Connect with us

ಬೆಂಗಳೂರು

ಕರ್ನಾಟಕ ಬಿಜೆಪಿಯಲ್ಲಿ ಭ್ರಷ್ಟಾಚಾರ ಕಳಂಕವಿಲ್ಲದ ಒಬ್ಬ ಬಿಜೆಪಿಗನ ತೋರಿಸಿ: ಮೋದಿಗೆ ಸಿದ್ದರಾಮಯ್ಯ ಸವಾಲು – CM Siddaramaiah

ಬೆಂಗಳೂರು: ಭ್ರಷ್ಟಾಚಾರ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕ ಬಿಜೆಪಿಯಲ್ಲಿ ನೀವು ತೋರಿಸಿದರೆ ನಿಮ್ಮನ್ನು ಗೌರವದಿಂದ ರಾಜ್ಯಕ್ಕೆ ಕರೆಸಿ ಸಾರ್ವಜನಿಕವಾಗಿ ಸನ್ಮಾನ ಕಾರ್ಯಕ್ರಮ ಏರ್ಪಡಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಸವಾಲು ಹಾಕಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡೂವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮವಿಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗೀದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಹೇಳಿದ್ದಾರೆ.

ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೆ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು ಎಂದು ಸಿಎಂ ಮಾಧ್ಯಮ ಹೇಳಿಕೆಯಲ್ಲಿ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರೇ, ಕಳೆದ ಹನ್ನೊಂದು ವರ್ಷಗಳಲ್ಲಿ ನಿರಂತರವಾಗಿ ನಿಮ್ಮ ಕಾರ್ಯಾಲಯದ ವಾಷಿಂಗ್ ಮಷಿನ್ ಕೆಲಸ ಮಾಡುತ್ತಿರುವುದನ್ನು ದೇಶ ಗಮನಿಸುತ್ತಿದೆ. ನಿಮ್ಮಿಂದಲೇ ಭ್ರಷ್ಟಾಚಾರದ ಆರೋಪಕ್ಕೊಳಗಾಗಿರುವ ವಿರೋಧ ಪಕ್ಷಗಳ ನಾಯಕರನ್ನೆಲ್ಲ ವಾಷಿಂಗ್ ಮಷಿನ್​​ನಲ್ಲಿ ಹಾಕಿ ಪರಮ ಪ್ರಾಮಾಣಿಕರನ್ನಾಗಿ ಮಾಡುತ್ತಿರುವ ನಿಮ್ಮ ಚಾಕಚಕ್ಯತೆಗೆ ಶಹಬ್ಬಾಶ್ ಅನ್ನಲೇ ಬೇಕು. ಅಧಿಕೃತ ಮಾಹಿತಿಯ ಪ್ರಕಾರವೇ 2014ರಿಂದ ಇಲ್ಲಿಯವರೆಗೆ ಭ್ರಷ್ಟಾಚಾರದ ಆರೋಪ ಹೊತ್ತಿರುವ 25 ವಿರೋಧ ಪಕ್ಷದ ನಾಯಕರು ಬಿಜೆಪಿ ಸೇರಿದ್ದಾರೆ. ಇವರಲ್ಲಿ 23 ನಾಯಕರನ್ನು ಭ್ರಷ್ಟಾಚಾರದ ಆರೋಪಗಳಿಂದ ಕೇಂದ್ರ ತನಿಖಾ ಸಂಸ್ಥೆಗಳು ಮುಕ್ತಗೊಳಿಸಿವೆ. ಹಿಮಂತಾ ಶರ್ಮಾ, ಸುವೇಂದು ಅಧಿಕಾರಿ, ಹೆಚ್.ಡಿ.ಕುಮಾರಸ್ವಾಮಿ, ಅಜಿತ್ ಪವಾರ್, ಅಶೋಕ್ ಚವ್ಹಾಣ್, ನಾರಾಯಣ ರಾಣೆ, ಪ್ರತಾಪ್ ಸರ್‌ನಾಯಕ್ ಅವರಿಂದ ಹಿಡಿದು ಇತ್ತೀಚಿನ ಏಡ್ಸ್ ಟ್ರ್ಯಾಪ್ ಗಿರಾಕಿ ಮುನಿರತ್ನವರೆಗೆ ಎಷ್ಟೊಂದು ಭ್ರಷ್ಟರನ್ನು ವಾಷಿಂಗ್ ಮಷಿನ್​​ನಲ್ಲಿ ತೊಳೆದು ನೀವು ಕ್ಲೀನ್ ಮಾಡಿಲ್ಲ? ಇವೆಲ್ಲ ಕೇವಲ ಧರ್ಮಾರ್ಥ ಸೇವೆಯೇ? ಎಂದು ಸಿಎಂ ಕೇಳಿದ್ದಾರೆ.

