Connect with us

ಬೆಂಗಳೂರು

ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ – ನಷ್ಟದ ಲೆಕ್ಕಾಚಾರವೇನು? – BJP JDS padayatra

Published

on

ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆ ರಾಜಕೀಯ ಆರಂಭವಾಗಿದೆ. ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ವಿಚಾರವಾಗಿ ಬಿಜೆಪಿ – ಜೆಡಿಎಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಂಗಳೂರು- ಮೈಸೂರು ವರೆಗೆ ಪಾದಯಾತ್ರೆಗೆ ಉದ್ದೇಶಿಸಿದೆ. ಆ ಮೂಲಕ ರಾಜ್ಯ ರಾಜಕೀಯದಲ್ಲಿ ಮತ್ತೊಂದು ಸುತ್ತಿನ ಪಾದಯಾತ್ರೆ ನಡೆಯಲಿದೆ.

ಅಷ್ಟಕ್ಕೂ ಕರ್ನಾಟಕ ರಾಜಕೀಯದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈವರೆಗೆ ಕರುನಾಡು ಕಂಡಿರುವ ಪ್ರಮುಖ ಪಾದಯಾತ್ರೆ ಪೊಲಿಟಿಕ್ಸ್ ಮತ್ತು ಅದರಿಂದ ಪಕ್ಷಗಳು ರಾಜಕೀಯ ಲಾಭ ನಷ್ಟಕ್ಕೆ ಸಾಕ್ಷಿಯಾಗಿದೆ. ದೋಸ್ತಿಗಳು ಆ.3 ರಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಏಳು ದಿನಗಳ ಪಾದಯಾತ್ರೆಗೆ ನಿರ್ಧರಿಸಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರದ ವಿರುದ್ಧದ ಹಗರಣಗಳ ಆರೋಪವನ್ನು ಜನರ ಮುಂದೆ ಕೊಂಡೊಯ್ಯಲು ದೋಸ್ತಿಗಳು ಮುಂದಾಗಿದ್ದಾರೆ.

ರಾಜ್ಯ ರಾಜಕೀಯ ಇತಿಹಾಸದಲ್ಲಿ ಪಾದಯಾತ್ರೆ ಪೊಲಿಟಿಕ್ಸ್ ಇದೇ ಮೊದಲಲ್ಲ. ಈ ಮುಂಚೆನೂ ಕೆಲ ಪ್ರಮುಖ ಪಾದಯಾತ್ರೆಗಳಿಗೆ ರಾಜ್ಯ ಸಾಕ್ಷಿಯಾಗಿದೆ. ಆ ಮೂಲಕ ಪಾದಯಾತ್ರೆ ನಡೆಸಿದ ಪಕ್ಷಗಳಿಗೆ ಚುನಾವಣೆಗಳಲ್ಲಿ ರಾಜಕೀಯ ಲಾಭವನ್ನೂ ಒದಗಿಸಿಕೊಟ್ಟಿದೆ. ರಾಜ್ಯದಲ್ಲಿ ನಡೆದ ನಿರ್ಣಾಯಕ ಪಾದಯಾತ್ರೆ ಮತ್ತ ಅದರ ಲಾಭ ನಷ್ಟ ಲೆಕ್ಕಾಚಾರದ ಹಿನ್ನೋಟ ಇಲ್ಲಿದೆ.

ದೇವೇಗೌಡರ ಪಾದಯಾತ್ರೆ ಪೊಲಿಟಿಕ್ಸ್: ಹೆಚ್.ಡಿ. ದೇವೇಗೌಡರ 2001ರಲ್ಲಿ ಅಂದಿನ ಎಸ್.ಎಂ. ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರದ ವಿರುದ್ಧ ತೊಡೆತಟ್ಟಿ ಪಾದಯಾತ್ರೆಯ ಹೋರಾಟಕ್ಕೆ ಇಳಿದಿದ್ದರು. ನೀರಾ ತೆಗೆವ ವಿವಾದಲ್ಲಿ ಇಬ್ಬರು ರೈತರು ಪೊಲೀಸರು ಹಾರಿಸಿದ್ದ ಗುಂಡಿಗೆ ಬಲಿಯಾಗಿದ್ದರು. ಆ ವೇಳೆ ತೆಂಗಿಗೆ ನುಸಿರೋಗ ಹೆಚ್ಚಿದ್ದರಿಂದ ನೀರಾ ತೆಗೆಯುವ ವಿಚಾರ ಮುನ್ನೆಲೆಗೆ ಬಂದಿತ್ತು. ಇದೇ ವಿಚಾರವಾಗಿ ನಡೆದ ರೈತರ ಹೋರಾಟದ ಮೇಲೆ ಚನ್ನಪಟ್ಟಣದ ವಿಠಲೇನಹಳ್ಳಿಯಲ್ಲಿ ಗೋಲಿಬಾರ್‌ ನಡೆದು, ಇಬ್ಬರು ರೈತರು ಮೃತಪಟ್ಟಿದ್ದರು.

