Connect with us

ರಾಜಕೀಯ

ಜಿ.ಟಿ. ದೇವೇಗೌಡರು ಕಾಂಗ್ರೆಸ್‌ಗೆ ಹೋಗಿದ್ದರೆ ಇಂದು ಸಚಿವರಾಗಿರುತ್ತಿದ್ದರು: ಸಿ.ಎಂ. ಇಬ್ರಾಹಿಂ

Published

on

ಮೈಸೂರು(ನ.26):  ಕಳೆದ ಚುನಾವಣೆ ವೇಳೆಯೇ ಜಿ.ಟಿ. ದೇವೇಗೌಡರು ಕಾಂಗ್ರೆಸ್ ಗೆ ಹೋಗಿದ್ದರೆ ಇವತ್ತು ಸಚಿವರಾಗಿ ಇರುತ್ತಿದ್ದರು. ನಾವೇ ಜೆಡಿಎಸ್ ಪಕ್ಷ ಬಲ ಪಡಿಸಲು ಜೆಡಿಎಸ್ ನಲ್ಲಿ ಉಳಿಸಿಕೊಂಡಿದೆ. ಈಗ ಅವರ ಕತ್ತು ಕುಯ್ಯುವ ಕೆಲಸ ಮಾಡಲಾಗುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಆರೋಪಿಸಿದರು. 

ಸೋಮವಾರ ಶಾಸಕ ಜಿ.ಟಿ. ದೇವೇಗೌಡರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲಾ ವಿಚಾರಗಳ ಬಗ್ಗೆ ನಾನು ಜಿ.ಟಿ.ದೇವೇಗೌಡರ ಜೊತೆ ಚರ್ಚೆ ಮಾಡಿದ್ದೇನೆ. ಇನ್ನೂ ಎರಡು ದಿನ ಬಿಟ್ಟು ನಾನು ರಾಜ್ಯ ಪ್ರವಾಸ ಹೋಗುತ್ತಿದ್ದೇನೆ. ಆಗ ಕೆಲವು ನಾಯಕರನ್ನು ಭೇಟಿ ಮಾಡುತ್ತೇನೆ. ಆ ನಂತರ ಮತ್ತೆ ನಾನು ಜಿ.ಟಿ ದೇವೇಗೌಡರನ್ನು ಭೇಟಿ ಮಾಡುತ್ತೇನೆ ಎಂದು ಹೇಳಿದರು.

ಮೂಲ ಜೆಡಿಎಸ್ ನಮ್ಮದೆ. ಅದರ ಖಾತೆ, ಪಾಣಿ ಎಲ್ಲಾ ನಮ್ಮ ಹೆಸರಿನಲ್ಲಿದೆ. ಈಗಲೂ ಎಚ್.ಡಿ.ದೇವೇಗೌಡರು ಬಿಜೆಪಿ ಸಹವಾಸ ಬಿಟ್ಟು ಬರಲಿ ಜೆಡಿಎಸ್ ನ್ನು ಕಟ್ಟುತ್ತೇವೆ. ಹೊಸ ಪಕ್ಷವೊ ತೃತೀಯ ರಂಗವೊ ಅಥವಾ ಜೆಡಿಎಸ್ ಬಲವರ್ಧನೆಯೋ ಎಲ್ಲವೂ ಮುಂದಿನ ದಿನಗಳಲ್ಲಿ ತೀರ್ಮಾನ ಆಗಲಿದೆ ಎಂದರು. 

ಜೆಡಿಎಸ್ 12- 13 ಶಾಸಕರು ಬೇಸರಗೊಂಡಿದ್ದಾರೆ: 

