Connect with us

ಚುನಾವಣೆ

ಬೆಂಗಳೂರಿನಲ್ಲಿ ಕಾಂಗ್ರೆಸ್ ಹೀನಾಯ ಸೋಲು: ಬಿಬಿಎಂಪಿ ಚುನಾವಣೆ ಮೇಲೂ ಎಫೆಕ್ಟ್!

ಬೆಂಗಳೂರು: ಬೆಂಗಳೂರಿನ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸೋಲನುಭವಿಸಿರುವ ಹಿನ್ನೆಲೆಯಲ್ಲಿ, ಪ್ರಚಾರದ ಹೊಣೆ ಹೊತ್ತಿದ್ದ ಕೆಲವು ಮಾಜಿ ಕಾರ್ಪೊರೇಟರ್‌ಗಳು ಮತ್ತು ಮುಖಂಡರನ್ನು ಕೆಳಗಿಳಿಸಬೇಕು ಹಾಗೂ ನಿಷ್ಠಾವಂತ ಮತ್ತು ಪ್ರಾಮಾಣಿಕ ಕಾರ್ಯಕರ್ತರಿಗೆ ದಾರಿ ಮಾಡಿಕೊಡಬೇಕು ಎಂದು ಪಕ್ಷದ ಕಾರ್ಯಕರ್ತರು ಮತ್ತು ನಾಯಕರು ಒತ್ತಾಯಿಸಿದ್ದಾರೆ.

ಇದು ಸಾಮೂಹಿಕ ನಾಯಕತ್ವದ ವೈಫಲ್ಯ ಮತ್ತು ಬಿಜೆಪಿ-ಜೆಡಿಎಸ್ ಮೈತ್ರಿ ಕಾಂಗ್ರೆಸ್ ವಿರೋಧಿ ಮತಗಳ ಕ್ರೋಢೀಕರಣಕ್ಕೆ ಸಹಕಾರಿಯಾಗಿದೆ ಎಂದು ಬೆಂಗಳೂರು ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ರಾಜೀವ್ ಗೌಡ ಹೇಳಿದ್ದಾರೆ. ಬೆಂಗಳೂರು ಸೆಂಟ್ರಲ್‌ನಲ್ಲಿ ಪಿಸಿ ಮೋಹನ್‌ ವಿರುದ್ಧ ಸ್ಪರ್ಧಿಸಿದ್ದ ಮನ್ಸೂರ್ ಅಲಿ ಖಾನ್ ಮಾತನಾಡಿ, ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳಪೆ ಚುನಾವಣಾ ನಿರ್ವಹಣೆ ತನ್ನ ಸೋಲಿಗೆ ಕಾರಣವಾಯಿತು ಎಂದು ಹೇಳಿದ್ದಾರೆ. ಬೆಂಗಳೂರು ಉತ್ತರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಜಿದ್ ಮತ್ತು ಬೆಂಗಳೂರು ಸೆಂಟ್ರಲ್ ಅಧ್ಯಕ್ಷ ಉದಯ್ ಕುಮಾರ್ ಅವರು ಕ್ಷೇತ್ರದಾದ್ಯಂತ ಪಕ್ಷದ ಕಾರ್ಯಕರ್ತರೊಂದಿಗೆ ಸಂಪರ್ಕ ಸಾಧಿಸಲು ವಿಫಲವಾದ ಕಾರಣ ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಪಡೆಯುವುದು ಕಷ್ಟವಾಗಬಹುದು ಎಂದು ಮೂಲಗಳು ತಿಳಿಸಿವೆ.

ಇಬ್ಬರೂ ನಾಯಕರು ಇತರ ಭಾಗಗಳಲ್ಲಿನ ಕಾರ್ಯಕರ್ತರೊಂದಿಗೆ ಉತ್ತಮ ಸಂಪರ್ಕ ಹೊಂದಿಲ್ಲ ಮತ್ತು ತಮ್ಮ ವಾರ್ಡ್‌ಗಳನ್ನು ಮೀರಿ ಬೆಳೆದಿಲ್ಲ. ಅವರಿಗೆ ಜವಾಬ್ದಾರಿ ನೀಡುವುದು ಪಕ್ಷಕ್ಕೆ ಸಮಸ್ಯೆಯಾಗಲಿದೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಹೇಳಿದ್ದಾರೆ.