ಈ ಸನ್ನಿವೇಶವನ್ನು ಬುದ್ದಿವಂತಿಕೆಯಿಂದ ಬಳಸಿಕೊಂಡ ದೊಡ್ಡಗೌಡರು, ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಎಸ್‌.ಎಂ. ಕೃಷ್ಣ ಸರಕಾರದ ವಿರುದ್ಧ ಪಾದಯಾತ್ರೆ ಸಂಘಟಿಸಿ ಅದರ ಅಲೆಯಲ್ಲಿ ಚುನಾವಣೆ ಗೆದ್ದು ಬಂದಿದ್ದರು. ಚನ್ನಪಟ್ಟಣ ತಾಲೂಕಿನ ವಿಠಲೇನಹಳ್ಳಿಯಿಂದ ಬೆಂಗಳೂರಿನ ಎಂ.ಜಿ. ರಸ್ತೆಯಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ವರೆಗೆ ದೇವೇಗೌಡರು 2001ರ ಅ.28ರಿಂದ ನ.1ರ ವರೆಗೆ ಪಾದಯಾತ್ರೆ ಕೈಗೊಂಡಿದ್ದರು. ಒಟ್ಟು ಐದು ದಿನಗಳ ಕಾಲ ಸುಮಾರು 80 ಕಿ.ಮೀ. ಕ್ರಮಿಸಿ ಪಾದಯಾತ್ರೆ ನಡೆಸಿ, ಅಂದಿನ ಕಾಂಗ್ರೆಸ್ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದರು.

ಇನ್ನು 2013ರಲ್ಲಿ ಫೆ.12ರಂದು ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಜೆಡಿಎಸ್‌ ವರಿಷ್ಠ ದೇವೇಗೌಡರು ಬೆಂಗಳೂರು ನಗರದಲ್ಲಿ ಪಾದಯಾತ್ರೆ ಕೈಗೊಂಡಿದ್ದರು. ಬನ್ನಪ್ಪ ಪಾರ್ಕ್ ನಿಂದ ಫ್ರೀಡಂ ಪಾರ್ಕ್ ವರೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಮುಂದಿಟ್ಟುಕೊಂಡು ದೊಡ್ಡಗೌಡರು ನಗರದಲ್ಲಿ ಪಾದಯಾತ್ರೆ ನಡೆಸಿದ್ದರು.

ಜೆಡಿಎಸ್​ಗೆ ಲಾಭ ತಂದು ಕೊಟ್ಟ ಪಾದಯಾತ್ರೆ: ದೇವೇಗೌಡರು ಕಾಂಗ್ರೆಸ್ ಸರ್ಕಾರದ ಗೋಲಿಬಾರ್ ವಿರುದ್ಧ ನಡೆಸಿದ ಪಾದಯಾತ್ರೆ ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್​ಗೆ ಭರ್ಜರಿ ರಾಜಕೀಯ ಲಾಭವನ್ನು ಕೊಟ್ಟಿತು. 2004ರಲ್ಲಿ ನಡೆದ ಚುನಾವಣೆಯಲ್ಲಿ ಜೆಡಿಎಸ್ ಹಳೆ ಮೈಸೂರು ಭಾಗದ ಕ್ಷೇತ್ರಗಳಲ್ಲಿ ಪಾರುಪತ್ಯ ಸಾಧಿಸಿತ್ತು. ಎಸ್.ಎಂ. ಕೃಷ್ಣ ಸರ್ಕಾರದ ವಿರುದ್ಧದ ಆಡಳಿತ ವಿರೋಧಿ‌ ಅಲೆಯ ಜೊತೆಗೆ ದೊಡ್ಡಗೌಡರು ನಡೆಸಿದ ಪಾದಯಾತ್ರೆ ಹೋರಾಟವೂ ಜೆಡಿಎಸ್​ಗೆ ಭಾರೀ ಲಾಭ ತಂದು ಕೊಟ್ಟಿತು. 2004 ಚುನಾವಣೆಯಲ್ಲಿ ಜೆಡಿಎಸ್ ಪಕ್ಷ 58 ಸ್ಥಾನಗಳಲ್ಲಿ ಗೆದ್ದು ಬೀಗಿತು. ಅದರಲ್ಲೂ ಹಳೆ ಮೈಸೂರು ಭಾಗದಲ್ಲಿ 37 ಸ್ಥಾನಗಳನ್ನು ಗೆದ್ದು ಪಾದಯಾತ್ರೆ ಪೊಲಿಟಿಕ್ಸ್ ಶಕ್ತಿಯನ್ನು ತೋರಿಸಿಕೊಟ್ಟಿತು.

