ರಾಜಕೀಯ
ಕೋವಿಡ್ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬೊಮ್ಮಾಯಿ: ಸಿಎಂ ಸಿದ್ದರಾಮಯ್ಯ
ಹುಬ್ಬಳ್ಳಿ: ಕೊರೋನಾ ಸಾವಿನಲ್ಲೂ ಮಾನವೀಯತೆ ಮರೆತು ಲೂಟಿ ಮಾಡಿದ ಬಸವರಾಜ ಬೊಮ್ಮಾಯಿ ಅವರ ಮಗ ಗೆಲ್ಲಬೇಕಾ? ಎಂದು ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಪ್ರಶ್ನಿಸಿದರು.
ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಹಾವನೂರು ಗ್ರಾಮದಲ್ಲಿ ಸೋಮವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಂದರೆ ಭ್ರಷ್ಟಾಚಾರ ಜನತಾ ಪಾರ್ಟಿ. ಕೋವಿಡ್ ವೇಳೆ ಹೆಣಗಳಿಂದಲೂ ಹಣ ಲೂಟಿ ಮಾಡಿದ್ದಾರೆ. ಕರ್ನಾಟಕ ಇತಿಹಾಸದಲ್ಲಿ ಇದೆ ಮೊದಲು. ಹೆಣಗಳ ಮೇಲೆ ಹಣ ಮಾಡಿರುವ ಸಿಎಂ ಇದ್ದರೆ ಅದು ಬಸವರಾಜ ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು.
ಹೆಣಗಳ ಮೇಲೂ ಹಣ ಮಾಡಿದವರ ಮಗ ಗೆಲ್ಲಬೇಕಾ? ಕೊರೋನಾ ಸಂದರ್ಭದಲ್ಲಿ ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದು ದಾಖಲೆ ಮಾಡಿದವರು ಬೊಮ್ಮಾಯಿ. ಸತ್ತ ಹೆಣಗಳ ಲೆಕ್ಕದಲ್ಲೂ ಲಂಚ ಪಡೆದ ಏಕೈಕ ಸರ್ಕಾರ ಬೊಮ್ಮಾಯಿ ಅವರದ್ದಾಗಿತ್ತು. ಕೋವಿಡ್ ಸಂದರ್ಭದಲ್ಲೂ, ಸಂಕಷ್ಟದಲ್ಲಿ ನರಳುವಾಗಲೂ ಲಂಚ ಪಡೆದವರ ಪುತ್ರನನ್ನು ಸೋಲಿಸಿ ಎಂದು ಹೇಳಿದರು.
ಬೊಮ್ಮಾಯಿ ಪುತ್ರ ಗೆಲ್ಲಬೇಕಾ? ಯಾಸಿರ್ ಪಠಾಣ್ ಗೆಲ್ಲಬೇಕಾ? ನೀವೇ ನಿರ್ಧಾರ ಮಾಡಿ. 160 ಭರವಸೆಗಳ ಪೈಕಿ 158 ಭರವಸೆ ಈಡೇರಿಸಿದ್ದೇವೆ. 5 ಗ್ಯಾರಂಟಿ ಯೋಜನೆಗಳನ್ನು ಸಹ ಜಾರಿ ಮಾಡಿದ್ದೇವೆ. ಗ್ಯಾರಂಟಿಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಪ್ರಧಾನ ಮಂತ್ರಿಗಳು ಹೇಳಿದ್ದರು. ಗ್ಯಾರಂಟಿ ಜಾರಿಯಾದರೆ ರಾಜ್ಯ ದಿವಾಳಿ ಆಗುತ್ತೆ ಎಂದು ಹೇಳಿದ್ದರು. ಅಧಿಕಾರ ವಹಿಸಿಕೊಂಡ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ.
ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಮೊಮ್ಮಗ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ವಿರುದ್ಧ ಸಾಮಾನ್ಯ ಕುಟುಂಬದ ಪಠಾಣ್ ಅವರನ್ನು ಗೆಲ್ಲಿಸಿ ಎಂದರು. ಅಜ್ಜಂಪೀರ್ ಖಾದ್ರಿ ನನಗೆ ತುಂಬಾ ಬೇಕಾದವರು. ನನಗಾಗಿ ಖಾದ್ರಿ ಶಾಸಕ ಸ್ಥಾನ ತ್ಯಜಿಸಲು ಸಿದ್ದರಾಗಿದ್ದರು. ನಾನು ಸೋತು, ಖಾದ್ರಿ ಗೆದ್ದಿದ್ದಾಗ ಸ್ವತಃ ಖಾದ್ರಿಯವರೇ ಬಂದು ಅವರು ಶಾಸಕ ಸ್ಥಾನವನ್ನು ನನಗಾಗಿ ಬಿಟ್ಟು ಕೊಡಲು ಸಿದ್ದರಾಗಿದ್ದರು. ನಮ್ಮಿಬ್ಬರ ನಡುವೆ ಅಷ್ಟು ಆತ್ಮೀಯತೆ. ಹೀಗಾಗಿ ನಮ್ಮ ಮಾತಿಗೆ ಬೆಲೆ ನೀಡಿ ನಾಮಪತ್ರ ವಾಪಾಸ್ ಪಡೆದು ಪಠಾಣ್ ಅವರನ್ನು ಗೆಲ್ಲಿಸಲು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ರೈತರ ಸಾಲ ಮನ್ನಾ ಮಾಡಿ ಎಂದರೆ, ರೈತರ ಸಾಲ ಮನ್ನಾ ಮಾಡಲು ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಹೋಗಲಿ ಬಸವರಾಜ ಬೊಮ್ಮಾಯಿ ಅವರೂ ಮುಖ್ಯಮಂತ್ರಿಯಾಗಿ ರೈತರ ಸಾಲ ಮನ್ನಾ ಮಾಡಲಿಲ್ಲ. ಇವರು ಯಾವ ಮುಖ ಇಟ್ಟುಕೊಂಡು ರೈತರ ಮತ ಕೇಳುತ್ತಿದ್ದಾರೆಂದು ಹೇಳಿದರು.
ವಕ್ಫ್ ಆಸ್ತಿ ಈಗ ಆಗಿರೋದಾ? ಬಿಜೆಪಿ ಸರ್ಕಾರದ ಅವಧಿಯಲ್ಲಿಯೇ ನೋಟಿಸ್ ಕೊಟ್ಟಿದಾರೆ. ಸದಾನಂದಗೌಡ, ಶೆಟ್ಟರ್, ಬೊಮ್ಮಾಯಿ ಇದ್ದಾಗಲೂ ನೋಟಿಸ್ ಕೊಟ್ಟಿದ್ದಾರೆ. ಉಪ ಚುನಾವಣೆಗೋಸ್ಕರ ರಾಜಕೀಯ ಮಾಡುತ್ತಿದ್ದಾರೆ. ಯಾವ ಕಾರಣಕ್ಕೂ ಕೂಡಾ ರೈತರನ್ನು ಒಕ್ಕಲೆಬ್ಬಿಸಲ್ಲ. ವಕ್ಫ್ ಬೋರ್ಡ್ನವರು ಯಾವ ಕಾರಣಕ್ಕೂ ಖಾಲಿ ಮಾಡಿಸಂಗಿಲ್ಲ. ಕಂದಾಯ ದಾಖಲೆಗಳಲ್ಲಿ ವಕ್ಫ್ ಅಂತ ಇದ್ದರೂ ರದ್ದು ಮಾಡಲು ಹೇಳಿದಿನಿ. ಆದರೂ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ ಎಂದು ದೂರಿದರು.
