ಬೆಂಗಳೂರು
ಟಿ20 ವಿಶ್ವಕಪ್ ಗೆಲುವು; ಕನ್ನಡಿಗ ದ್ರಾವಿಡ್ಗೆ ಸದನದಲ್ಲಿ ಗೌರವ ಸಲ್ಲಿಸಲು ನಿರ್ಣಯ!
ಬೆಂಗಳೂರು: 2024ರ ಟಿ20 ವಿಶ್ವಕಪ್ (T20 World Cup) ಗೆಲುವಿಗೆ ಕಾರಣರಾದ ಟೀಂ ಇಂಡಿಯಾದ ನಿರ್ಗಮಿತ ಕೋಚ್ ರಾಹುಲ್ ದ್ರಾವಿಡ್ (Rahul Dravid) ಅವರಿಗೆ ಸದನದಲ್ಲಿ ಅಭಿನಂದನಾ ಗೌರವ ಸಲ್ಲಿಸಲು ಅಧಿವೇಶನದಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಬಿಜೆಪಿ (BJP) ಶಾಸಕ ಸುರೇಶ್ ಕುಮಾರ್, ಭಾರತ ಟಿ20 ವಿಶ್ವಕಪ್ ಗೆಲುವಿನ ವೇಳೆ ಟೀಂ ಇಂಡಿಯಾದ (Team India) ಮುಖ್ಯಕೋಚ್ ಆಗಿದ್ದ ಕನ್ನಡಿಗ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸುವಂತೆ ಮನವಿ ಮಾಡಿದರು. ಈ ಮನವಿಯನ್ನು ಸದನದ ಎಲ್ಲಾ ಸದಸ್ಯರು ಸ್ವಾಗತಿಸಿದರು. ಬಳಿಕ ಈ ವಿಚಾರವಾಗಿ ಪ್ರತಿಕ್ರಿಯಿಸಿದ ಸ್ಪೀಕರ್ ಖಾದರ್ ಕರ್ನಾಟಕದ ಜನತೆ ಪರವಾಗಿ ದ್ರಾವಿಡ್ ಅವರಿಗೆ ಅಭಿನಂದನೆ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
ಕಳೆದ ಜೂ.29 ರಂದು ನಡೆದಿದ್ದ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ಗಳ ರೋಚಕ ಗೆಲುವು ಸಾಧಿಸಿ ಭಾರತ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಈ ಮೂಲಕ ಭಾರತ 17 ವರ್ಷಗಳ ನಂತರ ಟಿ 20 ವಿಶ್ವಕಪ್ ಹಾಗೂ 13 ವರ್ಷಗಳ ನಂತರ ಐಸಿಸಿ ಟ್ರೋಫಿ ಬರವನ್ನು ಭಾರತ ನೀಗಿಸಿಕೊಂಡಿತು.
ಫೈನಲ್ ಪಂದ್ಯದಲ್ಲಿ ಗೆಲುವಿಗೆ 177 ರನ್ ಗುರಿ ಪಡೆದ ದಕ್ಷಿಣ ಆಫ್ರಿಕಾ ತಂಡ 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಿ ಸೋಲೊಪ್ಪಿಕೊಂಡಿತ್ತು. ಅಲ್ಲದೇ `ಚೋಕರ್ಸ್’ ಹಣೆಪಟ್ಟಿಯೊಂದಿಗೆ ತವರಿಗೆ ಮರಳಿತು
ದೇಶ
ಮಹಿಳೆಯರಿಗೆ ಫ್ರೀ ಸ್ಮಾರ್ಟ್ ಕಾರ್ಡ್, ಪುರುಷರಿಗೆ ಪೇಯ್ಡ್ ಕಾರ್ಡ್: ಸಾರಿಗೆ ಇಲಾಖೆಯ ಹೊಸ ಪ್ಲ್ಯಾನ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಇನ್ನಷ್ಟು ತಂತ್ರಜ್ಞಾನ ಸ್ನೇಹಿಯಾಗಲು ಸಜ್ಜಾಗಿದೆ. ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.
ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರ ವಿಶೇಷ ಉದ್ದೇಶಿತ ವಾಹಕ (SPV) ರಚಿಸಲು ಮುಂದಾಗಿದ್ದು, ಇಡೀ ಪ್ರಕ್ರಿಯೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಜಾರಿಗೆ ತರಲು ತೀರ್ಮಾನಿಸಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಆಹ್ವಾನಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ವಹಿವಾಟು ಸಲಹೆಗಾರರ ಸಮಿತಿಯ ವರದಿ ಜೂನ್ ಅಂತ್ಯದೊಳಗೆ ಸಲ್ಲಿಕೆಯಾಗುವ ನಿರೀಕ್ಷೆಯಿದೆ.
ರಾಜ್ಯದಲ್ಲಿ ಸುಮಾರು 2.5 ರಿಂದ 3 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ. ಪ್ರಸ್ತುತ ಮಹಿಳೆಯರು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ತೋರಿಸಿ ಉಚಿತ ಪ್ರಯಾಣ ಪಡೆಯುತ್ತಿದ್ದಾರೆ. ಆದರೆ, ಪ್ರಯಾಣಿಕರ ಗುರುತಿನ ಪರಿಶೀಲನೆ ಸುಲಭಗೊಳಿಸಲು, ನಿಖರ ದತ್ತಾಂಶ ಸಂಗ್ರಹಿಸಲು ಹಾಗೂ ದುರುಪಯೋಗ ತಡೆಯಲು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.
ಇನ್ನು ಪುರುಷ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಕಾರ್ಡ್ ಮಾದರಿಯ ಪಾವತಿ ಆಧಾರಿತ ಸ್ಮಾರ್ಟ್ ಕಾರ್ಡ್ ನೀಡುವ ಯೋಜನೆಯೂ ಸರ್ಕಾರದ ಮುಂದಿದೆ.
ಇದರ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಂತಹಂತವಾಗಿ 4,000ಕ್ಕೂ ಹೆಚ್ಚು ಹೊಸ ಎಲೆಕ್ಟ್ರಿಕ್ ಬಸ್ಗಳನ್ನು ಖರೀದಿಸಲು ನಿರ್ಧರಿಸಿದೆ. ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ನಿರ್ಮಾಣದತ್ತ ಇದು ಮಹತ್ವದ ಹೆಜ್ಜೆಯಾಗಿದೆ.
ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಈ ಹೊಸ ವ್ಯವಸ್ಥೆ ಮತ್ತಷ್ಟು ಅನುಕೂಲವಾಗಲಿದ್ದು, ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ಡಿಜಿಟಲ್ ಕ್ರಾಂತಿಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ.
ದೇಶ
ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಸಭೆ ಇಂದು: ಬಿಡದಿಯಲ್ಲಿ ಮಹತ್ವದ ಚರ್ಚೆ
ರಾಮನಗರ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ಇಂದು ಸಂಜೆ 6.30ಕ್ಕೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್ನಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ಈ ಶಾಸಕಾಂಗ ಸಭೆ ನಡೆಯುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಶಾಸಕರೊಂದಿಗೆ ಸಮಾಲೋಚನೆ ನಡೆಸಲು ಈ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಭಾಗವಹಿಸಲಿದ್ದು, ಚುನಾವಣಾ ತಂತ್ರಗಾರಿಕೆ ಮತ್ತು ಮತಗಳ ಸಮನ್ವಯ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತೂ ಸಭೆಯಲ್ಲಿ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಶಾಸಕಾಂಗ ಸಭೆಯಾಗಿರುವುದರಿಂದ ಪಕ್ಷದ ಒಳರಾಜಕೀಯ ಮತ್ತು ಭವಿಷ್ಯದ ಕಾರ್ಯತಂತ್ರದ ದೃಷ್ಟಿಯಿಂದ ಇದು ಮಹತ್ವ ಪಡೆದಿದೆ.
ಸಭೆ ಹಿನ್ನೆಲೆಯಲ್ಲಿ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶವನ್ನು ಸಂಜೆ ಬಳಿಕ ನಿರ್ಬಂಧಿಸಲಾಗಿದ್ದು, ಕಾಂಗ್ರೆಸ್ ಶಾಸಕರು ಮತ್ತು ಆಹ್ವಾನಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.
ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವ ಬೆಂಬಲವನ್ನು ಕ್ರೋಢೀಕರಿಸುವ ಉದ್ದೇಶದಿಂದ ಈ ಸಭೆ ನಡೆಸುತ್ತಿದ್ದು, ಸಭೆಯ ಬಳಿಕ ಮಹತ್ವದ ರಾಜಕೀಯ ಸಂದೇಶ ಹೊರಬೀಳುವ ನಿರೀಕ್ಷೆಯಿದೆ.
ದೇಶ
ಗ್ಯಾರಂಟಿ ಯೋಜನೆಗಳಿಗೆ ಸರ್ಜರಿ? ಮರು ಅರ್ಜಿ ಕಡ್ಡಾಯ ಸಾಧ್ಯತೆ; ಸರ್ಕಾರದ 100 ಕೋಟಿ ರೂ. ಉಳಿತಾಯ ಪ್ಲ್ಯಾನ್
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸಿದ್ಧತೆಗಳು ಜೋರಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾಗುವ ಸಾಧ್ಯತೆ ಇದೆ. ಯೋಜನೆಗಳ ದುರುಪಯೋಗ ತಡೆಯುವ ಜೊತೆಗೆ ಅನರ್ಹರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಸರ್ಕಾರ ವರ್ಷಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯ ಮಾಡುವ ಗುರಿ ಹೊಂದಿದೆ.
ಸರ್ಕಾರವು ವಿಶೇಷವಾಗಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಮುಂದಾಗಿದೆ. ಮೃತರ ಹೆಸರಿನಲ್ಲಿ ಹಣ ವರ್ಗಾವಣೆ ಆಗುತ್ತಿರುವ ಪ್ರಕರಣಗಳು, ಆದಾಯ ತೆರಿಗೆ (ಐಟಿ) ಹಾಗೂ ಜಿಎಸ್ಟಿ ಪಾವತಿದಾರರು ಯೋಜನೆಗಳ ಲಾಭ ಪಡೆಯುತ್ತಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪರಿಷ್ಕರಣೆಯ ಬಳಿಕ ಸುಮಾರು 3 ರಿಂದ 4 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡುವ ಸಾಧ್ಯತೆ ಇದೆ.
ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ನೆರವು ಪಡೆಯುತ್ತಿದ್ದು, ಸರ್ಕಾರ ತಿಂಗಳಿಗೆ ₹2,480 ಕೋಟಿ ಹಾಗೂ ವರ್ಷಕ್ಕೆ ₹29,760 ಕೋಟಿ ವೆಚ್ಚ ಮಾಡುತ್ತಿದೆ. ಈ ಯೋಜನೆಗೆ ಏಪ್ರಿಲ್ ಅಂತ್ಯದವರೆಗೆ ಒಟ್ಟು ₹72,253 ಕೋಟಿ ಪಾವತಿಸಲಾಗಿದೆ.
ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಗ್ರಾಹಕರು 200 ಯೂನಿಟ್ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದು, ಇದರ ವೆಚ್ಚ ₹26,115 ಕೋಟಿಗೆ ತಲುಪಿದೆ. ಅನ್ನಭಾಗ್ಯ ಯೋಜನೆಗೆ ಇದುವರೆಗೆ ₹18,897 ಕೋಟಿ ವೆಚ್ಚವಾಗಿದ್ದರೆ, ಶಕ್ತಿ ಯೋಜನೆಯಡಿ ಮಹಿಳೆಯರು 757.62 ಕೋಟಿ ಉಚಿತ ಪ್ರಯಾಣ ಟಿಕೆಟ್ಗಳ ಪ್ರಯೋಜನ ಪಡೆದಿದ್ದು, ಇದರ ಮೌಲ್ಯ ₹19,890 ಕೋಟಿ ಎಂದು ಅಂದಾಜಿಸಲಾಗಿದೆ.
ಇನ್ನು ಯುವನಿಧಿ ಯೋಜನೆಯಡಿ 3.59 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪದವೀಧರರಿಗೆ ನೆರವು ನೀಡಲಾಗಿದ್ದು, ಈವರೆಗೆ ₹1,115 ಕೋಟಿ ಪಾವತಿಸಲಾಗಿದೆ.
ಒಟ್ಟಾರೆ, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ₹1,38,270.21 ಕೋಟಿ ವೆಚ್ಚ ಮಾಡಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಪರಿಷ್ಕರಣೆ ನಡೆಸಲು ಮುಂದಾಗಿದೆ.
