Connect with us

ರಾಜಕೀಯ

ಜನತಾದರ್ಶನ ಅಲ್ಲ, ಇದು ಬೋಗಸ್ ದರ್ಶನ: ಆರ್. ಅಶೋಕ್ ಲೇವಡಿ

Published

on

ಜನತಾದರ್ಶನ ಅಲ್ಲ, ಇದು ಬೋಗಸ್ ದರ್ಶನ: ಆರ್. ಅಶೋಕ್ ಲೇವಡಿ
ಜನತಾದರ್ಶನ ಅಲ್ಲ, ಇದು ಬೋಗಸ್ ದರ್ಶನ: ಆರ್. ಅಶೋಕ್ ಲೇವಡಿ

ಬೆಂಗಳೂರು: ರಾಜ್ಯ ಸರಕಾರ ಸಂಪೂರ್ಣ ದಿವಾಳಿಯಾಗಿದ್ದು, ಹಣಕಾಸಿನ ಸ್ಥಿತಿಗತಿ ಬಗ್ಗೆ ಶ್ವೇತಪತ್ರ ಬಿಡುಗಡೆ ಮಾಡುವಂತೆ ಬೆಳಗಾವಿ ಅಧಿವೇಶನದಲ್ಲಿ ಪಟ್ಟು ಹಿಡಿಯುವುದಾಗಿ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಹೇಳಿದ್ದಾರೆ. ಗ್ಯಾರೆಂಟಿ ಯೋಜನೆಗಳ ಅರೆಬರೆ ಜಾರಿಯಿಂದ ಬೊಕ್ಕಸ ಬರಿದಾಗಿದೆ. ಹೀಗಾಗಿ ಬರಗಾಲದಿಂದ ತತ್ತರಿಸುತ್ತಿರುವ ರೈತರಿಗೆ ಪರಿಹಾರ ನೀಡಲು ಸಾಧ್ಯವಾಗದೆ ಕೇಂದ್ರದತ್ತ ಬೊಟ್ಟು ತೋರಿಸುತ್ತಿದ್ದಾರೆ. ಇದು ಸಂವೇದನಾ ರಹಿತ ಎಡಬಿಡಂಗಿ ಸರಕಾರ ಎಂದು ಸುದ್ದಿಗೋಷ್ಠಿಯಲ್ಲಿ ಸೋಮವಾರ ಹರಿಹಾಯ್ದರು. ಪ್ರತಿಪಕ್ಷದ ನಾಯಕನಾಗಿ ಆಯ್ಕೆಯಾದ ಬಳಿಕ ಅನೇಕ ಜಿಲ್ಲೆಗಳಲ್ಲಿ ಬರಗಾಲದ ಬಗ್ಗೆ ಅಧ್ಯಯನ ಮಾಡುವ ಸಂದರ್ಭದಲ್ಲಿ ಸರ್ಕಾರದ ಬಣ್ಣ ಬಯಲಾಗುತ್ತಿದೆ. ಜನ ಸಂಕಷ್ಟದಲ್ಲಿದ್ದರೂ ತನಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ವರ್ತಿಸುತ್ತಿದೆ ಎಂದರು. 

ಲೆಕ್ಕಪತ್ರ ಮಂಡಿಸಲಿ
ಕೇಂದ್ರದ ವಿರುದ್ಧ ಗೂಬೆ ಕೂರಿಸುವ ಮೊದಲು ರಾಜ್ಯ ಸರ್ಕಾರದ ಪಾತ್ರ, ಹೊಣೆಗಾರಿಕೆ ಏನು ಎಂಬುದನ್ನು ಸ್ಪಷ್ಟವಾಗಿ ತಿಳಿಸಲಿ. ಹಿಂದೆ ನಮ್ಮ ಸರಕಾರ ಅಧಿಕಾರದಲ್ಲಿ ಇದ್ದಾಗ ಮೊದಲು ರೈತರ ಸಂಕಷ್ಟಕ್ಕೆ ಧಾವಿಸಿದ್ದೆವು. ಎನ್ ಡಿಆರ್ ಎಫ್ ಮಾರ್ಗಸೂಚಿಗಿಂತ ದುಪ್ಪಟ್ಟು ಪರಿಹಾರ ನೀಡಿದ್ದೆವು. ನಂತರ ಕೇಂದ್ರದ ನೆರವು ಖಜಾನೆಗೆ ಬಂತು. ಆ ಕೆಲಸ ಮಾಡಲು ಇವರಿಗೇನು ದಾಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಳವೆ ಬಾವಿ ಕೊರೆಸಲು, ಜಾನುವಾರುಗಳಿಗೆ ಮೇವು ಖರೀದಿಸಲು ಆದೇಶವನ್ನು ಹೊರಡಿಸಿಲ್ಲ. ಕನಿಷ್ಟಪಕ್ಷ ಕೊಳವೆ ಬಾವಿಗಳಿಗೆ ಆದ್ಯತೆ ಮೇರೆಗೆ ವಿದ್ಯುತ್ ಸಂಪರ್ಕ ಕೊಡುತ್ತಿಲ್ಲ. ಕೇಳಿದರೆ ಎಲ್ಲದಕ್ಕೂ ಲಂಚ ಕೊಡಬೇಕು, ಇಲ್ಲದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ ಎಂದು ರೈತರು ದೂರು ನೀಡುತ್ತಿದ್ದಾರೆ ಎಂದರು.