ನನ್ನ ಮೇಲೆ ಸುಳ್ಳು ಆರೋಪ ಮಾಡಿ ಕಳಂಕ ತರುವ ಕೆಲಸ ಮಾಡ್ತಿದ್ದಾರಲ್ವಾ? ಈ ಬಿಜೆಪಿಯವರನ್ನು ನಂಬುತ್ತೀರಾ? ಸಿದ್ದರಾಮಯ್ಯನನ್ನು ಕಂಡರೆ ಅವರಿಗೆ ಹೊಟ್ಟೆ ಉರಿ, ನನ್ನ ಜೀವನ ತೆರೆದಿಟ್ಟ ಪುಸ್ತಕ. ಪಠಾಣ್ ಅವರನ್ನು ಗೆಲ್ಲಿಸಿದರೆ ಬಿಜೆಪಿಯವರಿಗೆ ಉತ್ತರ ಕೊಟ್ಟ ಹಾಗೆ ಆಗುತ್ತೆ. ಪಠಾಣ್ ಗೆದ್ದರೆ ನಾನು ಗೆದ್ದಂತೆ. ಶಿಗ್ಗಾಂವಿ, ಸವಣೂರು ಏತ ನೀರಾವರಿ ಯೋಜನೆಗಳಿಗೆ ಮತ್ತು ಬಾಡ ಕನಕ ಅರಮನೆಗೆ ಅನುದಾನ ಬಿಡುಗಡೆ ಮಾಡಿದ್ದೇ ನಾನು ಎಂದು ಸಿಎಂ ತಿಳಿಸಿದರು.
ಬೆಂಗಳೂರು
Nice Company ಖರೀದಿಗೆ ಸಿಎಂ ಯತ್ನ? ಕುಮಾರಸ್ವಾಮಿ ಗಂಭೀರ ಆರೋಪ, ದಾಖಲೆ ಬಿಡುಗಡೆ ಘೋಷಣೆ
ಬೆಂಗಳೂರು: ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಗೆ ಸಂಬಂಧಿಸಿದ ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ರಾಜ್ಯದ ಹಾಲಿ ಮುಖ್ಯಮಂತ್ರಿ ಬೇನಾಮಿ ಕಂಪನಿಗಳ ಮೂಲಕ Nice Company ಯನ್ನು ಖರೀದಿಸಲು ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ಹಾಗೂ ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾತನಾಡಿದ ಅವರು, ಬಿಎಂಐಸಿ ಯೋಜನೆಯ ಹೆಸರಿನಲ್ಲಿ ಸಾವಿರಾರು ಎಕರೆ ಭೂಮಿಯನ್ನು ಲೂಟಿ ಮಾಡಲು ಸಂಚು ನಡೆಯುತ್ತಿದೆ ಎಂದು ಆರೋಪಿಸಿದರು. ಈ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಮುಂದಿನ ವಾರ ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ನೈಸ್ ಸಂಸ್ಥೆಯ ಅಕ್ರಮಗಳಲ್ಲಿ ರಾಜ್ಯದ ಹಾಲಿ ಮುಖ್ಯಮಂತ್ರಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ ಅವರು, ನೈಸ್ ಕಂಪನಿಯನ್ನು ಯಾರು ಸ್ವಾಧೀನಪಡಿಸಿಕೊಳ್ಳುತ್ತಿದ್ದಾರೆ ಎಂಬುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜನತೆಯ ಮುಂದೆ ಬಹಿರಂಗಪಡಿಸಬೇಕು ಎಂದು ಸವಾಲು ಹಾಕಿದರು.
‘ಬೇನಾಮಿ ಕಂಪನಿಗಳ ಮೂಲಕ ವ್ಯವಹಾರ’
ನೈಸ್ ಯೋಜನೆಯನ್ನು ಯಾರು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಮತ್ತು ಈ ವ್ಯವಹಾರದಲ್ಲಿ ಬೇನಾಮಿ ಕಂಪನಿಗಳ ಮೂಲಕ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬ ಮಾಹಿತಿ ತಮ್ಮ ಬಳಿ ಇದೆ ಎಂದು ಕುಮಾರಸ್ವಾಮಿ ಹೇಳಿದರು.
