Connect with us

ಬೆಂಗಳೂರು

ಬೆಂಗಳೂರು TO ಮೈಸೂರು ಪಾದಯಾತ್ರೆ: ‘ದೋಸ್ತಿ’ಗಳಿಂದ ಕಾಂಗ್ರೆಸ್ ವಿರುದ್ಧ ಬೃಹತ್ ಹೋರಾಟಕ್ಕೆ ಸಿದ್ಧತೆ – BJP JDS Padayatra

Published

on

ಬೆಂಗಳೂರು: ಮುಡಾ ಹಗರಣ ಹಾಗು ವಾಲ್ಮೀಕಿ ನಿಗಮ ಹಗರಣಗಳನ್ನು ಜನರ ಮುಂದಿಡಲು ಬಿಜೆಪಿ ನಿರ್ಧರಿಸಿದ್ದು, ದೋಸ್ತಿ ಪಕ್ಷ ಜೆಡಿಎಸ್ ಜೊತೆಗೂಡಿ ಬೆಂಗಳೂರು ಟು ಮೈಸೂರು ಪಾದಯಾತ್ರೆಗೆ ಮುಂದಾಗಿದೆ. ಒಂದೂವರೆ ದಶಕದ ನಂತರ ರಾಜ್ಯದಲ್ಲಿ ಮೊದಲ ಬೃಹತ್ ರಾಜಕೀಯ ಹೋರಾಟದ ಪಾದಯಾತ್ರೆ ನಡೆಯುತ್ತಿದೆ.

ಮುಡಾ ಹಾಗು ವಾಲ್ಮೀಕಿ ನಿಗಮ ಹಗರಣ ಕುರಿತು ಸದನದಲ್ಲಿ ಚರ್ಚೆಗೆ ಸರಿಯಾದ ವೇದಿಕೆ ಲಭ್ಯವಾಗದ ಹಿನ್ನೆಲೆಯಲ್ಲಿ ಜನತಾ ನ್ಯಾಯಾಲಯಕ್ಕೆ ಕೊಂಡೊಯ್ಯಲು ಬಿಜೆಪಿ ಮತ್ತು ಜೆಡಿಎಸ್ ನಿರ್ಧರಿಸಿದೆ. ಬೃಹತ್ ಪಾದಯಾತ್ರೆ ಮೂಲಕ ಜನರಿಗೆ ಕಾಂಗ್ರೆಸ್ ಸರ್ಕಾರದ ಹಗರಣಗಳನ್ನು ಮನವರಿಕೆ ಮಾಡಿಕೊಡಲು ತೀರ್ಮಾನಿಸಿದೆ. ಅದಕ್ಕಾಗಿ 140 ಕಿಲೋಮೀಟರ್​ಗಳ ಬೃಹತ್ ಪಾದಯಾತ್ರೆಗೆ ನಿರ್ಧರಿಸಲಾಗಿದೆ.

ಬೆಂಗಳೂರು ಹೊರವಲಯದ ನೈಸ್​ ರೋಡ್ ಜಂಕ್ಷನ್​ನಿಂದ ಪಾದಯಾತ್ರೆ ಆರಂಭಿಸಿ ಬಿಡದಿ, ರಾಮನಗರ, ಮದ್ದೂರು, ಮಂಡ್ಯ, ಶ್ರೀರಂಗಪಟ್ಟಣದ ಮೂಲಕ ಮೈಸೂರಿಗೆ ಸಾಗಲು ಬಿಜೆಪಿ ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ. ಕೇವಲ ರಾಷ್ಟ್ರೀಯ ಹೆದ್ದಾರಿ ಮಾರ್ಗದಲ್ಲಿ ಸಾಗದೆ ಪ್ರಮುಖ ಪಟ್ಟಣಗಳ ಒಳಹಾದಿ ಮೂಲಕ‌ ಸಾಗಿ ಜನರನ್ನು ತಲುಪಬೇಕು. ಅಲ್ಲಲ್ಲಿ ಸಮಾವೇಶಗಳನ್ನು ಆಯೋಜನೆ ಮಾಡುವ ಮೂಲಕ ಸರ್ಕಾರದ ಹಗರಣಗಳನ್ನು ಎಳೆ ಎಳೆಯಾಗಿ ಜನತೆಯ ಮುಂದೆ ಬಿಚ್ಚಿಡಬೇಕು ಎಂದು ನಿರ್ಧರಿಸಿದ್ದು, ಅದಕ್ಕಾಗಿ ರೂಪುರೇಶೆ ಸಿದ್ದಪಡಿಸಲಾಗುತ್ತಿದೆ. ಯಾವ ಮಾರ್ಗದ ಮೂಲಕ ಸಾಗಬೇಕು. ಯಾವ ಪಟ್ಟಣದಲ್ಲಿ ಒಳಗೆ ಸಾಗಬೇಕು. ಸಮಾವೇಶಗಳು ಎಲ್ಲಿ ನಡೆಸಬೇಕು. ಮೈಸೂರಿನಲ್ಲಿ ಪಾದಯಾತ್ರೆಯ ಸಮಾರೋಪ ಸಮಾರಂಭ ಬೃಹತ್ ಪ್ರಮಾಣದಲ್ಲಿ ನಡೆಸುವ ಕುರಿತು ಅಂತಿಮ ಹಂತದ ಪರಿಶೀಲನೆಗಳು ನಡೆಯುತ್ತಿದೆ.