ಬರ ಕಾಮಗಾರಿಗಳಿಗೆ ಹಣದ ಕೊರತೆ ಇಲ್ಲ ಎನ್ನುತ್ತಾರೆ, ಅದು ನಿಜವೇ ಆಗಿದ್ದಲ್ಲಿ ತಕ್ಷಣ ಹಣ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದ ಅವರು, ಬೆಳಗಾವಿ ಅಧಿವೇಶನದಲ್ಲಿ ಇವರು ಮಾಡಿರುವ ಖರ್ಚು ವೆಚ್ಚ ಮತ್ತು ಹಣಕಾಸಿನ ಸ್ಥಿತಿ ಬಗ್ಗೆ ಶ್ವೇತ ಪತ್ರ ಬಿಡುಗಡೆ ಮಾಡುವಂತೆ ಸರಕಾರಕ್ಕೆ ಆಗ್ರಹಿಸಲಾಗುವುದು ಎಂದರು. 

ಬೋಗಸ್ ದರ್ಶನ
ಮುಖ್ಯಮಂತ್ರಿಯವರ ಜನತಾದರ್ಶನ ಕಾರ್ಯವನ್ನು ಬೋಗಸ್ ದರ್ಶನ ಎಂದು ಲೇವಡಿ ಮಾಡಿದ ಅಶೋಕ್ ಅವರು, ನೆಟ್ಟಗೆ ಕೆಲಸ ಮಾಡದ ಮಂತ್ರಿಗಳನ್ನು ಕರೆಯಿಸಿ ಮೊದಲು ಅವರ ದರ್ಶನ ಮಾಡಬೇಕಿತ್ತು. ಯಾರ್ಯಾರು ಏನು ಕೆಲಸ ಮಾಡಿದ್ದಾರೆ ಎಂದು ಮಾಹಿತಿ ಪಡೆಯಬೇಕಿತ್ತು. ಅದನ್ನು ಬಿಟ್ಟು ಖುರ್ಚಿ, ಮೇಜು ಹಾಕಿಸಿ ಮನವಿ ಪತ್ರ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.ಸಿಎಂ ಸೇರಿದಂತೆ ಎಲ್ಲ ಸಚಿವರು ಜಿಲ್ಲಾ ಕೇಂದ್ರಗಳಲ್ಲಿ ಜನತಾದರ್ಶನ ಮಾಡಿ ಪ್ರಾಮಾಣಿಕ ಪ್ರಯತ್ನ ಮಾಡಿದಿದ್ದರೆ ಸಾವಿರಾರು ಜನರ ಸಮಸ್ಯೆಗಳಿಗೆ ಪರಿಹಾರ ಸಿಗುತ್ತಿತ್ತು. ಅದನ್ನು ಬಿಟ್ಟು ಸಿಎಂ ಅವರು ಸೀಮಿತ ಸಂಖ್ಯೆ ಜನರ ಅಹವಾಲು ಕೇಳಿದರೆ ಏನು ಪ್ರಯೋಜನ ಎಂದು ಪ್ರಶ್ನಿಸಿದರು.