ನೈಸ್ ಯೋಜನೆಗೂ ಮುಖ್ಯಮಂತ್ರಿಗೂ ಇರುವ ಸಂಬಂಧವೇನು? ನೈಸ್ ಸಂಸ್ಥೆಯೊಂದಿಗೆ ಯಾವುದೇ ಒಡಂಬಡಿಕೆ ಇದೆಯೇ? ಕಂಪನಿಯ ಮಾಲೀಕರೊಂದಿಗೆ ಯಾವ ರೀತಿಯ ಸಂಬಂಧ ಮತ್ತು ವ್ಯವಹಾರಗಳಿವೆ ಎಂಬುದನ್ನು ಮುಖ್ಯಮಂತ್ರಿ ಸ್ಪಷ್ಟಪಡಿಸಬೇಕು ಎಂದು ಅವರು ಒತ್ತಾಯಿಸಿದರು.
ತಮ್ಮ ವಿರುದ್ಧ ಬೇನಾಮಿ ಆಸ್ತಿ ಹೊಂದಿರುವ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಕುಮಾರಸ್ವಾಮಿ ಪುನರುಚ್ಚರಿಸಿದರು. ತಮ್ಮ ಬಳಿ ಯಾವುದೇ ಬೇನಾಮಿ ಆಸ್ತಿ ಇದ್ದರೆ ಅದನ್ನು ಬಹಿರಂಗಪಡಿಸುವಂತೆ ಅವರು ಸವಾಲು ಹಾಕಿದರು.
‘ಮುಂದಿನ ವಾರ ದಾಖಲೆ ಬಿಡುಗಡೆ’
ನೈಸ್ ಯೋಜನೆಗೆ ಸಂಬಂಧಿಸಿದಂತೆ ತಾವು ಕೇವಲ ರಾಜಕೀಯ ಆರೋಪ ಮಾಡುತ್ತಿಲ್ಲ. ತಮ್ಮ ಬಳಿ ದಾಖಲೆಗಳಿದ್ದು, ಮುಂದಿನ ವಾರ ಅವುಗಳನ್ನು ಜನರ ಮುಂದಿಡುವುದಾಗಿ ಕುಮಾರಸ್ವಾಮಿ ತಿಳಿಸಿದ್ದಾರೆ.
ನೈಸ್ ಯೋಜನೆಯಲ್ಲಿ ರೈತರ ಭೂಮಿ, ಒಪ್ಪಂದದ ನಿಯಮಗಳು ಹಾಗೂ ಸಂಸ್ಥೆಯ ವ್ಯವಹಾರಗಳ ಕುರಿತು ಈಗಾಗಲೇ ಜೆಡಿಎಸ್ ಸರ್ಕಾರದ ಗಮನ ಸೆಳೆದಿರುವ ಬೆನ್ನಲ್ಲೇ ಕುಮಾರಸ್ವಾಮಿ ಅವರ ಹೊಸ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿವೆ.
ಆದರೆ ಕುಮಾರಸ್ವಾಮಿ ಮಾಡಿರುವ ಆರೋಪಗಳಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಥವಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪ್ರತಿಕ್ರಿಯೆ ಈ ವರದಿ ವೇಳೆಗೆ ಲಭ್ಯವಾಗಿಲ್ಲ. ಮುಂದಿನ ವಾರ ದಾಖಲೆಗಳನ್ನು ಬಿಡುಗಡೆ ಮಾಡುವುದಾಗಿ ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ಕುತೂಹಲ ಮೂಡಿಸಿದೆ.
