ಬೆಂಗಳೂರು
2025ಕ್ಕೆ ತುಮಕೂರು ಜಿಲ್ಲೆಗೆ ಎತ್ತಿನಹೊಳೆ ನೀರು: ಸಚಿವ ಪರಮೇಶ್ವರ್ – Yettinahole Project
ತುಮಕೂರು: “ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಪೂರ್ಣಗೊಂಡಿದ್ದು ಸೆ.8ರಂದು ಚಾಲನೆ ನೀಡಲಾಗುತ್ತಿದೆ” ಎಂದು ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಡಾ.ಜಿ.ಪರಮೇಶ್ವರ್ ತಿಳಿಸಿದರು.
ಜಿಲ್ಲಾಧಿಕಾರಿಯವರ ಕಾರ್ಯಾಲಯದಲ್ಲಿ ಬುಧವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ನೀರಿನ ಯಂತ್ರಗಳು ತುಕ್ಕು ಹಿಡಿದ ಹಿನ್ನೆಲೆಯಲ್ಲಿ ಸ್ಫೋಟಗೊಂಡಿದ್ದವು. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಾಯೋಗಿಕವಾಗಿ ಪರೀಕ್ಷೆ ನಡೆಸಿದ್ದು ಯಶಸ್ವಿಯಾಗಿದೆ. ವಾಣಿವಿಲಾಸ ಸಾಗರ ಅಣೆಕಟ್ಟೆಗೆ 1,500 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ಇದು ಆ ಭಾಗಕ್ಕೆ ಉಪಯೋಗವಾಗಲಿದೆ. ಮುಂದಿನ ವರ್ಷ ಅರಸೀಕೆರೆ, ತಿಪಟೂರು ಭಾಗದಲ್ಲಿನ ಕಾಮಗಾರಿ ಪೂರ್ಣಗೊಳ್ಳಲಿದ್ದು ತುಮಕೂರಿಗೆ ನೀರು ಬರಲಿದೆ” ಎಂದರು.
“ಪರಮಶಿವಯ್ಯನವರು ಹಾಸನ, ಚಿಕ್ಕಮಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಬಯಲುಸೀಮೆ ಪ್ರದೇಶಗಳಿಗೆ ಕುಡಿಯುವ ನೀರಿನ ಯೋಜನೆ ಮಾಡಬೇಕೆಂದು ಪ್ರಸ್ತಾಪ ಮಾಡಿದ್ದರು. ಇದಕ್ಕೆ ನೇತ್ರಾವತಿ ತಿರುವು ಎಂದು ಹೆಸರಿಟ್ಟಿದ್ದರು. ಇದಕ್ಕೆ ಮಂಗಳೂರಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿತ್ತು. ಯೋಜನೆ ಕೈ ಬಿಡುವ ಪರಿಸ್ಥಿತಿಯೂ ಬಂದಿತ್ತು. ಇದಾದ ಬಳಿಕ ನೀರಾವರಿ ತಜ್ಞರು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಮಳೆಯಾಗುವ ಪ್ರದೇಶವನ್ನು ಗುರುತಿಸಿದರು. ಎತ್ತಿನಹೊಳೆ, ಕಾಡುಮನೆಹೊಳೆ, ಹೊಂಗದಹಳ್ಳ, ಕೇದಿಹೊಳೆ ಇದೆಲ್ಲವೂ ಕ್ರೋಢೀಕೃತವಾಗಿ ಒಂದೆಡೆ ಬಂದರೆ 24 ಟಿಎಂಸಿ ನೀರು ಬರುತ್ತದೆ. ಈ ಯೋಜನೆಯ ಸಾಧಕ-ಬಾಧಕಗಳನ್ನು, ನೀರು ತೆಗೆದುಕೊಳ್ಳುವ ಸಾಧ್ಯ-ಅಸಾಧ್ಯತೆಯ ಕುರಿತು ಸರ್ಕಾರಕ್ಕೆ ವರದಿ ನೀಡಿದ್ದರು” ಎಂದು ವಿವರಿಸಿದರು.
“ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇದಕ್ಕೆ ಬೇಕಾದ ಹಣಕಾಸು, ತಾಂತ್ರಿಕತೆಯನ್ನು ಅಧ್ಯಯನ ನಡೆಸಿ, ₹12,912.36 ಕೋಟಿ ಹಣವನ್ನು ಬಜೆಟ್ನಲ್ಲಿ ಒದಗಿಸಿ, 17-2-2014ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಿದರು. ಯೋಜನೆಯ ಇವತ್ತಿನ ಮೊತ್ತ ₹23,251 ಕೋಟಿ ತಲುಪಿದೆ. ಈ ಯೋಜನೆಯು ಮುಂಬರುವ ಮಾರ್ಚ್ 2027ಕ್ಕೆ ಸಂಪೂರ್ಣಗೊಳ್ಳಲಿದೆ” ಎಂದು ಸಚಿವರು ಮಾಹಿತಿ ನೀಡಿದರು.
“ಎತ್ತಿನಹೊಳೆ ಯೋಜನೆಯ 24.01 ಟಿಎಂಸಿ ನೀರಿನಲ್ಲಿ ಜಿಲ್ಲೆಗೆ 5.470 ಟಿಎಂಸಿ ಹಂಚಿಕೆ ಮಾಡಲಾಗಿದೆ. 2.294 ಟಿಎಂಸಿ ಕುಡಿಯುವ ನೀರಿಗೆ, 3.446 ಸಣ್ಣ ನೀರಾವರಿ 113 ಕೆರೆಗಳ ಭರ್ತಿಗೆ ಅವಕಾಶವಿದೆ. ಒಟ್ಟು 3,117 (76 ಗುಂಟೆ) ಎಕರೆ ಜಾಗದಲ್ಲಿ 2022 ಎಕರೆ ಭೂಮಿಗೆ ಹಣ ಮಂಜೂರಾಗಿ ಭೂಸ್ವಾಧೀನವಾಗಿದೆ. ಶೇ 80ರಷ್ಟು ಭೂಸ್ವಾಧೀನಗೊಂಡಿದೆ. 1,200 ಕೋಟಿ ರೂ ಬಿಡುಗಡೆಯಾಗಿದೆ. 2025ಕ್ಕೆ ಜಿಲ್ಲೆಗೆ ಎತ್ತಿನಹೊಳೆ ಯೋಜನೆ ನೀರು ಹರಿಯಲಿದೆ. ವಸಂತನರಸಾಪುರ ಕೈಗಾರಿಕಾ ಪ್ರದೇಶಕ್ಕೆ 0.20 ಟಿಎಂಸಿ ಕುಡಿಯುವ ನೀರು ಪೂರೈಕೆಯಾಗಲಿದೆ” ಎಂದರು.
