ಬೆಂಗಳೂರು
BWSSBಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಆರಂಭ
ಬೆಂಗಳೂರು: ಕಾವೇರಿ 5ನೇ ಹಂತದ ಕುಡಿಯುವ ನೀರಿನ ಸಂಪರ್ಕ ನೀಡುವ ನಿಟ್ಟಿನಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪ ತಡೆಗಟ್ಟಿ, ವ್ಯವಸ್ಥೆಯನ್ನು ಸರಳೀಕರಣಗೊಳಿಸಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ. ಈ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿಯಿಂದ ಮನೆ ಮನೆಗೂ ಕಾವೇರಿ ನೀರು ಸಂಪರ್ಕ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ತಿಳಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಬೃಹತ್ ಬೆಂಗಳೂರಿನ 110 ಹಳ್ಳಿಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಒದಗಿಸುವ ಯೋಜನೆಯಾದ ಕಾವೇರಿ 5 ಹಂತವನ್ನು ಅಕ್ಟೋಬರ್ 16ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸಿದ್ದರು. ಈ ಯೋಜನೆಯ ಅನುಷ್ಠಾನದಿಂದ ನಗರಕ್ಕೆ 775 ಎಂ.ಎಲ್.ಡಿಯಷ್ಟು ಹೆಚ್ಚುವರಿ ನೀರು ಲಭ್ಯವಾಗುತ್ತಿದೆ.
ಕಾವೇರಿ ಕುಡಿಯುವ ನೀರಿನ ಹೊಸ ಸಂಪರ್ಕಗಳನ್ನು ಪಡೆಯಲು ಈಗಾಗಲೇ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ಆದರೆ ಕೆಲವು ಕಡೆಗಳಲ್ಲಿ ಮಧ್ಯವರ್ತಿಗಳ ಹಸ್ತಕ್ಷೇಪದ ಬಗ್ಗೆ ದೂರುಗಳು ಕೇಳಿಬಂದಿವೆ. ಅಲ್ಲದೇ, ಆನ್ಲೈನ್ ಅರ್ಜಿ ಸಲ್ಲಿಕೆಯ ಬಗ್ಗೆ ಹಲವು ಗೊಂದಲಗಳ ಬಗ್ಗೆ ಗ್ರಾಹಕರು ಗಮನ ಸೆಳೆದಿದ್ದರು. ಈ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಿ ಹೊಸದಾಗಿ ಕುಡಿಯುವ ನೀರಿನ ಸಂಪರ್ಕ ಪಡೆಯುವ ವ್ಯವಸ್ಥೆಯನ್ನು ಸರಳೀಕರಣಗೊಳಿಸಿ, ಮಧ್ಯವರ್ತಿಗಳ ಹಸ್ತಕ್ಷೇಪವನ್ನು ತಪ್ಪಿಸುವ ನಿಟ್ಟಿನಲ್ಲಿ ಜನರ ಮನೆ ಬಾಗಿಲಿಗೆ ತೆರಳಿ ಕಾವೇರಿ ಕುಡಿಯುವ ನೀರಿನ ಸಂಪರ್ಕ ನೀಡುವಂತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ದೇಶನ ನೀಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಅಭಿಯಾನದಿಂದ ಹೊಸದಾಗಿ ಕಾವೇರಿ ನೀರಿನ ಸಂಪರ್ಕ ಪಡೆಯುವುದು ಬಹಳ ಸುಲಭವಾಗಿದೆ. ನಿಮ್ಮ ವ್ಯಾಪ್ತಿಯಲ್ಲಿ ನಡೆಯಲಿರುವ ಸಂಪರ್ಕ ಅಭಿಯಾನದಲ್ಲಿ ಪಾಲ್ಗೊಳ್ಳುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಯಾವುದೇ ಮಧ್ಯವರ್ತಿಗಳ ಸಹಾಯವಿಲ್ಲದೆ ಜನರು ಸಂಪರ್ಕ ಪಡೆದುಕೊಳ್ಳಬಹುದಾಗಿದೆ. ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು ಹಾಗೂ ಸಂಪರ್ಕ ಅಭಿಯಾನಗಳಲ್ಲಿ ಆಫ್ಲೈನ್ ಮೂಲಕವೂ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈಗಾಗಲೇ 8 ಗ್ರಾಮಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಗ್ರಾಮಗಳಿಗೂ ನೀರು ತಲುಪಿದ್ದು, ಸಂಪರ್ಕ ಪಡೆಯುವ ಗ್ರಾಹಕರಿಗೆ ಶೀಘ್ರವಾಗಿ ನೀರು ಸರಬರಾಜು ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದೇಶ
HAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
ಬೆಂಗಳೂರು: ತನಗೆ ಹಾಗೂ ಸ್ನೇಹಿತೆಯಾಗಿರುವ ನಟಿಗೆ ಉದ್ಯಮಿ ಅರವಿಂದ್ ರೆಡ್ಡಿಯ ಕಾಲು ಹಿಡಿಯುವಂತೆ ಎಚ್ಎಎಲ್ ಠಾಣೆಯ ಇನ್ಸ್ಪೆಕ್ಟರ್ ಬೆದರಿಸಿದ್ದಾರೆ ಎಂದು ಆರೋಪಿಸಿ ಬಿ.ಕೆ. ವೈಶಾಕ್ ಕರ್ನಾಟಕ ಹೈಕೋರ್ಟ್ಗೆ ಪ್ರಮಾಣ ಪತ್ರ ಸಲ್ಲಿಸಿದ್ದಾರೆ.
ಉದ್ಯಮಿ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿದ ಪ್ರಕರಣದಲ್ಲಿ ಎಚ್ಎಎಲ್ ಠಾಣಾ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಹಾಗೂ ಇನ್ಸ್ಪೆಕ್ಟರ್ ಅಜರುದ್ದೀನ್ ವಿರುದ್ಧ ವಿಚಾರಣೆ ನಡೆಸಲು ಸಕ್ಷಮ ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ವೈಶಾಕ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಇನ್ಸ್ಪೆಕ್ಟರ್ ಅಜರುದ್ದೀನ್ ಹಾಗೂ ಅರವಿಂದ್ ರೆಡ್ಡಿಯನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿದೆ.
ಕಾಲಿಗೆ ಬೀಳುವಂತೆ ಸೂಚನೆ?
ಗುರುವಾರ ಅರ್ಜಿ ವಿಚಾರಣೆಗೆ ಬಂದಾಗ, ವೈಶಾಕ್ ಪರ ವಕೀಲರು ಹಾಜರಾಗಿ ಮಹತ್ವದ ಆರೋಪ ಮಂಡಿಸಿದರು. ಫೆಬ್ರವರಿ 6ರಂದು ಅರ್ಜಿದಾರರನ್ನು ಬಿಡುಗಡೆ ಮಾಡಲು ಹೈಕೋರ್ಟ್ ಸೂಚಿಸಿದ್ದರೂ, ಠಾಣೆಗೆ ಪ್ರಕರಣದಲ್ಲಿ ಹೆಸರು ಕೇಳಿಬಂದ ನಟಿಯನ್ನೂ ಕರೆಸಲಾಗಿತ್ತು. ಅಲ್ಲದೆ, ಅರವಿಂದ್ ರೆಡ್ಡಿಯ ಕಾಲಿಗೆ ಬೀಳುವಂತೆ ವೈಶಾಕ್ಗೆ ಸೂಚನೆ ನೀಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಈ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಪ್ರಕರಣದ ಕುರಿತು ತೀರ್ಮಾನ ಕೈಗೊಳ್ಳುವ ಬಗ್ಗೆ ಪರಿಶೀಲನೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ಫೆಬ್ರವರಿ 17ಕ್ಕೆ ಮುಂದೂಡಿತು.
