Connect with us

ದೇಶ

‘ಸಿದ್ದರಾಮಯ್ಯ ಹಳೇ ಹುಲಿ’: ಶೋಭಾ ಕರಂದ್ಲಾಜೆ ಕುತೂಹಲಕಾರಿ ಹೇಳಿಕೆ

Published

on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ, ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿಗೆ ಬಿಜೆಪಿ ನಾಯಕರು ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಹಾಗೂ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಅವರು ಕೆಲ ತಿಂಗಳ ಹಿಂದೆ ನೀಡಿದ್ದ ಸಂದರ್ಶನದಲ್ಲಿ “ಎರಡೂವರೆ ವರ್ಷಗಳ ಬಳಿಕ ಅಧಿಕಾರ ಹಸ್ತಾಂತರವಾಗಲಿದೆ” ಎಂದು ಹೇಳಿದ್ದನ್ನು ಇದೀಗ ಮತ್ತೆ ನೆನಪಿಸಿಕೊಳ್ಳಲಾಗುತ್ತಿದೆ. ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಮತ್ತೆ ಚರ್ಚೆಗೆ ಗ್ರಾಸವಾಗಿದೆ.

ಬಿಜೆಪಿ ನಾಯಕ ಸುನಿಲ್ ಕುಮಾರ್ ಮಾತನಾಡಿ, “ಹಿಂದುಳಿದ ವರ್ಗದ ರಾಜಕೀಯ ಏಳಿಗೆಯನ್ನು ಕಾಂಗ್ರೆಸ್ ಸಹಿಸುವುದಿಲ್ಲ. ದೇವರಾಜ ಅರಸು ಅವರನ್ನು ಹಿಂದೆ ಹೇಗೆ ಕೆಳಗಿಳಿಸಲಾಯಿತೋ, ಅದೇ ರೀತಿ ಈಗ ಸಿದ್ದರಾಮಯ್ಯರನ್ನು ಅಧಿಕಾರದಿಂದ ದೂರ ಮಾಡಲಾಗುತ್ತಿದೆ” ಎಂದು ಆರೋಪಿಸಿದರು.

ವಿಪಕ್ಷ ನಾಯಕ ಆರ್. ಅಶೋಕ್, “ರಾಜ್ಯಕ್ಕೆ ಬೇಕಾಗಿರುವುದು ಮುಖ್ಯಮಂತ್ರಿ ಬದಲಾವಣೆ ಅಲ್ಲ, ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬದಲಾವಣೆ” ಎಂದು ಟೀಕಿಸಿದರು. ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, “ಸಿದ್ದರಾಮಯ್ಯ ಹಳೇ ಹುಲಿ. ಅವರು ರಾಜೀನಾಮೆ ಕೊಡುವವರೆಗೆ ಯಾವುದೇ ಊಹೆ ಖಚಿತವಲ್ಲ” ಎಂದು ಅಭಿಪ್ರಾಯಪಟ್ಟರು.

ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, “ದಲಿತರು ಕಾಂಗ್ರೆಸ್‌ಗೆ ಕೇವಲ ವೋಟ್ ಬ್ಯಾಂಕ್ ಮಾತ್ರ” ಎಂದು ಆರೋಪಿಸಿದರು. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆದರೆ ಬೇಸರವಿಲ್ಲ, ಅವರು ನನ್ನ ಸ್ನೇಹಿತರು ಎಂದೂ ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿ, “ಹೊಸ ಎಟಿಎಂ ಗೇಟ್‌ಕೀಪರ್ ಹುಡುಕುವ ಕೆಲಸವೇ ನಡೆಯುತ್ತಿದೆ” ಎಂದು ಟೀಕಿಸಿದರು.

ಇನ್ನೊಂದೆಡೆ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, “ಸಿದ್ದರಾಮಯ್ಯರನ್ನು ಕೆಳಗಿಳಿಸುವುದು ಸಾಮಾನ್ಯ ನಿರ್ಧಾರವಲ್ಲ. ಇದರ ಪರಿಣಾಮ ಕಾಂಗ್ರೆಸ್ ಹಾಗೂ ಇಂಡಿಯಾ ಮೈತ್ರಿಕೂಟದ ಮೇಲೆ ಬೀಳಲಿದೆ” ಎಂದು ಎಚ್ಚರಿಕೆ ನೀಡಿದರು.

