Connect with us

ಬೆಂಗಳೂರು

ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಕಳಂಕವಿಲ್ಲದ ಒಬ್ಬ ಬಿಜೆಪಿಗನ ತೋರಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು – CM Siddaramaiah

ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಗೌರವದಿಂದ ರಾಜ್ಯಕ್ಕೆ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮವಿಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗೀದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಹೇಳಿದ್ದಾರೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೆ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು ಎಂದು ಸಿಎಂ ಮಾಧ್ಯಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲ ವಾಷಿಂಗ್ ಮಷಿನ್​​ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಬ್ಬಾಶ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ. ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮಷಿನ್​​ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ? ಎಂದು ಸಿಎಂ ಕೇಳಿದ್ದಾರೆ.

ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್​ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದೆಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣ ಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?. ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧವಿದ್ದರೆ ನಾನು ಸದಾ ಸಿದ್ಧ ಎಂದು ಸಿಎಂ ಸವಾಲು ಹಾಕಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

ಬೆಂಗಳೂರಿನಲ್ಲಿ ವಸತಿ ಯೋಜನೆಗಳ ಅವ್ಯವಸ್ಥೆ: ಹೊಸ ಯೋಜನೆಗಳ ಬಗ್ಗೆ ಶಾಸಕ ಎಸ್.ಟಿ. ಸೋಮಶೇಖರ್ ಅಸಮಾಧಾನ

ಬೆಂಗಳೂರು, ಆಗಸ್ಟ್ 7 – ನಗರದಲ್ಲಿ ಈಗಿನ ವಸತಿ ಯೋಜನೆಗಳು ಪೂರ್ಣವಾಗಿಲ್ಲದಿರುವಾಗ ಹೊಸ ಭೂಸ್ವಾಧೀನ ಅಧಿಸೂಚನೆಗಳನ್ನು ನೀಡುವುದು ಅರ್ಥವಿಲ್ಲ ಎಂದು ಶಾಸಕ ಎಸ್.ಟಿ. ಸೋಮಶೇಖರ್ ಕಿಡಿಕಾರಿದರು.

ಯಶವಂತಪುರ ಕ್ಷೇತ್ರದ ಚುಂಚನಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಬ್ಬರಾಯನಪಾಳ್ಯ ಎ ಹಾಗೂ ಬಿ ಗ್ರಾಮಗಳಲ್ಲಿ ಹೊಸ ಅಂಗನವಾಡಿ ಕಟ್ಟಡ ಮತ್ತು ಕಿರಿಯ ಪ್ರಾಥಮಿಕ ಶಾಲೆಯ ಲೋಕಾರ್ಪಣೆ ವೇಳೆ ಅವರು ಮಾತನಾಡಿದರು.

ಅವರು ಅಭಿಪ್ರಾಯಪಟ್ಟ ಪ್ರಮುಖ ವಿಷಯಗಳು:

  • ಬೆಂಗಳೂರಿನ ಜನಸಂಖ್ಯೆ ಈಗಾಗಲೇ 1.5 ಕೋಟಿಗೂ ಮೀರುತ್ತಿದೆ.
  • ವಸತಿ ಸಮುಚ್ಛಯಗಳಲ್ಲಿ ಇನ್ನೂ ಅನೇಕ ಅಭಿವೃದ್ಧಿ ಕೆಲಸಗಳು ಬಾಕಿಯಿವೆ.
  • ಕುಡಿಯುವ ನೀರಿನ ಕೊರತೆ, ಒಳಚರಂಡಿ ಸಮಸ್ಯೆ, ರಾಜಕಾಲುವೆಗಳ ಉಕ್ಕಿಹರಿವು ನಗರದ ಮುಖ್ಯ ಸಮಸ್ಯೆಗಳಾಗಿವೆ.
  • ಕೆಲ ಕಟ್ಟಡಗಳು ಕಳಪೆ ಗುಣಮಟ್ಟದಿಂದ ನಿರ್ಮಾಣವಾಗಿದ್ದು, ಸೋರಿಕೆ ಸಮಸ್ಯೆ ಜನರನ್ನು ಕಾಡುತ್ತಿದೆ.
  • “ಕಟ್ಟಡ ಕುಸಿದು ಅನಾಹುತವಾದರೆ ಹೊಣೆ ಯಾರು?” ಎಂದು ಅವರು ಪ್ರಶ್ನಿಸಿದರು.