“1,200 ಕೋಟಿ ರೂ.ಗಳಲ್ಲಿ 448 ಕೋಟಿ ಹಂಚಿಕೆಯಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ 434 ಕೋಟಿ ಬಾಕಿ ಇದೆ. 397 ಕೋಟಿ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಂತೆ ಹಂತಹಂತವಾಗಿ ಹಣ ಮಂಜೂರು ಮಾಡಲಾಗುವುದು” ಎಂದು ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ 150 ಕಿ.ಮೀ. ಕೆನಾಲ್: “ಜಿಲ್ಲೆಯಲ್ಲಿ ಮುಖ್ಯ ಕೆನಾಲ್ 150 ಕಿ.ಮೀ ಇದೆ. ಇದರಲ್ಲಿ 102 ಕಿ.ಮೀ ಕೆನಾಲ್ ಕಾಮಗಾರಿ ಪೂರ್ಣಗೊಂಡಿದೆ. 121 ಕಿ.ಮೀ ಫೀಡರ್ ಕೆನಾಲ್ನಲ್ಲಿ 106 ಕಿ.ಮೀ. ಪೂರ್ಣಗೊಂಡಿದೆ. ಜುಲೈ 2025ರೊಳಗೆ ಕಾಮಗಾರಿ ಪೂರ್ಣಗೊಳ್ಳಲಿದೆ. ಜಿಲ್ಲೆಯಲ್ಲಿ ಸುಮಾರು 63 ಎಕರೆ ಅರಣ್ಯ ಭೂಮಿ ಈ ಯೋಜನೆಯಲ್ಲಿ ಬರುತ್ತದೆ” ಎಂದು ಸಚಿವರು ಇದೇ ವೇಳೆ ತಿಳಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆ: “ಮೊದಲನೆ ಯೋಜನೆ ಮಾಡಿದಾಗ ಕೊರಟಗೆರೆ ತಾಲೂಕಿನ ಬೈಲಗೊಂಡನಹಳ್ಳಿಯಲ್ಲಿ 2,500 ಸಾವಿರ ಎಕರೆ ಭೂಮಿ ಸೇರಿ ದೊಡ್ಡಬಳ್ಳಾಪುರ ತಾಲೂಕಿಗೆ ಸೇರಿದ 2500 ಭೂಮಿ ಇದೆ. ದೊಡ್ಡಬಳ್ಳಾಪುರ ಜಾಗವು ಅಲ್ಲಿನ ಭೂಮಿಯ ಮೌಲ್ಯಕ್ಕೆ ತೆಗೆದುಕೊಂಡರೆ, ತುಮಕೂರಿನಲ್ಲಿ 12 ಲಕ್ಷ ರೂ. ತೆಗೆದುಕೊಳ್ಳುತ್ತದೆ. ಉಪ ಮುಖ್ಯಮಂತ್ರಿಯಾಗಿದ್ದ ವೇಳೆ ನನ್ನನ್ನು ಸಚಿವ ಸಂಪುಟ ಉಪ ಸಮಿತಿ ಸದಸ್ಯನನ್ನಾಗಿ ಮಾಡಲಾಯಿತು. ತದನಂತರ ಬಂದ ಸರ್ಕಾರ ಯೋಜನೆಯನ್ನು ಅಲ್ಲಿಗೆ ಕೈಬಿಟ್ಟರು. ಸದ್ಯ ಬೈಲಗೊಂಡಲಹಳ್ಳಿಯಲ್ಲಿ ಯಾವುದೇ ರಿಸರ್ವ್ ಭೂಮಿ ಇರುವುದಿಲ್ಲ. ಈ ಹಿಂದೆ ಭೂಮಿ ಕೊಡುವುದಾದರೆ ಸರ್ಕಾರಕ್ಕೆ ಒತ್ತಾಯಿಸುವುದಾಗಿ ರೈತರೊಂದಿಗಿನ ಸಭೆಯಲ್ಲಿ ತಿಳಿಸಿದ್ದೆ. ಇದಕ್ಕೆ ರೈತರು ನಿರಾಕರಿಸಿದ್ದರು” ಎಂದು ಅವರು ಹೇಳಿದ್ದಾರೆ.
ಶೇ.64ರಷ್ಟು ಕೆನಾಲ್ ಕಾಮಗಾರಿ ಪೂರ್ಣ: “ಎತ್ತಿನಹೊಳೆ ಯೋಜನೆಯ ಕೆನಾಲ್ ದಾರಿ ತಿಪಟೂರು 43 .ಕಿ.ಮೀ., ಚಿಕ್ಕನಾಯಕನಹಳ್ಳಿ 12 ಕಿ.ಮೀ, ತುರುವೆಕೆರೆ 1 ಕಿ.ಮೀ, ಗುಬ್ಬಿ 41 ಕಿ.ಮೀ, ತುಮಕೂರು ಗ್ರಾ 31, ಕೊರಟಗೆರೆ 19, ಮಧುಗಿರಿ (ಫೀಡರ್ ಕೆನಾಲ್) 40 ಕಿ.ಮೀ, ಪಾವಘಡ 42 ಕಿ.ಮೀ. ಕೆನಾಲ್ ಹಾದುಹೋಗಲಿದೆ. ಜಿಲ್ಲೆಯಲ್ಲಿ ಶೇ. 64ರಷ್ಟು ಮುಖ್ಯ ಕೆನಾಲ್ ಪೂರ್ಣಗೊಂಡಿದೆ” ಎಂದರು.
