Connect with us

ಚುನಾವಣೆ

ಓವೈಸಿ ವಿರುದ್ಧ ಅಖಾಡಕ್ಕೆ ಇಳಿದಿರೋ, ಮೋದಿ ಮೆಚ್ಚುಗೆ ಪಡೆದಿರೋ ಮಾಧವಿ ಲತಾ ಯಾರು?

Published

on

ಲೋಕಸಭಾ ಚುನಾವಣೆಯ (Loksabha Elections 2024) ದಿನ ಸಮೀಪಿಸುತ್ತಿದ್ದಂತೆಯೇ ಅದರ ಕಾವು ರಂಗೇರಿದೆ. ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಲು ಪಕ್ಷದ ನಾಯಕರು ಪಣತೊಟ್ಟರೆ, ಇತ್ತ ಅಭ್ಯರ್ಥಿಗಳು ಕೂಡ ತಮ್ಮದೇ ಶೈಲಿಯಲ್ಲಿ, ವಿಭಿನ್ನ ರೀತಿಯಲ್ಲಿ ಪ್ರಚಾರಕ್ಕೆ ಇಳಿದಿದ್ದಾರೆ. ಈ ನಡುವೆ ಗಮನಾರ್ಹ ವಿಷಯ ಅಂದರೆ ಮುಸ್ಲಿಂ ಪ್ರಾಬಲ್ಯವಿರುವ ಹೈದರಾಬಾದ್ ಭದ್ರಕೋಟೆ ಬೇಧಿಸಲು ಬಿಜೆಪಿ ಈ ಬಾರಿ ವಿಭಿನ್ನ ಅಸ್ತ್ರವೊಂದನ್ನು ಪ್ರಯೋಗ ಮಾಡಿದೆ.

ಹೌದು. ದೇಶದ ಅತಿಹೆಚ್ಚು ಜನಸಂಖ್ಯೆ ಇರುವ ಲೋಕಸಭಾ ಕ್ಷೇತ್ರಗಳಲ್ಲಿ ಹೈದರಾಬಾದ್‌ ಲೋಕಸಭಾ ಕ್ಷೇತ್ರ ಕೂಡ ಒಂದಾಗಿದೆ. ಈ ಕ್ಷೇತ್ರದಲ್ಲಿ ಅಸಾದುದ್ದೀನ್‌ ಓವೈಸಿ (Asaduddin Owaisi) ಕುಟುಂಬವು ಕಳೆದ 40 ವರ್ಷಗಳಿಂದ ಸತತ ಗೆಲುವಿನ ಮೂಲಕ ಭದ್ರಕೋಟೆ ನಿರ್ಮಿಸಿದೆ. ಈ ಕ್ಷೇತ್ರದ ಮತದಾರರ ಪೈಕಿ ಶೇ. 70 ರಷ್ಟು ಮುಸ್ಲಿಮರಿದ್ದಾರೆ. ಆದರೂ ಇಲ್ಲಿ ಬಿಜೆಪಿಯು ಮುಸ್ಲಿಮೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಲಕ್ಷಕ್ಕಿಂತಲೂ ಅಧಿಕ ಮತಗಳಿಸುವ ಮೂಲಕ ಪ್ರತಿಬಾರಿ ಅಸಾದುದ್ದೀನ್‌ ಓವೈಸಿ ಗೆಲುವನ್ನು ಕಠಿಣಗೊಳಿಸುತ್ತಾ ಬಂದಿದೆ. ಅಂತೆಯೇ ಈ ಬಾರಿ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಓವೈಸಿಗೆ ಟಫ್‌ ಫೈಟ್‌ ಕೊಡಲು ಸಜ್ಜಾಗಿದೆ. ಹಾಗಿದ್ರೆ ಈ ಮಾಧವಿ ಲತಾ ಯಾರು?, ಅವರ ಹಿನ್ನೆಲೆ ಏನು..?, ಮಾಧವಿ ಲತಾ ಅವರನ್ನೇ ಬಿಜೆಪಿ ಯಾಕೆ ಅಖಾಡಕ್ಕಿ ಇಳಿಸಿದೆ ಎಂಬುದನ್ನು ನೋಡೋಣ.