ಸದ್ಯ ಸಿದ್ದರಾಮಯ್ಯ ಅವರು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆ ಹಿನ್ನೆಲೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮುಂದುವರಿದಿದೆ.

ದೇಶ

ಎಸ್‌ಐಆರ್-2026 ಪ್ರಕ್ರಿಯೆಗೆ ಚಾಲನೆ: ಬಿಎಲ್‌ಒಗಳಿಗೆ ಕಟ್ಟುನಿಟ್ಟಿನ ಸೂಚನೆ

Published

on

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿದ್ದು, ಈ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಕುಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪರಿಷ್ಕರಣೆ ವೇಳೆ ಉದ್ದೇಶಪೂರ್ವಕವಾಗಿ ಅರ್ಹ ಮತದಾರರ ಹೆಸರನ್ನು ಕೈಬಿಟ್ಟರೆ ಅಥವಾ ಕರ್ತವ್ಯಲೋಪ ಎಸಗಿದರೆ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳ (BLO) ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ವಾರ್ತಾ ಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಹಾಗೂ ಅನರ್ಹ ವ್ಯಕ್ತಿಗಳು ಪಟ್ಟಿಯಲ್ಲಿ ಉಳಿಯಬಾರದು ಎಂಬ ಉದ್ದೇಶದಿಂದ ಈ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗಿದೆ” ಎಂದು ಹೇಳಿದರು.

ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ತಿಳಿಸಿದ ಅವರು, ಬಿಎಲ್‌ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡಿ ಅವರ ಸಹಿಯೊಂದಿಗೆ ಎಣಿಕೆ ಫಾರ್ಮ್ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ ಎಂದು ವಿವರಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಹೇಳಿದ ಅನ್ಕುಕುಮಾರ್, ಸಾರ್ವಜನಿಕರಿಗೆ ಉಂಟಾಗುವ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಪರಿಹರಿಸಲು ಪಂಚಾಯತ್ ಮಟ್ಟದಲ್ಲಿ ವಿಶೇಷ ಸಹಾಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರಾಜಕೀಯ ಪಕ್ಷಗಳ ಭಾಗವಹಿಸುವಿಕೆ ಕುರಿತು ಮಾಹಿತಿ ನೀಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಒಟ್ಟು 69,977 ಬೂತ್ ಮಟ್ಟದ ಏಜೆಂಟರು (BLA) ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು. ಇದರಲ್ಲಿ ಕಾಂಗ್ರೆಸ್ ಪಕ್ಷದ 36,213, ಬಿಜೆಪಿ 31,115 ಹಾಗೂ ಜೆಡಿಎಸ್ 2,316 ಏಜೆಂಟರು ಸೇರಿದ್ದಾರೆ.

ಕಾರ್ಯಾಗಾರದಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ, ಉಪ ಮುಖ್ಯ ಚುನಾವಣಾಧಿಕಾರಿ ವಂದನಾ ಹಾಗೂ ಸಹಾಯಕ ಮುಖ್ಯ ಚುನಾವಣಾಧಿಕಾರಿ ಮಹೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Continue Reading

ದೇಶ

‘ಅಪ್ಪಾಜಿ ಹೋಗಬೇಡಿ’: ಸಿದ್ದರಾಮಯ್ಯ ನೋಡಿ ಸಿಬ್ಬಂದಿ ಕಣ್ಣೀರು

Published

on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ನಡುವೆಯೇ, ವಿಧಾನಸೌಧದಲ್ಲಿ ಭಾವುಕ ದೃಶ್ಯಗಳು ಕಂಡುಬಂದಿವೆ. ವಿಶೇಷವಾಗಿ ಆಡಳಿತ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕೆಲ ಮಹಿಳಾ ಸಿಬ್ಬಂದಿ ಹಾಗೂ ಗುತ್ತಿಗೆ ಆಧಾರಿತ ನೌಕರರು ಕಣ್ಣೀರಿಟ್ಟು ಸಿಎಂಗೆ ವಿದಾಯ ಹೇಳಿದ ಘಟನೆ ಗಮನ ಸೆಳೆಯಿತು.