ಪ್ರಕರಣದ ಹಿನ್ನೆಲೆ
ಜನವರಿಯಲ್ಲಿ ವೈಶಾಕ್ ಕೊರಿಯರ್ ಮೂಲಕ ಅರವಿಂದ್ ರೆಡ್ಡಿಗೆ ಬೆದರಿಕೆ ಪತ್ರ ಕಳುಹಿಸಿ, ನಟಿಯೊಂದಿಗೆ ಇರುವ ಜಗಳ ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ 6ರಿಂದ 7 ಕೋಟಿ ರೂ. ಹಣವನ್ನು ಕಳುಹಿಸಬೇಕು ಎಂದು ಒತ್ತಾಯಿಸಿದ್ದರು ಎಂಬ ಆರೋಪ ಇದೆ. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಸೂಚಿಸಿದ್ದಾಗಿ ದೂರಿನಲ್ಲಿ ಹೇಳಲಾಗಿದೆ.
ಈ ಕುರಿತು ಅರವಿಂದ್ ರೆಡ್ಡಿ ದೂರು ನೀಡಿದ್ದು, ಎಚ್ಎಎಲ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಫೆಬ್ರವರಿ 2ರಂದು ನಟಿಯ ಮನೆಯಲ್ಲಿ ವೈಶಾಕ್ ಅವರನ್ನು ಬಂಧಿಸಲಾಗಿತ್ತು.
ಪ್ರಕರಣ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದು, ಮುಂದಿನ ವಿಚಾರಣೆ ಫೆಬ್ರವರಿ 17ರಂದು ನಡೆಯಲಿದೆ.
ದೇಶ
ಸಿಎಂ ಕುರ್ಚಿ ಉಳಿಸಿಕೊಳ್ಳಲು ಶಾಸಕರ ವಿದೇಶ ಪ್ರವಾಸ? ವಿಜಯೇಂದ್ರ ಗಂಭೀರ ಆರೋಪ
ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಕುರ್ಚಿ ಉಳಿಸಿಕೊಳ್ಳುವ ಸಲುವಾಗಿ ಕಾಂಗ್ರೆಸ್ ಶಾಸಕರನ್ನು ವಿದೇಶ ಪ್ರವಾಸಕ್ಕೆ ಕಳುಹಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರ ವಿದೇಶ ಪ್ರವಾಸ ವಿಚಾರವಾಗಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದರು. ಸರ್ಕಾರ ಬಂದ ಬಳಿಕ ಅನುದಾನ ಬೇಡಿಕೆ ಇಟ್ಟಿದ್ದರೂ ಗಂಗಕಲ್ಯಾಣ ಯೋಜನೆ, ಮನೆ ನಿರ್ಮಾಣ ಸೇರಿದಂತೆ ಹಲವು ಕಾರ್ಯಗಳು ನಡೆಯದೆ ಜನರಲ್ಲಿ ಅಸಮಾಧಾನ ಮೂಡಿದೆ ಎಂದು ಆರೋಪಿಸಿದರು. ಶಾಸಕರು ತಮ್ಮ ಖರ್ಚಿನಲ್ಲಿ ವಿದೇಶಕ್ಕೆ ಹೋಗುತ್ತಿದ್ದಾರೆ ಎಂಬ ಸಿಎಂ ಹೇಳಿಕೆಯನ್ನು ಪ್ರಶ್ನಿಸಿ, “ತಮ್ಮ ಕುರ್ಚಿ ಉಳಿಸಿಕೊಳ್ಳಲು ತಾವೇ ಅವರನ್ನು ಕಳಿಸುತ್ತಿದ್ದಾರೆ” ಎಂದು ಟೀಕಿಸಿದರು.
ರೆಸಾರ್ಟ್ ರಾಜಕೀಯದ ಮೇಲೆ ಲೇವಡಿ
ಕಾಂಗ್ರೆಸ್ ಶಾಸಕರು ರೆಸಾರ್ಟ್ ಬುಕ್ ಮಾಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, “ಅವರಿಗೆ ಅನುಕೂಲವಾಗಲಿ ಎಂದು ಬಿಜೆಪಿಯಿಂದ ಬಡಿಗೆ ರೆಡಿ ಮಾಡಿಸಿದ್ದೇವೆ” ಎಂದು ವ್ಯಂಗ್ಯವಾಡಿದರು. ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ನಡುವೆ ಅಂತರದ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು.
₹5,000 ಕೋಟಿ ಎಲ್ಲಿಗೆ ಹೋಯ್ತು?
