ನೋಂದಣಿ ಮಾಡಿಸಿದ್ದೆವು. ಈ ಬಾರಿ ಇನ್ನೂ ಹೆಚ್ಚು ಸದಸ್ಯತ್ವ ದಾಖಲಿಸುವ ಕುರಿತು ಕೂಡ ಗಮನ ಸೆಳೆದುದಾಗಿ ಹೇಳಿದರು.

ಅಹಿಂದ ಸಮುದಾಯಗಳಿಗೆ ಅನ್ಯಾಯ: ವಾಲ್ಮೀಕಿ ನಿಗಮದ ಹಗರಣ ಸಂಬಂಧ ಎಸ್‍ಐಟಿ ರಚಿಸಿ ಕ್ಲೀನ್ ಚಿಟ್ ಕೊಡಿಸುವ ಅಗತ್ಯ ಏನಿತ್ತು? ಸರ್ಕಾರದ ದಲಿತರ ಕಾಳಜಿ ಅಂದರೆ ಇದೇನಾ ಎಂದು ವಿಜಯೇಂದ್ರ ಪ್ರಶ್ನಿಸಿದರು. ಈ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ, ಇ.ಡಿ. ತನಿಖೆ ನಡೆಯುತ್ತಿದೆ. ಇದೊಂದು ಗಂಭೀರ ಪ್ರಕರಣ. ಲೆಕ್ಕಾಧಿಕಾರಿ ಚಂದ್ರಶೇಖರನ್​ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಶಾಸಕರನ್ನು ದೂರವಿಟ್ಟು ಯಾರಿಗೆ ದ್ರೋಹ ಮಾಡುತ್ತಿದ್ದೀರಿ? ಅಹಿಂದ ಸಮುದಾಯಗಳಿಗೆ ಸಿದ್ದರಾಮಯ್ಯನವರು ಅನ್ಯಾಯ ಮಾಡುತ್ತಿದ್ದಾರೆ ಎಂದು ವಿಜಯೇಂದ್ರ ಆರೋಪಿಸಿದರು.

ಹಿಂದೆ ಇದೇ ಸಿದ್ದರಾಮಯ್ಯನವರು ಎಸಿಬಿ ಮೂಲಕ ಕ್ಲೀನ್ ಚಿಟ್ ಪಡೆದುಕೊಂಡ ಇತಿಹಾಸ ಇದೆ. ರಾಷ್ಟ್ರಮಟ್ಟದಲ್ಲಿ ಸಿದ್ದರಾಮಯ್ಯನವರ ವಿಚಾರದಲ್ಲಿ ಹೋರಾಟ ಮಾಡುವ ಕುರಿತು ರಾಜ್ಯದ ನಾಯಕರ ಕೆಲವು ಸಲಹೆಗಳಿದ್ದು, ಅದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ. ಪಕ್ಷದ ವರಿಷ್ಠರು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅಥವಾ ಇನ್ಯಾರದೋ ವಿರುದ್ಧ ದೆಹಲಿಯಲ್ಲಿ ದೂರು ಕೊಡಲು ನನ್ನನ್ನು ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ; ಸಂಘಟನೆ ಬಲಪಡಿಸಲು, ಬಿಜೆಪಿ ಸ್ಪಷ್ಟ ಬಹುಮತ ಪಡೆಯಲು ರಾಜ್ಯಾಧ್ಯಕ್ಷನನ್ನಾಗಿ ಮಾಡಿದ್ದಾರೆ. ಯತ್ನಾಳ್ ಅವರ ಕುರಿತು ಇಲ್ಲಿ ನಾನು ಪ್ರಸ್ತಾಪಿಸಿಲ್ಲ; ಅದರ ಅವಶ್ಯಕತೆಯೂ ನನಗಿಲ್ಲ. ಪಕ್ಷದ ಬೆಳವಣಿಗೆಗೆ ಪೂರಕ ಇದ್ದರೆ, ರಾಷ್ಟ್ರೀಯ ನಾಯಕರ ಒಪ್ಪಿಗೆ ಇದ್ದರೆ ಇನ್ನೊಂದು ಪಾದಯಾತ್ರೆ ಮಾಡಬಹುದು. ಅದರ ಬಗ್ಗೆ ಈಗ ನಾನು ಮಾತನಾಡಲ್ಲ. ಆದರೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷಕ್ಕೆ ಬಲ ತುಂಬಲಿದ್ದೇನೆ ಎಂದರು.