ಮಾಧವಿ ಲತಾ ಯಾರು?: ಆರ್‌ಎಸ್‌ಎಸ್‌ನ ಕಟ್ಟಾ ಕಾರ್ಯಕರ್ತೆ, ಹೋರಾಟಗಾರ್ತಿ, ಭರತನಾಟ್ಯ ಕಲಾವಿದೆ ಮಾಧವಿ ಲತಾ (Madhavi Latha) ಅವರನ್ನು ಭಾರತೀಯ ಜನತಾ ಪಾರ್ಟಿ ಅಖಾಡಕ್ಕೆ ಇಳಿಸಿದೆ. ಈ ಮೂಲಕ ಓವೈಸಿ ವಿರುದ್ಧ ಈ ಬಾರಿ ಗೆಲ್ಲಲೇಬೇಕು ಎಂಬ ಹಠಕ್ಕೆ ಬಿಜೆಪಿ ಬಿದ್ದಂತಿದೆ.

ನಿಜಾಮ್ ಕಾಲೇಜಿನಲ್ಲಿ ಸಾರ್ವಜನಿಕ ಆಡಳಿತದಲ್ಲಿ ಪದವಿ ಮತ್ತು ಉಸ್ಮಾನಿಯಾ ವಿಶ್ವವಿದ್ಯಾಲಯದಿಂದ ರಾಜಕೀಯ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿಯನ್ನು ಮಾಧವಿ ಲತಾ ಅವರು ಪಡೆದಿದ್ದಾರೆ. ಇವರ ಮೂವರು ಮಕ್ಕಳಲ್ಲಿ ಇಬ್ಬರು ಐಐಟಿ ಮದ್ರಾಸ್‌ನಲ್ಲಿ ಓದುತ್ತಿದ್ದಾರೆ. ಹೋಮ್‌ ಸ್ಕೂಲಿಂಗ್‌ ನಡೆಸಿಯೇ ಮಕ್ಕಳನ್ನು ಐಐಟಿಗೆ ಕಳುಹಿಸಿರುವುದು ವಿಶೇಷವಾಗಿದೆ.

