Connect with us

ಬೆಂಗಳೂರು

ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧ, ಬಿಜೆಪಿ-ಜೆಡಿಎಸ್‌ನಿಂದ ನನ್ನ ತೇಜೋವಧೆ ಯತ್ನ: ಸಿದ್ದರಾಮಯ್ಯ – CM Siddaramaiah

Published

on

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಕಾನೂನುಬದ್ಧವಾಗಿದ್ದು, ಇದರಲ್ಲಿ ನನ್ನ ಹಾಗೂ ನನ್ನ ಪತ್ನಿ ಪಾತ್ರ ಇಲ್ಲ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದರು.

ಇಂದು ವಿಧಾನಸೌಧದಲ್ಲಿ ದಾಖಲೆ ಸಮೇತವಾಗಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿದ ಸಿಎಂ, ಬಿಜೆಪಿ-ಜೆಡಿಎಸ್ ರಾಜಕೀಯವಾಗಿ ಹತಾಶರಾಗಿದ್ದಾರೆ. ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಾರೆ. ಸಿಎಂ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವುದನ್ನು ಸಹಿಸಲು ಆಗುತ್ತಿಲ್ಲ.‌ ಕಲಾಪದ ಎರಡು ವಾರಗಳು ಒಂದೇ ವಿಚಾರ ಪ್ರಸ್ತಾಪವಾಗಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರ ಬಿಟ್ಟರೆ ರಾಜ್ಯದ ಸಮಸ್ಯೆ ಬಗ್ಗೆ ಚಕಾರ ಎತ್ತಿಲ್ಲ. ಪ್ರವಾಹದ ಬಗ್ಗೆ ವಿಪಕ್ಷಗಳು ಯಾರೂ ಮಾತನಾಡಿಲ್ಲ. ಇದನ್ನೆಲ್ಲಾ ನೋಡಿದರೆ ಸಿಎಂ, ರಾಜ್ಯ ಸರ್ಕಾರಕ್ಕೆ ಮಸಿ ಬಳಿಯಬೇಕು ಎಂಬ ಉದ್ದೇಶ ಇದೆ ಅನ್ನಿಸುತ್ತೆ. ಇದು ಕಾನೂನುಬದ್ಧವಾಗಿದೆ. ಬಿಜೆಪಿ-ಜೆಡಿಎಸ್ ರಾಜಕಾರಣಕ್ಕೆ ಅಪಪ್ರಚಾರ ಮಾಡಿ ತೇಜೋವಧೆ ಮಾಡಲು ಯತ್ನ. ಬಿಜೆಪಿ-ಜೆಡಿಎಸ್ ಗೆ ಎರಡನೇ ಸರಿ ಸಿಎಂ ಆಗುವುದನ್ನು ಸಹಿಸಲು ಆಗುತ್ತಿಲ್ಲ ಎಂದರು.

ಶಾಸಕನಾಗಿ, ಮಂತ್ರಿಯಾಗಿ, ಸಿಎಂ ಆಗಿ ಸುಮಾರು 40 ವರ್ಷಗಳ ಕಾಲ ರಾಜಕೀಯದಲ್ಲಿದ್ದೇನೆ. ಇಂದಿನವರೆಗೆ ನನ್ನ ಮೇಲೆ ಕಪ್ಪು ಚುಕ್ಕೆ ಇಲ್ಲ. ನನ್ನ ರಾಜಕೀಯ ಜೀವನ ತೆರೆದ ಪುಸ್ತಕ. ಬಿಜೆಪಿ-ಜೆಡಿಎಸ್ ದ್ವೇಷದಿಂದ, ಸೇಡಿನ ರಾಜಕಾರಣ ಮಾಡುತ್ತಿದ್ದಾರೆ. ಅವರು ಜನರ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿದರೂ ಹೆಚ್ಚು ಸ್ಥಾನ ಗೆಲ್ಲಲು ಆಗಿಲ್ಲ. ಜನರ ವಿಶ್ವಾಸ ಗಳಿಸಲು ಅವರು ವಾಮಮಾರ್ಗ ಬಳಸುತ್ತಿದ್ದಾರೆ ಎಂದು ಟೀಕಿಸಿದರು.

2-8-1935ರಲ್ಲಿ ಜವರನ ಮಗ ನಿಂಗ ಎನ್ನುವವರು ಮೈಸೂರು ತಾಲೂಕು ಕಚೇರಿಗೆ ಜಮೀನು ನೀಡುವಂತೆ ಅರ್ಜಿ ಸಲ್ಲಿಸಿದ್ದಾರೆ. ಆಗಿನ ಕೆಳ ಹಂತದ ಅಧಿಕಾರಿಗಳು 15-8-1935 ರಂದು ನಿಂಗ ಅವರು ಕೇಳಿರುವ ಜಮೀನುಗಳನ್ನು ಹರಾಜಿನ ಮೂಲಕ ವಿಲೇಪಡಿಸಬೇಕೆಂದು ವರದಿ ಸಲ್ಲಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲು ಕ್ರಮವಹಿಸಿದ್ದಾರೆ. 26-9-1935 ರಂದು ಹರಾಜು ನೋಟೀಸು ಹೊರಡಿಸಿದ್ದಾರೆ. 3-10-1935 ರಂದು ಹರಾಜು ನಡೆಸಲಾಗುವುದೆಂದು ನೋಟೀಸಿನಲ್ಲಿ ತಿಳಿಸಿದ್ದಾರೆ. ಅದರ ಪ್ರಕಾರ ಹರಾಜು ನಡೆಸಲಾಗಿದೆ. ಹರಾಜು ನಡೆಸಿದ ಮೇಲೆ ಈ ರೀತಿ ದಾಖಲು ಮಾಡಿದ್ದಾರೆ. ಕೆಸರೆ ಗ್ರಾಮದ ಸರ್ವೆ ನಂ. 464ರ 3.16 ಜಮೀನನ್ನು ಹರಾಜು ಮಾಡಿಸಲಾಯ್ತು. 1 ರೂಪಾಯಿಗೆ ನಿಂಗ ಬಿನ್ ಜವರಗೆ ಹರಾಜು ಮಾಡಲಾಯ್ತು ಎಂದು ತಿಳಿಸಿದರು.

ಜಮೀನುಗಳನ್ನು ಹರಾಜಿನ ಮೂಲಕ ಪಡೆದಿರುವುದರಿಂದ ಸ್ವಯಾರ್ಜಿತ ಜಮೀನಾಗುತ್ತದೆಯೆ ಹೊರತು ಈ ಜಮೀನುಗಳ ಮೇಲೆ ಸರ್ಕಾರದ ಯಾವುದೇ ಹಿತಾಸಕ್ತಿ ಇರುವುದಿಲ್ಲ. ಸ್ವಯಾರ್ಜಿತ ಜಮೀನಾಗಿರುವುದರಿಂದ ಈ ಜಮೀನುಗಳು ಪಿಟಿಸಿಎಲ್ ಕಾಯ್ದೆ ವ್ಯಾಪ್ತಿಗೆ ಬರುವುದಿಲ್ಲ ಎಂದರು.