ಕೊರಟಗೆರೆ-ತುಮಕೂರು ಎಪಿಎಂಸಿ ಅವ್ಯವಹಾರ: “ಎಪಿಎಂಸಿ ಮಳಿಗೆಗಳನ್ನು ಹಂಚಿಕೆ ಮಾಡಲು ಸರ್ಕಾರ ನಿಯಮಗಳನ್ನು ಮಾಡಿದೆ. ನಿಯಮಗಳ ಪ್ರಕಾರವೇ ಹಂಚಿಕೆ ಮಾಡಲಾಗುವುದು. ನಿಯಮ ಮೀರಿ ಹಂಚಿಕೆ ಮಾಡಿರುವುದು ಕಂಡುಬಂದರೆ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು. ಹತ್ತು ವರ್ಷಗಳ ಹಿಂದೆ ಎಪಿಎಂಸಿ ಮಳಿಗೆಗಳು ಹಂಚಿಕೆಯಾಗಿವೆ. ಆಗ ಏನೆಲ್ಲ ನಡೆದಿದೆ ಎಂಬುದನ್ನು ಪರಿಶೀಲಿಸಲಾಗುವುದು” ಎಂದು ತಿಳಿಸಿದರು.
ಹೇಮಾವತಿ: “ಜಿಲ್ಲೆಗೆ 22 ಜುಲೈ 2024 ರಿಂದ 25 ಆಗಸ್ಟ್ 2024ರವರೆ 3,915 ಎಂಸಿಎಫ್ಟಿ ನೀರು ಬಂದಿದೆ. ಪ್ರತಿ ದಿನ 1500 ಕ್ಯೂಸೆಕ್ ನೀರು ಬರುತ್ತಿದ್ದು, ಕುಣಿಗಲ್ವರೆಗು ಹೋಗುತ್ತಿದೆ. ಬುಗುಡನಹಳ್ಳಿ ಕೆರೆಯಲ್ಲಿ 290 ಎಂಸಿಎಫ್ಟಿ ನೀರು ಸಂಗ್ರಹವಿದೆ. ಸಣ್ಣ ನೀರಾವರಿ 27 ಕೆರೆಗಳು ಭರ್ತಿಯಾಗಿವೆ. ಆ ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ನೀರು ಬರಲಿದೆ” ಎಂದು ಸಚಿವ ಪರಮೇಶ್ವರ್ ಹೇಳಿದ್ದಾರೆ.
ಸಿ.ಟಿ.ರವಿಗೆ ತಿರುಗೇಟು: “ನಾವು ಎತ್ತಿನಹೊಳೆ ಯೋಜನೆ ಪೂರ್ಣಗೊಂಡಿದೆ ಎಂದು ಎಲ್ಲಿಯೂ ಹೇಳಿಲ್ಲ. ಯೋಜನೆಯ 1ನೇ ಹಂತ ಕಾಮಗಾರಿ ಪೂರ್ಣಗೊಂಡಿದೆ. ಸಿ.ಟಿ.ರವಿ ಡಬಲ್ ಪದವೀಧರರು. ಅವರನ್ನು ತಪ್ಪಿಸಿ ಮಾಡಲಾಗುವುದಿಲ್ಲ” ಎಂದು ಪರಮೇಶ್ವರ್ ಸಿ.ಟಿ.ರವಿ ಅವರಿಗೆ ಟಾಂಗ್ ನೀಡಿದ್ದಾರೆ.