ವೃತ್ತಿಪರ ಭರತನಾಟ್ಯಂ ಡಾನ್ಸರ್‌ ಆಗಿರುವ 49 ವರ್ಷದ ಮಾಧವಿ ಲತಾ ಅವರು ಹೆಣ್ಣುಮಕ್ಕಳ ಶಿಕ್ಷಣದ ಪ್ರಾಯೋಜಕರಾಗಿದ್ದಾರೆ ಮತ್ತು ಆರೋಗ್ಯ ಶಿಬಿರಗಳನ್ನು ಆಯೋಜಿಸುವಲ್ಲಿ ಮತ್ತು ಪ್ರವಾಹ ನೆರವು ನೀಡುವಲ್ಲಿನ ಪ್ರಯತ್ನಗಳಿಗೆ ಹೆಸರುವಾಸಿಯಾಗಿದ್ದಾರೆ. ಪ್ರಸ್ತುತ ಹೈದರಾಬಾದ್ ಮೂಲದ ಪ್ರಮುಖ ಆರೋಗ್ಯ ಸಂಸ್ಥೆಯಾದ ವಿರಿಂಚಿ ಹಾಸ್ಪಿಟಲ್ಸ್‌ನ ಅಧ್ಯಕ್ಷರಾಗಿದ್ದಾರೆ. ರೋಗಿಗಳಿಗೆ ಹೆಚ್ಚಿನ ಶುಲ್ಕ ವಿಧಿಸಿದ ಆರೋಪದ ನಂತರ ಆರೋಗ್ಯ ಅಧಿಕಾರಿಗಳು ಕೋವಿಡ್‌-19 ಚಿಕಿತ್ಸೆಗಾಗಿ ಅದರ ಪರವಾನಗಿಯನ್ನು ರದ್ದುಗೊಳಿಸಿದಾಗ ವಿರಿಂಚಿ ಹಾಸ್ಪಿಟಲ್ಸ್‌ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಮೋದಿ ಮೆಚ್ಚುಗೆ: ಮಾಧವಿ ಲತಾ ಅವರು 2019 ರಲ್ಲಿ ಕಾನೂನುಬಾಹಿರವಾದ ತ್ರಿವಳಿ ತಲಾಖ್ ವಿರುದ್ಧ ಸಕ್ರಿಯವಾಗಿ ಪ್ರಚಾರ ಮಾಡಿದರು. ಅವರು ಹಳೇ ಹೈದರಾಬಾದ್‌ನಲ್ಲಿ ಈ ಸಮಸ್ಯೆಯನ್ನು ಪ್ರಮುಖವಾಗಿ ಪ್ರಸ್ತಾಪಿಸಿ, ಈ ಪದ್ಧತಿಯನ್ನು ರದ್ದುಗೊಳಿಸುವಂತೆ ಮುಸ್ಲಿಂ ಹೆಣ್ಣುಮಕ್ಕಳೊಂದಿಗೆ ಸೇರಿ ಒತ್ತಾಯಿಸಿದ್ದರು. ಮಾಧವಿ ಲತಾ ಅವರ ಈ ನಡೆ ಪ್ರಧಾನಿ ನರೇಂದ್ರ ಮೋದಿಯವರ ಗಮನಸೆಳೆದಿತ್ತು. ಕೆಲ ತಿಂಗಳ ಹಿಂದೆ ಪ್ರಚಾರದ ವೇಳೆ ಬುರ್ಕಾ ಧರಿಸಿದ್ದ ಸಾಕಷ್ಟು ಮುಸ್ಲಿಂ ಹೆಣ್ಣುಮಕ್ಕಳು ಇವರೊಂದಿಗೆ ಸೆಲ್ಫಿ ತೆಗೆದುಕೊಂಡಿದ್ದ ಫೋಟೋ ಕೂಡ ವೈರಲ್‌ ಆಗಿತ್ತು. ಒಟ್ಟಿನಲ್ಲಿ ಪಕ್ಷದ ವಲಯದಲ್ಲಿ ಗುರುತಿಸಿಕೊಳ್ಳದಿದ್ದರೂ ಹೊರಗೆ ತಮ್ಮ ವಾಕ್ಚಾತುರ್ಯದಿಂದ ಭಾರೀ ಪ್ರಸಿದ್ಧಿ ಪಡೆದಿದ್ದಾರೆ. ಈ ಕಾರಣದಿಂದ ಇಂದು ಇವರನ್ನು ಬಿಜೆಪಿ ಚುನಾವಣಾ ಅಖಾಡಕ್ಕೆ ಇಳಿಸಿರುವ ಸಾಧ್ಯತೆಗಳಿವೆ.

ಇತ್ತೀಚೆಗೆ ಆಪ್‌ ಕೀ ಅದಾಲತ್‌ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಾಧವಿ ಲತಾಗೆ ಪ್ರಮುಖ ಪ್ರಶ್ನೆಯೊಂದನ್ನು ಕೇಳಲಾಗಿತ್ತು. ಮುಸ್ಲಿಂ ಸಮುದಾಯದ ಆಂತರಿಕ ವಿಚಾರಗಳಲ್ಲಿ ನೀವು ಮೂಗು ತೂರಿಸೋದ್ಯಾಕೆ ಎಂದು ಪ್ರಶ್ನಿಸಲಾಗಿತ್ತು. ಇದಕ್ಕೆ ಕಡ್ಡಿಮುರಿದಂತೆ ಉತ್ತರ ನೀಡಿದ್ದ ಮಾಧವಿ ಲತಾ, ಮುಸ್ಲಿಂ ಹೆಣ್ಣುಮಕ್ಕಳು ಬೇರೆಯವರಲ್ಲ. ಅವರೂ ನಮ್ಮ ಪ್ರಜೆಗಳು. ದೇಶದ ಪ್ರಜೆಯಾಗಿ ನಾನು ಇದರ ಬಗ್ಗೆ ಮಾತನಾಡಬಹುದು ಎಂದಿದ್ದರು.