10-4-1993 ರಲ್ಲಿ ಒಂದು ವಂಶವೃಕ್ಷ ಮಾಡಿಸಿದ್ದಾರೆ. ಅದರ ಪ್ರಕಾರ ನಿಂಗ ಬಿನ್ ಜವರ ಇವರಿಗೆ ಮೂರು ಜನ ಮಕ್ಕಳು. ಮೊದಲನೆ ಮಲ್ಲಯ್ಯ, ಎರಡನೆ ಮೈಲಾರಯ್ಯ ಮತ್ತು ಮೂರನೆ ಜೆ. ದೇವರಾಜು. ವಂಶವೃಕ್ಷದ ಪ್ರಕಾರ ಮಲ್ಲಯ್ಯ ಎನ್ನುವವರಿಗೆ ವಾರಸುದಾರರನ್ನು ತೋರಿಸಿಲ್ಲ. ಎರಡನೆ ಮೈಲಾರಯ್ಯ ಇವರಿಗೆ ಮಂಜುನಾಥಸ್ವಾಮಿ ಎಂ ಎನ್ನುವವರಿದ್ದಾರೆ. ಆಗ ಅವರಿಗೆ 29 ವರ್ಷ ಎಂದು ನಮೂದಿಸಲಾಗಿದೆ. 3ನೆಯವರು ದೇವರಾಜು ಎನ್ನುವವರು ಎಂದು ವಿವರಿಸಿದರು.

ಈ ವಂಶವೃಕ್ಷದಲ್ಲಿ ಮಲ್ಲಯ್ಯ, ದೇವರಾಜು, ಮೈಲಾರಯ್ಯನವರ ಪತ್ನಿ ಪುಟ್ಟಗೌರಮ್ಮ, ಎಂ ಮಂಜುನಾಥಸ್ವಾಮಿ ಇವರುಗಳು ಸಹಿ ಮಾಡಿದ್ದಾರೆ. ಮೈಸೂರು ತಾಲೂಕು ಕಸಬಾ ಹೋಬಳಿ ಕೆಸರೆ ಗ್ರಾಮದ ಸರ್ವೆ ನಂ. 464ರ 3-16 ಈ ಜಮೀನುಗಳಿಗೆ ಖಾತೆ ಮಾಡಿಕೊಡಲು ಲೇಟ್ ನಿಂಗ ಬಿನ್ ಜವರ ಅವರ ಮೂರನೆ ಮಗ ಜೆ.ದೇವರಾಜು ನಮೂನೆ 19ರ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಈ ಜಮೀನು ನಿಂಗ ಬಿನ್ ಜವರ ಅವರಿಗೆ ಸೇರಿದ್ದು, ಅವರು ಫೌತಿಯಾಗಿ ನಮಗೆ ಸದರಿ ಜಮೀನಿನಲ್ಲಿ ಭಾಗ ಬರಬೇಕಾಗಿರುವುದಿಲ್ಲ. ಈಗಾಗಲೆ ನಾವು ಸರ್ವೆ ನಂ. 462 ರಲ್ಲಿ 4 ಎಕರೆ ಜಮೀನನ್ನು ಪುಟ್ಟಮ್ಮ ಎನ್ನುವವರಿಗೆ ಮಾರಿರುತ್ತೇವೆ. ಆದ್ದರಿಂದ ಅರ್ಜಿದಾರರಾದ ಜೆ. ದೇವರಾಜುರವರಿಗೆ ಸದರಿ ಜಮೀನುಗಳನ್ನು ಖಾತೆ ಮಾಡುವುದರಲ್ಲಿ ನಮ್ಮ ತಕರಾರು ಏನೂ ಇರುವುದಿಲ್ಲವೆಂದು ಸಹಿ ಹಾಕಿದ್ದರು ಎಂದು ತಿಳಿಸಿದರು.

ಇದರ ಆಧಾರದ ಮೇಲೆ ಜೆ.ದೇವರಾಜು ಅವರ ಹೆಸರಿಗೆ ಈ ಜಮೀನುಗಳು ವರ್ಗಾವಣೆಯಾಗಿವೆ. ಹಾಗಾಗಿ ಕ್ರಯದಾರರ ವಾಸರಸುದಾರರ ಒಪ್ಪಿಗೆ ಇಲ್ಲದೆ ಖರೀದಿ ನಡೆದಿದೆ ಎಂಬ ಬಿಜೆಪಿಯವರ ಆರೋಪವು ಸುಳ್ಳು. ಈ ಎಲ್ಲ ವ್ಯವಹಾರಗಳು 2010ಕ್ಕಿಂತ ಮುಂಚೆ ನಡೆದಿವೆ. ಇವು ನನಗೆ ಸಂಬಂಧಪಟ್ಟಿದ್ದಲ್ಲ. ಸದರಿ ಜಮೀನುಗಳನ್ನು ಭೂಸ್ವಾಧೀನ ಮಾಡಲು 18-09-1992ರಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಿದ್ದಾರೆ. ಆದರೆ, ಅದು ಬಹಳ ವರ್ಷಗಳಾದರೂ ಇತ್ಯರ್ಥವಾಗಿಲ್ಲ. ಆಗ, ಜಿ.ದೇವರಾಜು 13-08-1996 ರಂದು ತಮ್ಮ ಜಮೀನುಗಳನ್ನು ಭೂಸ್ವಾಧೀನದಿಂದ ಕೈಬಿಡುವಂತೆ ಅರ್ಜಿ ಬರೆದಿದ್ದಾರೆ. ಈ ಜಮೀನುಗಳ ಅಂತಿಮ ಅಧಿಸೂಚನೆಯಾಗಿದ್ದು 20-08-1997 ರಂದು. ಅದಕ್ಕೂ ಮೊದಲೇ ಈ ಅರ್ಜಿ ಬರೆದಿದ್ದಾರೆ. ಅರ್ಜಿಯ ಮೇಲೆ ಅಂದಿನ ನಗರಾಭಿವೃದ್ಧಿ ಸಚಿವರಾಗಿದ್ದ ಬಿ.ಎನ್.ಬಚ್ಚೇಗೌಡ ಇವರು ಮನವಿ ಪರಿಶೀಲಿಸಿ ಸ್ಥಳೀಯ ಅಧಿಕಾರಿಗಳಿಂದ ವರದಿ ತರಿಸಿಕೊಂಡು ಅಭಿಪ್ರಾಯದೊಂದಿಗೆ ಮಂಡಿಸಿ ಎಂದು ಕಾರ್ಯದರ್ಶಿಯವರಿಗೆ ಟಿಪ್ಪಣಿ ಬರೆದಿದ್ದಾರೆ. ಅದನ್ನು ಆಧರಿಸಿ, ಒಂದು ತಿಂಗಳಾದ ಮೇಲೆ ಪತ್ರ ಮುಡಾ ಆಯುಕ್ತರಿಗೆ ಹೋಗಿದೆ ಎಂದು ವಿವರಿಸಿದರು.

