Connect with us

ರಾಜಕೀಯ

ವರ್ಗಾವಣೆ ದಂಧೆ ಮಾಡಿದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ

Published

on

ವರ್ಗಾವಣೆ ದಂಧೆ ಮಾಡಿದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ
ವರ್ಗಾವಣೆ ದಂಧೆ ಮಾಡಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

ಬೆಂಗಳೂರು, ನವೆಂಬರ್‌ 16: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಹಾಗೂ ಮಾಜಿ ಶಾಸಕ ಡಾ. ಯತೀಂದ್ರ ಅವರು ನಾನು ನೀಡಿದ ಲಿಸ್ಟ್​​ನದ್ದು ಮಾತ್ರ ಮಾಡಿ ಎಂದು ಸಿಎಂ ವಿಶೇಷ ಕರ್ತವ್ಯಾಧಿಕಾರಿ ಮಹದೇವ್ ಅವರಿಗೆ ಸೂಚಿಸಿರುವ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಸಿದ್ದರಾಮಯ್ಯ ಯತೀಂದ್ರ ಅವರು ವರ್ಗಾವಣೆ ಬಗ್ಗೆ ಮಾತಾಡಿಲ್ಲ. ನನ್ನ ರಾಜಕೀಯ ಜೀವನದಲ್ಲಿ ವರ್ಗಾವಣೆ ದಂಧೆ ಮಾಡಿಲ್ಲ. ವರ್ಗಾವಣೆ ದಂಧೆ ಮಾಡಿದ್ದರೆ ರಾಜಕೀಯದಿಂದ ನಿವೃತ್ತಿ ಆಗುತ್ತೇನೆ ಎಂದು ಹೇಳಿದ್ದಾರೆ.
ಶಾಲಾ ಕಟ್ಟಡಗಳನ್ನು ಸಿ.ಎಸ್.ಆರ್. ನಿಧಿಯಿಂದ ನಿರ್ಮಿಸಲಾಗುತ್ತಿದೆ. ಸಚಿವ ಹೆಚ್.ಸಿ.ಮಹದೇವಪ್ಪ ಅವರು ಅದನ್ನು ಪಟ್ಟಿಯಲ್ಲಿ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಸಚಿವ ಮಹದೇವಪ್ಪ ಅವರು ಐದು ಹೆಸರುಗಳಿರುವ ಪಟ್ಟಿ ಕೊಡುತ್ತಾರೆ ಎಂಬ ಆರೋಪದ ಕುರಿತು ಪ್ರತಿಕ್ರಿಯೆ ನೀಡಿ ನನ್ನ ರಾಜಕೀಯ ಜೀವನದಲ್ಲಿ ಹಣಕ್ಕಾಗಿ ಒಂದೇ ಒಂದು ವರ್ಗಾವಣೆಯನ್ನು ಮಾಡಿರುವುದನ್ನು ತೋರಿಸಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ತಿಳಿಸಿದರು.
ಅಧಿಕಾರ ಇದ್ದಾಗ ಲಂಚ-ಕಮಿಷನ್ ವ್ಯವಹಾರದಲ್ಲಿ ಮೂರುಹೊತ್ತು ಮುಳುಗೇಳುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರ ಕಾಮಾಲೆ ಕಣ್ಣಿಗೆ ನೋಡಿದ್ದು, ಕೇಳಿದ್ದೆಲ್ಲದರಲ್ಲಿಯೂ ಲಂಚದ ವ್ಯವಹಾರಗಳೇ ಕಾಣಿಸುತ್ತಿದೆ. ವರುಣ ಕ್ಷೇತ್ರದ ಶಾಲೆಗಳ ಅಭಿವೃದ್ದಿಗೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ನಡೆದಿರುವ ನನ್ನ ಮತ್ತು ನನ್ನಮಗನ ನಡುವಿನ ಪೋನ್ ಸಂಭಾಷಣೆಗೆ ವರ್ಗವಾವಣೆಯಲ್ಲಿ ವಸೂಲಿಯ ಕತೆ ಕಟ್ಟಿ ಕುಮಾರಸ್ವಾಮಿ ಕುಣಿದಾಡುತ್ತಿದ್ದಾರೆ. ಕುಮಾರಸ್ವಾಮಿಯವರ ಈ ಕ್ಷುಲಕ ನಡವಳಿಕೆ ಬಗ್ಗೆ ನಾನು ಕನಿಕರವನ್ನಷ್ಟೇ ವ್ಯಕ್ತಪಡಿಸಬಲ್ಲೆ.