ಟಿಕೆಟ್‌ ಘೋಷಣೆ ಬಳಿಕ ಲತಾ ಹೇಳಿದ್ದೇನು?: ವಿಶೇಷವೆಂದರೆ, ಮುಂಬರುವ ಲೋಕಸಭಾ ಚುನಾವಣೆ 2024 ರ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ಮಾಧವಿ ಲತಾ ಅವರು ಮಾರ್ಚ್ 2 ರವರೆಗೂ ರಾಜಕೀಯ ವಲಯಗಳಲ್ಲಿ ಹೆಚ್ಚು ಪರಿಚಿತರಾಗಿರಲಿಲ್ಲ. ಅಂದರೆ ಟಿಕೆಟ್‌ ಘೋಷಣೆ ಮಾಡುವ ವೇಳೆ ಮಾಧವಿ ಲತಾ ಬಿಜೆಪಿಯ ಸದಸ್ಯೆ ಕೂಡ ಆಗಿರಲಿಲ್ಲ. ಟಿಕೆಟ್‌ ಘೋಷಣೆ ಬಳಿಕ ಪ್ರತಿಕ್ರಿಯಿಸಿದ್ದ ಮಾಧವಿ, ಕಳೆದ ಒಂದು ವರ್ಷದಿಂದ ಪ್ರತಿದಿನ ಎಲ್ಲಾ ಪ್ರದೇಶಗಳಿಗೆ ಭೇಟಿ ನೀಡಿ 11 ರಿಂದ 12 ಗಂಟೆಗಳ ಕಾಲ ಕೆಲಸ ಮಾಡುತ್ತಿದ್ದೇನೆ. ಇಲ್ಲಿ ಏನೂ ಇಲ್ಲ, ಸ್ವಚ್ಛತೆ ಇಲ್ಲ, ಶಿಕ್ಷಣವಿಲ್ಲ, ಮದರಸಾಗಳಲ್ಲಿ ಮಕ್ಕಳಿಗೆ ಆಹಾರವಿಲ್ಲ. ಮುಸ್ಲಿಂ ಮಕ್ಕಳು ಬಾಲ ಕಾರ್ಮಿಕರಾಗುತ್ತಿದ್ದಾರೆ. ಹಿಂದೂ ದೇವಾಲಯಗಳು ಮತ್ತು ಮನೆಗಳನ್ನು ಅಕ್ರಮವಾಗಿ ವಶಪಡಿಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದರು.

ದೇಶ

ಪಂಜಾಬ್ ಚುನಾವಣೆಗೆ Waris Punjab De ಮೊದಲ ಅಭ್ಯರ್ಥಿ; ಸತ್ವಂತ್ ಸಿಂಗ್ ಕಣಕ್ಕೆ

Published

on

ಚಂಡೀಗಢ: 2027ರ ಪಂಜಾಬ್ ವಿಧಾನಸಭೆ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿರುವ ಬೆನ್ನಲ್ಲೇ, ಅಕಾಲಿ ದಳ್ Waris Punjab De ತನ್ನ ಮೊದಲ ಅಭ್ಯರ್ಥಿಯನ್ನು ಘೋಷಿಸಿದೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿ ಶಿಕ್ಷೆಗೆ ಗುರಿಯಾಗಿದ್ದ ಕೆಹರ್ ಸಿಂಗ್ ಅವರ ಪುತ್ರ ಸತ್ವಂತ್ ಸಿಂಗ್ ಅವರನ್ನು ಬಸ್ಸಿ ಪಠಾನಾ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಪಕ್ಷ ನಿರ್ಧರಿಸಿದೆ.

ಈ ಘೋಷಣೆ ಪಂಜಾಬ್‌ನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇಂದಿರಾ ಗಾಂಧಿ ಹತ್ಯೆಗೆ ಸಂಚು ರೂಪಿಸಿದ ಆರೋಪದಲ್ಲಿ ಕೆಹರ್ ಸಿಂಗ್ ದೋಷಿಯಾಗಿದ್ದರು. ಪ್ರಕರಣದಲ್ಲಿ ಅವರಿಗೆ ಮರಣದಂಡನೆ ವಿಧಿಸಲಾಗಿತ್ತು. ಇದೀಗ ಅವರ ಪುತ್ರನಿಗೆ 2027 Punjab Assembly Election ಟಿಕೆಟ್ ನೀಡಿರುವುದು ಪಂಥಿಕ್ ರಾಜಕೀಯದಲ್ಲಿ ಗಮನ ಸೆಳೆದಿದೆ.