ಬೆಂಗಳೂರು
Nice ಯೋಜನೆ ವಿರುದ್ಧ JDS ಸಮರ: ಸರ್ಕಾರಕ್ಕೆ 554 ಎಕರೆ ಭೂಮಿ ಕುರಿತು ಮಹತ್ವದ ಮನವಿ
ಬೆಂಗಳೂರು: ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆಗೆ ಸಂಬಂಧಿಸಿದ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. Nice ಸಂಸ್ಥೆಯ ವಿರುದ್ಧ ಕಾನೂನು ಉಲ್ಲಂಘನೆ, ಹೆಚ್ಚುವರಿ ಭೂಮಿ ಬಳಕೆ ಹಾಗೂ ಒಪ್ಪಂದದ ನಿಯಮಗಳನ್ನು ಉಲ್ಲಂಘಿಸಿರುವ ಆರೋಪಗಳನ್ನು ಮಾಡಿರುವ JDS, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಸಲ್ಲಿಸಿ ಕಠಿಣ ಕ್ರಮಕ್ಕೆ ಆಗ್ರಹಿಸಿದೆ.
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ಬಾಬು ನೇತೃತ್ವದ ನಿಯೋಗವು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ನೈಸ್ ಸಂಸ್ಥೆಯು ಯೋಜನೆಗೆ ಸಂಬಂಧಿಸಿದ ಒಪ್ಪಂದದ ನಿಯಮಗಳನ್ನು ಸಂಪೂರ್ಣವಾಗಿ ಉಲ್ಲಂಘಿಸಿದೆ ಎಂದು ಆರೋಪಿಸಿದೆ. ಯೋಜನೆಗೆ ಸಂಬಂಧಿಸಿದಂತೆ ನ್ಯಾಯಾಲಯದ ಹಿಂದಿನ ಅಭಿಪ್ರಾಯಗಳನ್ನೂ ನಿಯೋಗ ಸರ್ಕಾರದ ಗಮನಕ್ಕೆ ತಂದಿದೆ.
ನೈಸ್ ಸಂಸ್ಥೆ ಸಂಗ್ರಹಿಸುತ್ತಿರುವ ಟೋಲ್ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ಜೆಡಿಎಸ್, ಅನಧಿಕೃತ ಟೋಲ್ ಸಂಗ್ರಹವನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಒತ್ತಾಯಿಸಿದೆ. ಇದರ ಜೊತೆಗೆ ಹೆಚ್ಚುವರಿಯಾಗಿ ಒದಗಿಸಲಾಗಿದೆ ಎನ್ನಲಾದ 554 ಎಕರೆ ಜಮೀನು ಹಾಗೂ ಕೆರೆ-ಕಟ್ಟೆಗಳನ್ನು ಸರ್ಕಾರ ಕೂಡಲೇ ತನ್ನ ವಶಕ್ಕೆ ಪಡೆಯಬೇಕು ಎಂದು ಆಗ್ರಹಿಸಿದೆ.
ಯೋಜನೆಯಲ್ಲಿ ನಡೆದಿರುವ ಆರ್ಥಿಕ ವ್ಯವಹಾರಗಳು ಮತ್ತು ಅಕ್ರಮಗಳನ್ನು ಪರಿಶೀಲಿಸಲು ವಿಶೇಷ ತನಿಖಾ ತಂಡ ರಚಿಸಬೇಕು. ಸಂಸ್ಥೆಯ ಆರ್ಥಿಕ ವ್ಯವಹಾರಗಳ ಕುರಿತು ಸಮಗ್ರ ಲೆಕ್ಕಪರಿಶೋಧನೆ ನಡೆಸಬೇಕು. ಬೆಂಗಳೂರು-ಮೈಸೂರು ಮೂಲಸೌಕರ್ಯ ಕಾರಿಡಾರ್ ಯೋಜನೆಯನ್ನು ಸರ್ಕಾರದ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಹೊಸ ಕಾನೂನು ರೂಪಿಸಬೇಕು ಎಂಬುದು ಜೆಡಿಎಸ್ನ ಪ್ರಮುಖ ಬೇಡಿಕೆಗಳಾಗಿವೆ.