ಜೆಡಿಎಸ್ 12 ರಿಂದ 13  ಶಾಸಕರು ಪಕ್ಷದ ವಿಚಾರದಲ್ಲಿ ಬೇಸರಗೊಂಡಿದ್ದಾರೆ. ಜಿ.ಟಿ.ದೇವೇಗೌಡರಂತೆ ಹಲವು ಜೆಡಿಎಸ್‌ ಶಾಸಕರುನೋವುನುಂಗಿದ್ದಾರೆ. ಈಗ ಅವರೆನ್ನಲ್ಲಾ ಒಗ್ಗೂಡಿಸುವ ಕೆಲಸವನ್ನ ನಾನು ಶುರು ಮಾಡಿದ್ದೇನೆ. ಮುಂದೆ ಏನೇನ್ ಆಗುತ್ತೆ ನೋಡೋಣ. ಈಗಲೂ ನಾನೇ ಜೆಡಿಎಸ್ ರಾಜ್ಯಾಧ್ಯಕ್ಷ, ನಮ್ಮ ಶಾಸಕರ ನೋವು ನಿವಾರಿಸುವ ಜವಾಬ್ದಾರಿ ನನ್ನದು. ಜೆಡಿಎಸ್ ಹೆಸರಿನಲ್ಲೇ ನಾವು ಇರಬೇಕಾ? ತೃತೀಯ ರಂಗಕ್ಕೆ ಬೇರೆ ಹೆಸರು ಕೊಡಬೇಕಾ. ಮುಂದೆ ಎಲ್ಲವನ್ನೂ ಚರ್ಚೆ ಮಾಡುತ್ತೇನೆ. ಈಗ ಇರುವ ಜೆಡಿಎಸ್ ಮನೆಗೆ ಬೆಂಕಿ ಬಿದ್ದಾಗಿದೆ ಎಂದರು. ಎಲ್ಲಾ ಜೆಡಿಸ್ ಶಾಸಕರು ಅವರವರ ಕ್ಷೇತ್ರ ಕಾಪಾಡಿಕೊಳ್ಳಬೇಕಿದೆ. ಹೀಗಾಗಿ, ಒಬ್ಬೊಬ್ಬರೇ ಮಾತು ಶುರು ಮಾಡಿದ್ದಾರೆ. ಕುಮಾರಸ್ವಾಮಿ ಈಗಲಾದರೂ ಬುದ್ಧಿ ಕಲಿಯಬೇಕು. ಜೆಡಿಎಸ್ ಅನ್ನು ಫ್ಯಾಮಿಲಿ ಕಂಪನಿ ಮಾಡುವುದನ್ನು ಬಿಡಬೇಕು. ಆಗ ಮಾತ್ರ ಜೆಡಿಎಸ್ ಮೂಲ ಅಸ್ತಿತ್ವ ಸಾಧ್ಯ ಎಂದರು. 

ಜೆಡಿಎಸ್‌ ಪರಿಸ್ಥಿತಿ ಬಸ್‌ ಸ್ಟ್ಯಾಂಡ್‌ ತರ ಆಗಿದೆ. ಬಿಜೆಪಿಯನ್ನ ಲವ್ ಮಾಡಿದ್ದು ಆಯಿತು. ಈಗ ಅವರನ್ನ ಅಲ್ಲೇ ಬಿಟ್ಟು ಬಿಡಬೇಕು. ನಾನು ಕುಮಾರಸ್ವಾಮಿ ಜೊತೆಯಲ್ಲಿದ್ದಾಗ ಚನ್ನಪಟ್ಟಣದಲ್ಲಿ ನಾಲ್ಕು ಕೋಟಿ ಖರ್ಚು ಮಾಡಿ ಗೆದ್ದರು. ಈಗ ಈಗ ನಾನು ಅವರ ಜೊತೆಯಲ್ಲಿಲ್ಲ, 150 ಕೋಟಿ ಖರ್ಚು ಮಾಡಿ 25 ಸಾವಿರದಿಂದ ಸೋತಿದ್ದಾರೆ. ಅಲ್ಲಿಗೆ ಮುಸ್ಲಿಂರು ಇರದಿದ್ದರೇ ಜೆಡಿಎಸ್ ಗೆ ಒಂದು ಸ್ಥಾನವೂ ಬರುವುದಿಲ್ಲ. ಅವತ್ತು 19 ಜನ ಗೆದಿದ್ದು ಮುಸ್ಲಿಂರಿಂದ ಎಂಬುದು ಈಗ ಸಾಬೀತಾಗಿದೆ. ಈಗ ನಾವೇನು ಕಾಂಗ್ರೆಸ್ ಜೊತೆ ಹೋಗಲು ನಿರ್ಧಾರ ಮಾಡಿಲ್ಲ. ತೃತೀಯ ರಂಗ ಸ್ಥಾಪನೆಯ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ ಅಷ್ಟೇ ಎಂದರು.