ಗೃಹ ಲಕ್ಷ್ಮೀ ಯೋಜನೆಯ ₹5,000 ಕೋಟಿ ಹಣದ ಬಗ್ಗೆ ಸ್ಪಷ್ಟ ಉತ್ತರ ಸಿಗಲಿಲ್ಲ ಎಂದು ಆರೋಪಿಸಿದ ಅವರು, “ಹಣ ಉಪಯೋಗ ಆಯ್ತಾ? ದುರಪಯೋಗ ಆಯ್ತಾ? ಸಿಎಂ ಉತ್ತರ ಕೊಡಬೇಕು” ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರಕ್ಕೆ ನಕಲಿ ದಾಖಲೆ ನೀಡಿರುವ ವಿಚಾರದಲ್ಲೂ ಮುಂದಿನ ದಿನಗಳಲ್ಲಿ ವಿವರವಾದ ಸುದ್ದಿಗೋಷ್ಠಿ ನಡೆಸುವುದಾಗಿ ತಿಳಿಸಿದರು.
ಪ್ರಾದೇಶಿಕ ಅಸಮಾನತೆ ಹೆಚ್ಚಳ
ಪ್ರಾದೇಶಿಕ ಅಸಮಾನತೆ ನಿವಾರಣೆ ಸಮಿತಿ ವರದಿ ಉಲ್ಲೇಖಿಸಿ, ರಾಜ್ಯದಲ್ಲಿ ಅಸಮಾನತೆ ಶೇಕಡಾ 60ರಿಂದ 72.08ಕ್ಕೆ ಏರಿಕೆಯಾಗಿದೆ ಎಂದು ಹೇಳಿದರು. ಕಿತ್ತೂರು ಹಾಗೂ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಹಿಂದುಳಿದಿದೆ ಎಂದು ಆರೋಪಿಸಿದರು.
ಕುರಿಗಾರರಿಗೆ ಪರಿಹಾರ ಬಾಕಿ
ಅನುಗ್ರಹ ಯೋಜನೆಯಡಿ 45 ಕೋಟಿ ರೂ. ಬಾಕಿ ಇಟ್ಟಿದ್ದು, 90 ಸಾವಿರ ಸಾವಿನ ಪೈಕಿ ಕೇವಲ 30 ಸಾವಿರ ಕುರಿಮರಿಗಳಿಗೆ ಮಾತ್ರ ಪರಿಹಾರ ನೀಡಲಾಗಿದೆ ಎಂದು ಆರೋಪಿಸಿದರು.
ಬಿಜೆಪಿ ಕಾರ್ಯಕಾರಿಣಿ ಸಭೆ
ಫೆಬ್ರವರಿ 19ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಸರ್ಕಾರದ ವೈಫಲ್ಯಗಳು ಮತ್ತು ಮುಂದಿನ ಚುನಾವಣಾ ತಂತ್ರಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದು ಹೇಳಿದರು.
ದೇಶ
BESCOMಗೆ C-ರೇಟಿಂಗ್ ಶಾಕ್: ದೇಶದ 54 ಎಸ್ಕಾಂಗಳಲ್ಲಿ 51ನೇ ಸ್ಥಾನ
ಬೆಂಗಳೂರು: ದೇಶದ 54 ವಿದ್ಯುತ್ ವಿತರಣಾ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ವಿದ್ಯುತ್ ಸಚಿವಾಲಯ ಮೌಲ್ಯಮಾಪನ ಮಾಡಿದ್ದು, ಕರ್ನಾಟಕದ ಬೆಸ್ಕಾಂ (BESCOM) 51ನೇ ಸ್ಥಾನಕ್ಕೆ ಕುಸಿದಿದೆ. 14ನೇ ವಾರ್ಷಿಕ ಸಂಯೋಜಿತ ರೇಟಿಂಗ್ ಮತ್ತು ಶ್ರೇಯಾಂಕ ವರದಿಯಲ್ಲಿ ಬೆಸ್ಕಾಂ ಕಳಪೆ ಪ್ರದರ್ಶನ ನೀಡಿದ ಸಂಸ್ಥೆಗಳ ಪಟ್ಟಿಯಲ್ಲಿ ಸೇರಿದೆ.