ಮುಡಾದಲ್ಲಿ 24-07-1997 ರಂದು ಈ ಜಾಗ ಭೂಸ್ವಾಧೀನದಿಂದ ಕೈಬಿಡಲು ನಿರ್ಣಯ ಪಾಸ್ ಮಾಡಿದ್ದಾರೆ. 30-08-1997ರಂದು ಸದರಿ ಜಾಗಗಳನ್ನು ಭೂಸ್ವಾಧೀನದಿಂದ ಕೈಬಿಡಲು ಮುಡಾ ಆಯುಕ್ತರು ಸರ್ಕಾರದ ಕಾರ್ಯದರ್ಶಿಗಳಿಗೆ ಶಿಫಾರಸ್ಸು ಮಾಡಿದ್ದಾರೆ. ಸದರಿ ಶಿಫಾರಸ್ಸನ್ನು ಆಧರಿಸಿ, ಭೂಸ್ವಾಧೀನ ಮಾಡಿದ ಜಮೀನುಗಳನ್ನು ಡಿ-ನೋಟಿಫೈ ಮಾಡಲು ಆಗ ರೆವಿನ್ಯೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ. ಬಾಲಸುಬ್ರಮಣ್ಯನ್ ಅಧ್ಯಕ್ಷತೆಯ ಸಮಿತಿ ಪರಿಶೀಲಿಸಿ ಡಿನೋಟಿಫೈ ಮಾಡಿದೆ.

ಈ 3 ಜನರ ಸಮಿತಿಯು ಬೆಂಗಳೂರಿನಲ್ಲಿ ಬಿಡಿಎಯ ಯಡಿಯೂರು-ನಾಗಸಂದ್ರ, ಮೈಸೂರಿನ ಮುಡಾದ ಕೆಸರೆ ಸೇರಿದಂತೆ ಸುಮಾರು 19 ಕಡೆ ಡಿನೋಟಿಫೈ ಮಾಡಲು ಅನುಮೋದನೆ ಮಾಡಿರುತ್ತದೆ ಎಂದು ತಿಳಿಸಿದರು.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ 1984ರಿಂದ ಒಟ್ಟು 13 ಬಡಾವಣೆಗಳಲ್ಲಿ 235-30 ಎಕರೆ ಭೂಮಿಯನ್ನು ಭೂ ಸ್ವಾಧೀನದಿಂದ ಕೈಬಿಡಲಾಗಿದೆ. ನಮ್ಮ ಕುಟುಂಬಕ್ಕೆ ಈ ಜಮೀನುಗಳು ಬರುವ ವೇಳೆಗಾಗಲೆ 15-7-2005ರಲ್ಲಿ ಭೂಪರಿವರ್ತನೆಯಾಗಿವೆ. ಕೃಷಿ ಉದ್ದೇಶದಿಂದ ವಸತಿ ಉದ್ದೇಶಕ್ಕೆ ಭೂ ಪರಿವರ್ತನೆಯಾಗಿವೆ.

ಇದಾದ ಮೇಲೆ 23-6-2014ರಲ್ಲಿ ಮತ್ತು 25-10-2021ರಲ್ಲಿ ಭೂಪರಿಹಾರಕ್ಕೆ ಬದಲಾಗಿ ಪರ್ಯಾಯ ಜಾಗವನ್ನು ಕೊಡಬೇಕೆಂದು ಅರ್ಜಿ ಹಾಕಲಾಗಿದೆ. ನನ್ನ ಪತ್ನಿ ತನ್ನ ನಿವೇಶನ/ಜಾಗ ಕೊಡಿ ಎಂದು ನನ್ನ ಜಾಗವನ್ನು ಮುಡಾ ಬಳಸಿಕೊಂಡಿದೆ. ಅದಕ್ಕೆ ಪರ್ಯಾಯ ಜಾಗ ಕೊಡಿ ಎಂದು ಕೇಳಿದ್ದಾರೆ. ಮುಡಾದವರು ಕೊಟ್ಟಿದ್ದಾರೆ. ಭೂಸ್ವಾಧೀನ ಪಡಿಸದೆ ಭೂಮಿಯನ್ನು ಉಪಯೋಗಿಸಿಕೊಂಡ ಪ್ರಕರಣಗಳಲ್ಲಿ ಹಾಗೆ ಉಪಯೋಗಿಸಲಾದ ಭೂಮಿಗೆ ಪರ್ಯಾಯವಾಗಿ ಶೇ.50:50ರ ಅನುಪಾತದಲ್ಲಿ ಜಾಗವನ್ನು ಕೊಡಬೇಕೆಂದು 14-9-2020ರಲ್ಲಿ ನಿರ್ಣಯ ಮಾಡಿದ್ದಾರೆ. ಈ ನಿರ್ಣಯವನ್ನು ಸರ್ಕಾರ ರದ್ದು ಮಾಡಿದೆ ಎಂದು ತಿಳಿಸಿದರು.

ಇದೆಲ್ಲ ಆದ ಮೇಲೆ ನನ್ನ ಪತ್ನಿ 23-10-2021 ರಲ್ಲಿ ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ, “ನನ್ನ ಜಮೀನನ್ನು ಪ್ರಾಧಿಕಾರವು ಉಪಯೋಗಿಸಿಕೊಂಡಿರುವ ಬಾಬ್ತು ಇದುವರೆವಿಗೂ ಯಾವುದೇ ಪರಿಹಾರವನ್ನು ನೀಡಿರುವುದಿಲ್ಲ. ಆದ್ದರಿಂದ ನನಗೆ ಮೇಲಿನ ಜಮೀನಿಗೆ ಪರಿಹಾರವಾಗಿ ಪ್ರಸ್ತುತ ಶೇ. 50:50ರ ಅನುಪಾತದಲ್ಲಿ ಕೊಡಿ ಎಂದು ಕೇಳಿದ್ದಾರೆ. ಪ್ರಾಧಿಕಾರದವರು ಇದನ್ನೆಲ್ಲ ಪರಿಶೀಲಿಸಿ ನನ್ನ ಪತ್ನಿಯಿಂದ ಪರಿತ್ಯಾಜನ ಪತ್ರ ಬರೆಸಿಕೊಂಡು 3-16 ಗುಂಟೆ ಜಮೀನುಗಳ ಹಕ್ಕುಗಳನ್ನು ಪ್ರಾಧಿಕಾರದ ಹೆಸರಿಗೆ ವರ್ಗಾಯಿಸಿಕೊಂಡು 30-12-2021 ರಂದು ಕೆಸರೆ ಗ್ರಾಮದ ಸ.ನಂ. 464ರ 3-16 ಎಕರೆ ಜಮೀನಿಗೆ ಬದಲಿ ಜಾಗ ನೀಡುವ ಬಗ್ಗೆ ಪ್ರಾಧಿಕಾರದಿಂದ ಆಯುಕ್ತರು ಅಧಿಕೃತ ಜ್ಞಾಪನ ಆದೇಶ ಹೊರಡಿಸಿ 38,284 ಚದರ ಅಡಿ ಅಳತೆಗೆ ನಿವೇಶನಗಳನ್ನು ಪರಿಹಾರ ರೂಪದಲ್ಲಿ ಮಂಜೂರು ಮಾಡಿರುತ್ತಾರೆ ಎಂದು ತಿಳಿಸಿದರು.

