Connect with us

ರಾಜ್ಯ

Trisha ಹೆಸರು ಕೇಳಿ ವಿವಾದಾತ್ಮಕ ಹೇಳಿಕೆ? ಉದಯನಿಧಿ ಸ್ಟಾಲಿನ್ ಬಂಧನ!

Published

on

ಚೆನ್ನೈ: ನಟಿ Trisha ಅವರನ್ನು ಉಲ್ಲೇಖಿಸಿ ವಿವಾದಾತ್ಮಕ ಹಾಗೂ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ನಡುವೆ ತಮಿಳುನಾಡು ವಿರೋಧ ಪಕ್ಷದ ನಾಯಕ Udayanidhi Stalin ಅವರನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಕಾವೇರಿ ಜಲ ವಿವಾದದ ಕುರಿತು ನಡೆದ ಪ್ರತಿಭಟನಾ ಸಭೆಯಲ್ಲಿ ಮಾಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಹಲವು ಪಕ್ಷಗಳ ಆಕ್ರೋಶದ ಬಳಿಕ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ C. Joseph Vijay ಸರ್ಕಾರವನ್ನು ಟೀಕಿಸುತ್ತಿದ್ದ ವೇಳೆ ಉದಯನಿಧಿ ಸ್ಟಾಲಿನ್ ನೀಡಿದ ಹೇಳಿಕೆಯನ್ನು ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಆರೋಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಟಿವಿಕೆ (TVK) ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದವು.

ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದು ಬಂಧಿಸಿದರು. ಬಂಧನದ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, “ನಾನು ಯಾವುದೇ ತಪ್ಪು ಮಾಡಿಲ್ಲ. ನಾನು ಮುಖ್ಯಮಂತ್ರಿಯನ್ನು ಬಿಟ್ಟರೆ ಬೇರೆ ಯಾರ ಹೆಸರನ್ನೂ ಹೇಳಿಲ್ಲ. ಇದು ರಾಜಕೀಯ ಪ್ರತೀಕಾರದ ಕ್ರಮ. ಈ ಪ್ರಕರಣದ ಅಂತಿಮ ತೀರ್ಪನ್ನು ನ್ಯಾಯಾಲಯವೇ ನೀಡಲಿದೆ” ಎಂದು ಪ್ರತಿಕ್ರಿಯಿಸಿದರು.

ಏನಿದು ವಿವಾದ?

ತಂಜಾವೂರಿನಲ್ಲಿ ಕಾವೇರಿ ನೀರಿನ ಸಮಸ್ಯೆ ಕುರಿತು ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಉದಯನಿಧಿ ಸ್ಟಾಲಿನ್ ಭಾಷಣ ಮಾಡುತ್ತಿದ್ದರು. ಈ ವೇಳೆ ಅವರು, “ನಮ್ಮ ಮುಖ್ಯಮಂತ್ರಿ ಕಾವೇರಿ ನೀರಿನ ವಿಚಾರದಲ್ಲಿ ಬಾಯಿ ತೆರೆಯುತ್ತಿಲ್ಲ. ಅವರ ಏಕೈಕ ಚಿಂತೆ ಡಿಎಂಕೆ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸುವುದು” ಎಂದು ಸರ್ಕಾರವನ್ನು ಟೀಕಿಸಿದರು.

ಈ ವೇಳೆ ಸಭೆಯಲ್ಲಿದ್ದ ಕೆಲವರು “ತ್ರಿಷಾ… ತ್ರಿಷಾ…” ಎಂದು ಘೋಷಣೆ ಕೂಗಿದರು. ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ನಗುಮುಖದೊಂದಿಗೆ ತಮಿಳಿನಲ್ಲಿ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂದು ಹೇಳಿದ್ದರು. ಈ ಮಾತು ದ್ವಂದ್ವಾರ್ಥ ಹೊಂದಿದ್ದು, ನಟಿ ತ್ರಿಷಾ ಅವರನ್ನು ಪರೋಕ್ಷವಾಗಿ ಗುರಿಯಾಗಿಸಿ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.