1999ರಲ್ಲಿ ಹಳೆ ಮೈಸೂರು ಭಾಗದಲ್ಲಿ 3 ಸ್ಥಾನ ಗೆದ್ದಿದ್ದ ಜೆಡಿಎಸ್ 2004ರಲ್ಲಿ 37 ಸ್ಥಾನ ಗೆದ್ದು ಬೀಗಿತು. 1999 ಚುನಾವಣೆಯಲ್ಲಿ 11.45% ರಷ್ಟು ಇದ್ದ ಜೆಡಿಎಸ್​ನ ಮತ ಪ್ರಮಾಣ 2004 ಚುನಾವಣೆಯಲ್ಲಿ 21.10%ಗೆ ಏರಿಕೆ ಕಂಡಿತ್ತು. ಇದರಿಂದ ಪಕ್ಷಕ್ಕೆ ಮೈತ್ರಿ ಸರ್ಕಾರ ನಡೆಸಲು ಸಾಧ್ಯವಾಯಿತು. ಅದೇ ರೀತಿ 2013ರಲ್ಲಿ ಕುಡಿಯುವ ನೀರು ಸಂಬಂಧ ಬೆಂಗಳೂರಲ್ಲಿ ಮಾಡಿದ ಪಾದಯಾತ್ರೆಯಿಂದಲೂ ಜೆಡಿಎಸ್​ಗೆ ಪರೋಕ್ಷವಾಗಿ ಪಕ್ಷ ಸಂಘಟನೆಗೆ ಬಲ ನೀಡಿತು. 2013 ಚುನಾವಣೆಯಲ್ಲಿ ಜೆಡಿಎಸ್ ಬೆಂಗಳೂರು ನಗದರಲ್ಲಿ ಮೊದಲ ಬಾರಿಗೆ 3 ಸ್ಥಾನವನ್ನು ಗೆಲ್ಲುವಂತಾಯಿತು.

ಎಸ್.ಎಂ. ಕೃಷ್ಣರಿಂದ ಕಾವೇರಿ ಪಾದಯಾತ್ರೆ: 2002ರಲ್ಲಿ ಸಿಎಂ ಆಗಿದ್ದ ಎಸ್.ಎಂ. ಕೃಷ್ಣ ಪಾದಯಾತ್ರೆಯ ಮೊರೆ ಹೋಗಿದ್ದರು. ತಮಿಳುನಾಡಿಗೆ ನೀರು ಹಂಚಿಕೆ ವಿಚಾರವಾಗಿ ಎಸ್.ಎಂ. ಕೃಷ್ಣ ಪಾದಯಾತ್ರೆ ಕೈಗೊಂಡು ಕಾವೇರಿ ಪ್ರಾಂತ್ಯದ ಜನರ ಮನಗೆಲ್ಲುವ ಯತ್ನ ಮಾಡಿದ್ದರು. ಈ ಸಂದರ್ಭದಲ್ಲಿ ನೀರು ಹಂಚಿಕೆ ವಿಚಾರ ಸುಪ್ರೀಂ ಕೋರ್ಟ್‌ ಮುಂದೆ ಇದ್ದಿದ್ದರಿಂದ ಈ ಪಾದಯಾತ್ರೆಗೆ ಭಾರಿ ಆಕ್ಷೇಪ ವ್ಯಕ್ತಪಡಿಸಿತ್ತು. ಎಸ್.ಎಂ. ಕೃಷ್ಣ ಅವರು ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ 2002 ಅ.7ರಿಂದ ಅ.11 ರವರೆಗೆ ಆರು ದಿನಗಳ ಪಾದಯಾತ್ರೆ ಕೈಗೊಂಡಿದ್ದರು. ಬೆಂಗಳೂರಿನ ರಾಜರಾ ಜೇಶ್ವರಿ ನಗರದಿಂದ ಮಂಡ್ಯದ ವರೆಗೆ 100 ಕಿ.ಮೀ. ದೂರ ಪಾದಯಾತ್ರೆ ನಡೆಸಿದ್ದರು. ಆ ಮೂಲಕ ರಾಜಕೀಯ ಲಾಭದ ಲೆಕ್ಕಾಚಾರ ಹಾಕಿದ್ದರು. ಆದರೆ, 2004ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​ಗೆ ಇದರಿಂದ ಹೆಚ್ಚಿನ ರಾಜಕೀಯ ಲಾಭ ಲಭಿಸಲಿಲ್ಲ. ಬಲವಾದ ಆಡಳಿತ ವಿರೋಧಿ ಅಲೆಗೆ ಕಾಂಗ್ರೆಸ್ ಆ ಚುನಾವಣೆಯಲ್ಲಿ ಸೋಲು ಕಂಡಿತ್ತು.