ಕುಮಾರಸ್ವಾಮಿ ಆರೋಪಕ್ಕೆ ಮತ್ತಷ್ಟು ಕಾವು
ಈ ನಡುವೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಕೂಡ ನೈಸ್ ಯೋಜನೆ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ನೈಸ್ ಯೋಜನೆ ಹೆಸರಿನಲ್ಲಿ ರೈತರ ಸಾವಿರಾರು ಎಕರೆ ಭೂಮಿಯನ್ನು ಕಬಳಿಸುವ ಪ್ರಯತ್ನ ನಡೆದಿದೆ ಎಂದು ಅವರು ಆರೋಪಿಸಿದ್ದಾರೆ.
ಮುಖ್ಯಮಂತ್ರಿ ನೈಸ್ ಅಕ್ರಮಗಳಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂಬ ಗಂಭೀರ ಆರೋಪವನ್ನೂ ಕುಮಾರಸ್ವಾಮಿ ಮಾಡಿದ್ದಾರೆ. ಬೇನಾಮಿ ಸಂಸ್ಥೆಗಳ ಮೂಲಕ ನೈಸ್ ಕಂಪನಿಯನ್ನು ಖರೀದಿಸುವ ಪ್ರಯತ್ನ ನಡೆಯುತ್ತಿದೆ ಎಂಬ ಆರೋಪವನ್ನು ಮಾಡಿರುವ ಅವರು, ಮುಂದಿನ ದಿನಗಳಲ್ಲಿ ದಾಖಲೆಗಳೊಂದಿಗೆ ಮಾಹಿತಿ ಬಹಿರಂಗಪಡಿಸುವುದಾಗಿ ಹೇಳಿದ್ದಾರೆ.
ನೈಸ್ ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಮಾಡಿರುವ ಆರೋಪಗಳು ಮತ್ತು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂದಿನ ಕ್ರಮ ಕೈಗೊಳ್ಳುತ್ತದೆಯೇ ಎಂಬುದು ಈಗ ಕುತೂಹಲಕ್ಕೆ ಕಾರಣವಾಗಿದೆ. ಸದ್ಯ ನೈಸ್ ಯೋಜನೆಗೆ ಸಂಬಂಧಿಸಿದ ಭೂಮಿ, ಟೋಲ್ ಹಾಗೂ ಆರ್ಥಿಕ ವ್ಯವಹಾರಗಳ ಕುರಿತು ರಾಜಕೀಯ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ.
ರಾಜ್ಯ
Court ಗೆ ಗೈರಾದ ಬಿಜೆಪಿ ಎಂಎಲ್ಸಿಗೆ ಬಿಗ್ ಶಾಕ್! N Ravi Kumar ವಿರುದ್ಧ ಜಾಮೀನು ರಹಿತ ವಾರಂಟ್
ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ಅವಹೇಳನಕಾರಿ ಹಾಗೂ ಕೋಮು ಪ್ರಚೋದಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ವಿಚಾರಣೆಗೆ ಗೈರಾದ ಬಿಜೆಪಿ ವಿಧಾನ ಪರಿಷತ್ ಸದಸ್ಯ N Ravi Kumar ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ. ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮಹಾನಗರ ದಂಡಾಧಿಕಾರಿ ನ್ಯಾಯಾಲಯವು ಅವರ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ವಿಚಾರಣೆಗೆ ಹಾಜರಾಗದಿದ್ದಕ್ಕೆ ಕೋರ್ಟ್ ಕಠಿಣ ಕ್ರಮ
ಬೆಂಗಳೂರಿನ 42ನೇ ಹೆಚ್ಚುವರಿ ಮುಖ್ಯ ಮಹಾನಗರ ದಂಡಾಧಿಕಾರಿ ಸಂದೀಪ್ ಪಾಟೀಲ್ ಅವರ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಈ ಹಿಂದೆ ನ್ಯಾಯಾಲಯದಿಂದ ರವಿಕುಮಾರ್ ಅವರಿಗೆ ಸಮನ್ಸ್ ಜಾರಿಯಾಗಿತ್ತು. ಆದರೆ ನಿಗದಿತ ವಿಚಾರಣೆಗೆ ಅವರು ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯ ಇದೀಗ ಜಾಮೀನು ರಹಿತ ಬಂಧನ ವಾರಂಟ್ ಹೊರಡಿಸಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಳೆದ ವರ್ಷ ಕಲಬುರಗಿಯಲ್ಲಿ ನಡೆದ ಪ್ರತಿಭಟನೆ ವೇಳೆ ಅಂದಿನ ಜಿಲ್ಲಾಧಿಕಾರಿ ಫೌಜಿಯಾ ತರನ್ನಮ್ ಅವರ ವಿರುದ್ಧ ರವಿಕುಮಾರ್ ವಿವಾದಾತ್ಮಕ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿತ್ತು.