“ಅಪ್ಪಾಜಿ… ನೀವು ಹೋದ್ರೆ ನಮ್ಮನ್ನ ಕೈ ಬಿಡ್ತಾರೆ” ಎಂದು ಕೆಲ ಸಿಬ್ಬಂದಿ ಭಾವುಕರಾಗಿ ಗೋಳಾಡಿದರೆ, “ನಿಮ್ಮ ಹೆಸರು ಹೇಳಿಕೊಂಡೇ ಬದುಕುತ್ತಿದ್ದೇವೆ” ಎಂದು ಹೇಳುತ್ತಾ ನೌಕರರು ಕಣ್ಣೀರು ಹಾಕಿದರು. ಸಿದ್ದರಾಮಯ್ಯ ಅವರೊಂದಿಗೆ ಹೊಂದಿದ್ದ ಆತ್ಮೀಯತೆಯನ್ನು ವ್ಯಕ್ತಪಡಿಸಿದ ಸಿಬ್ಬಂದಿಯ ಭಾವನಾತ್ಮಕ ಮಾತುಗಳು ಅಲ್ಲಿ ನೆರೆದಿದ್ದವರ ಮನಸ್ಸನ್ನು ಮಿಡಿಯುವಂತೆ ಮಾಡಿತು.

ಈ ಭಾವುಕ ಕ್ಷಣಗಳ ನಡುವೆಯೂ ಸಿದ್ದರಾಮಯ್ಯ ಅವರು ತಮ್ಮ ಎಂದಿನ ಶೈಲಿಯಲ್ಲೇ ಶಾಂತವಾಗಿ ನಡೆದುಕೊಂಡರು. ಯಾವುದೇ ಪ್ರತಿಕ್ರಿಯೆ ನೀಡದೇ, ಸಣ್ಣ ನಗೆಯೊಂದಿಗೆ ವಿಷಲ್ ಹೊಡೆದುಕೊಂಡೇ ಅಲ್ಲಿಂದ ತೆರಳಿದ ದೃಶ್ಯ ಹಲವರ ಗಮನ ಸೆಳೆಯಿತು. ರಾಜಕೀಯದ ತೀವ್ರ ಬೆಳವಣಿಗೆಗಳ ನಡುವೆಯೂ ಅವರ ಸಮಾಧಾನಭರಿತ ನಡೆ ವಿಶೇಷ ಚರ್ಚೆಗೆ ಕಾರಣವಾಯಿತು.

ಇನ್ನೊಂದೆಡೆ, ವಿಧಾನಸೌಧದ ಆವರಣದಲ್ಲಿ ಸಿಎಂ ಅಭಿಮಾನಿಗಳು ಹಾಗೂ ಸಿಬ್ಬಂದಿ ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. “ಸಿದ್ದರಾಮಯ್ಯ ಬೇಕು” ಎಂದು ಘೋಷಣೆ ಕೂಗಿದ ಅಭಿಮಾನಿಗಳು ಸಿಎಂ ಪರ ಬೆಂಬಲ ವ್ಯಕ್ತಪಡಿಸಿದರು. ಆದರೆ ಸಿದ್ದರಾಮಯ್ಯ ಅವರು ಯಾವುದೇ ರಾಜಕೀಯ ಹೇಳಿಕೆ ನೀಡದೇ ಮೌನವಾಗಿ ಅಲ್ಲಿಂದ ನಿರ್ಗಮಿಸಿದರು.

ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರವಾಗಿರುವ ವೇಳೆಯಲ್ಲೇ ವಿಧಾನಸೌಧದಲ್ಲಿ ಕಂಡುಬಂದ ಈ ಭಾವುಕ ದೃಶ್ಯಗಳು ಕಾಂಗ್ರೆಸ್ ವಲಯದಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿವೆ.