ರಾಜಕೀಯ ಕಾವು

ಈ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಟಿವಿಕೆ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಉದಯನಿಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದವು. ಮಹಿಳೆಯರ ಬಗ್ಗೆ ಅವಹೇಳನಕಾರಿ ಭಾಷೆ ಬಳಸಿದ ಆರೋಪದಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಲಾಯಿತು. ನಂತರ ಪೊಲೀಸರು ಪ್ರಕರಣ ದಾಖಲಿಸಿ ಬಂಧನ ಕ್ರಮ ಕೈಗೊಂಡಿದ್ದಾರೆ.

ಉದಯನಿಧಿ ಸ್ಟಾಲಿನ್ ಬಂಧನವು ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ವಾಕ್ಸಮರ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಪ್ರಕರಣದ ಮುಂದಿನ ವಿಚಾರಣೆ ಮತ್ತು ನ್ಯಾಯಾಲಯದ ನಿರ್ಧಾರದತ್ತ ಇದೀಗ ಎಲ್ಲರ ಚಿತ್ತ ನೆಟ್ಟಿದೆ.

Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ದೇಶ

Udhayanidhi Stalin ‘ಮಹಿಳೆ ವಿರುದ್ಧ ಅವಹೇಳನಕಾರಿ ಹೇಳಿಕೆ’… ಉದಯನಿಧಿ ಬಂಧನವನ್ನು BJP ಏಕೆ ಸ್ವಾಗತಿಸಿತು?

Published

on

ನವದೆಹಲಿ: ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ (Udhayanidhi Stalin) ಬಂಧನದ ಬೆನ್ನಲ್ಲೇ ಬಿಜೆಪಿ (BJP) ತೀವ್ರ ವಾಗ್ದಾಳಿ ನಡೆಸಿದೆ. ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ (Amit Malviya), ಸನಾತನ ಧರ್ಮವನ್ನು ಟೀಕಿಸಿದ್ದ ಉದಯನಿಧಿ ಇದೀಗ ಮಹಿಳೆಯೊಬ್ಬರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವುದು ಕಾನೂನಿನ ಸಹಜ ಪ್ರಕ್ರಿಯೆ ಎಂದು ಪ್ರತಿಕ್ರಿಯಿಸಿದ್ದಾರೆ.

ಅಮಿತ್ ಮಾಳವೀಯ ಅವರು ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿದ್ದು, “ಸನಾತನ ಧರ್ಮವನ್ನು ಅವಹೇಳನ ಮಾಡಿದ್ದ ವ್ಯಕ್ತಿ ಈಗ ಮಹಿಳೆಯ ವಿರುದ್ಧ ನಿಂದನಾತ್ಮಕ ಹಾಗೂ ಅವಮಾನಕಾರಿ ಹೇಳಿಕೆ ನೀಡಿದ ಪ್ರಕರಣದಲ್ಲಿ ಕಾನೂನು ಕ್ರಮ ಎದುರಿಸುತ್ತಿದ್ದಾರೆ. ಸಾರ್ವಜನಿಕವಾಗಿ ಮಹಿಳೆಯರ ಘನತೆಗೆ ಧಕ್ಕೆ ತರುವ ರೀತಿಯ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಲಾಗದು. ಬಂಧನ ಸರಿಯಾದ ಕ್ರಮವಾಗಿದೆ” ಎಂದು ಹೇಳಿದ್ದಾರೆ.

ತ್ರಿಷಾ ವಿವಾದದಲ್ಲಿ ಬಂಧನ

ನಟಿ ತ್ರಿಷಾ (Trisha) ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳವಾರ ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಿದ್ದಾರೆ.