ಕ್ರೀಡೆ

JAIN UNIVERSITY : ಜೈನ್ ಯುನಿವರ್ಸಿಟಿಯಲ್ಲಿ ಮಹಿಳಾ ಬಾಸ್ಕೆಟ್‌ಬಾಲ್ ಹಬ್ಬ

ಬೆಂಗಳೂರು, ಫೆ.11: ಕನಕಪುರ ರಸ್ತೆಯ ಜೈನ್ ಯುನಿವರ್ಸಿಟಿ ಗ್ಲೋಬಲ್ ಕ್ಯಾಂಪಸ್‌ನಲ್ಲಿ ನಡೆಯುತ್ತಿರುವ ಆಲ್ ಇಂಡಿಯಾ ಅಂತರ್ ವಿಶ್ವವಿದ್ಯಾಲಯ ಮಹಿಳಾ ಬಾಸ್ಕೆಟ್‌ಬಾಲ್ ಚಾಂಪಿಯನ್‌ಶಿಪ್‌ನಲ್ಲಿ (All India Inter University Women’s Basketball Championship) ಎರಡನೇ ದಿನದ ಲೀಗ್ ಪಂದ್ಯಗಳು ರೋಚಕತೆಯಿಂದ ಸಾಗಿದವು.

ಮೊದಲ ಪಂದ್ಯದಲ್ಲಿ ಚಂಡೀಗಢ ವಿಶ್ವವಿದ್ಯಾಲಯ 70-59 ಅಂತರದಲ್ಲಿ ಡಿಎವಿ ಇಂಡೋರ್ ತಂಡವನ್ನು ಮಣಿಸಿತು. ಕುಸುಭು (25) ಮತ್ತು ದೀಪ್ಷಿಖಾ (19) ಚಂಡೀಗಢ ತಂಡದ ಪರ ಮಿಂಚಿದರು.

ಎರಡನೇ ಪಂದ್ಯದಲ್ಲಿ ಆತಿಥೇಯ ಜೈನ್ ವಿಶ್ವವಿದ್ಯಾಲಯ 65-25 ಅಂತರದಲ್ಲಿ ಯುನಿವರ್ಸಿಟಿ ಆಫ್ ಕಲ್ಕತ್ತಾ ವಿರುದ್ಧ ಭರ್ಜರಿ ಗೆಲುವು ದಾಖಲಿಸಿತು. ಹರ್ಷಿತಾ (13) ಮತ್ತು ಆದ್ಯಾ ಗೌಡ (10) ಗಮನಾರ್ಹ ಆಟವಾಡಿದರು.

ಮೂರನೇ ಪಂದ್ಯದಲ್ಲಿ ಎಸ್‌ಆರ್‌ಎಂ ವಿಶ್ವವಿದ್ಯಾಲಯ 58-15 ಅಂತರದಲ್ಲಿ ಎಂಭಿಎಸ್‌ಪಿಎಸ್‌ಯು ಪಟಿಯಾಲಾ ವಿರುದ್ಧ ಜಯ ಸಾಧಿಸಿತು.

ನಾಲ್ಕನೇ ಪಂದ್ಯದಲ್ಲಿ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ 63-58 ಅಂತರದಲ್ಲಿ ಕ್ರೈಸ್ಟ್ ವಿಶ್ವವಿದ್ಯಾಲಯವನ್ನು ರೋಚಕವಾಗಿ ಸೋಲಿಸಿತು.

ಐದನೇ ಪಂದ್ಯದಲ್ಲಿ ಐಟಿಎಂ ವಿಶ್ವವಿದ್ಯಾಲಯ 65-30 ಅಂತರದಲ್ಲಿ ಎಸ್‌ಜಿಜಿವಿಎ ಯುನಿವರ್ಸಿಟಿಯನ್ನು ಮಣಿಸಿತು.

ಆರನೇ ಪಂದ್ಯದಲ್ಲಿ ಎಲ್‌ಎನ್‌ಐಪಿಇ ವಿಶ್ವವಿದ್ಯಾಲಯ 68-28 ಅಂತರದಲ್ಲಿ ಪಂಡಿತ್ ರವಿ ಶಂಕರ್ ವಿಶ್ವವಿದ್ಯಾಲಯವನ್ನು ಸೋಲಿಸಿತು.

ಇದಕ್ಕೂ ಮೊದಲು ಫೆ.10ರ ಸಂಜೆ ನಡೆದ ಲೀಗ್ ಪಂದ್ಯಗಳಲ್ಲಿ ಚಂಡೀಗಢ ವಿಶ್ವವಿದ್ಯಾಲಯ, ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಹಾಗೂ ಎಂಜಿ ಯುನಿವರ್ಸಿಟಿ ಕೊಟ್ಟಾಯಂ ಜಯಗಳಿಸಿದ್ದವು.

ಟೂರ್ನಿಯ ಮುಂದಿನ ಲೀಗ್ ಪಂದ್ಯಗಳು ಹಾಗೂ ನಾಕೌಟ್ ಹಂತದ ಪಂದ್ಯಗಳಿಗೆ ಕ್ರೀಡಾಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Continue Reading

ಅಪರಾಧ

ಬಿಕ್ಲು ಶಿವ ಕೊಲೆ ಪ್ರಕರಣ: ಸುಪ್ರೀಂಕೋರ್ಟ್ ಮೊರೆ ಹೋದ ಶಾಸಕ ಬೈರತಿ ಬಸವರಾಜ್

ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಲ್ಲಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ (Bairati Basavaraj) ಇದೀಗ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ನಿರೀಕ್ಷಣಾ ಜಾಮೀನು ಕೋರಿ ಅವರು ಅರ್ಜಿ ಸಲ್ಲಿಸಿದ್ದಾರೆ.