ವಿದ್ಯುತ್ ಸಂಸ್ಥೆಗಳ ಕಾರ್ಯಕ್ಷಮತೆಯನ್ನು ಸಂಗ್ರಹಣಾ ದಕ್ಷತೆ, ಬಿಲ್ಲಿಂಗ್ ದಕ್ಷತೆ, ಪ್ರಸರಣ ನಷ್ಟ, ಆಡಿಟ್ ಖಾತೆಗಳ ಲಭ್ಯತೆ ಸೇರಿದಂತೆ 15 ಪ್ರಮುಖ ಮಾನದಂಡಗಳ ಆಧಾರದಲ್ಲಿ ಶ್ರೇಯಾಂಕ ನೀಡಲಾಗಿದೆ. ಈ ಸಾಲಿನ ವರದಿಯಲ್ಲಿ ಬೆಸ್ಕಾಂ 100ರಲ್ಲಿ ಕೇವಲ 12.44 ಅಂಕಗಳನ್ನು ಪಡೆದು C-ರೇಟಿಂಗ್ ಮತ್ತು ‘ಕೆಂಪು ಕಾರ್ಡ್’ ಪಡೆದಿದೆ.
ವರದಿ ಪ್ರಕಾರ, ಬೆಸ್ಕಾಂ 13,819 ಕೋಟಿ ರೂ. ಸಂಚಿತ ನಷ್ಟ ಹಾಗೂ 22,611 ಕೋಟಿ ರೂ. ಸ್ಥಾಯಿ ಸಾಲವನ್ನು ಹೊಂದಿದೆ. 2025ನೇ ಹಣಕಾಸು ವರ್ಷದಲ್ಲಿ ಮಾತ್ರ 5,476 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ತಿಳಿಸಿದೆ.
ಕಳೆದ ವರ್ಷಕ್ಕಿಂತ ಕುಸಿತ
ಹಿಂದಿನ 13ನೇ ವಾರ್ಷಿಕ ರೇಟಿಂಗ್ನಲ್ಲಿ ಬೆಸ್ಕಾಂ 100ರಲ್ಲಿ 40.43 ಅಂಕಗಳನ್ನು ಪಡೆದು B-ದರ್ಜೆಯೊಂದಿಗೆ 34ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ 51ನೇ ಸ್ಥಾನಕ್ಕೆ ಜಾರಿದ್ದು ಕಾರ್ಯಕ್ಷಮತೆಯಲ್ಲಿ ಕುಸಿತ ಸ್ಪಷ್ಟವಾಗಿದೆ.
ಆಶ್ಚರ್ಯಕರವಾಗಿ, ಕರ್ನಾಟಕದ ಯಾವುದೇ ಎಸ್ಕಾಂಗಳು ಟಾಪ್ 10 ಅಥವಾ ಟಾಪ್ 20 ಪಟ್ಟಿಯಲ್ಲಿ ಸ್ಥಾನ ಪಡೆದಿಲ್ಲ. ಆದರೆ ಮೆಸ್ಕಾಂ (MESCOM) 26ನೇ ಸ್ಥಾನ ಪಡೆದು ರಾಜ್ಯದ ಇತರ ಸಂಸ್ಥೆಗಳಿಗಿಂತ ಉತ್ತಮ ಪ್ರದರ್ಶನ ನೀಡಿದೆ.