ಕಾವೇರಿ ಜಲ ವಿವಾದದ ಕುರಿತು ನಡೆದ ಸಾರ್ವಜನಿಕ ಸಭೆಯಲ್ಲಿ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಸರ್ಕಾರವನ್ನು ಟೀಕಿಸುವ ವೇಳೆ ಉದಯನಿಧಿ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಈ ಹೇಳಿಕೆಯನ್ನು ನಟಿ ತ್ರಿಷಾ ಅವರನ್ನು ಉದ್ದೇಶಿಸಿ ಮಾಡಿದ ಅವಹೇಳನಕಾರಿ ಮಾತು ಎಂದು ಟಿವಿಕೆ (TVK) ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಆರೋಪಿಸಿ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದವು. ದೂರು ದಾಖಲಾದ ಕೆಲವೇ ಹೊತ್ತಿನಲ್ಲಿ ಪೊಲೀಸರು ಅವರನ್ನು ಬಂಧಿಸಿದರು.

ಏನಿದು ವಿವಾದ?

ತಂಜಾವೂರಿನಲ್ಲಿ ನಡೆದ ಡಿಎಂಕೆ ಪ್ರತಿಭಟನಾ ಸಭೆಯಲ್ಲಿ ಕಾವೇರಿ ನೀರಿನ ಸಮಸ್ಯೆ ಕುರಿತು ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ತಮಿಳುನಾಡು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ಇದೇ ವೇಳೆ ಜನಸಮೂಹದಿಂದ “ತ್ರಿಷಾ… ತ್ರಿಷಾ…” ಎಂಬ ಘೋಷಣೆಗಳು ಕೇಳಿಬಂದವು.

ಇದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ತಮಿಳಿನಲ್ಲಿ “ಯಾವ ನೀರು ಬರುತ್ತದೋ ಇಲ್ಲವೋ, ಆ ನೀರು ಬರಲೇಬೇಕು” ಎಂದು ದ್ವಂದ್ವಾರ್ಥ ಬರುವ ರೀತಿಯಲ್ಲಿ ಹೇಳಿಕೆ ನೀಡಿದರು ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆ ಮಹಿಳೆಯನ್ನು ಅವಮಾನಿಸುವ ಹಾಗೂ ಅಶ್ಲೀಲ ಅರ್ಥ ನೀಡುವ ರೀತಿಯಲ್ಲಿದೆ ಎಂದು ವಿರೋಧ ಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿವೆ.

ಸನಾತನ ಧರ್ಮ ವಿವಾದ ಮತ್ತೆ ಚರ್ಚೆಗೆ

ಉದಯನಿಧಿ ಸ್ಟಾಲಿನ್ ಅವರು 2023ರ ಸೆಪ್ಟೆಂಬರ್ 3ರಂದು ಸನಾತನ ಧರ್ಮ ಕುರಿತು ನೀಡಿದ್ದ ವಿವಾದಾತ್ಮಕ ಹೇಳಿಕೆಯನ್ನೂ ಬಿಜೆಪಿ ನಾಯಕರು ಮತ್ತೆ ಪ್ರಸ್ತಾಪಿಸಿದ್ದಾರೆ.

ಅಂದು ಅವರು, “ಸನಾತನ ಧರ್ಮವು ಡೆಂಗ್ಯೂ, ಮಲೇರಿಯಾ ರೀತಿಯದ್ದು. ಅದನ್ನು ಕೇವಲ ವಿರೋಧಿಸುವುದಲ್ಲ, ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದರು. ಈ ಹೇಳಿಕೆ ದೇಶಾದ್ಯಂತ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ಸೇರಿದಂತೆ ಹಲವು ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು.

