Connect with us

ದೇಶ

ಎಸ್‌ಐಆರ್-2026 ಪ್ರಕ್ರಿಯೆಗೆ ಚಾಲನೆ: ಬಿಎಲ್‌ಒಗಳಿಗೆ ಕಟ್ಟುನಿಟ್ಟಿನ ಸೂಚನೆ

Published

on

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR)-2026 ಪ್ರಕ್ರಿಯೆಗೆ ಅಧಿಕೃತ ಚಾಲನೆ ದೊರೆತಿದ್ದು, ಈ ಕಾರ್ಯದಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯ ಸಹಿಸಲಾಗುವುದಿಲ್ಲ ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಕುಕುಮಾರ್ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪರಿಷ್ಕರಣೆ ವೇಳೆ ಉದ್ದೇಶಪೂರ್ವಕವಾಗಿ ಅರ್ಹ ಮತದಾರರ ಹೆಸರನ್ನು ಕೈಬಿಟ್ಟರೆ ಅಥವಾ ಕರ್ತವ್ಯಲೋಪ ಎಸಗಿದರೆ ಸಂಬಂಧಪಟ್ಟ ಬೂತ್ ಮಟ್ಟದ ಅಧಿಕಾರಿಗಳ (BLO) ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಬೆಂಗಳೂರಿನ ವಾರ್ತಾ ಸೌಧದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ನಡೆದ ಮಾಧ್ಯಮ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, “ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಹಾಗೂ ಅನರ್ಹ ವ್ಯಕ್ತಿಗಳು ಪಟ್ಟಿಯಲ್ಲಿ ಉಳಿಯಬಾರದು ಎಂಬ ಉದ್ದೇಶದಿಂದ ಈ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗಿದೆ” ಎಂದು ಹೇಳಿದರು.

ಈ ಬಾರಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗುವುದು ಎಂದು ತಿಳಿಸಿದ ಅವರು, ಬಿಎಲ್‌ಒಗಳು ಪ್ರತಿಯೊಬ್ಬ ಮತದಾರರ ಮನೆಗೆ ಭೇಟಿ ನೀಡಿ ಅವರ ಸಹಿಯೊಂದಿಗೆ ಎಣಿಕೆ ಫಾರ್ಮ್ ಹಾಗೂ ಅಗತ್ಯ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ ಎಂದು ವಿವರಿಸಿದರು.

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯೂ ಆಗಿದೆ ಎಂದು ಹೇಳಿದ ಅನ್ಕುಕುಮಾರ್, ಸಾರ್ವಜನಿಕರಿಗೆ ಉಂಟಾಗುವ ಸಮಸ್ಯೆಗಳನ್ನು ಸ್ಥಳೀಯ ಮಟ್ಟದಲ್ಲೇ ಪರಿಹರಿಸಲು ಪಂಚಾಯತ್ ಮಟ್ಟದಲ್ಲಿ ವಿಶೇಷ ಸಹಾಯ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಇದೇ ವೇಳೆ ರಾಜಕೀಯ ಪಕ್ಷಗಳ ಭಾಗವಹಿಸುವಿಕೆ ಕುರಿತು ಮಾಹಿತಿ ನೀಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಒಟ್ಟು 69,977 ಬೂತ್ ಮಟ್ಟದ ಏಜೆಂಟರು (BLA) ನೋಂದಾಯಿಸಿಕೊಂಡಿದ್ದಾರೆ ಎಂದು ಹೇಳಿದರು. ಇದರಲ್ಲಿ ಕಾಂಗ್ರೆಸ್ ಪಕ್ಷದ 36,213, ಬಿಜೆಪಿ 31,115 ಹಾಗೂ ಜೆಡಿಎಸ್ 2,316 ಏಜೆಂಟರು ಸೇರಿದ್ದಾರೆ.

ಕಾರ್ಯಾಗಾರದಲ್ಲಿ ಜಂಟಿ ಮುಖ್ಯ ಚುನಾವಣಾಧಿಕಾರಿ ರಾಘವೇಂದ್ರ, ಉಪ ಮುಖ್ಯ ಚುನಾವಣಾಧಿಕಾರಿ ವಂದನಾ ಹಾಗೂ ಸಹಾಯಕ ಮುಖ್ಯ ಚುನಾವಣಾಧಿಕಾರಿ ಮಹೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

ದೇಶ

ಸಚಿವರ ಮುಂದೆ ಕಣ್ಣೀರು ಹಾಕಿದ ಸಿದ್ದರಾಮಯ್ಯ: ‘ನಿಮ್ಮ ಸಹಕಾರ ಮರೆಯಲಾರೆ’