ಬೆಂಗಳೂರಿನಿಂದ ಮೈಸೂರುವರೆಗೂ ಪಾದಯಾತ್ರೆ ಸಾಗುವ ಇಡೀ ಮಾರ್ಗ ಜನತಾದಳದ ಕಾರಿಡಾರ್ ಆಗಿದೆ. ದಳಪತಿಗಳ ಕೋಟೆಯೊಳಗೆ ಕೇಸರಿ ಪಡೆ ನಡೆಸುತ್ತಿರುವ ಪಾದಯಾತ್ರೆ ಇದಾಗಿದೆ. ಜೆಡಿಎಸ್ ಈಗ ಎನ್​ಡಿಎ ಭಾಗವಾಗಿರುವ ಹಿನ್ನೆಲೆಯಲ್ಲಿ ಬಿಜೆಪಿಯ ಪಾದಯಾತ್ರೆಯಲ್ಲಿ ಜನತಾದಳ ಪೂರ್ಣ ಪ್ರಮಾಣದಲ್ಲಿ ಭಾಗಿಯಾಗುತ್ತಿದೆ. ಜನತಾದಳದ ವಿಶ್ವಾಸದೊಂದಿಗೆ ಪಾದಯಾತ್ರೆ ನಡೆಸಲಾಗುತ್ತಿದೆ. ಇದು ಬಿಜೆಪಿಯ ಸಂಘಟಿತ ಕೇಡರ್ ಬೇಸ್ ಅಲ್ಲದ ಭಾಗವಾಗಿರುವ ಕಾರಣ ಪಾದಯಾತ್ರೆ ಕಳೆಗುಂದದಿರಲು ಜೆಡಿಎಸ್​ನ ಸಹಕಾರವನ್ನು ಪಡೆದುಕೊಳ್ಳಲಾಗುತ್ತಿದೆ. ಪಾದಯಾತ್ರೆ ಮಾರ್ಗದುದ್ದಕ್ಕೂ ಸ್ಥಳೀಯ ಬಿಜೆಪಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು ಪಾದಯಾತ್ರೆಯನ್ನು ಸಫಲಗೊಳಿಸಬೇಕು ಎಂದು ನಿರ್ಧರಿಸಿದ್ದು, ಇದಕ್ಕಾಗಿ ಬೂತ್ ಮಟ್ಟದ ಸಿದ್ದತೆಗಳು ಆರಂಭವಾಗಿವೆ. ಉಭಯ ಪಕ್ಷಗಳ ವಿಧಾನಸಭಾವಾರು ನಾಯಕರು ಸಮ್ಮಿಳಿತ ರೀತಿಯಲ್ಲಿ ಕಾರ್ಯಕರ್ತರ ಪಡೆಯನ್ನು ಪಾದಯಾತ್ರೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವ ನಿರ್ಧಾರ ಮಾಡಲಾಗಿದೆ.

ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುವ ನಿರ್ಧಾರ ಮಾಡಿದ್ದರೂ ದಿನಾಂಕವನ್ನು ಅಂತಿಮಗೊಳಿಸಿಲ್ಲ. ಜೆಡಿಎಸ್ ನಾಯಕ ಹೆಚ್.ಡಿ ಕುಮಾರಸ್ವಾಮಿ ಈಗ ಕೇಂದ್ರ ಸಚಿವರಾಗಿದ್ದು, ದೆಹಲಿಯಲ್ಲಿರುವ ಹಿನ್ನೆಲೆ ಅವರೊಂದಿಗೆ ಚರ್ಚಿಸಲು ಸಾಧ್ಯವಾಗದ ಕಾರಣದಿಂದ ದಿನಾಂಕ ನಿಗದಿ ಬಾಕಿ ಉಳಿದಿದೆ. ಶನಿವಾರ ಹಾಗು ಭಾನುವಾರ ರಾಜ್ಯಕ್ಕೆ ಕುಮಾರಸ್ವಾಮಿ ಆಗಮಿಸಲಿಸಿದ್ದು, ಕುಮಾರಸ್ವಾಮಿ ಉಪಸ್ಥಿತಿಯಲ್ಲಿಯೇ ಉಭಯ ಪಕ್ಷಗಳ ನಾಯಕರು ಜಂಟಿ ಸಭೆ ನಡೆಸಿ ಪಾದಯಾತ್ರೆ ದಿನಾಂಕವನ್ನು ಅಂತಿಮಗೊಳಿಸಲಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, 28 ರಂದು ಎನ್.ಡಿ.ಎ ಸಭೆ ನಡೆಸಿ ಪಾದಯಾತ್ರೆ ದಿನಾಂಕ ಹಾಗು ಮಾರ್ಗ ಸೇರಿದಂತೆ ಇತ್ಯಾದಿ ಕಾರ್ಯಕ್ರಮಗಳ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಪಾದಯಾತ್ರೆಯಲ್ಲಿ ಉಭಯ ಪಕ್ಷಗಳ ಪ್ರಮುಖ ನಾಯಕರು ಪಾಲ್ಗೊಳ್ಳಲಿದ್ದರೂ ಬಿಜೆಪಿ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ,‌ ಡಿಸಿ ಸದಾನದಗೌಡ, ಜಗದೀಶ್ ಶೆಟ್ಟರ್ ಸಾಂಕೇತಿಕವಾಗಿ ಪಾಲ್ಗೊಂಡು ಸಮಾವೇಶಗಳಲ್ಲಿ ಉಪಸ್ಥಿತರಿರುವಂತೆ ಮಾಡುವ ಲೆಕ್ಕಾಚಾರ ಇದೆ. ಇನ್ನು ಜೆಡಿಎಸ್​ನಿಂದ ಕುಮಾರಸ್ವಾಮಿ ಸಂಸತ್ ಅಧಿವೇಶನದ ಕಾರಣದಿಂದ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವುದು ಕಷ್ಟವಾಗಿದ್ದು, ಅವರು ಉದ್ಘಾಟಣೆ, ಸಮಾರೋಪದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಅದು ಕೂಡು ಭಾನುವಾರದ ಸಭೆಯಲ್ಲಿ ಅಂತಿಮವಾಗಲಿದೆ.

2010 ರಲ್ಲಿ ಅಕ್ರಮ ಗಣಿಗಾರಿಕೆ ವಿರೋಧಿಸಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಬೆಂಗಳೂರಿನಿಂದ ಬಳ್ಳಾರಿಗೆ ಪಾದಯಾತ್ರೆ ನಡೆಸಿದಂತೆ ಈಗ ಬಿಜೆಪಿ ಜೆಡಿಎಸ್ ಒಟ್ಟಾಗಿ ಕಾಂಗ್ರೆಸ್ ವಿರುದ್ಧ ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ನಡೆಸುತ್ತಿದೆ. ಇದು 14 ವರ್ಷದ ನಂತರ ನಡೆಯುತ್ತಿರುವ ರಾಜ್ಯದ ಬೃಹತ್ ರಾಜಕೀಯ ಪಾದಯಾತ್ರೆಯಾಗಿದೆ. ಹಿಂದಿನ ಬಿಜೆಪಿ ಸರ್ಕಾರದ ವೇಳೆ ಕಾಂಗ್ರೆಸ್ ಕಾವೇರಿ ಸಂಗಮದಿಂದ ಮೇಕೆದಾಟು ಪಾದಯಾತ್ರೆ ನಡೆಸಿತ್ತಾದರೂ ಇದು ನೂರು ಕಿಲೋಮೀಟರ್​ಗೂ ಹೆಚ್ಚಿನ ದೂರ ಕ್ರಮಿಸುವ ಬೃಹತ್ ಪಾದಯಾತ್ರೆಯಾಗಿದೆ.