ಈ ವಿಚಾರಗಳನ್ನೆಲ್ಲಾ ಪರಿಶೀಲಿಸಲು ಜಸ್ಟೀಸ್ ಪಿ.ಎನ್. ದೇಸಾಯಿಯವರ ಅಧ್ಯಕ್ಷತೆಯಲ್ಲಿ ವಿಚಾರಣಾ ಆಯೋಗವನ್ನು ರಚಿಸಲಾಗಿದೆ. ವಿಚಾರಣಾ ಆಯೋಗವು ಈ ಕುರಿತು ತನಿಖೆ ಪ್ರಾರಂಭಿಸಿದೆ. ಬಿಜೆಪಿ, ಜೆಡಿಎಸ್ ನವರು ಮುಡಾದ ವಿಚಾರದಲ್ಲೂ, ವಾಲ್ಮೀಕಿ ಹಗರಣದಲ್ಲೂ ನನ್ನ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ಪ್ರಯತ್ನಿಸುತ್ತಿದ್ದಾರೆ.

ಬಿಜೆಪಿ ಮನೆ ಮುರುಕರು: ಬಿಜೆಪಿಯವರಿಗೆ ಮಾನ ಮರ್ಯಾದೆ ಇದೆಯಾ?. ಮಂಜುನಾಥರನ್ನು ಸುಳ್ಳು ಹೇಳಿ, ಎತ್ತಿ ಕಟ್ಟಿ ಕೈಯಿಂದ ಹೇಳಿಕೆ ಕೊಡಿಸುತ್ತಿದ್ದಾರೆ. ಹತಾಶೆಯಿಂದ ರಾಜಕೀಯ ಮಸಿ ಬಳಿಯಲು ಯತ್ನಿಸುತ್ತಿದ್ದಾರೆ. ಮನೆ ಮುರುಕರು ಎಂದು ಬಿಜೆಪಿಯವರನ್ನು ಕರೆಯಬೇಕು. ಈವರೆಗೆ 50:50ರಡಿ 909 ನಿವೇಶನ ಹಂಚಿಕೆ ಆಗಿರುತ್ತದೆ. 109 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಆ ಮೂಲಕ ಒಟ್ಟು 1,328 ನಿವೇಶನಗಳನ್ನು ಮುಡಾ ಹಂಚಿಕೆ ಮಾಡಿದೆ. ವಿಜಯನಗರ ಬಡಾವಣೆಯಲ್ಲಿ 125 ಸೈಟ್ ಗಳನ್ನು ಬೇರೆ ಬೇರೆಯವರಿಗೆ ಕೊಡಲಾಗಿತ್ತು. ಇದರಲ್ಲಿ ನನ್ನದಾಗಲಿ, ನನ್ನ ಪತ್ನಿದಾಗಲಿ ಯಾವ ಪಾತ್ರವೂ ಇಲ್ಲ. ಇದರಲ್ಲಿ ನಮ್ಮದೇನು ತಪ್ಪಿಲ್ಲ. ಸಿದ್ದರಾಮಯ್ಯ ಅವರು ಪ್ರಭಾವ ಬಳಸಿದ್ದಾರೆ ಎಂದು ಆರೋಪಿಸುತ್ತಾರೆ. ಇದರಲ್ಲಿ ನನ್ನ ಪಾತ್ರ ಇಲ್ಲ ಎಂದು ಸ್ಪಷ್ಟಪಡಿಸಿದರು.

ನಮ್ಮಲ್ಲಿ ಅನೇಕರು ಟವೆಲ್ ಹಾಕಿದ್ದಾರೆ: ಸಿಎಂ ಕುರ್ಚಿಗೆ ಟವಲ್ ಹಾಕಿದವರಿಂದಲೇ ಷಡ್ಯಂತ್ರ ಎಂಬ ಹೆಚ್‌ಡಿಕೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ನಮ್ಮಲ್ಲಿ ಸಿಎಂ ಆಗುವ ಅನೇಕ ಅರ್ಹ ವ್ಯಕ್ತಿಗಳಿದ್ದಾರೆ ಎಂದು ಡಿಕೆಶಿ ಕಡೆ ನೋಡಿದ ಸಿಎಂ ಸಿದ್ದರಾಮಯ್ಯ, ಯಾರು ಅಂತ ಕುಮಾರಸ್ವಾಮಿಯನ್ನೇ ಕೇಳಿ ಎಂದು ಸೂಚ್ಯವಾಗಿ ತಿಳಿಸಿದರು.

ನ್ಯಾಯಾಂಗ ತನಿಖೆಯಲ್ಲಿ ಎಲ್ಲವೂ ತನಿಖೆ: 14.7.2024ರಂದು ನಿವೃತ್ತ ನ್ಯಾಯಮೂರ್ತಿ ದೇಸಾಯಿ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗ ಮಾಡಿದ್ದೇವೆ. ಮುಡಾದಲ್ಲಿ ನಿವೇಶನ ಹಂಚಿಕೆ ಅಕ್ರಮದ ಬಗ್ಗೆ ತನಿಖೆ ಮಾಡುತ್ತೇವೆ ಎಂದು ಇದೇ ವೇಳೆ ತಿಳಿಸಿದರು.

ಲೋಕಸಭೆಯ ಹೊರಗಡೆ ಬಿಜೆಪಿ ಸಂಸದರು ಈ ವಿಚಾರವಾಗಿ ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕಕ್ಕೆ ಇಷ್ಟು ಅನ್ಯಾಯ ವಾಗಿದೆ ಒಂದು ದಿನವಾದರೂ ಪ್ರತಿಭಟನೆ ಮಾಡಿದ್ದಾರಾ?. ಐದು ವರ್ಷ 25 ಜನ ಬಿಜೆಪಿ ಎಂಪಿಗಳಿದ್ದರು ಆಗ ಪ್ರತಿಭಟನೆ ಮಾಡಿಲ್ಲ. ಈ ವಿಚಾರ ಪ್ರಸ್ತಾಪ ಮಾಡಿಲ್ಲ. ಕರ್ನಾಟಕಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ಮಾಡಿಲ್ಲ ಎಂದು ಟೀಕಿಸಿದರು.

ಕಣ್ಣು ತಪ್ಪಿನಿಂದ ಆಸ್ತಿ ವಿವರ ಸಲ್ಲಿಸಿಲ್ಲ: ಈ ಜಮೀನಿನ ವಿವರವನ್ನು 2013ರ ಅಫಿಡವಿಟ್ ನಲ್ಲಿ ಮಾಹಿತಿ ನೀಡದ ವಿಚಾರವಾಗಿ ಪ್ರತಿಕ್ರಿಯಿಸಿ, ಕಣ್ಣು ತಪ್ಪಿನಿನಿಂದ ಮಾಹಿತಿ ನೀಡಿಲ್ಲ. ಆದರೆ ನಂತರ ಲೋಕಾಯುಕ್ತಕ್ಕೆ ಸಲ್ಲಿಸಿದ ಆಸ್ತಿ ವಿವರದ ಮಾಹಿತಿ ಅಫಿಡವಿಟ್ ನಲ್ಲಿ ಈ ಜಮೀನಿನ ಮಾಹಿತಿಯನ್ನು ಉಲ್ಲೇಖ ಮಾಡಿದ್ದೇನೆ ಎಂದು ಸಿಎಂ ಇದೇ ವೇಳೆ ಸ್ಪಷ್ಟಪಡಿಸಿದರು.