ದೇಶ
ಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ (Mysuru Dasara) 2026 ಉತ್ಸವದ ದಿನಾಂಕವನ್ನು ರಾಜ್ಯ ಸರ್ಕಾರ ಅಂತಿಮಗೊಳಿಸಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ದಸರಾ ಉತ್ಸವದ ಸಿದ್ಧತೆಗಳು ಹಾಗೂ ಕಾರ್ಯಕ್ರಮಗಳ ವೇಳಾಪಟ್ಟಿಗೆ ಅನುಮೋದನೆ ನೀಡಲಾಗಿದೆ.
ಸಭೆಯಲ್ಲಿ ಕೈಗೊಂಡ ನಿರ್ಧಾರದಂತೆ, ಅಕ್ಟೋಬರ್ 11ರಂದು ಮೈಸೂರು ದಸರಾ ಉತ್ಸವಕ್ಕೆ ಅಧಿಕೃತ ಚಾಲನೆ ದೊರೆಯಲಿದ್ದು, ಇದೇ ದಿನದಿಂದ ನವರಾತ್ರಿ (Navaratri) ಆಚರಣೆ ಆರಂಭವಾಗಲಿದೆ. ಹತ್ತು ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಕಲಾ ಕಾರ್ಯಕ್ರಮಗಳು ನಡೆಯಲಿವೆ.
ದಸರಾ ಉತ್ಸವದ ಪ್ರಮುಖ ಆಕರ್ಷಣೆಯಾಗಿರುವ **ಜಂಬೂಸವಾರಿ (Jumboo Savari)**ಯನ್ನು ಅಕ್ಟೋಬರ್ 21ರಂದು ವಿಜಯದಶಮಿ ದಿನ ಅದ್ದೂರಿಯಾಗಿ ಆಯೋಜಿಸಲು ಸರ್ಕಾರ ತೀರ್ಮಾನಿಸಿದೆ. ಸಂಪ್ರದಾಯದಂತೆ ಅಲಂಕೃತ ಅಂಬಾರಿಯಲ್ಲಿ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಉತ್ಸವ ಮೂರ್ತಿ ಮೆರವಣಿಗೆಯಲ್ಲಿ ಸಾಗಲಿದ್ದು, ಸಾವಿರಾರು ಭಕ್ತರು ಹಾಗೂ ದೇಶ-ವಿದೇಶಗಳಿಂದ ಆಗಮಿಸುವ ಪ್ರವಾಸಿಗರು ಈ ಐತಿಹಾಸಿಕ ಉತ್ಸವಕ್ಕೆ ಸಾಕ್ಷಿಯಾಗಲಿದ್ದಾರೆ.
ಸಭೆಯಲ್ಲಿ ಭದ್ರತೆ, ಸಂಚಾರ ವ್ಯವಸ್ಥೆ, ಪ್ರವಾಸೋದ್ಯಮ, ಸ್ವಚ್ಛತೆ, ವಿದ್ಯುತ್, ಕುಡಿಯುವ ನೀರು ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಅಧಿಕಾರಿಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗಿದೆ. ಪ್ರವಾಸಿಗರಿಗೆ ಯಾವುದೇ ತೊಂದರೆಯಾಗದಂತೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ.
ಮೈಸೂರು ದಸರಾ ಕರ್ನಾಟಕದ ಅತ್ಯಂತ ದೊಡ್ಡ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿದ್ದು, ರಾಜ್ಯದ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ಮಹತ್ವದ ವೇದಿಕೆಯಾಗಿದೆ. ಈ ಬಾರಿ ಉತ್ಸವವನ್ನು ಇನ್ನಷ್ಟು ವೈಭವದಿಂದ ಆಯೋಜಿಸಲು ಸರ್ಕಾರ ಸಿದ್ಧತೆ ಆರಂಭಿಸಿದೆ.