ಬೇರೆ ಪ್ರಮುಖ ಅಂಶಗಳು:
ನಗರದ ವಾಹನ ಸಂಚಾರ ದಟ್ಟಣೆ, ನಿಯಂತ್ರಣ ತಪ್ಪಿದ ನಗರ ವಿಸ್ತರಣೆ, ಮೂಲಸೌಕರ್ಯದ ಕೊರತೆ ಇವುಗಳಿಂದ ನಾಗರಿಕರು ಪರದಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಬೆಂಗಳೂರಿನಿಂದ ಹೊರಗೆ ಹೊಸ ವಸತಿ ಯೋಜನೆಗಳನ್ನು ರೂಪಿಸಿ ಮೂಲಸೌಕರ್ಯ ಒದಗಿಸಿದರೆ ಜನಸಂದಣಿ ನಿಯಂತ್ರಣ ಸಾಧ್ಯವೆಂದು ಶಾಸಕ ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಹಾಜರಿದ್ದವರು:
ಪಂಚಾಯತ್ ಅಧ್ಯಕ್ಷೆ ಹೇಮಾ ನಾರಾಯಣ್, ಸದಸ್ಯರು ಸದಾನಂದ.ಡಿ, ಎನ್.ಕುಮಾರ್, ರೇವಣಸಿದ್ದಯ್ಯ, ಅಶ್ವತ್, ವೆಂಕಟಾಚಲ, ಸುನಿಲ್, ಪುಟ್ಟಮಲ್ಲು, ತಾತಪ್ಪ, ಶಿವಣ್ಣ, ಹನುಮಂತ ಹಾಗೂ ಗ್ರಾಮಸ್ಥರು, ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Continue Reading

ಬಿಬಿಎಂಪಿ

ಜಿಬಿಎ ಚುನಾವಣೆ ಪೂರ್ವಸಿದ್ಧತೆ: ನವೆಂಬರ್ 1ರೊಳಗೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ – ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದ ಪೂರ್ವಸಿದ್ಧತೆಗಳನ್ನು ನವೆಂಬರ್ 1ರೊಳಗೆ ಪೂರ್ಣಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಹಿರಿಯ ಮುಖಂಡರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ಚುನಾವಣೆಗಾಗಿ ಮತದಾರರ ನೋಂದಣಿ ನಿಯಮಗಳನ್ನು ಹೇಗೆ ರೂಪಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಅಭಿಪ್ರಾಯವನ್ನು ಕೇಳಲಾಗುವುದು,” ಎಂದು ಸ್ಪಷ್ಟಪಡಿಸಿದರು.

ಚುನಾವಣೆ ಹಕ್ಕು ಕಾಪಾಡುವ ಕುರಿತು ಮಾರ್ಗದರ್ಶನ:
ಪಕ್ಷದ ಕಾರ್ಯಕರ್ತರು ಮತ್ತು ಬ್ಲಾಕ್ ಅಧ್ಯಕ್ಷರಿಗೆ, ತಮ್ಮ ಮತದಾನದ ಹಕ್ಕನ್ನು ಕಾಪಾಡಿಕೊಳ್ಳುವ ಕುರಿತು ಮಾರ್ಗದರ್ಶನ ನೀಡಲಾಗಿದೆ. “ಶಾಸಕರನ್ನು ಹಾಗೂ ಬ್ಲಾಕ್ ಲೆವಲ್ ನಾಯಕರನ್ನು ಮತ್ತೊಮ್ಮೆ ಸಭೆಗೆ ಕರೆದು ಸಿದ್ಧತೆ ಕುರಿತ ಚರ್ಚೆ ನಡೆಯಲಿದೆ,” ಎಂದರು.

ಇಂಡಿಯಾ ಒಕ್ಕೂಟ ಮತ್ತು ಪ್ರತಿಭಟನೆ ಕುರಿತು ಸ್ಪಷ್ಟನೆ:
ಮುಖ್ಯಮಂತ್ರಿಗಳಿಗೆ ಇಂಡಿಯಾ ಒಕ್ಕೂಟದ ಸಭೆಗೆ ಆಹ್ವಾನ ಇದೆ. ನಾನು ಇಲ್ಲಿ ಪ್ರತಿಭಟನಾ ಸಭೆಗಾಗಿ ಸಿದ್ಧತೆಗಳನ್ನು ನೋಡಿಕೊಳ್ಳುತ್ತಿದ್ದೇನೆ,” ಎಂದು ಡಿಸಿಎಂ ಹೇಳಿದರು. “ಸ್ವಾತಂತ್ರ ಉದ್ಯಾನದಲ್ಲಿ ಮತಚೂರಿ ವಿರುದ್ಧsymbolic ಪ್ರತಿಭಟನೆ ನಡೆಯಲಿದ್ದು, ಇದು ನ್ಯಾಯಾಲಯದ ಆದೇಶದಂತೆ ಹಮ್ಮಿಕೊಳ್ಳಲಾಗಿದೆ,” ಎಂದು ಹೇಳಿದರು.

ರಾಜ್ಯಮಟ್ಟದ ಪ್ರತಿಭಟನೆ:
ಪ್ರತಿಯೊಬ್ಬ ಜಿಲ್ಲೆಯಿಂದ ಕನಿಷ್ಠ 50 ನಾಯಕರು, ಕಾರ್ಯಕರ್ತರು, ಪರಾಜಿತ ಅಭ್ಯರ್ಥಿಗಳು ಮುಂತಾದವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಸೂಚಿಸಲಾಗಿದೆ. “ಬೆಂಗಳೂರು ಮಾತ್ರವಲ್ಲ, ಇಡೀ ಕರ್ನಾಟಕದಿಂದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ,” ಎಂದು ಅವರು ಹೇಳಿದ್ದಾರೆ.