Continue Reading

ದೇಶ

“ನನಗೆ ಯಾವುದೇ ನೋವಿಲ್ಲ”: ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಭಾವುಕ ಮಾತು

Published

on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜೀನಾಮೆ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ರೀತಿಯಲ್ಲಿ ವಿದಾಯ ಉಪಹಾರ ಸಭೆಯಲ್ಲಿ ಭಾವುಕವಾಗಿ ಮಾತನಾಡಿದ್ದಾರೆ. “ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ” ಎಂದು ಅವರು ಸಚಿವ ಸಂಪುಟದ ಸಹೋದ್ಯೋಗಿಗಳ ಎದುರು ಸ್ಪಷ್ಟಪಡಿಸಿದ್ದಾರೆ.

ಗುರುವಾರ ಬೆಳಗ್ಗೆ ಸಿಎಂ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಕಾಂಗ್ರೆಸ್ ಹೈಕಮಾಂಡ್ ತೀರ್ಮಾನವನ್ನು ಗೌರವಿಸುವುದು ತಮ್ಮ ಕರ್ತವ್ಯ ಎಂದು ಹೇಳಿದ್ದಾರೆ. “ಹೈಕಮಾಂಡ್ ಹೇಳುವುದನ್ನು ಪಾಲನೆ ಮಾಡುವುದು ನನ್ನ ಜವಾಬ್ದಾರಿ” ಎಂದು ಹೇಳುವ ಮೂಲಕ ನಾಯಕತ್ವ ಬದಲಾವಣೆ ಕುರಿತು ಮಹತ್ವದ ಸಂದೇಶ ನೀಡಿದ್ದಾರೆ.

ಸಭೆಯಲ್ಲಿ ಸಿದ್ದರಾಮಯ್ಯ ಅವರು ಈ ಹಿಂದೆ ನಡೆದಿದ್ದ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಸಹ ಉಲ್ಲೇಖ ಮಾಡಿದ್ದು, ಅದರ ಅನ್ವಯವೇ ಈ ನಿರ್ಧಾರ ಕೈಗೊಂಡಿರುವ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಸಚಿವ ಸಂಪುಟದ ಸಹೋದ್ಯೋಗಿಗಳ ಸಮ್ಮುಖದಲ್ಲೇ ರಾಜೀನಾಮೆ ನಿರ್ಧಾರವನ್ನು ಅಧಿಕೃತವಾಗಿ ಪ್ರಕಟಿಸಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದೆ.

ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆಗೆ ಉತ್ತರ ನೀಡಲು ಸಿದ್ದರಾಮಯ್ಯ ನಿರಾಕರಿಸಿದರು. “ಮುಂದಿನ ಸಿಎಂ ಯಾರು ಎನ್ನುವುದನ್ನು ಹೈಕಮಾಂಡ್ ತೀರ್ಮಾನ ಮಾಡಲಿದೆ. ನಾಯಕರು ಮುಂದಿನ ಎಲ್ಲ ಪ್ರಕ್ರಿಯೆಗಳನ್ನು ನಡೆಸುತ್ತಾರೆ” ಎಂದು ಅವರು ಹೇಳಿದರು.

ಈ ನಡುವೆ ಡಿಕೆ ಶಿವಕುಮಾರ್ ಹೆಸರು ಮುಂದಿನ ಮುಖ್ಯಮಂತ್ರಿ ಸ್ಥಾನಕ್ಕೆ ಮುಂಚೂಣಿಯಲ್ಲಿ ಕೇಳಿಬರುತ್ತಿದೆ. ಆದರೆ ಕಾಂಗ್ರೆಸ್ ಹೈಕಮಾಂಡ್ ಇನ್ನೂ ಅಧಿಕೃತ ಘೋಷಣೆ ಮಾಡಿಲ್ಲ. ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆ ಇದೀಗ ನಿರ್ಣಾಯಕ ಹಂತ ತಲುಪಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಹೈಕಮಾಂಡ್ ಮುಂದಿನ ನಡೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.

Continue Reading

Trending