ತ್ಯಾಗ ಮಾಡಿದ ಕುಟುಂಬಗಳಿಗೆ ಗೌರವ: ತರ್ಸೆಮ್ ಸಿಂಗ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತರ್ಸೆಮ್ ಸಿಂಗ್, ಪಕ್ಷದ ರಾಜಕೀಯ ಕೇವಲ ಅಧಿಕಾರ ಹಿಡಿಯುವುದಕ್ಕೆ ಸೀಮಿತವಾಗಿಲ್ಲ ಎಂದು ಹೇಳಿದ್ದಾರೆ. ಪಂಥಿಕ್ ತತ್ವಗಳು, ಪಂಜಾಬ್‌ನ ಹಕ್ಕುಗಳು ಹಾಗೂ ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳ ಗೌರವವನ್ನು ಎತ್ತಿಹಿಡಿಯುವುದು ಪಕ್ಷದ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

ಪಂಥ್ ಮತ್ತು ಸಮುದಾಯಕ್ಕಾಗಿ ತ್ಯಾಗ ಮಾಡಿದ ಕುಟುಂಬಗಳನ್ನು ಪಕ್ಷ ಕಡೆಗಣಿಸುತ್ತಿದೆ ಎಂಬ ಆರೋಪಗಳು ಇತ್ತೀಚೆಗೆ ಕೇಳಿಬಂದಿದ್ದವು. ಆದರೆ, ಮೊದಲ ಅಭ್ಯರ್ಥಿಯಾಗಿಯೇ ಅಂತಹ ಕುಟುಂಬದ ಸದಸ್ಯರನ್ನು ಕಣಕ್ಕಿಳಿಸುವ ಮೂಲಕ ಪಕ್ಷ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ ಎಂದು ತರ್ಸೆಮ್ ಸಿಂಗ್ ಹೇಳಿದ್ದಾರೆ.

ಬಸ್ಸಿ ಪಠಾನಾದಲ್ಲಿ ಪಂಥಿಕ್ ಮತಗಳ ಲೆಕ್ಕಾಚಾರ

ಸತ್ವಂತ್ ಸಿಂಗ್ ಅವರ ಅಭ್ಯರ್ಥಿತನವು ಬಸ್ಸಿ ಪಠಾನಾ ಕ್ಷೇತ್ರದಲ್ಲಿ Panthic Politics in Punjab ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಅವರ ಕುಟುಂಬದ ಹಿನ್ನೆಲೆ ಮತದಾರರ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎಂಬುದು ಮುಂದಿನ ದಿನಗಳಲ್ಲಿ ಕುತೂಹಲ ಮೂಡಿಸಿದೆ.

2022ರ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 117 ಸ್ಥಾನಗಳ ಪೈಕಿ 92 ಸ್ಥಾನಗಳನ್ನು ಗೆದ್ದು ಭರ್ಜರಿ ಬಹುಮತ ಪಡೆದಿತ್ತು. ಕಾಂಗ್ರೆಸ್ 18 ಸ್ಥಾನಗಳಿಗೆ ಸೀಮಿತವಾಗಿತ್ತು. ಇದೀಗ 2027ರ ಚುನಾವಣೆಯಲ್ಲಿ ಪಂಥಿಕ್ ರಾಜಕೀಯದ ಪ್ರಭಾವ ಎಷ್ಟಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Continue Reading