ಹೈಕೋರ್ಟ್ನಲ್ಲೂ ಅರ್ಜಿ ಸಲ್ಲಿಸಿದ್ದ ರವಿಕುಮಾರ್
ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಎನ್. ರವಿಕುಮಾರ್ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್, ಪ್ರಕರಣಕ್ಕೆ ಮಧ್ಯಂತರ ತಡೆ ನೀಡಲು ನಿರಾಕರಿಸಿತ್ತು.
ಅಧೀನ ನ್ಯಾಯಾಲಯದಿಂದ ಸಮನ್ಸ್ ಜಾರಿಯಾಗಿದ್ದರೂ ವಿಚಾರಣೆಗೆ ಗೈರಾಗಿರುವ ಹಿನ್ನೆಲೆಯಲ್ಲಿ ಇದೀಗ ಕೆಳ ನ್ಯಾಯಾಲಯದಿಂದಲೇ ಕಠಿಣ ಕ್ರಮ ಎದುರಿಸಬೇಕಾಗಿದೆ.
ಹೇಳಿಕೆ ಬಗ್ಗೆ ಹೈಕೋರ್ಟ್ ಅಸಮಾಧಾನ
ಫೌಜಿಯಾ ತರನ್ನಮ್ ಅವರನ್ನು ಪಾಕಿಸ್ತಾನದಿಂದ ಬಂದವರು ಎಂಬ ರೀತಿಯಲ್ಲಿ ಬಿಂಬಿಸುವಂತೆ ರವಿಕುಮಾರ್ ಹೇಳಿಕೆ ನೀಡಿದ್ದರು ಎಂಬ ಆರೋಪದ ಹಿನ್ನೆಲೆಯಲ್ಲಿ ಹೈಕೋರ್ಟ್ ಕೂಡ ಈ ಹಿಂದೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು.
ಮುಸ್ಲಿಂ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಒಬ್ಬ ಐಎಎಸ್ ಅಧಿಕಾರಿಯ ವಿರುದ್ಧ ಈ ರೀತಿಯ ಹೇಳಿಕೆ ನೀಡುವುದನ್ನು ಕ್ಷಮಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ಪ್ರತಿಯೊಬ್ಬರಿಗೂ ಸ್ವಾಭಿಮಾನವಿದ್ದು, ರಾಜಕೀಯ ನಾಯಕರು ತಮಗೆ ಬೇಕಾದಂತೆ ಮಾತನಾಡಲು ಅವಕಾಶವಿಲ್ಲ ಎಂದು ನ್ಯಾಯಾಲಯ ಹೇಳಿತ್ತು.