Published

on

ಬೆಂಗಳೂರು: ಕರ್ನಾಟಕ ರಾಜಕೀಯದ ಇತಿಹಾಸದಲ್ಲೇ ಅತ್ಯಂತ ಭಾವುಕ ಕ್ಷಣವೊಂದಕ್ಕೆ ಮುಖ್ಯಮಂತ್ರಿ ಅಧಿಕೃತ ನಿವಾಸ ‘ಕಾವೇರಿ’ ಇಂದು ಸಾಕ್ಷಿಯಾಯಿತು. ಹೈಕಮಾಂಡ್ ಸೂಚನೆಯಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ಸಿದ್ದರಾಮಯ್ಯ ಅವರು ಸಚಿವರೊಂದಿಗೆ ನಡೆದ ವಿದಾಯ ಉಪಹಾರ ಸಭೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದರು.

ಬೆಳಗ್ಗೆ ನಡೆದ ಬ್ರೇಕ್‌ಫಾಸ್ಟ್ ಮೀಟಿಂಗ್‌ನಲ್ಲಿ ತಮ್ಮ ರಾಜೀನಾಮೆ ನಿರ್ಧಾರವನ್ನು ಸಚಿವ ಸಂಪುಟದ ಸಹೋದ್ಯೋಗಿಗಳ ಮುಂದೆ ಪ್ರಕಟಿಸಿದ ಬಳಿಕ ಸಿದ್ದರಾಮಯ್ಯ ಭಾವುಕರಾದರು. “ಇಷ್ಟು ದಿನ ನೀವೆಲ್ಲರೂ ನನಗೆ ಭದ್ರವಾಗಿ ಜೊತೆಯಾಗಿ ನಿಂತಿದ್ದೀರಿ. ಪ್ರತಿಯೊಂದು ಹಂತದಲ್ಲೂ ಭಾರಿ ಸಹಕಾರ ನೀಡಿದ್ದೀರಿ” ಎಂದು ಮಾತನಾಡುತ್ತಿದ್ದಾಗ ಅವರ ಕಣ್ಣಲ್ಲಿ ನೀರು ತುಂಬಿತು.

ಮುಖ್ಯಮಂತ್ರಿಯ ಭಾವುಕ ಕ್ಷಣ ಕಂಡು ಸಭೆಯಲ್ಲಿ ಇದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ಸಚಿವರು ಕೂಡ ಕೆಲಕಾಲ ಮೌನಕ್ಕೆ ಶರಣಾದರು. ಕಾಂಗ್ರೆಸ್ ಸರ್ಕಾರದ ಮೂರು ವರ್ಷದ ಆಡಳಿತದಲ್ಲಿ ಜೊತೆಗೂಡಿ ಕೆಲಸ ಮಾಡಿದ ಸಹೋದ್ಯೋಗಿಗಳಿಗೆ ಸಿಎಂ ಕೃತಜ್ಞತೆ ಸಲ್ಲಿಸಿದರು.

ಇನ್ನೊಂದೆಡೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ ಅಧಿಕೃತವಾಗಿ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಇದೆ. ಮಧ್ಯಾಹ್ನ 2:30ಕ್ಕೆ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎನ್ನಲಾಗಿದೆ.

ರಾಜೀನಾಮೆ ಪ್ರಕ್ರಿಯೆ ಬಳಿಕ ಮಧ್ಯಾಹ್ನ 3 ಗಂಟೆಗೆ ತುರ್ತು ಸುದ್ದಿಗೋಷ್ಠಿ ನಡೆಸಲಿರುವ ಸಿದ್ದರಾಮಯ್ಯ, ತಮ್ಮ ಆಡಳಿತದ ಸಾಧನೆಗಳು ಹಾಗೂ ರಾಜೀನಾಮೆಯ ಹಿಂದಿನ ಕಾರಣಗಳ ಕುರಿತು ಸ್ಪಷ್ಟನೆ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಸಂಜೆ 4:30ಕ್ಕೆ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಲಿರುವ ಅವರು, ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮುಂದಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದರೊಂದಿಗೆ ಕರ್ನಾಟಕ ರಾಜಕೀಯದಲ್ಲಿ ಮಹತ್ವದ ನಾಯಕತ್ವ ಬದಲಾವಣೆಗೆ ವೇದಿಕೆ ಸಿದ್ಧವಾಗಿದ್ದು, ಮುಂದಿನ ಮುಖ್ಯಮಂತ್ರಿ ಯಾರು ಎಂಬ ಕುತೂಹಲ ರಾಜ್ಯದಾದ್ಯಂತ ತೀವ್ರಗೊಂಡಿದೆ.