ದೇಶ

ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಮೊದಲ ಕಾಂಗ್ರೆಸ್ ಶಾಸಕಾಂಗ ಸಭೆ ಇಂದು: ಬಿಡದಿಯಲ್ಲಿ ಮಹತ್ವದ ಚರ್ಚೆ

Published

on

ರಾಮನಗರ: ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಶಾಸಕಾಂಗ ಸಭೆ ಇಂದು ಸಂಜೆ 6.30ಕ್ಕೆ ರಾಮನಗರ ಜಿಲ್ಲೆಯ ಬಿಡದಿಯ ವಂಡರ್ ಲಾ ರೆಸಾರ್ಟ್‌ನಲ್ಲಿ ನಡೆಯಲಿದೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಮೊದಲ ಬಾರಿಗೆ ಈ ಶಾಸಕಾಂಗ ಸಭೆ ನಡೆಯುತ್ತಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲುವು ಖಚಿತಪಡಿಸಿಕೊಳ್ಳುವ ನಿಟ್ಟಿನಲ್ಲಿ ಪಕ್ಷದ ಶಾಸಕರೊಂದಿಗೆ ಸಮಾಲೋಚನೆ ನಡೆಸಲು ಈ ಸಭೆಯನ್ನು ಕರೆಯಲಾಗಿದೆ. ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಚಿವರು ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಭಾಗವಹಿಸಲಿದ್ದು, ಚುನಾವಣಾ ತಂತ್ರಗಾರಿಕೆ ಮತ್ತು ಮತಗಳ ಸಮನ್ವಯ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಇತ್ತೀಚಿನ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತೂ ಸಭೆಯಲ್ಲಿ ಮಾತುಕತೆ ನಡೆಯಲಿದೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿರುವ ಮೊದಲ ಶಾಸಕಾಂಗ ಸಭೆಯಾಗಿರುವುದರಿಂದ ಪಕ್ಷದ ಒಳರಾಜಕೀಯ ಮತ್ತು ಭವಿಷ್ಯದ ಕಾರ್ಯತಂತ್ರದ ದೃಷ್ಟಿಯಿಂದ ಇದು ಮಹತ್ವ ಪಡೆದಿದೆ.

ಸಭೆ ಹಿನ್ನೆಲೆಯಲ್ಲಿ ರೆಸಾರ್ಟ್ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಭದ್ರತಾ ದೃಷ್ಟಿಯಿಂದ ಸಾರ್ವಜನಿಕರ ಪ್ರವೇಶವನ್ನು ಸಂಜೆ ಬಳಿಕ ನಿರ್ಬಂಧಿಸಲಾಗಿದ್ದು, ಕಾಂಗ್ರೆಸ್ ಶಾಸಕರು ಮತ್ತು ಆಹ್ವಾನಿತರಿಗೆ ಮಾತ್ರ ಪ್ರವೇಶ ಕಲ್ಪಿಸಲಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಅಭ್ಯರ್ಥಿಯ ಗೆಲುವಿಗೆ ಅಗತ್ಯವಿರುವ ಬೆಂಬಲವನ್ನು ಕ್ರೋಢೀಕರಿಸುವ ಉದ್ದೇಶದಿಂದ ಈ ಸಭೆ ನಡೆಸುತ್ತಿದ್ದು, ಸಭೆಯ ಬಳಿಕ ಮಹತ್ವದ ರಾಜಕೀಯ ಸಂದೇಶ ಹೊರಬೀಳುವ ನಿರೀಕ್ಷೆಯಿದೆ.

Continue Reading

ದೇಶ

ಗ್ಯಾರಂಟಿ ಯೋಜನೆಗಳಿಗೆ ಸರ್ಜರಿ? ಮರು ಅರ್ಜಿ ಕಡ್ಡಾಯ ಸಾಧ್ಯತೆ; ಸರ್ಕಾರದ 100 ಕೋಟಿ ರೂ. ಉಳಿತಾಯ ಪ್ಲ್ಯಾನ್

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಸಿದ್ಧತೆಗಳು ಜೋರಾಗಿದ್ದು, ಫಲಾನುಭವಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಕೆ ಮಾಡಬೇಕಾಗುವ ಸಾಧ್ಯತೆ ಇದೆ. ಯೋಜನೆಗಳ ದುರುಪಯೋಗ ತಡೆಯುವ ಜೊತೆಗೆ ಅನರ್ಹರನ್ನು ಪಟ್ಟಿಯಿಂದ ಹೊರಗಿಡುವ ಮೂಲಕ ಸರ್ಕಾರ ವರ್ಷಕ್ಕೆ ಕೋಟ್ಯಂತರ ರೂಪಾಯಿ ಉಳಿತಾಯ ಮಾಡುವ ಗುರಿ ಹೊಂದಿದೆ.