ಬೆಂಗಳೂರು ಉತ್ತರ ಮತ್ ಬೆಂಗಳೂರು ತು ದಕ್ಷಿಣ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 2.5 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್‌ಗಾಗಿ ಕೆಲಸ ಮಾಡಿದ ಸಚಿವರು ಮತ್ತು ಮಾಜಿ ಕಾರ್ಪೊರೇಟರ್‌ಗಳು ಯಾವುದೇ ಪರಿಣಾಮ ಬೀರಲು ವಿಫಲರಾಗಿದ್ದಾರೆ ಎಂಬುದನ್ನು ಇದು ಸೂಚಿಸುತ್ತದೆ. ತಮ್ಮ ಅಭ್ಯರ್ಥಿಗಳ ಸೋಲಿಗೆ ಅವರೇ ಹೊಣೆಗಾರರಾಗಿದ್ದು, ನೈತಿಕ ಹೊಣೆ ಹೊರಬೇಕು ಎಂದಿದ್ದಾರೆ.

ಉತ್ತರ ಭಾಗದ ಕೃಷ್ಣ ಬೈರೇಗೌಡ ಅವರ ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 41,000 ಮುನ್ನಡೆ ಸಾಧಿಸಿದೆ. ಅದೇ ರೀತಿ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಎಂಎಲ್‌ಸಿ ಚುನಾವಣೆ ವೇಳೆ ಅಡ್ಡ ಮತದಾನ ಮಾಡಿದ ಬಿಜೆಪಿ ಬಂಡಾಯ ಶಾಸಕ ಎಸ್‌ಟಿ ಸೋಮಶೇಖರ್‌ ಬಿಜೆಪಿಗೆ ಮತ ಹೋಗುವುದನ್ನು ತಡೆಯಲು ವಿಫಲವಾಗಿರುವುದರಿಂದ ಕೇಸರಿ ಪಕ್ಷ 1.20 ಲಕ್ಷ ಮತಗಳಿಂದ ಮುನ್ನಡೆ ಸಾಧಿಸಿದೆ ಎಂದು ಬಿಜೆಪಿ ಬೆಂಗಳೂರು ಉತ್ತರ ಅಧ್ಯಕ್ಷ ಹರೀಶ್ ಹೇಳಿದ್ದಾರೆ. ಬೆಂಗಳೂರು ಸೆಂಟ್ರಲ್‌ನ ಲೋಕಸಭೆ ವ್ಯಾಪ್ತಿಗೆ ಬರುವ ಸಚಿವ ದಿನೇಶ್ ಗುಂಡೂರಾವ್ ಅವರ ಗಾಂಧಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 23,000 ಮತಗಳ ಗಳಿಸಿದೆ, ಹೀಗಾಗೀ ಕಾಂಗ್ರೆಸ್ ಅಭ್ಯರ್ಥಿ ಸೋಲಿನ ಹೊಣೆಯನ್ನು ದಿನೇಶ್ ಹೊರಬೇಕು. ಸಚಿವರು, ಮಾಜಿ ಕಾರ್ಪೊರೇಟರ್‌ಗಳು ಮತ್ತು ಸಂಸದೀಯ ವಿಭಾಗದ ಅಧ್ಯಕ್ಷರು ಕೆಳಗಿಳಿಯಬೇಕು ಎಂದು ಹರೀಶ್ ಒತ್ತಾಯಿಸಿದ್ದಾರೆ. ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹಗದೂರು ವಾರ್ಡ್‌ನ ಮಾಜಿ ಕಾರ್ಪೊರೇಟರ್ ಉದಯ್ ಕುಮಾರ್, ಮಹದೇವಪುರದಲ್ಲಿ ಸೋತ ಶಾಸಕರು ಕಾಂಗ್ರೆಸ್ ಅಭ್ಯರ್ಥಿಗೆ ಅಸಹಕಾರ ನೀಡಿದ್ದಾರೆ ಎಂದು ಆರೋಪಿಸಿದರು. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ಕಳೆದ 15 ವರ್ಷಗಳಿಂದ ಇರುವ ಹಲವು ಅಧಿಕಾರಿಗಳು ಬಿಜೆಪಿ ಪರ ಕೆಲಸ ಮಾಡಿದ್ದಾರೆ ಎಂದು ದೂರಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಉತ್ತಮ ಮುನ್ನಡೆ ಸಾಧಿಸಲು ಸಹಾಯ ಮಾಡದವರನ್ನು ಪರಿಗಣಿಸಲಾಗುವುದಿಲ್ಲ ಎಂದು ಪಕ್ಷವು ಈಗಾಗಲೇ ಹೇಳಿರುವುದರಿಂದ ಕೆಲಸ ಮಾಡದ ನಾಯಕರನ್ನು ಬಿಬಿಎಂಪಿ ಚುನಾವಣೆಗೆ ಟಿಕೆಟ್ ನಿರಾಕರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