ರಾಜಕೀಯ

B Nagendra ಗೆ Janardhana Reddy ಸವಾಲ್; 10 ಶಾಸಕರಿಗೆ ರಾಜೀನಾಮೆ ಕೊಡಿಸಿ ಚುನಾವಣೆ ಎದುರಿಸಿ ಎಂದ ಬಿಜೆಪಿ ಶಾಸಕ

Published

on

ಬಳ್ಳಾರಿ: ಸಚಿವ ಸ್ಥಾನಕ್ಕೆ B Nagendra ರಾಜೀನಾಮೆ ನೀಡಿರುವ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಮತ್ತಷ್ಟು ತೀವ್ರಗೊಂಡಿವೆ. ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ Janardhana Reddy, ನಾಗೇಂದ್ರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ವಾಲ್ಮೀಕಿ ನಿಗಮದ ಹಣದ ಅವ್ಯವಹಾರ ಪ್ರಕರಣ, ಅವರ ರಾಜಕೀಯ ಹಿನ್ನೆಲೆ ಹಾಗೂ ಇತ್ತೀಚಿನ ಹೇಳಿಕೆಗಳನ್ನು ಪ್ರಸ್ತಾಪಿಸಿ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಜನಾರ್ದನ ರೆಡ್ಡಿ, ನಾಗೇಂದ್ರ ಅವರು ಕಣ್ಣೀರು ಹಾಕುತ್ತಿರುವುದು ನಾಟಕ ಎಂದು ಟೀಕಿಸಿದರು. ಅಲ್ಲದೆ, ರಾಮಾಯಣದ ಶಂಭುಕನ ಕಥೆಯನ್ನು ರಾಜಕೀಯವಾಗಿ ಬಳಸಿಕೊಂಡು ಜನರನ್ನು ದಾರಿ ತಪ್ಪಿಸಬಾರದು ಎಂದು ಕಿಡಿಕಾರಿದರು.

‘ರಾಮಾಯಣದ ಕಥೆ ಹೇಳಿ ಜನರನ್ನು ದಾರಿ ತಪ್ಪಿಸಬೇಡ’

ನಾಗೇಂದ್ರ ಅವರು ತಮ್ಮ ರಾಜಕೀಯ ಹಿನ್ನೆಲೆ ಹಾಗೂ ಬಿಜೆಪಿ ಜೊತೆಗಿನ ಹಿಂದಿನ ಸಂಬಂಧವನ್ನು ಉಲ್ಲೇಖಿಸಿದ ಜನಾರ್ದನ ರೆಡ್ಡಿ, ರಾಜಕೀಯಕ್ಕೆ ರಾಮಾಯಣದ ವಿಚಾರವನ್ನು ತರುವ ಮೊದಲು ಅದರ ಬಗ್ಗೆ ಸಂಪೂರ್ಣ ತಿಳಿದುಕೊಳ್ಳಬೇಕು ಎಂದು ಹೇಳಿದರು.

ಶಂಭುಕನ ವಿಚಾರವಾಗಿ ಮಾತನಾಡುವ ನೈತಿಕತೆ ನಾಗೇಂದ್ರ ಅವರಿಗೆ ಇಲ್ಲ ಎಂದು ಟೀಕಿಸಿದ ಅವರು, ಹಿಂದಿನ ರಾಜಕೀಯ ಬೆಳವಣಿಗೆಗಳನ್ನು ಪ್ರಸ್ತಾಪಿಸಿ ಹಲವು ಗಂಭೀರ ಆರೋಪಗಳನ್ನು ಮಾಡಿದರು. ನಾಗೇಂದ್ರ ಅವರು ಹಿಂದೆ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದರು ಎಂಬುದನ್ನೂ ಜನಾರ್ದನ ರೆಡ್ಡಿ ನೆನಪಿಸಿದರು.

ವಾಲ್ಮೀಕಿ ನಿಗಮದ ಪ್ರಕರಣ ಪ್ರಸ್ತಾಪಿಸಿ ವಾಗ್ದಾಳಿ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣದ ಅವ್ಯವಹಾರ ಪ್ರಕರಣವನ್ನು ಪ್ರಸ್ತಾಪಿಸಿದ ಜನಾರ್ದನ ರೆಡ್ಡಿ, ಪ್ರಕರಣದಲ್ಲಿ ನಾಗೇಂದ್ರ ಅವರ ಪಾತ್ರದ ಕುರಿತು ಪ್ರಶ್ನೆಗಳನ್ನು ಎತ್ತಿದರು.

ನಿಗಮದ ಹಣವನ್ನು ಚುನಾವಣಾ ಚಟುವಟಿಕೆಗಳಿಗೆ ಬಳಸಲಾಗಿದೆ ಎಂಬ ಆರೋಪಗಳನ್ನು ಪುನರುಚ್ಚರಿಸಿದ ಅವರು, ತೆಲಂಗಾಣ, ಗೋವಾ ಹಾಗೂ ಬಳ್ಳಾರಿ ಲೋಕಸಭಾ ಚುನಾವಣೆಗೆ ಹಣ ಬಳಕೆಯಾಗಿದೆ ಎಂದು ಆರೋಪಿಸಿದರು. ಅಲ್ಲದೆ, ಕೆಲ ವ್ಯಕ್ತಿಗಳಿಗೆ ಕೋಟ್ಯಂತರ ರೂಪಾಯಿ ವರ್ಗಾವಣೆಯಾಗಿರುವ ಬಗ್ಗೆ ನಾಗೇಂದ್ರ ಅವರು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ತನಿಖಾ ಸಂಸ್ಥೆಗಳಾದ ಇಡಿ ಮತ್ತು ಸಿಬಿಐ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ ಎಂದು ಹೇಳಿದ ಜನಾರ್ದನ ರೆಡ್ಡಿ, ಪ್ರಕರಣದಲ್ಲಿ ತನಿಖೆ ಮುಂದುವರಿಯುತ್ತಿರುವ ಹಿನ್ನೆಲೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಹೇಳಿದರು.