ಸಿದ್ದರಾಮಯ್ಯರ ಬಳ್ಳಾರಿ ಪಾದಯಾತ್ರೆ: ಬಳ್ಳಾರಿಯಲ್ಲಿ ಬಿಜೆಪಿಯ ರೆಡ್ಡಿ ಹಾಗೂ ಶ್ರೀರಾಮುಲು ಪ್ರಾಬಲ್ಯದ ವಿರುದ್ದ ತೊಡೆತಟ್ಟಿ ಸಿದ್ದರಾಮಯ್ಯ ಅವರು ಬಳ್ಳಾರಿಗೆ ಪಾದಯಾತ್ರೆ ನಡೆಸಿದ್ದರು. ಈ ಐತಿಹಾಸಿಕ ಪಾದಯಾತ್ರೆ ಬಿಜೆಪಿಯನ್ನು ಅಧಿಕಾರದಿಂದ ಕೆಳಗಿಳಿಸಿತ್ತು. ಇದು 2013ರಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಮಾಡಿತು.

2010ರಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿತ್ತು. ಮುಖ್ಯಮಂತ್ರಿಯಾಗಿದ್ದವರು ಬಿ.ಎಸ್. ಯಡಿಯೂರಪ್ಪ. ಆಗ ಅಧಿಕಾರದಲ್ಲಿ ಪ್ರಾಬಲ್ಯ ಹೊಂದಿದ್ದು ಗಣಿಧಣಿಗಳಾದ ಜನಾರ್ದನ್ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು. ರಾಜ್ಯ ವಿಧಾನಸಭೆಯಲ್ಲಿ ‘ತಾಕತ್ತಿದ್ದರೆ ಬಳ್ಳಾರಿಗೆ ಬನ್ನಿ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ರೆಡ್ಡಿ ಬ್ರದರ್ಸ್ ಸವಾಲು ಹಾಕಿದ್ದರು. ವಿಧಾನಸಭೆಯಲ್ಲೇ ಬಳ್ಳಾರಿ ಗಣಿಧಣಿಗಳ ಸವಾಲು ಸ್ವೀಕರಿಸಿದ ಸಿದ್ದರಾಮಯ್ಯ ಭುಜತಟ್ಟಿ, ನಾವು ಬಳ್ಳಾರಿಗೆ ಬಂದೇ ಬರುತ್ತೇವೆ. ನಡೆದುಕೊಂಡೇ ಬರುತ್ತೇವೆ. ತಾಕತ್ತಿದ್ದರೆ ತಡೆಯಿರಿ ಎಂದು ಪ್ರತಿ ಸವಾಲು ಹಾಕಿದ್ದರು. ಆಗ ಹುಟ್ಟಿದ್ದೇ ಬಳ್ಳಾರಿ ಪಾದಯಾತ್ರೆ. 2010ರ ಜುಲೈ 25 ರಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ‘ಬಳ್ಳಾರಿ ಚಲೋ’ ಪಾದಯಾತ್ರೆ ಆರಂಭವಾಯಿತು. ಬೆಂಗಳೂರಿನಿಂದ ಬಳ್ಳಾರಿಗೆ ಹೊರಟ ಪಾದಯಾತ್ರೆ ಸಮಾರೋಪ ಆಗಿದ್ದು ಆಗಸ್ಟ್ 8 ರಂದು. ಅಂದು ಬಳ್ಳಾರಿಯಲ್ಲಿ 2 ಲಕ್ಷಕ್ಕೂ ಹೆಚ್ಚು ಜನ ಸೇರಿಸಿ ಬೃಹತ್ ಸಮಾವೇಶದ ಮೂಲಕ ಕಾಂಗ್ರೆಸ್ ನಾಯಕರು ಗಣಿಧಣಿಗಳು ಹಾಗೂ ಬಿಜೆಪಿ ಸರಕಾರದ ವಿರುದ್ಧ ಅಬ್ಬರಿಸಿದ್ದರು.

ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ: 2013ರಲ್ಲಿ ಡಾ.ಜಿ. ಪರಮೇಶ್ವರ್ ನೇತೃತ್ವದಲ್ಲಿ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಎಂಬ ಪಾದಯಾತ್ರೆ ನಡೆಸಿದ್ದರು. ಕೃಷ್ಣಾದ ಎ ಮತ್ತು ಬಿ ಸ್ಕೀಮ್‌ನಡಿ ಪೂರ್ಣ ಪ್ರಮಾಣದ ನೀರು ಬಳಸಿಕೊಳ್ಳಲು ಸರಕಾರ ವೈಫಲ್ಯ ಹಾಗೂ ನೀರಾವರಿ ಯೋಜನೆಗೆ ಅನುಷ್ಠಾನದಲ್ಲಿನ ವೈಫಲ್ಯ ವಿರೋಧಿಸಿ ಚುನಾವಣಾ ಪೂರ್ವ ಜ.7 ರಿಂದ 14 ರವರೆಗೆ ಕಾಂಗ್ರೆಸ್ ನಡಿಗೆ – ಕೃಷ್ಣೆಯ ಕಡೆಗೆ ಎಂಬ ಯಾತ್ರೆ ಕೈಗೊಂಡಿತ್ತು. ಕೃಷ್ಣ ಯೋಜನೆಯಲ್ಲಿ ಅಗತ್ಯ ಕಾಮಗಾರಿ ಕೈಗೆತ್ತಿಕೊಳ್ಳದೇ ಇರುವುದರಿಂದ 259 ಟಿಎಂಸಿ ನೀರು ಆಂಧ್ರಕ್ಕೆ ಹೋಗುತ್ತಿದೆ. ಅಲ್ಲಿನ ನೀರಾವರಿ ಯೋಜನೆಗೆ 17 ಸಾವಿರ ಕೋಟಿ ರೂ. ಖರ್ಚು ಮಾಡುವ ಭರವಸೆ ನೀಡಿದ್ದ ಬಿಜೆಪಿ, ಕೇವಲ 500 ಕೋಟಿ ರೂ. ನೀಡಿದೆ ಎಂಬ ಪ್ರಮುಖ ಅಜೆಂಡಾದೊಂದಿಗೆ ಪಾದಯಾತ್ರೆ ನಡೆಸಲಾಗಿತ್ತು.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪ್ರತಿ ಬಜೆಟ್‌ನಲ್ಲಿ ಇದಕ್ಕೆ 10 ಸಾವಿರ ಕೋಟಿ ರೂ. ಮೀಸಲಿಡಲಾಗುವುದೆಂಬ ಭರವಸೆಯೊಂದಿಗೆ ಪಾದಯಾತ್ರೆ ನಡೆಸಿತ್ತು. ಹೊಸಪೇಟೆಯಿಂದ ಆರಂಭಗೊಂಡು ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಕೊಪ್ಪಳದ ಮಾರ್ಗವಾಗಿ ಕೂಡಲಸಂಗಮದಲ್ಲಿ ಸಮಾರೋಪಗೊಂಡು ಸುಮಾರು 140 ಕಿ.ಮೀ ಪಾದಯಾತ್ರೆ ನಡೆಸಲಾಯಿತು.

ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ: ಮೇಕೆದಾಟು ಪಾದಯಾತ್ರೆ. 2022ರಂದು ಕಾಂಗ್ರೆಸ್ ಪಕ್ಷ ಮೇಕೆದಾಟು ಯೋಜನೆ ಜಾರಿಗಾಗಿ ಆಗ್ರಹಿಸಿ ಮಾಡಿದ ಪಾದಯಾತ್ರೆ. ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಮಾಡಿತ್ತು. ಮೇಕೆದಾಟು ಯೋಜನೆಯ ಶೀಘ್ರ ಅನುಷ್ಠಾನಕ್ಕೆ ಒತ್ತಾಯಿಸಿ ಜನವರಿ 9, 2022 ರಿಂದ ಆರಂಭವಾದ ಪಾದಯಾತ್ರೆ ಎರಡು ಹಂತಗಳಲ್ಲಿ ನಡೆಸಲಾಗಿತ್ತು. ಐದು ದಿನಗಳ ಕಾಲ ಪಾದಯಾತ್ರೆ ನಡೆಸಿ ಕೋವಿಡ್ ನಿಯಮಾವಳಿ ಹಿನ್ನೆಲೆ ನಿಲ್ಲಿಸಿದ್ದ ನಮ್ಮ ನೀರು, ನಮ್ಮ ಹಕ್ಕು ಪಾದಯಾತ್ರೆಯನ್ನು ಫೆ.27 ರಿಂದ ಮರು ಆರಂಭಿಸಿ ಮಾ.2, 2022ಕ್ಕೆ ಮುಕ್ತಾಯವಾಗಿತ್ತು. 165 ಕಿ.ಮೀ. ಕ್ರಮಿಸಿ 9 ದಿನಗಳ ಪಾದಯಾತ್ರೆ ನಡೆಸಲಾಗಿತ್ತು.

ಬೆಂಗಳೂರು ನಗರಕ್ಕೆ ನೀರು ಒದಗಿಸಬಹುದಾದ ಮೇಕೆದಾಟು ಯೋಜನೆ ಜಾರಿಗೆ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ವಿಳಂಬ ಮಾಡುತ್ತಿವೆ ಎನ್ನುವುದು ಕಾಂಗ್ರೆಸ್‌ನ ಪ್ರಧಾನ ಆರೋಪವಾಗಿತ್ತು. ಮೇಕೆದಾಟು ಪಾದಯಾತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ರಾಷ್ಟ್ರೀಯ ನಾಯಕರು ಸೇರಿ ಸಾವಿರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು. ಬೆಂಗಳೂರಿನ‌ ಬಸವನಗುಡಿಯಲ್ಲಿ ಸಮಾರೋಪಗೊಂಡಿದ್ದ ಮೇಕೆದಾಟು ಪಾದಯಾತ್ರೆ ರಾಜಕೀಯ ಲೆಕ್ಕಾಚಾರ ಹೊಂದಿತ್ತು.‌