ಈಗ ತ್ರಿಷಾ ವಿವಾದದಲ್ಲಿ ಉದಯನಿಧಿ ಬಂಧನಕ್ಕೊಳಗಾದ ಬಳಿಕ, ಸನಾತನ ಧರ್ಮದ ಕುರಿತ ಅವರ ಹಿಂದಿನ ಹೇಳಿಕೆಯನ್ನು ಉಲ್ಲೇಖಿಸಿ ಬಿಜೆಪಿ ಮತ್ತೆ ರಾಜಕೀಯ ವಾಗ್ದಾಳಿ ನಡೆಸಿದೆ. ಈ ಬೆಳವಣಿಗೆ ತಮಿಳುನಾಡು ರಾಜಕೀಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

Continue Reading

ರಾಜ್ಯ

Udhayanidhi Stalin ಗೆ ಖುಷ್ಬು ಸುಂದರ್ ಕ್ಲಾಸ್… ‘ಸಾರ್ವಜನಿಕ ಕ್ಷಮೆಯಾಚಿಸಿ’

Published

on

ಚೆನ್ನೈ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ನಟ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರು ಸಾರ್ವಜನಿಕ ಭಾಷಣದ ವೇಳೆ ನೀಡಿದ ವಿವಾದಾತ್ಮಕ ಹೇಳಿಕೆ ಇದೀಗ ಮತ್ತಷ್ಟು ರಾಜಕೀಯ ಕಾವು ಪಡೆದುಕೊಂಡಿದೆ. ನಟಿ ತ್ರಿಷಾ (Trisha) ಅವರನ್ನು ಪರೋಕ್ಷವಾಗಿ ಉಲ್ಲೇಖಿಸಿ ದ್ವಂದ್ವಾರ್ಥದ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಬೆನ್ನಲ್ಲೇ ಪೊಲೀಸರು ಅವರನ್ನು ಬಂಧಿಸಿದ್ದು, ಇದೀಗ ನಟಿ-ರಾಜಕಾರಣಿ ಖುಷ್ಬು ಸುಂದರ್ (Khushbu Sundar) ಕೂಡ ಉದಯನಿಧಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಖುಷ್ಬು ಸುಂದರ್, ಮಹಿಳೆಯರನ್ನು ಅವಮಾನಿಸುವ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದು, ತ್ರಿಷಾ ಅವರ ಬಳಿ ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ಉದಯನಿಧಿ ಸ್ಟಾಲಿನ್ ಅವರನ್ನು ಆಗ್ರಹಿಸಿದ್ದಾರೆ.

ಖುಷ್ಬು ಹೇಳಿದ್ದೇನು?

ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದೇವತೆಯ ಚಿತ್ರದೊಂದಿಗೆ ಪೋಸ್ಟ್ ಹಂಚಿಕೊಂಡ ಖುಷ್ಬು, “ದೇವತೆ ದುರ್ಬಲರನ್ನು ಪರೀಕ್ಷಿಸುವುದಿಲ್ಲ; ಅವಳು ಆಯ್ಕೆ ಮಾಡಿದವರನ್ನು ಪರಿಷ್ಕರಿಸುತ್ತಾಳೆ” ಎಂಬ ಸಂದೇಶವನ್ನು ಪ್ರಕಟಿಸಿದ್ದಾರೆ.

ಅದರೊಂದಿಗೆ ಉದಯನಿಧಿ ಅವರ ಭಾಷಣವನ್ನು ಉಲ್ಲೇಖಿಸಿ, “ಅವರ ಭಾಷಣವನ್ನು ಕೇಳಿದೆ. ಅದು ಅಸಭ್ಯ, ಅವಹೇಳನಕಾರಿ ಮತ್ತು ಮಹಿಳೆಯರಿಗೆ ಗೌರವ ನೀಡದ ರೀತಿಯಲ್ಲಿತ್ತು. ಮಹಿಳೆಯರನ್ನು ನಿಂದಿಸುವುದು, ಅವಮಾನಿಸುವುದನ್ನು ರಾಜಕೀಯ ನಾಟಕವೆಂದು ಪರಿಗಣಿಸುವವರಿಂದ ಇನ್ನೇನು ನಿರೀಕ್ಷಿಸಬಹುದು?” ಎಂದು ಪ್ರಶ್ನಿಸಿದ್ದಾರೆ.