Continue Reading

ಬೆಂಗಳೂರು

ಲಾಲ್‌ಬಾಗ್ ಫಲಪುಷ್ಪ ಪ್ರದರ್ಶನ: ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನ ಆಕರ್ಷಕ ಪ್ರತಿಕೃತಿಗಳು

ಬೆಂಗಳೂರು: ಲಾಲ್‌ಬಾಗ್ ಉದ್ಯಾನದಲ್ಲಿ ನಾಳೆ ಆಗಸ್ಟ್ 7ರಿಂದ 18ರವರೆಗೆ ನಡೆಯಲಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಈ ವರ್ಷದ ಪ್ರಮುಖ ಆಕರ್ಷಣೆ ಎಂದರೆ ಗಾಜಿನ ಮನೆಯಲ್ಲಿ ಸ್ಥಾಪಿಸಿರುವ ಕಿತ್ತೂರು ಕೋಟೆ ಮತ್ತು ರಾಣಿ ಚೆನ್ನಮ್ಮನವರ ಐಕ್ಯ ಮಂಟಪದ ಪ್ರತಿಕೃತಿಗಳು.

ತೋಟಗಾರಿಕೆ ಇಲಾಖೆ ವಿವಿಧ ರೀತಿಯ ಆಕರ್ಷಕ ಹೂವುಗಳಿಂದ ಗಾಜಿನ ಮನೆಯನ್ನು ಅಲಂಕಾರಗೊಳಿಸಿದ್ದು, ಸುತ್ತಮುತ್ತಲಿನ ಪ್ರದೇಶಗಳು ಬಣ್ಣ ಬಣ್ಣದ ಹೂಸಸಿಗಳೊಂದಿಗೆ ಶೃಂಗಾರಗೊಂಡಿವೆ. ಈ ಪ್ರದರ್ಶನದಲ್ಲಿ ಆಂಥೋರಿಯಂ, ಗುಲಾಬಿ, ಆರ್ಕಿಡ್, ಜರ್ಬೇರಾ ಮತ್ತು ಸುಗಂಧ ರಾಜ ಸೇರಿದಂತೆ ಹಲವಾರು ಶೀತ ವಲಯದ ಹೂಗಳು ನೋಡುಗರ ಕಣ್ಮನ ಸೆಳೆಯಲಿವೆ.

ಬೋನ್ಸಾಯ್ ವನವನ್ನು ನವೀಕರಿಸಿ ವಿಭಿನ್ನ ರೀತಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಿಶೇಷ ಬೋನ್ಸಾಯ್ ಸಸಿಗಳನ್ನು ಇಲ್ಲಿ ಪ್ರದರ್ಶಿಸಲಾಗುತ್ತಿದೆ. ಜೊತೆಗೆ ಇಕೆಬಾನಾ, ತರಕಾರಿ ಕೆತ್ತನೆ ಪ್ರದರ್ಶನ, ತೋಟಗಳ ಸ್ಪರ್ಧೆ ಮತ್ತು ನಾನಾ ಹೂವಿನ ಜೋಡಣೆ ಕಲೆಯ ಪ್ರದರ್ಶನವೂ ಈ ಶೋನಲ್ಲಿ ಒಳಗೊಂಡಿವೆ.

ಸುಮಾರು 2.5 ಲಕ್ಷದಿಂದ 3 ಲಕ್ಷ ಹೂವುಗಳಿಂದ ನಿರ್ಮಿತವಾಗಿರುವ ಗಾಜಿನ ಮನೆಯಲ್ಲಿ, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರಿನ ಕೋಟೆ ಪ್ರತಿಕೃತಿ ಸ್ಥಾಪಿಸಲಾಗಿದೆ. ಇದರ ಮುಂಭಾಗದಲ್ಲಿ ಅಶ್ವಾರೂಢ ರಾಣಿ ಚೆನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪ್ರತಿಮೆಗಳು ಹಾಗೂ ಹಿಂಭಾಗದಲ್ಲಿ ಐಕ್ಯ ಮಂಟಪದ ಪ್ರತಿಕೃತಿ ಇದೆ.

ಪ್ರವೇಶ ಶುಲ್ಕ:

  • ಸಾಮಾನ್ಯ ದಿನ: ₹80
  • ರಜಾದಿನಗಳು ಮತ್ತು ವಾರಾಂತ್ಯ: ₹100

ಈ ಪ್ರದರ್ಶನವು ನೈಸರ್ಗಿಕ ಸೌಂದರ್ಯ ಹಾಗೂ ಐತಿಹಾಸಿಕ ಮಹತ್ವವನ್ನು ಒಗ್ಗೂಡಿಸುವ ಅತ್ಯುತ್ತಮ ವೇದಿಕೆಯಾಗಿದ್ದು, ಸಾರ್ವಜನಿಕರು ಹೆಚ್ಚಾಗಿ ಭಾಗವಹಿಸುವ ನಿರೀಕ್ಷೆಯಿದೆ.

Continue Reading

Trending