ನಿನ್ನೆ ಮಾತ್ರ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನ್ಯಾಯಮೂರ್ತಿ ನ್ಯಾಸುನೀಲ್ ದತ್ ಯಾದವ್ ಅವರು ಅರ್ಜಿಯನ್ನು ತಿರಸ್ಕರಿಸಿದರು. ಈ ಬೆಳವಣಿಗೆಯ ಬೆನ್ನಲ್ಲೇ ಬೈರತಿ ಬಸವರಾಜ್ ತಲೆಮರೆಸಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಬಿಕ್ಲು ಶಿವ ಭೀಕರ ಹತ್ಯೆ ಪ್ರಕರಣದಲ್ಲಿ ಈಗಾಗಲೇ 20 ಆರೋಪಿಗಳ ಪೈಕಿ ಎ-1 ಆರೋಪಿ ಜಗದೀಶ್ ಸೇರಿ 18 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಡೀಫಾಲ್ಟ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು 42ನೇ ಎಸಿಎಂಎಂ ಕೋರ್ಟ್ ತಿರಸ್ಕರಿಸಿತ್ತು.

ಇದಕ್ಕೂ ಮುನ್ನ ಬೆಳಗಾವಿ ಅಧಿವೇಶನದ ಸಮಯದಲ್ಲಿ ನಾಪತ್ತೆಯಾಗಿದ್ದ ಬೈರತಿ ಬಸವರಾಜ್ ಬಂಧನಕ್ಕೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಮಧ್ಯಂತರ ಜಾಮೀನು ಮಂಜೂರಾದರೂ, ನಂತರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಬೇಲ್ ರದ್ದುಪಡಿಸಿತ್ತು.

ಇದೀಗ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ಯಾವಾಗ ನಡೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

Continue Reading

ಅಪರಾಧ

BENGALURU : ಬೆಂಗಳೂರು ರಸ್ತೆ ಅಪಘಾತಕ್ಕೆ ಇಬ್ಬರು ಪುಟ್ಟ ಮಕ್ಕಳ ಬಲಿ

ಬೆಂಗಳೂರು: ನಗರದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಶಾಲಾ ಬಸ್ ಹರಿದು ಇಬ್ಬರು ಪುಟ್ಟ ಮಕ್ಕಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ (Bengaluru Accident) ಹೆಣ್ಣೂರು ಸಂಚಾರ ಠಾಣಾ ವ್ಯಾಪ್ತಿಯ ಥಣಿಸಂದ್ರದಲ್ಲಿ ನಡೆದಿದೆ.

ಮೃತರನ್ನು ನಗರದ ಸಿಎಆರ್ ವಿಭಾಗದ ಕಾನ್ಸ್‌ಟೇಬಲ್ ನಾಗನಗೌಡ ಅವರ ಮಕ್ಕಳಾದ ವರ್ಷ (2) ಮತ್ತು ಭಾನು (4) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ ನಾಗನಗೌಡ ಅವರು ಸ್ಕೂಟರ್‌ನಲ್ಲಿ ಇಬ್ಬರು ಮಕ್ಕಳನ್ನು ಕೂರಿಸಿಕೊಂಡು ಹಾಲು ತರಲು ತೆರಳಿದ್ದರು. ಥಣಿಸಂದ್ರ ಮುಖ್ಯರಸ್ತೆಯ ಬಳಿ ಎದುರುಗಡೆಯಿಂದ ಬಂದ ಅಜ್ ಮೋನಿ ಶಾಲೆಯ ಬಸ್ ಏಕಾಏಕಿ ತಿರುವು ಪಡೆದುಕೊಂಡಿದೆ. ಈ ವೇಳೆ ಸ್ಕೂಟರ್ ಮೇಲೆ ಬಸ್ ಹರಿದ ಪರಿಣಾಮ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಘಟನೆ ನಂತರ ಸ್ಥಳಕ್ಕೆ ಉತ್ತರ ವಿಭಾಗದ ಸಂಚಾರ ಪೊಲೀಸ್ ಡಿಸಿಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೆಣ್ಣೂರು ಸಂಚಾರ ಪೊಲೀಸರು ಮಹಜರು ನಡೆಸಿ, ಶಾಲಾ ಬಸ್ ಹಾಗೂ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ನಗರದಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತಗಳು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದ್ದು, ಸಂಚಾರ ನಿಯಮಗಳ ಕಟ್ಟುನಿಟ್ಟಿನ ಜಾರಿಯ ಅವಶ್ಯಕತೆ ಮತ್ತೆ ಒತ್ತಿ ಹೇಳಲಾಗಿದೆ.

Continue Reading

Trending