ಖುಷ್ಬು ಮತ್ತಷ್ಟು ಮಾತನಾಡಿ, “ರಾಜಕೀಯ ಭಿನ್ನಾಭಿಪ್ರಾಯಗಳು ಇದ್ದರೂ ಸಾರ್ವಜನಿಕ ಭಾಷಣಕ್ಕೆ ಮಿತಿಗಳಿರಬೇಕು. ಮಹಿಳೆಯರನ್ನು ಗೌರವದಿಂದ ಕಾಣಬೇಕು. ಅವರನ್ನು ರಾಜಕೀಯ ಲಾಭಕ್ಕಾಗಿ ಬಳಸುವ ಕೈಗೊಂಬೆಯಂತೆ ಕಾಣುವುದು ಸರಿಯಲ್ಲ” ಎಂದು ಕಿಡಿಕಾರಿದ್ದಾರೆ.

‘ತ್ರಿಷಾ ಬಳಿ ಸಾರ್ವಜನಿಕ ಕ್ಷಮೆಯಾಚಿಸಲಿ’

ಉದಯನಿಧಿ ಸ್ಟಾಲಿನ್ ವಿರುದ್ಧ ಕಿಡಿಕಾರಿದ ಖುಷ್ಬು, “ನಿಮ್ಮ ರಾಜಕೀಯ ಎದುರಾಳಿಯನ್ನು ಟೀಕಿಸಲು ಸಾಧ್ಯವಾಗದಿದ್ದರೆ ವೈಯಕ್ತಿಕ ಅವಮಾನ ಮತ್ತು ಅಸಭ್ಯತೆಯ ಮಟ್ಟಕ್ಕೆ ಇಳಿಯಬಾರದು. ತ್ರಿಷಾ ಅವರನ್ನು ಸಾರ್ವಜನಿಕವಾಗಿ ಅವಮಾನಿಸಿದ್ದಕ್ಕಾಗಿ ಕ್ಷಮೆಯಾಚಿಸಬೇಕು. ಆ ಧೈರ್ಯ ಮತ್ತು ಸಭ್ಯತೆ ಅವರಿಗಿದೆಯೇ ಎಂಬುದನ್ನು ನೋಡೋಣ” ಎಂದು ಸವಾಲು ಹಾಕಿದ್ದಾರೆ.

ಏನಿದು ವಿವಾದ?

ಸೋಮವಾರ ತಂಜಾವೂರಿನಲ್ಲಿ ನಡೆದ ಡಿಎಂಕೆ ಸಮಾವೇಶದಲ್ಲಿ ಕಾವೇರಿ ನೀರಿನ ವಿಷಯವಾಗಿ ಮಾತನಾಡುತ್ತಿದ್ದ ಉದಯನಿಧಿ ಸ್ಟಾಲಿನ್, ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರನ್ನು ಟೀಕಿಸುತ್ತಿದ್ದರು. ಈ ವೇಳೆ ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಿದರು.

ಅದಕ್ಕೆ ಪ್ರತಿಕ್ರಿಯಿಸಿದ ಉದಯನಿಧಿ, ತಮಿಳಿನಲ್ಲಿ ದ್ವಂದ್ವಾರ್ಥ ಬರುವ ರೀತಿಯ ಹೇಳಿಕೆ ನೀಡಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹೇಳಿಕೆ ಮಹಿಳೆಯನ್ನು ಅವಮಾನಿಸುವ ರೀತಿಯಲ್ಲಿದೆ ಎಂದು ಟಿವಿಕೆ (TVK) ಸೇರಿದಂತೆ ಹಲವು ರಾಜಕೀಯ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿ ಕ್ರಮಕ್ಕೆ ಒತ್ತಾಯಿಸಿವೆ.

ಬಂಧನ

ವಿವಾದ ಭುಗಿಲೆದ್ದ ನಂತರ ಮಂಗಳವಾರ ಮುಂಜಾನೆ ಪೊಲೀಸರು ಉದಯನಿಧಿ ಸ್ಟಾಲಿನ್ ಅವರ ಚೆನ್ನೈ ನಿವಾಸಕ್ಕೆ ತೆರಳಿ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧನದ ಬಳಿಕವೂ ಪ್ರಕರಣ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ವಲಯದಲ್ಲಿ ಪರ-ವಿರೋಧದ ಹೇಳಿಕೆಗಳು ಮುಂದುವರಿದಿವೆ.