ಬೆಂಗಳೂರು

SIR ಸಮೀಕ್ಷೆ ವೇಳೆ ಸರ್ಕಾರಿ ಅಧಿಕಾರಿಗೆ ಹಲ್ಲೆ: ಡಿ.ಜೆ.ಹಳ್ಳಿಯಲ್ಲಿ ಇಬ್ಬರು ಆರೋಪಿಗಳ ಬಂಧನ

Published

on

ಬೆಂಗಳೂರು: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಕಾರ್ಯಾಚರಣೆ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೇವರಜೀವನಹಳ್ಳಿ (D J Halli) ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಯಾರಬ್ ಮತ್ತು ದಸ್ತಗೀರ್ ಎಂದು ಗುರುತಿಸಲಾಗಿದೆ. ಬುಧವಾರ ಮಧ್ಯಾಹ್ನ ಸುಮಾರು 1.30 ಗಂಟೆ ವೇಳೆಗೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಸ್ಲಂ ಡೆವಲಪ್‌ಮೆಂಟ್ ಬೋರ್ಡ್ ಅಧಿಕಾರಿಗಳ ತಂಡವು ಡಿ.ಜೆ.ಹಳ್ಳಿಯ ರೋಶನ್ ನಗರದಲ್ಲಿರುವ ಕೌಸರ್ ಮಸೀದಿ ಸಮೀಪ SIR ಸಮೀಕ್ಷೆ ನಡೆಸುತ್ತಿತ್ತು.

ಈ ವೇಳೆ ಸ್ಥಳಕ್ಕೆ ಬಂದ ದಸ್ತಗೀರ್, ತನಗೂ SIR ಫಾರ್ಮ್ ನೀಡುವಂತೆ ಅಧಿಕಾರಿಗಳೊಂದಿಗೆ ವಾಗ್ವಾದ ನಡೆಸಿದ್ದಾನೆ. ಆದರೆ ಆತ ಈಗಾಗಲೇ ಜಯನಗರಕ್ಕೆ ವಾಸ್ತವ್ಯ ಬದಲಾಯಿಸಿರುವುದರಿಂದ ಆ ಪ್ರದೇಶದಲ್ಲಿ ಫಾರ್ಮ್ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದರು.

ಈ ಉತ್ತರದಿಂದ ಆಕ್ರೋಶಗೊಂಡ ದಸ್ತಗೀರ್ ಹಾಗೂ ಆತನಿಗೆ ಬೆಂಬಲ ನೀಡಿದ ಯಾರಬ್, ಕರ್ತವ್ಯದಲ್ಲಿದ್ದ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಅಧಿಕಾರಿಗೆ ಗಾಯ

ಹಲ್ಲೆಯಲ್ಲಿ ಸ್ಲಂ ಡೆವಲಪ್‌ಮೆಂಟ್ ಬೋರ್ಡ್‌ನ ಸೂಪರಿಂಟೆಂಡೆಂಟ್ ಫಕೀರಪ್ಪ ಗಾಯಗೊಂಡಿದ್ದಾರೆ. ಆರೋಪಿಗಳು ಮುಖ ಹಾಗೂ ಕಟಿ ಭಾಗಕ್ಕೆ ಹೊಡೆದಿದ್ದು, ಬೆನ್ನಿನ ಮೇಲೂ ಹಲ್ಲೆ ನಡೆಸಿದ ಪರಿಣಾಮ ಅವರ ತುಟಿಗೆ ಗಾಯವಾಗಿ ರಕ್ತಸ್ರಾವವಾಗಿದೆ ಎಂದು ತಿಳಿದುಬಂದಿದೆ.

ಸ್ಥಳದಲ್ಲಿದ್ದ ಸಾರ್ವಜನಿಕರು ಮಧ್ಯಪ್ರವೇಶಿಸಿ ಗಲಾಟೆ ನಿಲ್ಲಿಸಿದ್ದು, ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಪ್ರಕರಣ ದಾಖಲು, ಇಬ್ಬರ ಬಂಧನ

ಚಿಕಿತ್ಸೆಯ ಬಳಿಕ ಫಕೀರಪ್ಪ ಅವರು ಡಿ.ಜೆ.ಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸುವುದು ಹಾಗೂ ಸರ್ಕಾರಿ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಆರೋಪಗಳಡಿ ಪ್ರಕರಣ ದಾಖಲಿಸಿಕೊಂಡಿದ್ದು, ಘಟನೆ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.