ಕೇವಲ ಪಾದಯಾತ್ರೆ ನಡೆಸಿ ಸುಮ್ಮನಾಗದೆ ವಿಷಯವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಬೇಕು, ಸಿಎಂ ರಾಜೀನಾಮೆ ನೀಡಬೇಕು. ಅಲ್ಲಿಯವರೆಗೂ ಒಂದಲ್ಲಾ ಒಂದು ರೀತಿಯ ಹೋರಾಟವನ್ನು ರಾಜ್ಯಾದ್ಯಂತ ಹಮ್ಮಿಕೊಳ್ಳಲು ಉಭಯ ಪಕ್ಷಗಳು ನಿರ್ಧರಿಸಿವೆ. ಹಾಗಾಗಿ ಪಾದಯಾತ್ರೆ ಹೋರಾಟದ ಆರಂಭ ಮಾತ್ರವಾಗಿದ್ದು, ಸಿಎಂ ರಾಜೀನಾಮೆವರೆಗೂ ನಿರಂತರ ಹೋರಾಟ ಇರಲಿವೆ. ಈ ಕುರಿತು ಬಿಜೆಪಿ ನಾಯಕ ಸಿಟಿ ರವಿ ಮಾಹಿತಿ ನೀಡಿದ್ದು, ಹಗರಣ ಆರೋಪದ ವಿಷಯಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವವರೆಗೂ ನಿರಂತರ ಹೋರಾಟ ಮಾಡುತ್ತೇವೆ ಎಂದು ಮಾಹಿತಿ ನೀಡಿದ್ದಾರೆ.

ಒಟ್ಟಿನಲ್ಲಿ ಸದನದ ಒಳಗೆ ಮುಡಾ, ವಾಲ್ಮೀಕಿ ಹಗರಣ ಹೋರಾಟ ನಡೆಸಿರುವ ಬಿಜೆಪಿ ಜೆಡಿಎಸ್ ದೋಸ್ತಿಗಳು ಇದೀಗ ಸದನದ ಹೊರಗೆ ಪಾದಯಾತ್ರೆ ಮೂಲಕ ಬೃಹತ್ ಹೋರಾಟಕ್ಕೆ ನಿರ್ಧರಿಸಿವೆ. ಹಳೆ ಮೈಸೂರು ಭಾಗದಲ್ಲಿ ಪಕ್ಷ ಬಲವರ್ದನೆಗೂ ಈ ಪಾದಯಾತ್ರೆ ಸಹಕಾರಿಯಾಗಲಿದ್ದು, ಮಿತ್ರಪಕ್ಷಗಳ ಒಗ್ಗಟ್ಟು ಬಲಗೊಳ್ಳಲಿದೆ ಎನ್ನುವ ವಿಶ್ವಾಸ ಉಭಯ ನಾಯಕರದ್ದಾಗಿದೆ.