Continue Reading

ದೇಶ

ಮೈಸೂರಿನಲ್ಲಿ ಡಿಕೆ ಶಿವಕುಮಾರ್ ಅಭಿಮಾನಿಗಳ ಭರ್ಜರಿ ಸಂಭ್ರಮ

Published

on

ಮೈಸೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಹೈಡ್ರಾಮಾ ತೀವ್ರಗೊಂಡಿರುವ ನಡುವೆಯೇ, ನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಾದ ಮೈಸೂರಿನಲ್ಲಿ ಕುತೂಹಲಕಾರಿ ಬೆಳವಣಿಗೆ ನಡೆದಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಲಿ ಎಂದು ಪ್ರಾರ್ಥಿಸಿ ಅವರ ಅಭಿಮಾನಿಗಳು ಹಾಗೂ ಒಕ್ಕಲಿಗ ಸಮುದಾಯದ ಮುಖಂಡರು ವಿಶೇಷ ಪೂಜೆ ನೆರವೇರಿಸಿದ್ದಾರೆ.

ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಮೈಸೂರು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಸಿದ್ಧ ಅಗ್ರಹಾರದ ‘101 ಗಣಪತಿ ದೇವಸ್ಥಾನ’ದಲ್ಲಿ ಈ ವಿಶೇಷ ಪೂಜೆ ಆಯೋಜಿಸಲಾಯಿತು. ಡಿಕೆ ಶಿವಕುಮಾರ್ ಅವರು ಶುಕ್ರವಾರವೇ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿ ಹಾಗೂ ಅವರ ಆಡಳಿತ ಯಶಸ್ವಿಯಾಗಲಿ ಎಂದು ಪ್ರಾರ್ಥಿಸಿ ವಿಘ್ನನಿವಾರಕ ಗಣಪತಿಗೆ 101 ತೆಂಗಿನಕಾಯಿಗಳನ್ನು ಈಡುಗಾಯಿ ಒಡೆದು ಭಕ್ತಿ ಸಮರ್ಪಿಸಲಾಯಿತು.

ಪೂಜೆ ಬಳಿಕ ದೇವಸ್ಥಾನದ ಮುಂಭಾಗದಲ್ಲಿ ಜಮಾಯಿಸಿದ್ದ ಡಿಕೆ ಶಿವಕುಮಾರ್ ಅಭಿಮಾನಿಗಳು ಹಾಗೂ ಬೆಂಬಲಿಗರು ಭಾರೀ ಸಂಭ್ರಮಾಚರಣೆ ನಡೆಸಿದರು. ತಮ್ಮ ನೆಚ್ಚಿನ ನಾಯಕನ ಭಾವಚಿತ್ರಗಳನ್ನು ಹಿಡಿದು “ಮುಂದಿನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಜಯವಾಗಲಿ” ಎಂದು ಘೋಷಣೆ ಕೂಗಿ ಗಮನ ಸೆಳೆದರು.

ವಿಶೇಷವೆಂದರೆ, ಸಿದ್ದರಾಮಯ್ಯ ಅವರ ಪ್ರಭಾವಿ ರಾಜಕೀಯ ಕ್ಷೇತ್ರವೆಂದೇ ಗುರುತಿಸಲ್ಪಡುವ ಮೈಸೂರಿನಲ್ಲೇ ಡಿಕೆ ಶಿವಕುಮಾರ್ ಪರ ಘೋಷಣೆಗಳು ಮೊಳಗಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳು ತೀವ್ರಗೊಂಡಿರುವ ವೇಳೆಯಲ್ಲೇ ಈ ಪೂಜೆ ರಾಜಕೀಯವಾಗಿ ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ರಾಜ್ಯದಲ್ಲಿ ಅಧಿಕಾರ ಹಸ್ತಾಂತರ ಕುರಿತ ಅಂತಿಮ ನಿರ್ಧಾರಕ್ಕಾಗಿ ಎಲ್ಲರ ಕಣ್ಣು ಕಾಂಗ್ರೆಸ್ ಹೈಕಮಾಂಡ್ ಮೇಲೆ ನೆಟ್ಟಿದ್ದು, ಮುಂದಿನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಕುತೂಹಲ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ.