Continue Reading

ಬೆಂಗಳೂರು

GBA ಸೇರಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆ ಡಿಸೆಂಬರ್ ಒಳಗೆ; ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

Published

on

ನವದೆಹಲಿ: ಬೆಂಗಳೂರು ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಚುನಾವಣೆ ಸೇರಿದಂತೆ ರಾಜ್ಯದ ಎಲ್ಲಾ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು (Local Body Elections) ನಿಗದಿತ ಅವಧಿಯೊಳಗೆ ನಡೆಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನಗಳು ಹಾಗೂ ಚುನಾವಣಾ ಸಿದ್ಧತೆಗಳ ಕುರಿತು ಶುಕ್ರವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಚುನಾವಣೆಗಳನ್ನು ಅನಗತ್ಯವಾಗಿ ಮುಂದೂಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಸ್ಪಷ್ಟಪಡಿಸಿದರು.

ಸಿಎಂ ಡಿ.ಕೆ. ಶಿವಕುಮಾರ್ ಅವರ ಪ್ರಕಾರ, ಬೆಂಗಳೂರು ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಹಾಗೂ ಇತರೆ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮೊದಲಿಗೆ ಆಗಸ್ಟ್ 31ರೊಳಗೆ ನಡೆಸುವ ಉದ್ದೇಶ ಹೊಂದಲಾಗಿತ್ತು. ಆದರೆ ಎಸ್‌ಐಆರ್ (SIR) ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಹಾಗೂ ಕೆಲವು ತಾಂತ್ರಿಕ ಕಾರಣಗಳಿಂದಾಗಿ ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗವು ಸುಪ್ರೀಂ ಕೋರ್ಟ್‌ನಲ್ಲಿ ಹೆಚ್ಚಿನ ಕಾಲಾವಕಾಶ ಕೋರಿತ್ತು.

ಈ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ನಿರ್ದೇಶನದಂತೆ ಮುಂದಿನ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ ಸಿಎಂ, ಚುನಾವಣೆ ಪ್ರಕ್ರಿಯೆಯನ್ನು ವಿಳಂಬ ಮಾಡುವುದು ಸರ್ಕಾರದ ಉದ್ದೇಶವಲ್ಲ ಎಂದು ಪುನರುಚ್ಚರಿಸಿದರು.

ಬೆಂಗಳೂರು ಮಾತ್ರವಲ್ಲದೆ, ರಾಜ್ಯದಲ್ಲಿ ಬಾಕಿ ಉಳಿದಿರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಗ್ರಾಮ ಪಂಚಾಯತ್, ನಗರಸಭೆ ಹಾಗೂ ಮಹಾನಗರ ಪಾಲಿಕೆಗಳ ಚುನಾವಣೆಗಳನ್ನು ಈ ವರ್ಷದ ಡಿಸೆಂಬರ್ ತಿಂಗಳೊಳಗೆ ಪೂರ್ಣಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.

ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿ ಆಶಯಕ್ಕೆ ಅನುಗುಣವಾಗಿ ಗ್ರಾಮ ಪಂಚಾಯತ್‌ನಿಂದ ಮಹಾನಗರ ಪಾಲಿಕೆವರೆಗೆ ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಯುವ ನಾಯಕತ್ವ ಹಾಗೂ ಹೊಸ ಮುಖಗಳಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದರು.

ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಗಡುವಿನ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಅಗತ್ಯ ಸಿದ್ಧತೆಗಳನ್ನು ವೇಗಗೊಳಿಸುವ ಸಾಧ್ಯತೆ ಇದ್ದು, ಮತದಾರರ ಪಟ್ಟಿ ಪರಿಷ್ಕರಣೆ ಪೂರ್ಣಗೊಂಡ ಬಳಿಕ ಚುನಾವಣಾ ವೇಳಾಪಟ್ಟಿ ಪ್ರಕಟವಾಗುವ ನಿರೀಕ್ಷೆಯಿದೆ. ಇದರಿಂದ GBA ಚುನಾವಣೆ ಸೇರಿದಂತೆ ರಾಜ್ಯದ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಕುರಿತ ರಾಜಕೀಯ ಚಟುವಟಿಕೆಗಳು ಮತ್ತಷ್ಟು ಚುರುಕುಗೊಳ್ಳುವ ಸಾಧ್ಯತೆ ಇದೆ.

Continue Reading

Trending