ಪಾದಯಾತ್ರೆಯಿಂದ ಗದ್ದುಗೆ ಹಿಡಿದ ಕಾಂಗ್ರೆಸ್: ಬಳ್ಳಾರಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ನಡಿಗೆ ಕೃಷ್ಣೆ ಕಡೆಗೆ ಪಾದಯಾತ್ರೆ ಮೂಲಕ ಕಾಂಗ್ರೆಸ್ 2013ರ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿತ್ತು. ಸಿದ್ದರಾಮಯ್ಯ ಬಳ್ಳಾರಿ ಪಾದಯಾತ್ರೆ ಪರಿಣಾಮ 2013ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬಳ್ಳಾರಿ ಜಿಲ್ಲೆಯಲ್ಲಿ 8 ಕ್ಷೇತ್ರಗಳ ಪೈಕಿ 4ರಲ್ಲಿ ಚಿಗುರೊಡೆದಿತ್ತು. ಬಳಿಕ 2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 4 ರಿಂದ 6 ಸ್ಥಾನಗಳಿಗೆ ಏರಿಕೆ ಕಂಡಿತ್ತು. 2013ರ ಚುನಾವಣೆಯಲ್ಲಿ ಕಾಂಗ್ರೆಸ್ 122 ಬಹುಮತದ ಗೆಲುವು ಸಾಧಿಸಿತ್ತು.

ತನ್ನ ಮತ ಪ್ರಮಾಣವನ್ನು ಶೇ 36.76ಗೆ ಏರಿಕೆ ಮಾಡಿತ್ತು. ತಮ್ಮ ಪಾದಯಾತ್ರೆಗಳ ಮೂಲಕ ಕಾಂಗ್ರೆಸ್ 2013ರಲ್ಲಿ ಮುಂಬೈ ಕರ್ನಾಟಕ‌ ಭಾಗದಲ್ಲಿನ 56 ಸ್ಥಾನಗಳ ಪೈಕಿ 34 ಸ್ಥಾನ ಗೆದ್ದಿತ್ತು. ಕಲ್ಯಾಣ ಕರ್ನಾಟಕ ಭಾಗದಲ್ಲಿ 19 ಸ್ಥಾನದಲ್ಲಿ ಗೆದ್ದು ಬೀಗಿತ್ತು. ಅದೇ ರೀತಿ ಮಧ್ಯ ಕರ್ನಾಟಕ ಭಾಗದಲ್ಲಿ 32 ಸ್ಥಾನಗಳ ಪೈಕಿ 18 ಸೀಟು ಗೆದ್ದಿತ್ತು. ಆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 40 ಸ್ಥಾನಕ್ಕೆ ಕುಸಿತ ಕಂಡಿತು.

ಮೇಕೆದಾಟು ಪಾದಯಾತ್ರೆಯ ನೇತೃತ್ವ ವಹಿಸಿದ್ದ ಡಿಕೆಶಿಗೆ ಬೆಂಗಳೂರು ಸೇರಿದಂತೆ ರಾಮನಗರದ ಮಟ್ಟಿಗೆ 2023ರ ವಿಧಾನಸಭೆ ಚುನಾವಣೆಯಲ್ಲಿ ಉತ್ತಮ‌ ಫಲಿತಾಂಶ ನೀಡಿತ್ತು. ಮೇಕೆದಾಟು ಪಾದಯಾತ್ರೆ ಬಂದ ರಾಮನಗರ ಜಿಲ್ಲೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲು ಸಫಲವಾಗಿತ್ತು.‌

ದೇಶ

ಮಹಿಳೆಯರಿಗೆ ಫ್ರೀ ಸ್ಮಾರ್ಟ್ ಕಾರ್ಡ್, ಪುರುಷರಿಗೆ ಪೇಯ್ಡ್ ಕಾರ್ಡ್: ಸಾರಿಗೆ ಇಲಾಖೆಯ ಹೊಸ ಪ್ಲ್ಯಾನ್

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆ ಇನ್ನಷ್ಟು ತಂತ್ರಜ್ಞಾನ ಸ್ನೇಹಿಯಾಗಲು ಸಜ್ಜಾಗಿದೆ. ಮಹಿಳಾ ಪ್ರಯಾಣಿಕರಿಗೆ ಉಚಿತ ಬಸ್ ಪ್ರಯಾಣ ಸೌಲಭ್ಯವನ್ನು ವ್ಯವಸ್ಥಿತಗೊಳಿಸುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ಬರಲಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಯೋಜನೆಯ ಅನುಷ್ಠಾನಕ್ಕಾಗಿ ಸರ್ಕಾರ ವಿಶೇಷ ಉದ್ದೇಶಿತ ವಾಹಕ (SPV) ರಚಿಸಲು ಮುಂದಾಗಿದ್ದು, ಇಡೀ ಪ್ರಕ್ರಿಯೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವ (PPP) ಮಾದರಿಯಲ್ಲಿ ಜಾರಿಗೆ ತರಲು ತೀರ್ಮಾನಿಸಿದೆ. ಇದಕ್ಕಾಗಿ ಜಾಗತಿಕ ಟೆಂಡರ್ ಆಹ್ವಾನಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದ್ದು, ವಹಿವಾಟು ಸಲಹೆಗಾರರ ಸಮಿತಿಯ ವರದಿ ಜೂನ್ ಅಂತ್ಯದೊಳಗೆ ಸಲ್ಲಿಕೆಯಾಗುವ ನಿರೀಕ್ಷೆಯಿದೆ.