ಚುನಾವಣೆ

BENGALURU : ವಾರ್ಡ್ ಮರುವಿಂಗಡಣೆ ವಿರೋಧಿಸಿ ಶಾಸಕ ಎಂ. ಕೃಷ್ಣಪ್ಪ ಹೈಕೋರ್ಟ್ ಅರ್ಜಿ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಕೆಲವು ವಾರ್ಡುಗಳ ಪ್ರದೇಶಗಳನ್ನು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ವಾರ್ಡುಗಳಿಗೆ ಸೇರಿಸಿರುವ ಕ್ರಮವನ್ನು ಪ್ರಶ್ನಿಸಿ, ಬೆಂಗಳೂರು ದಕ್ಷಿಣ ಶಾಸಕ ಎಂ. ಕೃಷ್ಣಪ್ಪ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ರಾಜ್ಯ ಸರ್ಕಾರ ಸೇರಿದಂತೆ ಸಂಬಂಧಿತ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿದೆ.

ರಾಜ್ಯ ಸರ್ಕಾರ, ಜಿಬಿಎ ಮುಖ್ಯ ಆಯುಕ್ತ, ದಕ್ಷಿಣ ನಗರ ಪಾಲಿಕೆ ಆಯುಕ್ತ, ವಾರ್ಡ್ ಮರುವಿಂಗಡಣೆ ಆಯೋಗ, ರಾಜ್ಯ ಚುನಾವಣಾ ಆಯೋಗ ಹಾಗೂ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ನೋಟಿಸ್ ನೀಡಿರುವ ನ್ಯಾಯಾಲಯ, ಈ ವಿಚಾರದಲ್ಲಿ ಸರ್ಕಾರದಿಂದ ಸ್ಪಷ್ಟನೆ ಪಡೆಯಲು ಸೂಚಿಸಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳ ಕೆಲವು ಭಾಗಗಳನ್ನು ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಸೇರಿಸಲಾಗಿದೆಯೇ ಎಂಬುದನ್ನು ವಿವರಿಸುವಂತೆ ಸರ್ಕಾರದ ವಕೀಲರಿಗೆ ನಿರ್ದೇಶನ ನೀಡಿ, ವಿಚಾರಣೆಯನ್ನು ಫೆಬ್ರವರಿ 18ಕ್ಕೆ ಮುಂದೂಡಲಾಗಿದೆ.

ಅರ್ಜಿಯಲ್ಲಿ, ಬೆಂಗಳೂರು ದಕ್ಷಿಣ ಕ್ಷೇತ್ರದ ಎಳೇನಹಳ್ಳಿ ವಾರ್ಡಿನ ಅಕ್ಷಯನಗರ ಹಾಗೂ ಅದರ ಸುತ್ತಲಿನ ಪ್ರದೇಶಗಳು ಮತ್ತು ಕೊತ್ತನೂರು ವಾರ್ಡಿನ ಕ್ಲಾಸಿಕ್ ಆರ್ಚರ್ಡ್ ಪ್ರದೇಶವನ್ನು ಕ್ರಮವಾಗಿ ಬೊಮ್ಮನಹಳ್ಳಿ ಕ್ಷೇತ್ರದ ವಿಜಯಾ ಬ್ಯಾಂಕ್ ಲೇಔಟ್ ಮತ್ತು ದೊರೆಸಾನಿಪಾಳ್ಯ ವಾರ್ಡುಗಳಿಗೆ ಸೇರಿಸಿರುವುದನ್ನು ಆಕ್ಷೇಪಿಸಲಾಗಿದೆ. ಒಂದು ವಾರ್ಡನ್ನು ಎರಡು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಗೆ ಸೇರಿಸುವುದು ಜಿಬಿಎ ಕಾಯ್ದೆ ಮತ್ತು ವಾರ್ಡ್ ಮರುವಿಂಗಡಣೆ ಮಾರ್ಗಸೂಚಿಗಳಿಗೆ ವಿರುದ್ಧವಾಗಿದೆ ಎಂದು ಅರ್ಜಿದಾರರು ವಾದಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಹೊರಡಿಸಿರುವ ಅಧಿಸೂಚನೆಯನ್ನು ರದ್ದುಪಡಿಸಿ, ಬೊಮ್ಮನಹಳ್ಳಿ ಕ್ಷೇತ್ರಕ್ಕೆ ಸೇರಿಸಿರುವ ಪ್ರದೇಶಗಳನ್ನು ಮರುವಾಗಿ ಬೆಂಗಳೂರು ದಕ್ಷಿಣ ಕ್ಷೇತ್ರದ ವಾರ್ಡುಗಳಿಗೆ ಸೇರಿಸಬೇಕೆಂದು ಹೈಕೋರ್ಟ್‌ಗೆ ಮನವಿ ಮಾಡಲಾಗಿದೆ.