ಬೆಂಗಳೂರು

Shakthi Scheme ಬಳಿಕ BMTC ಸೇವೆ ಹೇಗಿದೆ? ಬಸ್‌ನಲ್ಲಿ ಪ್ರಯಾಣಿಸಿದ ಸಚಿವರಿಗೆ ಸಿಕ್ಕ ಉತ್ತರ

Published

on

ಬೆಂಗಳೂರು: Shakthi Scheme ಜಾರಿಯಾದ ಬಳಿಕ ಬಿಎಂಟಿಸಿ ಸೇವೆಗಳ ನೈಜ ಸ್ಥಿತಿ ತಿಳಿಯಲು ಸಾರಿಗೆ ಸಚಿವ ಬೈರತಿ ಸುರೇಶ್ ಸಾಮಾನ್ಯ ಪ್ರಯಾಣಿಕರಂತೆ ಬಸ್‌ನಲ್ಲಿ ಸಂಚರಿಸಿ ರಿಯಾಲಿಟಿ ಚೆಕ್ ನಡೆಸಿದರು. ಜಯಮಹಲ್, ಆರ್.ಟಿ.ನಗರ, ಸಿಬಿಐ ರಸ್ತೆ, ಹೆಬ್ಬಾಳ ಹಾಗೂ ನಾಗವಾರ ಮಾರ್ಗಗಳಲ್ಲಿ ಪ್ರಯಾಣಿಸಿದ ಸಚಿವರು, ಸಾರ್ವಜನಿಕರು ಪ್ರತಿದಿನ ಎದುರಿಸುವ ಸಮಸ್ಯೆಗಳನ್ನು ಖುದ್ದಾಗಿ ಗಮನಿಸಿದರು.

ಈ ವೇಳೆ ಹೆಬ್ಬಾಳ ಮಾರ್ಗದ ಬಸ್‌ನಲ್ಲಿ ಸಚಿವರಿಗೆ ಅಚ್ಚರಿಯ ಅನುಭವ ಎದುರಾಯಿತು. ಟಿಕೆಟ್ ಪಡೆಯಲು ಅವರು ₹100 ಮುಖಬೆಲೆಯ ನೋಟು ನೀಡಿದಾಗ, ಅವರನ್ನು ಗುರುತಿಸದ ಕಂಡಕ್ಟರ್ ತನ್ನ ಬಳಿ ಚಿಲ್ಲರೆ ಇಲ್ಲ ಎಂದು ಹೇಳಿ ಬಸ್‌ನಿಂದ ಕೆಳಗೆ ಇಳಿಯುವಂತೆ ಸೂಚಿಸಿದ್ದಾನೆ. ಸಚಿವರು ಯಾವುದೇ ವಾಗ್ವಾದ ನಡೆಸದೆ ಬಸ್‌ನಿಂದ ಇಳಿದು, ಬಳಿಕ ಚಿಲ್ಲರೆ ಹಣ ಹೊಂದಿಸಿಕೊಂಡು ಮತ್ತೊಂದು ಬಸ್‌ನಲ್ಲಿ ಪ್ರಯಾಣ ಮುಂದುವರಿಸಿದರು. ಈ ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಪರಿಶೀಲನೆ ವೇಳೆ ಮತ್ತೊಂದು ಗಂಭೀರ ಲೋಪವೂ ಸಚಿವರ ಗಮನಕ್ಕೆ ಬಂತು. ಫನ್ ವರ್ಲ್ಡ್ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರು ಕೈ ತೋರಿಸಿದರೂ ಬಸ್ ನಿಲ್ಲಿಸದೇ ಚಾಲಕ ಮುಂದಕ್ಕೆ ಚಲಿಸಿದ್ದನ್ನು ಅವರು ಖುದ್ದಾಗಿ ವೀಕ್ಷಿಸಿದರು. ಪ್ರಯಾಣಿಕರಿಗೆ ಆಗಿರುವ ತೊಂದರೆಯನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು ಸಂಬಂಧಿಸಿದ ಚಾಲಕ ಮತ್ತು ನಿರ್ವಾಹಕರ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರ ಆದೇಶದಂತೆ ಸಂಬಂಧಪಟ್ಟ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವುದು ಸಾರಿಗೆ ಇಲಾಖೆಯ ಮೊದಲ ಆದ್ಯತೆಯಾಗಿದ್ದು, ನಿರ್ಲಕ್ಷ್ಯ ತೋರಿಸುವ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಮುಂದುವರಿಯಲಿದೆ ಎಂಬ ಸ್ಪಷ್ಟ ಸಂದೇಶವನ್ನು ಬೈರತಿ ಸುರೇಶ್ ನೀಡಿದ್ದಾರೆ.