ರಾಜ್ಯದಲ್ಲಿ ಸುಮಾರು 2.5 ರಿಂದ 3 ಕೋಟಿ ಮಹಿಳೆಯರಿಗೆ ಉಚಿತ ಸ್ಮಾರ್ಟ್ ಕಾರ್ಡ್ ವಿತರಿಸುವ ಗುರಿ ಹೊಂದಲಾಗಿದೆ. ಪ್ರಸ್ತುತ ಮಹಿಳೆಯರು ಆಧಾರ್ ಕಾರ್ಡ್ ಅಥವಾ ಮತದಾರರ ಗುರುತಿನ ಚೀಟಿ ತೋರಿಸಿ ಉಚಿತ ಪ್ರಯಾಣ ಪಡೆಯುತ್ತಿದ್ದಾರೆ. ಆದರೆ, ಪ್ರಯಾಣಿಕರ ಗುರುತಿನ ಪರಿಶೀಲನೆ ಸುಲಭಗೊಳಿಸಲು, ನಿಖರ ದತ್ತಾಂಶ ಸಂಗ್ರಹಿಸಲು ಹಾಗೂ ದುರುಪಯೋಗ ತಡೆಯಲು ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಇನ್ನು ಪುರುಷ ಪ್ರಯಾಣಿಕರಿಗೆ ನಮ್ಮ ಮೆಟ್ರೋ ಕಾರ್ಡ್ ಮಾದರಿಯ ಪಾವತಿ ಆಧಾರಿತ ಸ್ಮಾರ್ಟ್ ಕಾರ್ಡ್ ನೀಡುವ ಯೋಜನೆಯೂ ಸರ್ಕಾರದ ಮುಂದಿದೆ.

ಇದರ ಜೊತೆಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಆಧುನೀಕರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಂತಹಂತವಾಗಿ 4,000ಕ್ಕೂ ಹೆಚ್ಚು ಹೊಸ ಎಲೆಕ್ಟ್ರಿಕ್ ಬಸ್‌ಗಳನ್ನು ಖರೀದಿಸಲು ನಿರ್ಧರಿಸಿದೆ. ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ನಿರ್ಮಾಣದತ್ತ ಇದು ಮಹತ್ವದ ಹೆಜ್ಜೆಯಾಗಿದೆ.

ಶಕ್ತಿ ಯೋಜನೆಯ ಫಲಾನುಭವಿಗಳಿಗೆ ಈ ಹೊಸ ವ್ಯವಸ್ಥೆ ಮತ್ತಷ್ಟು ಅನುಕೂಲವಾಗಲಿದ್ದು, ರಾಜ್ಯ ಸಾರಿಗೆ ವ್ಯವಸ್ಥೆಯಲ್ಲಿ ಡಿಜಿಟಲ್ ಕ್ರಾಂತಿಗೆ ದಾರಿ ಮಾಡಿಕೊಡುವ ನಿರೀಕ್ಷೆಯಿದೆ.

Continue Reading

ದೇಶ

ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಸಭೆ ಇಂದು: ಬಿಡದಿಯಲ್ಲಿ ಮಹತ್ವದ ಚರ್ಚೆ

Published

on

ರಾಮನಗರ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ಇಂದು ಸಂಜೆ 6.30ಕ್ಕೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ಈ ಶಾಸಕಾಂಗ ಸಭೆ ನಡೆಯುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಶಾಸಕರೊಂದಿಗೆ ಸಮಾಲೋಚನೆ ನಡೆಸಲು ಈ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಭಾಗವಹಿಸಲಿದ್ದು, ಚುನಾವಣಾ ತಂತ್ರಗಾರಿಕೆ ಮತ್ತು ಮತಗಳ ಸಮನ್ವಯ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತೂ ಸಭೆಯಲ್ಲಿ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಶಾಸಕಾಂಗ ಸಭೆಯಾಗಿರುವುದರಿಂದ ಪಕ್ಷದ ಒಳರಾಜಕೀಯ ಮತ್ತು ಭವಿಷ್ಯದ ಕಾರ್ಯತಂತ್ರದ ದೃಷ್ಟಿಯಿಂದ ಇದು ಮಹತ್ವ ಪಡೆದಿದೆ.