ಈ ನಡುವೆ, ಖುಷ್ಬು ಸುಂದರ್ ಅವರ ಹೇಳಿಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಮಹಿಳೆಯರ ಗೌರವದ ವಿಚಾರದಲ್ಲಿ ರಾಜಕೀಯ ನಾಯಕರು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂಬ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

Continue Reading

ರಾಜ್ಯ

CM D K SHIV KUMAR ರಾಜೀನಾಮೆ ಬೆದರಿಕೆಗೆ ಡಿಕೆಶಿ ತಿರುಗೇಟು! ‘ಪಕ್ಷ ಮುಖ್ಯ, ಶಿಸ್ತು ಮುಖ್ಯ’ ಎಂದ ಸಿಎಂ

Published

on

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ತಾರಕಕ್ಕೇರಿರುವ ನಡುವೆಯೇ CM D K SHIV KUMAR ಅಸಮಾಧಾನಿತ ಶಾಸಕರಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. “ಯಾವ ಶಾಸಕರು ರಾಜೀನಾಮೆ ನೀಡಿದರೂ ಎರಡೇ ನಿಮಿಷದಲ್ಲಿ ಅಂಗೀಕಾರ ಮಾಡಲು ಹೇಳಿದ್ದೇನೆ” ಎಂದು ಹೇಳುವ ಮೂಲಕ ರಾಜೀನಾಮೆ ಬೆದರಿಕೆ ಹಾಕುತ್ತಿರುವ ನಾಯಕರಿಗೆ ನೇರ ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಪಕ್ಷ ಮುಖ್ಯ, ಪಕ್ಷದಲ್ಲಿ ಶಿಸ್ತು ಮುಖ್ಯ. ವೈಯಕ್ತಿಕ ಆಸೆಗಿಂತ ಪಕ್ಷದ ಹಿತವೇ ಮೊದಲ ಆದ್ಯತೆ” ಎಂದು ಸ್ಪಷ್ಟಪಡಿಸಿದರು.

ಸಚಿವ ಸ್ಥಾನ ಸಿಗದ ಕಾರಣ ಅಸಮಾಧಾನ ವ್ಯಕ್ತಪಡಿಸುತ್ತಿರುವ ನಾಯಕರಿಗೆ ಹಿಂದಿನ ರಾಜಕೀಯ ಉದಾಹರಣೆಗಳನ್ನು ನೆನಪಿಸಿದ ಅವರು, “ವೀರೇಂದ್ರ ಪಾಟೀಲ್ ಅವರ ಕಾಲದಲ್ಲೂ ಬಂಗಾರಪ್ಪ, ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್ ಅವರಿಗೆ ಸಚಿವ ಸ್ಥಾನ ಸಿಕ್ಕಿರಲಿಲ್ಲ. ನನಗೂ ಮತ್ತು ಡಾ.ಜಿ. ಪರಮೇಶ್ವರ್ ಅವರಿಗೂ ಸಚಿವ ಸ್ಥಾನ ಸಿಗದ ಸಂದರ್ಭಗಳು ಬಂದಿದ್ದವು. ಆಗ ನಾವು ತಾಳ್ಮೆಯಿಂದ ಇರಲಿಲ್ಲವೇ?” ಎಂದು ಪ್ರಶ್ನಿಸಿದರು.