‘10 ಶಾಸಕರಿಗೆ ರಾಜೀನಾಮೆ ಕೊಡಿಸಿ ಚುನಾವಣೆ ಎದುರಿಸಿ’

ರಾಜಕೀಯ ಸೋಲು-ಗೆಲುವಿನ ಕುರಿತು ನಾಗೇಂದ್ರ ನೀಡಿರುವ ಹೇಳಿಕೆಗಳಿಗೂ ಜನಾರ್ದನ ರೆಡ್ಡಿ ತಿರುಗೇಟು ನೀಡಿದರು. ಚುನಾವಣೆಯಲ್ಲಿ ಸೋಲು-ಗೆಲುವು ಸಾಮಾನ್ಯ ಸಂಗತಿ ಎಂದು ಹೇಳಿದ ಅವರು, ತಮ್ಮನ್ನು ಅಥವಾ ಇತರರನ್ನು ‘ರಿಜೆಕ್ಟೆಡ್ ಪೀಸ್’ ಎಂದು ಕರೆಯುವ ಮೊದಲು ರಾಜಕೀಯ ವಾಸ್ತವಾಂಶ ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಇದೇ ವೇಳೆ ನಾಗೇಂದ್ರ ಅವರಿಗೆ ನೇರ ಸವಾಲು ಹಾಕಿದ ಜನಾರ್ದನ ರೆಡ್ಡಿ, ಧೈರ್ಯವಿದ್ದರೆ ತುಕಾರಾಂ ಸೇರಿದಂತೆ ಹತ್ತು ಶಾಸಕರಿಗೆ ರಾಜೀನಾಮೆ ಕೊಡಿಸಿ ಮತ್ತೆ ಚುನಾವಣೆಗೆ ಬನ್ನಿ ಎಂದು ಹೇಳಿದರು.

ಹತ್ತು ವಿಧಾನಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ಗೆಲ್ಲದಿದ್ದರೆ ತಾನು ಜನಾರ್ದನ ರೆಡ್ಡಿಯೇ ಅಲ್ಲ ಎಂದು ಸವಾಲು ಹಾಕಿದರು. ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

ಹಣ ವರ್ಗಾವಣೆ ಕುರಿತು ಸ್ಪಷ್ಟನೆಗೆ ಆಗ್ರಹ

ವಾಲ್ಮೀಕಿ ನಿಗಮದ ಖಾತೆಯಿಂದ ಕೆಲವು ವ್ಯಕ್ತಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿದೆ ಎಂದು ಆರೋಪಿಸಿದ ಜನಾರ್ದನ ರೆಡ್ಡಿ, ಈ ಹಣ ವರ್ಗಾವಣೆಯ ಉದ್ದೇಶವೇನು ಹಾಗೂ ಸಂಬಂಧಪಟ್ಟ ವ್ಯಕ್ತಿಗಳಿಗೂ ನಾಗೇಂದ್ರ ಅವರಿಗೂ ಇರುವ ಸಂಪರ್ಕವೇನು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಆಗ್ರಹಿಸಿದರು.

ಈ ಪ್ರಕರಣದಲ್ಲಿ ನಾಗೇಂದ್ರ ಸೇರಿದಂತೆ ಹಲವು ಮಂದಿ ಆರೋಪಿಗಳಾಗಿದ್ದಾರೆ ಎಂದು ಹೇಳಿದ ಅವರು, ನಿಗಮದ ಹಣದ ದುರ್ಬಳಕೆಯ ಕುರಿತು ಸಂಪೂರ್ಣ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದರು.

ರಾಜೀನಾಮೆ ರಾಜಕೀಯಕ್ಕೆ ಹೊಸ ತಿರುವು

ಬಿ. ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರ ಈ ವಾಗ್ದಾಳಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವಿನ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.

ನಾಗೇಂದ್ರ ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸುತ್ತಿದ್ದು, ಪ್ರಕರಣದ ತನಿಖೆಯ ನಂತರ ಸತ್ಯ ಹೊರಬರಲಿದೆ ಎಂಬ ವಿಶ್ವಾಸವನ್ನು ಕಾಂಗ್ರೆಸ್ ನಾಯಕರು ವ್ಯಕ್ತಪಡಿಸುತ್ತಿದ್ದಾರೆ. ಮತ್ತೊಂದೆಡೆ, ಬಿಜೆಪಿ ನಾಯಕರು ಪ್ರಕರಣವನ್ನು ಮುಂದಿಟ್ಟುಕೊಂಡು ಸರ್ಕಾರದ ವಿರುದ್ಧ ರಾಜಕೀಯ ಒತ್ತಡವನ್ನು ಮುಂದುವರಿಸಿದ್ದಾರೆ.

ಹೀಗಾಗಿ ನಾಗೇಂದ್ರ ರಾಜೀನಾಮೆ ಬೆಳವಣಿಗೆಯ ನಡುವೆಯೇ ಜನಾರ್ದನ ರೆಡ್ಡಿ ಮಾಡಿರುವ ಆರೋಪಗಳು ಹಾಗೂ ಹಾಕಿರುವ ಚುನಾವಣಾ ಸವಾಲು ಮುಂದಿನ ದಿನಗಳಲ್ಲಿ ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆಯಿದೆ.

Continue Reading

ಅಪರಾಧ

Bengaluru ನಲ್ಲಿ ವಿವಾದಿತ ‘Peptide Party’ ರದ್ದು; FDA ನೋಟಿಸ್ ಬಳಿಕ ಆಯೋಜಕರಿಗೆ ಶಾಕ್

Published

on

ಬೆಂಗಳೂರು: Bengaluru ರಿನ ಕೋರಮಂಗಲದಲ್ಲಿ ಆಗಸ್ಟ್ 29ರಂದು ಆಯೋಜಿಸಲಾಗಿದ್ದ ವಿವಾದಾತ್ಮಕ Peptide Party ಇದೀಗ ರದ್ದಾಗಿದೆ. ಪೆಪ್ಟೈಡ್‌ಗಳ ಬಳಕೆ ಹಾಗೂ ಅವುಗಳ ಉಚಿತ ವಿತರಣೆಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ ತೀವ್ರಗೊಂಡ ಬೆನ್ನಲ್ಲೇ ಕರ್ನಾಟಕ ಆಹಾರ ಮತ್ತು ಔಷಧ ಆಡಳಿತ ಇಲಾಖೆ ತನಿಖೆ ಕೈಗೊಂಡಿತ್ತು. ಇಲಾಖೆಯಿಂದ ನೋಟಿಸ್ ಜಾರಿಯಾದ ಬಳಿಕ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

‘ಅಪ್‌ಸರ್ಜ್ ಲ್ಯಾಬ್ಸ್’ ಸಂಸ್ಥೆಯ ಅನುಷ್ಕಾ ಸಿಂಗ್ ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎಂದು ತಿಳಿದುಬಂದಿದೆ. ಇದನ್ನು “ಭಾರತದ ಮೊದಲ ಪೆಪ್ಟೈಡ್ ಪಾರ್ಟಿ” ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗಿತ್ತು. ಕಾರ್ಯಕ್ರಮದಲ್ಲಿ ಪೆಪ್ಟೈಡ್‌ಗಳ ಉಚಿತ ವಿತರಣೆ, ಸಂಗೀತ, ಆಹಾರ ಹಾಗೂ ವಿವಿಧ ಆಟಗಳನ್ನು ಆಯೋಜಿಸುವುದಾಗಿ ತಿಳಿಸಲಾಗಿತ್ತು.