Continue Reading

ಬೆಂಗಳೂರು

ಬೇಡ ಬ್ರೋ: ಡ್ರಗ್ಸ್ ವಿರುದ್ಧ MLA ಎಸ್.ಟಿ. ಸೋಮಶೇಖರ್ ಖಡಕ್ ಎಚ್ಚರಿಕೆ; ಯುವಕರಿಗೆ ಮಹತ್ವದ ಸಂದೇಶ

Published

on

ಬೆಂಗಳೂರು: ‘ಬೇಡ ಬ್ರೋ’… ಇದೇ ಘೋಷಣೆಯೊಂದಿಗೆ ಬೆಂಗಳೂರು ಪಶ್ಚಿಮ ವಿಭಾಗ ಪೊಲೀಸ್ ವತಿಯಿಂದ ಗ್ಲೋಬಲ್ ವಿಲೇಜ್‌ನಲ್ಲಿ ಡ್ರಗ್ಸ್ ವಿರೋಧಿ ಬೃಹತ್ ಜಾಗೃತಿ ಅಭಿಯಾನ ನಡೆಯಿತು. ಯುವಜನಾಂಗವನ್ನು ಮಾದಕ ವಸ್ತುಗಳ ವ್ಯಸನದಿಂದ ದೂರವಿಡುವ ಉದ್ದೇಶದಿಂದ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ವೈದ್ಯರು, ಪೊಲೀಸ್ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವೈದ್ಯೆ ಡಾ. ಮಾತಂಗಿ, ದೇಶದಲ್ಲಿ ಮಾದಕ ವ್ಯಸನ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿದ್ದು, ವಿಶೇಷವಾಗಿ 18ರಿಂದ 25 ವರ್ಷದೊಳಗಿನ ಯುವಕರು ಡ್ರಗ್ಸ್ ಜಾಲಕ್ಕೆ ಹೆಚ್ಚು ಬಲಿಯಾಗುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು. ಗಾಂಜಾ, ಅಪೀಮು ಸೇರಿದಂತೆ ವಿವಿಧ ಮಾದಕ ವಸ್ತುಗಳು ಯುವಕರ ಶಿಕ್ಷಣ, ಆರೋಗ್ಯ ಮತ್ತು ಭವಿಷ್ಯವನ್ನು ಹಾಳು ಮಾಡುತ್ತಿವೆ. ಸಮಾಜದಲ್ಲಿ ಪ್ರಭಾವಿ ವ್ಯಕ್ತಿಗಳು ಉತ್ತಮ ಮೌಲ್ಯಗಳನ್ನು ಬೆಳೆಸುವ ಸಂದೇಶ ನೀಡಬೇಕು ಎಂದು ಅವರು ಕರೆ ನೀಡಿದರು.

ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಡ್ರಗ್ಸ್ ಹಾವಳಿ ನಿಯಂತ್ರಣಕ್ಕೆ ಸರ್ಕಾರ, ಶಿಕ್ಷಣ ಸಂಸ್ಥೆಗಳು, ಪೊಲೀಸರು ಹಾಗೂ ಸಮಾಜ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದರು. ಕೆಲವು ಕಾಲೇಜುಗಳಲ್ಲಿ ಡ್ರಗ್ಸ್ ಜಾಲದ ಬಗ್ಗೆ ಆತಂಕಕಾರಿ ಮಾಹಿತಿ ದೊರೆಯುತ್ತಿದ್ದು, ಯುವಕರನ್ನು ರಕ್ಷಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದು ಹೇಳಿದರು. ಡ್ರಗ್ಸ್ ವಿರುದ್ಧದ ‘ಬೇಡ ಬ್ರೋ’ ಅಭಿಯಾನ ಸಮಾಜದಲ್ಲಿ ದೊಡ್ಡ ಜಾಗೃತಿ ಮೂಡಿಸಬೇಕು ಎಂದು ಆಶಿಸಿದರು.

ನೈರುತ್ಯ ವಿಭಾಗದ ಡಿಸಿಪಿ ಅನಿತಾ ಬಿ. ಹದ್ದಣ್ಣ ಮಾತನಾಡಿ, ಇಂದಿನ ಕಾಲದಲ್ಲಿ ಬಂದೂಕಿಗಿಂತ ಡ್ರಗ್ಸ್ ಸಮಾಜವನ್ನು ಹೆಚ್ಚು ಅಪಾಯಕ್ಕೆ ತಳ್ಳುತ್ತಿದೆ ಎಂದು ಎಚ್ಚರಿಸಿದರು. ಎಸಿಪಿ ಸತ್ಯವತಿ ಕೂಡ ಕ್ಷಣಿಕ ಸುಖಕ್ಕಾಗಿ ವ್ಯಸನದ ದಾರಿ ಹಿಡಿಯಬಾರದು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದ ಅಂತ್ಯದಲ್ಲಿ ವಿದ್ಯಾರ್ಥಿಗಳು “ಡ್ರಗ್ಸ್‌ಗೆ ಬೇಡ… ಬದುಕಿಗೆ ಹೌದು” ಎಂಬ ಸಂದೇಶದೊಂದಿಗೆ ಮಾದಕ ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿದರು.