ವರುಣ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರು ಮತ್ತು ಕೆಡಿಪಿ ಸದಸ್ಯರಾಗಿರುವ ಮಾಜಿ ಶಾಸಕ ಡಾ.ಯತೀಂದ್ರ ಅವರು ಆ ಕ್ಷೇತ್ರದ ಅಭಿವೃದ್ದಿಗೆ ಶ್ರಮಿಸುತ್ತಿದ್ದಾರೆ.ಸಿಎಸ್ ಆರ್ ಹಣವನ್ನು ಬಳಸಿಕೊಂಡು ಕ್ಷೇತ್ರದಲ್ಲಿರುವ ಸರ್ಕಾರಿ ಶಾಲೆಗಳ ಸುಧಾರಣೆಗೆ ತೊಡಗಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅವರು ಫಲಾನುಭವಿ ಶಾಲೆಗಳ ಪಟ್ಟಿ ಬಗ್ಗೆ ನನ್ನ ಜೊತೆ ಮಾತನಾಡಿದ್ದರು. ಕ್ಷೇತ್ರದ ಜನರ ಎದುರಿನಲ್ಲಿಯೇ ನಡೆದಿರುವ ಈ ಸಂಭಾಷಣೆಯನ್ನು ವರ್ಗಾವಣೆಗಾಗಿ ವಸೂಲಿ ಎಂಬ ಅರ್ಥ ಬರುವ ಹಾಗೆ ತಿರುಚಿರುವ ಕುಮಾರಸ್ವಾಮಿ ಅವರು ತಮ್ಮ ವಿಕೃತ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ.
ಕುಮಾರಸ್ವಾಮಿಯವರು ರಾಜಕೀಯಕ್ಕೆ ಪ್ರವೇಶ ಮಾಡಿದ ದಿನದಿಂದ ನಿರಂತರವಾಗಿ ಕಪೋಲ ಕಲ್ಪಿತ ಆರೋಪಗಳ ಮೂಲಕ ನನ್ನ ವಿರುದ್ಧ ಸೇಡು ತೀರಿಸಿಕೊಳ್ಳುವಂತೆ ಬಾಯಿಗೆ ಬಂದಂತೆ ಮಾತನಾಡುತ್ತಾ ಬರುತ್ತಿದ್ದುದನ್ನು ರಾಜ್ಯದ ಜನ ಕಂಡಿದ್ದಾರೆ. ಈಗ ತಂದೆಯಾದ ನನಗೆ ನೋವು ಕೊಡಬೇಕೆಂಬ ಏಕೈಕ ದುರುದ್ದೇಶದಿಂದ ಡಾ.ಯತೀಂದ್ರ ಅವರನ್ನು ಗುರಿಯಾಗಿಸಿಕೊಂಡು ಪ್ರತಿನಿತ್ಯ ಸುಳ್ಳು ಆರೋಪಗಳನ್ನು ಹರಿಬಿಡುತ್ತಿರುವುದು ಕುಮಾರಸ್ವಾಮಿಯವರ ವಿಕೃತ ಮನಸ್ಥಿತಿಗೆ ಹಿಡಿದ ಕನ್ನಡಿಯಾಗಿದೆ. ಶಾಸಕ ಸ್ಥಾನವನ್ನೇ ತ್ಯಾಗ ಮಾಡಿದರೂ ಜನಸೇವೆಯಿಂದ ಹಿಂದೆ ಸರಿಯದ ಡಾ.ಯತೀಂದ್ರ ಅವರು ವರುಣ ಕ್ಷೇತ್ರದ ಅಭಿವೃದ್ದಿಯಲ್ಲಿ ಪೂರ್ಣವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರನ್ನು ನೈತಿಕವಾಗಿ ಕುಗ್ಗಿಸುವ ದುರುದ್ದೇಶದಿಂದ ಕುಮಾರಸ್ವಾಮಿಯವರು ಪ್ರತಿನಿತ್ಯ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ತಮ್ಮ ಪತ್ನಿ ಮತ್ತು ಮಗ ಕೂಡಾ ರಾಜಕೀಯ ಕ್ಷೇತ್ರದಲ್ಲಿದ್ದಾರೆ ಎನ್ನುವುದನ್ನು ಹೆಚ್.ಡಿ.ಕುಮಾರಸ್ವಾಮಿ ಮರೆತಂತಿದೆ. ನಾನು ಕುಮಾರಸ್ವಾಮಿಯವರ ಮಟ್ಟಕ್ಕೆ ಇಳಿದು ಅವರ ರೀತಿ ಅವರ ಪತ್ನಿ ಮತ್ತು ಮಗನ ಬಗ್ಗೆ ಮಾತನಾಡಲಾರೆ. ಕನಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಾದರೂ ಮಗನಿಗೆ ಬುದ್ದಿ ಹೇಳಿ ರಾಜ್ಯದ ಜನರಿಂದ ಮಗ ಛೀಮಾರಿಗೆ ಈಡಾಗುತ್ತಿರುವುದನ್ನು ತಪ್ಪಿಸಬೇಕೆಂದು ಕೋರುತ್ತೇನೆ.