ಆದರೆ, ವೈದ್ಯಕೀಯ ತಜ್ಞರು ಮತ್ತು ಆರೋಗ್ಯ ಕ್ಷೇತ್ರದ ಪರಿಣಿತರು ಇಂತಹ ಕಾರ್ಯಕ್ರಮಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ವೈದ್ಯರ ಸೂಕ್ತ ಸಲಹೆ ಅಥವಾ ಮೇಲ್ವಿಚಾರಣೆಯಿಲ್ಲದೆ ಪೆಪ್ಟೈಡ್‌ಗಳನ್ನು ಬಳಸುವುದರಿಂದ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತವಾಗಿತ್ತು.

ಪೆಪ್ಟೈಡ್ ಪಾರ್ಟಿಗೆ FDA ನೋಟಿಸ್

ವಿವಾದ ಹೆಚ್ಚಾದ ಹಿನ್ನೆಲೆಯಲ್ಲಿ ಆಹಾರ ಮತ್ತು ಔಷಧ ಆಡಳಿತ ಇಲಾಖೆ ಕಾರ್ಯಕ್ರಮದ ಕುರಿತು ತನಿಖೆ ಆರಂಭಿಸಿತು. ಕಾರ್ಯಕ್ರಮದಲ್ಲಿ ವಿತರಿಸಲು ಉದ್ದೇಶಿಸಲಾಗಿದ್ದ ಪೆಪ್ಟೈಡ್‌ಗಳ ಕುರಿತು ಆಯೋಜಕರಿಂದ ಹಲವು ದಾಖಲೆಗಳನ್ನು ಕೇಳಲಾಗಿದೆ.

ಪೆಪ್ಟೈಡ್‌ಗಳ ಸಂಯೋಜನೆ, ಡೋಸೇಜ್, ತಯಾರಕರ ವಿವರ ಮತ್ತು ಬ್ಯಾಚ್ ಸಂಖ್ಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಸಲ್ಲಿಸುವಂತೆ ಇಲಾಖೆ ಸೂಚಿಸಿದೆ. ಇದರ ಜೊತೆಗೆ ತೂಕ ಇಳಿಕೆ, ಸ್ನಾಯುಗಳ ಬೆಳವಣಿಗೆ ಮತ್ತು ವಯಸ್ಸಾಗುವ ಪ್ರಕ್ರಿಯೆ ನಿಧಾನಗೊಳಿಸುವಂತಹ ಚಿಕಿತ್ಸಕ ಹಕ್ಕುಗಳಿಗೆ ವೈಜ್ಞಾನಿಕ ಪುರಾವೆಗಳನ್ನು ಒದಗಿಸುವಂತೆ ಕಾರಣ ಕೇಳಿ ನೋಟಿಸ್ ನೀಡಿದೆ.

ಈ ಕಟ್ಟುನಿಟ್ಟಿನ ಕ್ರಮದ ಬಳಿಕ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.

‘ಇದು ಶೈಕ್ಷಣಿಕ ಸಭೆ’ ಎಂದ ಆಯೋಜಕರು

ಕಾರ್ಯಕ್ರಮದ ಕುರಿತು ಸ್ಪಷ್ಟನೆ ನೀಡಿರುವ ಸಂಸ್ಥೆಯ ಸಂಸ್ಥಾಪಕ ಸೌಮ್ಯ ಜೈನ್, ಇದು ಕೇವಲ ಶೈಕ್ಷಣಿಕ ಉದ್ದೇಶದ ಸಭೆಯಾಗಿತ್ತು ಎಂದು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಯಾವುದೇ ಇಂಜೆಕ್ಷನ್ ಅಥವಾ ಔಷಧಿಗಳ ಮಾರಾಟ ನಡೆಸುವ ಉದ್ದೇಶ ಇರಲಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರದ ನಿಯಮಗಳು ಮತ್ತು ಮಾರ್ಗಸೂಚಿಗಳಿಗೆ ಸಂಪೂರ್ಣವಾಗಿ ಬದ್ಧರಾಗಿರುವುದಾಗಿ ತಿಳಿಸಿರುವ ಆಯೋಜಕರು, ಎಫ್‌ಡಿಎ ಕೇಳಿರುವ ಅಗತ್ಯ ದಾಖಲೆಗಳನ್ನು ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ.

ಏನಿದು ಪೆಪ್ಟೈಡ್?

ಇತ್ತೀಚಿನ ವರ್ಷಗಳಲ್ಲಿ ಪೆಪ್ಟೈಡ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಚರ್ಚೆಯಾಗುತ್ತಿವೆ. ದೇಹದ ತೂಕ ನಿರ್ವಹಣೆ, ಸ್ನಾಯುಗಳ ಬೆಳವಣಿಗೆ, ಚರ್ಮದ ಆರೈಕೆ ಹಾಗೂ ವಯಸ್ಸಾಗುವಿಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಕೆಲವು ಪೆಪ್ಟೈಡ್ ಆಧಾರಿತ ಉತ್ಪನ್ನಗಳ ಬಗ್ಗೆ ಆನ್‌ಲೈನ್‌ನಲ್ಲಿ ಪ್ರಚಾರ ನಡೆಯುತ್ತಿದೆ.

ವಿಶೇಷವಾಗಿ ಕೆಲವು ಇನ್‌ಫ್ಲುಯೆನ್ಸರ್‌ಗಳು ಮತ್ತು ಜಿಮ್ ಸಮುದಾಯಗಳಲ್ಲಿ ಪೆಪ್ಟೈಡ್ ಉತ್ಪನ್ನಗಳ ಬಳಕೆಯ ಕುರಿತು ಮಾಹಿತಿ ಹಂಚಿಕೊಳ್ಳಲಾಗುತ್ತಿದೆ. ಇದರಿಂದಾಗಿ ವೈದ್ಯಕೀಯ ಸಲಹೆಯಿಲ್ಲದೆ ಇಂತಹ ಉತ್ಪನ್ನಗಳನ್ನು ಬಳಸುವವರ ಸಂಖ್ಯೆ ಹೆಚ್ಚಾಗಬಹುದು ಎಂಬ ಆತಂಕವೂ ಇದೆ.

ಪೆಪ್ಟೈಡ್ ಎಂಬುದು ಅಮೈನೊ ಆಮ್ಲಗಳ ಸರಪಳಿಯಿಂದ ನಿರ್ಮಿತವಾಗಿರುವ ಜೈವಿಕ ಅಣುಗಳ ಒಂದು ವರ್ಗ. ಆದರೆ ಪ್ರತಿಯೊಂದು ಪೆಪ್ಟೈಡ್ ಉತ್ಪನ್ನವೂ ಒಂದೇ ರೀತಿಯ ಬಳಕೆ ಅಥವಾ ಸುರಕ್ಷತಾ ಮಾನದಂಡಗಳನ್ನು ಹೊಂದಿರುವುದಿಲ್ಲ. ಉತ್ಪನ್ನದ ಸ್ವರೂಪ, ಬಳಕೆ ಮತ್ತು ನಿಯಂತ್ರಣದ ಆಧಾರದ ಮೇಲೆ ಅದರ ಸುರಕ್ಷತೆ ಹಾಗೂ ಪರಿಣಾಮ ಬದಲಾಗಬಹುದು.