ಸಚಿವ ಸ್ಥಾನ ಕೈತಪ್ಪಿದ ಕಾರಣ ರಾಜೀನಾಮೆ ನೀಡುವುದಾಗಿ ಕೆಲವು ಶಾಸಕರು ಬಹಿರಂಗವಾಗಿ ಘೋಷಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, “ಎಲ್ಲರೂ ತಾಳ್ಮೆಯಿಂದ ಇರಬೇಕು. ರಾಜಕೀಯದಲ್ಲಿ ಅವಕಾಶಗಳು ಒಂದೇ ದಿನದಲ್ಲಿ ಬರುವುದಿಲ್ಲ. ಸಹನೆಯಿಂದ ಕೆಲಸ ಮಾಡಿದರೆ ಪ್ರತಿಯೊಬ್ಬರಿಗೂ ಅವಕಾಶ ಸಿಗುತ್ತದೆ” ಎಂದು ಹೇಳಿದರು.

ಇದೇ ವೇಳೆ, ರಾಜೀನಾಮೆ ಸಲ್ಲಿಸಿದರೆ ತಕ್ಷಣ ಅಂಗೀಕರಿಸುವಂತೆ ಸೂಚನೆ ನೀಡಿರುವುದಾಗಿ ಹೇಳಿದ ಡಿ.ಕೆ. ಶಿವಕುಮಾರ್ ಅವರ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಹಲವು ಶಾಸಕರು ತಮ್ಮ ಬೆಂಬಲಿಗರೊಂದಿಗೆ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದ ಬೆನ್ನಲ್ಲೇ ಸಿಎಂ ನೀಡಿರುವ ಈ ಎಚ್ಚರಿಕೆ ರಾಜಕೀಯವಾಗಿ ಮಹತ್ವ ಪಡೆದುಕೊಂಡಿದೆ.

ಮತ್ತೊಂದೆಡೆ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು, ತಕ್ಷಣದಿಂದಲೇ ವಿವಿಧ ನಿಗಮ-ಮಂಡಳಿಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸುವಂತೆ ಆದೇಶ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹೊಸ ಮಾನದಂಡಗಳ ಆಧಾರದ ಮೇಲೆ ನೇಮಕಾತಿ ನಡೆಯುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಬಳಿಕ ಹಲವು ಜಿಲ್ಲೆಗಳಲ್ಲಿ ಅತೃಪ್ತ ನಾಯಕರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲವು ಕಡೆ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಗಿದ್ದು, ಇನ್ನೂ ಕೆಲವೆಡೆ ಸಾಮೂಹಿಕ ರಾಜೀನಾಮೆಯ ಎಚ್ಚರಿಕೆಯೂ ಕೇಳಿಬಂದಿದೆ. ಈ ಬೆಳವಣಿಗೆಗಳ ನಡುವೆ ಸಿಎಂ ನೀಡಿರುವ “ಎರಡು ನಿಮಿಷದಲ್ಲಿ ರಾಜೀನಾಮೆ ಅಂಗೀಕಾರ” ಎಂಬ ಹೇಳಿಕೆ ಕಾಂಗ್ರೆಸ್‌ನಲ್ಲಿ ಶಿಸ್ತು ಕಾಪಾಡುವ ನಿಟ್ಟಿನ ಕಠಿಣ ಸಂದೇಶವೆಂದು ರಾಜಕೀಯ ವಲಯ ವಿಶ್ಲೇಷಿಸುತ್ತಿದೆ.

ಸದ್ಯ ಸಚಿವರಿಗೆ ಖಾತೆ ಹಂಚಿಕೆ ಬಾಕಿ ಉಳಿದಿದ್ದು, ಅತೃಪ್ತರನ್ನು ಸಮಾಧಾನಪಡಿಸುವ ಹೊಣೆಗಾರಿಕೆ ಕಾಂಗ್ರೆಸ್ ಹೈಕಮಾಂಡ್ ಮತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮೇಲಿದೆ. ಮುಂದಿನ ಕೆಲವು ದಿನಗಳಲ್ಲಿ ಪಕ್ಷದೊಳಗಿನ ಬೆಳವಣಿಗೆಗಳು ರಾಜ್ಯ ರಾಜಕೀಯದಲ್ಲಿ ಮಹತ್ವದ ತಿರುವು ಪಡೆಯುವ ಸಾಧ್ಯತೆ ಇದೆ.

Continue Reading

Trending