ಈ ನಡುವೆ, ಜಿಬಿಎ ವ್ಯಾಪ್ತಿಯಲ್ಲಿ ಚುನಾವಣೆ ಹಿನ್ನೆಲೆ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಐದು ನಗರ ಪಾಲಿಕೆಗಳ 369 ವಾರ್ಡುಗಳಲ್ಲಿ ಒಟ್ಟು 88,91,411 ಮತದಾರರು ಇದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗ ತಿಳಿಸಿದೆ.

Continue Reading

ಚುನಾವಣೆ

ವಿಜಯ್ ರಾಜಕೀಯ ಪ್ರವೇಶಕ್ಕೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ

ನವದೆಹಲಿ: ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಹೊಸ ಪಕ್ಷ ಸ್ಥಾಪಿಸಿ ರಾಜಕೀಯಕ್ಕೆ ಕಾಲಿಟ್ಟಿರುವ ಸೂಪರ್ ಸ್ಟಾರ್ ದಳಪತಿ ವಿಜಯ್ (Thalapathy Vijay) ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸಾಮರ್ಥ್ಯ ಹೊಂದಿದ್ದಾರೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಎನ್‌ಡಿಟಿವಿ ಪ್ರಾಫಿಟ್ ಕಾನ್ಕ್ಲೇವ್‌ನಲ್ಲಿ ಮಾತನಾಡಿದ ಅವರು, ವಿಜಯ್ ರಾಜಕೀಯ ಪ್ರವೇಶ ತಮಿಳುನಾಡು ರಾಜಕಾರಣಕ್ಕೆ ಹೊಸ ತಿರುವು ನೀಡಲಿದೆ ಎಂದು ಅಭಿಪ್ರಾಯಪಟ್ಟರು.

“ದಳಪತಿ ವಿಜಯ್ ಖಂಡಿತವಾಗಿಯೂ ಚುನಾವಣೆಯ ಮೇಲೆ ಪ್ರಭಾವ ಬೀರುತ್ತಾರೆ. ಆದರೆ ಅವರು ಯಾವ ಮಟ್ಟಿಗೆ, ಯಾವ ಪಕ್ಷಗಳ ಮತಗಳನ್ನು ಕಸಿದುಕೊಳ್ಳುತ್ತಾರೆ ಎಂಬುದು ಇನ್ನೂ ನೋಡಬೇಕಿದೆ. ವಿಶೇಷವಾಗಿ ಮಹಿಳಾ ಮತಗಳ ಮೇಲೆ ಅವರ ಪ್ರಭಾವ ಎಷ್ಟಿರುತ್ತದೆ ಎಂಬುದೇ ಮುಖ್ಯ ಅಂಶ” ಎಂದು ಸೀತಾರಾಮನ್ ಹೇಳಿದರು. ತಮಿಳುನಾಡು ರಾಜಕೀಯದಲ್ಲಿ ಮಹಿಳೆಯರು ಶಕ್ತಿಶಾಲಿ ಹಾಗೂ ನಿರ್ಧಾರಾತ್ಮಕ ಪಾತ್ರ ವಹಿಸುತ್ತಾರೆ. ಆ ಕಾರಣದಿಂದ ಮುಂದಿನ ಚುನಾವಣೆ ಅತ್ಯಂತ ಆಸಕ್ತಿದಾಯಕವಾಗಲಿದೆ ಎಂದರು.