ಸುಧಾರಣೆ ಅಗತ್ಯ
ತಜ್ಞರು ರಾಜ್ಯ ಸರ್ಕಾರವು ರಚನಾತ್ಮಕ ಸುಧಾರಣೆಗಳನ್ನು ಜಾರಿಗೆ ತರದ ಹೊರತು ಎಸ್ಕಾಂಗಳ ಪರಿಸ್ಥಿತಿ ಸುಧಾರಿಸುವುದು ಕಷ್ಟ ಎಂದು ಅಭಿಪ್ರಾಯಪಟ್ಟಿದ್ದಾರೆ. KERC ಸಲಹಾ ಸಮಿತಿಯ ಮಾಜಿ ಸದಸ್ಯ ಎಂ.ಜಿ. ಪ್ರಭಾಕರ್, “ಗುರುಚರಣ್ ಸಮಿತಿ ವರದಿ ಎಸ್ಕಾಂಗಳನ್ನು ಪುನರುಜ್ಜೀವನಗೊಳಿಸಲು ರಚನಾತ್ಮಕ ಮತ್ತು ಕ್ರಿಯಾತ್ಮಕ ಸುಧಾರಣೆಗಳನ್ನು ಸೂಚಿಸಿತ್ತು. ಇಂತಹ ಸುಧಾರಣೆಗಳನ್ನು ತ್ವರಿತವಾಗಿ ಜಾರಿಗೆ ತರುವ ಅವಶ್ಯಕತೆ ಇದೆ” ಎಂದು ಹೇಳಿದ್ದಾರೆ.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಪ್ರತಿಕ್ರಿಯಿಸಿ, “ಕೆಲವು ಲೆಕ್ಕಪತ್ರ ಸಮಸ್ಯೆಗಳಿವೆ. ಅವನ್ನು ಗುರುತಿಸಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ಇತರ ಅಂಶಗಳಲ್ಲಿ ಕಾರ್ಯಕ್ಷಮತೆ ತೃಪ್ತಿಕರವಾಗಿದೆ. ಆದಾಯದ ಬೆಳವಣಿಗೆ ಆರೋಗ್ಯಕರವಾಗಿದೆ” ಎಂದು ತಿಳಿಸಿದ್ದಾರೆ.
-
ಬೆಂಗಳೂರು16 hours agoBENGALURU : ವಸಂತಪುರ ಶ್ರೀವಸಂತವಲ್ಲಭರಾಯ ಸ್ವಾಮಿಯ ಶಯನೋತ್ಸವ ವೈಭವ
-
ದೇಶ13 hours ago2026 ಪ್ರೇಮಿಗಳ ದಿನ ಶನಿವಾರ: ರೋಮ್ಯಾಂಟಿಕ್ ವಾರಾಂತ್ಯಕ್ಕೆ ಟಾಪ್ 5 ಪ್ರವಾಸ ತಾಣಗಳು
-
ದೇಶ15 hours agoGBA ELECTION : 5 ಪಾಲಿಕೆಗಳಿಗೆ ವಾರ್ಡ್ ಗಡಿ ಪಾಲನೆ ಕಡ್ಡಾಯ – ಮುಖ್ಯ ಆಯುಕ್ತ ಸೂಚನೆ
-
ಕ್ರೀಡೆ10 hours agoIND vs PAK ಹೈವೋಲ್ಟೇಜ್ ಪಂದ್ಯಕ್ಕೆ ಮುನ್ನ ಉಸ್ಮಾನ್ ತಾರಿಕ್ ಎಚ್ಚರಿಕೆ: “ಭಾರತೀಯರು ನನ್ನ ಬೌಲಿಂಗ್ಗೆ ಹೆದರುತ್ತಿದ್ದಾರೆ!”
-
ದೇಶ13 hours agoLATEST : “ದೆಹಲಿಗೆ ಬಂದಿರೋದೇ ರಾಜಕಾರಣಕ್ಕೆ”: ಡಿಕೆಶಿ ಹೇಳಿಕೆ ಕುತೂಹಲ
-
ಅಪರಾಧ15 hours agoCRIME : ಬೆಂಗಳೂರಿನಲ್ಲಿ ಮತ್ತೆ ರೋಡ್ ರೇಜ್: ಬಾನೆಟ್ ಮೇಲೆ ವ್ಯಕ್ತಿ ಇದ್ದರೂ 1 ಕಿ.ಮೀ ಕಾರು ಚಲಾಯಿಸಿದ ಚಾಲಕ
-
ದೇಶ14 hours agoBHARATH BANDH : ದೇಶವ್ಯಾಪಿ ಮುಷ್ಕರ: 30 ಕೋಟಿ ಕಾರ್ಮಿಕರ ಹೋರಾಟ, ಹಲವು ರಾಜ್ಯಗಳಲ್ಲಿ ಬಂದ್ ಪರಿಣಾಮ
-
ದೇಶ10 hours agoHAL ಠಾಣೆ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ಆರೋಪ: ಅರವಿಂದ್ ರೆಡ್ಡಿ ಕಾಲಿಗೆ ಬೀಳಲು ಬೆದರಿಕೆ?