ರಾಜಕೀಯ ನಾಯಕರು ಸಾರ್ವಜನಿಕರ ಕಲ್ಯಾಣಕ್ಕಾಗಿ ಅಗತ್ಯವಿರುವ ವಿಚಾರಗಳ ಕುರಿತು ಮಾತನಾಡಬೇಕು. ತಮ್ಮ ಮಾತಿನ ಮೇಲೆ ಹಿಡಿತ ಹೊಂದಿರಬೇಕು. ಏನು ಬೇಕಾದರೂ ಮಾತನಾಡಬಹುದು ಎಂಬ ಮನೋಭಾವ ಸರಿಯಲ್ಲ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.
ಇದೀಗ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರಂಟ್ ಹೊರಬಿದ್ದಿರುವುದು ಪ್ರಕರಣಕ್ಕೆ ಮತ್ತೊಂದು ಮಹತ್ವದ ತಿರುವು ನೀಡಿದೆ.
-
ಬೆಂಗಳೂರು15 ಗಂಟೆಗಳು agoKannada Sahitya Parishat ನ ಗೌರವ ದತ್ತಿ ಪ್ರಶಸ್ತಿ ಪ್ರಕಟ: 2025, 2026ನೇ ಸಾಲಿನ ಪುರಸ್ಕೃತರು ಇವರೇ!
-
ಬೆಂಗಳೂರು21 ಗಂಟೆಗಳು agoB Nagendra ವಿರುದ್ಧ ಬಿಜೆಪಿ-ಜೆಡಿಎಸ್ ದೂರು: ರಾಜ್ಯಪಾಲರಿಗೆ ಮನವಿ ಸಲ್ಲಿಕೆ
-
ದೇಶ19 ಗಂಟೆಗಳು agoIran ಮೇಲೆ America ದ ಹೊಸ ನಿರ್ಬಂಧ! ಭಾರತದ ಅಕ್ಕಿ, ಚಹಾ, ಔಷಧ ರಫ್ತಿಗೆ ಎದುರಾಯ್ತಾ ದೊಡ್ಡ ಹೊಡೆತ?
-
ದೇಶ19 ಗಂಟೆಗಳು agoChina Robot Revolution ರೋಬೋಟ್ ಗಳಿಗೆ ತರಬೇತಿ, ಯುವಕರಿಗೆ ಹೊಸ ಪಾಠ! ಚೀನಾ ಭವಿಷ್ಯದ ಉದ್ಯೋಗಕ್ಕಾಗಿ ಮಾಡುತ್ತಿರುವುದೇನು?
-
ಬೆಂಗಳೂರು21 ಗಂಟೆಗಳು agoUrvashi ಚಿತ್ರಮಂದಿರ ನೆಲಸಮಕ್ಕೆ ದಿಢೀರ್ ಬ್ರೇಕ್! Karnataka High Court ಆದೇಶದ ಹಿಂದಿರುವ ಕಾರಣವೇನು?
-
ಬೆಂಗಳೂರು20 ಗಂಟೆಗಳು agoSignal ನಲ್ಲಿ ನಿಂತಿದ್ದ ಬೈಕ್ ಸವಾರನಿಗೆ ಹಿಂಬದಿಯಿಂದ ಕಾರು ಡಿಕ್ಕಿ! 50 ಅಡಿ ದೂರಕ್ಕೆ ಹಾರಿ ಯುವಕ ಸಾವು
-
ದೇಶ21 ಗಂಟೆಗಳು agoCentre Government ವಿರುದ್ಧ ಮತ್ತೆ ಸಿಡಿದೆದ್ದ CJP! ಸೆ.5ರಂದು ನಡೆಯಲಿದೆ ಬೃಹತ್ ಪ್ರತಿಭಟನಾ ಮೆರವಣಿಗೆ
-
ದೇಶ17 ಗಂಟೆಗಳು ago‘ನನ್ನ ಮಗನನ್ನೇ ಕೊಲ್ಲಲು ಪ್ರಯತ್ನಿಸಿತ್ತು’! Iran ವಿರುದ್ಧ Netanyahu ಗಂಭೀರ ಆರೋಪ