ದೇಶ

ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅವ್ಯವಸ್ಥೆ? ಬಿಎಲ್‌ಒಗಳ ಮೇಲೆ ಒತ್ತಡ ಆರೋಪಿಸಿದ ವಿಜಯೇಂದ್ರ

Published

on

ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಗಂಭೀರ ಅವ್ಯವಸ್ಥೆ ನಡೆಯುತ್ತಿದ್ದು, ರಾಜ್ಯ ಸರ್ಕಾರ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಬೂತ್ ಮಟ್ಟದ ಅಧಿಕಾರಿಗಳ (BLO) ಮೇಲೆ ಒತ್ತಡ ಹೇರುತ್ತಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಆರ್ ಪ್ರಕ್ರಿಯೆಯಲ್ಲಿ ಅಧಿಕಾರಿಗಳು ಮನೆ ಮನೆಗೆ ತೆರಳಿ ನಮೂನೆಗಳನ್ನು ವಿತರಿಸುವ ಬದಲು ಕಲ್ಯಾಣ ಮಂಟಪ, ಚೌಲ್ಟ್ರಿ ಹಾಗೂ ಮಸೀದಿಗಳಲ್ಲಿ ಕುಳಿತು ಅರ್ಜಿಗಳನ್ನು ಹಂಚುತ್ತಿರುವುದು ನಿಯಮ ಉಲ್ಲಂಘನೆಯಾಗಿದೆ ಎಂದು ದೂರಿದರು. ಕೆಲವು ಶಾಸಕರ ಕಚೇರಿಗಳಲ್ಲೇ ಬಿಎಲ್‌ಒಗಳನ್ನು ಕೂರಿಸಿ ಕೆಲಸ ಮಾಡಿಸಲಾಗುತ್ತಿದೆ ಎಂದು ಆರೋಪಿಸಿ, ಈ ಕುರಿತು ಸಾಕ್ಷ್ಯ ಸಮೇತ ದೂರು ಸಲ್ಲಿಸಿರುವುದಾಗಿ ತಿಳಿಸಿದರು.

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ವಿತರಿಸಲಾಗುತ್ತಿರುವ ಅರ್ಜಿಗಳ ಮೇಲೆ ಕಾಂಗ್ರೆಸ್ ಮುಖಂಡರ ಫೋಟೋಗಳು ಮುದ್ರಣಗೊಂಡಿರುವ ವಿಚಾರವನ್ನೂ ಚುನಾವಣಾ ಆಯೋಗದ ಗಮನಕ್ಕೆ ತಂದಿರುವುದಾಗಿ ವಿಜಯೇಂದ್ರ ಹೇಳಿದರು. ಎಸ್‌ಐಆರ್ ಪ್ರಕ್ರಿಯೆಯಲ್ಲಿ ಗೊಂದಲ ಉಂಟಾಗಿರುವ ಎಲ್ಲೆಡೆ ಮರುಪರಿಷ್ಕರಣೆ ನಡೆಸುವಂತೆ ಆಗ್ರಹಿಸಿದರು.

ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಮತದಾರರ ಸಂಖ್ಯೆಯಲ್ಲಿ ಅಸಹಜ ಏರಿಕೆ ಕಂಡುಬಂದಿದ್ದು, ಮನೆಗಳ ಸಂಖ್ಯೆ ಹೆಚ್ಚಳವಾಗದೆ ಮತದಾರರ ಸಂಖ್ಯೆ ಮಾತ್ರ ಹೆಚ್ಚಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದರು. ಅಕ್ರಮ ಮತದಾರರನ್ನು ತಡೆಯಲು ಮನೆ ಮನೆಗೆ ತೆರಳಿ ಪರಿಶೀಲನೆ ನಡೆಸುವುದು ಅಗತ್ಯ ಎಂದು ಒತ್ತಾಯಿಸಿದರು.