ದೇಶ
GBA ಚುನಾವಣೆ, ಒತ್ತುವರಿ ತೆರವು, ಮೋಡ ಬಿತ್ತನೆ: CM ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ವ್ಯಾಪ್ತಿಯ ಹೊಸ ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಆಗಸ್ಟ್ ತಿಂಗಳೊಳಗೆ ನಡೆಸುವ ವಿಚಾರದಲ್ಲಿ ಕೆಲವು ತಾಂತ್ರಿಕ ಸವಾಲುಗಳಿದ್ದು, ಸರ್ಕಾರವು ಸುಪ್ರೀಂ ಕೋರ್ಟ್ (Supreme Court) ನೀಡುವ ನಿರ್ದೇಶನಗಳಿಗೆ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ತಿಳಿಸಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜಿಬಿಎ ವ್ಯಾಪ್ತಿಯ ಪಾಲಿಕೆ ಚುನಾವಣೆಗಳಿಗೆ ಸರ್ಕಾರ ಅಗತ್ಯ ಸಿದ್ಧತೆ ನಡೆಸಿದೆ. ಆದರೆ ಚುನಾವಣಾ ಆಯೋಗ (Election Commission) ರಾಜ್ಯಾದ್ಯಂತ ನಡೆಸುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯದಿಂದಾಗಿ ಚುನಾವಣಾ ಪ್ರಕ್ರಿಯೆಯಲ್ಲಿ ಸ್ವಲ್ಪ ವಿಳಂಬ ಉಂಟಾಗಿದೆ ಎಂದು ವಿವರಿಸಿದರು.
ಸುಪ್ರೀಂ ಕೋರ್ಟ್ ಈ ಹಿಂದೆ ಆಗಸ್ಟ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ಸೂಚನೆ ನೀಡಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಗಡುವನ್ನು ಡಿಸೆಂಬರ್ವರೆಗೆ ವಿಸ್ತರಿಸುವಂತೆ ಅಧಿಕಾರಿಗಳು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಸಿಎಂ, “ನಾನು ಈ ವಿಚಾರದಲ್ಲಿ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ. ಅಧಿಕಾರಿಗಳು ಮತ್ತು ನ್ಯಾಯಾಲಯದ ಪ್ರಕ್ರಿಯೆಯಂತೆ ಮುಂದಿನ ಕ್ರಮ ನಡೆಯಲಿದೆ” ಎಂದು ಹೇಳಿದರು.
ಇದೇ ವೇಳೆ, ಬೆಂಗಳೂರಿನಲ್ಲಿ ಸಂಚಾರಕ್ಕೆ ಅಡ್ಡಿಯಾಗಿರುವ ಒತ್ತುವರಿಗಳನ್ನು ತೆರವುಗೊಳಿಸುವ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ತಿಳಿಸಿದರು. ನಗರದಲ್ಲಿ ಸುಮಾರು 60,000 ಬೀದಿಬದಿ ವ್ಯಾಪಾರಿಗಳನ್ನು ಗುರುತಿಸಲಾಗಿದ್ದು, ಅವರಲ್ಲಿ 30,000 ಮಂದಿಗೆ ತಳ್ಳುಗಾಡಿ ಹಾಗೂ ವ್ಯಾಪಾರಕ್ಕೆ ಅಗತ್ಯ ವಾಹನಗಳನ್ನು ವಿತರಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.
ಮುಖ್ಯ ರಸ್ತೆಗಳಲ್ಲಿ ಶಾಶ್ವತ ಶೆಡ್ ಅಥವಾ ಟೆಂಟ್ಗಳನ್ನು ನಿರ್ಮಿಸಲು ಸುಪ್ರೀಂ ಕೋರ್ಟ್ ನಿರ್ಬಂಧವಿದ್ದು, ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ವ್ಯಾಪಾರ ನಡೆಸಬೇಕು ಎಂದು ಸಿಎಂ ಸ್ಪಷ್ಟಪಡಿಸಿದರು. ಜೊತೆಗೆ, ಮೋಡ ಬಿತ್ತನೆ, ಬೆಳಗಾವಿಗೆ ವಿಶೇಷ ಪ್ಯಾಕೇಜ್ ಹಾಗೂ ಮುಜರಾಯಿ ದೇವಸ್ಥಾನಗಳ ಹುಂಡಿ ಹಣದ ಭದ್ರತೆ ಕುರಿತು ಸರ್ಕಾರ ಪರಿಶೀಲನೆ ನಡೆಸುತ್ತಿದೆ ಎಂದರು.