ನಿದ್ದೆಯಿಂದ ಇವತ್ತು ಎದ್ದಿದೆ                                                                                                                          

ದಿಢೀರ್ ಎಂದು ಸಿಎಂ ಅವರು ಜನತಾದರ್ಶನ ಮಾಡುತ್ತಿದ್ದಾರೆ ಎಂದರೆ ಇವತ್ತು ದೀರ್ಘ ಕಾಲದ ನಿದ್ದೆಯಿಂದ ಎದ್ದಿದ್ದಾರೆ ಎಂದು ಅರ್ಥ. ಏಕೆಂದರೆ ಆಡಳಿತ ಸಂಪೂರ್ಣ ನೆಲಕಚ್ಚಿದ್ದು ಅಧಿಕಾರಶಾಹಿ ಜನರ ಶೋಷಣೆಯಲ್ಲಿ ನಿರತವಾಗಿದೆ. ಇದನ್ನು ಗಮನಿಸಿ ಸರಿಪಡಿಸಬೇಕಿದ್ದ ಸಚಿವರು ತೆಲಂಗಾಣ ಚುನಾವಣೆಯಲ್ಲಿ ಗ್ಯಾರೆಂಟಿ ಯೋಜನೆಗಳಿಂದ ಕರ್ನಾಟಕದಲ್ಲಿ ಕ್ರಾಂತಿ ಆಗಿದೆ ಎಂದು ಬುರುಡೆ ಭಾಷಣ ಬಿಗಿಯುತ್ತಿದ್ದಾರೆ. ಅಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಡಿದಿರುವ ಬರಗಾಲ ನಿವಾರಣೆಗಾಗಿ ಸಿದ್ದರಾಮಯ್ಯ ಎಲ್ಲಾ ಸಚಿವರನ್ನು ಅಲ್ಲಿಗೆ ನಿಯೋಜಿಸಿದ್ದಾರೆ. ಇಲ್ಲಿ ಜನ ತತ್ತರಿಸುತ್ತಿದ್ದರೂ ಕೇಳುವವರು ದಿಕ್ಕಿಲ್ಲ ಎಂದು ಕಿಡಿಕಾರಿದರು.

ದೇಶ

‘ನೀಟ್ ಅಕ್ರಮಕ್ಕೆ ಮೋದಿ-ಧರ್ಮೇಂದ್ರ ಪ್ರಧಾನ್ ಹೊಣೆ’: CM ಸಿದ್ದರಾಮಯ್ಯ

Published

on

ಬೆಂಗಳೂರು: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ NEET ವೈದ್ಯಕೀಯ ಪ್ರವೇಶ ಪರೀಕ್ಷೆಯ ಅಕ್ರಮ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಪ್ರಧಾನಿ Narendra Modi ಹಾಗೂ ಕೇಂದ್ರ ಶಿಕ್ಷಣ ಸಚಿವ Dharmendra Pradhan ನೇರ ಹೊಣೆ ಹೊರಬೇಕು ಎಂದು ಮುಖ್ಯಮಂತ್ರಿ Siddaramaiah ಒತ್ತಾಯಿಸಿದರು.

ಬೆಂಗಳೂರಿನ Freedom Park ನಲ್ಲಿ ಯುವ ಕಾಂಗ್ರೆಸ್ ಆಯೋಜಿಸಿದ್ದ ಪ್ರತಿಭಟನಾ ಸಮಾವೇಶದಲ್ಲಿ ಮಾತನಾಡಿದ ಸಿಎಂ, “ಈ ಹಿಂದೆ ರಾಜ್ಯಗಳು ತಮ್ಮದೇ CET ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸುತ್ತಿದ್ದರು. ಆದರೆ 2016ರಲ್ಲಿ ಮೋದಿ ಸರ್ಕಾರ ಬಲವಂತವಾಗಿ NEET ಜಾರಿಗೆ ತಂದ ಬಳಿಕ ಅಕ್ರಮಗಳು ಹೆಚ್ಚಾಗಿವೆ” ಎಂದು ಆರೋಪಿಸಿದರು.

“ಶಿಕ್ಷಣ ಸಂವಿಧಾನದ ಸಮವರ್ತಿ ಪಟ್ಟಿಯ ವಿಷಯ. ರಾಜ್ಯಗಳಿಗೆ ಸ್ವಾಯತ್ತತೆ ಇರಬೇಕು. ಆದರೆ ಕೇಂದ್ರ ಸರ್ಕಾರ ಎಲ್ಲಾ ಅಧಿಕಾರವನ್ನು ತನ್ನಲ್ಲೇ ಕೇಂದ್ರೀಕರಿಸಿಕೊಂಡ ಪರಿಣಾಮ ಇಂತಹ ಹಗರಣಗಳು ಮರುಕಳಿಸುತ್ತಿವೆ” ಎಂದು ಅವರು ಹೇಳಿದರು.