ಹೀಗಾಗಿ ವೈದ್ಯಕೀಯ ಉದ್ದೇಶಕ್ಕಾಗಿ ಬಳಸುವ ಯಾವುದೇ ಪೆಪ್ಟೈಡ್ ಉತ್ಪನ್ನವನ್ನು ತಜ್ಞರ ಸಲಹೆಯಿಲ್ಲದೆ ಬಳಸುವುದು ಸೂಕ್ತವಲ್ಲ ಎಂಬುದು ಆರೋಗ್ಯ ತಜ್ಞರ ಪ್ರಮುಖ ಎಚ್ಚರಿಕೆಯಾಗಿದೆ.

ಸಾಮಾಜಿಕ ಜಾಲತಾಣಗಳ ಪ್ರಚಾರದ ಮೇಲೂ ಪ್ರಶ್ನೆ

ಪೆಪ್ಟೈಡ್‌ಗಳ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ನಡೆಯುತ್ತಿರುವ ಪ್ರಚಾರ ಇದೀಗ ಮತ್ತೊಮ್ಮೆ ಚರ್ಚೆಗೆ ಬಂದಿದೆ. ವೈಜ್ಞಾನಿಕ ಪುರಾವೆಗಳಿಗಿಂತ ಹೆಚ್ಚಾಗಿ ವೈಯಕ್ತಿಕ ಅನುಭವಗಳು ಮತ್ತು ಪ್ರಚಾರಾತ್ಮಕ ಹೇಳಿಕೆಗಳ ಆಧಾರದ ಮೇಲೆ ಇಂತಹ ಉತ್ಪನ್ನಗಳನ್ನು ಜನರಿಗೆ ಪರಿಚಯಿಸುವುದು ಅಪಾಯಕಾರಿಯಾಗಬಹುದು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.

ಕೋರಮಂಗಲದ ಕಾರ್ಯಕ್ರಮ ರದ್ದಾಗಿರುವುದು, ವೈದ್ಯಕೀಯ ಅಥವಾ ಆರೋಗ್ಯ ಸಂಬಂಧಿತ ಉತ್ಪನ್ನಗಳನ್ನು ಸಾರ್ವಜನಿಕ ಕಾರ್ಯಕ್ರಮಗಳ ಮೂಲಕ ಪ್ರಚಾರ ಮಾಡುವಾಗ ನಿಯಮಗಳು ಮತ್ತು ಸುರಕ್ಷತಾ ಮಾನದಂಡಗಳನ್ನು ಪಾಲಿಸುವ ಅಗತ್ಯವನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದೆ.

ಒಟ್ಟಿನಲ್ಲಿ, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕುತೂಹಲ ಮೂಡಿಸಿದ್ದ ಬೆಂಗಳೂರಿನ ‘ಪೆಪ್ಟೈಡ್ ಪಾರ್ಟಿ’ ಎಫ್‌ಡಿಎ ತನಿಖೆ ಹಾಗೂ ನೋಟಿಸ್ ಬಳಿಕ ರದ್ದಾಗಿದ್ದು, ಪೆಪ್ಟೈಡ್ ಉತ್ಪನ್ನಗಳ ಬಳಕೆ, ಅವುಗಳ ಪ್ರಚಾರ ಮತ್ತು ನಿಯಂತ್ರಣದ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

Continue Reading

ಬೆಂಗಳೂರು

Bengaluru ನಲ್ಲಿ ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ಬಂಧನ; ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಅಲರ್ಟ್!

Published

on

ಬೆಂಗಳೂರು: ರಾಜಧಾನಿ Bengaluru ನಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವ (Drink And Drive) ಚಾಲಕರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸರು ಸಮರ ಸಾರಿದ್ದು, ಕುಡಿದು ನೀರಿನ ಟ್ಯಾಂಕರ್ ಚಲಾಯಿಸುತ್ತಿದ್ದ 40 ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶುಕ್ರವಾರ ಬೆಳಗಿನ ಜಾವ 6 ಗಂಟೆಯಿಂದ 9 ಗಂಟೆಯವರೆಗೆ ನಗರಾದ್ಯಂತ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿದ ಪೊಲೀಸರು, ಒಟ್ಟು 1,476 ನೀರಿನ ಟ್ಯಾಂಕರ್‌ಗಳನ್ನು ತಡೆದು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಮದ್ಯಪಾನ ಮಾಡಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ 40 ಚಾಲಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿದೆ.

ಚಾಲಕರ ಈ ಬೇಜವಾಬ್ದಾರಿ ಚಾಲನೆಯು ರಸ್ತೆ ಸುರಕ್ಷತೆಗೆ ಮತ್ತು ಸಾರ್ವಜನಿಕರ ಜೀವಕ್ಕೆ ಕಂಟಕವಾಗುವ ಕಾರಣಕ್ಕಾಗಿ, ಅವರ ಚಾಲನಾ ಪರವಾನಗಿಯನ್ನು (DL) ಅಮಾನತುಗೊಳಿಸುವಂತೆ ಸಂಬಂಧಪಟ್ಟ ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (RTO) ಶಿಫಾರಸು ಮಾಡಲಾಗಿದೆ. ಮುಂದಿನ ದಿನಗಳಲ್ಲೂ ಇಂತಹ ದಿಢೀರ್ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ಸಂಚಾರ ಪೊಲೀಸರು ಎಚ್ಚರಿಸಿದ್ದಾರೆ.

ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಮುನ್ನೆಚ್ಚರಿಕೆ:

ಇನ್ನೊಂದೆಡೆ, ನಗರದಲ್ಲಿ ವಿಐಪಿ ವಾಹನಗಳ ಸಂಚಾರವಿರುವ ಹಿನ್ನೆಲೆಯಲ್ಲಿ ಆಗಸ್ಟ್ 29ರ ಮಧ್ಯಾಹ್ನ 2:30 ರಿಂದ ಸಂಜೆ 4:30 ರವರೆಗೆ ಹಾಗೂ ಆಗಸ್ಟ್ 30ರ ಬೆಳಿಗ್ಗೆ 7 ರಿಂದ 8 ಗಂಟೆಯವರೆಗೆ ಸುರಂಜನ್‌ದಾಸ್ ರಸ್ತೆ ಮತ್ತು ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಭಾರಿ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆಯಿದೆ. ಈ ಅವಧಿಯಲ್ಲಿ ಸಂಚಾರ ಮಾರ್ಗಗಳಲ್ಲಿ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಹಾಗೂ ಸವಾರರು ತಮ್ಮ ಪ್ರಯಾಣವನ್ನು ಮುಂಚಿತವಾಗಿಯೇ ಯೋಜಿಸಿಕೊಂಡು ಸಹಕರಿಸಬೇಕಾಗಿ ಟ್ರಾಫಿಕ್ ಪೊಲೀಸರು ಮನವಿ ಮಾಡಿದ್ದಾರೆ.

Continue Reading

Trending