ನಿಮ್ಮ ಪಕ್ಷದ ಖಜಾನೆಗೆ ಸಂದಾಯವಾಗಿರುವ ಚುನಾವಣಾ ಬಾಂಡ್​ಗಳ ಹಿಂದಿನ ಕೊಡುಗೈ ದಾನಿಗಳು ಯಾರು? ಅವರು ಕೊಟ್ಟದ್ದೆಷ್ಟು? ಅದಕ್ಕಾಗಿ ಅವರು ಪಡೆದದ್ದೆಷ್ಟು? ಎನ್ನುವುದು ಇಂದು ದೇಶದ ಜನರ ಕಣ್ಣ ಮುಂದಿದೆ. ನಿಮ್ಮ ಹನ್ನೊಂದು ವರ್ಷಗಳ ಅವಧಿಯಲ್ಲಿ ಬ್ಯಾಂಕ್ ಲೂಟಿಗೈದವರು ದೇಶ ಬಿಟ್ಟು ಓಡಿಹೋಗಲು ದಾರಿ ಮಾಡಿಕೊಟ್ಟವರು ಯಾರು? ಅದಾನಿ-ಅಂಬಾನಿ ಅವರ ಸಂಪತ್ತು ಎಷ್ಟು ಪಟ್ಟು ಹೆಚ್ಚಾಯಿತು? ಬಡವರ ಗಳಿಕೆ ಎಷ್ಟು ಪಟ್ಟು ಕಡಿಮೆಯಾಯಿತು?. ನೀವು ಭ್ರಷ್ಟಾಚಾರದ ಬಗ್ಗೆ ಚರ್ಚೆ ಪ್ರಾರಂಭಿಸಿರುವುದನ್ನು ನೋಡಿ ಸಂತೋಷವಾಯಿತು. ನನ್ನ ವಿರುದ್ಧ ಭ‍್ರಷ್ಟಾಚಾರದ ಸುಳ್ಳು ಆರೋಪಗಳನ್ನು ಮಾಡಿ ಕುಣಿದಾಡುತ್ತಿರುವ ಪಾತ್ರಧಾರಿಗಳನ್ನಷ್ಟೇ ರಾಜ್ಯದ ಜನ ನೋಡಿದ್ದಾರೆ. ಈಗ ಇದರ ಹಿಂದಿರುವ ಸೂತ್ರಧಾರಿ ಯಾರು ಎನ್ನುವುದು ಕೂಡಾ ಜನರಿಗೆ ಗೊತ್ತಾಗಲಿ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ಧವಿದ್ದರೆ ನಾನು ಸದಾ ಸಿದ್ಧ ಎಂದು ಸಿಎಂ ಸವಾಲು ಹಾಕಿದ್ದಾರೆ.

ದೇಶ

HAL ಠಾಣೆ ಇನ್ಸ್‌ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?

ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್‌ಎಎಲ್ ಠಾಣೆಯ ಇನ್ಸ್‌ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.

ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್‌ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್‌ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್‌ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.

ಕಾಲಿಗೆ ಬೀಳುವಂತೆ ಸೂಚನೆ?

ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್‌ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.

ಪ್ರಕರಣದ ಹಿನ್ನೆಲೆ

ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.

ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್‌ಎಎಲ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.

ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.

Continue Reading

ದೇಶ

ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.

ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ

ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.

₹5,000 ಕೋಟಿ ಎಲ್ಲಿಗೆ ಹೋಯ್ತು?

ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.

ಪ್ರಾದೇಶಿಕ ಅಸಮಾನತೆ ಹೆಚ್ಚಳ

ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.

ಕುರಿಗಾರರಿಗೆ ಪರಿಹಾರ ಬಾಕಿ

ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.

ಬಿಜೆಪಿ ಕಾರ್ಯಕಾರಿಣಿ ಸಭೆ

ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.

Continue Reading

ದೇಶ

BESCOMಗೆ C-ರೇಟಿಂಗ್ ಶಾಕ್: ದೇಶದ 54 ಎಸ್ಕಾಂಗಳಲ್ಲಿ 51ನೇ ಸ್ಥಾನ

ಬೆಂಗಳೂರು: ದೇಶದ 54 ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವಿದ್ಯುತ್ ಸಚಿವಾಲಯ ಮೌಲ್ಯಮಾಪನ ಮಾಡಿದ್ದು, ಕರ್ನಾಟಕದ ಬೆಸ್ಕಾಂ (BESCOM) 51ನೇ ಸ್ಥಾನಕ್ಕೆ ಕುಸಿದಿದೆ. 14ನೇ ವಾರ್ಷಿಕ ಸಂಯೋಜಿತ ರೇಟಿಂಗ್ ಮತ್ತು ಶ್ರೇಯಾಂಕ ವರದಿಯಲ್ಲಿ ಬೆಸ್ಕಾಂ ಕಳಪೆ ಪ್ರದರ್ಶನ ನೀಡಿದ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿದೆ.