ಕಳೆದ ಹತ್ತು ವರ್ಷಗಳಲ್ಲಿ ಐದು ಬಾರಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂದು ಆರೋಪಿಸಿದ ಸಿದ್ದರಾಮಯ್ಯ, “ಗ್ರಾಮೀಣ ಮತ್ತು ಬಡ ವಿದ್ಯಾರ್ಥಿಗಳು ವರ್ಷವಿಡೀ ಶ್ರಮಪಟ್ಟು ಪರೀಕ್ಷೆಗೆ ಸಿದ್ಧತೆ ನಡೆಸುತ್ತಾರೆ. ಆದರೆ ಪೇಪರ್ ಲೀಕ್ ಮೂಲಕ ಅವರ ಭವಿಷ್ಯದ ಜೊತೆ ಚೆಲ್ಲಾಟವಾಡಲಾಗುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ ಸಿಎಂ, “ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಹತಾಶರಾಗಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

ಬಿಜೆಪಿ ಆಡಳಿತದಲ್ಲಿ ಅಕ್ರಮಗಳ ಸರಮಾಲೆ ನಡೆಯುತ್ತಿದೆ ಎಂದು ಆರೋಪಿಸಿದ ಅವರು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ PSI ನೇಮಕಾತಿ ಹಗರಣವನ್ನೂ ಉಲ್ಲೇಖಿಸಿದರು. “ದೇಶದ ಯುವಜನತೆ ಆಕ್ರೋಶದಲ್ಲಿದ್ದರೂ ಪ್ರಧಾನಿ ಮೋದಿ ವಿದೇಶ ಪ್ರವಾಸದಲ್ಲಿದ್ದಾರೆ” ಎಂದು ಟೀಕಿಸಿದರು.

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆ ದೊರೆಯುವವರೆಗೂ ಕಾಂಗ್ರೆಸ್ ಹೋರಾಟ ಮುಂದುವರಿಯಲಿದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

Continue Reading

ದೇಶ

ಸಿ.ಟಿ. ರವಿ ಎದುರೇ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಭಾರೀ ಘರ್ಷಣೆ

Published

on

ಚಿಕ್ಕಮಗಳೂರು: ಜಿಲ್ಲೆಯ ರಾಂಪುರ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಭಾರೀ ರಾಜಕೀಯ ಘರ್ಷಣೆ ಸಂಭವಿಸಿದ್ದು, ಕೆಲಕಾಲ ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ವಿಧಾನ ಪರಿಷತ್ ಸದಸ್ಯ ಹಾಗೂ ಮಾಜಿ ಸಚಿವ C. T. Ravi ಅವರ ಸಮ್ಮುಖದಲ್ಲೇ ಈ ಗಲಾಟೆ ನಡೆದಿರುವುದು ವಿಶೇಷ ಗಮನ ಸೆಳೆದಿದೆ.

ಸಿ.ಟಿ. ರವಿ ಗ್ರಾಮಕ್ಕೆ ಭೇಟಿ ನೀಡಿದ್ದ ವೇಳೆ ಸ್ಥಳೀಯ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಆರಂಭವಾದ ಮಾತಿನ ಚಕಮಕಿ ಕೆಲವೇ ಕ್ಷಣಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿತು. ಉಭಯ ಪಕ್ಷಗಳ ಬೆಂಬಲಿಗರು ಪರಸ್ಪರ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಪರಿಸ್ಥಿತಿ ಕೈಮೀರಿದ ಪರಿಣಾಮ ತಳ್ಳಾಟ-ನೂಕಾಟ ನಡೆಯಿತು.

ಮಾತಿನ ವಾಗ್ವಾದ ಹೆಚ್ಚಾಗುತ್ತಿದ್ದಂತೆ ಕಾರ್ಯಕರ್ತರು ಕೈಕೈ ಮಿಲಾಯಿಸುವ ಹಂತಕ್ಕೂ ತಲುಪಿದ್ದು, ಸಿ.ಟಿ. ರವಿ ಅವರ ಸಮ್ಮುಖದಲ್ಲೇ ಹಲ್ಲೆ ನಡೆಸಲು ಯತ್ನಿಸಲಾಗಿದೆ ಎನ್ನಲಾಗಿದೆ. ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಮುಖಂಡರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಲು ಪ್ರಯತ್ನಿಸಿದರು.