ಇದೇ ವೇಳೆ, ಬರ ಪರಿಸ್ಥಿತಿಯಲ್ಲಿ ಮೈಸೂರು ದಸರಾ ಸಂದರ್ಭದಲ್ಲಿ ಕಂಬಳ ಆಯೋಜನೆಗೆ ಕೋಟಿ ಕೋಟಿ ರೂಪಾಯಿ ವೆಚ್ಚ ಮಾಡುವ ಬದಲು ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ನಡೆಸುವುದು ಸೂಕ್ತ ಎಂದು ಯದುವೀರ್ ಒಡೆಯರ್ ಅಭಿಪ್ರಾಯಪಟ್ಟರು.

Continue Reading

ದೇಶ

ಸಚಿವ ಸ್ಥಾನ ಯಾರಿಗೆ? ಕಾಂಗ್ರೆಸ್‌ನಲ್ಲಿ ಹೈವೋಲ್ಟೇಜ್ ಸಭೆ; ನಿಗಮ-ಮಂಡಳಿಗಳಲ್ಲೂ ಭಾರೀ ಸರ್ಜರಿ

Published

on

ಬೆಂಗಳೂರು, ಜು. 3: ಕರ್ನಾಟಕ ಕಾಂಗ್ರೆಸ್‌ನಲ್ಲಿ ಬಹುನಿರೀಕ್ಷಿತ **ಸಚಿವ ಸಂಪುಟ ವಿಸ್ತರಣೆ (Cabinet Reshuffle)**ಗೆ ವೇದಿಕೆ ಸಜ್ಜಾಗುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಸಚಿವ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ನಾಯಕರನ್ನು ಸಮಾಧಾನಪಡಿಸುವುದು ಹಾಗೂ ಖಾಲಿ ಇರುವ ಸಚಿವ ಸ್ಥಾನಗಳನ್ನು ಭರ್ತಿ ಮಾಡುವ ಉದ್ದೇಶದಿಂದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಲು ಸಿದ್ಧರಾಗಿದ್ದಾರೆ.

ಎಐಸಿಸಿ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಿಂದ ಮರಳುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕಾಗಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಸಂಭಾವ್ಯ ಸಚಿವರ ಪಟ್ಟಿಯೊಂದಿಗೆ ಜುಲೈ 5ರಂದು ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಲಿದ್ದು, ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ರಾಷ್ಟ್ರ ರಾಜಧಾನಿ ಸೇರಲಿದ್ದಾರೆ.

ಜುಲೈ 6 ಮತ್ತು 7ರಂದು ಕಾಂಗ್ರೆಸ್ ಹೈಕಮಾಂಡ್ ನೇತೃತ್ವದಲ್ಲಿ ನಡೆಯಲಿರುವ ಮಹತ್ವದ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆಯ ಕುರಿತು ಅಂತಿಮ ಚರ್ಚೆ ನಡೆಯುವ ಸಾಧ್ಯತೆಯಿದೆ. ವರಿಷ್ಠರು ಒಪ್ಪಿಗೆ ನೀಡಿದರೆ ಜುಲೈ 10ರಿಂದ 12ರೊಳಗೆ ಹೊಸ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಬಹುದು ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬರುತ್ತಿವೆ.

ಸಚಿವ ಸ್ಥಾನಕ್ಕಾಗಿ ಹಲವು ಪ್ರಭಾವಿ ನಾಯಕರು ರೇಸ್‌ನಲ್ಲಿದ್ದಾರೆ. ಉತ್ತರ ಹಾಗೂ ಕಲ್ಯಾಣ ಕರ್ನಾಟಕ ಭಾಗದಿಂದ ಲಕ್ಷ್ಮಣ ಸವದಿ, ಪ್ರಸಾದ್ ಅಬ್ಬಯ್ಯ, ಯಶವಂತರಾಯ ಪಾಟೀಲ ಹಾಗೂ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಅಲ್ಪಸಂಖ್ಯಾತ ಕೋಟಾದಡಿ ಸಲೀಂ ಅಹ್ಮದ್ ಹೆಸರು ಚರ್ಚೆಯಲ್ಲಿದೆ.