ದೇಶ
7 ದಿನದಲ್ಲಿ ವಾಹನ ತೆರವುಗೊಳಿಸಿ, ಇಲ್ಲದಿದ್ದರೆ ಹರಾಜು! ಬೆಂಗಳೂರು ಪೊಲೀಸರ ಖಡಕ್ ಎಚ್ಚರಿಕೆ
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ (Bengaluru) ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆಗೆ ಕಡಿವಾಣ ಹಾಕಲು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ಹಾಗೂ ಜಿಬಿಎ (GBA) ಜಂಟಿಯಾಗಿ ಬೃಹತ್ ಕಾರ್ಯಾಚರಣೆ ಆರಂಭಿಸಿದ್ದಾರೆ. ರಸ್ತೆ ಬದಿ ಹಾಗೂ ನೋ ಪಾರ್ಕಿಂಗ್ (No Parking) ವಲಯಗಳಲ್ಲಿ ವಾರಗಟ್ಟಲೆ, ತಿಂಗಳುಗಟ್ಟಲೆ ಅನಾಥವಾಗಿ ನಿಂತಿರುವ ವಾಹನಗಳನ್ನು ತೆರವುಗೊಳಿಸುವ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ.
ಬೆಂಗಳೂರು ಸಂಚಾರ ಪೊಲೀಸ್ ಆಯುಕ್ತ ಕಾರ್ತಿಕ್ ರೆಡ್ಡಿ ಅವರ ಮಾಹಿತಿ ಪ್ರಕಾರ, ಮೊದಲ ಹಂತದಲ್ಲಿ ನಗರದ ವಿವಿಧ ಭಾಗಗಳಲ್ಲಿ 1,580 ಅನಾಥ ವಾಹನಗಳನ್ನು ಗುರುತಿಸಲಾಗಿದೆ. ಈ ವಾಹನಗಳಿಗೆ ನೋಟಿಸ್ ಅಂಟಿಸಲಾಗುತ್ತಿದ್ದು, ವಾಹನ ಮಾಲೀಕರಿಗೆ ಕೊನೆಯ ಅವಕಾಶ ನೀಡಲಾಗಿದೆ.
ಪೊಲೀಸರು ನೀಡುವ ನೋಟಿಸ್ ನಂತರ ವಾಹನ ಮಾಲೀಕರು 7 ದಿನಗಳೊಳಗೆ ₹500 ಪಾರ್ಕಿಂಗ್ ದಂಡ ಪಾವತಿಸಿ ತಮ್ಮ ವಾಹನಗಳನ್ನು ತೆರವುಗೊಳಿಸಬೇಕು. ನಿಗದಿತ ಅವಧಿಯೊಳಗೆ ವಾಹನಗಳನ್ನು ಸ್ಥಳಾಂತರಿಸದಿದ್ದರೆ, ಸಂಚಾರ ಪೊಲೀಸರು ಟೋ ವಾಹನಗಳ ಮೂಲಕ ಅವುಗಳನ್ನು ವಶಕ್ಕೆ ಪಡೆಯಲಿದ್ದಾರೆ.
ವಾಹನಗಳನ್ನು ವಶಕ್ಕೆ ಪಡೆದ ನಂತರವೂ ಸಾರ್ವಜನಿಕ ಪ್ರಕಟಣೆ ಹೊರಡಿಸಿ 15 ದಿನಗಳ ಕಾಲ ಮಾಲೀಕರಿಗಾಗಿ ಕಾಯಲಾಗುತ್ತದೆ. ಈ ಅವಧಿಯಲ್ಲಿಯೂ ಯಾರೂ ವಾಹನದ ಮಾಲೀಕತ್ವವನ್ನು ಸಾಬೀತುಪಡಿಸದಿದ್ದರೆ, ಜಿಬಿಎ ನಿಯಮಾವಳಿಗಳ ಪ್ರಕಾರ ವಾಹನಗಳನ್ನು ಬಹಿರಂಗ ಹರಾಜು ಮಾಡಲಾಗುತ್ತದೆ.