ಸರ್ಕಾರವು ವಿಶೇಷವಾಗಿ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳ ಮಾಹಿತಿಯನ್ನು ಮರುಪರಿಶೀಲಿಸಲು ಮುಂದಾಗಿದೆ. ಮೃತರ ಹೆಸರಿನಲ್ಲಿ ಹಣ ವರ್ಗಾವಣೆ ಆಗುತ್ತಿರುವ ಪ್ರಕರಣಗಳು, ಆದಾಯ ತೆರಿಗೆ (ಐಟಿ) ಹಾಗೂ ಜಿಎಸ್‌ಟಿ ಪಾವತಿದಾರರು ಯೋಜನೆಗಳ ಲಾಭ ಪಡೆಯುತ್ತಿರುವುದು ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಪರಿಷ್ಕರಣೆಯ ಬಳಿಕ ಸುಮಾರು 3 ರಿಂದ 4 ಲಕ್ಷ ಅನರ್ಹ ಫಲಾನುಭವಿಗಳನ್ನು ಕೈಬಿಡುವ ಸಾಧ್ಯತೆ ಇದೆ.

ಪ್ರಸ್ತುತ ಗೃಹಲಕ್ಷ್ಮಿ ಯೋಜನೆಯಡಿ 1.24 ಕೋಟಿ ಮಹಿಳೆಯರು ಪ್ರತಿ ತಿಂಗಳು ₹2,000 ನೆರವು ಪಡೆಯುತ್ತಿದ್ದು, ಸರ್ಕಾರ ತಿಂಗಳಿಗೆ ₹2,480 ಕೋಟಿ ಹಾಗೂ ವರ್ಷಕ್ಕೆ ₹29,760 ಕೋಟಿ ವೆಚ್ಚ ಮಾಡುತ್ತಿದೆ. ಈ ಯೋಜನೆಗೆ ಏಪ್ರಿಲ್ ಅಂತ್ಯದವರೆಗೆ ಒಟ್ಟು ₹72,253 ಕೋಟಿ ಪಾವತಿಸಲಾಗಿದೆ.

ಗೃಹಜ್ಯೋತಿ ಯೋಜನೆಯಡಿ 1.64 ಕೋಟಿ ಗ್ರಾಹಕರು 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ಪಡೆಯುತ್ತಿದ್ದು, ಇದರ ವೆಚ್ಚ ₹26,115 ಕೋಟಿಗೆ ತಲುಪಿದೆ. ಅನ್ನಭಾಗ್ಯ ಯೋಜನೆಗೆ ಇದುವರೆಗೆ ₹18,897 ಕೋಟಿ ವೆಚ್ಚವಾಗಿದ್ದರೆ, ಶಕ್ತಿ ಯೋಜನೆಯಡಿ ಮಹಿಳೆಯರು 757.62 ಕೋಟಿ ಉಚಿತ ಪ್ರಯಾಣ ಟಿಕೆಟ್‌ಗಳ ಪ್ರಯೋಜನ ಪಡೆದಿದ್ದು, ಇದರ ಮೌಲ್ಯ ₹19,890 ಕೋಟಿ ಎಂದು ಅಂದಾಜಿಸಲಾಗಿದೆ.

ಇನ್ನು ಯುವನಿಧಿ ಯೋಜನೆಯಡಿ 3.59 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಪದವೀಧರರಿಗೆ ನೆರವು ನೀಡಲಾಗಿದ್ದು, ಈವರೆಗೆ ₹1,115 ಕೋಟಿ ಪಾವತಿಸಲಾಗಿದೆ.

ಒಟ್ಟಾರೆ, ರಾಜ್ಯ ಸರ್ಕಾರವು ಐದು ಗ್ಯಾರಂಟಿ ಯೋಜನೆಗಳಿಗಾಗಿ ಇದುವರೆಗೆ ₹1,38,270.21 ಕೋಟಿ ವೆಚ್ಚ ಮಾಡಿದ್ದು, ಅನರ್ಹ ಫಲಾನುಭವಿಗಳನ್ನು ಗುರುತಿಸಿ ಯೋಜನೆಗಳನ್ನು ಮತ್ತಷ್ಟು ಪರಿಣಾಮಕಾರಿಯಾಗಿಸಲು ಪರಿಷ್ಕರಣೆ ನಡೆಸಲು ಮುಂದಾಗಿದೆ.