ಇದೇ ವೇಳೆ, ಆಡಳಿತಾರೂಢ ಡಿಎಂಕೆಗೆ (DMK) ಈ ಬಾರಿ ಎನ್‌ಡಿಎ ಮೈತ್ರಿಕೂಟ (NDA Alliance) ಪ್ರಬಲ ಪೈಪೋಟಿ ನೀಡಲಿದೆ ಎಂದು ಅವರು ಪ್ರತಿಪಾದಿಸಿದರು. “ಬೃಹತ್ ಎನ್‌ಡಿಎ ಒಕ್ಕೂಟವನ್ನು ಎದುರಿಸುತ್ತಿರುವ ಡಿಎಂಕೆ ತನ್ನ ಗೆಲುವಿನ ಬಗ್ಗೆ ಆತ್ಮವಿಶ್ವಾಸದಲ್ಲಿಲ್ಲ. ಕಳೆದ ಒಂದು ವರ್ಷದಲ್ಲಿ ಅವರ ನಡೆ-ನುಡಿಗಳು ಆತಂಕ ಮತ್ತು ಅಸ್ಥಿರತೆಯನ್ನು ತೋರಿಸುತ್ತಿವೆ” ಎಂದು ಟೀಕಿಸಿದರು.

ಡಿಎಂಕೆ ಮಂತ್ರಿಗಳ ವಿವಾದಾತ್ಮಕ ಹೇಳಿಕೆಗಳು, ಉಚಿತ ಕೊಡುಗೆಗಳ ಘೋಷಣೆ, ದೇವಾಲಯ ಬೇಟಿ ಮುಂತಾದ ಕ್ರಮಗಳು ಪಕ್ಷದ ಆತಂಕವನ್ನು ಸ್ಪಷ್ಟಪಡಿಸುತ್ತವೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. “ತಮಿಳುನಾಡಿನ ಅಭಿವೃದ್ಧಿ ಬಗ್ಗೆ ಮಾತನಾಡುವುದರಿಂದ ಮಾತ್ರ ಮತಗಳನ್ನು ಗಳಿಸಲು ಸಾಧ್ಯವಿಲ್ಲ. ಇದು ಡಿಎಂಕೆಯ ಪ್ರಮುಖ ಮಿತಿ. ಈ ಸತ್ಯವನ್ನು ಡಿಎಂಕೆಯೂ ಅರಿತಿದೆ” ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದರು.

ದಳಪತಿ ವಿಜಯ್ ರಾಜಕೀಯ ಪ್ರವೇಶ, ಮಹಿಳಾ ಮತಗಳ ಪಾತ್ರ ಮತ್ತು ಎನ್‌ಡಿಎ–ಡಿಎಂಕೆ ನಡುವಿನ ಪೈಪೋಟಿ ತಮಿಳುನಾಡು ಚುನಾವಣೆಯನ್ನು ಮತ್ತಷ್ಟು ಕುತೂಹಲಕಾರಿಯಾಗಿಸುತ್ತಿದೆ.

Continue Reading

ಚುನಾವಣೆ

BENGALURU ಜಿಬಿಎ ಚುನಾವಣೆ ಮುನ್ನ ಶಿವನಪಾಳ್ಯ ವಾರ್ಡ್‌ನಲ್ಲಿ ಮತಗಟ್ಟೆ ಗೊಂದಲ

ಬೆಂಗಳೂರು, ಫೆಬ್ರವರಿ 7, 2026: ಬೃಹತ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ, ಯಶವಂತಪುರ ವಿಧಾನಸಭಾ ಕ್ಷೇತ್ರದ ಶಿವನಪಾಳ್ಯ ವಾರ್ಡ್ (ಸಂಖ್ಯೆ 19) ವ್ಯಾಪ್ತಿಯಲ್ಲಿ ಮತಗಟ್ಟೆಗಳ ವಿಂಗಡಣೆಯಲ್ಲಿ ಭಾರೀ ಅವ್ಯವಸ್ಥೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಜಿಬಿಎ ಚುನಾವಣೆ ಆಕಾಂಕ್ಷಿ ಅಭ್ಯರ್ಥಿಯಾಗಿರುವ ಸಿ.ಎಂ. ಸತ್ಯನಾರಾಯಣ್ (CMC) ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮತಗಟ್ಟೆಗಳ ಪಟ್ಟಿಯಲ್ಲಿ ಗಂಭೀರ ತಪ್ಪುಗಳಿರುವುದನ್ನು ಉಲ್ಲೇಖಿಸಿ, ಬಿಜೆಪಿಯ ಬಿಎಲ್‍ಎ1 ದೀಪಕ್ ಕುಮಾರ್ ಅವರ ಮೂಲಕ ಕಂದಾಯ ಅಧಿಕಾರಿಗಳಿಗೆ ಅಧಿಕೃತ ದೂರು ಸಲ್ಲಿಸಲಾಗಿದೆ. ದೂರಿನಲ್ಲಿ, ಸ್ಥಳ ಪರಿಶೀಲನೆ ನಡೆಸದೇ ಮತಗಟ್ಟೆಗಳ ಮಾಹಿತಿಯನ್ನು ಅಪ್‌ಲೋಡ್ ಮಾಡಿರುವುದೇ ಗೊಂದಲಕ್ಕೆ ಕಾರಣವಾಗಿದೆ ಎಂದು ತಿಳಿಸಲಾಗಿದೆ.