ಘಟನೆ ನಡೆದ ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡರು. ಯಾವುದೇ ಅನಾಹುತ ಸಂಭವಿಸದಂತೆ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈ ಘರ್ಷಣೆಯಿಂದ ಕೆಲಕಾಲ ರಾಂಪುರ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಜಕೀಯ ವೈಷಮ್ಯದ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲಾ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉದ್ವಿಗ್ನತೆ ಉಂಟಾಗದಂತೆ ಪೊಲೀಸರು ನಿಗಾವಹಿಸಿದ್ದಾರೆ.

Continue Reading

ದೇಶ

ಪೆಟ್ರೋಲ್-ಡಿಸೇಲ್ ತೆರಿಗೆ ಕಡಿತಕ್ಕೆ ಸಿಎಂ ಸ್ಪಷ್ಟ ನಕಾರ

Published

on

ಬೆಂಗಳೂರು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಕುರಿತು ಚರ್ಚೆಗಳು ತೀವ್ರವಾಗಿರುವ ನಡುವೆ ಮುಖ್ಯಮಂತ್ರಿ Siddaramaiah ರಾಜ್ಯ ಸರ್ಕಾರ ಇಂಧನ ಮೇಲಿನ ತೆರಿಗೆಯನ್ನು ಕಡಿತ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, “ಕೇಂದ್ರ ಸರ್ಕಾರ ಇಂಧನ ದರ ಹೆಚ್ಚಿಸಿದರೆ ನಾವು ತೆರಿಗೆ ಕಡಿಮೆ ಮಾಡಬೇಕಾ? ಅವರು ಬೆಲೆ ಏರಿಕೆ ಮಾಡಿದಾಗ ಯಾಕೆ ಪ್ರಶ್ನೆ ಕೇಳುವುದಿಲ್ಲ?” ಎಂದು ಪ್ರಶ್ನಿಸಿದರು. ಕೇಂದ್ರ ಸರ್ಕಾರದ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಂಧನ ದರ ಏರಿಕೆಗೆ ಪ್ರಮುಖ ಕಾರಣ ಕೇಂದ್ರ ಸರ್ಕಾರವೇ ಎಂದು ಆರೋಪಿಸಿದರು.

ಮುಂದುವರಿದು ಅವರು, “Narendra Modi ಅಧಿಕಾರಕ್ಕೆ ಬಂದಾಗ ಪೆಟ್ರೋಲ್ ಮತ್ತು ಡಿಸೇಲ್ ದರ ಎಷ್ಟು ಇತ್ತು? ಮಾಜಿ ಪ್ರಧಾನಿ Manmohan Singh ಅವಧಿಯಲ್ಲಿ ಪೆಟ್ರೋಲ್ ₹70 ಮತ್ತು ಡಿಸೇಲ್ ₹48 ಇತ್ತು. ಗ್ಯಾಸ್ ಸಿಲಿಂಡರ್ ಬೆಲೆ ₹414 ಇತ್ತು. ಈಗ ದರ ಎಷ್ಟು ಏರಿದೆ ಎಂಬುದನ್ನು ಜನರು ಗಮನಿಸಬೇಕು” ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜ್ಯ ಸರ್ಕಾರ ಜನರಿಗೆ ಯಾವುದೇ ನೆರವು ನೀಡುತ್ತದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಸಿಎಂ, “ಕೇಂದ್ರ ಸರ್ಕಾರ ದರ ಹೆಚ್ಚಿಸಿದಾಗ ಅವರ ವಿರುದ್ಧ ಪ್ರಶ್ನೆ ಕೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ತೆರಿಗೆ ಕಡಿಮೆ ಮಾಡಬೇಕೆಂದು ಕೇಳುತ್ತೀರಿ. ನಿಮ್ಮ ಪ್ರಶ್ನೆಗಳಲ್ಲೇ ಕೇಂದ್ರ ಸರ್ಕಾರದ ಪರ ನಿಲುವು ಕಾಣಿಸುತ್ತದೆ” ಎಂದು ಮಾಧ್ಯಮಗಳ ಮೇಲೆಯೂ ಅಸಮಾಧಾನ ವ್ಯಕ್ತಪಡಿಸಿದರು.

ಇಂಧನ ದರ ಏರಿಕೆ ವಿಚಾರದಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನಡುವೆ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಂಡುಬರುತ್ತಿವೆ.

Continue Reading

Trending