ವಿದ್ಯುತ್ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಸಂಗ್ರಹಣಾ ದಕ್ಷತೆ, ಬಿಲ್ಲಿಂಗ್ ದಕ್ಷತೆ, ಪ್ರಸರಣ ನಷ್ಟ, ಆಡಿಟ್ ಖಾತೆಗಳ ಲಭ್ಯತೆ ಸೇರಿದಂತೆ 15 ಪ್ರಮುಖ ಮಾನದಂಡಗಳ ಆಧಾರದಲ್ಲಿ ಶ್ರೇಯಾಂಕ ನೀಡಲಾಗಿದೆ. ಈ ಸಾಲಿನ ವರದಿಯಲ್ಲಿ ಬೆಸ್ಕಾಂ 100ರಲ್ಲಿ ಕೇವಲ 12.44 ಅಂಕಗಳನ್ನು ಪಡೆದು C-ರೇಟಿಂಗ್ ಮತ್ತು ‘ಕೆಂಪು ಕಾರ್ಡ್’ ಪಡೆದಿದೆ.

ವರದಿ ಪ್ರಕಾರ, ಬೆಸ್ಕಾಂ 13,819 ಕೋಟಿ ರೂ. ಸಂಚಿತ ನಷ್ಟ ಹಾಗೂ 22,611 ಕೋಟಿ ರೂ. ಸ್ಥಾಯಿ ಸಾಲವನ್ನು ಹೊಂದಿದೆ. 2025ನೇ ಹಣಕಾಸು ವರ್ಷದಲ್ಲಿ ಮಾತ್ರ 5,476 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷಕ್ಕಿಂತ ಕುಸಿತ

ಹಿಂದಿನ 13ನೇ ವಾರ್ಷಿಕ ರೇಟಿಂಗ್‌ನಲ್ಲಿ ಬೆಸ್ಕಾಂ 100ರಲ್ಲಿ 40.43 ಅಂಕಗಳನ್ನು ಪಡೆದು B-ದರ್ಜೆಯೊಂದಿಗೆ 34ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ 51ನೇ ಸ್ಥಾನಕ್ಕೆ ಜಾರಿದ್ದು ಕಾರ್ಯಕ್ಷಮತೆಯಲ್ಲಿ ಕುಸಿತ ಸ್ಪಷ್ಟವಾಗಿದೆ.

ಆಶ್ಚರ್ಯಕರವಾಗಿ, ಕರ್ನಾಟಕದ ಯಾವುದೇ ಎಸ್ಕಾಂಗಳು ಟಾಪ್ 10 ಅಥವಾ ಟಾಪ್ 20 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಆದರೆ ಮೆಸ್ಕಾಂ (MESCOM) 26ನೇ ಸ್ಥಾನ ಪಡೆದು ರಾಜ್ಯದ ಇತರ ಸಂಸ್ಥೆಗಳಿಗಿಂತ ಉತ್ತಮ ಪ್ರದರ್ಶನ ನೀಡಿದೆ.

ಸುಧಾರಣೆ ಅಗತ್ಯ

ತಜ್ಞರು ರಾಜ್ಯ ಸರ್ಕಾರವು ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರದ ಹೊರತು ಎಸ್ಕಾಂಗಳ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. KERC ಸಲಹಾ ಸಮಿತಿಯ ಮಾಜಿ ಸದಸ್ಯ ಎಂ.ಜಿ. ಪ್ರಭಾಕರ್, “ಗುರುಚರಣ್ ಸಮಿತಿ ವರದಿ ಎಸ್ಕಾಂಗಳನ್ನು ಪುನರುಜ್ಜೀವನಗೊಳಿಸಲು ರಚನಾತ್ಮಕ ಮತ್ತು ಕ್ರಿಯಾತ್ಮಕ ಸುಧಾರಣೆಗಳನ್ನು ಸೂಚಿಸಿತ್ತು. ಇಂತಹ ಸುಧಾರಣೆಗಳನ್ನು ತ್ವರಿತವಾಗಿ ಜಾರಿಗೆ ತರುವ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.

ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿ, “ಕೆಲವು ಲೆಕ್ಕಪತ್ರ ಸಮಸ್ಯೆಗಳಿವೆ. ಅವನ್ನು ಗುರುತಿಸಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇತರ ಅಂಶಗಳಲ್ಲಿ ಕಾರ್ಯಕ್ಷಮತೆ ತೃಪ್ತಿಕರವಾಗಿದೆ. ಆದಾಯದ ಬೆಳವಣಿಗೆ ಆರೋಗ್ಯಕರವಾಗಿದೆ” ಎಂದು ತಿಳಿಸಿದ್ದಾರೆ.

Continue Reading

Trending