ಮಧ್ಯ ಕರ್ನಾಟಕ ಭಾಗದಿಂದ ನಾಗೇಂದ್ರ, ಬಸವರಾಜ ರಾಯರೆಡ್ಡಿ, ರುದ್ರಪ್ಪ ಲಮಾಣಿ, ಬೇಳೂರು ಗೋಪಾಲಕೃಷ್ಣ ಅವರ ಹೆಸರುಗಳು ಮುನ್ನಲೆಯಲ್ಲಿದ್ದರೆ, ಹಳೆಯ ಮೈಸೂರು ಭಾಗದಿಂದ ಶ್ರೀನಿವಾಸ್ (ವಾಸು), ಕೆ.ಎಂ. ಶಿವಲಿಂಗೇಗೌಡ, ಪಿ.ಎಂ. ನರೇಂದ್ರಸ್ವಾಮಿ, ಪುಟ್ಟರಂಗಶೆಟ್ಟಿ, ಶರತ್ ಬಚ್ಚೇಗೌಡ ಸೇರಿದಂತೆ ಹಲವು ನಾಯಕರು ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಬೆಂಗಳೂರು ಭಾಗದಿಂದ ಬಿ.ಝೆಡ್. ಜಮೀರ್ ಅಹಮದ್ ಖಾನ್, ರಿಜ್ವಾನ್ ಅರ್ಷದ್, ಬಿ.ಕೆ. ಹರಿಪ್ರಸಾದ್ ಹಾಗೂ ಎಂ. ಕೃಷ್ಣಪ್ಪ ಅವರ ಹೆಸರುಗಳು ಸದ್ದು ಮಾಡುತ್ತಿವೆ. ಕರಾವಳಿ ಹಾಗೂ ಮಲೆನಾಡು ಭಾಗದಿಂದ ತರೀಕೆರೆ ಶ್ರೀನಿವಾಸ್, ಮಂಕಾಳ ವೈದ್ಯ ಮತ್ತು ಆರ್.ವಿ. ದೇಶಪಾಂಡೆ ಹೆಸರುಗಳೂ ಚರ್ಚೆಯಲ್ಲಿವೆ.

ಇದರ ಜೊತೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರಕ್ಕೂ ಮುಂದಾಗಿದ್ದು, ಹಿಂದಿನ ಸರ್ಕಾರದ ಅವಧಿಯಲ್ಲಿ ನೇಮಕಗೊಂಡಿದ್ದ ವಿವಿಧ ನಿಗಮ-ಮಂಡಳಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಗಳನ್ನು ರದ್ದುಗೊಳಿಸುವ ಸಾಧ್ಯತೆ ಇದೆ. ಬಳಿಕ ಪಕ್ಷದ ಹಿರಿಯ ನಾಯಕರು ಹಾಗೂ ಸಚಿವ ಸ್ಥಾನ ವಂಚಿತರಾದ ಶಾಸಕರಿಗೆ ನಿಗಮ-ಮಂಡಳಿಗಳ ಜವಾಬ್ದಾರಿ ನೀಡಿ ಅಸಮಾಧಾನ ಶಮನಗೊಳಿಸುವ ತಂತ್ರ ರೂಪಿಸಲಾಗುತ್ತಿದೆ.

Continue Reading

ದೇಶ

‘ರೈತರ ಮೇಲೆ ದಬ್ಬಾಳಿಕೆ ಬೇಡ, ಸಮಾಲೋಚನೆ ನಡೆಸಿ’ – ಸಿಎಂ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