Continue Reading

ದೇಶ

ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಕ್ರಮ: ಗೃಹಲಕ್ಷ್ಮಿಯಿಂದ ಐಟಿ, ಜಿಎಸ್‌ಟಿ ಪಾವತಿದಾರರು ಔಟ್

Published

on

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ Gruha Lakshmi Scheme ಯೋಜನೆಯಲ್ಲಿ ಭಾರೀ ಪರಿಷ್ಕರಣೆ ನಡೆಸಲಾಗಿದ್ದು, ರಾಜ್ಯಾದ್ಯಂತ ಒಟ್ಟು 3.89 ಲಕ್ಷ ಅನರ್ಹ ಫಲಾನುಭವಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಸರ್ಕಾರಿ ಇಲಾಖೆಗಳ ಮಾಹಿತಿಯನ್ನು ಪರಿಶೀಲಿಸಿದ ಬಳಿಕ ಈ ಕ್ರಮ ಕೈಗೊಂಡಿದೆ.

ಯೋಜನೆಯ ದುರುಪಯೋಗವನ್ನು ತಡೆಯುವ ಉದ್ದೇಶದಿಂದ ಕೈಗೊಳ್ಳಲಾದ ಈ ಕ್ರಮದಿಂದ ಸರ್ಕಾರದ ಬೊಕ್ಕಸಕ್ಕೆ ಪ್ರತಿ ತಿಂಗಳು ಸುಮಾರು ₹77 ಕೋಟಿ ಉಳಿತಾಯವಾಗಲಿದೆ ಎಂದು ಇಲಾಖೆ ಅಂದಾಜಿಸಿದೆ. ಅನರ್ಹ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆಯನ್ನು ತಕ್ಷಣದಿಂದಲೇ ಸ್ಥಗಿತಗೊಳಿಸಲಾಗಿದೆ.

ಇಲಾಖೆಯ ಮಾಹಿತಿಯ ಪ್ರಕಾರ, ಆದಾಯ ತೆರಿಗೆ (ಐಟಿ) ಹಾಗೂ ಜಿಎಸ್‌ಟಿ ಪಾವತಿಸುತ್ತಿದ್ದ ಸುಮಾರು 1.94 ಲಕ್ಷ ಮಹಿಳೆಯರನ್ನು ಯೋಜನೆಯಿಂದ ಹೊರಗಿಡಲಾಗಿದೆ. ಜೊತೆಗೆ, ಮರಣ ಹೊಂದಿದ ಸುಮಾರು 1.95 ಲಕ್ಷ ಫಲಾನುಭವಿಗಳ ಹೆಸರಿನಲ್ಲಿ ಹಣ ಜಮೆಯಾಗುತ್ತಿರುವುದು ಪರಿಶೀಲನೆಯಲ್ಲಿ ಪತ್ತೆಯಾಗಿದ್ದು, ಅಂತಹ ಖಾತೆಗಳನ್ನೂ ರದ್ದುಗೊಳಿಸಲಾಗಿದೆ.

ಜಿಲ್ಲಾವಾರು ಪರಿಶೀಲನೆಯಲ್ಲಿ Bengaluru ನಗರ ಜಿಲ್ಲೆ ಮೊದಲ ಸ್ಥಾನದಲ್ಲಿದ್ದು, ಇಲ್ಲಿ 47,871 ಮಹಿಳೆಯರನ್ನು ಅನರ್ಹರೆಂದು ಗುರುತಿಸಲಾಗಿದೆ. ಬಳಿಕ Belagavi, Dakshina Kannada, Mysuru ಹಾಗೂ Tumakuru ಜಿಲ್ಲೆಗಳು ಅತಿ ಹೆಚ್ಚು ಅನರ್ಹ ಫಲಾನುಭವಿಗಳನ್ನು ಹೊಂದಿರುವ ಜಿಲ್ಲೆಗಳಾಗಿವೆ.

ಮುಂದಿನ ದಿನಗಳಲ್ಲಿ ನಕಲಿ ಫಲಾನುಭವಿಗಳು ಹಾಗೂ ತಾಂತ್ರಿಕ ಲೋಪಗಳನ್ನು ಸಂಪೂರ್ಣವಾಗಿ ತಡೆಯಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಯೋಮೆಟ್ರಿಕ್ ದೃಢೀಕರಣ ವ್ಯವಸ್ಥೆ ಜಾರಿಗೆ ತರಲು ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಅರ್ಹ ಫಲಾನುಭವಿಗಳಿಂದ ಮರು ದೃಢೀಕರಣ ಅಥವಾ ಮರು ಅರ್ಜಿ ಪ್ರಕ್ರಿಯೆ ನಡೆಸುವ ಸಾಧ್ಯತೆ ಇದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

Continue Reading

Trending