Continue Reading

ರಾಜ್ಯ

Cabinet Expansion: ಸಚಿವ ಸ್ಥಾನಕ್ಕಾಗಿ ಕಾಂಗ್ರೆಸ್ ನಾಯಕರ ಪೈಪೋಟಿ; ಹೈಕಮಾಂಡ್ ಅಂತಿಮ ತೀರ್ಮಾನ ಯಾವಾಗ?

Published

on

ಬೆಂಗಳೂರು: Cabinet Expansion ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕುರಿತ ಚಟುವಟಿಕೆಗಳು ಮತ್ತೆ ವೇಗ ಪಡೆದಿದ್ದು, ಶೀಘ್ರದಲ್ಲೇ ರಾಜ್ಯದ ಪ್ರಮುಖ ನಾಯಕರಿಗೆ ದೆಹಲಿ ಬುಲಾವ್ ಬರಬಹುದಾದ ಸಾಧ್ಯತೆ ಇದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಪ್ರಸ್ತುತ ರಾಜ್ಯ ಸಚಿವ ಸಂಪುಟದಲ್ಲಿ 20 ಸಚಿವ ಸ್ಥಾನಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡುವ ಕುರಿತು ಕಾಂಗ್ರೆಸ್ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ. ರಾಜ್ಯ ನಾಯಕರು ತಮ್ಮ ಬೆಂಬಲಿಗ ಶಾಸಕರ ಪಟ್ಟಿಯೊಂದಿಗೆ ದೆಹಲಿಗೆ ತೆರಳಿ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ. 2028ರ ವಿಧಾನಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾದೇಶಿಕ, ಜಾತಿ ಹಾಗೂ ರಾಜಕೀಯ ಸಮೀಕರಣಗಳ ಆಧಾರದ ಮೇಲೆ ಸಚಿವರ ಆಯ್ಕೆ ನಡೆಯುವ ಸಾಧ್ಯತೆ ಇದೆ.

ಜುಲೈ 14ರಿಂದ ಆಷಾಢ ಮಾಸ ಆರಂಭವಾಗಲಿರುವ ಹಿನ್ನೆಲೆ, ಅದರ ಮೊದಲು ಸಂಪುಟ ವಿಸ್ತರಣೆ ನಡೆಯಬಹುದೇ ಎಂಬ ಕುತೂಹಲ ರಾಜಕೀಯ ವಲಯದಲ್ಲಿ ಹೆಚ್ಚಾಗಿದೆ. ಆದರೆ ಈ ಕುರಿತು ಯಾವುದೇ ಅಧಿಕೃತ ವೇಳಾಪಟ್ಟಿ ಪ್ರಕಟವಾಗಿಲ್ಲ.

ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಂಪುಟ ವಿಸ್ತರಣೆ ಶೀಘ್ರದಲ್ಲೇ ನಡೆಯಲಿದೆ ಎಂದು ಹೇಳಿದ್ದು, ಬರ ಹಾಗೂ ಪ್ರವಾಹದಂತಹ ಸನ್ನಿವೇಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಪೂರ್ಣ ಪ್ರಮಾಣದ ಸಚಿವ ಸಂಪುಟ ಅಗತ್ಯ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇತ್ತ ಹಲವು ಕಾಂಗ್ರೆಸ್ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ಮುಂದುವರಿಸಿದ್ದಾರೆ. ಅಜಯ್ ಸಿಂಗ್, ಸಿ. ಪುಟ್ಟರಂಗಶೆಟ್ಟಿ, ಎ.ಬಿ. ರಮೇಶ್ ಬಂಡಿಸಿದ್ದೇಗೌಡ ಸೇರಿದಂತೆ ಹಲವು ನಾಯಕರು ತಮ್ಮ ಹಕ್ಕು ಮಂಡಿಸುತ್ತಿದ್ದಾರೆ. ಅಂತಿಮವಾಗಿ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ನಿರ್ಧಾರದತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.

Continue Reading

Trending