ರಸ್ತೆಗಳು ಸಾರ್ವಜನಿಕರ ಸುಗಮ ಸಂಚಾರಕ್ಕಾಗಿ ಮೀಸಲಾಗಿದ್ದು, ನೋ ಪಾರ್ಕಿಂಗ್ ಪ್ರದೇಶಗಳಲ್ಲಿ ವಾಹನಗಳನ್ನು ಅನಾಥವಾಗಿ ಬಿಟ್ಟು ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಬಾರದು ಎಂದು ಪೊಲೀಸ್ ಆಯುಕ್ತರು ಮನವಿ ಮಾಡಿದ್ದಾರೆ. ಈ ಅಭಿಯಾನದ ಮೂಲಕ ಟ್ರಾಫಿಕ್ ದಟ್ಟಣೆ ಕಡಿಮೆ ಮಾಡುವುದು, ರಸ್ತೆ ಸುರಕ್ಷತೆ ಹೆಚ್ಚಿಸುವುದು ಹಾಗೂ ಸಾರ್ವಜನಿಕ ಸಂಚಾರ ಸುಗಮಗೊಳಿಸುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ.
-
ದೇಶ21 hours agoGBA ELECTION : ಪಾಲಿಕೆ ಚುನಾವಣೆಗೆ ಮತ್ತೊಂದು ಟ್ವಿಸ್ಟ್! ಆಗಸ್ಟ್ 31 ಗಡುವು ಮೀರುವ ಸಾಧ್ಯತೆ
-
ದೇಶ17 hours ago7 ದಿನದಲ್ಲಿ ವಾಹನ ತೆರವುಗೊಳಿಸಿ, ಇಲ್ಲದಿದ್ದರೆ ಹರಾಜು! ಬೆಂಗಳೂರು ಪೊಲೀಸರ ಖಡಕ್ ಎಚ್ಚರಿಕೆ
-
ದೇಶ15 hours agoಮೈಸೂರು ದಸರಾ ದಿನಾಂಕ ಘೋಷಣೆ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ನಿರ್ಧಾರ
-
ದೇಶ16 hours agoತಮಿಳುನಾಡು ಸರ್ಕಾರದ ಹೊಸ ಆದೇಶ: ಸರ್ಕಾರಿ ಶಾಲೆಗಳಲ್ಲಿ ರಾಜಕೀಯ ಚಟುವಟಿಕೆ ಸಂಪೂರ್ಣ ನಿಷೇಧ
-
ಕ್ರೀಡೆ21 hours agoಚೆನ್ನೈನಲ್ಲಿ BBL 2026-27 KICK OFF : ಮೆಲ್ಬೋರ್ನ್ ರೆನೆಗೇಡ್ಸ್ vs ಪರ್ತ್ ಸ್ಕಾರ್ಚರ್ಸ್
-
ಅಪರಾಧ22 hours agoಅಪರಾಧಿಗಳಿಗೆ ನಡುಕ ಹುಟ್ಟಿಸಿದ ಬೆಂಗಳೂರು ಪೊಲೀಸರ ತಡರಾತ್ರಿ ಸ್ಪೆಷಲ್ ಆಪರೇಷನ್
-
ಆರೋಗ್ಯ20 hours agoಮೆಡಿಕಲ್ ಶಾಪ್ಗಳಿಗೆ ಹೊಸ ಮಾರ್ಗಸೂಚಿ: ಔಷಧ ಮಾರಾಟದ ದಾಖಲೆ 3 ವರ್ಷ ಕಡ್ಡಾಯ
-
ದೇಶ18 hours agoಕರ್ನಾಟಕ PRC ಆದೇಶ ಸಂವಿಧಾನ ವಿರೋಧಿ? ಕೇಂದ್ರಕ್ಕೆ ಶೋಭಾ ಕರಂದ್ಲಾಜೆ ಮನವಿ