ಸಭೆ ಹಿನ್ನೆಲೆಯಲ್ಲಿ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶವನ್ನು ಸಂಜೆ ಬಳಿಕ ನಿರ್ಬಂಧಿಸಲಾಗಿದ್ದು, ಕಾಂಗ್ರೆಸ್ ಶಾಸಕರು ಮತ್ತು ಆಹ್ವಾನಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವ ಬೆಂಬಲವನ್ನು ಕ್ರೋಢೀಕರಿಸುವ ಉದ್ದೇಶದಿಂದ ಈ ಸಭೆ ನಡೆಸುತ್ತಿದ್ದು, ಸಭೆಯ ಬಳಿಕ ಮಹತ್ವದ ರಾಜಕೀಯ ಸಂದೇಶ ಹೊರಬೀಳುವ ನಿರೀಕ್ಷೆಯಿದೆ.

Continue Reading

ದೇಶ

ಗ್ಯಾರಂಟಿ ಯೋಜನೆಗಳಿಗೆ ಸರ್ಜರಿ? ಮರು ಅರ್ಜಿ ಕಡ್ಡಾಯ ಸಾಧ್ಯತೆ; ಸರ್ಕಾರದ 100 ಕೋಟಿ ರೂ. ಉಳಿತಾಯ ಪ್ಲ್ಯಾನ್

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸಿದ್ಧತೆಗಳು ಜೋರಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾಗುವ ಸಾಧ್ಯತೆ ಇದೆ. ಯೋಜನೆಗಳ ದುರುಪಯೋಗ ತಡೆಯುವ ಜೊತೆಗೆ ಅನರ್ಹರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಸರ್ಕಾರ ವರ್ಷಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯ ಮಾಡುವ ಗುರಿ ಹೊಂದಿದೆ.

ಸರ್ಕಾರವು ವಿಶೇಷವಾಗಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಮುಂದಾಗಿದೆ. ಮೃತರ ಹೆಸರಿನಲ್ಲಿ ಹಣ ವರ್ಗಾವಣೆ ಆಗುತ್ತಿರುವ ಪ್ರಕರಣಗಳು, ಆದಾಯ ತೆರಿಗೆ (ಐಟಿ) ಹಾಗೂ ಜಿಎಸ್‌ಟಿ ಪಾವತಿದಾರರು ಯೋಜನೆಗಳ ಲಾಭ ಪಡೆಯುತ್ತಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪರಿಷ್ಕರಣೆಯ ಬಳಿಕ ಸುಮಾರು 3 ರಿಂದ 4 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡುವ ಸಾಧ್ಯತೆ ಇದೆ.

ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ನೆರವು ಪಡೆಯುತ್ತಿದ್ದು, ಸರ್ಕಾರ ತಿಂಗಳಿಗೆ ₹2,480 ಕೋಟಿ ಹಾಗೂ ವರ್ಷಕ್ಕೆ ₹29,760 ಕೋಟಿ ವೆಚ್ಚ ಮಾಡುತ್ತಿದೆ. ಈ ಯೋಜನೆಗೆ ಏಪ್ರಿಲ್ ಅಂತ್ಯದವರೆಗೆ ಒಟ್ಟು ₹72,253 ಕೋಟಿ ಪಾವತಿಸಲಾಗಿದೆ.

ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಗ್ರಾಹಕರು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದು, ಇದರ ವೆಚ್ಚ ₹26,115 ಕೋಟಿಗೆ ತಲುಪಿದೆ. ಅನ್ನಭಾಗ್ಯ ಯೋಜನೆಗೆ ಇದುವರೆಗೆ ₹18,897 ಕೋಟಿ ವೆಚ್ಚವಾಗಿದ್ದರೆ, ಶಕ್ತಿ ಯೋಜನೆಯಡಿ ಮಹಿಳೆಯರು 757.62 ಕೋಟಿ ಉಚಿತ ಪ್ರಯಾಣ ಟಿಕೆಟ್‌ಗಳ ಪ್ರಯೋಜನ ಪಡೆದಿದ್ದು, ಇದರ ಮೌಲ್ಯ ₹19,890 ಕೋಟಿ ಎಂದು ಅಂದಾಜಿಸಲಾಗಿದೆ.

ಇನ್ನು ಯುವನಿಧಿ ಯೋಜನೆಯಡಿ 3.59 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪದವೀಧರರಿಗೆ ನೆರವು ನೀಡಲಾಗಿದ್ದು, ಈವರೆಗೆ ₹1,115 ಕೋಟಿ ಪಾವತಿಸಲಾಗಿದೆ.

ಒಟ್ಟಾರೆ, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ₹1,38,270.21 ಕೋಟಿ ವೆಚ್ಚ ಮಾಡಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಪರಿಷ್ಕರಣೆ ನಡೆಸಲು ಮುಂದಾಗಿದೆ.

Continue Reading

Trending