ದೂರು ಪ್ರಕಾರ, ಲಿಂಗಾಯತರ ಬೀದಿ, ಅಂಗಡಿ ಬೀದಿ, ಹಸಿ ಕರಗ ಮಂಟಪ ಹಾಗೂ ಹರ್ಷ ಲೇಔಟ್ ವ್ಯಾಪ್ತಿಯ ಮತಗಟ್ಟೆ ಸಂಖ್ಯೆ 21 ರಿಂದ 31 ರವರೆಗಿನ ಪ್ರದೇಶಗಳು ವಾಸ್ತವವಾಗಿ ಕೆಂಗೇರಿ ವಾರ್ಡ್‌ಗೆ ಸೇರಬೇಕಿದ್ದರೂ, ತಪ್ಪಾಗಿ ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ. ಇದೇ ರೀತಿ, ಬಾಬಾ ಸಾಬ್ ಪಾಳ್ಯ ಗ್ರಾಮಕ್ಕೆ ಸೇರಿದ ಮತಗಟ್ಟೆ ಸಂಖ್ಯೆ 32 ಮತ್ತು 33 ಕೂಡ ಶಿವನಪಾಳ್ಯ ಪಟ್ಟಿಯಲ್ಲಿ ಕಾಣಿಸಿಕೊಂಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ.

ಇದಲ್ಲದೆ, ಬಂಡೆ ಮಠ ರಸ್ತೆಯ ಮತಗಟ್ಟೆ ಸಂಖ್ಯೆ 34 ಮತ್ತು 35 ಕೆಂಗಲ್ ಹನುಮಂತಯ್ಯ ವಾರ್ಡ್‌ಗೆ (ವಾರ್ಡ್ 18) ಸೇರಬೇಕಿದ್ದರೂ, ಶಿವನಪಾಳ್ಯ ವಾರ್ಡ್‌ಗೆ ಸೇರಿಸಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಜಿಬಿಎ ಅಧಿಕೃತ ವೆಬ್‌ಸೈಟ್‌ನಲ್ಲಿ ಮತಗಟ್ಟೆ ಸಂಖ್ಯೆ 19ರ ಮಾಹಿತಿ ಲಭ್ಯವಿಲ್ಲದಿರುವುದು ಮತದಾರರಲ್ಲಿ ಗೊಂದಲ ಮತ್ತು ಆತಂಕವನ್ನು ಹೆಚ್ಚಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಿ.ಎಂ. ಸತ್ಯನಾರಾಯಣ್, “ಕ್ಷೇತ್ರ ಸಮೀಕ್ಷೆ ಇಲ್ಲದೆ ಮತದಾರರ ಪಟ್ಟಿ ಸಿದ್ಧಪಡಿಸಿರುವುದು ಪ್ರಜಾಪ್ರಭುತ್ವದ ಪ್ರಕ್ರಿಯೆಗೆ ಧಕ್ಕೆ ತರುತ್ತದೆ. ಕೂಡಲೇ ತಪ್ಪುಗಳನ್ನು ಸರಿಪಡಿಸಿ, ಭೌಗೋಳಿಕ ವ್ಯಾಪ್ತಿಗೆ ಅನುಗುಣವಾಗಿ ಮತಗಟ್ಟೆ ಮರುಹಂಚಿಕೆ ಮಾಡಬೇಕು,” ಎಂದು ಆಗ್ರಹಿಸಿದರು. ಅಧಿಕಾರಿಗಳು ಸ್ಪಂದಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

Continue Reading

Trending