Published

on

ಮೈಸೂರು, ಜು. 2: ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (BY Vijayendra) ತೀವ್ರ ವಾಗ್ದಾಳಿ ನಡೆಸಿದ್ದಾರೆ. ರೈತರ ಅಭಿಪ್ರಾಯವನ್ನು ಕಡೆಗಣಿಸಿ ಸರ್ಕಾರ ಆತುರಾತುರವಾಗಿ ಯೋಜನೆ ಜಾರಿಗೆ ಮುಂದಾಗಿದ್ದು, ಇದು ರೈತರ ಮೇಲೆ ದಬ್ಬಾಳಿಕೆ ನಡೆಸುವ ಪ್ರಯತ್ನ ಎಂದು ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ, ತಾವು ಹಾಗೂ ಪ್ರತಿಪಕ್ಷ ನಾಯಕರು ಯೋಜನೆ ವ್ಯಾಪ್ತಿಯ ಪ್ರದೇಶಕ್ಕೆ ಭೇಟಿ ನೀಡಿ ರೈತರೊಂದಿಗೆ ಮಾತುಕತೆ ನಡೆಸಿದ್ದಾಗಿ ತಿಳಿಸಿದರು. ಸರ್ಕಾರ ಶೇ.80ರಷ್ಟು ರೈತರು ಬಿಡದಿ ಟೌನ್‌ಶಿಪ್‌ಗೆ ಒಪ್ಪಿಗೆ ನೀಡಿದ್ದಾರೆ ಎಂದು ಹೇಳುತ್ತಿರುವುದು ವಾಸ್ತವಕ್ಕೆ ದೂರವಾಗಿದೆ. ನಿಜವಾಗಿ ಶೇ.70ರಿಂದ 80ರಷ್ಟು ರೈತರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಕೃಷಿ ಚಟುವಟಿಕೆಗೆ ಪೂರಕವಾಗಿರುವ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಮುಂದಾಗಿದೆ. ಇದರಿಂದ ರೈತರಲ್ಲಿ ಸಹಜವಾಗಿಯೇ ಆಕ್ರೋಶ ಉಂಟಾಗಿದೆ. ಮುಖ್ಯಮಂತ್ರಿ ರೈತರ ಮೇಲೆ ಒತ್ತಡ ಹೇರುವ ಬದಲು ಅವರೊಂದಿಗೆ ಸಮಾಲೋಚನೆ ನಡೆಸಬೇಕು. ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಕ್ರಮಕ್ಕೆ ಮುಂದಾಗಬಾರದು ಎಂದು ಅವರು ಒತ್ತಾಯಿಸಿದರು.

ಬಿಡದಿ ಟೌನ್‌ಶಿಪ್ ಯೋಜನೆ ಕುರಿತ ವಿಷಯವನ್ನು ಮುಂಬರುವ ವಿಧಾನಸಭೆ ಅಧಿವೇಶನದಲ್ಲಿ ಪ್ರಸ್ತಾಪಿಸಿ ಸಮಗ್ರ ಚರ್ಚೆ ನಡೆಸಲಾಗುವುದು ಎಂದು ವಿಜಯೇಂದ್ರ ಹೇಳಿದರು. ಸರ್ಕಾರ ತಾನು ಕೈಗೊಂಡಿರುವ ಕ್ರಮವೇ ಸರಿಯೆಂಬ ಧೋರಣೆ ಅನುಸರಿಸುತ್ತಿದ್ದು, ಈ ವಿಚಾರದಲ್ಲಿ ಸದನದಲ್ಲಿ ಸರ್ಕಾರವನ್ನು ಪ್ರಶ್ನಿಸಲಾಗುವುದು ಎಂದರು.

ಇದೇ ವೇಳೆ, ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ, ಗೃಹಲಕ್ಷ್ಮಿ ಯೋಜನೆಯಲ್ಲಿನ ಅಕ್ರಮಗಳ ಆರೋಪ ಹಾಗೂ ರೈತರ ಸಮಸ್ಯೆಗಳ ಕುರಿತು ಬಿಜೆಪಿ ರಾಜ್ಯಾದ್ಯಂತ ಹೋರಾಟ ರೂಪಿಸಲಿದೆ ಎಂದು ಘೋಷಿಸಿದರು.

ಡಿ.ವಿ. ಸದಾನಂದ ಗೌಡ ಅವರ ಆಡಿಯೋ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಆಡಿಯೋದಲ್ಲಿರುವ ಧ್ವನಿ ನನ್ನದು ಅಲ್ಲ ಎಂದು ಸದಾನಂದ ಗೌಡರೇ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ಎಲ್ಲವನ್ನೂ ಹೇಳಿರುವುದರಿಂದ ಹೆಚ್ಚಿನ ಪ್ರತಿಕ್ರಿಯೆ ನೀಡುವುದಿಲ್ಲ” ಎಂದರು.

ಪಕ್ಷದ ಕೆಲ ನಾಯಕರ ಅಸಮಾಧಾನದ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಬಿಕ್ಕಟ್ಟುಗಳು ಅಂತ್ಯಗೊಂಡಿದ್ದು, ಕಾರ್ಯಕರ್ತರಿಗೆ ಧೈರ್ಯ ತುಂಬಿ ಪಕ್ಷ ಸಂಘಟನೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

Continue Reading

Trending