Continue Reading

ಕ್ರೀಡೆ

ವೈಭವ್ ಸೂರ್ಯವಂಶಿ ಆಟಕ್ಕೆ ಕಮಿನ್ಸ್ ಫಿದಾ: ‘ಅವನನ್ನು ತಡೆಯಲು ಸಾಧ್ಯವಿಲ್ಲ’

Published

on

ನವದೆಹಲಿ: 19ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿ ಅಂತಿಮ ಹಂತ ತಲುಪಿರುವ ಸಂದರ್ಭದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿದೆ. ಈ ಸೋಲಿನ ಬಳಿಕ ಮಾತನಾಡಿದ ತಂಡದ ನಾಯಕ ಪ್ಯಾಟ್ ಕಮಿನ್ಸ್, ನಿರ್ಣಾಯಕ ಘಟ್ಟಗಳಲ್ಲಿ ಸರಣಿ ವಿಕೆಟ್ ಕಳೆದುಕೊಂಡಿದ್ದೇ ತಂಡದ ಸೋಲಿಗೆ ಪ್ರಮುಖ ಕಾರಣ ಎಂದು ಹೇಳಿದ್ದಾರೆ.

ನ್ಯೂ ಚಂಡೀಗಢದ ಮುಲ್ಲನ್ಪುರ್ ಮಹಾರಾಜ ಯಾದವೀಂದ್ರ ಸಿಂಗ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ 47 ರನ್‌ಗಳ ಭರ್ಜರಿ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ತಂಡ, ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 243 ರನ್ ಕಲೆಹಾಕಿತು. ಕೇವಲ 29 ಎಸೆತಗಳಲ್ಲಿ 97 ರನ್ ಸಿಡಿಸಿದ ಸೂರ್ಯವಂಶಿ ಶತಕದ ಅಂಚಿನಲ್ಲಿ ಔಟಾದರೆ, ಧ್ರುವ್ ಜುರೆಲ್ 50 ರನ್‌ಗಳ ಅಮೂಲ್ಯ ಕೊಡುಗೆ ನೀಡಿದರು.

244 ರನ್‌ಗಳ ಗುರಿ ಬೆನ್ನತ್ತಿದ ಸನ್‌ರೈಸರ್ಸ್ ಹೈದರಾಬಾದ್ 19.2 ಓವರ್‌ಗಳಲ್ಲಿ 196 ರನ್‌ಗಳಿಗೆ ಆಲೌಟ್ ಆಯಿತು. ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ ಹಾಗೂ ಇಶಾನ್ ಕಿಶನ್ ಹೋರಾಟ ನಡೆಸಿದರೂ ಗೆಲುವು ಸಾಧ್ಯವಾಗಲಿಲ್ಲ. ರಾಜಸ್ಥಾನ ಪರ ಜೋಫ್ರಾ ಆರ್ಚರ್ 3 ವಿಕೆಟ್ ಪಡೆದು ಮಿಂಚಿದರು.

ಪಂದ್ಯದ ಬಳಿಕ ಮಾತನಾಡಿದ ಪ್ಯಾಟ್ ಕಮಿನ್ಸ್, “ಪಿಚ್ ಬ್ಯಾಟಿಂಗ್‌ಗೆ ಅತ್ಯಂತ ಅನುಕೂಲಕರವಾಗಿತ್ತು. 244 ರನ್ ಗುರಿ ಬೆನ್ನಟ್ಟಲು ಸಾಧ್ಯವಿತ್ತು. ಆದರೆ ಪ್ರಮುಖ ಘಟ್ಟಗಳಲ್ಲಿ ವಿಕೆಟ್ ಕಳೆದುಕೊಂಡದ್ದು ಪಂದ್ಯ ಕೈತಪ್ಪಲು ಕಾರಣವಾಯಿತು” ಎಂದು ಹೇಳಿದರು.

ಇದೇ ವೇಳೆ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್‌ನ್ನು ಕಮಿನ್ಸ್ ಮುಕ್ತಕಂಠದಿಂದ ಶ್ಲಾಘಿಸಿದರು. “ಅವನು ಆ ರೀತಿಯಲ್ಲಿ ಬ್ಯಾಟ್ ಬೀಸುತ್ತಿದ್ದಾಗ ಬೌಲರ್‌ಗಳು ಏನೂ ಮಾಡಲು ಸಾಧ್ಯವಿಲ್ಲ. ಯಾರ್ಕರ್‌ಗಳನ್ನೂ ಸಿಕ್ಸರ್‌ಗೆ ಅಟ್ಟುತ್ತಿದ್ದ ರೀತಿ ಅದ್ಭುತ” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮೂರು ವರ್ಷಗಳಲ್ಲಿ ಎರಡನೇ ಬಾರಿ ಪ್ಲೇಆಫ್ ತಲುಪಿದ ಬಗ್ಗೆ ಸಂತಸ ವ್ಯಕ್ತಪಡಿಸಿದ ಕಮಿನ್ಸ್, ಯುವ ಆಟಗಾರರ ಪ್ರದರ್ಶನದ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.

Continue Reading

Trending